Friday, August 14, 2009

ಕಷ್ಟಗಳು, ಉಳಿತಾಯ ಹಾಗೂ ಮೋಕ್ಷ

’ಬಹಳ ಕಷ್ಟಾ ಸ್ವಾಮಿ, ಇತ್ತೀಚೆಗೆ’. ಅನ್ನೋ ಮಾತು ಆಗಾಗ್ಗೆ ಕೇಳಿ ಬರ್ತಾನೇ ಇರುತ್ತೆ. ಕೆಲಸ ಕಳೆದುಕೊಂಡವರ ಬಗ್ಗೆ, ಮನೆಗಳ ಬೆಲೆ ಕುಸಿದು ಮಾರಲೂ ಆಗದೇ ಅವುಗಳ ಸಾಲವನ್ನು ಕಟ್ಟಲೂ ಆಗದೇ ಕೊರಗುವವರ ಬಗ್ಗೆ, ಒಂದೇ ಮನೆಯಲ್ಲಿ ಇತ್ತೀಚೆಗಷ್ಟೇ ಕಾಲೇಜು ಮುಗಿಸಿದ ಕೆಲಸ ಹುಡುಕುತ್ತಿರುವ ಮಕ್ಕಳ ಜೊತೆಗೆ ಪೋಷಕರೂ ಕೆಲಸ ಹುಡುಕುತ್ತಿರುವುದರ ಬಗ್ಗೆ, ಇನ್ನೇನು ನಿವೃತ್ತರಾಗಬೇಕು ಎನ್ನುಕೊಳ್ಳುವವರು ಮತ್ತಿನ್ನೊಂದಿಷ್ಟು ವರ್ಷಗಳ ಕಾಲ ಕೆಲಸ ಮಾಡಲೇ ಬೇಕು ಎನ್ನುವುದರ ಬಗ್ಗೆ ಹೀಗೆ ಹಲವಾರು ವರದಿಗಳು ಅಲ್ಲಲ್ಲಿ ಕಾಣಸಿಗುತ್ತವೆ.

ಬಡತನದಲ್ಲಿ ಹುಟ್ಟಿ ಬೆಳೆದವರಿಗೆ ಮುಂದೆ ಅವರು ಯಾವುದೇ ಸ್ಟೇಟಸ್‌ನಲ್ಲಿದ್ದರೂ ಅವರ ಸರ್ವೈವಲ್ ತಂತ್ರಗಳು ಯಾವಾಗಲೂ ಜೀವಂತವಾಗಿಯೇ ಇರುತ್ತವೆ ಎಂದು ಹೇಳಬೇಕು. ಒಮ್ಮೆ ಬಡತನದಲ್ಲಿ ಸಿಕ್ಕಿಕೊಂಡರೆ ಅದರ ಪರಿಣಾಮಗಳು ಒಂಥರಾ ರಕ್ತದಲ್ಲಿರುವ ಯಾವುದೇ ಖಾಯಿಲೆಯ ವೈರಾಣುಗಳ ಹಾಗೆ ಯಾವತ್ತೂ ಜೀವಂತವಾಗೇ ಉಳಿದು ಕಷ್ಟದ ಪರಿಸ್ಥಿತಿಯಲ್ಲಿ ಹಳೆಯ ಇನ್‌ಸ್ಟಿಂಕ್ಸ್ ಎಲ್ಲ ಕೆಲಸ ಮಾಡಲು ಆರಂಭಿಸುತ್ತವೆ. ಅದೇ ಹುಟ್ಟಿದಂದಿನಿಂದ ಬಡತನವನ್ನು ಕಾಣದೇ ಇದ್ದವರ ಮೊದಲ ಬಡತನದ ಬವಣೆ ಬಲುಕಷ್ಟ.

ನಮ್ಮ ಪಕ್ಕದ ಮನೆಯವರು ಈ ಹತ್ತು ವರ್ಷಗಳಿಂದಲೂ ಪ್ರತಿನಿತ್ಯ ತಮ್ಮ ಮನೆಯ ಸುತ್ತಲೂ ಕನಿಷ್ಠ ಇಪ್ಪತ್ತು ವಿದ್ಯುತ್ ದೀಪಗಳನ್ನು ಉರಿಸುತ್ತಿದ್ದರು - ಗರಾಜ್ ಲೈಟ್‌ಗಳು, ಎದುರು ಲಾನ್‌ನಲ್ಲಿರುವ ಮರಗಳಿಗೆ ಫೋಕಸ್ ಲೈಟ್‌ಗಳು, ಮನೆಯ ಮುಂದಿನ ಬಾಗಿಲಿಗೆ, ಡ್ರೈವ್‍ ವೇ ಅಕ್ಕಪಕ್ಕದಲ್ಲಿ ಇತ್ಯಾದಿ. ಈ ಲೈಟುಗಳೆಲ್ಲ ಅಟೋಮ್ಯಾಟಿಕ್ ಆಗಿ ರಾತ್ರಿ ಪೂರ್ತಿ ಉರಿದು ಬೆಳಿಗ್ಗೆ ಆರಿಹೋಗುತ್ತಿದ್ದವು, ಅದೇ ನಮ್ಮ ಮನೆಯಲ್ಲಿ ದಿನಕ್ಕೆ ಕೆಲವು ಘಂಟೆಗಳು ಮಾತ್ರ ಮುಂದಿನ ಬಾಗಿಲಿನ ಎರಡು ಎನರ್ಜಿ ಎಫಿಷಿಯಂಟ್ ಬಲ್ಬ್‌ಗಳು ಉರಿಯುತ್ತಿದ್ದವು. ಹೋದ ವರ್ಷದ ಕೊನೆಯಲ್ಲಿ ಇದ್ದಕ್ಕಿದ್ದ ಹಾಗೆ ನಮ್ಮ ಇಲೆಕ್ಟ್ರಿಕ್ ಬಿಲ್ ಡಬಲ್ ಆಯಿತು, ನಾನೂ ಗಾಬರಿಗೊಂಡು ಒಂದಿಬ್ಬರನ್ನು ಕೇಳಿ ತಿಳಿದಾಗ ಅವರದ್ದೂ ಅದೇ ಪರಿಸ್ಥಿತಿ. ಹಾಗಾದ ಮರುದಿನವೇ ಪಕ್ಕದ ಮನೆಯ ಲೈಟುಗಳು ಎಲ್ಲವೂ ನಿಂತು ಹೋದವು, ಅವರು ಮನೆಯಲ್ಲಿದ್ದ ದಿನಗಳು ಮಾತ್ರ ಮುಂದಿನ ಬಾಗಿಲಿಗೆ ಒಂದು ಎನರ್ಜಿ ಎಫಿಷಿಯಂಟ್ ಲೈಟ್ ಬಲ್ಬ್ ಉರಿಯತೊಡಗಿತು. ಕೇವಲ ಎಲೆಕ್ಟ್ರಿಕ್ ಬಿಲ್ ವಿಚಾರವೊಂದೇ ಅಲ್ಲ, ಅವರ ಖರ್ಚು-ವೆಚ್ಚ ಜೀವನ ಶೈಲಿಯಲ್ಲೂ ಬದಲಾವಣೆಗಳು ಗೋಚರಿಸತೊಡಗಿದವು: ನ್ಯೂಸ್ ಪೇಪರ್ ಸಬ್‌ಸ್ಕ್ರಿಫ್ಷನ್ ನಿಂತು ಹೋಗುವುದು, ವರ್ಷದ ವೆಕೇಷನ್ನ್ ಕ್ಯಾನ್ಸಲ್ ಆಗುವುದು, ಮುಂತಾಗಿ.

ಒಂದು ವಸ್ತು ನಮ್ಮದೋ ಅಲ್ಲವೋ ಎಲ್ಲ ಕಡೆ ಕನ್ಸರ್‌ವೇಟಿವ್ ಆಗಿರುವುದು ಒಂದು ಬಗೆ - ಉದಾಹರಣೆಗೆ ನಮ್ಮ ಆಫೀಸಿನಲ್ಲಿ ನಾವು ಪ್ರಿಂಟ್ ಮಾಡುವ ಪ್ರತಿಯೊಂದು ಡಾಕ್ಯುಮೆಂಟ್ ಜೊತೆಗೆ ನಮ್ಮ ಹೆಸರಿನ ಕವರ್ ಪೇಜ್ ಅನ್ನು ನಾನು ಸಾಧ್ಯವಾದಷ್ಟು ಬಳಸುತ್ತೇನೆ, ಅದರ ಖಾಲಿ ಇರುವ ಮತ್ತೊಂದು ಪುಟದಲ್ಲಿ ಏನಾದರೂ ನೋಟ್ಸ್ ಮಾಡುವುದಕ್ಕೋ ಅಥವಾ ಚಿಕ್ಕದಾಗಿ ಕತ್ತರಿಸಿಕೊಂಡು ’ಪೋಸ್ಟ್ ಇಟ್’ ನೋಟ್ಸ್ ಥರವೋ, ಅಥವಾ ಇನ್ನೊಂದು ರೀತಿ. ಇನ್ನುಳಿದವರು ಆ ಕವರ್ ಪುಟವನ್ನು ಟ್ಯ್ರಾಷ್ ಮಾಡಬಹುದು, ಅಥವಾ ರಿಸೈಕಲ್ ಮಾಡಬಹುದು, ಹೀಗೆ ಅವರವರ ಬುದ್ಧಿಗೆ ತಕ್ಕಂತೆ ಆ ಕವರ್ ಪೇಜ್ ಬಳಕೆಗೊಳ್ಳುತ್ತೆ. ಇಲ್ಲಿ ಒಂದೇ ಸರಿಯುತ್ತರವೆಂಬುದೇನೂ ಇಲ್ಲ, ಆ ಪುಟವನ್ನು ಹೇಗೆ ಬಳಸಬೇಕು ಎನ್ನುವುದಕ್ಕೆ ಹಲವಾರು ಸರಿ ಉತ್ತರಗಳಿವೆ. ನನ್ನ ನಿಲುವಿನಲ್ಲಿ ಅಥವಾ ನಾನು ಹೇಗೆ ಆ ಕವರ್ ಪುಟವನ್ನು ಬಳಸುತ್ತೇನೆ ಎಂಬುದರಲ್ಲಿ ಯಾವುದೇ ಬದಲಾವಣೆಗಳೂ ಆಗಲಾರವು, ಅದು ಎಕಾನಮಿಯನ್ನೂ ಆದರಿಸಿಲ್ಲ, ಅದಕ್ಕೆ ನೇರವಾಗಿ ನಾನು ಹಣಕೊಡುವುದೂ ಇಲ್ಲ. ಇದು ಹೇಗೆ ನನ್ನ ನಿಲುವೋ ಉಳಿದವರದೂ ಹಾಗೆ, ಅಷ್ಟೇ.

ಇನ್ನು ಕಷ್ಟದ ಮಾತಿಗೆ ಬರೋಣ, ಅವರವರ ಕಷ್ಟ ಅವರಿಗೆ ಆನೆಯ ಭಾರ ಆನೆಗೆ ಇರುವೆಯ ಭಾರ ಇರುವೆಗೆ. ಆದರೆ ಕಷ್ಟಗಳು, ಸಾಂಸಾರಿಕ ಜಂಜಾಟಗಳು, ನಮಗೊದಗುವ ಅನೇಕ ತೊಂದರೆಗಳನ್ನು ಹಲವಾರು ರೀತಿಯಲ್ಲಿ ನೋಡಬಹುದು. ಅವುಗಳ ತುಲನಾತ್ಮಕ ಅರಿವು ನಮ್ಮನ್ನು ಎಷ್ಟೋ ಸಾರಿ ’ಸದ್ಯ, ನಮಗೆ ಹಾಗಾಗದಿದ್ದರೆ ಸಾಕು!’ ಎನ್ನುವ ಮನೋಭಾವನೆಯಿಂದ ಆ ಮಟ್ಟಿಗೆ ಸಮಾಧಾನ ಹುಟ್ಟಬಹುದು. ದೈಹಿಕ ಕೆಲಸಗಳಿಂದ ಸ್ನಾಯುಗಳು ಬಲಗೊಳ್ಳುವ ಹಾಗೆ ಈ ಸಂಕಷ್ಟಗಳ ಪರಂಪರೆ ಮನಸ್ಸನ್ನು ಗಟ್ಟಿಗೊಳಿಸಬಹುದು. ಎಲ್ಲದಕ್ಕಿಂತ ಮುಖ್ಯವಾಗಿ ಈ ಜಂಜಾಟಗಳಲ್ಲಿ ಬಳಲಿ, ತೊಳಲಿ, ಬಗ್ಗಿ, ಬಾಗಿ, ನೊಂದು, ನಲಿದು ಮುಂದೆ ಇವೆಲ್ಲದರ ದೆಸೆಯಿಂದ ಲಕ್ಷಾಂತರ ಜನ್ಮಗಳಲ್ಲಿ ಮೋಕ್ಷ ಸಿಗಬಹುದು.

ನಮಗೆಲ್ಲ ಕಷ್ಟದ ಬಗ್ಗೆ ಏನು ಗೊತ್ತಿದೆ? ಮನೆಯಲ್ಲಿ ಮೂರೋ ನಾಲ್ಕು ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಡಬೇಕು ಎನ್ನುವ ಪೋಷಕರ ನಡುವೆ, ಹುಟ್ಟಿದಂದಿನಿಂದ ವಿಕಲಾಂಗರಾಗಿ ಬೆಳೆಯುವ ಮಕ್ಕಳನ್ನು ಪೋಷಿಸುವ ತಂದೆ-ತಾಯಿಗಳ ನಡುವೆ, ಇಂದಿದ್ದರೆ ನಾಳೆ ಬೆಳಿಗ್ಗೆ ತಿನ್ನುವುದಕ್ಕಿಲ್ಲ ಎನ್ನುವವರ ನಡುವೆ, ಯಾವಾಗಲೂ ಒಂದಲ್ಲ ಒಂದು ಖಾಯಿಲೆಯಿಂದ ನರಳುತ್ತಿರುವ ಕುಟುಂಬದ ಸದಸ್ಯರ ಜೊತೆ ತಮ್ಮ ದಿನಚರಿಯನ್ನು ಕಂಡುಕೊಳ್ಳುವವರ ನಡುವೆ, ಇದ್ದ ಮಕ್ಕಳಲ್ಲಿ ಕೆಲವರನ್ನು ದುರಂತಗಳಲ್ಲಿ ಕಳೆದುಕೊಂಡು ಜೀವನ ಪರ್ಯಂತ ನರಳುವವರ ನಡುವೆ, ಆಫೀಸಿನ ಕೆಲಸ ಮನೆಯಲ್ಲಿನ ಕೆಲಸಗಳ ಜೊತೆಗೆ ತಮ್ಮ ಕುಟುಂಬದ ಹಿರಿಯರನ್ನು ಪೋಷಿಸಿಕೊಂಡು ಹೋಗುವವರ ನಡುವೆ, ತಮ್ಮ ಪ್ರೈಮರಿ ರೆಸಿಡೆನ್ಸ್ ಅಥವಾ ತಮ್ಮ ಜೀವನದ ಇಡುಗಂಟನ್ನು ಕಳೆದುಕೊಂಡವರ ನಡುವೆ...ಹೀಗೆ ಈ ಪಟ್ಟಿ ಮುಂದುವರೆಯುತ್ತದೆ. ಪ್ರತಿಯೊಬ್ಬರ ಕಷ್ಟದ ಅರಿವು ಹಾಗೂ ಅವರ ಅನುಭವ ಸಾಪೇಕ್ಷವಾದುದು. ನಮ್ಮ ಕಷ್ಟ ದೊಡ್ಡದು ಎಂದೆನಿಸಿದ ಮರು ಕ್ಷಣವೇ ಮತ್ತೊಬ್ಬರ ಇನ್ನೂ ಹೆಚ್ಚಿನ ಕಷ್ಟದ ಸ್ಥಿತಿಯನ್ನು ಕೇಳಿದಾಗ ಸಮಾಧಾನವಾಗುತ್ತದೆ. ಹೀಗೆ ಆದಾಗಲೆಲ್ಲ ’ಸದ್ಯ ನಮಗೆ ಆ ಪರಿಸ್ಥಿತಿ ಬರಲಿಲ್ಲವಲ್ಲ’ ಎನ್ನುವ ದನಿಯೂ ಹುಟ್ಟುತ್ತದೆ, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇಂತಹ ಕ್ಷಣದಲ್ಲಿ ’ದೇವರ ದಯೆ’ ಅಥವಾ ’ದೇವರು ದೊಡ್ಡವನು’ ಭಾವನೆಯೂ ಉದ್ಭವಿಸುತ್ತದೆ.

1 comment:

Amit Hegde said...

Good observation...!

http://eyeclickedit.blogspot.com/