Showing posts with label ಚಿಂತೆ. Show all posts
Showing posts with label ಚಿಂತೆ. Show all posts

Saturday, April 25, 2020

ಎಲ್ಲಾ ಕಸಮಯವೋ!

ಕೊರೋನಾ ವೈರಸ್‌ಗೆ ಸಂಬಂಧಿಸಿದ ಬಿಕ್ಕಟ್ಟನ್ನು ನಾವೆಲ್ಲ ಎದುರಿಸುತ್ತಿರುವಾಗ ಒಂದು ವಿಷಯವನ್ನು ನಮ್ಮ ಅನುಕೂಲಕ್ಕೋಸ್ಕರ ಮರೆತುಬಿಡುತ್ತಿದ್ದೇವೆಂದರೆ ಅದು ನಮ್ಮ ಕಸ ಸಂಸ್ಕರಣೆಯ ವೈಫಲ್ಯ.  ನಮ್ಮ ತಂತ್ರಜ್ಞಾನಗಳು ಅದೆಷ್ಟೇ ಮುಂದುವರೆದರೂ, ಬಾಲ್ಟಿಮೋರ್‌ನಿಂದ ಬೆಂಗಳೂರಿನವರೆಗೆ ನಾವು ಕಸವನ್ನು ಪರಿಷ್ಕರಿಸುವ ರೀತಿಯನ್ನು ನೋಡಿದರೆ ತಿರಸ್ಕಾರ ಮೂಡುತ್ತದೆ.  ಇತ್ತೀಚೆಗೆ I-95ನಲ್ಲಿ ಡ್ರೈವ್ ಮಾಡುತ್ತಾ ಇನ್ನೇನು ಬಾಲ್ಟಿಮೋರ್ ನಗರವನ್ನು ಹೊಕ್ಕುತ್ತಿರುವಂತೆ (ಕಸವನ್ನು ಸುಟ್ಟು) ಗಗನಕ್ಕೆ  ಹೊಗೆಯನ್ನು ಉಗುಳುವ ಹೊಗೆ ಕೊಳವೆಗಳು ನಾವು ಇನ್ನೂ ಜೀವಂತವಿದ್ದೇವೆ ಎಂದು ನೆನಪಿಸಿದವು.  ಅದೇ ರೀತಿ ನೀವು ಭಾರತದ ಯಾವುದೇ ಮಹಾನಗರಕ್ಕೆ ಹೋದರೂ ಕಸದ ಪ್ರಮಾಣ ಮತ್ತು ಸಂಸ್ಕರಣಾ ವಿಧಾನ ಎರಡೂ ನಿಮ್ಮನ್ನು ಹೈರಾಣಾಗಿಸುತ್ತವೆ ಎಂದರೆ ತಪ್ಪೇನಿಲ್ಲ.



ದಿನೇ-ದಿನೇ ಬೃಹದಾಕಾರವಾಗಿ ಬೆಳೆಯುವ ಕಸದ ಪ್ರಮಾಣ ಒಂದು ದಿನ ಇಡೀ ಪ್ರಪಂಚದ ಪ್ರಗತಿಗೇ ಮಾರಕವಾಗಬಹುದೇ ಎಂಬ ಕೊರಗು ಇತ್ತೀಚೆಗೆ ಬಲವಾಗಿ ಕಾಡುತ್ತಿದೆ.

***
ನಮ್ಮ ಆಧುನಿಕ ಬದುಕಿನಲ್ಲಿ ನಾವೇ ಉತ್ಪಾದಿಸಿದ ಸಮಸ್ಯೆಗಳಲ್ಲಿ ಈ ಕಸವೂ ಒಂದು.  ಇದನ್ನ ಕಸ ಅನ್ನಿ, ಟ್ರ್ಯಾಶ್ ಅನ್ನಿ, ಅಥವಾ ರಬ್ಬಿಶ್ ಅನ್ನಿ, ತ್ಯಾಜ್ಯ ಅನ್ನಿ, ಕಲ್ಮಷ ಅನ್ನಿ - ಎಲ್ಲವೂ ಒಂದೇ.   ಎಲ್ಲ ದೇಶಗಳಲ್ಲೂ ಈ ಸಮಸ್ಯೆ ಇದ್ದೇ ಇದೆ, ಆದರೆ ಭಾರತದಲ್ಲಿ ಇದು ಅತಿ ಹೆಚ್ಚು ಎನ್ನಬಹುದು.  ಈಗಿನ ಎಲ್ಲೆಲ್ಲೂ ಕಸವೇ ಕಸ ಎನ್ನುವ ಅಂತಿಮ ಹಂತವನ್ನು ತಲುಪುವಲ್ಲಿ ಸಹಾಯ ಹಸ್ತ ನೀಡಿದ ಪೆಡಂಭೂತಗಳಲ್ಲಿ ಮುಖ್ಯವಾದುವು: ಯದ್ವಾತದ್ವಾ ಬೆಳೆದ ಜನಸಂಖ್ಯೆ, ಎಂಥ ಸಮಸ್ಯೆಗಳನ್ನೂ ಉಲ್ಬಣಗೊಳಿಸಬಲ್ಲ ಜನಸಾಂದ್ರಂತೆ, ಇವೆಲ್ಲಕ್ಕೂ ಮೂಲಭೂತ ಕಾರಣವಾದ ಪ್ಲಾನಿಂಗ್ (ಅಥವಾ ಪ್ಲಾನಿಂಗ್ ಇರದೇ ಇರುವ ಸ್ಥಿತಿ), ಎಂಥ ಸಂದರ್ಭವನ್ನೂ ತನ್ನ ಅನುಕೂಲಕ್ಕಾಗಿ ಬಳಸಿಕೊಳ್ಳುವ ರಾಜಕೀಯ ಮುತ್ಸದ್ದಿತನ ಹಾಗೂ ಲಂಚ ಲಂಪಟತನ.

ಭಾರತದವೆಂದರೆ ಬೆಂಗಳೂರೊಂದೇ ಅಲ್ಲ, ಆದರೆ ನಮ್ಮ ಬೆಂಗಳೂರಿಗೆ ಈ ಗತಿ ಬಂದಿರುವಾಗ ಇನ್ನುಳಿದ ನಗರಗಳ ಪಾಲು ಹೇಗಿರಬೇಡ.  ಏಳು (೨೦೧೧) ವರ್ಷಗಳ ಹಿಂದೆ ೮೫ ಲಕ್ಷ ಜನಸಂಖ್ಯೆ ಇದ್ದ ಬೆಂಗಳೂರು ಇಂದು ೧೨೫ ಲಕ್ಷ (೨೦೧೭) ತಲುಪಿದೆ. ಇಲ್ಲಿ ನೂರಕ್ಕೆ ತೊಂಭತ್ತು ಜನ ಅಕ್ಷರಕುಕ್ಷಿಗಳಿದ್ದರೂ ಸಹ, ಇಡೀ ನಗರ ಅನಾಗರೀಕರ ಬೀಡಾಗಿದೆ.  ತಮ್ಮ ಮನೆಯ ಒಳಗನ್ನು ಬೆಳಗಿಕೊಳ್ಳುವ ಜನ, ಹೊರಗನ್ನು ಅದೆಷ್ಟು ಕೊಳಕಾಗಿಟ್ಟುಕೊಂಡಿದ್ದಾರೆಂದರೆ ಅದರ ಬಗ್ಗೆ ಯಾರೂ ಮಾತನಾಡುವುದೇ ಇಲ್ಲ, ಆದ್ದರಿಂದ ಎಲ್ಲರಿಗೂ ಅದು ’ಒಪ್ಪಿಕೊಂಡ’ ಅಥವಾ ’ಒಗ್ಗಿಕೊಂಡ" ವಿಷಯವಾಗಿದೆ.

ಒಂದು ನಗರ ನಿರ್ಮಲೀಕರಣಗೊಳ್ಳ ಬೇಕಾದರೆ ಅಲ್ಲಿನ ಒಳಚರಂಡಿ ವ್ಯವಸ್ಥೆ ಚೆನ್ನಾಗಿರಬೇಕು.  ಅಲ್ಲಿ ಬಳಕೆಯಾಗುವ ನೀರನ್ನು ಪರಿಷ್ಕರಿಸಿ ತ್ಯಾಜ್ಯ ಪದಾರ್ಥಗಳನ್ನು ಬೇರ್ಪಡಿಸಿಬೇಕು.  ಇದೇ ರೀತಿ ಕಸವನ್ನು ಸಹ ಪರಿಷ್ಕರಿಸಿ, ರಿಸೈಕಲ್ ಮಾಡಬಹುದಾದವುಗಳನ್ನು ಬೇರ್ಪಡಿಸಿ ರಿಸೈಕಲ್ ಮಾಡಬೇಕು.  ಇವೆಲ್ಲಕ್ಕೂ ವ್ಯವಸ್ಥಿತವಾದ ಸಾಮಾಜಿಕ ಕಾಳಜಿ ಇರಬೇಕು.  ನಗರೀಕರಣ, ಅತಿ ಜನಸಾಂದ್ರತೆಯಿಂದ ನಮ್ಮ ಸಮಸ್ಯೆಗಳು ಹೆಚ್ಚಿ ನಮ್ಮ ಪರಿಸ್ಥಿತಿ ಹೀಗಾಗಿದೆ ಎಂದು ತಳ್ಳಿ ಹಾಕುವಂತಿಲ್ಲ.  ಉದಾಹರಣೆಗೆ, ೯೦ ಲಕ್ಷ ಜನಸಂಖ್ಯೆ ಇರುವ ನ್ಯೂ ಯಾರ್ಕ್ ನಗರ, ಇದಕ್ಕಿಂತಲೂ ನಾಲ್ಕು ಪಟ್ಟು ಜನಸಾಂದ್ರತೆ ಇರುವ ಟೋಕ್ಯೋದಲ್ಲಿ ಜನರು ಬದುಕುತ್ತಿಲ್ಲವೇ? ಅಲ್ಲಿಯೂ ಕಸದ ಸಮಸ್ಯೆ ಇದೆಯೇ ಎಂದು ಯೋಚಿಸಬೇಕಾಗುತ್ತದೆ.

ನಮ್ಮ ಕಸದ ಸಮಸ್ಯೆಗೆ ನಾವು ಏನು ಮಾಡಬೇಕು? ಈ ಹಿಂದೆ ವ್ಯವಸ್ಥಿತವಾದ ಪ್ಲಾನ್ ಇಲ್ಲದೇ ಅಡ್ಡಾದಿಡ್ಡಿಯಾಗಿ ಬೆಳೆದ ನಗರಗಳ ಕನಿಷ್ಠ ಇನ್‌ಫ್ರಾಸ್ಟ್ರಕ್ಚರ್ ಅನ್ನು ಬೆಳೆಸುವುದರ ಜೊತೆಗೆ, ಅಲ್ಲಿ ಎಲ್ಲೆಲ್ಲಿಂದಲೋ ವಲಸೆ ಬಂದು ಸೇರಿಕೊಂಡ ಜನರ ತಿಳುವಳಿಕೆಯನ್ನು ಹೆಚ್ಚಿಸಬೇಕು.  ಜೊತೆಗೆ ತಿರಸ್ಕೃತ ತ್ಯಾಜ್ಯವನ್ನು ಬೇರ್ಪಡಿಸಿ ಅದನ್ನು ಸರಿಯಾಗಿ "ವಿನಿಯೋಗಿಸುವ" ಉದ್ಯಮಗಳು ಹಾಗೂ ಅದಕ್ಕೆ ಸೂಕ್ತವಾದ ಟೆಕ್ನಾಲಜಿ ಮತ್ತು ಮಷೀನುಗಳ ಸಹಾಯದಿಂದ ಕಸದ ಪೆಡಂಭೂತವನ್ನು ನಿಯಂತ್ರಿಸಬಹುದು.   ನಾನು ನೋಡಿದಂತೆ ಬೆಂಗಳೂರಿನ ಬಹುಭಾಗದಲ್ಲಿ ಈಗ      ಚಾಲ್ತಿಯಲ್ಲಿರುವ ವ್ಯವಸ್ಥೆ ಕಲೆಕ್ಟ್ ಎಂಡ್ ಡಂಪ್.  ಇದು ಹೀಗೇ ಮುಂದುವರೆದರೆ ಇಡೀ ನಗರವೇ ತಿಪ್ಪೇಗುಂಡಿಯಾಗುವುದು ಗ್ಯಾರಂಟಿ.

ಕಸವನ್ನು ಕಲೆಕ್ಟ್ ಮಾಡಿ, ಅದನ್ನು ಸರಿಯಾಗಿ ಬೇರ್ಪಡಿಸಿ, ರಿಸೈಕಲ್ ಮಾಡುವವನ್ನು ಸರಿಯಾದ ಜಾಗಕ್ಕೆ ತಲುಪಿಸಿ, ಕೊಳೆಯುವುದನ್ನು ಕಾಂಪೋಸ್ಟ್ ಆಗಿ ಪರಿವರ್ತಿಸಿ ಮತ್ತೆ ಅವೇ ರಿಸೋರ್ಸುಗಳನ್ನು ಒಂದಲ್ಲ ಒಂದು ರೀತಿಯಲ್ಲಿ ಬಳಕೆ ಆಗುವಂತೆ ನೋಡಿಕೊಳ್ಳುವುದು ತ್ಯಾಜ್ಯವನ್ನು ಪರಿಷ್ಕರಿಸಲು ಇರುವ ಒಂದು ಸಾಲಿನ ಸೂತ್ರ.  ಮೊದಲೆಲ್ಲ ನಮ್ಮಲ್ಲಿ ಪ್ಲಾಸ್ಟಿಕ್ಕುಗಳು ಬಳಕೆಯಾಗುತ್ತಿರಲಿಲ್ಲ.  ಮನೆಗೊಂದು ತಿಪ್ಪೇಗುಂಡಿ ಇರುತ್ತಿತ್ತು, ಅಲ್ಲಿ ದಿನಬಳಕೆಯ ತ್ಯಾಜ್ಯ ಕೊಳೆತು ಗೊಬ್ಬರವಾಗುತ್ತಿತ್ತು. ಹಳೆಯ ಟೂತ್‌ಪೇಸ್ಟ್ ಟ್ಯೂಬುಗಳಿಂದ ಹಿಡಿದು, ಒಡೆದ ಪ್ಲಾಸ್ಟಿಕ್ ಕೊಡಪಾನಗಳ ತುಂಡುಗಳನ್ನು, ಖಾಲಿ ಬಾಟಲುಗಳನ್ನು, ರದ್ದಿ ಪೇಪರುಗಳನ್ನು ದುಡ್ಡು ಕೊಟ್ಟು ತೆಗೆದುಕೊಂಡು ಹೋಗುತ್ತಿದ್ದರು. ಇದಿಷ್ಟೇ ಅಲ್ಲ, ಹಳೆಯ ಪಾತ್ರೆಗಳನ್ನೂ, ರೇಷ್ಮೆ ಬಟ್ಟೆ ಮೊದಲಾದವುಗಳನ್ನೂ ಸಹ ನಮಗೆ ಗೊತ್ತಾದ ರೀತಿಯಲ್ಲಿ ’ರಿಸೈಕಲ್’ ಮಾಡುತ್ತಿದ್ದೆವು.
ಇಂದಿನ ಆಧುನಿಕ ಜನತೆಗೆ ತಮ್ಮ ತ್ಯಾಜ್ಯವನ್ನು ವಿನಿಯೋಗಿಸಲು ತಾವು ಹಣವನ್ನೇಕೆ ಖರ್ಚು ಮಾಡಬೇಕು ಎಂಬ ಸರಳ ಸತ್ಯ ತಿಳಿಯುತ್ತಿಲ್ಲ?  ನಿಮ್ಮ ಮನೆಯ ಮುಸುರೆಯನ್ನು ತೊಳೆಯುವವರಿಗೆ ದುಡ್ಡು ಕೊಡುವುದಿಲ್ಲವೇ? ಹಾಗೇ ತ್ಯಾಜ್ಯ ತೆಗೆದು ಪರಿಷ್ಕರಿಸಲು ಕೂಡ ಹಣ ತೆರಬೇಕಾಗುತ್ತದೆ.  ಅಲ್ಲದೇ ತ್ಯಾಜ್ಯವನ್ನು ಪರಿಷ್ಕರಿಸುವ ಉದ್ಯಮ/ಉದ್ಯಮಿಗಳಿಗೆ ಪ್ರೋತ್ಸಾಹ ನೀಡಿ ಅವರನ್ನು ಒಂದು ವ್ಯವಸ್ಥೆಯ ಮುಖ್ಯ ಅಂಗವನ್ನಾಗಿ ಪರಿಗಣಿಸಬೇಕಾಗುತ್ತದೆ.  ನನ್ನ ಅನಿಸಿಕೆಯ ಪ್ರಕಾರ, ನಾವು ಸೇವಿಸುವ ಆಹಾರಕ್ಕೆಷ್ಟು ಪ್ರಾಮುಖ್ಯತೆ ನೀಡುತ್ತೇವೆ ಅದರ ಕಾಲು ಪಟ್ಟಾದರೂ ತ್ಯಾಜ್ಯ ಸಂಸ್ಕರಣೆಗೆ ಮನ್ನಣೆ ನೀಡಬೇಕಾಗುತ್ತದೆ.  ಇಲ್ಲವೆಂದಾದಲ್ಲಿ ಇಂದು ನಾವು ಬೆಲೆ ತೆರದೆಯೇ ಕಸವನ್ನು ಎಲ್ಲಿ ಬೇಕಂದಲ್ಲಿ ಎಸೆದು ಮುಂದೆ ಅದು ಎಲ್ಲವನ್ನು ಮೀರಿ ಬೆಳೆತು ಅನೇಕ ಅನಾಹುತಗಳು, ಹಾನಿಗಳೂ ಸಂಭವಿಸುವಾಗ ತುಂಬಾ ನಿಧಾನವಾಗಿರುತ್ತದೆ.

***

ನಮ್ಮಲ್ಲಿ ತಂತ್ರಜ್ಞಾನ, ಅವಿಷ್ಕಾರ ಬೇರೆ ಎಲ್ಲ ದೇಶಗಳಿಗೆ ಸೆಡ್ಡು ಹೊಡೆಯುವಂತೆ ಬೆಳೆಯುತ್ತಿದೆ ಎಂದು ಎದೆತಟ್ಟಿ ಹೇಳಿಕೊಳ್ಳಲು ಸಂತೋಷವಾಗುತ್ತದೆ.  ವಿಶ್ವದ ಅತಿ ಶ್ರೀಮಂತ ರಾಷ್ಟ್ರಗಳಲ್ಲಿ ಭಾರತ ಆರನೇ ಸಾಲಿನಲ್ಲಿದೆ ಎಂದು ಓದಿದಾಗ ಖುಷಿಯಾಗುತ್ತದೆ.  ನಮ್ಮಲ್ಲಿ ಅನೇಕ ಉದ್ಯಮಗಳು ಬೆಳೆಯುತ್ತಿವೆ, ನಾವು ಅತಿ ಹೆಚ್ಚು ಇಂಜಿನಿಯರುಗಳನ್ನು ಹೊರತರುತ್ತೇವೆ ಎಂದು ಜಂಭ ಕೊಚ್ಚಿಕೊಳ್ಳುತ್ತೇವೆ. ಆದರೆ, ಈವರೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಸದ ಸಮಸ್ಯೆ ಉಲ್ಬಣಗೊಂಡಿರುವುದನ್ನು ನೋಡಿಯೂ ನೋಡದೇ ಇರುವಂತಿರುವುದು ಏಕೆ? ಎಂದು ಯೋಚಿಸಿದರೆ ಉತ್ತರ ದೊರೆಯುವುದಿಲ್ಲ.

ಅಮೇರಿಕದಲ್ಲಿ ವೇಷ್ಟ್ ಮ್ಯಾನೇಜ್‌ಮೆಂಟ್ ಕಂಪನಿಯಂಥವುಗಳು ಪಬ್ಲಿಕ್ ಟ್ರೇಡಿಂಗ್ ಕಂಪನಿಗಳಾಗಿ ಬೆಳೆದು ತಮ್ಮ ಗ್ರಾಹಕರಿಗೆ, ಬಳಕೆದಾರರಿಗೆ ಸೇವೆಯನ್ನು ಸಲ್ಲಿಸುತ್ತಿಲ್ಲವೇ? ಹಾಗೆಯೇ ನಮ್ಮಲ್ಲೂ ಸಹ ಈ ಸಮಸ್ಯೆಗೆ ಇದುವರೆಗೆ ಯಾರೂ ಉತ್ತರವನ್ನೇ ಕಂಡು ಹಿಡಿಯದಂಥ ಅಸಹಾಯಕ ಪರಿಸ್ಥಿತಿ ಬಂದಿದೆಯೇ?

ಮುಂದೆ ಇದೇ ಬೆಂಗಳೂರಿನ ಜನಸಂಖ್ಯೆ ದ್ವಿಗುಣವಾದಾಗ, ಈ ಕಸದ ಮಹಾತ್ಮೆ ಏನಾಗಿರಬೇಡ? ಮನೆಯ ದಿನನಿತ್ಯದ ಕಸದ ಜೊತೆಗೆ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ ಉತ್ಪನ್ನಗಳೂ, ಲಿಥಿಯಂ ಬ್ಯಾಟರಿಗಳೂ ಸೇರಿಕೊಂಡು, ನೀರು-ಮಣ್ಣು ಎರಡೂ ಪಾದರಸ, ಆರ್ಸೆನಿಕ್, ಮೊದಲಾದ ವಿಷ ಪದಾರ್ಥಗಳಿಂದ ಕೂಡಿಕೊಂಡರೆ ಯಾರಿಗೆ ಹಾನಿ ಎಂದು ಎಲ್ಲರೂ ಯೋಚಿಸಬೇಕಾದ ವಿಚಾರ.  ಎಲ್ಲಾ ಕಡೆ ಕಸಮಯವಾಗಿದೆ.  ಇನ್ನೂ ನಾವು ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾಗದಿದ್ದರೆ, ನಿಸರ್ಗ ಎಂದಿನಂತೆ ತನ್ನನ್ನು ತಾನು ನೋಡಿಕೊಳ್ಳುತ್ತದೆ, ಅದಕ್ಕೆಲ್ಲ ಬೆಲೆ ತೆರಬೇಕಾದವರು ನಾವೇ!

Thursday, January 07, 2010

ಲಘುವಾಗೆಲೆ ಅನಿವಾಸಿ ಮನ...

ನವೆಂಬರ್ ೧೩ ರಂದು ಬರೆದ ’ಗೆಲುವಾಗೆಲೆ ಅನಿವಾಸಿ ಮನ...’ಬರಹಕ್ಕೆ ಪೂರಕವಾಗಿ ಈ ಲೇಖನ. ನವೆಂಬರ್ ೧೩ ನಾವು ಭಾರತಕ್ಕೆ ವೆಕೇಷನ್ನ್ ಹೋಗೋದರ ಹಿಂದಿನ ದಿನ, ಹಲವಾರು ಕೆಲಸಗಳ ನಡುವೆಯೂ ನಾನು ಮೂರು ವರ್ಷಗಳಲ್ಲಿ ಮಿಸ್ ಮಾಡಿಕೊಂಡಿರೋ ಭಾರತ ಈಗ ಹೇಗಿರಬಹುದು, ಏನೇನೆಲ್ಲ ಬದಲಾವಣೆಗಳಾಗಿರಬಹುದು...ಎಂದು ಯೋಚಿಸಿಕೊಳ್ಳುತ್ತಲೇ ಇಲ್ಲಿ-ಅಲ್ಲಿಯ ತವಕಗಳ ಎರಡು ಚಿತ್ರಗಳನ್ನು ತರಾತುರಿಯಾಗಿ ಕಕ್ಕಿ ಕೊಂಡು ಆ ಲೇಖನವನ್ನು ಬರೆದು ಮುಗಿಸಿದ್ದಾಯಿತು. ಈಗ ಭಾರತದ ವೆಕೇಷನ್ನ್ ಮುಗಿಸಿ ಹಿಂತಿರುಗಿ ಬಂದ ಮೇಲೆ ಹಾಗೂ ಸುಧಾರಿಸಿಕೊಂಡ ಮೇಲೆ ನನ್ನ ಅನುಭವಗಳನ್ನು ಹೊರಹಾಕಿ ಮತ್ತೊಂದು ಲೇಖನವನ್ನು ಬರೆಯಬೇಕು ಎನ್ನುವ ಆಶಯದ ಫಲವೇ ಇದು.

ಈ ಬದುಕು-ಬವಣೆಗಳು ಅದೇನೇ ಕಷ್ಟವನ್ನು ತಂದು ಒಡ್ಡಲಿ, ಜಾಗತೀಕರಣದ ಪರಿಣಾಮಗಳು ಎಷ್ಟು ದೂರ ಬೇಕಾದರೂ ಪಸರಿಸಿಕೊಂಡಿರಲಿ ನಮ್ಮ ಊರು ನಮ್ಮ ದೇಶ ನಮ್ಮ ಮನೆ...ಇವೆಲ್ಲವೂ ಎಂದಿಗೂ ಅಪ್ಯಾಯಮಾನವೇ. ನನ್ನೊಳಗೆ ಹುದುಗಿರುವ ಫಾಸಿಟಿವ್ ಸ್ಪಿರಿಟ್ಸ್ ಈ ವಿಚಾರದಲ್ಲಿ ನೆಗೆಟಿವ್ ಎಂದೂ ಆಗಲು ಸಾಧ್ಯವಿಲ್ಲ!

***

ತೊಂಭತ್ತರ ಮಧ್ಯೆ ಹಾಗೂ ಕೊನೆಯಲ್ಲಿ ಪ್ರಪಂಚವನ್ನು ಅರಸುತ್ತಾ ಬಂದಂತಹ ನನ್ನಂಥ ಟೆಕ್ಕಿಗಳಿಗೆ (ಅಂದಿನ ಕಾಲದ ಹೆಸರು) ನಮ್ಮ ಅಗತ್ಯಗಳು ಬೇರೆಯಾಗಿದ್ದವು. ಜೇಬಿನಲ್ಲಿ ಮೂರು ಸಾವಿರ ಡಾಲರ್ ಇಟ್ಟುಕೊಂಡು ಬಂದು ನೆವರ್ಕ್ ಲಿಬರ್ಟಿ ಏರ್‌ಪೋರ್ಟಿನಲ್ಲಿ ಇಳಿದ ನನ್ನ ಹಾಗಿನವರಿಗೆ ಅವರ ದೃಷ್ಟಿಕೋನ ಬೇರೆಯಾಗಿತ್ತು. Y2K ಮುಗಿದು, ಮತ್ತೊಂದು ದಶಕವೂ ಕಳೆದು ಹೋಗಿ ಹತ್ತು ವರ್ಷಗಳಿಗಿಂತಲೂ ಹೆಚ್ಚು ಇಲ್ಲಿನ ಪೈಪೋಟಿಗೆ ಏಗಿ-ಬೇಗಿ ಹಾಗೂ ಇಲ್ಲಿನ ಸಂಪನ್ಮೂಲಗಳನ್ನುಂಡು ನಮ್ಮ ಬೆಳವಣಿಗೆ ಬೇರೆ ರೀತಿಯದ್ದೇ ಆಗಿದೆ. ನನ್ನ ಜೊತೆಯವರು, ವಾರಗೆಯವರು ಇಲ್ಲಿಗೆ ಬಂದು ಈಗಾಗಲೇ ಅಮೇರಿಕನ್ ಸಿಟಿಜನ್ನ್ ಪಟ್ಟಕಟ್ಟಿಕೊಂಡಿರಬಹುದಾದ ಸಮಯದಲ್ಲಿ ಸೇಫ್‌ನಲ್ಲಿರುವ ನನ್ನ ಭಾರತದ ಪಾಸ್‌ಪೋರ್ಟ್ ಯಾವತ್ತೋ ಒಮ್ಮೆ ಭಾರತಕ್ಕೆ ಹೋಗಿ ತಿಣುಕುವ ಆಸೆಯನ್ನು ಇನ್ನೂ ಜೀವಂತವಾಗಿಟ್ಟುಕೊಂಡಿದೆ ಎಂದೇ ಹೇಳಬೇಕು. ಸೋಜಿಗದ ವಿಷಯವೆಂದರೆ ನಾವು ಬದಲಾದಂತೆ ನಮ್ಮ ಹಳೆಯ ಪಾಸ್‌ಪೋರ್ಟಿನಲ್ಲಿರುವ ಚಿತ್ರವಾಗಲೀ ಮಾಹಿತಿಯಾಗಲೀ ಬದಲಾಗುವುದೇ ಇಲ್ಲ, ಅವು ಯಾವತ್ತಿದ್ದರೂ ’ನಾನೇ’ ಎನ್ನುವ ಚಿರಂತನ ಪ್ರತಿಮೆಯನ್ನು ಎತ್ತಿ ತೋರಿಸುವ ಮಾಧ್ಯಮ.

ಈ ಒಂದು ದಶಕದಲ್ಲಿ ಬೇಕಾದಷ್ಟಾಗಿದೆ: ನಮ್ಮ ಸ್ಪ್ರೆಡ್‌ಶೀಟು, ಗ್ರಾಫು, ನಂಬರುಗಳು ತಮ್ಮನ್ನು ತಾವು ನಮ್ಮ ಎದುರು ತೋರಿಸಿಕೊಂಡು ನಮ್ಮನ್ನು ಲೇವಡಿ ಮಾಡುವ ಪರಿಸ್ಥಿತಿಯೂ ಬಂದು ಹೋಗಿದೆ. ಈ ಒಂದು ದಶಕದಲ್ಲಿ ಮಾರ್ಕೆಟ್ಟಿನ ಮುಖ್ಯ ಮೂರು ಏಳು ಬೀಳುಗಳ ಕೃಪೆಯಿಂದಾಗಿ - ಡಾಟ್ ಕಾಮ್, ರಿಯಲ್ ಎಸ್ಟೇಟ್ ಹಾಗೂ ಕ್ರೆಡಿಟ್ ಕ್ರಂಚ್ - ನಮ್ಮ ದುಡಿಮೆಯ ಫಲ ಸ್ಟ್ರೆಸ್ಸಿಗೆ ಒಳಗಾಗಿದೆ, ನಮ್ಮ ಹೂಡಿಕೆಯ ಹಣ ಇನ್‌ಫ್ಲೇಷನ್ನಿನ ಎದುರು ತಲೆ ತಗ್ಗಿಸಿ ತನ್ನ ಮೌಲ್ಯವನ್ನು ಕಳೆದುಕೊಂಡಿದೆ. ಇವೆಲ್ಲದರ ಜೊತೆಗೆ ಸೆಪ್ಟೆಂಬರ್ ೧೧, ೨೦೦೧ ರ ಭಯೋತ್ಪಾದಕತನ ನನ್ನಂಥ ಅನಿವಾಸಿಗಳಿಗೆ ಸಾಕಷ್ಟು ಕಷ್ಟ ಸುಖದ ದರ್ಶನ ಮಾಡಿಸಿದೆ.

’ವಿಜಯ ಕರ್ನಾಟಕ’ದಂತಹ ಪತ್ರಿಕೆಗಳಲ್ಲಿ ಪ್ರಕಟವಾದ "Take it easy...ಟೆಕ್ಕಿ" ಲೇಖನಗಳು ನ್ಯೂಕ್ಲಿಯರ್ ಕುಟುಂಬಗಳ ಬವಣೆಯನ್ನು ಒಂದು ಹೆಜ್ಜೆ ಮುಂದುವರೆದು ರಸ್ತೆ ಮೇಲೆ ಬಿಸಾಡಿ ಮಾನ ಕಳೆದಿವೆ, ಆಧುನಿಕ ಕುಟುಂಬಗಳಲ್ಲಿನ ಇರಿಸು-ಮುರಿಸುಗಳು ಮನ-ಮನೆಯನ್ನು ಮುರಿಯುವ ಪ್ರಸಂಗಗಳನ್ನು ಲೇವಡಿ ಮಾಡಿವೆ. ಈ ನ್ಯೂಕ್ಲಿಯರ್ ಕುಟುಂಬಗಳ ಕ್ಲೀಷೆಗಳು ಮೈನ್‌ಸ್ಟ್ರೀಮ್ ಸಮಾಜಕ್ಕೆ ಗೊತ್ತೇ ಆಗದೇ ಒಂದು ದಶಕ ಉರುಳಿ ಹೋಗಿದ್ದು ವಿಪರ್ಯಾಸ. ’ನಮ್ಮ ಮಗ ಕಾಲ್‌ಸೆಂಟರ್‌ನಲ್ಲಿ ದುಡಿಯುತ್ತಾನೆ...’ ಎನ್ನುವುದರ ಹಿಂದೆ ಬಳುವಳಿಯಾಗಿ ಬರುವ ಫಲಾಫಲಗಳನ್ನು ದೂರದ ತಂದೆ-ತಾಯಿಯರು ಯಾಕೆ ಗುರುತಿಸುವುದರಲ್ಲಿ ಸೊರಗಿ ಹೋದರೋ? ನನ್ನ ಹಾಗೆ ಹೆಚ್ಚಿನವರು ಇಲ್ಲಿ ಬಂದೇ ಕುಟುಂಬವನ್ನು ಆರಂಭಿಸಿದ್ದು ನಿಜವಾದರೆ ನಮಗೆಲ್ಲ ಸಹಬಾಳ್ವೆ ಎನ್ನೋದರ ಪರಿಕಲ್ಪನೆಯೇ ಇಲ್ಲ ಎನ್ನಬೇಕು. ನಾವು ಪರಿವಾರದವರೊಟ್ಟಿಗೆ ಮದುವೆ-ಮುಂಜಿಗಳಲ್ಲಿ ಭಾಗವಹಿಸೋದಿಲ್ಲ, ವಾರದ ದಿನಗಳನ್ನು ಒಂದು ರೀತಿ, ವಾರಾಂತ್ಯವನ್ನು ಮತ್ತೊಂದು ರೀತಿಯಲ್ಲಿ ಉರುಳಿಸಿ ವಾರ-ವರ್ಷಗಳನ್ನು ಕಳೆಯುವ ನಮಗೆ ಅವಿಭಾಜ್ಯ ಕುಟುಂಬಗಳ ಕಷ್ಟಗಳು ಹತ್ತಿರ ಸಹ ಸುಳಿಯೋದಿಲ್ಲ. ಸಹೋದರ-ಸಹೋದರಿ, ನಾದಿನಿ, ಮೈದುನ, ಅತ್ತೆ-ಮಾವ, ತಂದೆ-ತಾಯಿ, ದೊಡ್ಡಪ್ಪ-ಚಿಕ್ಕಪ್ಪ, ದೊಡ್ಡಮ್ಮ-ಚಿಕ್ಕಮ್ಮಗಳ "interference" ನಮ್ಮ ಕುಟುಂಬಗಳಿಗಿರೋದಿಲ್ಲ. ನಮ್ಮ ಮಕ್ಕಳ ಡೈಪರ್ರ್ ತೆಗೆದು ತೊಳೆಯೋದು, ಅವರ ಯೋಗ-ಕ್ಷೇಮ ನೋಡಿಕೊಳ್ಳೋದು ನಮ್ಮ ದಿನನಿತ್ಯದ ಸಾಧನೆಗಳಲ್ಲೊಂದು. ನಾವು ನಮ್ಮ ಖರ್ಚನ್ನು ಮೀರಿ ಕೂಡಿಸೋ ಹಣ ಕೆಲವರಿಗೆ ಒಂದು ರೀತಿಯಲ್ಲಿ ನಾಯಿ ಮೊಲೆಯ ಹಾಲು - ಅದು ಬಹಳಷ್ಟು ಸಾರಿ ನೆರೆಹೊರೆಯ ಕಷ್ಟಗಳಿಗೆ ಸ್ಪಂದಿಸಿರಲಾರದು, ಹಾಗೆ ಕೂಡಿಟ್ಟ ಹಣ ಭದ್ರತೆಯಿದ್ದರೂ ಅದರ ಜೊತೆ ಅಸಹಾಯಕತೆಯನ್ನೂ ಸೇರಿಸಿಕೊಂಡಿರುತ್ತದೆ. ಹಾಗೆ ಸೇರಿಕೊಂಡ ಡಾಲರ್ ಹಣ ಇಲ್ಲಿಯ ಮಿಡ್ಲ್‌ಕ್ಲಾಸ್ ಮಟ್ಟದ್ದಿದ್ದರೂ ಅದು ಭಾರತದ ರೂಪಾಯಿಗೆ ಬದಲಾದಾಗ ಒಂದು ಹೊಸ ಅರ್ಥ ಪಡೆದುಕೊಳ್ಳುತ್ತದೆಯೇ ಹೊರತು ಕ್ಲಾಸ್ ವಿಚಾರದಲ್ಲಿ ಹೆಚ್ಚು ಬದಲಾವಣೆ ಆಗೋದಿಲ್ಲ.

***

ಯಾಕೆ ಭಾರತಕ್ಕೆ ಹಿಂತಿರುಗಿ ಹೋಗಬೇಕು? ಎನ್ನುವ ಆಲೋಚನೆಗಳು ಒಂದು ದಶಕದ ನಂತರ ಆಗಾಗ್ಗೆ ನಾಯಿಕೊಡೆಗಳಂತೆ ತಲೆ ಎತ್ತುವುದು ಸಾಮಾನ್ಯವಾಗುತ್ತದೆ. ಮೊದಲೆಲ್ಲ ಯಾವತ್ತು ಹೋದೇವೋ ಎನ್ನುವ ಆಲೋಚನೆಯೇ ರೋಮಾಂಚನವನ್ನು ಮೂಡಿಸುವಂತಹ ವಿಚಾರಗಳು ಈಗ ಹತ್ತಿರ ಸುಳಿಯೋದಿಲ್ಲ. ಅದರ ಬದಲಿಗೆ ಪ್ರಾಯೋಗಿಕವಾಗಿ ಯೋಚಿಸುವ ಮನಸ್ಸು ಎಲ್ಲರಿಗಿಂತ ಮುಂದಾಗಿ ಭಾವನೆಗಳು ಹಾಗೂ ಸ್ಪಂದನಗಳೆಂಬ ಮೊದಲಾದ ಮನಸ್ಸಿನ ಲಘು ವಿಹಾರಗಳು ಕನಸಿಗೆ ಹತ್ತಿರವಾಗತೊಡಗುತ್ತವೆ. ಮೊದಲು ಎರಡು ಭುಜಗಳ ಜೊತೆಗೆ ಎರಡು ಸೂಟ್‌ಕೇಸ್ ಇಟ್ಟುಕೊಂಡು ಬಂದವರಿಗೆ ಸಂಸಾರದ ಹಲವಾರು ಇತರ ಭುಜಗಳ ಮತ್ತಿನ್ನೊಂದಿಷ್ಟು ಬ್ಯಾಗೇಜುಗಳು ಬೆನ್ನೇರುತ್ತವೆ. ಇಲ್ಲಿ ಇದ್ದೂ ಇಲ್ಲದವರ ಹಾಗೆ ಬದುಕಿ ಸುಸ್ತಾಗಿ ಹೋದ ಪರಿಣಾಮಕ್ಕೆ ನಮ್ಮ ಇಮ್ಮೂವಬೆಲ್ಲ್ ಅಸ್ಸೆಟ್ಟಿನ ಲಿಸ್ಟಿಗೆ ಇಲ್ಲಿಯ "ಮನೆ"ಯೂ ಸೇರಿಕೊಳ್ಳುತ್ತದೆ.

ಯಾಕೆ ಹೋಗಬೇಕು ಅನ್ನೋ ಪ್ರಶ್ನೆಗೆ ಒಂದೇ ಒಂದು ಬ್ರಹ್ಮಾಸ್ತ್ರದಂತಹ ಉತ್ತರವನ್ನು ನೀಡಬಹುದು - ಅದು ನಮ್ಮೂರಿನ ಹವಾಮಾನ. ಅಲ್ಲಿನವರಿಗೆ ಅದರ ಬೆಲೆ ಖಂಡಿತ ಗೊತ್ತಿಲ್ಲ ಬಿಡಿ. ನಾನಂತೂ ಡಿಸೆಂಬರಿನ ಅಲ್ಲಿನ ಛಳಿಗಾಲದ ರಾತ್ರಿ ಹಾಗೂ ಹಗಲು ಯಾವುದೇ ಹೀಟರ್ ಅಥವಾ ಏರ್‌ಕಂಡೀಷನರ್ ಇಲ್ಲದೇ ಕಳೆಯಬಹುದಾದಂಥ ಪರಿಸ್ಥಿತಿ ಯಾವತ್ತಿದ್ದರೂ ಮನಸ್ಸಿಗೆ ಮುದ ನೀಡುವ ಅನುಭವವೇ ಹೌದು. ಹವಾಮಾನದ ಜೊತೆಗೆ ನಮ್ಮವರು, ತಮ್ಮವರು, ನಮ್ಮಂತೇ ಇರುವವರು, ನಮ್ಮ ಜೊತೆ ಒಡನಾಡುವವರು, ನಮ್ಮ ಸಂಸ್ಕೃತಿ, ಸಂಸ್ಕಾರಗಳ ಹಿನ್ನೆಲೆ ಇರುವವರು - ಮೊದಲಾಗಿ ಇಡೀ ನಾಡನ್ನೇ ’ಯಾಕೆ ಹಿಂತಿರುಗಿ ಹೋಗಬೇಕು?’ ಎನ್ನುವ ಪ್ರಶ್ನೆಗೆ ಪಣವಾಗಿ ಒಡ್ಡಬಹುದು. ಆದರೆ ’ನಮ್ಮೂರು-ನಮ್ಮ ಜನ’ ಎನ್ನುವುದು ಪ್ಲಸ್ ಪಾಯಿಂಟ್ ಹೇಗೋ ಹಾಗೇ ಮೈನಸ್ಸ್ ಕೂಡ ಆಗಬಹುದು ಎನ್ನುವುದು ವಿಪರ್ಯಾಸವಲ್ಲದೇ ಮತ್ತಿನ್ನೇನು!

ಒಂದು ದಶಕಕ್ಕಿಂತ ಹೆಚ್ಚು ನ್ಯೂಕ್ಲಿಯರ್ ಫ್ಯಾಮಿಲಿಯಾಗಿ ಬದುಕಿಕೊಂಡಿದ್ದವರಿಗೆ (ಅಥವಾ ಅದನ್ನೇ ಬದುಕು ಎಂದು ನಂಬಿಕೊಂಡಿದ್ದವರಿಗೆ) ಧಿಡೀರನೇ ಮನೆಯ ಬಾಗಿಲನ್ನು ಬಡಿದು ಬರುವ ಅಥವಾ ಹಾಗೇ ಒಳನುಗ್ಗುವ ಬಂಧು-ಬಳಗದವರು ಅನಾಗರಿಕರಂತೆ ಕಂಡು ಬರಬಹುದು. ಅಥವಾ ಮದುವೆ-ಮುಂಜಿಗಳಲ್ಲಿ ನಾವು ಡಾಲರ್ ಮಹಾತ್ಮೆಯನ್ನು ಬಲ್ಲವರಾದರೂ ನಮ್ಮ ಎದುರೇ ಗುಲಗಂಜಿ ಬಂಗಾರಕ್ಕೆ ಕಿತ್ತು ತಿನ್ನುವ ಜಗಳವಾಗಬಹುದು. ’ನಾನು ಸತ್ತರೂ ನಿಮ್ಮ ಮನೆಯಲ್ಲಿ ನೀರು ಕುಡಿಯಲ್ಲ...’ ಎನ್ನುವ ವರಸೆಯೂ; ’ನೀನು ಯಾರ ಮನೆಗೆ ಹೋದ್ರೂ ಅವರ ಮನೆಗೆ ಮಾತ್ರ ಹೋಗಬೇಡ...’ ಎನ್ನುವ ಹಕ್ಕೀಕತ್ತೂ...ಹೀಗೆ ಅನೇಕಾನೇಕ ಅಗೋಚರ ಅವ್ಯಕ್ತ ಹಾಗೂ ಅಮೂರ್ತ ಮಾನವೀಯ ಸಂಬಂಧಗಳ ದರ್ಶನದ ಓವರ್‌ಲೋಡ್ ಆಗಿಬಿಡಬಹುದು. ಇವೆಲ್ಲಕ್ಕಿಂತ ಮುಖ್ಯವಾಗಿ ನಮ್ಮ ಪರಿಸರ-ಪ್ರೈವಸಿ ಎಂಬುದರ ಬುಡವನ್ನೇ ಅಲುಗಾಡಿಸುವ ಘಟನೆಗಳು ನಡೆಯಬಹುದು. ಅಥವಾ ’ಬೆಂಡೇಕಾಯ್, ಸೋರೇಕಾಯ್...’ ಎಂದು ಬೀದಿಯಲ್ಲಿ ತರಕಾರಿ ಮಾರುವವರ ತಾರಕ ಸ್ವರದಿಂದ ಹಿಡಿದು ವಾಹನಗಳ ಹಾರ್ನ್‌ನಿಂದ ಕಮ್ಮ್ಯೂನಿಕೇಟ್ ಮಾಡುವ ಅಲ್ಲಿನ ವಾತಾವರಣ ಶಬ್ದಮಾಲಿನ್ಯವಾಗಿ ಕಾಡಬಹುದು. ಇವೆಲ್ಲದರ ಜೊತೆಯಲ್ಲಿ ಓವರ್‌ಲೋಡ್ ಆಗಿ ಓಡುವ ವಾಹನಗಳಿಂದ ಹಿಡಿದು ಲಂಗು-ಲಗಾಮಿಲ್ಲದ ಫ್ಯಾಕ್ಟರಿಗಳ ಹೊಗೆ ನಮಗೆ ಉಸಿರುಕಟ್ಟಿಸಬಹುದು. ಭಾರತದಲ್ಲಿ ಜನಸಂಖ್ಯೆ ಹೆಚ್ಚು, ಈ ಹೆಚ್ಚಿನ ಜನಸಂಖ್ಯೆ ಯಾವುದೇ ಒಂದು ಸಮಸ್ಯೆಗೂ ಅದರದ್ದೇ ಆದ ಒಂದು ಹೊಸ ಆಯಾಮವನ್ನು ಸೃಷ್ಟಿಸಬಲ್ಲದು. ಹೀಗೇ...ಅನೇಕಾನೇಕ ನೆಗೆಟಿವ್ ಕಾಂಟೆಕ್ಸ್ಟ್‌ಗಳನ್ನು ತೋರಿಸಿದರೂ ಸಹ ’ವೆದರ್’ ಎನ್ನುವ ಒಂದೇ ಒಂದು ರಾಮಬಾಣಕ್ಕೆ ನಮ್ಮ ಊರನ್ನು ಕ್ಷಣಾರ್ಧದಲ್ಲಿ ಎಲ್ಲಕ್ಕಿಂತ ಹತ್ತಿರವಾಗಿಸಬಲ್ಲ ಶಕ್ತಿ ಇರುವುದಂತೂ ನಿಜ.

ಕೇವಲ ಹವಾಮಾನದ ಬಗ್ಗೆ ನ್ಯೂ ಜೆರ್ಸಿಯಲ್ಲಿ ಈ ಕಡುವಿಂಟರಿನ ನಡುವೆ ಬೆಚ್ಚಗೆ ಕುಳಿತು ಬರೆಯೋದು ದೊಡ್ಡ ವಿಷಯವಲ್ಲ. ಜೊತೆಗೆ ನಾರ್ಥ್ ಈಸ್ಟ್ ಬಿಟ್ಟು ಈ ದೇಶದ ದಕ್ಷಿಣ ದಿಕ್ಕಿಗೆ ಮುಖ ಮಾಡಿ ನೋಡಿದರೆ ಅಲ್ಲಿ ಇಷ್ಟು ಕೆಟ್ಟ ಹವಾಮಾನ ಇಲ್ಲ. ವಾರ್ಮರ್ ಕ್ಲೈಮೇಟ್ ಬೇಕು ಎಂದರೆ ಫ್ಲೋರಿಡಾಗೆ ಹೋದರೆ ಆಗದೇ? ಬಹಳ ಸುಲಭವಾದ ಪ್ರಶ್ನೆ ಆದರೆ ಅದಕ್ಕೆ ಉತ್ತರ ಅಷ್ಟೊಂದು ಸುಲಭವಲ್ಲ. ಪ್ರತೀವರ್ಷ ಹರಿಕೇನ್‌ಗಳು ಬಂದರೂ, ಸುಂಟರಗಾಳಿ ಸುಳಿದರೂ, ಏನೇ ಹಾನಿ ಆದರೂ ಎಷ್ಟೋ ಕುಟುಂಬಗಳು ಅದೇ ಪ್ರದೇಶದಲ್ಲಿ ನೆಲೆಸೋದಿಲ್ಲವೇನು? ವೆದರ್ ಒಂದೇ ಕಾರಣವೆಂದರೆ ಇವತ್ತು ವಿಂಡೀಸಿಟಿ ಶಿಕಾಗೋ ಈ ಛಳಿಗಾಲದಲ್ಲಿ ನಿರ್ಜನಪೀಡಿತವಾಗಬೇಕಿತ್ತು. ಪ್ರತೀವರ್ಷ ಆರು ಅಡಿಗಳಷ್ಟು ಸ್ನೋ ಬಂದ ಬಫೆಲೋ ನಗರದಿಂದ ಎಲ್ಲರೂ ಗುಳೇ ಹೊರಡಬೇಕಿತ್ತು...ಹಾಗಾಗೋದಿಲ್ಲ. ಕರ್ಮವನ್ನು ಅರಸಿಬಂದ ನಮಗೆ ಒಂದು ಒಳ್ಳೆಯ ಕೆಲಸ ಬೇಕು, ಅದರ ಜೊತೆಯಲ್ಲಿ ನಮಗೆ ಅನುಕೂಲಕರವಾದ ನೆರೆಹೊರೆ ಇರಬೇಕು, ಇತ್ಯಾದಿ ಇತ್ಯಾದಿ. ಇವೆಲ್ಲವನ್ನೂ ಮೀರಿ ಒಮ್ಮೆ ಯಾರಾದರೂ ಅಮೇರಿಕದ ನೆಲದಲ್ಲಿ ಬೇರು ಬಿಡಲು ಆರಂಭಿಸಿದರೆ ಅದನ್ನು ಕಿತ್ತು ಮತ್ತೆ ಇನ್ನೇಲ್ಲೋ ನೆಲೆಸುವುದು ಕಷ್ಟದ ಮಾತೆ ಸರಿ.

***

ನಾವು ಕೇವಲ ಕರ್ಮವನ್ನು ಅರಸಿಬಂದವರು, ಅದರ ಜೊತೆಯಲ್ಲಿ ಪ್ರಾಸ್ಪೆರಿಟಿ ಕೂಡ. ಮುಂದಿನ ಹತ್ತು ವರ್ಷಗಳಲ್ಲಿ ನಮ್ಮನ್ನು ನಾವು ರಿಡಿಫೈನ್ ಮಾಡಬೇಕಾದ ಅಗತ್ಯವಿದೆ. ನಿಧಾನವಾಗಿ ಮುವತ್ತರ ಮಡಿಲಿನಿಂದ ಜಾರಿ ನಲವತ್ತರ ಹರೆಯಕ್ಕೆ ನನ್ನಂಥವರು ಬೀಳತೊಡಗುತ್ತೇವೆ. ಒಂದು ಕಾಲದಲ್ಲಿ ’ರಿಟೈರ್‌ಮೆಂಟ್ ಎಂದರೆ ನಮಗಲ್ಲ...’ ಎನ್ನುವ ಆಟಿಟ್ಯೂಡ್ ಇಟ್ಟುಕೊಂಡವರಿಗೆ ಈಗ ಮಾರ್ಕೆಟ್ಟುಗಳ ಏಳುಬೀಳುಗಳಲ್ಲಿ ಬಳಲಿದ ಮೇಲೆ ರಿಟೈರ್‌ಮೆಂಟ್ ಎನ್ನುವುದು ಮರೀಚಿಕೆಯಾಗದಿರುವಂತೆ ನೋಡಿಕೊಳ್ಳುವುದು ಅಗತ್ಯವಾಗುತ್ತದೆ. ನಮ್ಮ ಮಕ್ಕಳು ಬೆಳೆದು ದೊಡ್ಡವರಾದಂತೆ ನಮ್ಮ ಮೂಲ ಸಂಸ್ಕಾರ-ಸಂಸ್ಕೃತಿಗಳು ದಿನನಿತ್ಯದ ಅಗತ್ಯಗಳಲ್ಲೊಂದಾಗುತ್ತವೆ. ಹಣವನ್ನು ಕೂಡಿಡುವುದರ ಜೊತೆಗೆ ’ಇನ್ನು ಮುಂದೆ ಹೇಗೋ?’ ಎನ್ನುವ ಹೆದರಿಕೆ ಸೇರಿಕೊಂಡು ಕನ್ಸರ್‌ವೆಟಿವ್ ಮೈಂಡ್ ಜಾಗೃತವಾಗುತ್ತದೆ.

ಇವೆಲ್ಲ ಚಿಂತೆಗಳು ಯಾವತ್ತಿದ್ದರೂ ಇರೋವೆ, ದಿನೇದಿನೇ ಮನದಾಳದಲ್ಲಿ ಖಾಲಿಯಾಗುವ ದೂರದ ಭಾರತದ ನೆನಪು ನಾಸ್ಟಾಲ್ಜಿಯಾ ಆಗಿ ಹೋಗುತ್ತಾ ಸ್ಥಳೀಯ ಅನಿವಾಸಿ ಕರ್ಮಗಳು ಬೆನ್ನಿಗೆ ಅಂಟಿಕೊಂಡು ಹೊರೆ ಯಾವತ್ತಿಗೂ ತೂಕವಾಗೋದು ಇದ್ದೇ ಇದೆ, ಇವೆಲ್ಲದರ ನಡುವೆಯೂ ನಗುವ ಅಗತ್ಯವಿದೆ, ಸಹಜವಾಗಿ ಬದುಕುವ ತುಡಿತವಿದೆ. ಹಗುರವಾಗಬೇಕು, ಲಘುವಾಗಬೇಕು ಎಂದುಕೊಳ್ಳುತ್ತಾ ಅನಿವಾಸಿ ಮನ ಅಲ್ಲಿಯ ಹಳೆಯ ಹಾಗೂ ಇಲ್ಲಿಯ ಹೊಸ ತಲೆಮಾರುಗಳಿಗೆ ಬೆಸೆಯುವ ಕೊಂಡಿಯಾಗುತ್ತದೆ. ತನ್ನೊಳಗಿನ ತುಮುಲ-ತುಡಿತಗಳನ್ನು ಹತೋಟಿಯಲ್ಲಿಟ್ಟುಕೊಂಡೇ ಮುಂದಿನ ಸಂತತಿ ತನ್ನಂತಾಗದು ಎಂದು ಮಮ್ಮಲ ಮರಗುತ್ತದೆ, ಇವೆಲ್ಲದರ ಜೊತೆಯಲ್ಲಿ ಅಲ್ಲಿಯವರಿಗೆ ನಾವು "ಆಗಿ" ಬರಲಿಲ್ಲ ಎನ್ನುವ ಚಿಂತೆ ಕೊರೆಯತೊಡಗುತ್ತದೆ.

Sunday, July 19, 2009

3 ಪ್ರಶ್ನೆಗಳನ್ನುತ್ತರಿಸಿ, ನಿವೃತ್ತರಾಗಿ!

ಇದೇನಪ್ಪಾ, ಇತ್ತೀಚೆಗಷ್ಟೇ ಟೆಕ್ನಾಲಜಿ ಜ್ವರದಲ್ಲಿ ಬೆಂದು ಬಳಲಾಡುತ್ತಿರುವ ನಮ್ಮಂಥವರಿಗೆ ’ಅಂತರಂಗ’ದಲ್ಲಿ ನಿವೃತ್ತಿಯ ಬಗ್ಗೆ ಕಿವಿಮಾತೇ ಎಂದು ಹುಬ್ಬೇರಿಸಬೇಡಿ, ಮುಂದೆ ಓದಿ ನೋಡಿ. ಇತ್ತೀಚೆಗೆ ಒಂದಿಷ್ಟು ಕಮ್ಮ್ಯೂನಿಟಿ ಸೇವೆಯ ಹೆಸರಿನಲ್ಲಿ ನನಗೆ ಸೀನಿಯರ್ ಸಿಟಿಜನ್‌ಗಳ ಸೇವೆ ಮಾಡೋ ಭಾಗ್ಯ ಒದಗಿತ್ತು, ಈ ಸಂದರ್ಭದಲ್ಲಿ ಕಮ್ಯೂನಿಟಿ ಸೇವೆ ಮಾಡುತ್ತಲೇ ನಾನು ಮುಂದೆ ನಿವೃತ್ತನಾಗಿ ಇದೇ ಅವಸ್ಥೆಗೆ ಬಂದರೆ ಹೇಗಿರಬಹುದು ಎಂದು ಯೋಚಿಸಿ ಸ್ವಲ್ಪ ರಿಸರ್ಚ್ ಮಾಡಿ ನೋಡಲಾಗಿ ಹಲವಾರು ಅಂಶಗಳು ಹೊರಬಂದವು, ಅವುಗಳಲ್ಲಿ ಕೆಲವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ ಅಷ್ಟೇ.

ಈ ಎಕಾನಮಿಯಲ್ಲಿ ನಿವೃತ್ತರಾಗೋ ಮಾತೇ ಬರೋದಿಲ್ಲ, ಆ ಮಾತು ಬಿಡಿ. ಮುಂದೆಯಾದರೂ ಸುಧಾರಿಸೀತು, ಇಲ್ಲವೆಂದಾದರೆ ನಮ್ಮಂಥವರ ಕಷ್ಟ ಯಾರಿಗೂ ಬೇಡ. ಎಷ್ಟೋ ಜನ ರಿಟೈರ್‌ಮೆಂಟ್ ಬದುಕಿಗೆ ಪ್ಲಾನ್ ಮಾಡೋದೇ ಇಲ್ಲ. ರಿಟೈರ್‌ಮೆಂಟ್ ಬದುಕಿನಲ್ಲಿ ಹಣ, ಹೊಣೆ ಎಷ್ಟು ಮುಖ್ಯವೋ ಅಷ್ಟೇ ಆರೋಗ್ಯವೂ ಮುಖ್ಯ. ಆರೋಗ್ಯದ ಜೊತೆಗೆ ಇಷ್ಟೆಲ್ಲ ದಿನಗಳಲ್ಲಿ ವ್ಯಸ್ತರಾಗಿ ಕೆಲಸ ಮಾಡಿ ಕರ್ಮಜೀವನವನ್ನು ತೇಯ್ದ ನಮಗೆ ಮುಂದೆ ಕಾಲ ಕಳೆಯೋದಕ್ಕೆ ಏನು ಬೇಕು ಏನು ಬೇಡ ಅನ್ನೋದರ ತೀರ್ಮಾನವೂ ಬಹಳ ಮುಖ್ಯ.

ಸರಿ, ಈಗ ಮುತ್ತಿನಂತಹ ಮೂರು ಪ್ರಶ್ನೆಗಳಿಗೆ ಬರೋಣ:
೧. ಯಾವ ವಯಸ್ಸಿನಲ್ಲಿ ನಿವೃತ್ತರಾಗುತ್ತೀರಿ ಹಾಗೂ ನಿಮಗೆ ಬೇಕಾದ ಹಣದ ಮೊತ್ತವೆಷ್ಟು?
೨. ರಿಟೈರ್ ಆದ ನಂತರ ಹೇಗೆ ಸಮಯವನ್ನು ವ್ಯಯಿಸುತ್ತೀರಿ, ಯಾವ ಯಾವ ಹವ್ಯಾಸಗಳನ್ನು ಉಳಿಸಿಕೊಳ್ಳುತ್ತೀರಿ, ಬೆಳೆಸಿಕೊಳ್ಳುತ್ತೀರಿ?
೩. ನಿಮ್ಮ ಕಾಲಾನಂತರ ಯಾರು ಯಾರಿಗೆ ಏನನ್ನು ಬಿಟ್ಟು ಹೋಗುತ್ತೀರಿ?


ಈ ಮೂರು ಪ್ರಶ್ನೆಗಳನ್ನು ವಿಸ್ತರಿಸುವುದಕ್ಕೆ ಮೊದಲು "ILI ಪಾಷಾಣ"ಕ್ಕೆ ಬರೋಣ, ಏನು ಇಲಿ ಪಾಷಾಣ ಇದು ಎಂದು ಬೆರಗಾದಿರೋ, ಸುಲಭವಾಗಿ ನೆನಪಿಗೆ ಬರುವಂತೆ ಸುಮ್ಮನೆ ಒಂದು ಉಪಮೆಯ ಸೃಷ್ಟಿ ಅಷ್ಟೇ:
I: investment risk
L: longevity risk
I: inflation risk


ಈ ಮೇಲೆ ಹೇಳಿದ ಮೂರು ರಿಸ್ಕ್‌ಗಳೇ ಪಾಷಾಣವಿದ್ದ ಹಾಗೆ. ಪ್ರತಿಯೊಬ್ಬರೂ ತಾವು ನಿವೃತ್ತರಾಗಲು ತಯಾರಾಗುತ್ತ ಇದ್ದ ಹಾಗೆ, ಇಪ್ಪತ್ತರ ಹರೆಯದಿಂದ ಎಪ್ಪತ್ತರವರೆಗೆ ಈ ಮೂರು ರಿಸ್ಕ್‌ಗಳ ಬಗ್ಗೆ ನಿರಂತರವಾಗಿ ಯೋಚಿಸುತ್ತಲೇ ಇರಬೇಕಾಗುತ್ತದೆ. Investment risk ನಲ್ಲಿ ನೀವು ಹೂಡಿದ ಹಣ ನೀವು ರಿಟೈರ್ ಆಗುವ ಹೊತ್ತಿಗೆ ಯಾವುದೋ ಒಂದು ರಿಸೆಷ್ಷನ್ನೋ ಇಲ್ಲಾ ಡಿಪ್ರೆಷ್ಷನ್ನ್ ಚಕ್ರದಲ್ಲಿ ಸಿಕ್ಕು ನರಳುತ್ತಿರಬಹುದು. Longevity risk ಅಂದರೆ ನೀವು ಎಂಭತ್ತು ವರ್ಷ ಬದುಕುತ್ತೀರಿ ಎಂದು ಅದಕ್ಕೆ ತಕ್ಕಂತೆ ಹಣ ಹೂಡಿ ಕೂಡಿ ಹಾಕಿ ಮುಂದೆ ಇಳಿ ವಯಸ್ಸಿನಲ್ಲಿ ನೀವು ತೊಂಭತ್ತು ಆದರೂ ಗೊಟಕ್ ಎನ್ನದೇ ಇರಬಹುದು. Inflation risk ನಲ್ಲಿ ಈಗ ಎರಡು ರುಪಾಯಿ ಅಥವಾ ಡಾಲರ್‌ಗೆ ಸಿಗಬಹುದಾದ ಪದಾರ್ಥ ಮುಂದೆ ಇಪ್ಪತ್ತು ರುಪಾಯಿ ಅಥವಾ ಡಾಲರ್ ಗಿಂತಲೂ ದುಬಾರಿಯಾಗುವುದು.

ಮೊದಲನೆಯ ಪ್ರಶ್ನೆ: ಹೂಡಿಕೆಯ ಹಣಕ್ಕೆ ಅಂಟಿಕೊಂಡ ತೊಂದರೆಗಳು ಯಾವು ಯಾವು? ಇಂಟರ್‌ನೆಟ್ ನಲ್ಲಿ ಹುಡುಕಿದರೆ ಬೇಕಾದಷ್ಟು ರಿಟೈರ್‌ಮೆಂಟ್ ಕ್ಯಾಲ್ಕುಲೇಟರುಗಳು ಸಿಗುತ್ತವೆ, ನಿಮ್ಮ ಈಗಿನ ಆದಾಯ ಹಾಗೂ ಖರ್ಚುಗಳನ್ನು ಗಮನದಲ್ಲಿಟ್ಟುಕೊಂಡು ನಿವೃತ್ತ ಜೀವನಕ್ಕೆ ಎಷ್ಟು ಬೇಕು ಎಂದು ಅಂದಾಜು ಹಾಕುವುದಕ್ಕೆ. ಅಲ್ಲದೇ, ನಿವೃತ್ತ ಜೀವನದ ಪ್ರತಿವರ್ಷದ ಖರ್ಚಿಗೆ ಎಷ್ಟು ಬೇಕಾಗುತ್ತದೆ ಎನ್ನುವುದರ ಜೊತೆಗೆ ಇಂತಿಷ್ಟು ಹಣದಲ್ಲಿ ಕೇವಲ 4 ಅಥವಾ 5% ಹಣವನ್ನು ಮಾತ್ರ ತೆಗೆಯುವಂತೆ ಬೇಕಾಗುವ ಇಡುಗಂಟನ್ನು ರೂಪಿಸುವ ತಯಾರಿ ಹಾಗು 5% ನ ಮಿತಿಯಲ್ಲಿರುವಂತೆ ಒಂದು ಮೂಲಮಂತ್ರವನ್ನು ನೆನಪಿನಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು.

ಎರಡನೆಯ ಪ್ರಶ್ನೆ: ಸರಿ, ಕಷ್ಟದ ಜೀವನವನ್ನು ಸವೆಸಿ ನಿವೃತ್ತರೇನೋ ಆದಿರಿ, ಮುಂದೆ ಏನು? ದಿನಾ ಕೆಲಸ ಕೆಲಸ ಎಂದು ಗೋಗರೆದು ಹತ್ತಿರ ಬಂದ ಹವ್ಯಾಸಗಳು, ಅವಕಾಶಗಳು ಹಾಗೂ ಕನಸುಗಳನ್ನೆಲ್ಲ ದೂರ ತಳ್ಳಿಕೊಂಡು ಮೂರು ನಾಲ್ಕು ದಶಗಳನ್ನು ದೂರ ತಳ್ಳಿದ ನಂತರ ಒಂದು ದಿನ ದಿಢೀರ್ ಎಂದು ಹಳೆಯ ಹವ್ಯಾಸಗಳಿಗೆ ಅಂಟಿಕೊಳ್ಳುತ್ತೇನೆ ಎನ್ನುವುದು ಹುಡುಗಾಟಿಕೆಯೇ ಸರಿ. ಎಲ್ಲದಕ್ಕಿಂತ ಮುಖ್ಯ ಆರೋಗ್ಯ, ದೇಹಸ್ಥಿತಿ ನೆಟ್ಟಗಿರಬೇಕು. ಓದುವುದಕ್ಕೆ, ಬರೆಯುವುದಕ್ಕೆ, ತಿರುಗಾಡುವುದಕ್ಕೆ, ಆಡುವುದಕ್ಕೆ ಸಮಯ ಒಂದಿದ್ದರೆ ಸಾಲದು - ಹಣ ಬೇಕು ಹಾಗೂ ದೇಹದಲ್ಲಿ ಬಲಬೇಕು ಜೊತೆಗೆ ಎಲ್ಲವೂ ಸುಸ್ಥಿತಿಯಲ್ಲಿರಬೇಕು. ಸುಮ್ಮನೆ ಒಂದು ನಿಮಿಷ ಕಣ್ಣು ಮುಚ್ಚಿ ನೀವು ನಿವೃತ್ತರಾದ ಹಾಗೆ ಊಹಿಸಿಕೊಳ್ಳಿ: ಮನೆ ಇದೆ, ಸಾಲವೆಲ್ಲ ತೀರಿದೆ, ಮಕ್ಕಳು ಒಳ್ಳೆಯ ಸ್ಥಿತಿಯಲ್ಲಿದ್ದಾರೆ, ಸುಂದರವಾದ ಬೇಸಿಗೆಯ ದಿನ, ಊಟ ತಿಂಡಿ ಮನೆ ಕೆಲಸ ಎಲ್ಲವೂ ಆಗಿ ನಿಮ್ಮ ಬಳಿ ಐದರಿಂದ ಎಂಟು ಘಂಟೆ ಖಾಲಿ/ಫ್ರೀ ಇದೆ - ಏನು ಮಾಡುತ್ತೀರಿ? ನಿಮ್ಮ ಸ್ನೇಹಿತರು ಯಾರು, ನಿಮ್ಮ ಹವ್ಯಾಸಗಳೇನು, ನಿಮಗೇನು ಇಷ್ಟ, ನಿಮಗೇನು ಕಷ್ಟ, ನಿಮಗೇನು ಬೇಕು, ಎಲ್ಲಿ ಹೋಗುತ್ತೀರಿ, ಹೇಗೆ ಹೋಗುತ್ತೀರಿ, ಇತ್ಯಾದಿ. ಹೆದರಿಕೆಯಾಯಿತೇ? ಅಥವಾ ಸಂತೋಷವಾಯಿತೇ? ಈ ಒಂದು ನಿಮಿಷದ ನಿವೃತ್ತ ಬದುಕಿನ ಪಯಣದ ಬಗ್ಗೆ ಏನೆನ್ನೆಸಿತು?

ಮೂರನೆಯ ಪ್ರಶ್ನೆ: ಕೆರೆಯ ನೀರನು ಕೆರೆಗೆ ಚೆಲ್ಲಿ ಅಂದೋರು ಈ ಕಾಲದವರಂತೂ ಖಂಡಿತ ಅಲ್ಲ, ಬರುವಾಗ ಬೆತ್ತಲೆ ಹೋಗುವಾಗ ಬೆತ್ತಲೆ ಎನ್ನೋದೂ ಪೂರ್ತಿ ನಿಜವಲ್ಲ - ಎಂದು ವಾದ ಮಾಡೋ ಸಮಯವಿದಲ್ಲ. ನೀವು ಇಷ್ಟು ವರ್ಷ ಇದ್ದು ಅದೇನೇನೋ ಮಾಡಿ ಹೋಗುವಾಗ ನಿಮ್ಮನ್ನು ಆಧರಿಸಿಕೊಂಡವರಿಗೆ ಸ್ವಲ್ಪವನ್ನೂ ಬಿಟ್ಟು ಹೋಗೋದಿಲ್ಲವೇನು? ಮುಂದೆ ನಿಮ್ಮ ರಿಟೈರ್ ಮೆಂಟ್ ಅಕೌಂಟಿನಲ್ಲಿ ಪ್ರತಿವರ್ಷ 4 ರಿಂದ 5 % ಹಣವನ್ನು ತೆಗೆದು ಜೀವನ ನಡೆಸುತ್ತೀರಲ್ಲ, ನಿಮ್ಮ ನಂತರ ಅದರ ಬಂಡವಾಳ ಅಥವಾ ಮೂಲಧನ ಯಾರಿಗೆ ಸಿಗಬೇಕು? ಅದರಲ್ಲಿ ಟ್ಯಾಕ್ಸ್‌ನ ಪಾಲು ಎಷ್ಟು? ಯಾವ ಯಾವ ಬೆನಿಫಿಷಿಯರಿಗೆ ಎಷ್ಟು ಹಣ/ವರಮಾನ/ಆಸ್ತಿ ಇತ್ಯಾದಿಗಳನ್ನು ಯಾವ ರೂಪದಲ್ಲಿ ಬಿಟ್ಟು ಹೋಗುತ್ತೀರಿ ಎನ್ನುವುದಕ್ಕೂ ಬಹಳ ಯೋಚಿಸಬೇಕಾಗುತ್ತದೆ, ಒಳ್ಳೆಯ ಪ್ಲಾನ್ ಅಥವಾ ಸಿದ್ಧತೆ ಬೇಕಾಗುತ್ತದೆ.

***

ಈಗೆನ್ನನ್ನಿಸಿತು? ಮೊದಲು ಯಾವುದಾದರು ಕಮ್ಯೂನಿಟಿ ಸೆಂಟರಿನಲ್ಲಿ ಸೀನಿಯರ್ ಸಿಟಿಜನ್ ಸೇವೆಗೆ ವಾಲೆಂಟಿಯರ್ ಆಗಿ. ನಿಮ್ಮ ನಿವೃತ್ತ ಜೀವನದ ಮುಂಬರುವ ದಿನಗಳನ್ನು ನೀವೇ ತ್ರೀ ಡೀ ಕಲರ್ ಚಿತ್ರಗಳಲ್ಲಿ ನೋಡಿ. ಅವರ ಸ್ಥಾನದಲ್ಲಿ ನಿಮ್ಮನ್ನು ಗುರುತಿಸಿಕೊಂಡು ಈಗಿನ ಕಾದಾಟ/ಬಡಿದಾಟಗಳನ್ನು ಕಡಿಮೆ ಮಾಡಿ ILI ಪಾಷಾಣದ ಬಗ್ಗೆ ಕೊರಗಿ.

ನಾನು ಯಾವಾಗಲೂ ಬರೆಯೋ ಹಾಗೆ ಅಥವಾ ಹೇಳೋ ಹಾಗೆ ಬದುಕು ಬಹಳ ದೊಡ್ಡದು - ಮೈ ತುಂಬ ಸುಕ್ಕುಗಳನ್ನು ಕಟ್ಟಿಕೊಂಡು ಹುಟ್ಟಿ ಬಂದ ನಾವು ಸುಕ್ಕು ಸುಕ್ಕಾಗೇ ಸಾಯೋದು, ಪ್ರಾಣಿ ಸಂಕುಲದಲ್ಲಿ ಮಾನವರು ಈಗ ತಾನೆ ಹುಟ್ಟಿದ ಅಸಹಾಯಕ ಮಕ್ಕಳಿಂದ ಹಿಡಿದು ಅಸಹಾಯಕ ವೃದ್ದಾಪ್ಯದ ಅವಸ್ಥೆಯವರೆಗೆ ಅನುಭವಿಸೋದು ಬಹಳಷ್ಟಿದೆ. ಮಿದುಳು ಘಂಟೆಗೆ ನೂರು ಮೈಲಿ ವೇಗದಲ್ಲಿ ಓಡಿದರೂ ಮೈ ಬಗ್ಗೋದಿಲ್ಲ. ಮುವತ್ತರ ನಂತರ ಒಂದೊಂದೇ ಕೀಲುಗಳೂ ಕಿರುಗುಟ್ಟುವುದು ಸಾಮಾನ್ಯ. ಅಟೋಮೊಬೈಲನ್ನು ಆಗಾಗ್ಗೆ ಸರ್ವಿಸ್ ಮಾಡಿಸೋ ಹಾಗೆ ನಮ್ಮ ದೇಹಕ್ಕೂ ನಿರಂತರ ಸರ್ವಿಸ್/ಸೇವೆ ಅಗತ್ಯ. ಮಕ್ಕಳಿಂದ ಮುದುಕರ ಅವಸ್ಥೆಯಲ್ಲಿ ಅಗತ್ಯಗಳು ಬೇರೆ ಬೇರೆ. ಧೀರ್ಘ ಆಯುಷ್ಯ ಅನ್ನೋದು ದೊಡ್ಡದು, ಆದರೆ ಅಲ್ಲಿಯವರೆಗೆ ಹೋಗಿ ಸಸ್ಟೈನ್ ಆಗೋದು ಇನ್ನೂ ದೊಡ್ಡದು.