Showing posts with label ಆಚರಣೆ. Show all posts
Showing posts with label ಆಚರಣೆ. Show all posts

Saturday, April 30, 2016

ಶಾಂತವಕ್ಕನ ಸಡಗರ

ಇನ್ನೇನು ಶ್ರಾವಣ ಮಾಸ ಹತ್ರ ಬಂತು ಅಂತ ಊರಿನ ಹೆಂಗಳೆಯರೆಲ್ಲ ಮನೆ ಜಗಲಿ, ಅಂಗಳ ಸಾರ್ಸಿ ಶುಭ್ರವಾಗಿಟ್ಟುಕೊಂಡಿದ್ರು.  ಎವರೆಡಿ ಶೆಲ್ಲಿನ ಒಳಗಿನಾಗಿರೋ ಕರ್ರಗಿನ ಪೌಡರ್ರ್ ಹಾಕಿ ತಿಕ್ಕಿಂದ್ರಿಂದ್ಲೋ ಏನೋ ಕೆಲವರ ಮನಿ ಮುಂದಿನ ಅಂಗಳ ಟಾರ್ ರಸ್ತೆಗಿಂತ ಕಪ್ಪಗಿತ್ತು ನೋಡ್ರಿ.  ಇತ್ಲಾಗೆ ಶಾಲೇಗ್ ಹೋಗೋ ಮಕ್ಳು ಸಧ್ಯ ಛಳೀ ಹೊಂಟೋಯ್ತು ಅಂತ ತಮ್ಮ ತಮ್ಮ ಚಿಕ್ಕ ಚಿಕ್ಕ ಯೂನೀಫಾರ್ಮಿನೊಳಗೆ ತಮ್ಮನ್ನ ತುರುಕಿಕೊಂಡಿದ್ರು, ಮೇಲ್ನಿಂದ ಕೊರೆಯೋ ಮಳೆಗೋ ಬಿಸಿಲಿಗೋ ರಕ್ಷಣೆ ಇರ್ಲೀ ಅಂತ ಹೆಂಗಳೆಯರಲ್ಲಿ ಕೆಲವ್ರು ಆಶ್ಚರ್ಯ ಸೂಚಕ ಮಾರ್ಕಿನಂಗಿರೋ ಛತ್ರಿ ಹಿಡಕೊಂಡು ಓಡಾಡ್ತಿದ್ರು.  ಕೆಲವೊಮ್ಮೆ ಪುಷ್ಯಾ ಮಳಿಯಿಂದ ತಪ್ಪಿಸಿಕೊಂಡ್ರೂ ಆರ್ದ್ರೀ ಮಳಿ ಬಿಡ್ಲಿಲ್ಲಾ ಅನ್ನೋ ಹಂಗೆ ಜಿಟಿಪಿಟಿ ಮಳೆ ಎಷ್ಟೊತ್ತಿಗೆ ಬರುತ್ತೆ ಅಂತ ಹೇಳೋಕಾಗ್ದಿದ್ರೂ, ಅದರ ಪರಿಣಾಮ ಅನ್ನೋ ಹಂಗೆ ಕೆಂಪನೆ ಕಿಚಿಪಿಚಿ ಕೆಸರು ಕಾಲು-ಪ್ಯಾಂಟುಗಳಿಗೆ ಅಂಟೋದು ಗ್ಯಾರಂಟಿ ಆಗಿತ್ತು.

ಇದೇ ಹೊತ್ತಲ್ಲಿ ಊರ್‌ನಾಗಿರೋ ಬ್ರಾಂಬ್ರ ಓಣಿಯಲ್ಲಿ ಏನೋ ಒಂಥರ ಸಂಭ್ರಮ.  ಅದೇ ಮಗ್ಗಲ ಮನಿ ಶಾಂತವ್ವಕ್ಕ ಇದಾಳಲ್ಲ ಅಕಿ ನೂರಾ ನಾಕನೇ ವರ್ಷಕ್ಕೆ ಕಾಲಿಟ್ಟ ಸಂಬಂಧ ಊರ್‌ನಾಗಿನ ಮುಖಂಡ್ರು ಎಲ್ಲಾ ಸೇರಿ ಹುಟ್ಟಿದ ಹಬ್ಬಾನ ದೊಡ್ಡದಾಗಿ ಆಚರ್‌ಸಬೇಕು ಅಂತ ಒಂದು ಕಾರ್ಯಕ್ರಮ ಹಮ್ಮಿಕೊಂಡಾರಂತ.  ಭಾನುವಾರ ಮಟಮಟ ಮಧ್ಯಾಹ್ನ ಎರಡು ಘಂಟಿಗೆ ಶುರುವಾಗೋ ಕಾರ್ಯಕ್ರಮ ಇನ್ನೂ ಸ್ಥಳೀಯ ಎಮ್ಮೆಲ್ಲೆ ಬರ್ಲಿ ಅಂತ ಕಾಯ್ಕೊಂಡ್ ಕುಂತು ಘಂಟೆ ಮೂರ್ ಆದ್ರೂ ಶುರೂ ಆಗೋ ಭಾಗ್ಯ ಬಂದಂಗಿರ್ಲಿಲ್ಲ.  ಆದ್ರೂ ರಗಡು ಮಂದಿ ಸೇರಿದ್ರು.  ಎಲ್ಲೆಲ್ಲಿಂದಾನೋ ಬಂದಿದ್ರು.  ಅವರಾಗೆ ಬಾಳ ಮುಖ್ಯ ಅಂದ್ರ, ಶಾಂತವಕ್ಕನ್ನ ಗಿರಿಮಗಳು ಮೋಹಿನಿ - ದೂರ ದೇಶ ಅಮೇರಿಕಾದಾಗೆ ಅದೇನೋ ಕಾಯ್ಕ ಮಾಡ್ಕಂಡು ಅಲ್ಲೇ ಇದಾರಂತೆ, ಅದ್ರೂ ಅತ್ಯಂತ ಮುತುವರ್ಜಿ ವಹಿಸಿ ಶಾಂತವಕ್ಕನ್ನ ಬರ್ತ್‌ಡೇ ಆಚರಿಸಾಕ ಹದಿಮೂರು ಸಾವಿರ ಕಿಲೋಮೀಟರ್ ದೂರದಿಂದ ಬಂದಿರೋದು ನಮ್ಮೂರಿಗೆ ಹೆಚ್ಚೇ ಬಿಡ್ರಿ.  ಆದ್ರೂ ಅವನವ್ವನ, ಇದೇ ತಾಲೂಕಿನಾಗೆ ಬಿದ್ದು ಎದ್ದು ಸಾಯೋ ಈ ಎಮ್ಮೆಲ್ಲೆ ಮಂದಿಗೆ ಏನ್ ಅಂತಾದ್ ಬಂದೀತು? ಇನ್ನೂ ಸುದ್ದೀನೇ ಇಲ್ಲಲ!

ಹಂಗೂ ಮಾಡಿ ಶಾಂತವ್ವಕ್ಕನ ವಯಸ್ಸು ಇಷ್ಟೇ ಹಿಂಗೇ ಎಂದು ಯಾರೂ ಬರ್ದಿಟ್ಟಂಗಿದ್ದಿದ್ದು ಯಾರಿಗೂ ನೆನಪಿಲ್ಲ ನೋಡ್ರಿ.  ಅದರಾಗೂ ಒಂದ್ ಸರ್ತಿ ನೂರರ ಹತ್ರಾ ಹೋದ್ರಿ ಅಂದ್ರ ನಿಮ್ಮ ಜೀವಮಾನದಾಗೆ ಬಂದ್ ಹೋಗಿರೋ ಮುಕ್ಕಾಲ್ ಜನ ಆಗ್ಲೇ ಟಿಕೇಟ್ ತಗೊಂಡಂಗೇ ಲೆಕ್ಕ!  ಅದ್ರಾಗೂ ನೂರ್ ವರ್ಷದ ಹಿಂದೇ ಜಾತ್ಕಾ ಪಾತ್ಕಾ ಬರೀತಿದ್ರೋ ಏನೋ ಆದ್ರೂ, ಜನನಪತ್ರಿಕೆ ಮರಣ ಪತ್ರಿಕೆ ಅಂಥಾ ಯಾರೂ ಪ್ರಿಂಟ್ ಹಾಕಿದ್ದು ನಾನಂತೂ ಕಂಡಿಲ್ಲ.  ಅದೂ ಹೋಗೀ ಹೋಗಿ ಬ್ರಿಟೀಷ್ ಸರಕಾರದಾಗ ಹುಟ್ಟಿರೋ ಮುದುಕಿ ಒಂಥರಾ ಬ್ರಿಟೀಷರ ಹಂಗಾ ಗರ್ವದಾಕಿ ಬಿಡ್ರಿ.  ಶಾಂತವ್ವಕ್ಕ ಈಗ್ಲೇ ಇಷ್ಟು ಉರೀತಾಳೆ, ಆಗ ಹೆಂಗಿದ್ಲೋ ಅಂತ ಕೆಲವು ಹೆಣ್ ಮಕ್ಳು ಕೈ ಮುರ್ದು ಲಟಗಿ ತಗೊಂಡಿದ್ದಂತೂ ನಿಜ.  ಒಂದ್ ಹತ್ತ್ ವರ್ಷದ ಹಿಂದಿನ್ ವರೆಗೂ ಈ ಮುದುಕಿ ಕಡಿಮೀ ಏನ್ ಇರ್ಲಿಲ್ಲ.  ದಿನಾ ಅಗಸೀ ಬಾಗ್ಲು ಮಟಾ ನಡ್ದು ಬಾವೀ ನೀರ್ ಸೇದಿ ತರೋದೇನೋ, ಬಾಗ್ಲೂ ಬಳ್ದು, ರಂಗೋಲಿ ಹಾಕಿದ್ದಷ್ಟೇ ಅಲ್ದೇ, ಒಂದೇ ಒಂಚೂರು ಬಿಡದೇ ದೊಡ್ಡ ಹಿತ್ಲು ಗುಡುಸ್ತಿತ್ತ್ ನೋಡ್ರಿ ಈ ಮುದುಕಿ.  ದರ್ಲೆ ತೆಗೆದು ಒಲೀ ಮ್ಯಾಲೆ ದನಗಳಿಗೆ ಬಾಯಾರು ಬಿಸಿಮಾಡಿ ಕೊಟ್ಟು, ಕೊಟಗಿ ಶುದ್ದಾ ಮಾಡಿ ಹಾಲ್ ಕರಕಂಡ್ ಬಂದು ಸುರ್ ಅಂತಾ ಒಂದು ಲೋಟಾ ಕಾಪೀ ಹೀರೋದ್ರೊಳಗೆ ಹತ್ತ್ ಘಂಟ್ ಆಗಿತ್ತು.  ನಾವ್ ಇವತ್ತಿನ ದಿನಾ ವಾರಕ್ಕ ನಲವತ್ತು ಘಂಟಿ ಅಂತ ಏನ್ ಕೆಲ್ಸಾ ಮಾಡ್ತೀವಿ, ಈ ವಮ್ಮ, ಭಾನುವಾರದಿಂದ ಮಂಗಳವಾರದೊಳಗೇ ನಲವತ್ತೇನು ಐವತ್ತು ಘಂಟಿ ದುಡಿಯೋದ್ ನೋಡ್ರಿ.  ಜಿಮ್ಮು-ಗಿಮ್ಮು ಅಂತ ಒಂದ್ ದಿನ ಅದರ ಬಗ್ಗೆ ಕೇಳದಿದ್ರೂ ಮೈಯಾಗೆ ಒಂದು ಚೂರು ನೆಣಾ ಅಂತ ಇದ್ದಂಗಿಲ್ಲ ನೋಡ್ರಿ, ಯಾವತ್ತಿದ್ರೂ ಒಂದೇ ಒಂದ್ ಲಕ್ಷಣಾ.  ಇಂದಿನ ಕಾಲದ ಹೆಣ್ಣ್ ಮಕ್ಳು ಒಂದೊಂದು ಹಡದು ಹತ್ತು ವರ್ಷ ಹಳೇದಾದ ಎಸ್.ಟಿ. ಬಸ್ಸಿನ ಹಂಗೆ ನಡೆಯೋದಾದ್ರೆ ಈವಮ್ಮ ಎಂಟು ಮಕ್ಳನ್ನ ಹಡದು ಅದೆಷ್ಟೋ ಬಾಣಂತನಾನ ಮಾಡಿ ಇನ್ನೂ ಒಂಚೂರೂ ಬೆನ್ನ್ ಬಾಗಿಸದೇ ನಡೀತಾಳ ಅಂದ್ರ ಅದೊಂದು ದೊಡ್ಡ ಪವಾಡನೇ ಬಿಡ್ರಿ.  ಈ ವಮ್ಮನ ಗಂಡಾ ಅದ್ಯಾವಾಗೆ ಟಿಕೇಟ್ ತೆಗೆಂಡು ಹೋದನೋ ನನಗೆ ಗೊತಿಲ್ಲಾ, ಅದ್ರೂ ಈವಮ್ಮ ಮರೆ-ಮೈಲಿಗೆ-ಮಡಿ ಅಂತಾ ಇಡೀ ಊರಿಗೆ ಫೇಮ್ಮಸ್ಸು ನೋಡ್ರಿ.  ಶಾಂತವಕ್ಕನ ಉಪ್ಪಿನಕಾಯಿ, ಹಪ್ಪಳಾ, ಸಂಡಿಗೆ ಅವರ ಸಂಬಂಧಿಕರ ದೆಸೆಯಿಂದ ಎಲ್ಲೆಲ್ಲೋ ಹೊಗ್ತಿತ್ತು.  ಆಕಿ ಕೈ ರುಚೀನೇ ಬ್ಯಾರೆ.  ಆರು ತಿಂಗಳೇನು, ಅರು ವರ್ಷಾ ಅದ್ರೂ ಮಿಡಿ ಮಾವಿನಕಾಯಿ ಉಪ್ಪಿನಕಾಯಿ ಕಡದ್ರ ಇನ್ನೂ ಕಟುಂ ಅನ್ನೋದು ನೋಡ್ರಿ!

ಕೊನೀಗೂ ಎಮ್ಮೆಲ್ಲೆ ಸಾಹೇಬ್ರು ಬಂದ್ರೂ ಅಂತ ಕಾರ್ಯಕ್ರಮ ಶುರೂ ಆಗೂ ಹಂಗ ಕಾಣಸ್ತು.  ಶಾಂತವಕ್ಕನ ಮನಿ ಮುಂದೆ ನಾಲ್ಕು ಅಡಕೆ ಮರದ ಕಂಬಾ ನೆಟ್ಟು ಒಂದು ಸಣ್ಣ ಚಪ್ರ ಕಟ್ಟಿದ್ರು.  ಅದರ ಮ್ಯಾಲೆ ಸ್ವಲ್ಪಾನೂ ಬಿಸಿಲು ಬರದೇ ಇರ್ಲಿ ಅಂತ ತೆಂಗಿನ ಮಡ್ಲು ಹೆಣೆದು ಕಟ್ಟಿದ್ರು.  ಮದುವೀ ಮನೆ ಅಷ್ಟು ದೊಡ್ಡು ಚಪ್ರಾ ಅಲ್ದಿದ್ರೂ ಮೂರು ಜನ ಕೂರೋ ಹಂಗ ಅನುಕೂಲ ಮಾಡಿದ್ರು.  ಮಧ್ಯ ಶಾಂತವ್ವಕ್ಕ, ಅಕಿ ಬಗಲಿಗೆ ಊರಿನ ಮಹಿಳಾ ಕಲ್ಯಾಣ ಇಲಾಖೆ ಸೂಪರ್‌ವೈಸರ್ರು ಸುಶೀಲಮ್ಮೋರು, ಮತ್ತೊಂದು ಕಡೆ ಎಮ್ಮೆಲ್ಲೆ ಮಹಾಂತೇಶಪ್ಪೋರು ಕುಂತಿದ್ರು.  ನೂರಾ ನಾಲ್ಕು ಮುಟ್ಟಿರೋ ಶಾಂತವಕ್ಕ ತನ್ನ ಬಗಲಿಗೆ ಕುಂತೋರಿಗಿಂತಲೂ ನೆಟ್ಟಗೆ ಬೆನ್ನ ಮಾಡಿ ಕುಂತಿದ್ಲು.  ಅವಳು ಉಟ್ಟಿರೋ ಅದೆಷ್ಟೋ ವರ್ಷದಿಂದ ಹಳೇ ಟ್ರಂಕಿನಾಗಿರೋ ಕಂದು ಬಣ್ಣದ ಪಟ್ಟೇ ಸೀರೇ ಇವತ್ತು-ನಿನ್ನೇ ಅಂಗಡಿಯಿಂದ ತಂದ ಹಾಗೆ ಮಡಿಕೇನೂ ಮುರೀದೇ ತನ್ನ ಮೈ ಮೇಲೆ ಗೆರೆಗಳನ್ನ ಹಂಗೇ ಜೋಪಾನವಾಗಿ ಉಳಿಸಿಕೊಂಡಿತ್ತು.

ಊರಿನ ಕಾರ್ಯಕ್ರಮ, ಆದ್ರೆ ಬಂದೋರಿಗೆ ತಿಂಡೀ-ಗಿಂಡೀ ಮಾಡೋರು ಯಾರು? ಅದ್ಯಾವ್ದೋ ಸೊರಬದ ಬೇಕ್ರಿ ಇಂದ ಸುಮಾರು ದೊಡ್ಡ ಕೇಕ್ ತರಸ್ಯಾರಂತ, ಅದು ಬಿಸಲಿಗೆ ಕರಗೀತು ಅಂತ ಇನ್ನೂ ಒಳಗೇ ಇಟ್ಟಿದ್ರು.  ಮೈಕೂ ಪೈಕೂ ಏನೂ ಬ್ಯಾಡ, ಸುಮ್ನೇ ದುಡ್ಡು ಖರ್ಚು ಅಂತ ಹಂಗೇ ಸುತ್ಲೂ ಸೇರಿರೋ ಜನ್ರನ್ನ ಕುರುತು ಮೊದಲಿಗೆ ಸುಶೀಲಮ್ಮೋರು ಮಾತಾಡಿದ್ರು.  ಇವತ್ತಿನ ದಿನಾ ನೂರೇನು ಎಪ್ಪತ್ತು ವರ್ಷ ನೋಡೋ ಮಂದಿ ಭಾಳಾ ಇಲ್ಲ, ಅಂತಾದ್ರಾಗೆ ನಮ್ಮೂರಿನ ಶಾಂತವ್ವಕ್ಕ ನೂರಾ ನಾಕು ಮುಟ್ಟೈತಿ ಅಂದ್ರ ಅದೊಂದು ರಾಜ್ಯದ ವಿದ್ಯಮಾನ ಅಂತ ಭಾಳ ಚೊಲೋ ಭಾಷ್ಣ ಮಾಡಿದ್ರು.  ಅವರ ನಂತ್ರ ಮಹಾಂತೇಶಪ್ಪೋರು ನಾನು ವಿಧಾನ ಸಭೆ ಕಾರ್ಯಕಲಾಪದಾಗ ಈ ಸಂಬಂಧ ಚರ್ಚೇ ಮಾಡ್ಸಿ, ಶಾಂತವಕ್ಕಂಗ ಒಂದ್ ಅವಾರ್ಡ್ ಕೊಡಸ್ತೀನಿ ಅಂತ ಆಶೋತ್ತರ ಮೂಡಿಸಿ ಆಸೆ ತೋರ್ಸಿದ ಕೂಡ್ಲೇ ಅವರ ಚೇಲಾಗಳೆಲ್ಲ ದೊಡ್ಡದಾಗಿ ಚಪ್ಪಾಳೆ ಹೊಡ್ದಿದ್ದು ನೋಡಿ ನಾವೂ ಹೊಡದ್ವಿ.  ಅಮ್ಯಾಲೆ ಶಾಂತವಕ್ಕನ ಮನೆ ಮಂದೀ ಎಲ್ಲ ಬಂದೂ ಅರತೀ ಮಾಡಿದ್ರು.  ಅವರ ಮನೇ ಮಂದೀನೇ ಸುಮಾರು ನೂರು ಜನ ಇದ್ದಂಗಿದ್ರು ನೋಡ್ರಿ.  ಎಲ್ಲ ಮಕ್ಳೂ, ಮೊಮ್ಮಕ್ಳು, ಮರಿಮಕ್ಳು, ಗಿರಿಮಕ್ಳು ಇವರ್ದ್ರೆಲ್ಲಾ ಲೆಕ್ಕಾ ಹಾಕ್ಕೊಂಡಿರೋರು ಯಾರು? ಕುದ್ದು ಶಾಂತವಕ್ಕಂಗೇ ಇವರೆಲ್ಲ ನೆನಪಿದಾರೋ ಇಲ್ವೋ!  ಶಾಂತವ್ವಕ್ಕಾ ನೀನೂ ಒಂದಿಷ್ಟು ಮಾತಾಡು ಅಂದ್ರು.  "ನನ್ದೇನೂ ಬ್ಯಾಡಾ, ಎಲ್ಲಾ ಚೆನ್ನಾಗಿರ್ರಿ!" ಅಂತ ಅದ್ರಾಗೂ ಬಿನ್ನಾಣ ತೋರಿಸ್ತು ಮುದುಕಿ.

ಇನ್ನೇನು ಕೇಕ್ ಕಟ್ ಮಾಡೋಣ ಅಂತ ಎಲ್ರೂ ಅಂದ್ರೂ.  ಅಷ್ಟ್ರೊಳಗ ಶಾಂತವಕ್ಕನ ಅಮೇರಿಕದಿಂದ ಬಂದ ಗಿರಿಮಗಳು ಮೋಹಿನಿ, ಅದೇನೋ ಇಂಗ್ಲೀಷ್ನಾಗೆ ಅಂದ್ಲು, ಅದರ ಪ್ರಕಾರ ಶಾಂತವಕ್ಕನ್ನೂ ಒತ್ತಾಯ ಮಾಡಿ ಸ್ವಲ್ಪ ಮಾತಾಡಕ್ ಬಿಟ್ರು ನೋಡ್ರಿ.  ಶಾಂತವಕ್ಕ ಹೆಚ್ಗೆ ಏನೂ ಹೇಳ್ಲಿಲ್ಲ,  "ಎಲ್ರೂ ಸುಖವಾಗಿರ್ರಿ, ಜಗಳಾಪಗಳಾ ಮಾಡಬೇಡ್ರಿ.  ಮನಸು ಚೆನ್ನಾಗಿದ್ರೆ ದೇಹ ಚೆನ್ನಾಗಿರ್ತತಿ.  ವ್ಯಾಯಾಮಾ ಪಾಯಾಮಾ ಎನೂ ಬ್ಯಾಡ, ನೀವ್ ಏನ್ ತಿಂತೀರಿ, ಎಷ್ಟು ತಿಂತೀರಿ ಮತ್ತ ಯಾವಾಗ ತಿಂತೀರಿ ಅನ್ನೋದರ ಬಗ್ಗೆ ನಿಗಾ ಇರ್ಲಿ" ಅಂದ್ಲು.  ಎಲ್ರೂ ಮತ್ತೆ ದೊಡ್ಡ ಚಪ್ಪಾಳೆ ಹೊಡೆದ್ರು.  ಮೋಹಿನಿ ತನ್ನ ಅಮ್ಮನ ಹತ್ರ ಅದೇನೋ ಇಂಗ್ಲೀಷಿನಾಗೆ ಅಂದ್ಲು.  ಅದನ್ನ ಅವರಮ್ಮ ತರ್ಜುಮೆ ಮಾಡಿ -"ಶಾಂತವಕ್ಕ, ನಿನ್ನ್ ಜೀವನದಾಗೆ ಇದೂವರೆಗೆ ಕಂಡಿರೋ ಮಹಾ ಅವಿಷ್ಕಾರ ಅಂದ್ರೆ ಯಾವ್ದು?" ಅಂತ ದೊಡ್ಡದಾಗಿ ಕೇಳಿದ್ರು.  ಅವರು ಹೇಳೋದನ್ನ ಮೋಹಿನಿ ತನ್ನ ಬಂಗಾರ ಬಣ್ಣದ ಐಫೋನಿನ್ಯಾಗೆ ರೆಕಾರ್ಡ್ ಮಾಡಿಕೊಂತಿದ್ಲು.

ಶಾಂತವಕ್ಕ ಒಂದ್ ಸರ್ತಿ "ಹ್ಞೂ..." ಅಂತ ದೊಡ್ಡದಾಗಿ ಉಸಿರು ಎಳಕೊಂಡು ಒಂದು ಹತ್ತು ಸೆಕೆಂಡು ಯೋಚ್ನೇ ಮಾಡಿದ್ಲು.  ನಾವೆಲ್ಲ ಕಂಪ್ಯೂಟರ್ರೋ, ಫೋನೋ, ಸಿನಿಮಾನೋ, ಮೋಟಾರೋ-ರೈಲೋ ಅಂತಾಳೆ ಅಂದುಕೊಂಡು ಖಾತರದಿಂದ ನೋಡ್ತಾ ಇದ್ವಿ.  ಮೋಹಿನಿನೂ ತನಗೆ ಕನ್ನಡ ಬರುತ್ತೆ ಅಂತ ತೋರಿಸ್ ಬೇಕು ಅಂತ "ನನ್ ಕಡೇ ನೋಡು..., ಹೇಳಜ್ಜಿ ಹೇಳು..." ಅಂತಾ ಜೋಗಕ್ಕೆ ಬರೋ ಬಿಳಿ ಟೂರಿಸ್ಟ್‌ಗಳ ಧ್ವನಿಯಲ್ಲಿ ದೊಂಬಾಲು ಹಾಕಿದ್ಲು.  ಶಾಂತವಕ್ಕ ಒಂಥರಾ ಟಿವಿ ನೈನಿನ ರಿಪೋರ್ಟರುಗಳು ಕ್ಯಾಮೆರಾ ನೋಡಿಕೊಂಡೇ ಮಾತಾಡ್ತಾವಲ್ಲ ಹಂಗೆ ಕ್ಯಾಮೆರಾನ ದಿಟ್ಟಿಸಿ ನೋಡಿ, "ನಮ್ಮೂರಿಗೆ...     ಕರೆಂಟ್ ಬಂತು ನೋಡ್ರಿ, ಎಲ್ಲಕ್ಕಿಂತ ಅದೇ ದೊಡ್ದು!  ಅದ್ಯಾವ ಪುಣ್ಯಾತ್ಮ ಕರೆಂಟ್ ಕಂಡ್ ಹಿಡಿದ್ನೋ ಅದೇ ದೊಡ್ಡ ವಿಷ್ಯಾ, ಕರೆಂಟ್ ಇಲ್ಲಾ ಅಂತಂದ್ರೆ ನಿಮ್ಮ ಆಟ ಏನೂ ನಡೆಯಂಗಿಲ್ಲ!" ಅಂದು ಬಿಡ್ತು.

ತನ್ನ್ ಐಫೋನೇ ದೊಡ್ಡು ಅಂತ ಅಂದಕಂಡಿದ್ದ ಮೋಹಿನಿ ಮುಖಾ ಸಪ್ಪಗಾಯ್ತು.  ಎಮ್ಮೆಲ್ಲೆ ಸಾಹೇಬ್ರು ಮುಖದ ಮ್ಯಾಲೆ ಇದುವರೆಗೆ ತೇಲಾಡ್ತಿದ್ದ ತೆಳು ನಗೆ ಒಂದು ಕ್ಷಣಾ ನಿಲ್ತು.  ಸೇರಿದ್ದ ಜನ ಭೂತ ನೋಡಿದ್ರೇನೋ ಅನ್ನೋ ಹಂಗೆ ಒಂಥರಾ ಸ್ತಂಭೀಭೂತರಾದ್ರು.  ಇಷ್ಟರಾಗೆ ಸುಧಾರಿಸಿಕೊಂಡ ಸುಶೀಲಮ್ಮ ಚಪ್ಪಾಳೆ ಹೊಡ್ದು, "ಭಾಳಾ ಸತ್ಯವಾದ ಮಾತು..., ಸತ್ಯವಾದ ಮಾತು" ಅಂದು, ಮುಂದೆ "...ಕೇಕ್ ಕಟ್ ಮಾಡ್ರಿ?..." ಅಂತ ಆದೇಶ ಕೊಟ್ರು.  ಈ ಜನಗಳ ಈ ಪ್ರತಿಕ್ರಿಯೆಯನ್ನ ನಿರೀಕ್ಷೆ ಮಾಡಿರದ ಶಾಂತವಕ್ಕ ತನ್ನ ಮನಸ್ಸಿನೊಳಗೇ - "ಇವೆಲ್ಲ ನಿಮಗೆ ಈ ಜನಮದಾಗ ತಿಳಿಯಂಗಿಲ್ಲ ಬಿಡ್ರಿ" ಅಂದುಕೊಂಡ ಹಂಗಾಯ್ತು.

***
ಈ ಲೇಖನ ಏಪ್ರಿಲ್ ತಿಂಗಳ ದರ್ಪಣದಲ್ಲಿ ಪ್ರಕಟವಾಗಿದೆ.

Friday, November 09, 2007

ನಮ್ಮ್ ದೀಪಾವಳಿ ಆಚರಣೇನೇ ಬೆಷ್ಟ್!

ನಿಮ್ಮೂರಲ್ಲೆಲ್ಲಾ ಹೇಗೋ ಗೊತ್ತಿಲ್ಲ, ನಮ್ಮೂರಲ್ಲಂತೂ ವಾತಾವರಣ ಬಹಳಷ್ಟು ತಣ್ಣಗಾಗಿ ಹೋಗಿದೆ, ನಿನ್ನೆ ಬೆಳಿಗ್ಗೆ ಬಿಲೋ ಫ್ರೀಜಿಂಗ್, ಇಪ್ಪತ್ತಾರು-ಇಪ್ಪತ್ತೇಳು ಡಿಗ್ರಿ ಫ್ಯಾರನ್‌ಹೈಟ್ ಇದ್ದಿದ್ದು ನೋಡಿ ನನಗಂತೂ ಇದ್ದ ಛಳಿ ಇನ್ನಷ್ಟು ಹೆಚ್ಚಾಗಿ ಹೋಯಿತು. ಈಗಾಗ್ಲೇ ಒಡೆದು ಹೋಗಿರೋ ಮೈ ಕೈಗೆ ನರಕ ಚತುರ್ದಶಿ ಪ್ರಯುಕ್ತವಾಗಿ ಎಣ್ಣೆ ಸವರಿ ಸ್ನಾನ ಮಾಡಿದ್ದು ಬಹಳ ಒಳ್ಳೇದೇ ಅನ್ನಿಸ್ತು. ಸದ್ಯ ನೀರ್ ತುಂಬೋ ಹಬ್ಬಾ ಎಲ್ಲಾ ವಾರದ ದಿನದಲ್ಲೇ ಬಂತು ಆದ್ರಿಂದ ಬೇಗನೇ ಸ್ನಾನಾ ಮಾಡಿ ಆಫೀಸಿಗೆ ಓಡಿದ್ದೇ ಬಂತು, ಅದರ ಬದಲಿಗೆ ವೀಕ್‌ಎಂಡ್ ಅಂಥಾ ಏನಾದ್ರೂ ಅಂದ್ಕೊಂಡಿದ್ರೆ ನಾವೆಲ್ಲಾ ಸೂರ್ಯಾ ಕಣ್ ಬಿಟ್ಟ್ ಮೇಲೆ ಏಳೋರು, ಕೊನೆಗೆ ಚತುರ್ದಶಿ ಮುಗಿದು ಹೋಗಿ ಅಮವಾಸೆ ದಿನಾ ಮಾತ್ರ ಸ್ನಾನಾ ಮಾಡಿ ನರಕ ಮಾತ್ರ ಗ್ಯಾರಂಟಿ ಸಿಗ್ತಾ ಇತ್ತು.

ನಮ್ ದೀಪಾವಳಿ ಆಚರಣೇನೇ ಬೆಸ್ಟ್ ಅಂತೀನಿ, ವಾಹನ ಪೂಜೆ, ಅಂಗಡಿ ಪೂಜೆ ಅನ್ನೋದೇನೂ ಇಲ್ಲ ಬರೀ ನಾವೆಲ್ಲ ಲಕ್ಷ್ಮೀ ಪೂಜೆಗೆ ಒತ್ತು ಕೊಡೋರು ಯಾವತ್ತಿದ್ರೂ. ಪುರುಸೊತ್ತಿದ್ರೆ ಏನಾದ್ರೂ ವಿಶೇಷವಾಗಿ ಅಡುಗೆ ಮಾಡ್ತೀವಿ, ಇಲ್ಲಾ ಅಂತಂದ್ರೆ ದೇವಸ್ಥಾನಕ್ಕ್ ಹೋಗಿ ಅಲ್ಲಿನ ಕ್ಯಾಫೆಟೇರಿಯಾದಲ್ಲೇ ಏನಾದ್ರೂ ಸಿಹಿ ತಿಂದು ಬರ್ತೀವಿ. ಪಟಾಕಿಗಳಾಗಲೀ, ಬಾಣಬಿರುಸಾಗಲೀ ಹೊಡೆಯೋದೇ ಇಲ್ಲ, ಇನ್ನು ಸುರುಸುರು ಬತ್ತಿಯೂ ಸದ್ದೂ ಇಲ್ಲ. ಎಲ್ಲವೂ ಫೈರ್ ಪ್ರೂಪ್ ಮನೆಗಳಲ್ಲಿ ಹೆದರಿಕೊಂಡು ಉರಿಯೋ ಹಾಗಿನ ಊದಿನಬತ್ತಿಯ ಥರ, ಅದರ ಹೊಗೆಯೂ ಧಾರಾಳವಾಗಿ ಎಲ್ಲಿ ಬೇಕಂದಲ್ಲಿ ಹರಡುವಂತಿಲ್ಲ, ಸೀದಾ ದೇವರ ಕೋಣೆಯ ಮಂಟಪದಿಂದ ಕಿಟಕಿಯ ಕಡೆಗೆ ನಡೆಯಬೇಕು. ಅಲ್ದೇ ಹೊರಗಡೆ ಕೊರೆಯೋ ಛಳಿಯಲ್ಲಿ ಹೆಚ್ಚು ಹೊತ್ತು ಕಿಟಕಿ ಬಾಗಿಲನ್ನು ತೆಗೆದಿಡೋಕೂ ಆಗೋದಿಲ್ಲವಾದ್ದರಿಂದ ಪೂರ್ಣ ಊದಿನಕಡ್ಡಿ ಉರಿಯೋ ಅಷ್ಟು ವ್ಯವಧಾನವೂ ನಮಗಿದ್ದಂತಿಲ್ಲ.

ಊರಿನಲ್ಲಿರೋ ಮನೇ ಮಂದಿಗಾಗಲೀ ಸ್ನೇಹಿತರಿಗಾಗ್ಲೀ ಫೋನ್ ಮಾಡಿ ಶುಭಾಶಯಗಳನ್ನು ಹೇಳಬಹುದಿತ್ತು, ಅಂತಹ ಮಹತ್ತರ ಘಳಿಗೆಗೆಲ್ಲಾ ವೀಕ್‌ಎಂಡೇ ಸಮ. ವಾರದ ದಿನಗಳಲ್ಲಿ ಫೋನ್ ತಿರುಗಿಸಿ ನಿಧಾನವಾಗಿ ಮಾತನಾಡೋದಕ್ಕೆ ಯಾರಿಗೂ ಪುರುಸೊತ್ತು ಇದ್ದ ಹಾಗೆ ಕಾಣಿಸಲಿಲ್ಲ. ಪಾಪ, ನಮಗಿಂತ ವ್ಯಸ್ತರಾಗಿರೋ ಅವರೇ ಭಾರತದಿಂದ ಕರೆ ಮಾಡಿ, ಎಸ್‌ಎಮ್ಮೆಸ್ ಕಳಿಸಿ ಶುಭಾಶಯಗಳನ್ನು ಹಂಚಿಕೊಂಡಿದ್ದು ಇತ್ತೀಚಿನ ದಿನಗಳ ವಿಶೇಷಗಳಲ್ಲೊಂದು. ಭಾರತದಲ್ಲಂತೂ ಮೊಬೈಲ್ ಫೋನ್ ಕ್ರಾಂತಿಯೇ ಕ್ರಾಂತಿ - ಮೆಸ್ಸೇಜುಗಳನ್ನು ಇಲ್ಲಿಗಿಂತಲೂ ಅಲ್ಲಿ ಹೆಚ್ಚಾಗಿಯೇ ಬಳಸುತ್ತಾರೇನೋ ಅನ್ನಿಸಿತು, ಒಂದು ಕಾಲದಲ್ಲಿ ಕಮ್ಯೂನಿಕೇಷನ್ನ್ ಅನ್ನೋದೇ ಇರಲಿಲ್ಲವೇ ಎಂದು ಕೇಳಿಕೊಳ್ಳುವಷ್ಟರ ಮಟ್ಟಿಗೆ. ಈ ಸಂವಹನಗಳಲ್ಲಿ ಎಲ್ಲ ಥರನಾದ ಮೆಸ್ಸೇಜುಗಳಿವೆ, ನವರಸ ನವಭಾವಗಳಿಗನುಗುಣವಾಗಿ.

ನಿಮ್ಮ ದೀಪಾವಳಿ ಆಚರಣೆ ಹೇಗಿತ್ತು ಅಂತ ಬರೀರಿ. ಮನೇ ಹೊರಗಡೆ ದೀಪಗಳನ್ನು ಇಟ್ಟಿದ್ರೋ ಇಲ್ವೋ? ನಿಮ್ಮ ಮನೆಯವರಿಗೆ ಮಕ್ಕಳಿಗೆ ಹೊಸ ಬಟ್ಟೆಬರೆ ತಂದಿದ್ರೋ ಹೇಗೆ? ದೇವಸ್ಥಾನಕ್ಕೆ ಹೋಗಿದ್ರಾ, ಲಕ್ಷ್ಮೀ ಪೂಜೆ ಮಾಡಿದ್ರಾ? ನಮ್ಮ್ ಹಬ್ಬಗಳ ಯಾದಿ ಇಲ್ಲಿಗೆ ಮುಗಿದ ಹಾಗೆ ಕಾಣ್ಸುತ್ತೆ, ಇನ್ನು ಬರೋದೇನಿದ್ರೂ ಅಮೇರಿಕನ್ ಹಬ್ಬಗಳು - ವೆಟಿರನ್ಸ್ ಡೇ, ಥ್ಯಾಂಕ್ಸ್‌ಗಿವಿಂಗ್, ಕ್ರಿಸ್‍ಮಸ್, ನ್ಯೂ ಇಯರ್!

ಹ್ಯಾಪ್ಫೀ ಹಾಲಿಡೇಯ್ಸ್!