Thursday, April 30, 2009

ವರ್ಚುವಲ್ಲ್ ಪ್ರಪಂಚದ ಲೀಲೆ

ನನಗೆ ಅವಾಗಾವಾಗ ’ನೀವು ಆರ್ಕುಟ್‌ನಲ್ಲಿದ್ದೀರಾ?’, ’ಟ್ವಿಟ್ಟರ್ರ್ ನಲ್ಲಿದ್ದೀರಾ?’ ಮುಂತಾಗಿ ಪ್ರಶ್ನೆಗಳು ಬರ್ತಾನೇ ಇರ್ತವೆ. ನಾನು ಅಂತಹ ಪ್ರಶ್ನೆಗಳಿಗೆ ’ಟು ಡು ವಾಟ್?’ ಅನ್ನೋ ಮತ್ತೊಂದು ಪ್ರಶ್ನೆ ಎಸೆದು ಉತ್ರ ಕೊಡ್ತೀನಿ. ನನಗೆ ಸಿಗೋ ಎಲ್ಲ ಉತ್ತರ ಅಥವಾ ಸಮಜಾಯಿಷಿಗಳೂ ಇವೆಲ್ಲಾ ಸೋಷಿಯಲ್ಲ್ ನೆಟ್‌ವರ್ಕಿಂಗ್ ಸೈಟ್‌ಗಳು, ಅಲ್ಲಿಗೆ ಬಂದೂ ಹೋಗಿ ಮಾಡೋದ್ರಿಂದ ನಿಮ್ಮ ನಿಮ್ಮ ನೆಟ್‌ವರ್ಕ್ ಅಭಿವೃದ್ಧಿ ಆಗುತ್ತೆ ಅನ್ನೋ ರೀತಿ ಇರುತ್ವೆ. ನಾನಂತೀನಿ, ’ನಮ್ಮ ಸುತ್ ಮುತ್ಲು ಇರೋರ ಜೊತೆ ಬೆರೆತುಕೊಂಡಿರೋದೇ ದೊಡ್ಡ ಸವಾಲಾಗಿದೆ ಇನ್ನು ಈ ವರ್ಚುವಲ್ ಪ್ರಪಂಚದವರ ಜೊತೆ ಏಗೋದು ಯಾರೂ ಅಂತ?’

ನೀವೇ ಯೋಚ್ನೆ ಮಾಡಿ, ಎಷ್ಟೊಂದು ಸೋಷಿಯಲ್ ನೆಟ್‌ವರ್ಕಿಂಗ್ ಸೈಟ್‌ಗಳಿವೆ ಅಂತಾ - ಆರ್ಕುಟ್ಟು, ಫೇಸ್‌ಬುಕ್, ಮೈಸ್ಪೇಸ್, ಟ್ವಿಟ್ಟರ್ ಮುಂತಾಗಿ. ಇವುಗಳಿಗೆಲ್ಲ ಒಂದೊಂದು ಅಕೌಂಟ್ ಕ್ರಿಯೇಟ್ ಮಾಡಿಕೊಂಡಿರಬೇಕು, ಅವಕ್ಕೆಲ್ಲ ಒಂದೊಂದು ಯೂಸರ್ ಐಡಿ ಪಾಸ್‌ವರ್ಡ್. ಜೊತೆಗೆ ಅಲ್ಲಿ ಬಂದು ಹೋಗೋರ ಜೊತೆಯಲ್ಲ ಸಂಭಾಷಣೆ ಮಾಡುತ್ತಾ ಇರೋದಕ್ಕೆ ಟೈಮಾದ್ರೂ ಯಾರ ಹತ್ರ ಇದೆ ಅನ್ಸೋಲ್ವ? ನಾನು ತಮಾಷೆಯಾಗಿ ಹೇಳೋದೇನು ಅಂದ್ರೆ, ಒಂದಲ್ಲ ಒಂದು ದಿನ ಈ ಸೈಟುಗಳೆಲ್ಲ ಗೂಗಲ್ಲೋ, ಮೈಕ್ರೋಸಾಫ್ಟ್‌ನವರೋ ಮರ್ಜ್ ಮಾಡೋ ಕಾಲ ಬರುತ್ತೆ, ಆಗ ನಾನು ಒಂದೇ ಒಂದು ಅಕೌಂಟ್ ಓಪನ್ ಮಾಡಿಕೊಂಡಿರ್ತೀನಿ ಅಂತ.

ಇನ್ನೂ ಮುವತ್ತರ ಹರೆಯದಲ್ಲಿದ್ದುಕೊಂಡೇ ನಾನು ಇಷ್ಟೊಂದು ಔಟ್‌ಡೇಟೆಡ್ ಆಗಿ ಹೋದ್ತಾ ಅನ್ನೋ ಹೆದರಿಕೆ ಒಂದು ಕಡೆ. ಛೇ, ಪ್ರಪಂಚದ ಆರು ಬಿಲಿಯನ್ ಜನರಲ್ಲಿ ಕನಿಷ್ಠ ಮೂರು ಬಿಲಿಯನ್ನ್ ಜನರಾದ್ರೂ ಇನ್ನೂ ಫೋನಿನ ಡಯಲ್ ಟೋನ್ ಕೇಳದೇ ಇರೋ ಪರಿಸ್ಥಿತಿ ಇರೋವಂತ ಸಮಯದಲ್ಲಿ ನನ್ನಂಥವರು ಔಟ್‌ಡೇಟೆಡ್ ಅಗೋದಾದ್ರೂ ಹೇಗೆ ಅನ್ನೋ ಸಮಾಧಾನ ಜೊತೆಗೆ. ಇ-ಮೇಲ್, ಫೋನ್ ಹಾಗೂ ಮುಖತಃ ಭೇಟಿ ಮಾಡುವ ಸಂದರ್ಭಗಳಲ್ಲಿ ನಾವು ನಮ್ಮನ್ನು ಚೆನ್ನಾಗಿ ತೊಡಗಿಸಿಕೊಂಡ್ರೆ ಸಾಕು ಸಂಬಂಧಗಳು ಬೆಳೆಯೋದಕ್ಕೆ, ಇವಿಷ್ಟರ ಜೊತೆಗೆ ಅಲ್ಲಿ-ಇಲ್ಲಿ ವೆಬ್ ಸೈಟ್‌ಗಳಲ್ಲಿ ಹೋಗಿ ’ಇಂದು ನಾನು ಇಂಥಾ ತಿಂಡಿ ತಿಂದೆ’, ’ಅವನು ಅಲ್ಲಿ ಅಷ್ಟೊಂದು ರನ್ ಹೊಡೆದ’ ಅಂತೆಲ್ಲ ’ವಾಲ್’ ಮೇಲೆ ಬರೆದುಕೊಳ್ಳೋದ್ರಿಂದ ಏನ್ ಪ್ರಯೋಜನ ಅಂತ ನನಗಿನ್ನೂ ಕನ್ವಿನ್ಸ್ ಆಗಿಲ್ಲ ನೋಡಿ.

ನಾನು ಹಳೇ ಕಾಲದವನು ಆಗೋ ಕಾಲ ಹತ್ರ ಬರ್ತಾ ಇದೆ, ಅಂತ ನೀವೆಲ್ಲ ನಗಬಹುದು. ನನ್ನ ಪ್ರಕಾರ, ಕೈಯಲ್ಲಿರೋ ಐದು ಸಾವಿರ ಡಾಲರ್ ವಾಚಾಗ್ಲಿ ಅಥ್ವಾ ಬೆಂಗಳೂರಿನಲ್ಲಿ ಐವತ್ತು ರೂಪಾಯಿಗೆ ಸಿಗೋ ವಾಚಾಗ್ಲಿ ಮುಖ್ಯವಲ್ಲ್ - ಸಮಯವನ್ನ ಚೆನ್ನಾಗಿ ಬಳಸೋರು, ಅವರ ಕೈಯಲ್ಲಿ ಯಾವ ವಾಚ್ ಇದ್ರೂ ಇಲ್ದೇ ಇದ್ರೂ, ಸಮಯದ ಉಪಯೋಗವನ್ನು ಚೆನ್ನಾಗಿ ಮಾಡಿಕೊಳ್ತಾರೆ. ಅದೂ ಅಲ್ದೇ, ಈ ಸಂಬಂಧಗಳು ಅನ್ನೋದೆಲ್ಲ, ತೋಟದಲ್ಲಿ ಒಂದು ಗಿಡ ನೆಟ್ಟ ಹಾಗೆ, ಅವುಗಳನ್ನು ಚೆನ್ನಾಗಿ ಬೆಳೆಸಿ, ಪೋಷಿಸದೇ ಹೋದ್ರೇ ಸತ್ತೇ ಹೋಗ್ತಾವೆ. ಹಾಗಿರಬೇಕಾದ್ರೆ, ನನ್ನ ಸುತ್ತು ಮುತ್ಲೂ ಇರೋ ಸಂಬಂಧಗಳನ್ನು ನಾನು ಆತುಕೊಳ್ಳಲೋ ಅಥ್ವಾ ಜೊತೆಗೆ ಒಂದಿಷ್ಟು ವರ್ಚುವಲ್ಲ್ ಪ್ರಪಂಚದ ಲಿಂಕುಗಳನ್ನೂ ಪೋಣಿಸಿಕೊಳ್ಳಲೋ? ಅನ್ನೋ ಸಂಧಿಗ್ಧ ಬೇರೆ.

ಇಂಟರ್‌ನೆಟ್ ಈಗ ತಾನೆ ಕಣ್ಣು ತೆರೀತಾ ಇದೆ, ಕೇವಲ ಒಂದೂವರೆ ದಶಕದಷ್ಟು ಹಳೆಯದಾದ ಈ ತಂತ್ರಜ್ಞಾನಕ್ಕೆ ಇನ್ನೂ ದೊಡ್ಡ ಭವಿಷ್ಯವಿದೆ. ಈ ಇಂಟರ್‌ನೆಂಟ್ ಸೈಟ್‌ಗಳು ನಮ್ಮೂರಿನ ಪಬ್ಲಿಕ್ ಲೈಬ್ರರಿಗಳಾಗೋ ಮುನ್ನ ಬಹಳಷ್ಟು ಬೆಳವಣಿಗೆ ಖಂಡಿತ ಇದೆ. ನಾವೆಲ್ಲ ಮುದುಕರಾಗೋಷ್ಟೋತ್ತಿಗೆ ಇನ್ನೂ ಏನೇನು ಬದಲಾವಣೆಗಳು ಬಂದು ಹೋಗ್ತಾವೋ ಕಾಣೆ. ನಮ್ಮ ಸುತ್ತು ಮುತ್ಲೂ ಇರೋ ಖಾಲಿ ಜಾಗಗಳ್ಳಲ್ಲಿ - ಅಂದ್ರೆ ಅದು ರೆಫ್ರಿಜರೇಟರ್ರಿನ ಸೈಡ್ ಆಗಿರಬಹುದು, ಆಥವಾ ಅಟ್ಟದ ಮೇಲಿನಿಂದ ಇಳಿಯುವಾಗ ಸಿಗೋ ಗೋಡೆ ಮೇಲಿನ ಖಾಲಿ ಜಾಗವಾಗಬಹುದು, ಅಥವಾ ಕಾರಿನ ವಿಂಡ್‌ಶೀಲ್ಡ್ ಇನ್ನು ಮುಂತಾದ ಫ್ಲಾಟ್ ಜಾಗಗಳು ಫ್ಲಾಟ್‌ಸ್ಕ್ರೀನ್ ಆಗಿ ಮಾರ್ಪಾಡಾಗೋ ಕಾಲ ದೂರವಿಲ್ಲ. ವರ್ಚುವಲ್ಲ್ ಆಗಲಿ ರಿಯಲ್ ಆಗಲಿ ಈ ಪ್ರಪಂಚ ಇಷ್ಟೇ, ಯಾವಾಗ್ಲೂ ಬೆಳಿತಾನೇ ಇರುತ್ತೆ. ಇವುಗಳಿಗೆಲ್ಲ ಸ್ಪಂದಿಸೋದಕ್ಕೆ, ಇವುಗಳ ಜೊತೆ ಏಗೋದಕ್ಕೆ ಸಮಯ ಮಾತ್ರ ಸಿಗೋದಿಲ್ಲ ಅಷ್ಟೇ.

Monday, April 13, 2009

ನಿಂತ ಮೇಲೆ ಹಾಸ್ಯ!

ಹತ್ತನೇ ಕ್ಲಾಸ್ ವರೆಗೆ ಕನ್ನಡ ಮೀಡಿಯಮ್‌ನಲ್ಲಿ ಓದಿರೋ ನನ್ನಂಥವರಿಗೆ Stand-up comedy ಅನ್ನೋದನ್ನ ಕನ್ನಡಕ್ಕೆ ಭಾಷಾಂತರ ಮಾಡಿ ಅಂದ್ರೆ, ಅದನ್ನ ’ನಿಂತ-ಮೇಲೆ ಹಾಸ್ಯ!’ ಅಂತ ಮಾಡಿಬಿಡ್ತೀನೇನೋ ಅನ್ನೋದು ನನ್ನ ಹೆದರಿಕೆ. ಉದಯ ಟಿವಿಯಲ್ಲಿ ಬರ್ತಾ ಇದ್ದ ನಗೆ ಸಖತ್ ಸವಾಲನ್ನು ನೋಡಿದಾಗಲೆಲ್ಲ ನಮ್ಮ ಜನರಿಗೆ ಹಾಸ್ಯದ ಚುರುಕು ಇತ್ತೀಚೆಗೆ ಬಹಳ ತಾಗಿದೆ ಅನ್ನಿಸ್ತಾ ಇತ್ತು, ಆದ್ರೆ ಜೊತೆಯಲ್ಲಿ ಇನ್ನೂ ಅವರಿವರು ಬಾವಿಗಳಲ್ಲಿ ಬೀಳಿಸ್ಕೊಂಡಿರೋ ವಾಚ್‌ಗಳಿಗೆ ಕೀಲಿ ಕೊಡೋದರಲ್ಲೇ ನಮ್ಮ ಜೋಕ್ ಮಾರರು ತಮ್ಮ ಸರ್ವಸ್ವವನ್ನೂ ಪಣಕ್ಕೆ ಇಟ್ಟ ಹಾಗೆ ಕಾಣಿಸ್ತಾನೂ ಇತ್ತು.

ಕಾಮಿಡಿ-ಹಾಸ್ಯ-ತಮಾಷೆ-ನಗೆ ಅಂತ ಹುಡುಕ್ತಾ ಹೋದ್ರೆ ಎಷ್ಟು ಜನ ತಮ್ಮ ಒರಿಜಿನಲ್ ಕಂಟೆಂಟ್ ಅನ್ನ ತಮ್ಮ ಒರಿಜಿನಲ್ ಶೈಲಿಯಲ್ಲಿ ಪ್ರದರ್ಶನ ನೀಡಿ ಪ್ರಖ್ಯಾತರಾಗಿದ್ದಾರೆ, ಅದರಲ್ಲಿ ಕನ್ನಡಿಗರ ಪಾಲು ಎಷ್ಟು ಅಂತ ಅನ್ನೋದು ದೊಡ್ಡ ಸವಾಲೇ ಸರಿ. ನನ್ನ ಮಟ್ಟಿಗೆ ಅಮೇರಿಕದ ಜಾರ್ಜ್ ಕಾರ್ಲಿನ್ ಕಾಮಿಡಿ ಬಹಳ ಹೆಚ್ಚಿನ ಮಟ್ಟದ್ದು ಅನ್ನಿಸ್ತು. ನನ್ನ ಸಹೋದ್ಯೋಗಿಯೊಬ್ಬನನ್ನ ನಿನಗ್ಯಾವ ಕಾಮಿಕ್ಕುಗಳು ಇಷ್ಟ ಅಂತ ಪ್ರಶ್ನೆ ಕೇಳಿದ್ರೆ ಜೆರ್ರಿ ಸೈನ್‌ಫೆಲ್ಡ್ ಅಂದ. ಯಾಕೆ ಅಂದ್ರೆ, ಸೈನ್‌ಫೆಲ್ಡ್ ಜನರ ಬದುಕಿನ ಸೂಕ್ಷ್ಮಗಳನ್ನು ಹಾಸ್ಯವಾಗಿ ಜನರ ಜೊತೆಗೆ ಅಶ್ಲೀಲತೆಯ ಸೋಗಿಲ್ಲದೆ ಹಂಚಿಕೊಂಡವರಲ್ಲಿ ನಿಸ್ಸೀಮ ಎಂದು ತನ್ನ ನಿಲುವನ್ನ ನನ್ನ ಸಹೋದ್ಯೋಗಿ ಹಂಚಿಕೊಂಡ. ನನಗೆ ಆಗ್ಲೇ ಅನ್ಸಿದ್ದು, ಕಾಮಿಡಿ ಅಂದ್ರೆ, ಹೊಲಸು ಭಾಷೆಯ ಬಳಕೆ ಅಥವಾ ದುರ್ಬಳಕೆ ಇರ್ಲೇ ಬೇಕು ಅಂತೇನು ಇಲ್ಲ ಅಂತ.

***

ಯಾರಾದ್ರೂ ಹೊಸದಾಗಿ ಪರಿಚಯವಾದವರು ನನ್ನನ್ನ ಕೇಳೋ ಹಾಗೆ, ’...ಎಲ್ಲಾ ಸೆಟ್ಲ್ ಆಗಿರಬೇಕು ನೀವು ಹಾಗಾದ್ರೆ...’ ಇಲ್ಲಿ ಬಂದು ಇಷ್ಟು ವರ್ಷ ಅದ್ರೂ ಎಲ್ಲೂ ನಾವು ನೆಲೆ ನಿಂತೇ ಇಲ್ಲಾ - ಇನ್ನು ನಿಲ್ಲದ ಮೇಲೆ ಎಲ್ಲಿ ಹಾಸ್ಯ ಅಂತ ಅನ್ನೋ ಪ್ರಶ್ನೆ ಸಹಜವಾಗಿ ಬರುತ್ತೆ. ಅದಕ್ಕೆ ವಿರುದ್ಧವಾಗಿ ಕವಿವಾಣಿ ಬೇರೆ ಅದೇಶ ಕೊಟ್ಟಿದೆ - ’...ಎಲ್ಲಿಯೂ ನಿಲ್ಲದಿರು, ಮನೆಯನೆಂದು ಕಟ್ಟದಿರು, ಕೊನೆಯನೆಂದು ಮುಟ್ಟದಿರು...’ಎಂದು...ಹೀಗೆ ತಿರುಗಾಡ್ತಾ ಇರೋ ಜೀವನಕ್ಕೇನೇ ಹೆಚ್ಚು ಹೆಚ್ಚು ಐಡಿಯಾಗಳು ಬರೋದು (ಹಾಸ್ಯದ ರೂಪದಲ್ಲಿ) ಅಂತ ಕಾಣ್ಸುತ್ತೆ, ಉದಾಹರಣೆಗೆ ಏರ್‌ಪೋರ್ಟಿನಲ್ಲಿ TSA (Transportation Security Administration) ಅವರನ್ನು Thousands Standing Around! ಅಲ್ಲಿ ಲೈನಿನಲ್ಲಿ ನಿಂತಿರುವ ಜನಸಮೂಹ ಕಿಚಾಯಿಸಬಹುದು.

***

ಹಾಸ್ಯದ ಮೇಲೆ ಮತ್ತೆ ತಮಾಷೆಯಾಗಿ ಬರೀತಾನೇ ಇರ್ತೀನಿ, ಕೊನೇಪಕ್ಷ ’ಅಂತರಂಗ’ ಅಂದ್ರೆ ಅಳುಮುಂಜಿ ಐಡಿಯಾಗಳ ಆಗರ ಮುಖ ಮುದುಡಿಕೊಳ್ಳುವವರನ್ನ ಸಂತೈಸೋಕಾದ್ರೂ. ಇನ್ನು ಕೆಲವರಿಗೆ ಬ್ಲಾಗ್‌ ನಿಂದ ಜೀವನ ದರ್ಶನ ಸಿಗಬೇಕು ಅಂತ ಸಂಕಲ್ಪ ಇದ್ರೆ ಅವರು ತಮ್ಮ ಬಿಸಿನೆಸ್ಸನ್ನ ಬೇರೆ ಎಲ್ಲಾದ್ರೂ ತೊಗೊಂಡು ಹೋಗ್ಲಿ, ಏನಂತೀರಿ?

Sunday, April 05, 2009

ಸಗಣಿಯೊಳಗಿನ ಹುಳಗಳೂ ಬಾವಿ ಕಪ್ಪೆಗಳೂ...



























ಮಾರ್ಚ್ ೨೯ ರ ವಿ.ಕ.ದಲ್ಲಿ ’ಜನಗಳ ಮನ’ದಲ್ಲಿ ರವಿ ರೆಡ್ಡಿ ಹಾಗೂ ಜಗದೀಶ್ ರಾವ್ ಕಲ್ಮನೆಯವರ ಬಗ್ಗೆ ಓದಿ ಹೀಗನಿಸಿದ್ದು ನಿಜ.

ಹ್ಞೂ, ’ಇಂಥವರ ಬಗ್ಗೆ ಎರಡು ಸಾಲು ಬರೆದರೂ ಜಾಗ ವೇಷ್ಟು’ ಎಂದಿದ್ದಾರಲ್ಲವೇ? ಜೊತೆಗೆ, ’...ಬೆಂಗಳೂರು ಸುಧಾರಣೆಯಾಗಬೇಕಿದೆ.’ ಎನ್ನುವ ಕುಹಕ ಅಲ್ಲ, ನಿಜ ಸ್ಥಿತಿ ಬೇರೆ ಕೇಡಿಗೆ.

***

’ನಾವು ಭಾರತೀಯರೂ, ಒಹೋಯ್!’ ಎಂದು ಮೊನ್ನೆ ಮೊನ್ನೆ ತಾನೆ ಅಶ್ವಥ್ ಕೂಗಿ ಹೋಗಿದ್ದರಲ್ಲವೇ? ಸಗಣಿಯೊಳಗಿನ ಹುಳುಗಳಿಗೆ ಅದೇ ಪ್ರಪಂಚ, ಒಂದು ವೇಳೆ ಅವುಗಳನ್ನೇನಾದರೂ ಯಾರಾದರೂ ಎತ್ತಿ ಹೊರಗೆ ಬಿಟ್ಟರೂ ಮತ್ತೆ ಸಗಣಿಯೊಳಗೆ ಸಿಗುವ ಸುಖಕ್ಕೆ ಜೋತು ಬೀಳುವ ಜಾತಿ. ಹಾಗೇ ಬಾವಿ ಕಪ್ಪೆಗಳೂ ಕೂಡ, ತಮ್ಮದೇ ಪ್ರಪಂಚದಲ್ಲಿ ತಾವೇ ದೊಡ್ಡವರು ಎಂದುಕೊಂಡ ಹಾಗೆ.

ಇವೇ ಅತಿರಥ-ಮಹಾರಥರು ಅಮೇರಿಕದ ಸಮ್ಮೇಳನಗಳಿಗೆ ಬಂದಾಗ ಬಾಲ ಮುದುರಿಕೊಂಡು ತಮಗೆ ತೋಚಿದ್ದನ್ನ ಬರೀತಾರೇ ವಿನಾ ಯಾರೊಬ್ಬರ ಹೆಸರಿಗೂ ಮಸಿ ಬಳಿಯುವ ಕಾಯಕಕ್ಕಂತೂ ಕೈಗೂಡಿದ್ದನ್ನ ನಾನು ನೋಡಿಲ್ಲ. ಎಲ್ಲದಕ್ಕಿಂತ ಮುಖ್ಯವಾಗಿ ಅಮೇರಿಕದಲ್ಲಿ ಇನ್ನೂ ಮುಗಿಯದೇ ಇದ್ದ ’ಬಾಲ್ಟಿಮೋರ್ ಸಮ್ಮೇಳನ’ವನ್ನು ಈಗಾಗಲೇ ಮುಗಿದು ಹೋಯಿತು ಎಂದು ವರದಿಯನ್ನು ಹೊರಗೆ ಹಾಕಿದ್ದಕ್ಕೂ ಒಂದು ಅಪಾಲಜಿ ಇವುಗಳ ಮುಸುಡಿಯಿಂದ ಹೊರಡಲ್ಲ. ಇದ್ದ ಬದ್ದ ಸುದ್ದಿಗೆ ಒಂದಿಷ್ಟು ಕಣ್ಣೊರೆಸುವ ಚಾಕಚಕ್ಯತೆಯನ್ನು ಮುಟ್ಟಿಸಿ ಸುಳ್ಳಿನ ಮೇಲೆ ನೂರೆಂಟು ಸುಳ್ಳನ್ನು ಹೇಳೋ ಪದ್ಧತಿಯೂ ಇನ್ನೂ ನಿಂತ ಹಾಗಿಲ್ಲ.

***

’ಮೌಲ್ಯ’ವೆಂದರೇನು ಎಂದು ತಿಳಿದು ಅದನ್ನು ಪಚನ ಮಾಡಿಕೊಳ್ಳಲು ಇನ್ನೂ ಒಂದೈದು ಸಾವಿರ ವರ್ಷಗಳಾಗಬೇಕು ನಮಗೆ. ಇನ್ನು ಮೌಲ್ಯವನ್ನು ಆಧರಿಸಿದ ರಾಜಕಾರಣವೆಂದರೇನದು? ನಾವೆಲ್ಲ ಕುರಿಗಳು ಎಂದು ಕವಿಗಳು ಆಡಿ ಅಣಗಿಸಲಿಲ್ಲವೇ? ಅಂಥ ಕುರಿಗಳ ಮಂದೆಗೆ ಅಮೇರಿಕದೊಂದಿಷ್ಟು ಜನ ಪಾಪ ಏನೋ ಸಹಾಯವಾಗಲಿ ಎಂದು ಮನೆ-ಮಠ ಬಿಟ್ಟು, ಇರುವ ರಜಾ ವಜಾ ಮಾಡಿಕೊಂಡು, ಕೈಯಲ್ಲಿನ ಕಾಸು ಕರಗುವ ವರೆಗೂ ಪ್ರಯತ್ನ ಮಾಡುವ ಗೋಜಿಗಾದರೂ ಹೋಗುತ್ತಾರಲ್ಲ ಅದೇ ಮುಖ್ಯ.

ಐವತ್ತು ವರ್ಷಗಳಿಂದ ಚಲಾವಣೆಯಲ್ಲಿದ್ದ ಸಂವಿಧಾನ ಬದ್ಧ ’ಬಾವುಟ ಹಾರಿಸುವ ಕಾಯಿದೆ’ಯನ್ನು ಮುರಿದು ನಮ್ಮ ದೇಶದ ಬಾವುಟವನ್ನು ನಾವು ನಮ್ಮ ಮನೆ ಮುಂದೆ ಹಾರಿಸಿದರೆ ತಪ್ಪೇ? ಎಂದು ಸಾಧಿಸಿಕೊಂಡಿದ್ದು ನಮ್ಮಂಥ ಒಬ್ಬ ಅನಿವಾಸಿಯೇ.
ಅಮೇರಿಕದಲ್ಲಿ ಓದಿಕೊಂಡು, ಸದನದಲ್ಲಿ ಹಲವು ಹುದ್ದೆಗಳನ್ನು ಅಲಂಕರಿಸಿ ಮುಂದೆ ಒಬ್ಬ ಪ್ರತಿಭಾವಂತ ಮುಖ್ಯಮಂತ್ರಿ ಎಂದು ಎಸ್. ಎಮ್. ಕೃಷ್ಣ ಹೆಸರು ತೆಗೆದುಕೊಳ್ಳಲಿಲ್ಲವೇ?

***

ಇಂಥವರ ಬಗ್ಗೆ ಬರೀ ಬೇಡ್ರಿ, ನಿಮ್ಮ ಮೂರುಕಾಸ್ ಪತ್ರಿಕೆಯಲ್ಲಿ, ಯಾರ್ ಕೇರ್ ಮಾಡ್ತಾರೆ? ಹಾಗೆ ಬರೆಯದೇ ಉಳಿದ ಜಾಗೆಯಲ್ಲಿ ಅವೇ-ಅವೇ ಪ್ರಭೃತಿಗಳ ದರ್ಶನ ಮಾಡಿಸಿಕೊಂಡು ಸುಖವಾಗಿರಿ. ಲಂಚ, ಭ್ರಷ್ಟಾಚಾರ ಅನ್ನೋದು ಹಾಡು ಹಗಲಿನ ದಂದೆಯಾಗಿದ್ದರೂ ಅದನ್ನು ಇದ್ದ ಹಾಗೆ ಬರೆದು ವರ್ಷಕ್ಕೊಬ್ಬ ಪುಂಡು ರಾಜಕಾರಣಿಯನ್ನಾದರೂ ಜೈಲಿಗೆ ಸೇರಿಸಿದ್ದೇ ನಿಜವಾಗಿದ್ದರೆ ಪತ್ರಿಕೆ ಪಾವನವಾಗುತ್ತಿತ್ತು, ಹಾಗಾಗೋದಿಲ್ಲ ಎಂದ ಮೇಲೆ ತಿಪ್ಪೇ ಸಾರಿಸಿಕೊಂಡೇ ಬಿದ್ದಿರಿ.

ಹೆಂಡ-ಸೀರೆ ಹಂಚಿ ಮತ ತೆಗೆದುಕೊಳ್ಳೋ ನಿಮ್ಮ ದೊರೆಗಳ ಪಾದ ನೆಕ್ಕೊಂಡು ಬಿದ್ದಿರಿ, ಇವತ್ತಲ್ಲ ನಾಳೆ ನಿಮಗೂ ಬೆಳಕಿನ ದರ್ಶನವಾದೀತು. ಬಡವರನ್ನ ದೋಚಿ ಸುಲಿಗೆ ಮಾಡಿ ಜಾತಿ ರಾಜಕಾರಣ ಮಾಡೋರು ನಿಮಗೆಲ್ಲ ಆದರ್ಶವಾಗಲಿ.

ದೇಶ ಬಿಟ್ಟು ಭಾಷೆ ಬಿಟ್ಟು, ಎಲ್ಲರಿಗಿಂತ ಹೆಚ್ಚು ಕೊರಗಿಕೊಂಡು, ಮನಸಲ್ಲಿ ಅಪ್ಪಟ ಮಾನವನಾಗಿ ಬೆಳೆಯೋ ಆಲೋಚನೆಗಳಿಗೆ ದಿನೇದಿನೇ ನೀರು ಕುಡಿಸುತ್ತಾ ಒಂದು ಕಡೆ ಬೇಡವೆಂದರೂ ದೂರ ಹೋಗುವ ಭಾರತೀಯತೆಯನ್ನು ಮತ್ತೊಂದು ಕಡೆ ಗಟ್ಟಿಯಾಗಿ ಅಪ್ಪಿಕೊಂಡೇ ನಾವು ನಿಟ್ಟುಸಿರು ಬಿಡ್ತೀವಿ, ಅವು ನಿಮಗೆಲ್ಲ ಖಂಡಿತ (ಈ ಜನುಮದಲ್ಲಿ) ಅರ್ಥ ಆಗಲ್ಲ ಬಿಡಿ.