Showing posts with label ಯುದ್ಧ. Show all posts
Showing posts with label ಯುದ್ಧ. Show all posts

Saturday, April 11, 2020

ಇತಿಹಾಸ-ಯುದ್ಧ-ಕಲಿಕೆ

ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ
ಮೃತ್ಯು ಕುಣಿಯುತಲಿಹನು ಕೇಕೆ ಹಾಕುತಲಿ
ಸುತ್ತಿಪುದು ತಲೆಯನನುದಿನದ ಲೋಕದ ವಾರ್ತೆ
ಎತ್ತಲಿದಕೆಲ್ಲ ಕಡೆ? ಮಂಕುತಿಮ್ಮ|| ೧೧

1943ರಲ್ಲಿ ಪ್ರಕಟಗೊಂಡ ಮಂಕುತಿಮ್ಮನ ಕಗ್ಗದ 'ಮಾನವರೋ ದಾನವರೋ?' ಅವತರಣಿಕೆಯಲ್ಲಿ ಬರುವ 11ನೇ ಪದ್ಯ ಇದು.  ಇಂದಿಗೆ 77 ವರ್ಷದ ಮೊದಲೇ ಈ ಪದ್ಯವನ್ನು ಬರೆದಾಗ ಆಗಿನ ಸ್ಥಿತಿಗತಿ ಹೇಗಿರಬಹುದು ಎಂದು ಯೋಚನೆ ಬಂತು.

ನಮಗೆ ಕಷ್ಟ ಬಂದಾಗ ನಮ್ಮ ಮೂಲ ಸಿದ್ಧಾಂತ-ಸಂಸ್ಕಾರಗಳೇ ನಮಗೆ ಆಶ್ರಯವಾಗುತ್ತವಂತೆ.  ಇಂದು ಇಡೀ ವಿಶ್ವವೇ ಸಂಕಷ್ಟದ ಸಮಯದಲ್ಲಿರುವಾಗ ಹಾಗೆಯೇ ಓದ ತೊಡಗಿದ್ದ, ಕನ್ನಡದ ಭಗವದ್ಗೀತೆ, ಕಗ್ಗದ ಪುಟಗಳು ನಿಲ್ಲಲಾರದೇ ಹಾಗೇ ಮುಂದುವರೆಯತೊಡಗಿದವು!

See the source image
(World in 1943 - AlternateHistory.com)

ಆಗೆಲ್ಲ ಎರಡನೇ ಮಹಾಯುದ್ಧ ಎಲ್ಲ ಕಡೆಗೆ ಹರಡಿಕೊಂಡಿತ್ತು.  ಅದೇ ಸಮಯದಲ್ಲಿ ಬ್ರಿಟೀಷ್ ಸಾಮ್ರಾಜ್ಯದ ವಿರುದ್ಧ ಭಾರತದ ಉದ್ದಗಲಕ್ಕೂ ಕೂಡ ಸ್ವಾತ್ರಂತ್ಯದ ಕಿಡಿ ಹೊತ್ತಿ ಪ್ರಜ್ವಾಲಮಾನವಾಗಿ ಉರಿಯುತ್ತಿದ್ದ ಸಮಯ.  1943ರ ಡಿಸೆಂಬರ್ 30 ರಂದು ಸುಭಾಶ್‌ಚಂದ್ರ ಬೋಸ್ ಪೋರ್ಟ್ ಬ್ಲೇರ್‌ನಲ್ಲಿ ಭಾರತದ ಸ್ವಾತಂತ್ರ್ಯ ಪಟವನ್ನು ಹಾರಿಸಿದ್ದು ಬಹಳಷ್ಟು ಸುದ್ದಿ ಮಾಡಿತ್ತು.

ಆಗಿನ ಸಂದರ್ಭದಲ್ಲಿ ಗುಂಡಪ್ಪನವರು ಪ್ರಪಂಚವನ್ನು ಸುತ್ತುವರೆದಿದ್ದ "ದುರ್ದೈವ"ದ ಬಗ್ಗೆ ಬರೆದಿದ್ದು ಇಂದಿನ ಕಾಲಕ್ಕೆ ಹೇಗೆ ಅನ್ವಯವಾಗುತ್ತದೆ ಎಂಬುದನ್ನು ನಾವೆಲ್ಲ ಕಲ್ಪನೆ ಮಾಡಿಕೊಳ್ಳಬಹುದು.  ಇದೇ ಮಾತನ್ನು ನಾಲ್ಕು ತಿಂಗಳ ಹಿಂದೆ ಹೇಳಿದ್ದರೆ ಯಾರೂ ನಂಬುತ್ತಿರಲಿಲ್ಲ.  ಆದರೆ ಈ ಪದ್ಯ ಪ್ರಸಕ್ತ ಸನ್ನಿವೇಶಕ್ಕೆ ಹೇಳಿ ಬರೆಸಿದ ಹಾಗಿದೆ.

***

ಆಗೆಲ್ಲ ಯುದ್ಧಗಳು ಒಂದು ರೀತಿಯ ಲೆವೆಲರುಗಳಾಗಿದ್ದವು.  ಜನರ ದೇಶ-ಭಾಷೆ-ಗಡಿಗಳಿಗಿಂತಲೂ ಹೆಚ್ಚಾಗಿ ಆಗಿನ ಸೈನಿಕರೆಲ್ಲ ಯಾವ ಯಾವ ಬಣಗಳಿಗೆ ಸೇರಿದ್ದರೋ ಅಲ್ಲೆಲ್ಲಾ ಭೀಕರವಾದ ಸಾವು-ನೋವುಗಳಾಗಿವೆ.  ಮಾನವ ಸಂತತಿ ಕಂಡ ಅತ್ಯಂತ ಕೆಟ್ಟ ವರ್ಷಗಳು ಎಂದರೆ ಮೊದಲ ಮತ್ತು ಎರಡನೇ ಮಹಾಯುದ್ಧದ ಕಾಲ (World War I 1914-1918, World War II 1939-1945).  ಒಂದು ಅಂದಾಜಿನ ಪ್ರಕಾರ ಈ ಎರಡು ಯುದ್ಧಗಳಲ್ಲಿ ಸುಮಾರು ಒಂದು ನೂರು ಮಿಲಿಯನ್ ಜನರಿಗಿಂತಲೂ ಹೆಚ್ಚು ಜನರು ಕಾಲವಾದರು.  ಯುದ್ಧ ಮುಗಿದ ನಂತರವೂ ಸಾವು-ನೋವಿನ ಪ್ರಮಾಣ ಮುಂದುವರೆಯುತ್ತಲೇ ಇತ್ತು.


ಮಾನವ ಹುಟ್ಟಿದ-ಹೋರಾಡಿದ-ಸತ್ತ ಎಂದು ಸರಳವಾಗಿ ಹೇಳುವ ಹಾಗೆ, ನಮ್ಮ ಇತಿಹಾಸದ ಉದ್ದಾನುದ್ದಕ್ಕೂ ಹೋರಾಟ-ಹೊಡೆದಾಟವೇ ಎಲ್ಲ ಕಡೆಗೆ ಕಂಡುಬರುತ್ತದೆ.  ಪೈಮೇಟ್‌ಗಳಿಂದ (Primate) ಬಳುವಳಿಯಾಗಿ ಪಡೆದ ಗುಣವಾಗಿ ತಮ್ಮ ತಮ್ಮ ನೆರೆಹೊರೆಯನ್ನು ಕಾಪಾಡಿಕೊಳ್ಳುವುದು ಅದಕ್ಕೋಸ್ಕರ ಹೋರಾಡುವುದು ನಮ್ಮ ಇಂದು-ನಿನ್ನೆಯ ಗುಣವಲ್ಲ, ಮಿಲಿಯನ್‌ಗಟ್ಟಲೆ ವರ್ಷಗಳಿಂದ ನಮ್ಮ ವಂಶವಾಹಿಯಲ್ಲಿದೆ.  ಆದ್ದರಿಂದಲೇ ಅದು ನಮಗೆ ಸಹಜ ಕೂಡ.

***

ಯುದ್ಧದಿಂದೇನು ಕಲಿತಿದ್ದೇವೆ?  ಇತಿಹಾಸದಿಂದೇನು ಕಲಿತಿದ್ದೇವೆ? ನೂರು ವರ್ಷಗಳು ಕಳೆದ ನಂತರ  ಮತ್ತೆ ಎಲ್ಲವೂ ಮರುಕಳಿಸುವ ಹಾಗಿದೆ ಎನ್ನಿಸೋದಿಲ್ಲವೇ?  ಇದು ವಿಶ್ವದ ದೊಡ್ಡ ಶಕ್ತಿಗಳು ಕಟ್ಟಿರುವ ಆಂತರಿಕ ಯುದ್ಧವೋ? ಅಥವಾ ನಿಸರ್ಗ ನಮ್ಮ ಮೇಲೆ ಹೂಡಿರುವ ಯುದ್ಧವೋ? ಇವೆಲ್ಲವನ್ನು ಮತ್ತೆ ನಮ್ಮ ಮುಂದಿನ ಸಂತತಿ ಅವರ ಇತಿಹಾಸದಲ್ಲಿ ಕಂಡುಕೊಳ್ಳುತ್ತಾರೆ!  ಇಂದಿನದನ್ನು ನಾಳಿನವರು ಕಂಡುಕೊಂಡು ಅದರ ಬಗ್ಗೆ ಏನನ್ನೂ ಮಾಡದಿರುವುದೇ ಇತಿಹಾಸ ಎಂಬುದು ಈ ಹೊತ್ತಿನ ತತ್ವ!