Sunday, February 24, 2008

ಬೆಂಕಿ-ಉರಿ-ಬೆಳಕು

ಅಗ್ಗಿಷ್ಟಿಕೆಯಲ್ಲಿ (fireplace) ಬೆಂಕಿ ನಿಗಿ ನಿಗಿ ಉರಿತಾ ಉರಿತಾ ಇರೋ ಹೊತ್ತಿಗೆ ನಾನು ಕುಳಿತುಕೊಂಡ ಜಾಗೆಯೆಲ್ಲ ಗರಂ ಆಗಿ ಹೋಗಿತ್ತು. ಬಹಳ ದಿನಗಳ ನಂತರ ಕಟ್ಟಿಗೆ ಸುಟ್ಟು ಬೂದಿ ಆಗಿ ಬೆಂಕಿ ಸಂಪೂರ್ಣ ಆರಿ ಹೋಗುವ ಕಾಯಕವನ್ನು (process) ಅನ್ನು ನೋಡೋದಕ್ಕೆ ಒಂದು ರೀತಿ ಚೆನ್ನಾಗಿತ್ತು. ನಿಧಾನವಾಗಿ ಯಾರೋ ಹೇಳಿಕೊಟ್ಟು ಹೋಗಿದ್ದಾರೆ ಅನ್ನೋ ಹಾಗೆ ಘನವಾದ ಕಟ್ಟಿಗೆ ಉರಿದು, ಬೆಂಕಿಯಾಗಿ ಕೆಂಪು ಕೆಂಡವಾಗಿ ಮುಂದೆ ಬಿಳಿ ಬೂದಿಯಾಗಿ ಹೋಗೋದು ಈ ಭಾನುವಾರದ ಸಂಜೆಯ ಮಟ್ಟಿಗೆ ಅದೊಂದು ವಿಸ್ಮಯವೇ ಅನ್ನಿಸಿದ್ದು ಹೌದು. ಮೊದಲೆಲ್ಲ ಬಚ್ಚಲ ಒಲೆಗೆ ದರಲೆ ತುಂಬುವಾಗ ನಮ್ಮ ಮುಗ್ಧ ಮನಸ್ಸಿನಲ್ಲಿ ಅದೇನೇನೋ ಅನ್ನಿಸದ ವಿಷಯ ವಸ್ತುವೆಲ್ಲ ಒಂದು ರೀತಿ ಬೆಂಕಿ ಹೊತ್ತಿ ಹೊಮ್ಮಿಸಿದ ಹೊಗೆಯ ಹಾಗೆ ಮನದಲ್ಲಿ ಎದ್ದುಕೊಂಡಿದ್ದವು. ಎಷ್ಟೇ ಪ್ರಭಲವಾಗಿ ಉರಿದರೂ ಬೆಂಕಿಯಿಂದ ಬೆಳಕಾಗದು ಎಂದು ಎನ್ನಿಸಿದ್ದು ಅಂತಹ ಶುಷ್ಕ ಮನಸ್ಸಿನ ವೇದಾಂತಗಳಲ್ಲೊಂದು ಎಂದು ನನಗೆ ಚೆನ್ನಾಗಿ ಗೊತ್ತಿದೆ. ಆದರೆ ಇಂದು ಬೆಂಕಿಯ ಜೊತೆಗಿನ ಬೂದಿ ಬೆಳಕಿನ ಬಗ್ಗೆ ಮಾತನಾಡುವ ಬದಲು, ಈ ಬೆಂಕಿ ಉರಿಯುತ್ತಿರುವಾಗ ನಾನು ಮೊದಲಿನಿಂದಲೂ ಮಾಡಿಕೊಂಡಿದ್ದ ಅಂಶವೊಂದು ಗಮನಕ್ಕೆ ಬಂತು - ಬೆಂಕಿಯು ಹತ್ತಿ ಉರಿದಂತೆಲ್ಲಾ ಕಟ್ಟಿಗೆ ತುಂಡುಗಳನ್ನು ಒಂದಕ್ಕೊಂದು ತಾಕಿಸಿ ಕೂಡಿಟ್ಟು ಮತ್ತೆ ಅವುಗಳ ನಡುವೆ ಜ್ವಾಲೆ ಹೆಚ್ಚುವಂತೆ ಮಾಡುವುದು. ಎಷ್ಟೇ ಜೋರಾಗಿ ಬೆಂಕಿ ಉರಿಯುತ್ತಲಿದ್ದರೂ ಒಮ್ಮೆ ಒಂದು ಕಟ್ಟಿಗೆಯ ಅಡ್ಡವಾಗಿ ಮತ್ತೊಂದು ಕಟ್ಟಿಗೆ ಬಾರದೇ ಹೋದರೆ, ಅಥವಾ ಅಡ್ಡ ಕಟ್ಟಿಗೆ ಉರಿಯುವುದು ನಿಂತರೆ ಈ ಕೂಡಿಟ್ಟ ಕಟ್ಟಿಗೆಗಳ ಮಗ್ಗಲು ಬದಲಾಯಿಸುವುದು ಅನಿವಾರ್ಯ, ಇಲ್ಲವೆಂದರೆ ಬೆಂಕಿ ಆರಿ ಹೋದೀತು, ಇಲ್ಲವಾದರೆ ನಿಧಾನವಾಗಿ ಉರಿದು ಕಾವೇ ಬಾರದೇ ಹೊಗೆಯೇ ಹೆಚ್ಚಾದೀತು.


***

ಅನ್ನ, ಪ್ರಾಣ, ಜ್ಞಾನ, ವಿಜ್ಞಾನ, ಆನಂದಗಳೆಂಬ ಹಂತಗಳನ್ನು ನಮ್ಮ ಭಾರತೀಯ ತತ್ವಶಾಸ್ತ್ರದ ಹಿನ್ನೆಲೆಯಲ್ಲಿ ಯಾರೂ ಬೇಕಾದರೂ ವಿವರಿಸಬಲ್ಲರು. ಒಂದಿಷ್ಟು ಜನರು ದಿನನಿತ್ಯದ ವಿಷಯದಲ್ಲಿ ಅನ್ನ-ಪ್ರಾಣಗಳ ಸಲುವಾಗಿ ದುಡಿದು-ಬಡಿದಾಡಿ-ಕಾದಾಡಿಕೊಂಡರೆ, ಇನ್ನೊಂದಿಷ್ಟು ಜನರಿಗೆ ಅನ್ನ-ಪ್ರಾಣಗಳು ದೇವರು ಕೊಟ್ಟ ವರವಾಗಿ, ಅವರ ಕಷ್ಟ-ನಷ್ಟಗಳೇನಿದ್ದರೂ ಜ್ಞಾನ-ವಿಜ್ಞಾನಕ್ಕೆ ಮೀಸಲಾದವು. ಇನ್ನು ಕೆಲವೇ ಕೆಲವು ಜನರು ಮುಂದೆ ಹೋಗಿ ಬದುಕನ್ನು ಆಳವಾದ ಆನಂದವನ್ನು ಪಡೆಯುವುದಕ್ಕೆ ಮೀಸಲಾಗಿಟ್ಟಿರುವುದು ನಮಗೆಲ್ಲರಿಗೂ ಜನಜನಿತ. ಇದನ್ನೇ Maslow's hierarchy of needs ಎಂದಾದರೂ ಕರೆದುಕೊಳ್ಳಲಿ, ಅಥವಾ High Performance Business Program ಎಂದಾದರೂ ಕರೆದುಕೊಳ್ಳಲಿ. ವ್ಯಕ್ತಿ ಅಥವಾ ಸಂಸ್ಥೆಗಳು ಸಾವಿರಾರು ವರ್ಷದಿಂದ ಮಾಡಿದ್ದನ್ನೇ, ಅಥವಾ ಬಲ್ಲದ್ದನ್ನೇ ಬೇರೆ ಪದಗಳಲ್ಲಿ ಬಣ್ಣಿಸಿಯೋ ಅಥವಾ ಅವರದ್ದೇ ಆದ ಮಸೂರದಲ್ಲಿ ತೋರಿಸಿಯೋ ಯಾವುದೋ ಒಂದು ರೀತಿಯಲ್ಲಿ ಹೊಸ ಹೊಸ ವಿವರಣೆಗಳು, ಅನ್ವೇಷಣೆಗಳು ಬಹಳ ಆಸಕ್ತಿ ಹುಟ್ಟಿಸುತ್ತವೆ ಕೆಲವೊಮ್ಮೆ ಅವುಗಳನ್ನು ಕುರಿತು ಓದಲು ತೊಡಗಿದರೆ.

ಓಹ್ ನಮ್ಮದೇನು ಸಾವಿರಾರು ವರ್ಷಗಳ ಇತಿಹಾಸ ಇರುವಂಥದ್ದು ಎಂದು ನಾವು ಸುಮ್ಮನೇ ಕೂರುವಂತೂ ಇಲ್ಲ. ವ್ಯಕ್ತಿಯಾಗಲೀ, ಸಂಸ್ಥೆಯಾಗಲೀ ಅಥವಾ ದೇಶವಾಗಲೀ ಮುಂದಾಳತ್ವದ ದೃಷ್ಟಿಯಿಂದ ಇಂದು ಏನೇನು ಚೆನ್ನಾಗಿ ನಡೆಯುತ್ತಿದೆಯೋ ಅದನ್ನು ಬಿಟ್ಟು ಇನ್ನು ಏನು ಚೆನ್ನಾಗಿ ನಡೆಯಬೇಕು ಎಂದು ಯೋಚಿಸುವುದು, ಯೋಚಿಸಿ ಕಾರ್ಯತಂತ್ರವನ್ನು ರೂಪಿಸಿ ಹಾಗೆ ನಡೆಯುವುದೇ ಇಂದಿನ ದಿನಗಳ ಸವಾಲು. ಪ್ರಪಂಚದ ಯಾವುದೋ ಒಂದು ದೇಶದ ಜನರು ಉಳಿದೆಲ್ಲರನ್ನು ಆಳುವ ಕಾಲ ದೂರವಾಗಿ ಅಲ್ಲಲ್ಲಿ ಕ್ರಮೇಣ ಬಲಿಷ್ಠ ರಾಷ್ಟ್ರಗಳು ಹುಟ್ಟಿಕೊಳ್ಳುವ ಬೆಳವಣಿಗೆಯ ದೃಷ್ಟಿಯಿಂದಂತೂ ಇಂದು ಬೆಳೆಯುತ್ತಿರುವ ಪ್ರತಿಯೊಂದು ರಾಷ್ಟ್ರಗಳು ಮುಬರುವ ನಾಳೆಗಳ ಕುರಿತು ಯೋಚಿಸಿ ಯಾವುದೋ ಒಂದು ತಂತ್ರವನ್ನು ಅನುಸರಿಸುತ್ತ ಹಾಗಿರುವಂತೆ ತೋರುತ್ತದೆ ಇಂದಿನ ದಿನಗಳ ವಿದ್ಯಮಾನ.

ನಿನ್ನೆಯ ದಿನಗಳ ನೆರಳಲ್ಲಾಗಲೀ ಹಳೆಯ ಇತಿಹಾಸದಲ್ಲಾಗಲಿ ಕಲಿಯುವುದು ಬೇಕಾದಷ್ಟಿರಬಹುದು, ಆದರೆ ಅವುಗಳಿಂದ ಕಲಿಯುವವರು ಕಡಿಮೆಯೇ ಎನ್ನುವುದು ನನ್ನ ಅಂಬೋಣ. ಹಾಗಿಲ್ಲದೇ ಹೋದರೆ ಜಗತ್ತಿನಲ್ಲೇನು ದಿನವಿಡೀ ಹೊಸ ಮೂರ್ಖರು ಹುಟ್ಟುತ್ತಲೆಯೇ ಇರುತ್ತಾರೆಯೇನು? ಅವರಿವರು ಮಾಡಿದ್ದನ್ನು ನಾವೂ ನೋಡಬೇಕು, ಹಳೆಯದೆಲ್ಲವನ್ನು ನಾವೂ ತಿಳಿಯಬೇಕು ಎನ್ನುವುದರ ಹಿಂದೆ ಇರುವ ತತ್ವವೇ ಅದರಿಂದೇನಾದರೊಂದಿಷ್ಟು ಕಲಿಯಬೇಕು ಎಂಬುದು. ಆ ಕಲಿಕೆ ಇನ್ನಷ್ಟು ಹೆಚ್ಚಿ ವ್ಯವಸ್ಥಿತವಾದಷ್ಟು ಪ್ರತಿಯೊಬ್ಬರಿಗೂ ಒಳ್ಳೆಯದೇ. ನಿನ್ನೆ ನಡೆದ ಕಾರ್ಯತಂತ್ರಗಳು ಇಂದು ಹಳಸಲಾದಾವು, ಅವುಗಳು ಹಳೆಯದಾಗುವಷ್ಟರಲ್ಲೇ ಹೊಸದನ್ನು ಹುಡುಕಿಕೊಳ್ಳುವುದರಲ್ಲಿ ಸಮಯವನ್ನು ವ್ಯಯಿಸುವ ತಾರ್ಕಿಕತೆ ಎಷ್ಟೋ ಸಂಸ್ಥೆ, ದೇಶಗಳಲ್ಲಿರುವುದರಿಂದಲೇ ಅವು ತಾವು ಮಾಡುತ್ತಿರುವುದರಲ್ಲಿ ಮುಂದಿರುವುದು.

***

ಹೀಗೆ ಬರೆಯುತ್ತ ಹೋದ ಹಾಗೆ ಇಷ್ಟು ಹೊತ್ತು ಉರಿದು ಅಟ್ಟ ಹಾಸ ಬೀರುತ್ತಿದ್ದ ಜ್ವಾಲೆಯ ಆಟ ಸ್ವಲ್ಪ ಕಡಿಮೆಯಾಯಿತು. ನಾನು ಸುಮ್ಮನೇ ಇದ್ದರೆ ಇನ್ನು ಬೆಂಕಿ ಆರಿ ಹೋಗಿ ಕೊನೆಗೆ ಉಳಿಯುವುದು ಇತಿಹಾಸ ಸಾರುವ ಅರ್ಧ ಸುಟ್ಟ ಕಟ್ಟಿಗೆ ಬೊಡ್ಡೆಗಳ ಅವಶೇಷ ಮಾತ್ರ. ಕಾಲದ ಸ್ವರೂಪದಲ್ಲಿ ಇತಿಹಾಸವನ್ನು ಬಿಂಬಿಸುವ ಈ ಬೊಡ್ಡೆಗಳ ಅವಶೇಷ ಮುಂಬರುವವರಿಗೆ ಯಾವುದೋ ಒಂದು ಪಾಠವನ್ನು ಕಲಿಸೀತು ಎನ್ನುವ ಹುಮ್ಮಸ್ಸಿನಿಂದ ನಾನು ಅವುಗಳನ್ನು ಹಾಗೆಯೇ ಬಿಡಬಹುದು. ಅಥವಾ ಉರಿಯುವ ತಾಕತ್ತು ಅವುಗಳಲ್ಲಿ ಇರುವವರೆಗೆ ನಾನು ಅವುಗಳನ್ನು ಮುಂದೂಡುತ್ತಲೋ ಅಥವಾ ಬದಿಯಿಂದ ಬದಿಗೆ ತಿರುಗಿಸುತ್ತಲೋ ಅಥವಾ ಒಂದಕ್ಕೊಂದು ತಾಗಿಕೊಂಡೋ ಇರುವಂತೆ ಮಾಡಿ ಅವುಗಳಲ್ಲಿದ್ದ ಶಕ್ತಿಯನ್ನು ಉರಿಯ ರೂಪದಲ್ಲಿ ಹೊರತೆಗೆದು ಬಿಡಬಹುದು. ಈ ಬದಲಾವಣೆಯ ಸಮಯ ಹೆಚ್ಚು ಹೊತ್ತು ಇರಲೊಲ್ಲದು, ಆದಷ್ಟು ಬೇಗ ಅರ್ಧ ಉರಿದ, ಅಲ್ಲಲ್ಲಿ ಉರಿಯುತ್ತಲ್ಲಿದ್ದ ಬೊಡ್ಡೆಗಳನ್ನು ಇನ್ನಷ್ಟು ಮುಂದೆ ತಳ್ಳುತ್ತೇನೆ. ಅವು ತಾವೇ ಸುಟ್ಟುಕೊಂಡು ಹೋಗುತ್ತಿದ್ದರೂ ಅದ್ಯಾವುದೋ ಕಷ್ಟದಿಂದ ಅವುಗಳನ್ನು ದೂರ ಸರಿಸಿದೆನೆಂದೋ ಇಲ್ಲಾ ಈಗಿನ ಮಟ್ಟಿಗೆ ಬೇಕಾದ ರೀತಿಯಲ್ಲಿ ಅವುಗಳನ್ನು ಬಳಸಿದೆನೆಂದೋ ಒಂದು ರೀತಿಯ ಕೃತಜ್ಞತೆಯನ್ನು ಸ್ಪುರಿಸತೊಡಗುತ್ತವೆ, ಅದೇ ಖುಷಿಯಲ್ಲಿ ತಮ್ಮಲ್ಲಡಗಿದ ಯಾವುದೋ ಅವ್ಯಕ್ತ ಶಕ್ತಿಯ ಹುರುಪಿನಲ್ಲಿ ಗುರ್ರ್ ಗುರ್ರು ಎಂದು ಎಲ್ಲಾ ಕಡೆ ಜ್ವಾಲೆಯನ್ನು ಹತ್ತಿಸಿ ಆ ಕಾಲಕ್ಕಾದರೂ ಬೆಳಕು ಹಾಗೂ ದಗೆಯನ್ನು ಹರಡುತ್ತವೆ. ಉರಿಯುವ ಕೊಳ್ಳಿಗಳು ತಮ್ಮ ತಮ್ಮಲ್ಲಿ ತಡಕಾಡಿಕೊಂಡಾಗಲೇ ಜ್ವಾಲೆ ಹೆಚ್ಚಾಗುವುದೆಂದಾದರೆ ಹಾಗೆಯೇ ಆಗಲಿ.

2 comments:

ಸುಪ್ತದೀಪ್ತಿ suptadeepti said...

ಏನ್ ಸ್ವಾಮೀ ತತ್ವಶಾಸ್ತ್ರಕ್ಕೆ ವಾಲಿಕೊಂಡಿದ್ದೀರಿ?

ಲೇಖನದ ತಾತ್ವಿಕತೆ, ಆಳ, ಅರ್ಥ ಇಷ್ಟವಾಗಿವೆ, ಬಿಡಿ.

Satish said...

ಜ್ಯೊತಿ ಮೆಡಮ್,
ತತ್ವಾನೂ ಇಲ್ಲ, ಏನೂ ಇಲ್ಲ - ಬೆನ್ನಿಗೆ ಬಿದ್ದ ದಗೆ ಹೆಚ್ಚಾಗಿ ಸ್ವಲ್ಪ ತಲೆ ಚುರುಕಾಗಿತ್ತು ಅನ್ನೋದು ನನ್ನ ಸ್ನೇಹಿತರೊಬ್ಬರು ಮಾಡಿದ ಹಾಸ್ಯ (ನನ್ನ ಈ ಪರಿಯನ್ನ ನೋಡಿ), ಹಾಳ್ ತಲೆ, ಆರಾಮಾಗಿ ಕುಳಿತು ಮೈ ಕಾಯಿಸಿಕೊಳ್ಳೋದಕ್ಕೂ ಬಿಡೋದಿಲ್ವಲ್ಲಾ ಅನ್ನೋದು ಮತ್ತಿನ್ಯಾರೋ ಫೋನ್ ಮಾಡಿ ಹೇಳಿದ ಮಾತು.

ನೀವು ಏನಾದ್ರೂ ಅಂದ್ಕೊಳ್ಳಿ, ಆದ್ರೆ ನಿಮ್ಮ ಕಾಮೆಂಟುಗಳು ಹೀಗೇ ಬರ್ತಾ ಇರ್ಲಿ! :-)