Sunday, February 28, 2016

ಆಜಾದಿಯಿಂದ ಬರಬಾದಿಯವರೆಗೆ...

ಈ ತಿಂಗಳ ೯ನೇ ತಾರೀಖಿನಿಂದ ಜೆಎನ್‌ಯು ನಲ್ಲಿ ಕೆಲವು ವಿದ್ಯಾರ್ಥಿಗಳು ಕವನಗಳನ್ನು ಓದುತ್ತೇವೆ ಎಂದು ಪರ್ಮಿಷನ್ ತೆಗೆದುಕೊಂಡು ಅಫಝಲ್ ಗುರುವನ್ನು ಗಲ್ಲಿಗೇರಿಸಿದ ಮೂರನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದರು. ಈ ಸಂದರ್ಭದಲ್ಲಿ ಅನೇಕ ರಾಷ್ಟ್ರ ವಿರೋಧಿ ಹೇಳಿಕೆಗಳನ್ನು ಕೂಗಲಾಯ್ತು (ಈ ಹೇಳಿಕೆಗಳನ್ನು ಯಾರು ಕೂಗಿದರು ಎನ್ನುವುದು ಇನ್ನೂ ನಿಗೂಢವಾಗಿಯೇ ಇದ್ದು, ಈ ಸಂಬಂಧ ಇನ್ನೂ ಪೋಲೀಸ್ ಇನ್ವೆಸ್ಟಿಗೇಷನ್ ನಡೆಯುತ್ತಿದೆ).  ಈ ಸಂಬಂಧ ಐವರು ವಿದ್ಯಾರ್ಥಿಗಳನ್ನು ಜೊತೆಗೆ ವಿದ್ಯಾರ್ಥಿ ನಾಯಕನನ್ನು ಬಂಧಿಸಲಾಯ್ತು.  ನಂತರ ಕೋರ್ಟಿನ ಆವರಣದಲ್ಲೇ ವಿದ್ಯಾರ್ಥಿ ನಾಯಕನನ್ನು ಥಳಿಸಲಾಯ್ತು.  ಈಗ ಐವರು ವಿದ್ಯಾರ್ಥಿಗಳು ತಿಹಾರ್ ಜೈಲಿನಲ್ಲಿ ದಿನಗಳನ್ನು ಎಣಿಸುತ್ತಿದ್ದರೆ, ದೇಶದಾದ್ಯಂತ ಅವರನ್ನು ಮುಕ್ತಗೊಳಿಸಲು ಅನೇಕ ಚಳುವಳಿ/ಆಂದೋಲನಗಳು ನಡೆದಿವೆ.  ಇದು ರಾಜಕೀಯವಾಗಿಯೂ ತೀವ್ರವಾಗಿ ಬೆಳೆದಿದ್ದು ಸಂಸತ್ತಿನಲ್ಲಿ ಪಕ್ಷ-ಪ್ರತಿಪಕ್ಷಗಳ ನಾಯಕರುಗಳು ಅನೇಕ ಬಿಸಿ ಬಿಸಿ ಚರ್ಚೆಯಲ್ಲಿ ತೊಡಗಿದ್ದು, ದೇಶದಾದ್ಯಂತ ಇದು ಅನೇಕ ವಿಚಾರಧಾರೆಗಳನ್ನು ಹರಿಸಿದೆ.  ಇದಕ್ಕೆಲ್ಲ ಒಂದು ರೀತಿಯ ಟ್ರಿಗ್ಗರ್ ಆಗಿ ಕಳೆದ ತಿಂಗಳು ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೋಹಿತ್ ವೇಮುಲ ಹಾಗೂ ಅದನ್ನು ಸರ್ಕಾರ ನಿಭಾಯಿಸಿದ ವಿಧಾನ ಎಂಬ ಮಾತುಗಳೂ ಜಾರಿಯಲ್ಲಿವೆ.  ಇಷ್ಟಕ್ಕೂ ಅಫಝಲ್ ಗುರು, ರೋಹಿತ್ ವೇಮುಲ, ಕನ್ಹೈಯಾ ಕುಮಾರ್, ಉಮರ್ ಖಾಲೀದ್, ಅನಿರ್ಬಾನ್ ಭಟ್ಟಾಚಾರ್ಯ, ಯಾಕೂಬ್ ಮೆಮನ್ ಇವರಿಗೆಲ್ಲ ಏನು ಸಂಬಂಧ?  ಇವರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಒಂದು ಮಿತಿ ಇರಬೇಕೇ? ಅದರಲ್ಲೂ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಯಾರಾದರೂ ಕೂಗಬಹುದೇ?  ಅಕಸ್ಮಾತ್ ಇದು ಒಂದು ರಾಷ್ಟ್ರ ವಿರೋಧೀ ಕಾರ್ಯಾಚರಣೆಯೇ ಆಗಿದ್ದಲ್ಲಿ, ಇದರ ಮೂಲ ಎಲ್ಲಿದೆ? ಇದಕ್ಕೆಲ್ಲ ಹಣಕಾಸು ಒದಗಿಸುವವರು ಯಾರು? ಈ ಘರ್ಷಣೆ ಕೇವಲ ಕಳೆದೆರಡು-ಮೂರು ವರ್ಷಗಳಲ್ಲಿ ಹುಟ್ಟಿದ್ದೇ? ಅಥವಾ ಇದರ ಹಿಂದೆ ಹಲವಾರು ವರ್ಷಗಳಿಂದ ಅನೇಕ ಕಾರಣಗಳು ಇವೆಯೋ?

ಈ ನಿಟ್ಟಿನಲ್ಲಿ ಮೊದಲು ಮುಖ್ಯ ವಿದ್ಯಾರ್ಥಿಗಳ ಬಗ್ಗೆ ತಿಳಿಯೋಣ:
ಕನ್ಹೈಯಾ ಕುಮಾರ್ ಮೂಲತಃ ಬಿಹಾರ್‌ನವನು. ವಿದ್ಯಾರ್ಥಿ ದಿನಗಳಿಂದಲೂ ಕಮ್ಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತನಾಗಿ ದುಡಿದವನು.

ಕೆಲವು ವರ್ಷಗಳಿಂದ ಜೆಎನ್‌ಯು ನಲ್ಲಿ ಆಫ್ರಿಕನ್ ಸ್ಟಡೀಸ್‌ನಲ್ಲಿ ಪಿಎಚ್.ಡಿ. ಮಾಡುತ್ತಿದ್ದಾನೆ.  ೨೦೧೫ ರಲ್ಲಿ ಸ್ಟೂಡೆಂಟ್ ಯೂನಿಯನ್ ಪ್ರೆಸಿಡೆಂಟ್ ಆಗಿ ಚುನಾಯಿತನಾದವನು.  ತನ್ನ ಪ್ರಚೋದನಾಕಾರಿ ಭಾಷಣಳಿಂದ ಮುಂದೆ ಬಂದವನು.
ಉಮರ್ ಖಾಲೀದ್ ಮೂಲತಃ ಮಹಾರಾಷ್ಟ್ರದವನು.  ವಿದ್ಯಾರ್ಥಿ ದಿನಗಳಿಂದಲೂ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಯೂನಿಯನ್ ಕಾರ್ಯಕರ್ತನಾಗಿ ದುಡಿದವನು.  ಜೆಎನ್‌ಯುನಲ್ಲಿ ಕೆಲವು ವರ್ಷಗಳಿಂದ ಎಮ್‌ಎ, ಎಮ್‌ಫಿಲ್ ಮಾಡಿ ಮುಗಿಸಿದ್ದು, ಈಗ ಸೋಶಿಯಲ್ ಸೈನ್ಸ್‌ನಲ್ಲಿ ಪಿಎಚ್.ಡಿ. ಮಾಡುತ್ತಿದ್ದಾನೆ.  ಅಫ್‌ಝಲ್ ಗುರು ಕಾರ್ಯಕ್ರಮ ನಡೆಸುವ ಬಗ್ಗೆ ಮೊದಲು ಈತನೇ ಜೆಎನ್‌ಯು ಪರ್ಮಿಷನ್ ಕೇಳಿದ್ದು,  ವಿಶ್ವ ವಿದ್ಯಾನಿಲಯದ ಅಡ್ಮಿನಿಸ್ಟ್ರೇಷನ್ ನಿರಾಕರಿಸಿದ ಮೇಲೆ, ಈತ ಪಾಂಪ್ಲೆಟ್ಟುಗಳನ್ನು ಮುದ್ರಿಸಿ, ಸೋಶಿಯಲ್ ಮೀಡಿಯಾ ಮಾಧ್ಯಮಗಳ ಮೂಲಕ ಅನೇಕ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಿದ ಎಂದು ಇವನ ಮೇಲೆ ಆರೋಪವಿದೆ.

***

ಭಾರತ ಒಂದು ಪ್ರಬಲವಾದ ರಾಷ್ಟ್ರ, ಪ್ರಜಾಪ್ರಭುತ್ವವನ್ನು ಎಲ್ಲ ಕೋನಗಳಿಂದಲೂ ಅಳೆದರೆ ನಿಜವಾದ ಸ್ವಾತ್ರಂತ್ರ್ಯ ಎಲ್ಲರಿಗೂ ಇದೆ. ಅದು ಅಭಿವ್ಯಕ್ತಿ ಸ್ವಾತ್ರಂತ್ರ್ಯವಾಗಿರಬಹುದು, ಅಥವಾ ಸಂಘಟನಾ ಸ್ವಾತಂತ್ರ್ಯವಾಗಿರಬಹುದು.  ಈ ಮೂಲಭೂತ ಸ್ವಾತಂತ್ರ್ಯವೇ ಒಂದು ಕಾಲದಲ್ಲಿ ನಮ್ಮ ಸ್ವತಂತ್ರ ಹೋರಾಟಗಾರರ ಹಕ್ಕು ಆಗಿತ್ತು.  ಅದರ ಮುಖಾಂತರವೇ ದೇಶವನ್ನು ಆಳುತ್ತಿದ್ದ ಬ್ರಿಟೀಷ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವುದು, ಸತ್ಯಾಗ್ರಹಗಳನ್ನು ಸಂಘಟಿಸಿ, ಜನರನ್ನು ಒಗ್ಗೂಡಿಸಿ ಹೋರಾಟ ಮಾಡಿದ್ದರಿಂದಲೇ ನಾವು ಬ್ರಿಟೀಷ್ ರಾಜ್ಯದಿಂದ ಮುಕ್ತಿ ಪಡೆದದ್ದು.  ಈ ಸ್ವಾತಂತ್ರ್ಯ ಹೋರಾಟ ಒಂದೆರಡು ವರ್ಷದ್ದಲ್ಲ, ಬದಲಿಗೆ ಹಲವು ದಶಕಗಳ ಕಾಲ ದೇಶದ ಉದ್ದಗಲಕ್ಕೂ ಹರಡಿ ಅನೇಕರ ತ್ಯಾಗ ಬಲಿದಾನಗಳಿಂದ ಈಗಿರುವ ಮುಕ್ತ ದೇಶ ಹುಟ್ಟಲು ಸಾಧ್ಯವಾಯ್ತು.  ಆದರೆ ಅಲ್ಲಿ, ಪರ-ವಿರೋಧಗಳ ಬಗ್ಗೆ ಒಮ್ಮತವಿತ್ತು, ಯಾರು ನಮ್ಮವರು ಯಾರು ಪರಕೀಯರು ಎನ್ನುವುದು ಗೊತ್ತಿತ್ತು.  ಜೊತೆಗೆ ನಮ್ಮ ನಾಯಕರೂ ಸಹ ಮಂದವಾದ ಮತ್ತು ತೀವ್ರವಾದದ ಭಿನ್ನತೆಯನ್ನು ಹೊರತು ಪಡಿಸಿದರೆ ದೇಶದ ಸಮಸ್ಯೆಗಳ ಆಳವನ್ನು ತಿಳಿದವರಾಗಿದ್ದರು.  ನಿಜವಾದ ದೇಶಭಕ್ತರಾಗಿದ್ದರು.  ನಮಗೆ ಸ್ವಾತ್ರಂತ್ರ್ಯ ಸಿಗುವುದಕ್ಕೆ ನೂರು ವರ್ಷಗಳ ಮೊದಲೇ ಈ ಮನೋಭಾವ ದೇಶದ ಉದ್ದಗಲಕ್ಕೂ ಹರಡಿತ್ತು.  ವೈಚಾರಿಕ ಪಂಥ, ಭಕ್ತಿ ಪಂಥ, ಉಗ್ರ ಪಂಥ, ಶಾಂತಿ ಪಂಥ - ಈ ಎಲ್ಲರ ಗುರಿ ಬ್ರಿಟೀಷರಿಂದ ನಮ್ಮನ್ನು ಮುಕ್ತಗೊಳಿಸುವುದೊಂದೇ ಆಗಿತ್ತು.  ಅದು ನಿಜವಾದ ದೇಶ ಪ್ರೇಮ, ನಿಜವಾದ ದೇಶಭಕ್ತಿ.  ಲಕ್ಷಾಂತರ ಕುಟುಂಬಗಳು ಸಾವಿಗೀಡಾದವು.  ಯಾವೊಂದು ನೇರ ಲಾಭ ಅಥವಾ ದುರ್ಬಳಕೆ ಇಲ್ಲದ ಶುದ್ಧ ಮನೋಭಾವದ ಅನೇಕ ಯೋಧರು ಹಿಂದೆ ಮುಂದೆ ನೋಡದೆ ಜೀವ ತೆತ್ತರು.

ನಾವು ಇಂದಿನ ರಾಷ್ಟೀಯವಾದಿ ಚಳುವಳಿಗಳನ್ನು ಈ ಒಂದು ಹಿನ್ನೆಲೆಯಲ್ಲಿ ನೋಡಬೇಕಾಗುತ್ತದೆ.  ಈ ಮೇಲೆ ಹೇಳಿದ ವಿದ್ಯಾರ್ಥಿಗಳಿಗೆ ನಿಜವಾಗಿಯೂ ಬೇಕಾಗಿರುವುದು ಏನು?  ಭಾರತ ಸರ್ಕಾರ ಮತ್ತು ಭಾರತದ ಟ್ಯಾಕ್ಸ್ ಪೇಯರ್ಸ್ ಹಣ ಕೊಟ್ಟು ಓದಿಸುತ್ತಿರುವ ಇವರಿಗೆಲ್ಲ ಅಫಝಲ್ ಗುರು, ಯಾಕೂಬ್ ಮೆಮನ್ ಆಪ್ತರೇಕಾಗುತ್ತಾರೆ?  ಈ ತೀವ್ರತರ ಆಲೋಚನೆಗಳು ಕೇವಲ ಒಂದೆರಡು ವರ್ಷಗಳಲ್ಲಿ ಹುಟ್ಟದೇ ಅನೇಕ ಮೈತ್ರಿ ಪಕ್ಷಗಳು ಹಲವು ವರ್ಷಗಳಿಂದ ರಾಜಕೀಯ ವಾತಾವರಣವನ್ನು ದೇಶದಾದ್ಯಂತ ಹುಟ್ಟು ಹಾಕಿರುವುದು ನಿದರ್ಶನಕ್ಕೆ ಬರುತ್ತದೆ.  ವಿಶ್ವ ವಿದ್ಯಾನಿಲಯಗಳಲ್ಲಿ ರಾಜಕೀಯ ಪ್ರೇರಣೆ ಇರಬೇಕೆ ಬೇಡವೇ?  ವಿಶ್ವವಿದ್ಯಾನಿಲಯ ಮುಕ್ತ ಆಲೋಚನೆಗಳನ್ನು ಬೆಳೆಸಬೇಕೆ ಅಥವಾ ಕೇವಲ ಶೈಕ್ಷಣಿಕ ಸಂಬಂಧಿ ಆಲೋಚನೆಗಳನ್ನು ಮಾತ್ರ ಬೆಳೆಸಬೇಕೆ?  ಈ ಪ್ರಶ್ನೆಗಳು ನಮ್ಮ ನಂಬಿಕೆಯ ಬುಡವನ್ನು ಅಲುಗಾಡಿಸುತ್ತವೆ.
ಈ ಹೈದರಾಬಾದ್ ಮತ್ತು ಜೆಎನ್‌ಯು ವಿದ್ಯಮಾನಗಳನ್ನು ಕೂಲಂಕಶವಾಗಿ ನೋಡಿದಾಗ ಅನೇಕ ಮೂಲ ಕಾರಣಗಳು ಗೊತ್ತಾಗುತ್ತವೆ:

ಭಾರತ ಸರ್ಕಾರದ ಎಚ್.ಆರ್.ಡಿ. ಮಿನಿಸ್ಟ್ರಿ ಅನೇಕ ದಲಿತ ಸಂಘಟನೆಗಳನ್ನು ಮಟ್ಟ ಹಾಕಲು ಪ್ರಯತ್ನಿಸಿತು ಎನ್ನುವ ಆರೋಪವಿದೆ.  ತಮಗೆ ಬೇಕಾದವರನ್ನು ಮಾತ್ರ ಉನ್ನತ ಹುದ್ದೆಗಳಿಗೆ ಆಯ್ಕೆ ಮಾಡುತ್ತಾರೆ ಎಂಬ ಆರೋಪವಿದೆ.  ರೋಹಿತ್ ವೇಮುಲನ ಸಾವನ್ನು ರಾಜಕೀಯ ದಾಳವಾಗಿ ಬಳಸಲಾಯ್ತು ಎನ್ನುವ ಆಲೋಚನೆಗಳಿವೆ.  ಎಲ್ಲಕ್ಕಿಂತ ಮುಖ್ಯವಾಗಿ ಪ್ರಜಾಪ್ರಭುತ್ವದ ಮೂಲ ಸ್ಥಂಭಗಳಾದ ಮುಕ್ತ ಆಲೋಚನೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಿದೆ ಎಂಬುದು.  ಇದಕ್ಕೂ ಒಂದು ಹೆಜ್ಜೆ ಹಿಂದೆ ಹೋಗಿ ನೋಡಿದರೆ ದೇಶದ ಉದ್ದಗಲಕ್ಕೂ ಮಕ್ಕಳಿಗೆ ಯಾವ ರೀತಿಯಲ್ಲಿ ಇತಿಹಾಸವನ್ನು ಬೋಧಿಸಲಾಗಿದೆ ಎನ್ನುವುದನ್ನೂ ಗಮನಿಸಬೇಕಾಗುತ್ತದೆ.  ಈ ವಿದ್ಯಾರ್ಥಿಗಳು ತಮ್ಮ ಜೀವನವನ್ನೇ ಬಲಿ ಕೊಟ್ಟು ದೇಶದ ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ         ಗಲ್ಲಿಗೊಳಗಾದ ಅಫಝಲ್ ಗುರು ಮತ್ತು ಯಾಕೂಬ್ ಮೆಮನ್ ಪರ ಏಕೆ ನಿಲ್ಲುತ್ತಾರೆ ಎಂಬುದನ್ನು ಯೋಚಿಸಬೇಕಾಗುತ್ತದೆ.  ನಾವೊಂದು ಸಮಸ್ಯೆಯ ವಿರುದ್ಧ ಹೋರಾಟ ಮಾಡಿದಾಗ, ನಾವು ಎಲ್ಲಿ ಗೆರೆಯನ್ನು ದಾಟುತ್ತಿದ್ದೇವೆ ಎನ್ನುವ ತಿಳುವಳಿಕೆ ಈ ವಿದ್ಯಾರ್ಥಿಗಳಿಗೆ ಇಲ್ಲದಿರುವುದು ಗೊತ್ತಾಗುತ್ತದೆ, ಜೊತೆಗೆ ರಾಜಕೀಯ ದಾಳಗಳಿಗೆ ಬಲಿಪಶುಗಳಾದ ಮೌಢ್ಯವೂ ಎದ್ದು ಕಾಣುತ್ತದೆ.

ಎಲ್ಲಕ್ಕಿಂತ ಮುಖ್ಯವಾಗಿ ಈ ವಿದ್ಯಾರ್ಥಿಗಳು ನಡೆಸುವ ಧರಣಿ ಕಾರ್ಯಕ್ರಮಗಳಿಗೆ ಹಣಕೊಡುವವರಾರು? ಅಫಝಲ್ ಗುರುವಿನ ಸಾವಿರಾರು ಫೋಟೋಗಳನ್ನು ಪ್ರಿಂಟ್ ಮಾಡಲು ಯಾರು ಹಣಕೊಟ್ಟರು?  ಅಫಝಲ್ ಗುರುವಿಗೆ ಅನ್ಯಾಯವಾಗಿದೆ ಎಂದುಕೊಂಡರೆ ಅದನ್ನು ಅವನು ಬದುಕಿದ್ದಾಗ ಸುಪ್ರೀಮ್ ಕೋರ್ಟ್‌ನಲ್ಲಿ ಕಂಟೆಸ್ಟ್ ಏಕೆ ಮಾಡಲಿಲ್ಲ?  ಇದರ ಹಿಂದೆ ನಮ್ಮ ದೇಶದ ವಿವಿಧ ರಾಜಕೀಯ ಶಕ್ತಿಗಳು ಮಾತ್ರ ಇವೆಯೇ? ಅಥವಾ ಹೊರ ದೇಶಗಳ ಹುನ್ನಾರವಿದೆಯೇ? ಇಷ್ಟು ದಿನ ಕೇವಲ ಮೂಲಭೂತವಾದದ ಬಗ್ಗೆ ಓದುತ್ತಿದ್ದ ನಮಗೆ ಈಗ ಹಿಂದೂ ವಿದ್ಯಾರ್ಥಿಗಳು ಒಂದು ದೇಶದ ಉಚ್ಛ ನ್ಯಾಯಾಲಯ ದೇಶದ್ರೋಹಿಯೆಂದು ಪರಿಗಣಿಸಿದ ಕೆಲವು ಮುಸ್ಲಿಂ ಪ್ರತಿವಾದಿಗಳನ್ನು ದೈವತಾ ಸ್ವರೂಪಿಗಳೆಂದು ಕರೆಯುವಷ್ಟರ ಮಟ್ಟಿಗೆ ದೇಶದ ವಿದ್ಯಾರ್ಥಿಗಳ ನೈತಿಕ ತಿಳುವಳಿಕೆಯ ಬಗ್ಗೆ ಚಿಂತೆ ಪಡುವಂತೆ ಮಾಡಿದೆ.

***
ಘೋಷಣೆಗಳನ್ನು ಯಾರೇ ಕೂಗಿರಲಿ, ಅವುಗಳನ್ನು ಕೂಗಿದ್ದಂತೂ ನಿಜ.  ಒಬ್ಬನ ವಾಕ್ ಸ್ವಾತಂತ್ರ್ಯದಲ್ಲಿ ಏನೇನೆಲ್ಲ ಮಾಡಲು ಸಾಧ್ಯವಿದೆ?  ದೇಶ ವಿರೋಧಿ ಘೋಷಣೆಗಳನ್ನು ಕೂಗಿದವರಿಗೆ ಜಗತ್ತಿನಾದ್ಯಂತ ಉಳಿದ ದೇಶಗಳು ಯಾವ ರೀತಿಯ ಟ್ರೀಟ್‌ಮೆಂಟ್ ಅನ್ನು ಕೊಡುತ್ತವೆ ಎನ್ನುವುದನ್ನು ಯೋಚಿಸಬೇಕಾಗುತ್ತದೆ.  ನಮ್ಮ ಸುತ್ತ ಮುತ್ತ ಕಮ್ಯೂನಿಷ್ಟ್ ದೇಶಗಳಿವೆ, ಅವುಗಳಲ್ಲಿ ನಡೆಯುವ ಸುದ್ದಿಯೂ ಹೊರಬರದಂತೆ ನರಮೇಧ ನಡೆದಾಗಲೆಲ್ಲ ಇದೇ ವಿದ್ಯಾರ್ಥಿಗಳು ಚಳುವಳಿ ನಡೆಸುತ್ತಾರೆಯೇ? ಅವರ ಪ್ರತೀಕಾರದ ಪರಿಮಿತಿ ಎಷ್ಟು?  ನಮ್ಮ ಪಕ್ಕದ ದೇಶಗಳಲ್ಲಿ ನೂರಾರು ಜನ ಅಮಾಯಕರು ಸತ್ತಾಗ ಇದೇ ವಿದ್ಯಾರ್ಥಿಗಳ ತಿಳುವಳಿಕೆಗೆ ಅದು ನಿಲುಕದ ವಿಷಯವಾಗಿರುವುದೇಕೆ?  ಕಮ್ಯೂನಿಸಮ್‌ನ ತತ್ವಗಳೇನು? ಹಾಗೂ ಪ್ರಜಾಪ್ರಭುತ್ವದಲ್ಲಿ ಅದರ ಪಾತ್ರವೇನು ಎಂಬುದನ್ನು ಯೋಚಿಸಲಾರದಷ್ಟು ಈ ವಿದ್ಯಾರ್ಥಿಗಳು ಶೂನ್ಯರಾದರೇಕೆ?
ಈ ವಿದ್ಯಾರ್ಥಿಗಳು ಅನವಶ್ಯಕವಾಗಿ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಿರುವಾಗ ನನಗೆ ಬೇಸರವಾಗುವ ಒಂದು ಸಂಗತಿ ಎಂದರೆ ನಮ್ಮ ದೇಶದಲ್ಲೇ ಅನೇಕ ಮೂಲಭೂತ ಸಮಸ್ಯೆಗಳು ಇನ್ನೂ ಸಮಸ್ಯೆಗಳಾಗಿರುವಾಗ ಅವುಗಳನ್ನು ನಿರ್ಮೂಲನ ಮಾಡಲು ಈ ವಿದ್ಯಾರ್ಥಿಗಳು ಯಾಕೆ ಯೋಚಿಸಬಾರದು?  ವಿಜ್ಞಾನ, ತಂತ್ರಜ್ಞಾನ ಮುಂದುವರೆದು ಜಗತ್ತಿನ ಉಳಿದ ಯುವಜನತೆ ಅನೇಕ ಉನ್ನತ ಚಿಂತನೆ, ಧೋರಣೆಗಳಲ್ಲಿ ತೊಡಗಿದ್ದರೆ ನಮ್ಮ ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಅಫಝಲ್ ಗುರುವಿನ ಹಿಂದೆ ಏಕೆ ಬಿದ್ದಿದ್ದಾರೆ?  ಇವರೇ ನಮ್ಮ ಮುಂದಿನ ನಾಗರೀಕರೆ? ಇವರೇ ನಮ್ಮ ಮುಂದಿನ   ಲೀಡರುಗಳೇ?

ಒಂದು ದೇಶದ ಸತ್ಯಾನಾಶ ಎಂದರೆ ಏನು? ಭಾರತವನ್ನು ಸಂಪೂರ್ಣ ಬುಡಮೇಲು ಮಾಡುವುದೇ? ಅಥವಾ ಅದನ್ನು ತುಂಡು ತುಂಡು ಮಾಡಿ ವಿಭಜನೆ ಮಾಡುವುದೇ?  ನಾವೆಲ್ಲ ಇಂದೂ ಸಹ ಬೇರೆ ಬೇರೆ ಪ್ರಾಂತ್ಯದವರೇ? ಅನೇಕ ಭಾಷೆ ಸಂಸ್ಕೃತಿ ವೈವಿಧ್ಯತೆಗಳ ಪ್ರತೀಕ ಭಾರತ, ಇಂಥ ಭೂಮಿಯಲ್ಲಿ ಅನೇಕ ವೈರುಧ್ಯಗಳೂ ಇರುವುದು ಸಹಜ.  ಆ ವೈರುಧ್ಯಗಳನ್ನು ನಾವು ವಿಚಾರವಾದಿಗಳಾಗಿ ಬಗೆಹರಿಸಿಕೊಳ್ಳುತ್ತೇವೆಯೋ ಅಥವಾ ಕಾನೂನು ಅಧಿಕಾರಗಳಿಂದ ಸಂಭ್ರಮಿಸಿಕೊಳ್ಳುತ್ತೇವೆಯೋ ಅನ್ನುವುದು ಮುಖ್ಯವಾಗುತ್ತದೆ.  ಇಂದಿನ ಮಾಧ್ಯಮಗಳು ದೂರದ ದೇಶಗಳಿಗೆ ಹರಡುತ್ತಿರುವ ಬಿಸಿಬಿಸಿ ಸುದ್ದಿ ಈ ವರೆಗೆ ನಮ್ಮ ದೇಶದ ವಿದ್ಯಾರ್ಥಿಗಳ ಬಗ್ಗೆ ಒಳ್ಳೆಯ ಮನೋಭಾವನೆಯನ್ನು ಮೂಡಿಸಲು ಸೋತಿವೆ ಎಂದು ಹೇಳಲು ಖೇದವಾಗುತ್ತದೆ.

ಒಟ್ಟಿನಲ್ಲಿ ಕಳೆದ ಇನ್ನೂರು ವರ್ಷಗಳ ಸತತ ಹೋರಾಟದ ಬಳಿಕ ದೊರೆತ ನಮ್ಮ ಆಜಾದಿ, ಸ್ವಾತಂತ್ರ್ಯಾ ನಂತರ ಕೇವಲ ಆರು ದಶಕಗಳಲ್ಲಿ ನಮ್ಮ ವಿದ್ಯಾರ್ಥಿಗಳನ್ನು ದೇಶದ ಬರಬಾದಿಯ ಕಡೆಗೆ ಯೋಚಿಸುವಂತೆ ಮಾಡಿದ್ದು ನಿಜವಾಗಿಯೂ ನಮ್ಮ ದುರ್ದೆಶೆ.

***
ಈ ಲೇಖನ ಈ ತಿಂಗಳ ದರ್ಪಣದಲ್ಲಿ ಪ್ರಕಟವಾಗಿದೆ.