Showing posts with label ಚಿತ್ರ ವಿಮರ್ಶೆ. Show all posts
Showing posts with label ಚಿತ್ರ ವಿಮರ್ಶೆ. Show all posts

Friday, February 02, 2024

ಟಗರು ಪಲ್ಯ: ಚಿತ್ರದ ಬಗ್ಗೆ ಅನಿಸಿಕೆ

ಹಳ್ಳಿಯ ಸೊಗಡಿರುವ ಸಿನಿಮಾ ಎಂದು ತಕ್ಷಣವೇ ಗೊತ್ತಾಗುವಷ್ಟು ಗಾಢತೆ ಈ ಸಿನಿಮಾದಲ್ಲಿದೆ.  ಹಳ್ಳಿಯ ಕುರಿತ ಸಿನಿಮಾಗಳಿಗೆ "ಕೋಳಿ ಎಸ್ರು" ಎನ್ನುವ ಹೆಸರು ಇದ್ದಾಗ ಅದು ಚೆನ್ನಾಗಿ ಹೊಂದಿಕೊಳ್ಳುತ್ತದೆ. ಆದರೆ, ಇತ್ತ ಪೂರ್ಣವಾಗಿ ಇಂಗ್ಲೀಷೂ ಅಲ್ಲದ, ಅತ್ತ ಕನ್ನಡವೂ ಅಲ್ಲದ - ಟಗರು ಪಲ್ಯ - ಎನ್ನುವ ಹೆಸರು ಅದೇಕೋ ಅಷ್ಟೊಂದು ಸೂಕ್ತ ಎನಿಸುವುದಿಲ್ಲ. ಮಟನ್ ಚಾಪ್ಸ್ ಅನ್ನೋದನ್ನ ನೇರವಾಗಿ ಕನ್ನಡಕ್ಕೆ ತರ್ಜುಮೆ ಮಾಡಿದ ಹಾಗಿದೆ. ತರಕಾರಿ ಪಲ್ಯಕ್ಕೆ ಹೊಂದಿಕೊಳ್ಳುವ ಹಾಗೆ, ಕುರಿ-ಕೋಳಿಗಳು ಹೊಂದಿಕೊಳ್ಳಬಹುದೇನೋ, ಆದರೆ ಟಗರು ಪದ ಹೊಂದಿಕೊಳ್ಳುವುದು ಅಸಹಜವಾಗಿ ಕಂಡುಬರುತ್ತದೆ.



ಒಂದು ಹಳ್ಳಿಯ ಮನೆ, ಮನೆಯ ಮುಂದಿನ ಕಟ್ಟೆಯ ಸುತ್ತ ನಡೆಯುವ ಒಂದೆರಡು ದೃಶ್ಯಗಳನ್ನು ಬಿಟ್ಟರೆ, ಉಳಿದ ಕಥೆ ಒಂದೇ ಒಂದು ಹೊರಾಂಗಣದಲ್ಲಿ ನಡೆಯುತ್ತದೆ. ಮಿತವಾದ ಪಾತ್ರಧಾರಿಗಳು. ಅದರಲೂ ಕಥಾ ನಾಯಕಿ ಮತ್ತು ನಾಯಕ ಇಬ್ಬರೂ ಹೊಸಬರು. ಇದುವರೆಗೆ ಹಾಸ್ಯಭರಿತ ಪಾತ್ರದಲ್ಲಿ ಸಹ ಕಲಾವಿದನಾಗಿದ್ದ ನಾಗಭೂಷಣ್ ಅವರು ಇಲ್ಲಿ ನಾಯಕನಾಗಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಅದರಲ್ಲಿಯೂ ಅವರು ಆ ಸ್ಥಳೀಯ ಭಾಷೆಯ ಸೂಕ್ಷ್ಮತೆಯನ್ನು ಗಮನಿಸಿ ಅದರಲ್ಲಿ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಈ ಸಿನಿಮಾದ ಚಿತ್ರಕತೆಯನ್ನು ಬರೆಯುವುದು, ಅದನ್ನ ಮನನ ಮಾಡಿಕೊಂಡು ಅಲ್ಲಿನ ನೇಟಿವ್ ಭಾಷೆಗೆ ನ್ಯಾಯ ಒದಗಿಸಿ, ಜೊತೆಗೆ ತಮ್ಮ ಭಾವನೆಗಳನ್ನೂ ಪ್ರಕಟಿಸುವುದು ಅಷ್ಟೊಂದು ಸುಲಭದ ವಿಷಯವಲ್ಲ. ಈ ನಿಟ್ಟಿನಲ್ಲಿ ನಾಗಭೂಷಣ್ ಅವರ ಪಾತ್ರ ಸರಳ ಮತ್ತು ಭಿನ್ನವಾಗಿ ನೆನಪಿನಲ್ಲುಳಿಯುತ್ತದೆ.

ಕಥಾನಾಯಕಿ, ಅಮೃತಾಪ್ರೇಮ್ ಮೊದ ಮೊದಲು ಅಷ್ಟೊಂದು ಪ್ರಾಮುಖ್ಯತೆಯನ್ನು ಪಡೆಯದಿದ್ದರೂ, ಅಂತಿಮ ಹಂತದಲ್ಲಿ ಅವರು ಈ ಚಿತ್ರದಲ್ಲಿ ನಟಿಸಲು ಪಟ್ಟ ಪರಿಶ್ರಮ ಎದ್ದು ಕಾಣುತ್ತದೆ. ಹೊರಾಂಗಣದಲ್ಲಿ, ಅದೂ ತಮ್ಮ ಮೊದಲ ಚಿತ್ರದಲ್ಲಿ ಭಾಷೆ-ಭಾವನೆಗಳ ಅಭಿವ್ಯಕ್ತಿಯ ಮೂಲಕ ಎಲ್ಲರ ಕಣ್ಣಂಚಿನಲ್ಲಿ ನೀರೂರುವ ಸಾಹಸವನ್ನು ನಿರ್ದೇಶಕ ಉಮೇಶ್ ಅವರು ಚೆನ್ನಾಗಿ ಚಿತ್ರೀಕರಿಸಿದ್ದಾರೆ. ಹಾವ-ಭಾವಗಳಿಂದ ಇಷ್ಟವಾಗುವ ಅಮೃತಾ, ಇನ್ನೂ ನಟನೆಯಲ್ಲಿ ಚೆನ್ನಾಗಿ ಪಳಗಬೇಕು, ಆದರೆ ಈ ಚಿತ್ರ ಅವರಿಗೊಂದು ಸವಾಲಾಗಿದ್ದು, ಆ ಸವಾಲಿನಲ್ಲಿ ಗೆದ್ದಿದ್ದಾರೆ ಎನ್ನಬಹುದು.

ರಂಗಾಯಣ ರಘು ಮತ್ತು ತಾರಾ ಅವರ ಪಾತ್ರ ಮತ್ತು ಅಭಿನಯದ ಬಗ್ಗೆ ಹೆಚ್ಚು ಹೇಳುವ ಅಗತ್ಯವೇ ಇಲ್ಲ. ಇಬ್ಬರೂ ನುರಿತ ಕಲಾವಿದರು, ತಮಗೆ ಪಾತ್ರ ಮತ್ತು ಜವಾಬ್ದಾರಿಯನ್ನು ನಿರೀಕ್ಷೆಗಿಂತಲೂ ಹೆಚ್ಚು ಚೆನ್ನಾಗಿ ನಡೆಸಿಕೊಟ್ಟಿದ್ದಾರೆ. ಚಿತ್ರದಲ್ಲಿ ಸ್ವಲ್ಪವೂ ಸಾಮಾನ್ಯ ಜ್ಞಾನವಿರದಂತೆ ಚಿತ್ರಿಸಿದ ವಾಸುಕಿ ವೈಭವ್ ಅವರ ಟೆಕ್ಕಿ ಪಾತ್ರ ಕಿರಿಕಿರಿ ಮಾಡುತ್ತದೆ. ಕುರಿ ಹಿಕ್ಕೆಗೂ ಕಡಲೇಬೀಜಕ್ಕೂ ವ್ಯತ್ಯಾಸಗೊತ್ತಿರದ ಟೆಕ್ಕಿಗಳನ್ನು ತೋರಿಸುವ ನಿರ್ದೇಶಕರಿಗೆ, ಟೆಕ್ಕಿಗಳ ಮೇಲೆ ಹಗೆ ತೀರಿಸಿಕೊಂಡಂತಾಗಿರಬೇಕು. ಇನ್ನು, ಸಂಗೀತ ನೀಡುವ ವಾಸುಕಿ ಅವರನ್ನು ಒತ್ತಾಯಪೂರ್ವಕವಾಗಿ ನಟನೆಗೆ ದೂಡಿದ್ದಾರೆನೋ ಎಂಬ ಸಂಶಯವೂ ಮೂಡುತ್ತದೆ.

ಟೈಟಲ್ ಸಾಂಗ್‌ನಲ್ಲಿ ಅನಗತ್ಯವಾಗಿ "ಟಗರುಪಲ್ಯ"ವನ್ನು ತುರುಕಿರದಿದ್ದರೆ, ಒಂದು ಹಳ್ಳಿಯಗಾಥೆಯಾಗಿ ನೆನಪಿನಲ್ಲುಳಿಯುತ್ತಿತ್ತೇನೋ. ಆದರೆ, ಚಿತ್ರದುದ್ದಕ್ಕೂ ಸಂಗೀತ ಎಷ್ಟು ಪೇಲವವಾಗಿದೆಯೋ, ಹಾಡುಗಳೂ ಹಾಗೇ ಇವೆ. ಒಂದೇ ಸ್ಥಳದಲ್ಲಿ ನಡೆದದ್ದನ್ನು ಚಿತ್ರೀಕರಿಸಲು ಛಾಯಾಗ್ರಾಹಕರೇನು ಹೆಚ್ಚು ಕಷ್ಟಪಟ್ಟಂತಿಲ್ಲ, ಇದ್ದುದರಲ್ಲಿ ತಮಗೆ ಸಿಕ್ಕ ಅವಕಾಶಕ್ಕೆ ನ್ಯಾಯ ಒದಗಿಸಿದ್ದಾರೆ ಎನ್ನಬಹುದು. ಇನ್ನು ಪೋಷಕ ಪಾತ್ರಗಳಲ್ಲಿ ಬಿರಾದಾರ್ ನಟನೆ ಎದ್ದು ಕಾಣುತ್ತದೆ. ತಮಗೆ ಸಹಜವಲ್ಲದ ಭಾಷೆಯಲ್ಲೂ ಪರಿಪಕ್ವತೆಯನ್ನು ಕಂಡು, ದೊಡ್ಡಪ್ಪನಾಗಿ ನಟಿಸುವ ಅವರ ನಿಲುವು ಇಷ್ಟವಾಗುತ್ತದೆ.  ಇನ್ನು ಹಾಸ್ಯದ ಹೆಸರಿನಲ್ಲಿ ಹೆಂಡ, ಹೆಂಡದ ಮತ್ತಿನಲ್ಲಿ ಹಾಸ್ಯ ಸ್ವಲ್ಪ ಅತಿ ಎನ್ನಿಸಿದರೂ, ಇಂದಿನ ಗ್ರಾಮೀಣ ಚಿತ್ರಣವನ್ನು ಕಟ್ಟಿಕೊಡುವಲ್ಲಿ ಸರಿಯಾಗಿವೆ. ಪೂಜಾರಪ್ಪನ ಪಾತ್ರ, ಬೆಂಗಳೂರಿನ ಸಂಬಂಧಿಕರ ಪಾತ್ರಗಳು, ಸ್ಥಳೀಯ ರೈತಾಪಿ ವರ್ಗದ ಭಕ್ತರ ಪಾತ್ರಗಳು ಎಲ್ಲವೂ ಚೆನ್ನಾಗಿ ಹೊಂದಿಕೊಂಡಿವೆ.

ಕಡಿಮೆ ಬಜೆಟ್ಟಿನಲ್ಲಿ ಮಾಡಿ ಸಂಪೂರ್ಣ ಚಿತ್ರವನ್ನು ನಿರ್ಮಿಸಿದ ತಂಡ, ಈ ಚಿತ್ರ ಬಿಡುಗಡೆಯಾಗಿ ಕರ್ನಾಟಕದುದ್ದಗಲಕ್ಕೂ ಎಲ್ಲ ಕಡೆ ನಡೆಯುತ್ತದೆ ಎಂದು ಅಂದುಕೊಂಡರೆ ಕಷ್ಟ. ಇದು, ಗ್ರಾಮೀಣ ಸೊಗಡಿನ ಚಿತ್ರ. ಅದರಲ್ಲೂ ಒಂದು ತಾಲೂಕಿನ ಭಾಷೆ, ಅದರ ಕ್ಲಿಷ್ಟತೆಯನ್ನು ಅರಗಿಸಿಕೊಂಡಿರುವುದರಿಂದ ಆ ಪ್ರಾಂತ್ಯಕ್ಕೆ ಮಾತ್ರ ಸೀಮಿತವಾಗುವುದೇನೋ ಎನ್ನುವ ಅನುಮಾನ ಮೂಡುತ್ತದೆ. ಹಾಗೆಯೇ, ಬಿಡುಗಡೆಯಾಗಿ, ಒಂದು ವಾರದಲ್ಲೇ ಮೂಡಿಮರೆಯಾಗುವ ಚಿತ್ರಕ್ಕೆ ಇಷ್ಟೊಂದು ಕಷ್ಟಪಡಬೇಕಿತ್ತೇನೋ ಎಂದು ಬೇಸರವೂ ಆಗುತ್ತದೆ. ಈ ಚಿತ್ರವನ್ನು ನಾಟವನ್ನಾಗಿ ಮಾಡಿ ಸಂಬಂಧಪಟ್ಟ ಗ್ರಾಮೀಣ ಭಾಗಗಳಲ್ಲಿ ಪ್ರದರ್ಶಿಸಿದ್ದರೆ ಹೇಗಿರುತ್ತಿತ್ತು, ಅದರಿಂದ ಹೆಚ್ಚಿನ ಪರಿಣಾಮವೇನಾದರೂ ಆಗುತ್ತಿತ್ತೇನೋ ಎಂದು ಯೋಚಿಸಬಹುದು.

ಮುಖ್ಯವಾಗಿ ಕಥೆ ಸಾರುವ ಸಂದೇಶ ಸರಳವಾದುದು. ಹಾಗಿದ್ದಾಗ, ಈ ಚಿತ್ರದ ಸ್ವಾರಸ್ಯ ಮತ್ತು ಶಕ್ತಿ ಎಲ್ಲವೂ ಚಿತ್ರಕತೆ ಮತ್ತು ಅದರ ಭಾಷ್ಯದಲ್ಲಿಯೇ ಇದೆ ಎಂದರೆ ತಪ್ಪಾಗಲಾರದು. ಸದಾ ತಮಗೆ ಗೊತ್ತಿರದ ಸುಖದ ಸಂಪತ್ತಿನ ಮರೀಚಿಕೆಯನ್ನು ಅರಸಿ, ತಮಗೆ ಗೊತ್ತಿರದ ದೂರದ ಬೆಂಗಳೂರಿನ ಗಂಡುಗಳೇ ಬೇಕು ಎಂದು ಪೋಷಕರಿಗೆ ಗಂಟುಬೀಳುವ ಮದುವೆಗೆ ಬಂದ ಹೆಣ್ಣುಮಕ್ಕಳು ಈ ಚಿತ್ರದ ದೆಸೆಯಿಂದಲಾದರೂ ಒಂದಿಷ್ಟು ಪಾಠಗಳನ್ನು ಕಲಿತರೆ ಒಳ್ಳೆಯದು. ತಮ್ಮ ನೆರೆಹೊರೆಯಲ್ಲಿ ತಮ್ಮ ನಿಲುವು-ಅಂತಸ್ತಿಗೆ ತಕ್ಕಂತೆ ಇರುವುದನ್ನು ಆಯ್ದುಕೊಳ್ಳುವುದರ ಮೂಲಕ ಸಹಜವಾಗಿ ಬದುಕಬೇಕು ಎನ್ನುವುದು ಈ ಚಿತ್ರದ ಆಶಯ. ಚಿತ್ರದ ಕೊನೆಯಲ್ಲಿ ಬರುವ ಮಾತು, "...ನೋಡಿ ಮಾಡಿ ಹೆಣ್ ಕೊಡಿ, ಸಂಬಧಗಳಿಗೆ ಬೆಲೆ ಕೊಡಿ..." ಎನ್ನುವುದು ಅಕ್ಷರಶಃ ಸತ್ಯವಾದುದು. ಚಿತ್ರದ ಕೊನೆಯಲ್ಲಿ ತೋರಿಸುವ ಕಲಾವಿದರ ಕುಟುಂಬಗಳ ಗ್ರೂಪ್ ಫ಼ೋಟೋಗಳು, ಹಿನ್ನೆಲೆಯ ಹಾಡಿನ ಆಶಯ ಕುಟುಂಬ ಪ್ರೇಮವನ್ನು ಎತ್ತಿ ತೋರುತ್ತದೆ, ಹಾಗೂ ಕುಟುಂಬಗಳ ಅಗತ್ಯವನ್ನು ಎತ್ತಿ ಹಿಡಿಯುತ್ತವೆ.  ಇಂದಿನ ಒಬ್ಬಂಟಿ ತನದ ಏಕತಾನದ ಪ್ರಪಂಚದಲ್ಲಿ ತಮ್ಮನ್ನು ತಾವೇ ಕಳೆದುಕೊಂಡಿರುವ ನ್ಯೂಕ್ಲಿಯರ್ ಕುಟುಂಬಗಳಿಗೆ ಈ ಹಾಡು ಛಾಟಿಯ ಏಟಿನಂತೆ ಹೊಡೆಯಬಲ್ಲದು ಕೂಡ.

ಇನ್ನು ಚಿತ್ರ ನಿರ್ಮಾಪಕ ಡಾಲಿ ಧನಂಜಯ ಅವರು ಸಾಹಸ ಪ್ರಧಾನ ಚಿತ್ರಗಳಲ್ಲಿ ಹೀರೋ ಆಗಿ ಮಿಂಚಿ-ಮೆರೆಯುವ ಜೊತೆಗೇ ಈ ಗ್ರಾಮೀಣ ಕನ್ನಡ ಚಿತ್ರಕಥನಕ್ಕೆ ಪೋಷಣೆಯನ್ನು ನೀಡಿರುವುದು ಬಹಳ ದೊಡ್ಡ ವಿಚಾರ. ಈ ಕತೆಯನ್ನು ತೆರೆಯ ಮೇಲೆ ತಂದಿರುವುದರ ಮೂಲಕ, ಕನ್ನಡದಲ್ಲಿ ಒಂದು  ಕುಟುಂಬ ಪ್ರಧಾನ ಚಿತ್ರವನ್ನು ಬೆಂಬಲಿಸಿದ ಶ್ರೇಯ ಅವರಿಗೆ ಸಲ್ಲುತ್ತದೆ. ಜೊತೆಗೆ ಅವರು ಚಿತ್ರದ ಹಾಡುಗಳ ರಚನೆಯಲ್ಲೂ ತೊಡಗಿಕೊಂಡಿರುವುದು ಅವರೊಳಗಿನ ಕಲಾವಿದನ ಮನಸ್ಸಿನ ಸಂವೇದನೆಗಳಿಗೆ ಹಿಡಿದ ಕನ್ನಡಿಯಂತಿದೆ. ಹೀಗೆ ಒಂದೇ ದಿನದ ಕತೆಯನ್ನು ಒಂದೇ ಉಸಿರಿನಲ್ಲಿ ಹೇಳಿ ಮುಗಿಸಿ, ಅನೇಕ ಚಿತ್ರ ಮತ್ತು ಚಿತ್ರಣಗಳನ್ನು ಕಣ್ಣಿಗೆ ಕಟ್ಟಿ, ಹಳ್ಳಿಯ ನೇಟಿವ್ ಭಾಷೆಯ ಮಜಬೂತಾದ ಊಟವನ್ನು ಉಣಿಸಿ,  "...ಸಂಬಂಧ ಅನ್ನೋದು ದೊಡ್ದು ಕಣಾ..." ಎನ್ನುತ್ತಲೇ ಚಿತ್ರ ಕೊನೆಯಾಗುತ್ತದೆ.

Sunday, January 14, 2024

ಸ್ವಾತಿ ಮುತ್ತಿನ ಮಳೆ ಹನಿಯೇ

ನಿನ್ನೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ನೋಡೋ ಅವಕಾಶ ಸಿಕ್ಕಿತು. ನಿಧಾನವಾಗಿ ಓಡುವ ಸಿನಿಮಾ, ಕೊನೆಯಲ್ಲಿ ದುರಂತದಲ್ಲಿ ಕೊನೆಗೊಳ್ಳುವ ಎಲ್ಲ ಮುನ್ನೆಚ್ಚರಿಕೆಗಳು ಸಿಕ್ಕಿದ್ದರೂ, ರಾಜ್ ಬಿ. ಶೆಟ್ಟಿಯಲ್ಲಿ ಒಬ್ಬ ಸಿನಿಮಾ ಕಥಾವಸ್ತುವನ್ನು ಸೂಕ್ಷ್ಮವಾಗಿ ಹೆಣೆಯುವ ಕಸಬುಗಾರಿಕೆಯ ಬರಹಗಾರನನ್ನು ಗುರುತಿಸುವ ನಾನು, ಒಂದು ಸುಂದರವಾದ ಕಥಾ ಹಂದರವನ್ನು ನಿರೀಕ್ಷೆಯಲ್ಲಿಟ್ಟುಕೊಂಡಿದ್ದೆ. ಆ ನಿರೀಕ್ಷೆ ಹುಸಿಯಾಗದಂತೆ ಆದದ್ದು ಈ ಸಿನಿಮಾದ ಹೆಚ್ಚುಗಾರಿಕೆ ಮತ್ತು ಅದರ ಗೆಲುವು ಕೂಡ.

ಕೋಟ್ಯಾಂತರ ರೂಪಾಯಿಗಳನ್ನು ಸುರಿದು ಒಂದು ಭವ್ಯವಾದ ಕಥನವನ್ನು ಹೆಣೆದು ಮೇಲೆದ್ದು ಬಂದು ಗೆದ್ದ ಚಿತ್ರಗಳು ಎಷ್ಟೋ, ಸೋತವುಗಳು ಕೂಡ ಅಷ್ಟೇ. ಈ ಎಲ್ಲ ವ್ಯಾವಹಾರಿಕ ಚಿತ್ರ ಪ್ರಪಂಚದಲ್ಲಿ ಅದೊಂದು ದುಡಿಮೆಯ ಮೂಲವಾಗಿ ಗೆದ್ದಾಗ ನಿರ್ಮಾತೃಗಳನ್ನು ಎತ್ತಿಕೊಂಡಾಡುವಷ್ಟೇ ಸಹಜವಾಗಿ, ಬಿದ್ದಾಗ ಹಣ ಹಾಕಿದವರು ಎಲ್ಲವನ್ನು ಕಳೆದುಕೊಳ್ಳುವುದು ಮಾಮೂಲು. ಆದರೆ, ಈ ಸಣ್ಣ ಬಜೆಟ್ಟಿನ ಚಿತ್ರಗಳಲ್ಲಿ ಹಾಗಲ್ಲ. ಇಲ್ಲಿ ಸೋಲು-ಗೆಲುವು, ಹಣ ಮಾಡಬೇಕು ಎನ್ನುವುದಕ್ಕಿಂತ ಮುಖ್ಯವಾಗಿ ನಿರ್ಮಾತೃಗಳಿಗೆ, ತಮ್ಮ ಮನದಾಳದಲ್ಲಿ ಸೂಕ್ಷ್ಮವಾಗಿ ಹುಟ್ಟಿ, ಕತೆಯಾಗಿ ಬೆಳೆದ ಕತೆಗಳ ಮುಖೇನ, ಒಂದು ಸಂದೇಶವನ್ನು ಸಾರುವುದು ಅವುಗಳ ಧ್ಯೇಯವಾಗಿರುತ್ತದೆ. ಈ ನಿಟ್ಟಿನಲ್ಲಿ ಯೋಚಿಸಿದಾಗ, ಈ ಚಿತ್ರ, ರಾಜ್ ಶೆಟ್ಟಿ ಅವರ ಮನದ ಮೂಸೆಯಲ್ಲಿ ಕುದಿದ ಬಂಗಾರದಿಂದ ಮಾಡಿದ ಒಂದು ಸುಂದರವಾದ ಆಭರಣದಂತೆ ಕಂಡು ಬರುತ್ತದೆ.

ಈ ಚಿತ್ರದಲ್ಲಿ ಎಲ್ಲವೂ ನಿಧಾನವೇ. ಕಥಾನಾಯಕಿ ಪ್ರೇರಣ, ಅವಳ ನಡೆ-ನುಡಿ, ಆಡಿದರೆ ದುಡ್ಡು ಖರ್ಚಾಗುವುದೇನೋ ಎನ್ನುವಷ್ಟು ಕಡಿಮೆ ಮಾತುಗಳು. ಹಿನ್ನೆಲೆಯಲ್ಲಿ ಒಂದೇ ಒಂದು ಗುಂಗಿನ ಸಂಗೀತ, ಇವೆಲ್ಲವೂ ನಿಮ್ಮ ತಾಳ್ಮೆಯನ್ನು ಪರೀಕ್ಷಿಸಬಲ್ಲದು. ನಮ್ಮ ವೃತ್ತಿ ಜೀವನದ ಏಳು-ಬೀಳುಗಳು ನಮ್ಮನ್ನು ಪ್ರಬುದ್ಧತೆಯ ವಿಭಿನ್ನ ನೆಲೆಗೆ ಕೊಂಡೊಯ್ಯುವ ಹಲವು ಅಂಶಗಳನ್ನು ಅಭಿವ್ಯಕ್ತಪಡಿಸುವಲ್ಲಿ, ನಾಯಕಿಯದ್ದು ಸಹಜವಾದ ಅಭಿನಯ. ತಮ್ಮ ಇಂಟ್ರೋಶಾಟ್ ಒಂದರಲ್ಲಿಯೇ, ’ಬುಲೆಟ್‌ನಲ್ಲಿ ಬಂದ ಪೇಶೆಂಟ್’ ಆಗಿ ರಾಜ್ ಅವರು ಚಿತ್ರದೊಳಗೆ ತಾವೇ ಒಂದಾಗಿ ಹೋಗಿದ್ದಾರೆ ಎನ್ನುವಷ್ಟು ತನ್ಮಯತೆಯನ್ನು ಪ್ರದರ್ಶಿಸಿದ್ದಾರೆ.

ಒಂದು ಮೊಟ್ಟೆಯ ಕಥೆಯಲ್ಲಿ ನೀವು ರಾಜ್ ಅವರನ್ನು ನೋಡಿದ್ದರೆ, ಇಲ್ಲಿ ಮತ್ತೆ ಆ ವ್ಯಕ್ತಿತ್ವವನ್ನು ಸಮತೋಲಿಸಿಕೊಳ್ಳಬಹುದು. ಚಿತ್ರದಲ್ಲಿ ನಾಯಕನ ಹೆಸರೇ, ಅನಿಕೇತ್, ಮನೆ ಇಲ್ಲದವ... ಅದೂ ಕೂಡ ಈ ಸಂದರ್ಭಕ್ಕೆ ಆತನಿಟ್ಟುಕೊಂಡ ಹೆಸರು ಎಂದು ಗೊತ್ತಾಗುತ್ತದೆ.

ಚಿತ್ರದುದ್ದಕ್ಕೂ ಅನೇಕ ರೂಪಕಗಳಿವೆ, ವಿಡಂಬನೆಗಳಿವೆ. ಅವುಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು ಅಷ್ಟೇ. ಕಸದಂತೆ ದಿನವಿಡೀ ಹೂವು ಉದುರಿಸುವ ನಂದಿಬಟ್ಟಲು ಗಿಡ, ಅದರೆ ಬಗ್ಗೆ ನಿಮ್ಮಇರುವ ನಿಮ್ಮ ಮನದೊಳಗಿನ ಪ್ರತಿಮೆಯನ್ನು ಈ ಸಿನಿಮಾ ಬದಲಾಯಿಸಬಲ್ಲದು. ಹಾಗೆಯೇ, ಹಾಲು ಹಾಕದ ಚಹಾ, ಬೀದಿ ನಾಯಿ ಹೇಗೆ ಸಾಯುತ್ತದೆ ಎನ್ನುವುದು, ಒಂದು ಕೊಳ/ಕೆರೆ ದಿನದ ವಿವಿಧ ಸಮಯದಲ್ಲಿ ಹೇಗಿರುತ್ತದೆ ಎನ್ನುವುದರ ಮೂಲಕ ನಿಮ್ಮ ಚಿಂತನಶೀಲತೆಗೆ ಇಲ್ಲಿ ಹಲವಾರು ವಸ್ತುಗಳು ಸಿಗುವುದಂತೂ ನಿಜ. ಎಲ್ಲದಕ್ಕಿಂತ ಮುಖ್ಯವಾಗಿ, ನಮ್ಮ ಬದುಕಿನ ಆಯಾ ಸಂದರ್ಭಕ್ಕೆ ಇರುವ ಕಷ್ಟದ ಸನ್ನಿವೇಶಗಳನ್ನ ವಾಷಿಂಗ್‌ಮೇಷೀನ್‌ನಲ್ಲಿ ಕೊಳೆ ಬಟ್ಟೆಗಳು ತಿರುವುದರ ಮೂಲಕವೂ ಒಂದು ಸಂದೇಶವನ್ನು ಹೇಗೆ ಹೇಳಬಹುದು ಎನ್ನುವುದು ಸಿನಿಮಾವನ್ನು ಹೇಗೆ ಮಾಡಬಹುದು ಎಂದು ಹಲವು ವಿದ್ಯಾರ್ಥಿಗಳಿಗೆ ಒಂದು ಡಾಕ್ಯುಮೆಂಟ್ ಕೂಡ ಆಗಬಲ್ಲದು.

ಸಿನಿಮಾದಲ್ಲಿ ಅಲ್ಲಲ್ಲಿ ಹೆಣ್ಣೆದ ಸಣ್ಣಪುಟ್ಟ ತಿರುವುಗಳು ಊಟಿಯ ಹೊರಾಂಗಣ ಚಿತ್ರೀಕರಣದಷ್ಟೇ ಸಹಜವಾಗಿ ನಿಮ್ಮನ್ನು ಕಾಡುತ್ತವೆ. ಸಿನಿಮಾದ ಎಲ್ಲ ಪಾತ್ರಗಳೂ ನಿಮ್ಮನ್ನು ಚಿಂತನೆಯ ಒರೆಗೆ ಹಚ್ಚುತ್ತವೆ ಎಂದರೆ ತಪ್ಪಾಗಲಾರದು. ಈ ಚಿತ್ರದಲ್ಲಿ ಪಾತ್ರಗಳನ್ನು ಎಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗಿದೆಯೆಂದರೆ, "ಅವನೇ ಶ್ರೀಮನ್ ನಾರಾಯಣ" ಚಿತ್ರದಲ್ಲಿ ಅಭೀರರ ದೊರೆಯಾಗಿ ಕಠೋರ ಪಾತ್ರದಲ್ಲಿ ಹೆಸರುವಾಸಿಯಾಗಿದ್ದ ಬಾಲಾಜಿ ಮನೋಹರ್, ಈ ಚಿತ್ರದಲ್ಲಿ ಒಂದು ಹಾಸ್‌ಪಿಸ್ ಸೆಂಟರಿನ ಮುಖ್ಯ ಡಾಕ್ಟರ್‌ ಆಗಿ, ಪೇಷಂಟ್‌ಗಳಿಗೆ ಮಾದಕ ದ್ರವ್ಯಗಳ ದಾಸರಾಗುವಂತೆ ಮಾಡದಿರುವುದು ಸರಿ ಎಂಬ ನಿಲುವಿನಿಂದ ತಮ್ಮ ಬಿಗಿ ನಟನೆಯಿಂದ ಅವರಲ್ಲಿನ ಕಲಾವಿದನಿಗೆ ನ್ಯಾಯ ಒದಗಿಸಿದ್ದಾರೆ.

***

ಇತ್ತೀಚಿನ ನೂರು-ಸಾವಿರ ಕೋಟಿ ವ್ಯವಹಾರದ ಉದ್ಯಮದ ಬೆಂಬಲದಲ್ಲಿ ಹುಟ್ಟಿ ಮೂಡಿಬರುವ ಚಿತ್ರಗಳು ತಾಂತ್ರಿಕತೆ, ಸೆಟ್ ಮತ್ತು ವಿಜೃಂಬಣೆಯಲ್ಲಿ ಎಲ್ಲರ ಗಮನ ಸೆಳೆಯಬಲ್ಲವು. ಉದಾಹರಣೆಗೆ, ಕೆಜಿಎಫ಼್ ಚಿತ್ರದಲ್ಲಿ ಉಪಯೋಗಿಸುವ ಸುತ್ತಿಗೆ, ಚೈನು, ಧೂಳು ಮತ್ತಿತರ ವಸ್ತುಗಳು ಒಂದು ವ್ಯವಸ್ಥಿತವಾದ ಕ್ಯಾಮೆರಾ ಕಣ್ಣಿನಲ್ಲಿ ಅದ್ಭುತವಾಗಿ ಹೊರಹೊಮ್ಮ ಬಲ್ಲವು. ಆದರೆ, ಈ ಗ್ರ್ಯಾಂಡ್ ಕಥಾನಾಯಕರಂತೆ ಅದ್ಯಾವ ಅಗಮ್ಯವಾದ ಶಕ್ತಿಯನ್ನೂ ಹೊಂದಿರದ ಒಬ್ಬ ಸಾಮಾನ್ಯ ಮನುಷ್ಯನ ಚಿತ್ರದಲ್ಲಿ ತನ್ಮಯತೆಯನ್ನು ಕಾಣುವ ನಿರೂಪಣೆಯನ್ನು ಮಾಡಿ ನೂರು ನಿಮಿಷಗಳ ಕಮರ್ಶಿಯಲ್ ಸಿನಿಮಾದಲ್ಲೂ ಕಲಾತ್ಮಕತೆಯನ್ನು ಕಾಣುವುದು ಬಹಳ ಕಷ್ಟ.

ನೀವು ತರಾಸು ಅವರ ಕಾದಂಬರಿ ಆಧಾರಿತ "ಬೆಂಕಿಯಬಲೆ" ಸಿನಿಮಾವನ್ನು ನೋಡಿದ್ದರೆ, ಅಲ್ಲಿ ಅನಂತ್‌ನಾಗ್, ಲಕ್ಷ್ಮಿ, ಅಶ್ವಥ್, ತೂಗುದೀಪ ಶ್ರೀನಿವಾಸ್ ಅವರ ಪಾತ್ರಗಳ ಸಂವೇದನಾಶೀಲತೆಯನ್ನು ಅರ್ಥಮಾಡಿಕೊಂಡಿದ್ದರೆ, ರಾಜ್ ಬಿ. ಶೆಟ್ಟಿಯ ಈ ಸಿನಿಮಾ ನಿಮಗೆ ಇಷ್ಟವಾಗುತ್ತದೆ.

ಇದು ನನ್ನ ಅನಿಸಿಕೆ. ಹೆಚ್ಚಿನ ವಿವರಗಳಿಗೆ ಪ್ರಜಾವಾಣಿಯಲ್ಲಿ ಪ್ರಕಟವಾದ ಈ ವಿಮರ್ಶೆಯನ್ನು ನೋಡಿ.