Showing posts with label ವಿಶ್ಲೇಷಣೆ. Show all posts
Showing posts with label ವಿಶ್ಲೇಷಣೆ. Show all posts

Tuesday, June 30, 2020

ನಮ್ಮೊಳಗಿನ ಶತ್ರು


ನಮ್ಮೊಳಗಿನ ಶತ್ರು (...why it is not easy to boycott Chinese products)

ಭಾರತದ ಸ್ವಾತಂತ್ರ್ಯ ಸಂಗ್ರಾಮದ ಕಾಲದಿಂದಲೂ ಇಂದಿನವರೆಗೆ "ಸ್ವದೇಶೀ ಬಳಕೆ"ಯನ್ನು ಅನುಮೋದಿಸಲಾಗುತ್ತಿದೆ.  "ಸ್ವದೇಶಿ" ಸ್ವಾಯುತ್ತತೆ, ಸ್ವಾವಲಂಬನೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿರದೇ ಇತ್ತೀಚೆಗೆ ಅನೇಕ ರಾಷ್ಟ್ರಗಳು ಈ ನಿಟ್ಟಿನಲ್ಲಿ ಯೋಚಿಸುವುದನ್ನು ಕಾಣಬಹುದು.  ಹೊರಗಿನವರು ಬಂದು ನಮ್ಮ jobs ಗಳನ್ನು ಕಸಿದುಕೊಳ್ಳುತ್ತಾರೆ ಎನ್ನುವುದರಿಂದ ಹಿಡಿದು, Make America Great Again! ಎನ್ನುವ ಕ್ಯಾಂಪೇನಿನ ಮೂಲದಲ್ಲಿ ಸ್ವದೇಶೀ ಸ್ವಾವಲಂಬನೆಯ ಅಗತ್ಯದ ಬಗ್ಗೆ ಚಿಂತನೆ ಎದ್ದು ಕಾಣುತ್ತದೆ.  ಯಾರು ಸ್ವದೇಶಿಗಳು, ಯಾರು ವಿದೇಶಿಗಳು, ಯಾವುದು "ನಮ್ಮ" ದೇಶದಲ್ಲೇ ಉತ್ಪಾದಿತವಾದದ್ದು, ಯಾವುದು ಹೊರಗಿನಿಂದ ಬಂದಿದ್ದು ಎಂಬುದನ್ನು ಕುರಿತು ಯೋಚಿಸಿದಾಗ, ಹೊರಗಿನವರನ್ನು "ಶತ್ರು"ಗಳು ಎಂದು ಕಂಡುಕೊಂಡಾಗ ಆ ಶತ್ರುಗಳು ನಮ್ಮೊಳಗೆ ಎಷ್ಟರ ಮಟ್ಟಿಗೆ ವಿಲೀನವಾಗಿಬಿಟ್ಟಿವೆಯೆಂದರೆ ಅದನ್ನು ಬೇರ್ಪಡಿಸುವುದೂ ಅಷ್ಟೇ ಕ್ಲಿಷ್ಟಕರವಾಗಿದೆ.

***

ನಾಲ್ಕು ಟ್ರಿಲಿಯನ್ ಡಾಲರಿಗಿಂತಲೂ ಹೆಚ್ಚು ವಸ್ತುಗಳನ್ನು ಉತ್ಪಾದಿಸುತ್ತಿರುವ ಚೀನಾ, ಇಡೀ ಪ್ರಪಂಚದ ಎಲ್ಲ ದೇಶಗಳಿಗೂ ತನ್ನ ವಸ್ತುಗಳನ್ನು ರವಾನಿಸುವ ಸಾಮರ್ಥ್ಯವನ್ನು ಹೊಂದಿದ್ದು, ಎಲ್ಲ ರಾಷ್ಟ್ರಗಳಿಗಿಂತ ಅಗ್ರಗಣ್ಯ ಸ್ಥಾನದಲ್ಲಿದೆ.  ಚೀನಾ ದೇಶವನ್ನು ವಿಶ್ವದ ಮ್ಯಾನುಫ್ಯಾಕ್ಚರಿಂಗ್ ದೇಶವೆಂದು ಸುಲಭವಾಗಿ ಕರೆಯಬಹುದು.  USA ಮುಖ್ಯವಾಗಿ ಯುದ್ಧ ಸಾಮಗ್ರಿಗಳ ತಯಾರಿಕೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ 2.3 ಟ್ರಿಲಿಯನ್ ಡಾಲರ್‌ ಉತ್ಪನ್ನದಿಂದ  ನಂತರದ ಸ್ಥಾನದಲ್ಲಿ ನಿಲ್ಲುತ್ತದೆ.  ಒಂದು ಟ್ರಿಲಿಯನ್ ಉತ್ಪನ್ನದಿಂದ ಜಪಾನ್ ಮೂರನೇ ಸ್ಥಾನದಲ್ಲಿದ್ದರೆ ಕೇವಲ 412 ಬಿಲಿಯನ್ ಡಾಲರ್ ಉತ್ಪನ್ನದಿಂದ ಭಾರತ ದಕ್ಷಿಣ ಕೊರಿಯಾಕ್ಕಿಂತಲೂ ಕೆಳಗಿನ ಸ್ಥಾನದಲ್ಲಿ ತನ್ನನ್ನು ತಾನು ಕಂಡುಕೊಂಡಿದೆ.

ಇದು ಕೇವಲ ಭೌತಿಕ ವಸ್ತುಗಳ ಉತ್ಪಾದನೆ ಮತ್ತು ಆಮದು-ರಫ್ತಿನ ವಿಚಾರವಾಗಿರಬಹುದು.  ಇದರ ಜೊತೆಯಲ್ಲಿ ತಂತ್ರಜ್ಞಾನದ ಕೊಡು ತೆಗೆದುಕೊಳ್ಳುವಿಕೆ ಮತ್ತು ಬಳಸುವಿಕೆಯೂ ತಳುಕು ಹಾಕಿಕೊಂಡಿದೆ.  ಉದಾಹರಣೆಗೆ, ಭಾರತದಲ್ಲಿ ಜನರು ಬಳಸುವ ಮೈಕ್ರೋಸಾಫ್ಟ್ ಲೈಸನ್ಸ್ ಇರುವ ಪ್ರಾಡಕ್ಟ್‌ಗಳನ್ನು USA ಲೆಕ್ಕಕ್ಕೆ ಹಾಕಿಕೊಳ್ಳೋಣ.  ಅದೇ ರೀತಿ Boeing, Apple, Amazon ಮೊದಲಾದ ಕಂಪನಿಗಳ ಉತ್ಪನ್ನದ ಬಳಕೆಯ "ಕ್ರೆಡಿಟ್" ಅನ್ನು ಆಯಾ ಕಂಪನಿಗಳು ಹುಟ್ಟಿದ ದೇಶಗಳಿಗೆ ಕೊಡೋಣ.  ಹೀಗೆ ಮಾಡುವುದರಿಂದ ಪ್ರತಿಯೊಂದು ರಾಷ್ಟ್ರವೂ ಇನ್ನೊಂದು ರಾಷ್ಟ್ರದ ಉತ್ಪನ್ನವನ್ನು (product) ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಹೇಗೆ ಬಳಸುತ್ತಿದೆ ಎಂದು ಗೊತ್ತಾಗುತ್ತದೆ.  ಮೇಲ್ಮಟ್ಟದಲ್ಲಿ, ಇದು ಅಷ್ಟೊಂದು ಸುಲಭವಾಗಿ ಗೋಚರಿಸಿದರೂ, ಆಳದಲ್ಲಿ ಆಯಾ ಕಂಪನಿಗೆ ಸೇರಿಕೊಂಡ ಅನೇಕ ಎಂಟಿಟಿಗಳು ಅದೇ ಕಂಪನಿಯ ಹೆಸರಿನ subsidiary ಆಗಿ ಹಲವಾರು ದೇಶಗಳಲ್ಲಿ ನೋಂದಾವಣೆ ಮಾಡಿಕೊಂಡು ಅಲ್ಲಿಯ ಟ್ಯಾಕ್ಸ್ ಅನ್ನು ಕೊಡುವುದು ಅಥವಾ ಕೊಡದಿರುವುದು - ಟ್ಯಾಕ್ಸ್ ಸಂಬಂಧಿ ಅನುಕೂಲವಾಗಿ - ಎದ್ದು ಕಾಣುತ್ತದೆ.  ಆದ್ದರಿಂದ, ಒಂದು ಕಂಪನಿಯ ವಾರಸುದಾರಿಕೆ ಮತ್ತು ಅದಕ್ಕೆ ಹೊಂದಿಕೊಳ್ಳುವಂತೆ ಒಂದು ದೇಶದ ಅಸ್ತಿತ್ವವನ್ನು ಹೀಗೇ ಇದೆ ಎಂದು ಅಷ್ಟು ಸುಲಭವಾಗಿ ವ್ಯಾಖ್ಯಾನಿಸಲಾಗದು.

ಆದರೆ, ಇದೇ ಸೀಳು ನೋಟವನ್ನು ಇನ್ನೂ focus ಮಾಡಿ ನೋಡಿದಾಗ ಹಲವಾರು ಗೊಂದಲ ಅಥವಾ ಜಟಿಲತೆಯ (complications) ಅರಿವಾಗುತ್ತದೆ.  ಯಾವುದೇ ಕಂಪನಿಯ ನಿಜವಾದ ಮಾಲೀಕ/ಮಾಲೀಕರು ಎಂದರೆ ಆಯಾ ಕಂಪನಿಯ ಶೇರ್ ಹೋಲ್ಡರ್‌ಗಳು.  ಅಂತೆಯೇ ಒಂದು ಕಂಪನಿಯ ಶೇರುಗಳನ್ನು ಓಪನ್ ಮಾರುಕಟ್ಟೆಯಲ್ಲಿ ಯಾರು ಬೇಕಾದರೂ ಖರೀದಿಸಬಹುದು.  ನಾವು ಅಮೇರಿಕದಲ್ಲಿ ಕುಳಿತು ಚೀನಾ ದೇಶದ ಕಂಪನಿಯ ಎಕ್ಸ್‌ಚೇಂಜ್‌ನಲ್ಲಿ ಬಿಕರಿಯಾಗುವ ಕಂಪನಿಯ ಶೇರುಗಳನ್ನು ADR (American Depository Receipt) ವ್ಯಾಪ್ತಿಯಲ್ಲಿ ಖರೀದಿಸುತ್ತೇವೆ.  ಅಂತೆಯೇ ಚೀನಾದವರೂ ಸಹ ಬೇರೆ ದೇಶದ ಕಂಪನಿಗಳ ಶೇರುಗಳನ್ನು ಖರೀದಿಸುತ್ತಾರೆ.
ಇದೇ ವಿಶ್ಲೇಷಣೆಯನ್ನು ಇನ್ನೂ ತೀಕ್ಷ್ಣವಾಗಿಸಿದರೆ, ಒಂದು ದೇಶದ ಸರ್ಕಾರ ಅಥವಾ ಸರ್ವಾಧಿಕಾರಿ ರಾಜಸತ್ತೆ ಮತ್ತೊಂದು ದೇಶದ ಹೂಡಿಕೆಯ(ways to invest) ಮಾರ್ಗಗಳನ್ನು treasury, bonds, stocks, derivatives, futures, real estate, fixed assets ಹೀಗೆ ಇನ್ನೂ ಅನೇಕಾನೇಕ ಸಾಧನಗಳಲ್ಲಿ ತೊಡಗಿಸಬಹುದು.  ಉದಾಹರಣೆಗೆ, ಚೀನಾ ದೇಶದ ಪ್ರಜೆ, ತನ್ನ ಕಂಪನಿಯ ಮುಖೇನ ನ್ಯೂ ಯಾರ್ಕ್‌ನಲ್ಲಿನ ತುಂಡು ಭೂಮಿಯನ್ನು ಖರೀದಿಸಬಹುದು.  ಅದೇ ರೀತಿ, ಚೀನಾ ದೇಶದ ಸರ್ಕಾರ ತನ್ನ ಹೂಡಿಕೆಗಳನ್ನು (for hedging or for growth), ಅಮೇರಿಕದ treasury billsಗಳ ಮೇಲೆ ಮಾಡಬಹುದು.  ಹೀಗೆ ಯೋಚಿಸುತ್ತಾ ಹೋದಾಗಲೆಲ್ಲಾ ಯಾರು ಯಾವುದನ್ನು ಖರೀದಿಸುತ್ತಾರೆ, ಬಿಡುತ್ತಾರೆ, ಯಾರಿಗೆ ಎಷ್ಟು ಪರ್ಸೆಂಟ್ ಯಾವುದರ ಮೇಲೆ ownership ಇದೆ ಎಂಬುದನ್ನು ಯೋಚಿಸಿದಂತೆ ನಾವು ನಿಜವಾಗಿಯೂ ವಿಶ್ವ ಮಾನವರಾಗಿ ಕಂಡುಬರುತ್ತೇವೆ!
ಭಾರತದಲ್ಲಿ FDI (Foreign Direct Investment) ಅನ್ನೋ ಹೆಸರಿನಲ್ಲಿ ನಾವು ಹೊರ ದೇಶಗಳಿಗೆ ನಮ್ಮ ದೇಶದ "ಆಗುಹೋಗು"ಗಳಲ್ಲಿ ಹೂಡಿಕೆ ಮಾಡಲು ಅನುಮೋದಿಸಿದೆವು.  ಹೀಗೆ ಭಾರತಕ್ಕೆ ಹರಿದು ಬಂದ ಹಣವುಳ್ಳ ದೇಶಗಳ ಮುಂಚೂಣಿಯಲ್ಲಿ ಅಮೇರಿಕ, ಚೀನಾ, ರಷ್ಯಾ, ಜಪಾನ್, ಸೌದಿ, ಮೊದಲಾದ ದೇಶಗಳಿವೆ.  ಇದ್ದುದರಲ್ಲಿ, ಕನ್ಸೂಮರ್ ಎಲೆಕ್ಟ್ರಾನಿಕ್ಸ್‌ನಿಂದ ಹಿಡಿದು-ರೈತಾಪಿ ಮಿಷೀನುಗಳವರೆಗೆ, ಆಟದ ಸಾಮಾನಿನಿಂದ ಹಿಡಿದು ಟೆಲಿಫೋನ್ ತಂತ್ರಜ್ಞಾನದ ವರೆಗೆ, ಹೀಗೆ ಅನೇಕ ಕಡೆ ವಿದೇಶಿ ಬಂಡವಾಳ ಹೂಡಿಕೆಯಾಗಿದೆ.  ಅದರಲ್ಲಿ ಚೀನಾದ ಸಿಂಹ ಪಾಲು ಇದೆ.  ನಾವೆಲ್ಲ Hero ಸೈಕಲ್ಲುಗಳನ್ನು ಓಡಿಸುತ್ತಿದ್ದಾಗ, ಜಪಾನ್ ನವರು ಬಂದು Hero ಕಂಪನಿಯ ಜೊತೆ ಸಂಬಂಧ ಕುದುರಿಸಿಕೊಂಡು Hero-Honda ಎಂಬ ಮೋಟಾರು ಬೈಕುಗಳನ್ನು ಹೊರ ತಂದರಲ್ಲ! ಹಾಗೆ ವಿದೇಶಿ ಹೂಡಿಕೆ ನೀವು ಬೇಡವೆಂದರೂ ನಮ್ಮ ಪಂಚಭೂತಗಳಲ್ಲಿ ಈಗಾಗಲೇ ಸೇರಿ ಹೋಗಿದೆ.

***
ಹಾಗಾದರೆ, ಈ ವಿದೇಶಿ ಕಂಪನಿಗಳ ನಿಜವಾದ (ಮಾಲಿಕರು) ಓನರುಗಳು ಯಾರು?  ವಿದೇಶಿ ಹೂಡಿಕೆಯಿಂದ ಒಂದು ದೇಶದ ಸ್ವಾಯುತ್ತತೆಗೆ ಭಂಗ ಬರುತ್ತದೆಯೇ? ವಿದೇಶಿ ಹೂಡಿಕೆ ಇಲ್ಲದೇ ಸ್ವಾವಲಂಬನೆಯನ್ನು ನಂಬಿಕೊಂಡೇ ಒಂದು ದೇಶದ (ಮತ್ತು ಅದರ ನಿವಾಸಿಗಳು) ಬೆಳೆಯಲು ಸಾಧ್ಯವೇ? ಚೀನಾ ದೇಶದಲ್ಲಿ ತಯಾರು ಮಾಡಿದ ಪ್ರಾಡಕ್ಟ್‌ಗಳನ್ನು ನಮ್ಮಲ್ಲಿ ನಿಜವಾಗಿಯೂ ಬ್ಯಾನ್ ಮಾಡಿ ಬದುಕಲು ಸಾಧ್ಯವೇ? ಒಂದು ವೇಳೆ,  ನಮ್ಮ ನಡೆಗೆ ಪ್ರತಿಯಾಗಿ ವಿದೇಶಿಗಳು ತಮ್ಮ ಹಣದ ಹೂಡಿಕೆಯಲ್ಲಿ ವ್ಯತ್ಯಯ ಉಂಟು ಮಾಡಿದರೆ, ಅಥವಾ ತಮ್ಮ "ಶೇರ್"ಗಳನ್ನು "ಸೆಲ್" ಮಾಡಿದರೆ ಅದರಿಂದ ನಮ್ಮ ಎಕಾನಮಿ ಮೇಲೆ ಯಾವ ರೀತಿಯ ಪ್ರಭಾವವಾಗುತ್ತದೆ?  ಹೆಚ್ಚುತ್ತಿರುವ ಗ್ಲೋಬಲೈಜೇಷನ್ ನಮ್ಮ "ವಸುಧೈವ ಕುಟುಂಬಕಂ" ಅನ್ನುವ ತತ್ವವನ್ನು ಅನುಮೋದಿಸುತ್ತದೆಯೋ ಅಥವಾ ವಿರೋಧಿಸುತ್ತದೆಯೋ?  ವಿಶ್ವವೇ ಒಂದು ಚಿಕ್ಕ ಹಳ್ಳಿಯಾಗಿ ಎಲ್ಲರಿಗೂ ಎಲ್ಲದರ access ಇರುವಾಗ ಒಂದು ದೇಶ ತನ್ನ ಬಾರ್ಡರ್ ವಿವಾದವನ್ನು ಪ್ರತಿಪಾದಿಸುವುದಕ್ಕೋಸ್ಕರ "ದೇಶೀಯ ವಸ್ತುಗಳನ್ನು ಬಳಸಿ, ಚೈನೀಸ್ ವಸ್ತುಗಳನ್ನು ತಿರಸ್ಕರಿಸಿ" ಎಂದು ಸ್ಲೋಗನ್ ಕೊಡಲು ಸಾಧ್ಯವೇ?  ಒಂದು ವೇಳೆ ಹಾಗೆ ಮಾಡಿದರೆ ಅದರ ಪರಿಣಾಮಗಳೇನಾಗಬಹುದು? ಇಂದು ಮಿತ್ರ ದೇಶವಾಗಿರುವವರನ್ನು ಒಳಕರೆದು ಮಣೆ ಹಾಕಿ ಕೂರಿಸಿಕೊಂಡ ಮೇಲೆ, ಕಾಲಾನಂತರ ಅವರು ತಿರುಗಿ ಬಿದ್ದರೆ, ಆಯಾ ಸಂಬಂಧಗಳನ್ನು ಮುರಿದುಕೊಳ್ಳುವುದು ಮತ್ತು ಕಳೆದುಕೊಂಡ ಸಂಪನ್ಮೂಲದ ಕೊಂಡಿಯನ್ನು ಇನ್ನೊಂದು ದೇಶದ ಜೊತೆಗೆ ಬೆಳೆಸಿಕೊಳ್ಳುವುದು ಅಷ್ಟು ಸುಲಭದ ವಿಚಾರವೇ?

***
ಹೀಗೆ, ಧೀರ್ಘವಾಗಿ ಯೋಚಿಸಿದಂತೆಲ್ಲ, ಪ್ರಶ್ನೆಗಳ ಮೇಲೆ ಪ್ರಶ್ನೆಗಳು ಹುಟ್ಟುತ್ತವೆ.  ನಮ್ಮ "ದೇಶಿ-ಸ್ವದೇಶಿ" ಎನ್ನುವ ನಿಲುವು ಒಂದು ರೀತಿಯ ಭಾವನಾತ್ಮಕ ಉದ್ವಿಗ್ನತೆಯಾಗಿ ಗೋಚರಿಸುತ್ತದೆಯೇ ವಿನಾ ಅರ್ಥಶಾಸ್ತ್ರದ ಯಾವುದೋ ಪುಸ್ತಕದ ಅಧ್ಯಾಯದಂತಲ್ಲ.  ನಮಗೆ ಎದುರಾಗಿರುವ ಶತ್ರು ಒಂದು ರೀತಿಯ ಕೊರೋನಾ ವೈರಸ್ಸಿನ ಹಾಗೆ ಗಾಳಿಯಲ್ಲಿ ವ್ಯಾಪಿಸಿಕೊಂಡು ತನ್ನ ಕಬಂಧ ಬಾಹುಗಳನ್ನು ದಿನೇದಿನೇ ಹರಡಿಕೊಳ್ಳುತ್ತಿರುವಾಗ ಈ ಎಲ್ಲ ವಿದೇಶಿ ಬಂಡವಾಳವನ್ನು "ಸ್ವದೇಶಿ ಬಳಸಿ" ಎನ್ನುವ ಒಂದು ಹೇಳಿಕೆಯನ್ನು ಹೇಳಿ ಪರಿಹರಿಸುತ್ತೇವೆ ಎನ್ನುವುದು ಹಾಸ್ಯಾಸ್ಪದವಾಗುತ್ತದೆ.  ಇಡೀ ಉತ್ತರ ಅಮೇರಿಕವನ್ನೇ ಅಲುಗಾಡಿಸುವಷ್ಟು ಸಾಮರ್ಥ್ಯವನ್ನು ಹೊಂದಿರುವ ಚೀನಾ ದೇಶದವರನ್ನು ನಮ್ಮ ದೇಶದ ಎಮೋಷನಲ್ ಮುತ್ಸದ್ದಿಗಳು ಇನ್ನಾದರೂ ಹಗುರವಾಗಿ ತೆಗೆದುಕೊಳ್ಳದಿದ್ದರೆ ಸಾಕು!

ನಾವು ಭಾವಜೀವಿಗಳು.  ಕ್ರೂರ ಪಾಕಿಸ್ತಾನದವರಿಗೆ ನಾವು ಭಾವನಾತ್ಮಕವಾಗಿ ಉತ್ತರಕೊಡುತ್ತೇವೆ.  ಮುಳ್ಳನ್ನು ಮುಳ್ಳಿನಿಂದ ತೆಗಿ ಎನ್ನುವ ಗಾದೆಯನ್ನು ಮರೆತು ನಮ್ಮ ಹೃದಯ ವಿಶಾಲತೆಯನ್ನು ಮೆರೆಯುತ್ತೇವೆ.  ಅದೇ ರೀತಿ ಉತ್ತರದ ಒಂದು ಆಯಕಟ್ಟಿನ ಜಾಗಕ್ಕೋಸ್ಕರ (strategic place) ಚೀನಾದವರು ಹೊಂಚು ಹಾಕಿ ನಮ್ಮ ಸೈನಿಕರನ್ನು ಮುಳ್ಳು-ಮೊಳೆಕಟ್ಟಿದ ಕಬ್ಬಿಣದ ರಾಡುಗಳಿಂದ ಹೊಡೆದಾಕ್ಷಣ ನಮ್ಮ emotional response ಅನ್ನು ಜಾಗರೂಕಗೊಳಿಸಿಕೊಂಡು ಅನೇಕ (ಸಾಮಾಜಿಕ) ಮಾಧ್ಯಮಗಳಲ್ಲಿ ದೊಡ್ಡ ಭಾಷಣವನ್ನು ಬಿಗಿಯುತ್ತೇವೆ.  ಆದರೆ, ಕಳೆದ 25 ವರ್ಷಗಳಿಂದ ಚೈನಾದವರು ನಿಧಾನವಾಗಿ ಅಮೇರಿಕ ಮತ್ತಿತರ ದೇಶಗಳಿಂದ ಮ್ಯಾನುಫ್ಯಾಕ್ಚರಿಂಗ್ ವ್ಯವಸ್ಥೆಯನ್ನು ಅಧ್ಯಯನ ಮಾಡಿ ಈಗ ಇಡೀ ವಿಶ್ವವೇ ತಲೆತಗ್ಗಿಸಿ ನಿಲ್ಲುವಂತ ತಮ್ಮದೇ ಆದ ಒಂದು ವ್ಯವಸ್ಥೆಯನ್ನು ರೂಪಿಸಿಕೊಂಡರು.  ಹಾಗೆಯೇ, ಉತ್ತರದ ಆಯಕಟ್ಟಿನ ಜಾಗದ ಹೋರಾಟದ ಹಿಂದೆಯೂ ಅವರದ್ದೇ ಆಳವಾದ ಒಂದು ಚಿಂತನೆ ಇದೆ.  ಈ "ಸಿಲ್ಕ್ ರೋಡಿ"ನ ಮಾಲಿಕತ್ವ ಅವರಿಗೆ ಬೇಕಾಗಿದೆ.  ಹಣದ ಆಮಿಶ ಒಡ್ಡಿ ಪಾಕಿಸ್ತಾನಕ್ಕೆ ನೆರವಾಗಿ ಭಾರತದ ಮೇಲೆ ಛೂ ಬಿಟ್ಟು, ಭಾರತ ಭೂಮಿಯನ್ನು ಅಸ್ಥಿರವಾಗಿಟ್ಟರೆ ಅವರ ಬೇಳೆಕಾಳುಗಳು ಸಲೀಸಾಗಿ ಬೇಯುತ್ತವೆ.  ದಿನೇದಿನೇ ಹೆಚ್ಚುವ ಜನಸಂಖ್ಯೆಯ ಹೊಟ್ಟೆ ತುಂಬುವುದು ಭಾರತದ ಸಂಕಷ್ಟವಾಗಿರುವಾಗ ಭಾರತದಲ್ಲಿ ತಯಾರಾದ ಯಾವುದೇ ಉತ್ಪನ್ನಗಳ ಮುಖದ ಮೇಲೆ ಸೆಡ್ಡು ಹೊಡೆಯುವ ಪ್ರಾಡಕ್ಟ್ ಅನ್ನು ಕಡಿಮೆ ಬೆಲೆಗೆ ತಯಾರಿಸಿ, ಬಿಡುಗಡೆ ಮಾಡಿ, ಮಾರುವ ದಕ್ಷತೆ ಇದೆ.  ಈಗಾಗಲೇ ನಮ್ಮ ಜನಜೀವನದಲ್ಲಿ ಸೇರಿಕೊಂಡ ಚೀನಾದ ಉತ್ಪನ್ನಗಳನ್ನು ಅಷ್ಟು ಸುಲಭವಾಗಿ ತಳ್ಳಿ ಹಾಕಲಾಗದು.  ಒಳ್ಳೆಯದೋ ಕೆಟ್ಟದ್ದೋ ಒಂದು ವಸ್ತುವನ್ನು displace ಮಾಡುವುದಾದರೆ, ಅದನ್ನು ಯಾವುದರಿಂದ ಮಾಡುತ್ತೇವೆ ಅನ್ನುವುದು ಮುಖ್ಯವಾಗುತ್ತದೆ.  ಹತ್ತು ರೂಪಾಯಿಗೆ ದೊರೆಯುವ ಚೀನಾದ ವಸ್ತುವನ್ನು ನೂರು ರೂಪಾಯಿಗೆ ಸಿಗುವ ಭಾರತದಲ್ಲಿ ತಯಾರು ಮಾಡಿದ ವಸ್ತುವಿನಿಂದ displace ಮಾಡಲಾಗದು... ಯೋಚನೆ ಮಾಡಿ!

Monday, June 01, 2020

ಕೆಲಸಕ್ಕೆ ಜನರಿಲ್ಲ!



ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ತುಲನೆ ಮಾಡಿ ನೋಡಿದಾಗ, ಹಿಂದಿನ ತಲೆಮಾರಿನವರು ಕಷ್ಟ ಜೀವಿಗಳು ಅನ್ನಿಸೋದು ಸಹಜ.  ತಂತ್ರಜ್ಞಾನ ದಿನದಿಂದ ದಿನಕ್ಕೆ ಬೆಳೆದ ಹಾಗೆ ನಾಗರೀಕತೆ, ನಗರೀಕರಣ, ಜನರ ವಲಸೆ ಮೊದಲಾದವು ಬದಲಾಗುತ್ತಿರುತ್ತವೆ.  ನಮ್ಮ ಪೂರ್ವಜರು ತಮ್ಮ ಇಡೀ ಜೀವಮಾನದಲ್ಲಿ ಪ್ರಯಾಣಿಸಿದ ದೂರವನ್ನು ನಾವು ಒಂದು ತಿಂಗಳಲ್ಲೇ ಪ್ರಯಾಣಿಸಿ ಅವರನ್ನು ಮೀರಿಸಬಲ್ಲೆವು.  ಆದರೆ,  ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ಹೆಚ್ಚಾಗುತ್ತಿರುವ ಅಂತರವನ್ನು ಗ್ರಹಿಸಲು ಈ ಕೆಳಗಿನ ಎರಡು ಸೂಕ್ಷ್ಮಗಳನ್ನು ಗಮನಿಸಿ:


1. ಹಿಂದೆಲ್ಲ ಕೆಲಸಗಾರರು ಸಿಗುತ್ತಿದ್ದರು, ಇಂದು ಕೆಲಸಗಾರರು ಸಿಗುವುದಿಲ್ಲ.  ಸಿಕ್ಕರೂ ಸಹ "ನಿಯತ್ತಿ"ನಿಂದ ಮೈ ಬಗ್ಗಿಸಿ ದುಡಿಯುವುದಿಲ್ಲ.  ಕಡಿಮೆ ಕೆಲಸಕ್ಕೆ ಹೆಚ್ಚು ಬೆಲೆ ಕೇಳುತ್ತಾರೆ.

2.  ಎಲ್ಲರೂ ಓದಿದವರಾಗಿ ಮೇಲ್ಮಟ್ಟದ ಕೆಲಸಗಳನ್ನೇ ಯಾಚಿಸುವುದಾದರೆ, ಉಳಿದೆಲ್ಲ ಕೆಲಸಗಳನ್ನು ಯಾರು ಮಾಡುವವರು? ತೋಟ-ಗದ್ದೆಗಳಲ್ಲಿ ಕೆಲಸ ಮಾಡಲು, ರಸ್ತೆ ಗುಡಿಸಲು, ನೆಲ ಒರೆಸಲು, ಬಟ್ಟೆ ಒಗೆಯಲು, ಮನೆ ಕಟ್ಟಲು, ಮರಳು ಹೊರಲು, ಕಟ್ಟಿಗೆ ಒಡೆಯಲು, ಸುಣ್ಣ-ಬಣ್ಣ ಹಚ್ಚಲು, ತೆಂಗಿನಕಾಯಿ ಕೊಯ್ಯಲು, ಮನೆ ಕೆಲಸ ಮಾಡಲು... ಕೆಲಸಕ್ಕೆ ಯಾರು ಸಿಗುತ್ತಾರೆ?

***



ಕಳೆದ ಇಪ್ಪತ್ತು ವರ್ಷಗಳಲ್ಲಿ ಯು.ಎಸ್.ಎ. ಒಂದು ದೇಶದಲ್ಲಿಯೇ (ಒಂದು ಅಧ್ಯಯನದ ಪ್ರಕಾರ) ಸುಮಾರು 50 ಲಕ್ಷ ಮ್ಯಾನ್ಯುಫ್ಯಾಕ್ಚರಿಂಗ್ ಕೆಲಸಗಳು ಕಾಣೆಯಾದವು.  60 ರ ದಶಕದಲ್ಲಿ ಸುಮಾರು ನೂರಕ್ಕೆ 25% ಜನರು ಮ್ಯಾನ್ಯುಫ್ಯಾಕ್ಚರಿಂಗ್‌ನಲ್ಲಿ ತೊಡಗಿಕೊಂಡಿದ್ದರೆ, ಇಂದು ಅದರ ಪ್ರಮಾಣ ಸುಮಾರು 5% ಮಟ್ಟಿಗೆ ಇಳಿದಿದೆ.  ಒಂದು ಕಾಲದಲ್ಲಿ Ford ಅಂಥ ಕಂಪನಿಗಳು ತಮ್ಮ supply chainನಲ್ಲಿ ಬರುವ ಎಲ್ಲ ವಿಧವಾದ ಪರಿಕರ/ವಸ್ತುಗಳನ್ನು ತಮ್ಮಷ್ಟಕ್ಕೆ ತಾವೇ ತಯಾರಿಸುತ್ತಿದ್ದರು.  ಆದರೆ, ಈಗ ಅವರ ಮುಖ್ಯವಾದ components (such as engine parts) ಸಹ ಬೇರೆ ಕಡೆಯಿಂದ ಆಮದಾಗುವ ಪರಿಸ್ಥಿತಿ ಇದೆ.

ಮ್ಯಾನ್ಯುಫ್ಯಾಕ್ಚರಿಂಗ್ ವಲಯದಲ್ಲಿರುವ ಕೆಲಸಗಾರರು ಅಮೇರಿಕದಲ್ಲಿ ಒಂದು ಘಂಟೆಗೆ 20 ಡಾಲರ್‌ ಅಷ್ಟುಸಂಬಳದಲ್ಲಿ ಕೆಲಸ ಮಾಡುವ ಸ್ಥಿತಿ ಇದೆ.  ಇದು, ಇಲ್ಲಿನ ಕನಿಷ್ಠ ವೇತನದ ಮೂರು ಪಟ್ಟು ಹೆಚ್ಚು ಎಂದುಕೊಳ್ಳಬಹುದು.  ಅದೇ ಗುಣಮಟ್ಟದ ವಸ್ತುಗಳು, ಹೊರದೇಶದಿಂದ ಕಡಿಮೆ ಬೆಲೆಗೆ ಸಿಗುವಂತೆ (ವಿಶೇಷವಾಗಿ ಚೀನಾದಿಂದ) ಆಮದಾಗುವ ಪರಿಸ್ಥಿತಿ ಇರುವುದಾದರೆ ಇಲ್ಲಿ ಮ್ಯಾನ್ಯುಫ್ಯಾಕ್ಚರಿಂಗ್ ಹೇಗೆ ಉಳಿಯುತ್ತದೆ? ಹೇಗೆ ಬೆಳೆಯುತ್ತದೆ?

***

ಸಾಮಾನ್ಯ ಜನರ ಅನುಕೂಲ: ತೊಂಭತ್ತರ ದಶಕದ ಕೊನೆಯಲ್ಲಿ ಭಾರತದ ಬ್ಯಾಂಕುಗಳಿಗೆ ನಿಧಾನವಾಗಿ ಕಂಪ್ಯೂಟರುಗಳು ನುಸುಳತೊಡಗಿದಾಗ ನಮ್ಮನಮ್ಮಲ್ಲಿ ವಾದ-ವಿವರಣೆಗಳು ನಡೆಯುತ್ತಿದ್ದವು.  ಒಂದಿಷ್ಟು ಜನ ಈ ಕಂಪ್ಯೂಟರುಗಳು ಜನರ ಕೆಲಸವನ್ನು ನುಂಗಿ ಹಾಕುತ್ತವೆ ಎಂದೂ, ಇನ್ನೊಂದಿಷ್ಟು ಜನ ಈ ಕಂಪ್ಯೂಟರುಗಳು ಜನರ ದಕ್ಷತೆಯನ್ನೂ (efficiency), ಜನರ ಕೆಲಸದ ನಿಖರತೆಯನ್ನೂ (accuracy) ಹೆಚ್ಚಿಸುತ್ತವೆ ಎಂದೂ ವಾದವನ್ನು ಮಂಡಿಸುತ್ತಿದ್ದೆವು.  ಆಗಿನ ಕಾಲವೆಲ್ಲ ದಪ್ಪನಾದ ಲೆಡ್ಜರುಗಳ ಕಾಲ, ಎಲ್ಲಿ ನೋಡಿದರೂ ಅಲ್ಲಿ ಪೇಪರುಗಳದ್ದೇ ದರಬಾರು, ಅವುಗಳದ್ದೇ ಕಾರುಬಾರು.

ನಂತರ ಕಂಪ್ಯೂಟರುಗಳು ನಿಧಾನವಾಗಿ ಎಲ್ಲ ಕಡೆಗೆ ಹರಡಿಕೊಂಡ ಮೇಲೆ ನಾವೆಲ್ಲರೂ ಅದರ ಅನುಕೂಲವನ್ನು ಪಡೆದಿದ್ದೇವೆ.  ಆದರೆ, ಕಂಪ್ಯೂಟರುಗಳು ಬಂದ ನಂತರ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಕಡಿಮೆ ಏನೂ ಆಗಿಲ್ಲ.  ಬ್ಯಾಂಕುಗಳು ಬೆಳೆದಂತೆ, ಬ್ರ್ಯಾಂಚುಗಳು ಹೆಚ್ಚಾದವು, ಎಟಿಎಮ್ ಮಿಷೀನುಗಳು ಎಲ್ಲ ಕಡೆ ತಲೆ ಎತ್ತಿದವು.  ಮುಂದೆ ಕ್ರೆಡಿಟ್ ಕಾರ್ಡ್, ನಂತರದಲ್ಲಿ ಆನ್‌ಲೈನ್ ಪೇಮೆಂಟ್, ಪೇಟಿಎಮ್ ನಂತಹ ಸೇವೆಗಳು ಬಂದು ಹಣ ವಿಲೇವಾರಿ ತ್ವರಿತವಾಯಿತು.  ಹಣದುಬ್ಬರ (inflation) ಹೆಚ್ಚಾದಂತೆ ಪ್ಯಾಂಟ್ ಜೇಬಿನಲ್ಲಿ ತೆಗೆದುಕೊಂಡು ಹೋಗುವ ಹಣ ಯಾವ ಕೆಲಸಕ್ಕೂ ಸಾಕಾಗದೇ ರಾಶಿ ರಾಶಿ ಹಣವನ್ನು ಚಿಟಿಕೆ ಹೊಡೆಯುವಷ್ಟರಲ್ಲಿ ಅಲ್ಲಿಂದಿಲ್ಲಿಗೆ ವಹಿವಾಟು ನಡೆಸುವಂತಾಯಿತು.  ಈ ಅನುಕೂಲಗಳೆಲ್ಲ ಒಂದು ರೀತಿಯಲ್ಲಿ ಕಂಪ್ಯೂಟರ್ ಕ್ಷೇತ್ರದಲ್ಲಿ ಆದ ಅವಿಷ್ಕಾರಗಳಿಂದಲೇ ಸಾಧ್ಯವಾದದ್ದು.

ಸಿರಿವಂತರ ನೋವು: ಯಾವುದಾದರೂ ಹಳೆಯ ಕನ್ನಡ ಸಿನಿಮಾಗಳನ್ನೋ ಅಥವಾ ಫೋಟೋಗಳನ್ನೋ ನೀವು ನೋಡಿದರೆ ಒಂದಂತೂ ನಿಮಗೆ ಗ್ಯಾರಂಟಿಯಾಗುತ್ತದೆ.  ನಾವು ನೋಡಿದ ಎಂಭತ್ತರ ದಶಕದಲ್ಲಿ ಟ್ರಾಫಿಕ್ ಜಾಮ್ ಅನ್ನೋ ಪರಿಸ್ಥಿತಿ ಇರುತ್ತಲೇ ಇರಲಿಲ್ಲ.  ಊರಿನಲ್ಲಿ ಕೆಲವೇ ಕೆಲವು ಮನೆಗಳಿಗೆ ಫೋನ್ ಕನೆಕ್ಷನ್ ಇರುತ್ತಿತ್ತು.  ದೂರದ ಊರುಗಳಿಂದ ಟ್ರಂಕ್ ಕಾಲ್ ಮಾಡಿ ಕರೆ ಮಾಡಬೇಕಿತ್ತು.  ಅದರ ಜೊತೆಗೆ ಊರಿನಲ್ಲಿ ನಿಗದಿತ ಸಮಯಕ್ಕೆ ಹೋಗಿ ಬರುತ್ತಿದ್ದ ಬಸ್ಸುಗಳು, ಆಗಾಗ್ಗೆ ಬಂದು ಹೋಗುತ್ತಿದ್ದ ಲಾರಿಗಳನ್ನು ಬಿಟ್ಟರೆ ಕೇವಲ ಶ್ರೀಮಂತರ ಮನೆಯ ಕಾರುಗಳಿಗೆ ರಸ್ತೆಗಳು ಮೀಸಲಾಗಿದ್ದವು. ಕೇವಲ ಹಳ್ಳಿಗಳಷ್ಟೇ ಏಕೆ, ಜಿಲ್ಲಾ ಕೇಂದ್ರಗಳೂ, ಬೆಂಗಳೂರಿನಲ್ಲೂ ಸಹ ಅಷ್ಟೊಂದು ಕಾರುಗಳು ಓಡಾಡುತ್ತಿರಲಿಲ್ಲ.  ಕಾರು ಇಟ್ಟುಕೊಂಡವರಿಗೆ ಯಾವತ್ತೂ ಪಾರ್ಕಿಂಗ್ ಸಮಸ್ಯೆ ಬಂದುದನ್ನು ನಾನು ನೋಡಿಲ್ಲ, ಕೇಳಿಲ್ಲ.

ಈಗ ಹೆಚ್ಚಿನ ಮಧ್ಯಮ ವರ್ಗದ ಕುಟುಂಬಗಳಲ್ಲಿ ಕಾರು ಇದೆ.  ಕೆಲವೊಂದು ಮನೆಗಳಲ್ಲಿ ಕಾರುಗಳನ್ನು ನಿಲ್ಲಿಸಲು ಜಾಗವಿರದಿದ್ದರೂ ಅವರ ಹತ್ತಿರ ಕನಿಷ್ಠ ಒಂದಾದರೂ ಕಾರು ಇರುವುದು ಸಾಮಾನ್ಯವಾಗಿದೆ.  ದೇಶದ ಉದ್ದಗಲಕ್ಕೂ ಇಂದು ಕಾರುಗಳ ಪ್ರಮಾಣ ಬಹಳಷ್ಟು ಹೆಚ್ಚಾಗಿದೆ.  ಎಕನಾಮಿಕ್ ಟೈಮ್ಸ್ ವರದಿಯ ಪ್ರಕಾರ ಕಳೆದ ನಲವತ್ತು ವರ್ಷಗಳಲ್ಲಿ ಬೆಂಗಳೂರು ನಗರ ಒಂದರಲ್ಲಿಯೇ ವಾಹನಗಳ ಪ್ರಮಾಣ 6000% ದಷ್ಟು ಏರಿರುವುದನ್ನು ಕಾಣಬಹುದು.

ಊರು-ಕೇರಿಯ ರಸ್ತೆಗಳು ಕೇವಲ ಸಿರಿವಂತರಿಗೆ ಮಾತ್ರ ಎನ್ನುವಂತಿದ್ದ ಒಂದು ಕಾಲಕ್ಕೂ ಈಗಿನ ಎಲ್ಲರೂ ರಸ್ತೆ ಮೇಲೆ ತಮ್ಮ ಸವಾರಿಯನ್ನು ಚಲಾಯಿಸುತ್ತಿರುವುದಕ್ಕೂ ಬಹಳಷ್ಟು ವ್ಯತ್ಯಾಸವಿದೆ.  ಇದರಿಂದ ಸಾಮಾನ್ಯ ಜನರಿಗಂತೂ ಅನುಕೂಲವೇ ಸರಿ, ಆದರೆ ಆಗಿನ ಸಿರಿವಂತರು ತಮ್ಮ ವಿಶೇಷವಾದ ಸೌಲಭ್ಯವನ್ನು ಕಳೆದುಕೊಂಡರು ಎನ್ನುವುದು ನನ್ನ ಅಭಿಪ್ರಾಯ.

***
ಇಂದಿನ ಚಿಕ್ಕದಾದ ಕುಟುಂಬಗಳಲ್ಲಿ ದಿನನಿತ್ಯದ ಕೆಲಸ ಕಾರ್ಯಗಳನ್ನು ಪೂರೈಸುವಲ್ಲಿ ಮೆಷೀನುಗಳ ಪಾತ್ರ ಇರುವುದು ಹಿರಿದಾಗಿದೆ.  ನಗರದ  ಹೆಚ್ಚಿನ ಮನೆಗಳಲ್ಲಿ ಇಂದು ವಾಷಿಂಗ್ ಮೆಷೀನ್ ನುಸುಳಿದೆ.  ಸೋಲಾರ್ ಪವರ್‌ನಿಂದ ನೀರು ಕಾಯಿಸಿಕೊಳ್ಳುವ ಅನೇಕರು ಸ್ವಿಚ್ ಹಾಕಿದರೆ ಬಿಸಿ ನೀರು ಪಡೆಯುವ ಸ್ಥಿತಿಯನ್ನು ಕಾಣಬಹುದು.  ನೆಲವನ್ನು ಗುಡಿಸಲು, ಪಾತ್ರೆ ತೊಳೆಯಲು ಮತ್ತು ಬಟ್ಟೆ ಒಗೆಯಲು ಪ್ರತಿದಿನ ಕೆಲಸಕ್ಕೆ ಬಂದು ಹೋಗುವವರು ಸಿಗುತ್ತಾರೆ.  ತಿಂಗಳಿಗೆ ಇಷ್ಟು ಎನ್ನುವ ನಿಗದಿತ ಸಂಬಳಕ್ಕೆ ಕೆಲಸ ಮಾಡುವ ಇವರುಗಳು ತಮ್ಮ ಅಗತ್ಯಕ್ಕೆ ತಕ್ಕಂತೆ ವಟಾರದ ಒಂದಿಷ್ಟು ಮನೆಗಳಲ್ಲಿ ಕೆಲಸ ಮಾಡಿಕೊಂಡು ಜೀವನವನ್ನು ಸಾಗಿಸುತ್ತಾರೆ.  ಹೆಚ್ಚಿನವರಿಗೆ ಒಳ್ಳೆಯ ಉತ್ಪನ್ನವೂ ಇರುವುದು ಕೇಳಿ ಬರುತ್ತದೆ.  ಇನ್ನು ಮನೆಯ ಚಿಕ್ಕ-ಪುಟ್ಟ ಕೆಲಸಗಳ ಜೊತೆಗೆ ಮನೆ ಮಂದಿಗೆ ಅಡುಗೆ ಮಾಡಿಕೊಂಡು ಹೋಗುವುದು ಮನೆಯವರ ಕೆಲಸ.  ಅದರಲ್ಲೂ ಸಹ ನ್ಯೂಕ್ಲಿಯರ್ ಫ್ಯಾಮಿಲಿಗಳಿಗೆ ತೊಂದರೆ ಹೆಚ್ಚು, ಎಲ್ಲದಕ್ಕೂ ಗಂಡ ಹೆಂಡತಿ ಹೊಂದಿಕೊಂಡು ಹೋಗಬೇಕಾಗುತ್ತದೆ.  ಇನ್ನು ಮನೆಯಲ್ಲಿ ಹಿಂದಿನ ತಲೆಮಾರಿನ ಹಿರಿಯರು ಯಾರಾದರೂ ಇದ್ದರೆ, ಅಡುಗೆಯ ಕೆಲಸದಲ್ಲಿ, ಮಕ್ಕಳನ್ನು ನೋಡಿಕೊಳ್ಳಲು ಸಾಕಷ್ಟು ನೆರವಾಗುತ್ತದೆ.  ನೂರು ಕೋಟಿಗಿಂತಲೂ ಹೆಚ್ಚು ಜನರಿರುವ ಭಾರತದಲ್ಲಿ ಎಲ್ಲರ ಮನೆಯೂ ಹೀಗೆ ಎಂದು ನಿರ್ದಿಷ್ಟವಾಗಿ ಹೇಳಲಾಗದು.  ಆದರೆ, ಸೀನಿಯರ್ ಸಿಟಿಜನ್ಸ್ ಜನಸಂಖ್ಯೆ ಹೆಚ್ಚುತ್ತಿರುವ ಭಾರತದಲ್ಲಿ ವ್ಯವಸ್ಥೆ ಅಷ್ಟೊಂದು ಮುಂದುವರೆದ ಹಾಗಿಲ್ಲ.  ಇವತ್ತಿಗೂ ಹೆಚ್ಚಿನ ವೃದ್ಧ ತಂದೆ-ತಾಯಂದಿರು ತಮ್ಮ ಮಕ್ಕಳನ್ನು ನಂಬಿಕೊಂಡಿರುವುದು ಕಂಡು ಬರುತ್ತದೆ.  ಇಂಥವರ ಪೋಷಣೆಗೆ ಅದರಲ್ಲೂ ಖಾಯಿಲೆ ಬಿದ್ದಿರುವ ಹಿರಿಯರಿಗೆ ದಿನನಿತ್ಯದ ನೆರವಿಗೆ ಕೆಲಸಗಾರರು ಸಿಗುತ್ತಿಲ್ಲ.

ಸೀನಿಯರ್ ಸಿಟಿಜನ್ಸ್‌ಗಳನ್ನು ನೋಡಿಕೊಳ್ಳುವುದು ಬಹಳ ಸೂಕ್ಷ್ಮ ಹಾಗೂ ಕಷ್ಟದ ಕೆಲಸ.  ಬಹಳಷ್ಟು ಜನರಿಗೆ ಒಂದಲ್ಲ ಒಂದು ರೀತಿಯ ಖಾಯಿಲೆ ಬಾಧಿಸುತ್ತಿರುತ್ತದೆ.  ಅವರ ಪ್ರಿನ್ಸಿಪಲ್ಸ್, ಅವರಿಗೆ ಬೇಕಾದ ಊಟ-ತಿಂಡಿ ಅಗತ್ಯಗಳು, ಅವರ ಮನರಂಜನೆ, ಇತ್ಯಾದಿ ಇವೆಲ್ಲವೂ ಬೇರೆಯ ಒಂದು ಆಯಾಮವನ್ನೇ ಪಡೆದುಕೊಂಡಿರುತ್ತವೆ.  ಹೀಗಿರುವಾಗ ಮನೆಯಲ್ಲಿ ಯಾರಿಗಾದರೊಬ್ಬರಿಗೆ ಗಂಭೀರ ಸ್ವರೂಪದ ಖಾಯಿಲೆ ಏನಾದರೂ ಬಂದರೆ, ಅವರನ್ನು ಸಂತೈಸುವುದು ಬಹಳ ಕಷ್ಟದ ವಿಷಯವಾಗುತ್ತದೆ... ಈ ನಿಟ್ಟಿನಲ್ಲಿ ಭಾರತದುದ್ದಕ್ಕೂ ವೃದ್ಧಾಶ್ರಮಗಳು ಅಷ್ಟೊಂದು ಬೆಳೆಯದಿದ್ದರೂ ಇನ್ನು ಮುಂದೆ ಬೆಳೆಯುವುದನ್ನು ಊಹಿಸಬಹುದು. 

ಆದರೆ, ಇತ್ತೀಚೆಗೆ ಮನೆಗಳಲ್ಲಿ ಕೆಲಸ ಮಾಡಲು ಸಿಗುವವರು "ನಿಯತ್ತಿ"ನಿಂದ ಕೆಲಸ ಮಾಡೋದಿಲ್ಲ ಎನ್ನುವ ಆರೋಪಗಳು ಸಾಕಷ್ಟು ಕೇಳಿ ಬರುತ್ತವೆ.  ಯುವ ಜನತೆ ಯಾವಾಗಲೂ ತಮ್ಮ ತಮ್ಮ ಮೊಬೈಲು ಫೋನುಗಳಿಗೆ ಶರಣಾಗಿರುತ್ತಾರೆ.  ಹಿಂದಿನ ಕಾಲದವರ ಹಾಗೆ ನಿಯತ್ತಿನಿಂದ ನಡೆದುಕೊಳ್ಳೋದಿಲ್ಲ, ಕೆಲಸಗಳ್ಳರು, ಯಾವಾಗಲೂ ಸಬೂಬುಗಳನ್ನು ಹೇಳಿ ತಪ್ಪಿಸಿಕೊಳ್ಳುತ್ತಾರೆಯೇ ಹೊರತು ವಹಿಸಿಕೊಂಡ ಕೆಲಸವನ್ನು ಮೈಬಗ್ಗಿಸಿ ಮಾಡೋದಿಲ್ಲ.  ಹೀಗೆ ಅನೇಕ ಹೇಳಿಕೆಗಳನ್ನು ಕೇಳುವುದು ಸಾಮಾನ್ಯವಾಗಿದೆ.  ಎಲ್ಲರೂ ಐಶಾರಾಮಿ ಬದುಕಿನ ಕನಸನ್ನು ಕಂಡು ಅದರಲ್ಲೇ ಬದುಕುವ ಹಾಗಿದ್ದರೆ, ಈ ಐಶಾರಾಮಿತನಕ್ಕೆ ಅರ್ಥವೂ ಬರೋದಿಲ್ಲ. ಜೊತೆಗೆ ಅದು ಸೃಷ್ಟಿಸುವ "ಟ್ರಾಫಿಕ್ ಜಾಮ್" ಕೂಡಾ ಭೀಕರವಾಗಿರುತ್ತದೆ.  ಊರಿನಲ್ಲಿ ಕೆಲವೇ ಕೆಲವು ಕಾರುಗಳಿದ್ದಾಗ ಹೇಗೆ ಒಂದು ವ್ಯವಸ್ಥೆ ಚಾಲನೆಯಲ್ಲಿತ್ತೋ, ಅದೇ ವ್ಯವಸ್ಥೆ ಊರಿನ ಪ್ರತಿಯೊಬ್ಬರೂ ಸಮತೋಲಿತದವರಾದಾಗ ಸಂತುಲನ (equilibrium) ವನ್ನು ಕಳೆದುಕೊಳ್ಳುತ್ತದೆ.  ಯಾರಿಗೂ ಯಾವ ಕೆಲಸವನ್ನೂ ಮಾಡಿಕೊಡಲು ಯಾರೂ ಸಿಗದೇ ಹೋಗುವ ಪರಿಸ್ಥಿತಿ ಬರುತ್ತದೆ.  ಕಿತ್ತ ಚಪ್ಪಲಿಗಳನ್ನು ದುರಸ್ತಿ ಮಾಡಿಸುವುದಾಗಲೀ, ಬಟ್ಟೆಯನ್ನು ಅಳತೆಗೆ ತಕ್ಕಂತೆ ಹೊಲಿಸಿಕೊಳ್ಳುವುದಾಗಲೀ ಕಡಿಮೆಯಾಗಿ ಎಲ್ಲರೂ ದಿನದಿನಕ್ಕೂ "ಹೊಸ"ತನ್ನು ನಂಬಿಕೊಳ್ಳುವ ಗ್ರಾಹಕ ಪ್ರವೃತ್ತಿ (consumerism) ಬೆಳೆಯುತ್ತದೆ.  ಅದರಿಂದ ಎಕಾನಮಿ ದೊಡ್ಡದಾಗುತ್ತದೆ ಎಂದು ಎಷ್ಟೋ ಜನ ತಮ್ಮ ತತ್ವಗಳನ್ನು ಮಂಡಿಸಬಹುದು.  ಆದರೆ, ಅದರಿಂದ ನಾವು ಅನೇಕ ವ್ಯತಿರಿಕ್ತ ಪರಿಣಾಮಗಳನ್ನೂ ಅನುಭವಿಸಬೇಕಾಗುತ್ತದೆ.

ಹೀಗೆ ತಲೆಮಾರಿನಿಂದ ತಲೆಮಾರಿಗೆ ಪ್ರತಿಯೊಬ್ಬರೂ "ಸಿರಿವಂತ"ರಾಗುತ್ತಲೇ ಇದ್ದಾರೆ... ಆದರೆ, ಸಿರಿವಂತರೆನ್ನುವುದು ಒಂದು ತುಲನಾತ್ಮಕ ಹಣೆಪಟ್ಟಿ ಅಷ್ಟೇ.

Wednesday, April 22, 2020

ನನ್ನ ದೇಶ ನನ್ನ ಜನ

ನನ್ನ ದೇಶ ನನ್ನ ಜನ
ನನ್ನ ಮಾನ ಪ್ರಾಣ ಧನ
ತೀರಿಸುವೆನೆ ಅದರ ಋಣ
ಈ ಒಂದೇ ಜನ್ಮದಿ|
ನೂರು ಭಾವ ಭಾಷೆ ನೆಲೆ
ನೂರು ಬಣ್ಣ ವೇಷ ಕಲೆ
ಸ್ವಚ್ಛಂದದ ಹಕ್ಕಿಗಳೆ
ನಮ್ಮ ಹಾಡು ಬದುಕಲು|

ನಮ್ಮ ದೇಶದಲ್ಲಿ ಒಂದು ಕೋಮಿನವರು ವೈರಸ್ ಸೋಂಕನ್ನು ಉದ್ದೇಶ ಪೂರ್ವಕವಾಗಿ ಹರಡುತ್ತಿದ್ದಾರೆ... ಇಡೀ ಪ್ರಪಂಚವೇ ವೈರಸ್‌ ದೆಸೆಯಿಂದ ನಲುಗುತ್ತಿದ್ದರೆ ಅದನ್ನು ಕೆಲವರು ತಮ್ಮ ಅನುಕೂಲಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ... ನಮ್ಮ ಯುವಕ-ಯುವತಿಯರು ಪಾಕಿಸ್ತಾನಕ್ಕೆ ಜೈಕಾರ ಹಾಕುವುದನ್ನು ತಮ್ಮ ಹಕ್ಕು ಎಂದುಕೊಂಡಿದ್ದಾರೆ... ಎಂದೆಲ್ಲ ಮಾಧ್ಯಮಗಳಲ್ಲಿ ಓದಿದಾಗ ಚೆನ್ನವೀರ ಕಣವಿಯವರ ಈ ಹಾಡು ನೆನಪಿಗೆ ಬಂತು.  ಇನ್ನೂ ಕೇವಲ ಎಪ್ಪತ್ತಮೂರು ವರ್ಷಗಳನ್ನು ಕಳೆದ ನಮ್ಮ "ಸ್ವಾತಂತ್ರ್ಯ" ನಮ್ಮನ್ನು ಈ ಸ್ಥಿತಿಗೆ ತಂದಿದೆ.  ಇನ್ನೊಂದಿನ್ನೂರು ವರ್ಷಗಳಲ್ಲಿ ನಮ್ಮ ಯುವ ಜನರ "ದೇಶಭಕ್ತಿ" ಇದೇ ರೀತಿಯಲ್ಲಿ ಮುಂದುವರೆದು, ನಮ್ಮೆಲ್ಲರ ದೇಶ ಪ್ರೇಮ, ವಿಶ್ವಾಸ, ಒಗ್ಗಟ್ಟು, ಭಾವೈಕ್ಯತೆ, ಘನತೆ ಇವೆಲ್ಲವೂ ಏನಾಗಬಹುದು ಎಂದು ಯೋಚಿಸಿದಾಗ ನಿಜವಾಗಿಯೂ ಬೆನ್ನ ಹುರಿಯಲ್ಲಿ ಕಂಪನವಾಯಿತು.  ಇಂದಿನ ಯುವಕರೇ ಮುಂದಿನ ಪ್ರಜೆಗಳು, ನಾಳಿನ ಭಾರತದ ಭವಿತವ್ಯರು - ಎಂದೆಲ್ಲ ಯೋಚಿಸಿಕೊಂಡಾಗ ಹೆದರಿಕೆಯ ಜೊತೆಗೆ, ಖೇದವೂ ಒಡಮೂಡಿತು.

***
1947ರ ಸ್ವಾತ್ರಂತ್ರ್ಯ ನಿಜವಾಗಿಯೂ ನಮ್ಮನ್ನು ಒಂದುಗೂಡಿಸಿತೇ? ಬ್ರಿಟೀಷ್ ಮತ್ತು ಇತರ ವಸಾಹತುಶಾಹಿಗಳ ಅಧಿಕಾರ ಅವಧಿ ಇರದೇ ಇರುತ್ತಿದ್ದರೆ ಇಂದಿನ ನಮ್ಮ ಅಖಂಡ ಭಾರತ ಹೇಗಿರುತ್ತಿತ್ತು? ಬ್ರಿಟೀಷರ ಭಾಷೆ ನಮ್ಮನ್ನು ಒಂದುಗೂಡಿಸಿತೇ? ಅವರ ಆಚಾರ-ವಿಚಾರ ಹಾಗೂ ನಡೆವಳಿಕೆಗಳು ನಮ್ಮನ್ನು ಮುಂದುವರೆದವರನ್ನಾಗಿ ಮಾಡಿದವೇ? ಎಪ್ಪತ್ಮೂರು ವರ್ಷಗಳ ಹಿಂದೆ ಸ್ವಾತಂತ್ರ್ಯ ಸಂಗ್ರಾ?ಮದ ಸಮಯದಲ್ಲಿ ಮಾಹಿತಿ ಇರದಿದ್ದರೂ ಕೋಟ್ಯಾಂತರ ಮಂದಿ ಬ್ರಿಟೀಷರ ವಿರುದ್ಧ ಹೋರಾಡಿ ತಂದು ಕೊಟ್ಟ ಈ ಸ್ವಾಂತಂತ್ರ್ಯಕ್ಕೆ ಇಂದು ಅಂಗೈಯಲ್ಲಿ ಮಾಹಿತಿ ಸಿಗುವ ಅನುಕೂಲದ ಸಮಯದಲ್ಲಿ ಯುವ ಜನತೆಯಿಂದ ಅದಕ್ಕೇಕೆ ಕಡಿವಾಣ ಬೀಳುತ್ತಿದೆ? ದೇಶದ ಸಹನೆಯನ್ನೇಕೆ ಕೆಲವರು ಪರೀಕ್ಷಿಸುವಂತಾಗಿದೆ?  ನಿಜವಾಗಿಯೂ ನಮ್ಮ ದೇಶದಲ್ಲಿ ಸ್ವಾತಂತ್ರ್ಯವಿದೆಯೇ? ಹಾಗಿದ್ದರೆ ಅದರ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆಯೇ?

***

ಧರ್ಮದ ಹೆಸರಿನಲ್ಲಿ ಸ್ಥಾಪಿತವಾದ, ಇಸ್ಲಾಂ ಮೂಲದ ಜೊತೆಗೆ ಮಧ್ಯ ಪ್ರಾಚ್ಯ ನೆರೆಹೊರೆಯ ಸಂಪ್ರದಾಯವನ್ನು ಮೈವೆತ್ತ ನೆರೆಯ ಪಾಕಿಸ್ತಾನ 1947ರಿಂದಲೂ ಬಡರಾಷ್ಟ್ರವಾಗೇ ಮುಂದುವರೆದಿದೆ.  ಒಂದು ಕಾಲದಲ್ಲಿ ತನ್ನಲ್ಲಿ ಬೆಳೆಯುವ ಹತ್ತಿಯನ್ನು ಸಂಸ್ಕರಿಸುವ ಕೈಗಾರಿಕೆಯೂ ಇಲ್ಲದೆ ಒಂದು ಸಣ್ಣ ಸೂಜಿಯಿಂದ ಹಿಡಿದು ಕಾರಿನವರೆಗೂ ಹೊರ ರಾಷ್ಟ್ರಗಳಿಗೆ ತನ್ನ ಮಾರುಕಟ್ಟೆಯನ್ನು ತೆರೆದುಕೊಂಡು ತನ್ನ ಆಂತರಿಕ ಸಂಘರ್ಷಗಳನ್ನು ಒಂದು ಕಡೆ ಹತ್ತಿಕ್ಕಲೂ ಆಗದೆ ಬಚ್ಚಿಡಲೂ ಆಗದೆ ಬಳಲುತ್ತಿರುವ ರಾಷ್ಟ್ರ ಪಾಕಿಸ್ತಾನ.  ಅನೇಕ ಮುತ್ಸದ್ದಿಗಳು ಹುಟ್ಟಿಬಂದ ನೆಲದಲ್ಲೇ ಇಸ್ಲಾಂ ಪ್ರವಾದಿಗಳು ಜನರ ಮನದಲ್ಲಿ ಸೇಡು, ಕಿಚ್ಚಿನ ಕ್ರಾಂತಿಯನ್ನು ಬಿತ್ತುತ್ತಾ ಬಂದರು.  ಭಾರತವನ್ನು ದ್ವೇಷಿಸುವುದೇ ಪ್ರಣಾಳಿಕೆಯೆಂಬಂತೆ ನಾಯಿಕೊಡೆಗಳಂತೆ ಅಲ್ಲಲ್ಲಿ ಪಕ್ಷಗಳು ಹುಟ್ಟಿದವು.  ಅವೇ ಮುಂದೆ ಭಯೋತ್ಪಾದಕ ಸಂಘಟನೆಗಳಾದವು.  ಅನೇಕ ಮಿಲಿಟರಿ ಕ್ಯೂ (ರಕ್ತಪಾತ) ಹಾಗೂ ಅನೇಕ ಭ್ರಷ್ಟಾಚಾರದ ಅಧೋಗತಿಯಲ್ಲಿ ದೇಶ ಹಾಳಾಗಿ ಹೋಯಿತು.  ಒಂದು ಕಾಲದಲ್ಲಿ ವಿದೇಶೀ ಸಹಾಯವಿಲ್ಲದಿದ್ದರೆ ಯಾವತ್ತೋ ಭೂಪಟದಲ್ಲಿ ನಾಪತ್ತೆಯಾಗಿ ಹೋಗುವಂತಿದ್ದ ಪಾಕಿಸ್ತಾನಕ್ಕೆ ಬಲವಾಗಿ ಸಿಕ್ಕಿದ್ದು ನ್ಯೂಕ್ಲಿಯರ್ ಶಕ್ತಿ.  ನವದೆಹಲಿಯಿಂದ ಕೇವಲ ಐನೂರು ಕಿಲೋಮೀಟರ್ ದೂರದಲ್ಲಿರುವ ಪಾಕಿಸ್ತಾನದ ಅಸ್ಥಿರತೆಯನ್ನು ನಾವು ಬಹಳ ಸೂಕ್ಷವಾಗಿ ನೋಡಿಕೊಂಡು ಬರುವಂತ ಸ್ಥಿತಿ ಇಂದಿಗೂ ಇದೆ.  ಯಾವುದೋ ಧಾರ್ಮಿಕ ಮೂಲಭೂತವಾದಿಗೆ ಈ ಅಣ್ವಸ್ತ್ರವೇನಾದರೂ ದೊರೆತರೆ ಅದು ಪ್ರಪಂಚದ ವಿನಾಶಕ್ಕೆ ಕಾರಣವಾಗಬಹುದು!

ಇಂತಹ ಪಾಕಿಸ್ತಾನವನ್ನು ನಮ್ಮಲ್ಲಿನ ಕೆಲವು ಯುವಕ-ಯುವತಿಯರು ಬೆಂಬಲಿಸುತ್ತಾರೆ.  ಇಂತಹ ಪಾಕಿಸ್ತಾನಕ್ಕೆ ಜಯಕಾರ ಹಾಕುತ್ತಾರೆ ಎಂದು ಕೇಳುತ್ತಲೇ ಹೊಟ್ಟೆ ತೊಳಸಿದಂತಾಗುತ್ತದೆ.  ಈ ಯುವಕ-ಯುವತಿಯರಿಗೆ ನಿಜವಾದ ಪಾಕಿಸ್ತಾನದ ಅರಿವೇ ಇಲ್ಲ.  ಯಾವ ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಅವ್ಯಾಹತವಾಗಿ ದೌರ್ಜನ್ಯ ನಡೆಯುತ್ತಿದೆಯೋ, ಯಾವ ದೇಶದಲ್ಲಿ ಮೈನಾರಿಟಿ ಜನರ ಸ್ವಾತಂತ್ರ್ಯಕ್ಕೆ ಬೆಲೆಯೇ ಇಲ್ಲವೋ, ಯಾವ ದೇಶದಲ್ಲಿ ಧರ್ಮದ ಹೊರೆಯನ್ನು ಬಲವಂತವಾಗಿ ಹೇರಲಾಗುತ್ತದೆಯೋ - ಅಂತಹ ದೇಶದ ಮೇಲೆ ನಮ್ಮ ದೇಶದಲ್ಲಿ ನಿಜವಾದ ಸ್ವಾತಂತ್ರ್ಯದ ಉಸಿರಿನ ಬೆಲೆ ಗೊತ್ತಿರದ ಯುವಕ-ಯುವತಿಯರ ಮಮಕಾರ ಹೆಚ್ಚಾಗಲು ಏನು ಕಾರಣ, ಅದರ ಮೂಲ ನೆಲೆಯೇನು ಎಂದು ಗಂಭೀರವಾಗಿ ಯೋಚನೆ ಮಾಡಬೇಕಾಗುತ್ತದೆ.

ಪಾಕಿಸ್ತಾನದ ಪರವಾಗಿ ಕೂಗಿದ ಜೆ.ಎನ್.ಯು. ವಿದ್ಯಾರ್ಥಿಗಳು ಎಲ್ಲರೂ ಮುಸಲ್ಮಾನರಲ್ಲ.  ಕಾಶ್ಮೀರದಿಂದ ಕೇರಳದವರೆಗೆ ಒಂದು ರೀತಿಯಲ್ಲಿ ಯುವಜನತೆಯ ಬ್ರೈನ್‌ವಾಶ್ ಮಾಡಲಾಗುತ್ತಿದೆ.   ಚೀನಾದಲ್ಲಿ ಹುಟ್ಟಿ ಅಲ್ಲಿ ಪ್ರಬಲವಾಗಿ ಬೆಳೆದ ಮಾವೋಯಿಸಂ ನಮ್ಮ ವಿದ್ಯಾರ್ಥಿಗಳಿಗೆ ಪ್ರಿಯವಾಗುತ್ತದೆ.  ಸರ್ಕಾರದ ವಿರುದ್ಧ, ಪ್ರಜಾಸತ್ತತೆಯ ವಿರುದ್ಧ ಧ್ವನಿ ಎತ್ತುವುದು ಎಂದರೆ ಪಕ್ಕದ ಪಾಕಿಸ್ತಾನವನ್ನು ಹೊಗಳುವುದು ಎಂದಾಗಿ ಹೋಗಿಬಿಟ್ಟಿದೆ. ನಮಗೆ  ಸ್ವಾತಂತ್ರ್ಯ ಸಿಕ್ಕ ಮೊದಲ ಐವತ್ತು ವರ್ಷಗಳಲ್ಲಿ ಈ ಸ್ಥಿತಿ ಇರಲಿಲ್ಲ... ನಾವೆಲ್ಲ ಕಂಡ ಎಂಭತ್ತರ, ತೊಂಭತ್ತರ ದಶಕದ ಭಾರತದಲ್ಲಿ, ನಮ್ಮ ಶಾಲಾದಿನಗಳಲ್ಲಿ ಒಂದು ದಿನವೂ ಯಾರೂ ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಿಲ್ಲ... ನಾವೆಲ್ಲ  ಅನೇಕ ಜನವಿರೋಧಿ ನೀತಿಗಳ ವಿರುದ್ಧವೋ, ಕಾನೂನಿನ ಪರವಾಗಿಯೋ, ಅಥವಾ ರಾಜ್ಯ-ದೇಶ-ಭಾಷೆಗಳ ಪರವಾಗಿಯೋ ಸತ್ಯಾಗ್ರಹ, ಸಂಗ್ರಾಮಗಳನ್ನು ಮಾಡಿದ್ದೇವೆ.  ಆದರೆ, ಇಂದಿನ ಯುವಜನತೆಯ ದೇಶದ್ರೋಹದ ಹಾದಿಯನ್ನು ಎಂದೂ ಹಿಡಿದಿದ್ದಿಲ್ಲ.  ನಾವು ಶಾಲೆಗೆ ಹೋಗುತ್ತಿದ್ದಾಗ ಪ್ರತಿದಿನವೂ ರಾಷ್ಟ್ರಗೀತೆಯನ್ನು ಹೇಳುತ್ತಿದ್ದೆವು, ಧ್ವಜವಂದನೆಯನ್ನು ಮಾಡುತ್ತಿದ್ದೆವು.  ನಮ್ಮೆಲ್ಲರಿಗಿಂತ ದೇಶ ಯಾವತ್ತೂ ದೊಡ್ಡದಾಗಿತ್ತು.  ಆದರೆ ಇಂದಿನ ಯುವಜನತೆಯ ಮನಃಸ್ಥಿತಿಯನ್ನು ನೋಡಿದಾಗ ಅದೇ ಭಾವನೆ ಖಂಡಿತ ಒಡಮೂಡುವುದಿಲ್ಲ.
ನನ್ನ ದೇಶ ಉನ್ನತವಾದುದು.  ಜನರಿಗೆ ನಿಜವಾಗಿಯೂ ಪ್ರಜಾಸತ್ತಾತ್ಮಕ ನೆಲೆಯಲ್ಲಿ ಬದುಕನ್ನು ಕಲ್ಪಿಸಿಕೊಟ್ಟಿದೆ.  ಹಾಡು ಹಗಲೇ ದರೋಡೆ, ಅತ್ಯಾಚಾರ, ಕೊಲೆ-ಸುಲಿಗೆ ಮಾಡಿದವರೂ ಸಂವಿಧಾನದ ವಿಧಿಯ ಪ್ರಕಾರ ಶಿಕ್ಷೆಗೆ ಗುರಿಪಡುತ್ತಾರೆ.  ಪ್ರತಿಯೊಬ್ಬರಿಗೂ ಅವರದೇ ಆದ ಹಕ್ಕುಗಳಿವೆ.  ಆದರೆ ಜನರು ತಮ್ಮ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುತ್ತಾರೆ, ಅವೇ ಹಕ್ಕುಗಳ ಮಗ್ಗುಲಲ್ಲಿರುವ ಕರ್ತವ್ಯಗಳನ್ನು ಮರೆಯುತ್ತಾರೆ.  ತಮ್ಮ ಮೈಕ್ರೋ ಫ್ಯಾಮಿಲಿಗಳ ಸಂತೋಷಕ್ಕಾಗಿ ದೊಡ್ಡ ದೇಶದ ಘನತೆ ಗೌರವವನ್ನು ಮರೆಯುತ್ತಾರೆ.  ರಾಷ್ಟ್ರ ಯಾವತ್ತೂ ಸೆಕೆಂಡರಿಯಾಗುತ್ತದೆ, ತಮ್ಮ ಸ್ವಾರ್ಥ ದೊಡ್ಡದಾಗುತ್ತಾ ಹೋಗುತ್ತದೆ.

ಎಪ್ಪತ್ತು ವರ್ಷಗಳ ನಂತರ ನಮ್ಮ ಮೂಲಭೂತ ಸಮಸ್ಯೆಗಳು ಇನ್ನೂ ಹಾಗೇ ಇರುವಾಗ, ಈ ಎದೆಕರಗದ ದೇಶಭಕ್ತಿಯ ಜನ ಯಾವ ರೀತಿಯಲ್ಲಿ ದೇಶವನ್ನು ಮುಂದೆ ತಂದಾರು? ಇನ್ನು ನೂರಿನ್ನೂರು ವರ್ಷಗಳಲ್ಲಿ ನಮ್ಮ ದೇಶ ನಮ್ಮ ದೇಶವಾಗೇ ಇರುವುದೋ ಅಥವಾ ಮೊದಲಿನ ಹಾಗೆ ಹಂಚಿಕೊಂಡು ತುಂಡು ತುಂಡಾಗುವುದೋ ಎಂದು ಸಂಕಟವಾಗುತ್ತದೆ.


 




















ಭಾರತ ದೇಶವನ್ನು ಹಳಿಯುವವರು ತಮ್ಮ ದೇಶದ ಬಗ್ಗೆ ಒಂದಿಷ್ಟು ಕನಿಷ್ಠ ಮಾಹಿತಿಯನ್ನಾದರೂ ತಿಳಿದುಕೊಂಡು ತಮ್ಮ ವಾದವನ್ನು ಮಂಡಿಸಿದ್ದರೆ ಚೆನ್ನಾಗಿತ್ತು.  ಒಂದು ದೇಶದ ನಿಜವಾದ ಸ್ವಾತಂತ್ರ್ಯದ ಅರಿವಾಗುವುದು ಆ ಸ್ವಾತ್ಯಂತ್ರ್ಯ ಇಲ್ಲವಾದಾಗಲೇ!
(ಮಾಹಿತಿ ಕೃಪೆ: ವಿಕಿಪೀಡಿಯ)

Saturday, April 11, 2020

ಇತಿಹಾಸ-ಯುದ್ಧ-ಕಲಿಕೆ

ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ
ಮೃತ್ಯು ಕುಣಿಯುತಲಿಹನು ಕೇಕೆ ಹಾಕುತಲಿ
ಸುತ್ತಿಪುದು ತಲೆಯನನುದಿನದ ಲೋಕದ ವಾರ್ತೆ
ಎತ್ತಲಿದಕೆಲ್ಲ ಕಡೆ? ಮಂಕುತಿಮ್ಮ|| ೧೧

1943ರಲ್ಲಿ ಪ್ರಕಟಗೊಂಡ ಮಂಕುತಿಮ್ಮನ ಕಗ್ಗದ 'ಮಾನವರೋ ದಾನವರೋ?' ಅವತರಣಿಕೆಯಲ್ಲಿ ಬರುವ 11ನೇ ಪದ್ಯ ಇದು.  ಇಂದಿಗೆ 77 ವರ್ಷದ ಮೊದಲೇ ಈ ಪದ್ಯವನ್ನು ಬರೆದಾಗ ಆಗಿನ ಸ್ಥಿತಿಗತಿ ಹೇಗಿರಬಹುದು ಎಂದು ಯೋಚನೆ ಬಂತು.

ನಮಗೆ ಕಷ್ಟ ಬಂದಾಗ ನಮ್ಮ ಮೂಲ ಸಿದ್ಧಾಂತ-ಸಂಸ್ಕಾರಗಳೇ ನಮಗೆ ಆಶ್ರಯವಾಗುತ್ತವಂತೆ.  ಇಂದು ಇಡೀ ವಿಶ್ವವೇ ಸಂಕಷ್ಟದ ಸಮಯದಲ್ಲಿರುವಾಗ ಹಾಗೆಯೇ ಓದ ತೊಡಗಿದ್ದ, ಕನ್ನಡದ ಭಗವದ್ಗೀತೆ, ಕಗ್ಗದ ಪುಟಗಳು ನಿಲ್ಲಲಾರದೇ ಹಾಗೇ ಮುಂದುವರೆಯತೊಡಗಿದವು!

See the source image
(World in 1943 - AlternateHistory.com)

ಆಗೆಲ್ಲ ಎರಡನೇ ಮಹಾಯುದ್ಧ ಎಲ್ಲ ಕಡೆಗೆ ಹರಡಿಕೊಂಡಿತ್ತು.  ಅದೇ ಸಮಯದಲ್ಲಿ ಬ್ರಿಟೀಷ್ ಸಾಮ್ರಾಜ್ಯದ ವಿರುದ್ಧ ಭಾರತದ ಉದ್ದಗಲಕ್ಕೂ ಕೂಡ ಸ್ವಾತ್ರಂತ್ಯದ ಕಿಡಿ ಹೊತ್ತಿ ಪ್ರಜ್ವಾಲಮಾನವಾಗಿ ಉರಿಯುತ್ತಿದ್ದ ಸಮಯ.  1943ರ ಡಿಸೆಂಬರ್ 30 ರಂದು ಸುಭಾಶ್‌ಚಂದ್ರ ಬೋಸ್ ಪೋರ್ಟ್ ಬ್ಲೇರ್‌ನಲ್ಲಿ ಭಾರತದ ಸ್ವಾತಂತ್ರ್ಯ ಪಟವನ್ನು ಹಾರಿಸಿದ್ದು ಬಹಳಷ್ಟು ಸುದ್ದಿ ಮಾಡಿತ್ತು.

ಆಗಿನ ಸಂದರ್ಭದಲ್ಲಿ ಗುಂಡಪ್ಪನವರು ಪ್ರಪಂಚವನ್ನು ಸುತ್ತುವರೆದಿದ್ದ "ದುರ್ದೈವ"ದ ಬಗ್ಗೆ ಬರೆದಿದ್ದು ಇಂದಿನ ಕಾಲಕ್ಕೆ ಹೇಗೆ ಅನ್ವಯವಾಗುತ್ತದೆ ಎಂಬುದನ್ನು ನಾವೆಲ್ಲ ಕಲ್ಪನೆ ಮಾಡಿಕೊಳ್ಳಬಹುದು.  ಇದೇ ಮಾತನ್ನು ನಾಲ್ಕು ತಿಂಗಳ ಹಿಂದೆ ಹೇಳಿದ್ದರೆ ಯಾರೂ ನಂಬುತ್ತಿರಲಿಲ್ಲ.  ಆದರೆ ಈ ಪದ್ಯ ಪ್ರಸಕ್ತ ಸನ್ನಿವೇಶಕ್ಕೆ ಹೇಳಿ ಬರೆಸಿದ ಹಾಗಿದೆ.

***

ಆಗೆಲ್ಲ ಯುದ್ಧಗಳು ಒಂದು ರೀತಿಯ ಲೆವೆಲರುಗಳಾಗಿದ್ದವು.  ಜನರ ದೇಶ-ಭಾಷೆ-ಗಡಿಗಳಿಗಿಂತಲೂ ಹೆಚ್ಚಾಗಿ ಆಗಿನ ಸೈನಿಕರೆಲ್ಲ ಯಾವ ಯಾವ ಬಣಗಳಿಗೆ ಸೇರಿದ್ದರೋ ಅಲ್ಲೆಲ್ಲಾ ಭೀಕರವಾದ ಸಾವು-ನೋವುಗಳಾಗಿವೆ.  ಮಾನವ ಸಂತತಿ ಕಂಡ ಅತ್ಯಂತ ಕೆಟ್ಟ ವರ್ಷಗಳು ಎಂದರೆ ಮೊದಲ ಮತ್ತು ಎರಡನೇ ಮಹಾಯುದ್ಧದ ಕಾಲ (World War I 1914-1918, World War II 1939-1945).  ಒಂದು ಅಂದಾಜಿನ ಪ್ರಕಾರ ಈ ಎರಡು ಯುದ್ಧಗಳಲ್ಲಿ ಸುಮಾರು ಒಂದು ನೂರು ಮಿಲಿಯನ್ ಜನರಿಗಿಂತಲೂ ಹೆಚ್ಚು ಜನರು ಕಾಲವಾದರು.  ಯುದ್ಧ ಮುಗಿದ ನಂತರವೂ ಸಾವು-ನೋವಿನ ಪ್ರಮಾಣ ಮುಂದುವರೆಯುತ್ತಲೇ ಇತ್ತು.


ಮಾನವ ಹುಟ್ಟಿದ-ಹೋರಾಡಿದ-ಸತ್ತ ಎಂದು ಸರಳವಾಗಿ ಹೇಳುವ ಹಾಗೆ, ನಮ್ಮ ಇತಿಹಾಸದ ಉದ್ದಾನುದ್ದಕ್ಕೂ ಹೋರಾಟ-ಹೊಡೆದಾಟವೇ ಎಲ್ಲ ಕಡೆಗೆ ಕಂಡುಬರುತ್ತದೆ.  ಪೈಮೇಟ್‌ಗಳಿಂದ (Primate) ಬಳುವಳಿಯಾಗಿ ಪಡೆದ ಗುಣವಾಗಿ ತಮ್ಮ ತಮ್ಮ ನೆರೆಹೊರೆಯನ್ನು ಕಾಪಾಡಿಕೊಳ್ಳುವುದು ಅದಕ್ಕೋಸ್ಕರ ಹೋರಾಡುವುದು ನಮ್ಮ ಇಂದು-ನಿನ್ನೆಯ ಗುಣವಲ್ಲ, ಮಿಲಿಯನ್‌ಗಟ್ಟಲೆ ವರ್ಷಗಳಿಂದ ನಮ್ಮ ವಂಶವಾಹಿಯಲ್ಲಿದೆ.  ಆದ್ದರಿಂದಲೇ ಅದು ನಮಗೆ ಸಹಜ ಕೂಡ.

***

ಯುದ್ಧದಿಂದೇನು ಕಲಿತಿದ್ದೇವೆ?  ಇತಿಹಾಸದಿಂದೇನು ಕಲಿತಿದ್ದೇವೆ? ನೂರು ವರ್ಷಗಳು ಕಳೆದ ನಂತರ  ಮತ್ತೆ ಎಲ್ಲವೂ ಮರುಕಳಿಸುವ ಹಾಗಿದೆ ಎನ್ನಿಸೋದಿಲ್ಲವೇ?  ಇದು ವಿಶ್ವದ ದೊಡ್ಡ ಶಕ್ತಿಗಳು ಕಟ್ಟಿರುವ ಆಂತರಿಕ ಯುದ್ಧವೋ? ಅಥವಾ ನಿಸರ್ಗ ನಮ್ಮ ಮೇಲೆ ಹೂಡಿರುವ ಯುದ್ಧವೋ? ಇವೆಲ್ಲವನ್ನು ಮತ್ತೆ ನಮ್ಮ ಮುಂದಿನ ಸಂತತಿ ಅವರ ಇತಿಹಾಸದಲ್ಲಿ ಕಂಡುಕೊಳ್ಳುತ್ತಾರೆ!  ಇಂದಿನದನ್ನು ನಾಳಿನವರು ಕಂಡುಕೊಂಡು ಅದರ ಬಗ್ಗೆ ಏನನ್ನೂ ಮಾಡದಿರುವುದೇ ಇತಿಹಾಸ ಎಂಬುದು ಈ ಹೊತ್ತಿನ ತತ್ವ!

Tuesday, April 07, 2020

ಕೊರೋನಾ ವೈರಸ್ - ಚೈನಾದ ಅತಂತ್ರವೋ, ಕುತಂತ್ರವೋ?

ಈ ವೈರಸ್ ಹಾವಳಿ ಜನವರಿಯಲ್ಲಿ ಎಲ್ಲ ಕಡೆಗೆ ಹಬ್ಬುತ್ತಿದ್ದಂತೆ ಅನೇಕ ಸಿದ್ಧಾಂತಗಳು (theories) ಹುಟ್ಟಿದವು, ಕೆಲವು ಮರು ಹುಟ್ಟು ಪಡೆದವು.  ವುಹಾನ್ ನಗರ (ಹುಬೈ ಪ್ರಾಂತ್ಯ) ಸಂಪೂರ್ಣವಾಗಿ ಮುಚ್ಚಿದ ನಂತರ, ಚೈನಾಕ್ಕೆ ಹೋಗುವ ಚೈನಾದಿಂದ ಬರುವ ಎಲ್ಲ ಪ್ರಯಾಣಿಕರು ಕಡಿಮೆಯಾದ ಮೇಲೆ, ಇಡೀ ವಿಶ್ವವೇ ಚೈನಾದ ಬೆಳವಣಿಗೆಗಳನ್ನು ಬಿಟ್ಟ ಕಣ್ಣು ಮಿಟುಕಿಸದೆ ನೋಡತೊಡಗಿತು.  ಒಂದಿಷ್ಟು ಜನ (ರಾಷ್ಟ್ರಗಳು) ತಮ್ಮ ದೇಶಕ್ಕೆ ಈ ವೈರಸ್ಸಿನಿಂದ ತೊಂದರೆಯಾದೀತೆಂದು ಮುಂಜಾಗರೂಕತೆ ಕ್ರಮವನ್ನು ಕೈಗೊಂಡರು.  ಮತ್ತಿನ್ನೊಂದಿಷ್ಟು ಜನ ಆ ನಿಟ್ಟಿನಲ್ಲಿ ತಮ್ಮ ನಿರ್ಧಾರಗಳನ್ನು ಪ್ರಕಟಿಸುವಾಗ ವಿಳಂಬದಿಂದಾಗಿ ಅದಕ್ಕೆ ತಕ್ಕ ಬೆಲೆಯನ್ನು ತೆರಬೇಕಾಗಿ ಬಂತು.  ಈಗ ಕಳೆದ ಆರೇಳು ವಾರಗಳಿಂದ (ಮಾರ್ಚ್ ೧ ರಿಂದ ಏಪ್ರಿಲ್ ೭ ರವರೆಗೆ) ಕರೋನಾ ವೈರಸ್ (covid-19) ನಮ್ಮ ಜನ ಜೀವನದಲ್ಲಿ ನೆಲೆ ನಿಂತಿದೆ.  ಇನ್ನೂ ಎರಡು ತಲೆ ಮಾರುಗಳಿಗಾಗುವಷ್ಟು ನಮಗೆಲ್ಲ ಪಾಠವನ್ನು ಕಲಿಸಿದೆ.

ಈ ಶತಮಾನದ ದೊಡ್ಡ ದುರಂತ, ಮಹಾವ್ಯಾಧಿ, ಸೋಂಕು, ಸಾಂಕ್ರಾಮಿಕ ರೋಗ, ಶಾಪ - ಇನ್ನೂ ಮೊದಲಾದ ಹೆಸರಿನಿಂದ ಕರೆಸಿಕೊಂಡು ತನ್ನ ಪರಿಣಾಮವನ್ನು ದೊಡ್ಡ ದೊಡ್ಡ ಅಕ್ಷರಗಳಲ್ಲಿ ಬರೆದುಕೊಂಡು, ಇನ್ನು ಇನ್ನೂರೈವತ್ತು ವರ್ಷವಾದರೂ, 2020ರ ಈ ಅನುಭವವನ್ನು ಜನರು ತಮ್ಮ ಹಾಡು-ಹಸೆಗಳಲ್ಲಿ ಮೆಲುಕುಹಾಕುವಂತೆ ಮಾಡುವ, ಚೈನಾದಿಂದ ಆರಂಭಿಸಿದ ಈ ಪ್ರಭಾವಿ ವೈರಸ್ಸಿನ ಅಭಿಯಾನವನ್ನು ಮಾನವ ನಿರ್ಮಿತ (ಕುತಂತ್ರ) ಎನ್ನೋಣವೋ ಅಥವಾ ಮಾನವನಿಗೆ ಮೀರಿದ (ಅತಂತ್ರ)ವೆಂದು ಕರೆಯೋಣವೋ?  ಈಗ ನಮಗೆ ಲಭ್ಯವಿರುವ ವಿಚಾರಗಳ ವಿನಿಮಯವೇ ಈ ಬರಹ.  ಕುತಂತ್ರವೋ-ಅತಂತ್ರವೋ ಎನ್ನುವ ತೀರ್ಮಾನ ನಿಮ್ಮದು!

***
ಅತಂತ್ರ: ಚೈನಾದವರು ಬಹುಪ್ರಾಣಿ ಭಕ್ಷಕರು - ಒಂದು ರೀತಿಯಲ್ಲಿ ಮಾಂಸ ಪ್ರಿಯರು, ಅದರಲ್ಲೂ ಅನೇಕ ಕಾಡು ಪ್ರಾಣಿಗಳನ್ನು ಫಾರ್ಮ್‌ಗಳಲ್ಲಿ ವ್ಯವಸ್ಥಿತವಾಗಿ ಅವುಗಳನ್ನು ಬೆಳೆಸಿ ತಮ್ಮ exotic cuisine ನಲ್ಲಿ ಬಳಸುವವರು.  ಚಿಕ್ಕ ಇರುವೆಗಳಿಂದ ಹಿಡಿದು, ಹಾರುವ ಬಾವುಲಿಯವರೆಗೆ, ಮೀನುಗಳಿಂದ ಹಿಡಿದು ಸರೀಸೃಪಗಳವರೆಗೆ (ಇವರು ಮನುಷ್ಯರನ್ನು ಮಾತ್ರ ತಿಂದ ನಿದರ್ಶನಗಳು ಸಿಗವು), ಅಂದರೆ ಉಳಿದೆಲ್ಲ ಜೀವಿಗಳು ಮಿಲಿಯನ್ನುಗಟ್ಟಲೆ ಚೈನಾ ದೇಶದ ಜನರ ಉದರವನ್ನು ಪೋಷಿಸಿರುವುದಕ್ಕೆ ಬಹಳ ನಿದರ್ಶನಗಳು ಸಿಕ್ಕಾವು.

ನಾವು ಅಮೇರಿಕದಲ್ಲಿ ಇಂಡಿಯನ್ ಸ್ಟೋರು, ರೆಸ್ಟೋರಂಟುಗಳಿಗೆ ಹೋದಾಗ ಒಂದು ರೀತಿಯ (ಕಮಟು) ವಾಸನೆ ನಮಗೆ ಎದುರಾಗುತ್ತದೆ.  ನಾವು ಭಾರತೀಯರಿಗೆ ಅದು ನಮಗೆ ಗೊತ್ತಾಗದಷ್ಟು ಹೊಂದಾಣಿಕೆಯಾಗಿರುತ್ತದೆ. (ನಮ್ಮ ಪಕೋಡಾ ಅಥವಾ ದೋಸೆ ವಾಸನೆ ನಮಗೆ ಪ್ರಿಯವಾಗಿರಬಹುದು, ಆದರೆ, ಅದು ಎಲ್ಲರಿಗೂ ಇಷ್ಟವಾಗಬೇಕು ಎಂದೇನೂ ಇಲ್ಲ). ಅದೇ ರೀತಿ ನಾವು ಕೊರಿಯನ್, ವಿಯಟ್‍ನಾಮೀಸ್, ಚೈನೀಸ್ ಅಂಗಡಿಗಳಿಗೆ ಹೋದಾಗ, ಇನ್ನೊಮ್ಮೆ ಇಲ್ಲಿ ಬರಬಾರದು ಎನ್ನುವಷ್ಟರ ಮಟ್ಟಿಗೆ ಅಲ್ಲಿ ಗಬ್ಬುನಾತ ಹೊಡೆಯುತ್ತಿರುತ್ತದೆ.  ಇವರುಗಳು ಜೀವವೈವಿಧ್ಯವನ್ನು ನೋಡುವ ರೀತಿ ನಮಗಿಂತಲೂ ಭಿನ್ನ.  ಕೊಳೆಯಾದ ಗಾಜಿನ ಅಕ್ವೇರಿಯಂ‌ನಲ್ಲಿ ತುಂಬಿಕೊಂಡು ದಯನೀಯ ಸ್ಥಿತಿಯಲ್ಲಿರುವ ಮೀನುಗಳು, ಏಡಿಗಳು, ಮೊದಲಾದ ಪ್ರಾಣಿಗಳನ್ನು ಅಲ್ಲಿ ನೋಡಿ ಖೇದವೆನಿಸುತ್ತದೆ.  ಅದು ಅವರಿಗೆ ಸಹನೀಯವಾದದ್ದು, ಅವರ ಧರ್ಮದಲ್ಲಿ (ಜೀವನಕ್ರಮ) ಅದು ಯಾರಿಗೂ ದೊಡ್ಡದೆನಿಸುವುದಿಲ್ಲ. ಇಂತಹ ಸಂದರ್ಭದಲ್ಲಿ, ಚೈನಾದ ವುಹಾನ್‌ನ ಒಂದು ಮಾರುಕಟ್ಟೆಯಲ್ಲಿ ಒಂದರ ಮೇಲೂಂದು ಹೇರಿಸಿಟ್ಟ ಕೇಜುಗಳಲ್ಲಿ ಒಂದು ಪ್ರಾಣಿಯ ಎಂಜಲು-ಗಲೀಜು ಮತ್ತೊಂದು ಪ್ರಾಣಿಯ ಜೊತೆ ಸಂಘರ್ಷ ಉಂಟಾದಾಗ ಹುಟ್ಟಿದ್ದು ಈ ವಿಭಿನ್ನ ವೈರಸ್ ಎಂದು ಕೆಲವು ಕಡೆ ಹೇಳಲಾಗಿದೆ.  ಅದೇ ರೀತಿ ಬಾವುಲಿಗಳನ್ನು (bats) ಕತ್ತರಿಸುವಾಗ ಅದರ ರಕ್ತದಲ್ಲಿ ಇದ್ದ ವೈರಸ್ಸು ಒಬ್ಬರಿಂದ ಮತ್ತೊಬ್ಬರಿಗೆ ತಗುಲು ಬೆಳೆಯಿತು ಎಂದೂ ಹೇಳಲಾಗುತ್ತದೆ.

ಒಮ್ಮೆ ಹೀಗೆ ಜನರಿಂದ ಜನರಿಗೆ ಬೆಳೆದ ವೈರಸ್ಸು ಡಿಸೆಂಬರ್‌ನಲ್ಲಿ ಸುದ್ದಿ ಮಾಡಿದರೂ ಚೈನಾ ಅದನ್ನು ತಕ್ಷಣ ದೊಡ್ಡದು ಮಾಡಲಿಲ್ಲ, ಅದು ಬೆಳೆದು ಪ್ರಕೋಪಕ್ಕೆ ತಿರುಗಿದ ನಂತರ ಎಲ್ಲ ಕಡೆಗೆ ಸುದ್ದಿಯಾಯಿತು.  ವುಹಾನ್ ಅನ್ನು ಸಂಪೂರ್ಣವಾಗಿ ಬಂದ್ ಮಾಡಲಾಯಿತು.  ಜನರನ್ನು ಮನೆಗಳಲ್ಲಿ ಅಮಾನವೀಯ ರೀತಿಯಲ್ಲಿ ಕೂಡಿ ಹಾಕಲಾಯಿತು.  ಇದು ಅವರ ಅತಂತ್ರ ಸ್ಥಿತಿಗೆ ಹಿಡಿದ ಕನ್ನಡಿ.  ಕೊನೆಗೆ ಕಡಿಮೆ ಸಾವುಗಳನ್ನು ದಾಖಲಿಸಿ (ಸೋಂಕು ತಗುಲಿದವರ ಮತ್ತು ಸತ್ತವರ percentage ಪ್ರಕಾರ ನೋಡಿದರೆ), ಈಗ ಏನೂ ಆಗೇ ಇಲ್ಲವೆನ್ನುವಂತೆ ಮೊದಲೇ expression ಇರದ ಮುಖಗಳು ಈಗಂತೂ ಮುಖ ಗಂಟು ಹಾಕಿಕೊಂಡ ಹಾಗೆ ಎಲ್ಲ ಕಡೆ ಕಂಡು ಬರುತ್ತದೆ.

ಕಳೆದ ಹತ್ತು ವರ್ಷಗಳಲ್ಲಿ ಸಾರ್ಸ್, H1-N1, ಹಕ್ಕಿ ಜ್ವರ ಮೊದಲಾದವುಗಳಿಂದ ಪೂರ್ವೋತ್ತರ ದೇಶಗಳು ಬಳಲಿದ್ದವು, ಅದರಿಂದಾಗಿ ಈ ಕೋವಿಡ್-19 ಅನ್ನು ಎದುರಿಸಲು ಅವೆಲ್ಲ ದೇಶಗಳು ಪರೋಕ್ಷವಾಗಿ ತಯಾರಾಗಿದ್ದವು.  ಆದರೆ, ಕೆಲವು ಯೂರೋಪಿಯನ್ ದೇಶಗಳು ಮತ್ತು ಅಮೇರಿಕದಲ್ಲಿ ಈ ರೀತಿ ಹಿಂದೆಂದೂ ಆಗಿರದ ಕಾರಣದಿಂದ, ಮೊಟ್ಟ ಮೊದಲನೇ ಬಾರಿಗೆ ಇಲ್ಲಿಯ ಜನ (ಈ ಪ್ರಮಾಣದಲ್ಲಿ) ಸಂಕಷ್ಟವನ್ನು ಅನುಭವಿಸಬೇಕಾಗಿ ಬಂತು ಎನ್ನುವುದು ಅನೇಕರ ಅಂಬೋಣ.

***
ಕುತಂತ್ರ: ಚೈನಾದವರು ಮಹಾ ಬುದ್ದಿವಂತರು.  ವುಹಾನ್ ಹತ್ತಿರದ ತಮ್ಮ ಮಿಲಿಟರಿ ಲ್ಯಾಬೋರೇಟರಿ ಒಂದರಲ್ಲಿ ಈ ಹೊಸ ವೈರಸ್ಸನ್ನು ಸೃಷ್ಟಿಸಿ ಜಗತ್ತಿಗೇ ಬಿಡುಗಡೆ ಮಾಡಿ ಜಗತ್ತನ್ನು ಆಳುವ ಯೋಚನೆ ಹೊಂದಿದ್ದರು.  ಅಥವಾ ಲ್ಯಾಬ್‍ನಲ್ಲಿದ್ದ ವೈರಸ್ಸು ಯಾರದ್ದೋ ತಪ್ಪಿನಿಂದ ಹೊರಗೆ ಬಂದಿತೆಂದು ಅನೇಕ ಕಡೆ ಓದಲು ಸಿಗುತ್ತದೆ.  ಹಾಗಾಗಿ, ಹುಬೈ ಪ್ರಾಂತ್ಯದಲ್ಲಿ ಮೊದಲು ಇದರ ಪರಿಚಯವಾಯಿತು.  ಆದರೆ, ಇದರ ಪರಿಣಾಮ ಉಳಿದ ರಾಜ್ಯಗಳ ಮೇಲೆ ಅಷ್ಟೊಂದು ಆಗಲಿಲ್ಲ.

ನೀವೇ ಯೋಚಿಸಿ: ವುಹಾನ್ ನಿಂದ ಇಂಟರ್‌ನ್ಯಾಷನಲ್ ಪ್ರಯಾಣಿಕರ ಮುಖೇನ ಅನೇಕ ದೇಶಗಳಿಗೆ ಈ ಕೊರೋನಾ ವೈರಸ್ ಹರಡಿರುವಾಗ, ಆಂತರಿಕ ಚೈನಾದೊಳಗೇ ಇದು ಬೇರೆ ಕಡೆ ಏಕೆ ಹಬ್ಬಲಿಲ್ಲ?  ಚೈನಾದ ಅಂಕಿ-ಅಂಶಗಳನ್ನು ನಂಬಬೇಕೋ ಬಿಡಬೇಕೋ ಗೊತ್ತಿಲ್ಲ, ಆದರೂ ಅವರು ಹೇಳುವ ಹಾಗೆ ಬರೀ ಹುಬೈ ಪ್ರಾಂತ್ಯದಲ್ಲಿ ಮಾತ್ರ ಸಾವುಗಳಾಗಿವೆಯೇ? ಒಂದೂವರೆ ಬಿಲಿಯನ್‌ನಷ್ಟು ಜನರಿರುವ ಚೈನಾದಲ್ಲಿ (ಈ ಲೇಖನ ಬರೆಯುವ ಹೊತ್ತಿಗೆ) ಕೇವಲ 81,802 ಜನರಿಗೆ ಸೋಂಕು ತಗಲಿದ್ದು, ಅವರಲ್ಲಿ ಕೇವಲ 3,333 ಜನರು ಮಾತ್ರ ಸಾವಿಗೆ ಈಡಾಗಿದ್ದಾರೆ ಎಂದರೆ ಹೇಗೆ ನಂಬುವುದು.  ಸೋಂಕು ತಗುಲಿದವರ ಸಂಖ್ಯೆಯಲ್ಲಿ (330 ಮಿಲಿಯನ್ ಜನರಿರುವ) ಅಮೇರಿಕ 396,981 ಒಟ್ಟು ಕೇಸುಗಳನ್ನು ದಾಖಲಿಸಿ ಅವರಲ್ಲಿ 12,758 ಜನರು ಮರಣ ಹೊಂದಿರುವುದನ್ನು ಪ್ರಕಟಿಸಿರುವುದನ್ನು ನೀವೇ ನೋಡಬಹುದು.  ಅಲ್ಲದೇ ಒಂದೂವರೆ ಬಿಲಿಯನ್ ಜನರಿರುವ ಚೈನಾ ಇವತ್ತಿಗೆ ಒಟ್ಟು ಕೇಸುಗಳಲ್ಲಿ ಉಳಿದ ರಾಷ್ಟ್ರಗಳಿಗೆ ಹೋಲಿಸಿದಾಗ ಐದನೇ ಸ್ಥಾನಕ್ಕೆ ಇಳಿದಿರುವುದನ್ನೂ ನೋಡಬಹುದು.


Image 1: COVID-19 World view (April 07, 2020 at 9:23 PM ET)



Image 2: COVID-19 China view (April 07, 2020 at 9:23 PM ET)

ಇನ್ನು ಎರಡನೆಯ ಚಿತ್ರದಲ್ಲಿ, ಹುಬೈ ಪ್ರಾಂತ್ಯದ ಒಟ್ಟು ಕೇಸುಗಳು 67,803.  ಉಳಿದ 30 ರಾಜ್ಯಗಳಲ್ಲಿ ಉಳಿದ ಹದಿಮೂರು ಸಾವಿರ ಕೇಸುಗಳು ಚದುರಿರುವುದನ್ನು ಕೂಡ ಕಾಣಬಹುದು.
ಈ ಅಂಕಿ-ಅಂಶಗಳ ಪ್ರಕಾರ, ಚೈನಾದವರು ಬರೀ ಇಂಟರ್‌ನ್ಯಾಷನಲ್ ಪ್ರಯಾಣಿಕರೆಂದೋ ಅಥವಾ ಅವರ ಪ್ಯಾಕೇಜು/ಪಾರ್ಸೆಲ್ಲುಗಳ ಮೂಲಕ ಪ್ರಪಂಚದಾದ್ಯಂತ ಕೋವಿಡ್ ಹರಡಿತೆಂದು ಊಹಿಸಬಹುದು.  ಇಲ್ಲವೆಂದರೆ, ಅವರ ನಂಬರುಗಳು ಖಂಡಿತ ನಂಬಲರ್ಹವಲ್ಲದವು.  ಉದಾಹರಣೆಗೆ, ಹುಬೈ ಪ್ರಾಂತ್ಯದಿಂದ ಚೈನಾದ ಉಳಿದ ದೊಡ್ಡ ನಗರಗಳಿಗೆ ಜನರು ಹೋಗೇ ಇಲ್ಲವೇ? ನಮ್ಮ ನ್ಯೂ ಯಾರ್ಕ್‌ ನಗರದಲ್ಲಿ ಇಷ್ಟೊಂದು ಜನರು ಬಳಲುತ್ತಿರುವಾಗ ಚೈನಾದ ನಗರಗಳು ನಿರಾತಂಕವಾಗಿರಲು ಕಾರಣವೇನು?

***
ಇದು ಚೈನಾದವರ ಅತಂತ್ರವೋ, ಕುತಂತ್ರವೋ... ಅದನ್ನು ನಿಮ್ಮ ತೀರ್ಮಾನ, ಅಭಿಪ್ರಾಯಗಳಿಗೇ ಬಿಡೋಣ.  ಆದರೆ, ಇಷ್ಟಂತೂ ಖಂಡಿತ: ಇದರಿಂದಾಗಿ/ಇವರಿಂದಾಗಿ ವಿಶ್ವದಾದ್ಯಂತ ಅನೇಕ ವ್ಯಾಪಾರ ವಹಿವಾಟುಗಳು ನೆಲಕಚ್ಚಿದವು.  ಅನೇಕರ ರಿಟೈರ್‌ಮೆಂಟ್ ಹಣ ಕೆಲವೇ ವಾರಗಳಲ್ಲಿ ಮಾಯವಾಯಿತು.  ಎಷ್ಟೋ ಜನರು ಹಸಿವಿನಿಂದ ಬಳಲುವಂತಾಯ್ತು.  ನಾವು ಇನ್ನಾರು ವಾರಗಳಲ್ಲಿ ಹೊರಗೆ ಹೊರಟರೂ ನಮ್ಮ ಅರ್ಥ ವ್ಯವಸ್ಥೆ ಇದರಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನೂ ಕೆಲವೇ ವರ್ಷಗಳೇ ಬೇಕಾಗುತ್ತದೆ.

ಇದು ಮಾನವನ ದೌರ್ಜ್ಯನ್ಯಕ್ಕೆ ನಿಸರ್ಗ ಕೊಟ್ಟ ಪೆಟ್ಟು ಎಂದು ಒಂದಿಷ್ಟು ಜನ ನಂಬಿಕೊಂಡಿದ್ದಾರೆ, ಇನ್ನು ಕೆಲವರು ಇದು ಮಾನವ ನಿರ್ಮಿತ ಹೊಗೆ ಬರದ ನ್ಯೂಕ್ಲಿಯರ್ ಬಾಂಬು ಎಂದು ಚೈನಾದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ!

Sunday, July 28, 2019

ರಾಜಕೀಯ ಪ್ರಹಸನ

ವರ್ಷದ ಮೇ ತಿಂಗಳ ಲೋಕಸಭಾ ಚುನಾವಣೆಯಲ್ಲಿ ಎರಡು ಮಹತ್ವದ ಅಂಶಗಳು ಗಮನ ಸೆಳೆದವು: ಒಂದು, ದೇಶದಾದ್ಯಂತ ನರೇಂದ್ರ ಮೋದಿಯವರ ಮುಂದಾಳತ್ವದಲ್ಲಿ ಜನರು ನಂಬಿಕೆ ಇಟ್ಟು ಇನ್ನೈದು ವರ್ಷಗಳ ಸ್ಥಿರ ಆಡಳಿತಕ್ಕೆ ಬುನಾದಿ ಹಾಕಿರುವ ವಿಷಯ, ಅದರ ಜೊತೆಗೆ ಉಳಿದ ಪಕ್ಷಗಳ ಪ್ರಣಾಳಿಕೆಗಳ ಸಾರಾಸಗಟು ತಿರಸ್ಕಾರ.  ಮೇಲ್ನೋಟಕ್ಕೆ ಇವೆರಡೂ ಒಂದೇ ನಾಣ್ಯದ ಎರಡು ಮುಖಗಳಂತೆ ಕಂಡು ಬಂದರೂ, ಈ ಚುನಾವಣೆಯಲ್ಲಿ ಹಿರಿಯ ಮುತ್ಸದ್ದಿ ಇಲ್ಲದ ಉಳಿದ ರಾಷ್ಟ್ರೀಯ ಪಕ್ಷಗಳಿಗೆ ಬೆಲೆ ಸಿಕ್ಕಿಲ್ಲದಿರುವುದು ಎದ್ದು ಕಾಣುತ್ತದೆ.  ಹೀಗಾಗಿ ಒಂದು ಪಕ್ಷ ಅಥವಾ ಬಣಕ್ಕೆ ಅವುಗಳ ಧ್ಯೇಯೋದ್ದೇಶಗಳು ಎಷ್ಟು ಮುಖ್ಯವೋ ಅಷ್ಟೇ ಅವುಗಳನ್ನು ಪ್ರತಿಬಿಂಬಿಸಿ ಜನಮನಗಳಿಗೆ ತಲುಪಿಸುವ ಒಂದು ಹಿರಿಯ ಧ್ವನಿಯೂ ಕೂಡ ಅಷ್ಟೇ ಮುಖ್ಯವಾಗಿ ಕಂಡುಬರುತ್ತದೆ.  ಇದು ಯಾವತ್ತಿಗೂ ಸತ್ಯ.  ಹಿಂದಿನ ಸ್ವಾತಂತ್ರ್ಯ ಸಂಗ್ರಾಮದ ಕಾಲದಲ್ಲಿ ನಮ್ಮ ವರ್ಚಸ್ವಿ ಜನನಾಯಕರುಗಳ ಕರೆಗೆ ಓಗೊಟ್ಟು ಲಕ್ಷಾಂತರ ಜನ ತಮ್ಮ ಮನೆಮಠಗಳನ್ನು ತೊರೆದು ಚಳವಳಿಯಲ್ಲಿ ಧುಮುಕಲಿಲ್ಲವೇ? ಹಾಗೇ, ಇಂದಿನ ಪ್ರಜಾಸತ್ತೆಯಲ್ಲಿಯೂ ಸಹ ಹಿರಿಯ ನಾಯಕರ ಕರೆಗೆ ಬೆಲೆ ಇದೆ, ಆದರೆ ಅಂತಹ ವರ್ಚಸ್ಸಿನ ಹಿರಿಯ ನಾಯಕರುಗಳ ಕೊರತೆ ಬಹಳ ಎದ್ದು ಕಾಣುತ್ತದೆ.  ದೇಶದ ಉದ್ದಗಲಕ್ಕೆ ಎಣಿಸಿದರೆ ನೂರಾರು ಪಕ್ಷಗಳು ತಲೆ ಎತ್ತಿರುವ ನಮ್ಮ ದೇಶದಲ್ಲಿ ಅಷ್ಟೇ ಪ್ರಭಾವಿಗಳಾಗಿ ಜನಾಕರ್ಷಣೆಯನ್ನು ಹೊಂದಿರುವ ಮೂರು ಜನ ಮುಖಂಡರುಗಳಿಲ್ಲ ಎಂದು ಹೇಳಲು ಖೇದವಾಗುತ್ತದೆ.  ಪ್ರಾದೇಶಿಕ ಮಟ್ಟದಲ್ಲಿ ಅನೇಕ ಜನಸ್ಪಂದನದ ವ್ಯಕ್ತಿತ್ವಗಳು ಗೋಚರಿಸಬಹುದು, ಆದರೆ ಅಂತಹ ಮುಂದಾಳುಗಳ ಧ್ವನಿಗಳು ತಮ್ಮ ತಮ್ಮ ಸ್ಥಳೀಯ ಜಂಜಾಟಗಳಲ್ಲಿ ಕಳೆದುಕೊಳ್ಳುತ್ತವೆಯೇ ವಿನಾ ದೇಶವನ್ನು ಬೆಳೆಸುವ ಮಟ್ಟಿಗೆ ಬೆಳೆಯುವುದು ಅಪರೂಪ.  ಈ ನಿಟ್ಟಿನಲ್ಲಿ, ಗುಜರಾತ್ ಮೂಲದಲ್ಲಿ ಉದ್ಭವಿಸಿ ರಾಷ್ಟ್ರವ್ಯಾಪಿ ಬೆಳೆದು ನಿಂತಿರುವ ಹೆಮ್ಮರ ಮೋದಿ ಎನ್ನಬಹುದು.

***
ನಮ್ಮ ಜನ ಸಾಮಾನ್ಯರಲ್ಲಿ ಒಂದು ಸಹಜವಾದ ಪ್ರಶ್ನೆ ಆಗಾಗ್ಗೆ ಏಳುತ್ತಿರುತ್ತದೆ: ಈ ರಾಜಕಾರಣಿಗಳಿಗೆ ಎಷ್ಟು ದುಡ್ಡು ಮಾಡಿದರೂ (ತಿಂದರೂ) ತೃಪ್ತಿಯಾಗುವುದಿಲ್ಲವಲ್ಲ, ಏಕೆ?  ಈ ಪ್ರಶ್ನೆಯ ಆಳಕ್ಕೆ ಹೋದಂತೆಲ್ಲ, ಹುಲಿ ಸವಾರಿ ಮಾಡಿಕೊಂಡು ಅಟ್ಟಹಾಸ ಮಾಡುತ್ತಿರುವ ಅನೇಕ ಜನನಾಯಕರ ಮುಖ ಗೋಚರಿಸಬಹುದು. ಇವರೆಲ್ಲ ದಾಹದ ಕೂಪವೆನ್ನುವ ಆಳವಾದ ಕೊರಕಲಿನಲ್ಲಿ ಭ್ರಷ್ಟಾಚಾರವೆನ್ನುವ ಹುಲಿ ಸವಾರಿಯನ್ನು ಮಾಡಿಕೊಂಡು ಗುಟುರು ಹಾಕಿಕೊಂಡಿರುತ್ತಾರೆ.  ಆದರೆ, ಪಾಪ, ಇವರ ಜೀವಮಾನದಲ್ಲೆಲ್ಲೂ ಇವರು ಹುಲಿಯ ಬೆನ್ನಿನಿಂದ ಕೆಳಗಿಳಿಯಲು ಸಾಧ್ಯವೇ ಇಲ್ಲದೇ, ಈ ಹುಲಿ ಸವಾರಿ ಮಾಡುತ್ತಲೇ ನಿವೃತ್ತಿ, ಮೋಕ್ಷ ಮತ್ತಿನ್ನೆಲ್ಲವನ್ನೂ ಕಂಡುಕೊಳ್ಳುತ್ತಾರೆ.  ನಮ್ಮ ರಾಜಕಾರಣಿಗಳು ಯಾವ ಸ್ಥರದಲ್ಲೇ ಇರಲಿ, ಮನೆಗೆ ಬಂದು ಮೂಟೆಗಟ್ಟಲೆ, ಸೂಟ್‌ಕೇಸುಗಟ್ಟಲೆ ಕೋಟ್ಯಾಂತರ ರೂಪಾಯಿ "ಅನುದಾನ"ವನ್ನು ತಂದು ಕೊಡುವವರಿರುವಾಗ ಹುಲಿ ಸವಾರರು ಒಲ್ಲೆ ಎಂದು ಹೇಳಲು ಸಾಧ್ಯವಿದೆಯೇ? ಉದಾಹರಣೆಗೆ, ಪ್ರತಿವರ್ಷ ಪ್ರತಿ ಜಿಲ್ಲೆಯ ಅಭಿವೃದ್ಧಿಗಾಗಿ ಸರ್ಕಾರದಿಂದ ಐವತ್ತು ಕೋಟಿ ಅನುದಾನ ಬರುತ್ತದೆ ಎಂದುಕೊಂಡರೆ, ಅದರ ಹತ್ತು ಪರ್ಸೆಂಟ್, ಅಂದರೆ ಐದು ಕೋಟಿ ನಮ್ಮ ಎಂ.ಪಿ.ಗಳ ಮನೆಗೆ ಬಂದು ಸೇರಿತೆಂದುಕೊಳ್ಳಿ.  ಅದನ್ನು ಬೇಡವೆಂದರೆ, ಇವರ ಹುಲಿ ಸವಾರಿಯ ವ್ಯವಸ್ಥೆಯೇ ಅಸ್ತವ್ಯಸ್ತವಾಗಿ ಕೊನೆಗೆ ಆ ಹುಲಿಯೇ ಇವರನ್ನು ಬಲಿತೆಗೆದುಕೊಳ್ಳುತ್ತದೆ.  ಅದನ್ನು ಇಟ್ಟುಕೊಂಡರೆ, ಅದು ಕಪ್ಪು ಹಣದ ಲೆಕ್ಕಕ್ಕೆ ಸೇರಿಕೊಂಡು ಮುಂದಿನ ಚುನಾವಣೆಯವರೆಗೆ ಎಲ್ಲೋ ಮೂಲೆಯಲ್ಲಿ ಕೊಳೆಯುತ್ತದೆ!  ಈ ಹುಲಿ ಸವಾರಿ ಒಂದು ಉದಾಹರಣೆ ಅಷ್ಟೇ.  ತಮ್ಮ ತಮ್ಮ ತಾಕತ್ತಿಗೆ ತಕ್ಕಂತೆ, ತಮ್ಮ ತಮ್ಮ ಪರಿಸರಕ್ಕೆ ತಕ್ಕಂತೆ, ಬೇರೆಬೇರೆ ಪ್ರಾಣಿಗಳ ಸವಾರಿ ಮಾಡಿ ತಮ್ಮ ರಾಜಕೀಯ ಬದುಕನ್ನು ಕಟ್ಟಿಕೊಳ್ಳುವವರು ಇದ್ದಾರೆ.

***
ಹುಲಿ ಸವಾರಿಯ ಬಯಕೆಯ ಮೂಲವೇನು? ಅದೆಲ್ಲಿಂದ ಉತ್ಪನ್ನವಾಯಿತು ಎಂದು ಶೋಧಿಸಿ ನೋಡಿದಾಗ ನಮ್ಮ ಚುನಾವಣಾ ಪ್ರಕ್ರಿಯೆ ಕಣ್ಣಿಗೆ ಬಿತ್ತು.  ನೀವು ಹಣಕಾಸು ವಿಲೇವಾರಿಯ ಯಾವುದೇ ಶಾಸನವನ್ನು ಬರೆಯಿಸಿ.  ಪ್ರಪಂಚದ ಪೋಲೀಸರನ್ನೆಲ್ಲ ತಂದು ನಮ್ಮ ನಮ್ಮ ಜಿಲ್ಲೆಯಲ್ಲಿ ಎಲೆಕ್ಷನ್ ಉಸ್ತುವಾರಿಕೆಗೆ ಬಿಡಿ, ತಪ್ಪಿತಸ್ತರಿಗೆ ಎಂತಹ ಕಠಿಣ ಶಿಕ್ಷೆಯನ್ನಾದರೂ ಕೊಡಿಸಿ... ನೀವು ಅದೇನೇ ತಿಪ್ಪರಲಾಗ ಹಾಕಿದರೂ, ಹಣ-ಹೆಂಡ ಮತ್ತಿತರ ವಸ್ತುಗಳನ್ನು ಹಂಚಿ ಚುನಾವಣೆ ಗೆಲ್ಲುವ ಶಕ್ತಿಗಳಿಗೆ ಕಡಿವಾಣ ಹಾಕಲಾರಿರಿ.  ಇತ್ತೀಚೆಗೆ ನಾನು ಕೇಳಿದ ಒಂದೆರಡು "ಕೊಟ್ಟು-ತೆಗೆದುಕೊಳ್ಳುವ" ಉದಾಹರಣೆಗಳಲ್ಲಿ, ಒಬ್ಬ ಮಲ್ಟಿ ಅಪಾರ್ಟ್‌ಮೆಂಟ್ ಮಾಲಿಕ ತನ್ನ ಒಂದು ವರ್ಷದ ಎಲೆಕ್ಟ್ರಿಸಿಟಿ ಬಿಲ್ ಅನ್ನು ಕೊಡದೇ ಉಳಿಸಿಕೊಂಡಿರುತ್ತಾನೆ.  ತನ್ನ ಹತ್ತಿರ ಓಟು ಕೇಳಲು ಹೋದವರಿಗೆ, ’ಈ ಬಿಲ್ ಅನ್ನು ಕಟ್ಟಿ ಬಾ...’ ಎಂದು ಬಿಲ್ ಕೊಟ್ಟು ಕಳುಹಿಸುತ್ತಾನೆ.  ಒಂದು ಪಕ್ಷದವರಿಗೆ ಕರೆಂಟ್ ಬಿಲ್, ಮತ್ತೊಂದು ಪಕ್ಷದವರಿಗೆ ನೀರಿನ ಬಿಲ್ ಕೊಟ್ಟರೆ, ಈ ರೀತಿಯ ಲೇವಾದೇವಿಯನ್ನು ಯಾರು ಹೇಗೆ ಕಂಡು ಹಿಡಿಯಲು ಸಾಧ್ಯ?  ನಮ್ಮ ಜನಗಳ ದುಡ್ಡೇ ಈ ರೀತಿ ತಿರುತಿರುಗಿ ಬೇನಾಮಿ ಖರ್ಚಾದಂತೆ ಕಂಡು ಬರುತ್ತಿದೆ ಎಂದು ಯಾರಿಗೆ ಹೇಳೋದು, ಯಾರಿಗೆ ಕೇಳೋದು?  ಒಂದು ಲೋಕಸಭಾ ಚುನಾವಣೆಯಲ್ಲಿ ಎಷ್ಟು ದುಡ್ಡು ಹೇಗೆ ಖರ್ಚು ಆಗುತ್ತದೆ ಎಂದು ನಿಮಗೆ ನಿಜವಾಗಿಯೂ ಕುತೂಹಲವಿದ್ದರೆ, ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ವರ್ಷದ ಅವಧಿಯಲ್ಲಿ ಎರಡು ಬಾರಿ ಸೋತ ಮಧು ಬಂಗಾರಪ್ಪ ಅವರನ್ನು ಕೇಳಿ ನೋಡಿ!

ಒಂದು ಸಮೀಕ್ಷೆಯ ಪ್ರಕಾರ ಒಂದು ಜಿಲ್ಲೆಯ ಚುನಾವಣೆಯ ಖರ್ಚು ಕಡಿಮೆ ಎಂದರೆ ನೂರು ಕೋಟಿ ರುಪಾಯಿಗಳು!  ಕೆಲವೊಮ್ಮೆ ಇದು ಅತಿರೇಕಕ್ಕೆ ಹೋಗಿ ನೀರಿನಂತೆ ಹಣ ಹರಿದು ಇನ್ನೂ ಹೆಚ್ಚು ಖರ್ಚಾಗಿರುವ ಉದಾಹರಣೆಗಳು ಕೂಡಾ ಇವೆ.  ಈ ನೂರು ಕೋಟಿಯನ್ನು ಒಬ್ಬ ಅಭ್ಯರ್ಥಿ ಅನೇಕ ಮೂಲಗಳಲ್ಲಿ "ಸಂಪಾದಿಸ"ಬಹುದು.  ಪಾರ್ಟಿ ಫಂಡಿನಿಂದ ದುಡ್ಡು ಹರಿಯಬಹುದು, ಉಳ್ಳವರ ಕಿಸೆಯಿಂದ ಹರಿದು ಬಂದಿರಬಹುದು, ತಾವೇ (ವಾಮಮಾರ್ಗದಲ್ಲಿ) ಕೂಡಿ ಹಾಕಿದ ಫಂಡ್ ಇರಬಹುದು, ಅಥವಾ ಇತರರ "ದೇಣಿಗೆ" ಇರಬಹುದು... ಇಷ್ಟೆಲ್ಲಾ ಖರ್ಚು ಮಾಡಿ, ಗೆಲ್ಲುವ, ಗೆದ್ದು ಮುನ್ನುಗ್ಗುವ ಛಲದ ಮೂಲ - ಈ (ಬಂಡವಾಳ) ದುಡ್ಡಿನ ನೂರು ಪಟ್ಟು ದುಡ್ಡು ಮಾಡುವುದು.  ಹೀಗೆ ದುಡ್ಡು ಮಾಡುತ್ತಾ ಮಾಡುತ್ತಾ, ಇವರುಗಳು ಬಿದ್ದ ಕೂಪದ ಆಳ ಹೆಚ್ಚಾದಂತೆಲ್ಲ, ಇವರುಗಳು ಏರುವ ಹುಲಿಯ ಕೊಬ್ಬು ಏರುತ್ತಲೇ ಹೋಗುತ್ತದೆ.

ಇನ್ನೈದು ವರ್ಷ ಕೇಂದ್ರದಲ್ಲಿ ಸ್ಥಿರ ಸರ್ಕಾರ, ಕರ್ನಾಟಕದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಧೂಳೀಪಟ - ಇವೆರಡರ ಮೊತ್ತ, ಕರ್ನಾಟಕದ ಅಸ್ಥಿರ ರಾಜಕಾರಣ, ಅಥವಾ "ಪ್ರಬಲ"ವಾದ ಪಕ್ಷದ ಆಡಳಿತ.  ಒಮ್ಮೆ ಪ್ರಬಲ ಸರ್ಕಾರದ ಆಡಳಿತವೆಂದರೆ ಅದು ಮೂರು, ಐದು, ಹತ್ತುವರ್ಷಗಳ ವರೆಗೆ ನಿರಂತರವಾಗಿ ಮುಂದೆ ಹೋಗುತ್ತಲೇ ಇರಬಹುದು.  ಈ ಹಂತದಲ್ಲಿಯೇ ತಮ್ಮ ತಮ್ಮ ಪಕ್ಷದ ನಿಷ್ಠತೆಯನ್ನು ಒರೆಗಲ್ಲಿಗೆ ಹಚ್ಚಿ ನೋಡುವ ಕೆಲವರು, ಅವಕಾಶ ಸಿಕ್ಕಿದ್ದೇ ತಡ ಜಿಗಿದರು.  ಇನ್ನು ಕೆಲವರು, ನೀತಿ, ನಿಯಮ, ಸತ್ಯಸಂಧತೆಯ ಹಿನ್ನೆಲೆಯಲ್ಲಿ ರಾಜೀನಾಮೆ ಬಿಸಾಡಿದರು.  ಇನ್ನು ಕೆಲವರು ಗೆದ್ದೆತ್ತಿನ ಬಾಲ ಹಿಡಿದರು.

***
ಗೆದ್ದು ಶಾಸಕ, ಸಂಸದನಾಗಿ ಆರಿಸಿ ಬಂದ ವ್ಯಕ್ತಿಗೆ ಮುಖ್ಯ ಎರಡು ಗುರಿಗಳಿವೆ: ತಮ್ಮ ಮೂಲ ಬಂಡವಾಳವನ್ನು ದ್ವಿಗುಣ-ತ್ರಿಗುಣ (ಉಲ್ಬಣ) ಗೊಳಿಸುವುದು, ತಮ್ಮ ಕಾರ್ಯಕರ್ತ-ಹಿತೈಷಿ-ಸಂತಾಪಕರ ನಡುವೆ ತಮ್ಮ ಪಾರಮ್ಯವನ್ನು ಮೆರೆಯುವುದು.  ಇವೆರಡೂ ಒಂದಕ್ಕೊಂದು ಪೂರಕವಾಗಲು ಸಾಧ್ಯವಾಗುವ ಸುಲಭ ವಿಧಾನವೇ - ಮಂತ್ರಿಯಾಗುವುದು!  ಈ ಸುಲಭ ಫಾರ್ಮುಲಾವನ್ನು ಮನದಟ್ಟು ಮಾಡಿಕೊಂಡ ರಾಜಕಾರಣಿಗಳೆಲ್ಲ ರಾತ್ರೋರಾತ್ರಿ ಮುತ್ಸದ್ದಿಗಳಾಗಿ, ಹಿರಿಯ ಹೋರಾಟಗಾರರಾಗಿ ವಿಜೃಂಭಿಸುವುದು.  ಮೊದಲೆಲ್ಲ ಐದು ಬಾರಿ ಗೆದ್ದು ಶಾಸಕರಾದರೂ ಮಂತ್ರಿ ಪದವಿಯನ್ನು ಕೇಳದೇ ತಮ್ಮ ಪಾಲಿಗೆ ಬಂದದ್ದನ್ನು ಪಾಲಿಸುವ ಪಕ್ಷನಿಷ್ಠರಿದ್ದರು. ಆದರೆ ಇಂದು, ಕೇವಲ ಎರಡು ಸಾರಿ ಶಾಸಕರಾಗಿ ಒಂದು ಕ್ಷೇತ್ರದಿಂದ ಆರಿಸಿ ಬಂದವರೆಲ್ಲ ಮಂತ್ರಿಗಳಾಗುವ ಕನಸು ಕಾಣುವವರಾಗಿದ್ದಾರೆ.  ಇರುವ ಇನ್ನೂರು ಚಿಲ್ಲರೆ ಶಾಸಕರೆಲ್ಲರಿಗೂ ಒಂದೊಂದು ಪದವಿ ಬೇಕು - ಅವರು ಪರ-ವಿರೋಧ ಯಾವುದೇ ಪಕ್ಷದಲ್ಲಿರಲಿ!

***
ಈ ಎಲ್ಲ ಗೊಂದಲಗಳ ನಡುವೆ ತಮ್ಮ ತಮ್ಮ ಕ್ಷೇತ್ರಗಳ ಬೆಳವಣಿಗೆಯನ್ನು ನೋಡುವವರು ಯಾರು? ತಮ್ಮ ತಮ್ಮ ಊರು, ಜಿಲ್ಲೆ, ರಾಜ್ಯಗಳನ್ನು ಬೆಳೆಸುವವರಾರು? ಎಲ್ಲರೂ ದುಡ್ಡು ಮಾಡಿಕೊಂಡಿದ್ದರೆ, ಅದಕ್ಕೆ ಮಿತಿಯೆಂಬುದೇ ಇಲ್ಲವೇ? ಇವರೆಲ್ಲ ಈ ರೀತಿ ದುಡ್ಡು ಮಾಡಿ ಕೊನೆಗೆ ಏನನ್ನು ಸಾಧಿಸುತ್ತಾರೆ? ಈ ರೀತಿ ಯಶಸ್ಸನ್ನು ಕಲ್ಪಿಸಿಕೊಳ್ಳುವ ನಮ್ಮ ನಡುವೆ, ದಶಕಗಳ ನಿರಂತರ ಶೋಧನೆ-ಸಂಶೋಧನೆ ಮಾಡಿ, ಮನುಕುಲದ ನಾಶಕ್ಕೆ ಟೊಂಕಕಟ್ಟಿ ನಿಂತ ಕಣ್ಣಿಗೆ ಕಾಣದ ವೈರಸ್ಸಿಗೆ ವಿರುದ್ಧವಾಗಿ ಹೋರಾಡಿ ಔಷಧಿ ಕಂಡು ಹಿಡಿಯಲು ತಮ್ಮ ಜೀವನವನ್ನೇ ಮುಡಿಪಾಗಿಡುವ ವಿಜ್ಞಾನಿಗಳು ಈ ಸಮಾಜದಲ್ಲಿ ಹುಟ್ಟುವುದು ಹೇಗೆ ಸಾಧ್ಯ?

ಇವರುಗಳು ಹೊಕ್ಕಿನಿಂತ ಆಳವಾದ ಬಾವಿಯ ದಾಹ ಇನ್ನೂ ಆಳಕ್ಕಿಳಿಸುತ್ತದೆ, ಅದು ಬತ್ತುವುದೂ ಇಲ್ಲ ಹಾಗೂ ತುಂಬುವುದೂ ಇಲ್ಲ ಎನ್ನುವ ಜಾಯಮಾನದ್ದು.  ಈ ವ್ಯವಸ್ಥೆಯೇ ನಮ್ಮ ನಡುವೆ ಭ್ರಷ್ಟಾಚಾರಕ್ಕೆ ಇಂಬುಕೊಡುವುದು.  ಒಬ್ಬ ಹಸಿದ ನಿರಕ್ಷರ ಬಡವನಿಗೆ ಸಾವಿರ ರೂಪಾಯಿ ತೋರಿಸಿ ಚುನಾವಣೆಯಲ್ಲಿ ಮತಹಾಕುವಂತೆ ಅಂಗಲಾಚಿ ಗೆಲ್ಲುವುದರಲ್ಲಿ ಏನು ದೊಡ್ಡತನವಡಗಿದೆ ಎಂದು ನಾವೆಲ್ಲ ಸಹಿಸಿಕೊಂಡು ಬಂದಿದ್ದೇವೋ ಎಂದು ಬೇಸರವಾಗುತ್ತದೆ.  ಇಂತವರೆಲ್ಲ ನಮ್ಮನ್ನು (ಏನೂ ಕೆಲಸ ಮಾಡದೆ) ಆಳುವವರು, ಇಂತವರನ್ನು ಸಹಿಸಿಕೊಳ್ಳುವ ನಾವು (ಕೈಲಾಗದ) ಪ್ರಜೆಗಳು!

ಇದು ಇಂದು ನಿನ್ನೆಯದಲ್ಲ - ಹಿಂದೆ ಆಗಿದೆ, ಇಂದು ಆಗುತ್ತಿದೆ, ಮುಂದೆ ಎಂದೆಂದೂ ಆಗುತ್ತದೆ, ಆಗುತ್ತಲೇ ಇರುತ್ತದೆ!

Thursday, January 01, 2009

ಹೊಸತು ಹಳೆಯದರ ನಡುವೆ

2008 ಅನ್ನೋದು ಈಗ ಇತಿಹಾಸ, ಇಷ್ಟೊತ್ತಿಗಾಗಲೇ ವಿಶ್ವದೆಲ್ಲಾಕಡೆ ಗಡಿಯಾರಗಳು ೨೦೦೯ ನ್ನು ತೋರಿಸ್ತಿರೋ ಹೊತ್ತಿನಲ್ಲಿ ಒಬ್ಬರೊನ್ನೊಬ್ಬರು ಕರೆ ಮಾಡಿ ’ಹೊಸ ವರ್ಷದ ಹಾರ್ಧಿಕ ಶುಭಾಶಯಗಳು’ ಎಂದು ವಿಶ್ ಮಾಡೋದು ನಿಂತು ಹೋಗಿರಬಹುದು. ಈ ಹಿಂದೆ ಹಲವಾರು ಸಾರಿ ಬರೆದ ಹಾಗೆ ನಾವು ನಮ್ಮನ್ನು ಇಂಗ್ಲೀಷ್ ಕ್ಯಾಲೆಂಡರಿಗೆ ಸಮರ್ಪಿಸಿಕೊಂಡಿದ್ದೇವೆ. ನಮ್ಮ ಮಾರ್ಚ್-ಏಪ್ರಿಲ್ ತಿಂಗಳ ನಡುವೆ ಎಲ್ಲೋ ಬರುವ ಚಂದ್ರಮಾನ ಯುಗಾದಿ, ಚೈತ್ರ ಮಾಸ ವಸಂತ ಋತು ಉತ್ತರಾಯಣ ಪುಣ್ಯಕಾಲಾರಂಭ ಇವೆಲ್ಲವೂ ನಿಧಾನವಾಗಿ ಮರೆಯಾಗುತ್ತಿವೆ. ಇದೇ ಹಾಡನ್ನು ಸ್ವಲ್ಪ ಜೋರಾಗಿ ಹಾಡಿದರೆ ’ಹಿಂದೂ ಮೂಲಭೂತವಾದಿ’ಯಾಗಿ ಬಿಡಬಹುದಾದ ಸಾಧ್ಯತೆಗಳೂ ಇವೆ, ಹಾಡನ್ನು ಹಾಡದೇ ಸುಮ್ಮನಿದ್ದರೆ ನಮ್ಮತನವನ್ನು ಕಳೆದುಕೊಂಡ ಅನುಭವಾಗುವುದೂ ನಿಜವೇ ಹೌದು.

ನಿನ್ನೆ ರಾತ್ರಿಯ ಇಪ್ಪತ್ತರ ಡಿಗ್ರಿ ಫ್ಯಾರನ್‌ಹೈಟ್ ಛಳಿಯಲ್ಲಾಗಲೀ ಇಂದು ಹೊಸ ವರ್ಷದ ದಿನದಲ್ಲಾಗಲೀ ಹೆಚ್ಚಿನ ಬದಲಾವಣೆಯೇನೂ ಇಲ್ಲ. ಬೇವುಗಳು ಇನ್ನೂ ಚಿಗುರಿಲ್ಲ, ಬೆಲ್ಲ ಮಾಡುವ ಸೀಜನ್ನೂ ಅಲ್ಲ. ಮರಗಳೆಲ್ಲ ಮರಗಟ್ಟಿ ಹೋಗೀ ನಿತ್ಯ ಹರಿದ್ವರ್ಣಿಗಳ ಮೇಲಿನ ಹಸಿರನ್ನು ಹೊರತುಪಡಿಸಿದರೆ ಮತ್ತೆಲ್ಲಾ ಛಳಿಯ ಬಣ್ಣವನ್ನು ಹೊದ್ದಿರುವ ಹೊರಗಿನ ವಾತಾವರಣ. ಅಲ್ಲಲ್ಲಿ ಬಿದ್ದ ಹಿಮ, ಮತ್ತೆ ಅದೇ ಅದರ ಛಳಿಗೆ ಹರಳುಗಟ್ಟಿ ಘನೀಭವಿಸಿ ಮತ್ತಿನ್ನಷ್ಟು ಶೀತಲತೆಯನ್ನು ಮುಖದ ಮೇಲೆ ತಂದುಕೊಂಡು ನೋಡೋಕೆ ಪುಡಿಯಂತೆ ಕಂಡುಬಂದರೂ ಒಳಗೆ ಗಟ್ಟಿಪದರವನ್ನು ಕಟ್ಟಿಕೊಂಡು ತನ್ನ ಮೈ ಶಾಖದಲ್ಲಿ ತಾನು ಯಾವುದೋ ಪ್ರಪಂಚವನ್ನು ಸೃಷ್ಟಿಸಿಕೊಂಡಿರುವ ಹೆಮ್ಮೆಯಿಂದ ಬೀಗುತ್ತಿರುವ ಹಾಗೆ ಕಂಡುಬಂತು. ಬೇಕಾದಷ್ಟು ಬೀಸುತ್ತಿರುವ ಗಾಳಿಗೆ ತಲೆ ತೂಗೀ ತೂಗೀ ಕಂಗಾಲಾದ ಮರಗಳು ಯಾವುದೋ ದಿಕ್ಕಿನಲ್ಲಿ ಅವಿತುಕೊಂಡ ವಾಯು-ವರುಣರಿಗೆ ಚಪ್ಪೆ ಮುಖವನ್ನು ತೋರಿಸುವಷ್ಟು ದೀನರಾಗಿ ಹೋಗಿದ್ದರೆ, ಕಪ್ಪಾದ ರಸ್ತೆಯ ಮೇಲ್ಮೈ ಸಹ ಇಂದು ಬೀಳದ ಬಿಸಿಲಿಗೆ ಶಪಿಸುತ್ತಾ ತಮ್ಮ ಕಳೆದುಕೊಂಡ ಕಾವಿಗೆ ಚಡಪಡಿಸಿ ತಮ್ಮ ಮೈ ಮೇಲೆ ತೆಳ್ಳಗೆ ಸವರಿದ ಬಿಳಿಯ ಮಂಜಿನ ಪುಡಿಗೆ ಹೆದರಿಕೊಂಡಿದ್ದವು. ನಿನ್ನೆ-ಇಂದಿಗೆ ಹೆಚ್ಚು ವ್ಯತ್ಯಾಸ ಕಂಡು ಬರದ ನನ್ನ ಹಾಗಿನ ಉಳಿದವೆಲ್ಲವೂ ಇದೊಂದು ದಿನ ಮತ್ತೊಂದು ದಿನ ಎಂದುಕೊಂಡು ಸುಮ್ಮನಿದ್ದವು.

ಹಳೆಯ ವರ್ಷ ಗೆದ್ದವರು ಬಿದ್ದವರೆದ್ದೆಲ್ಲವನ್ನು ಟಿವಿ ಪರದೆ ತಾನು ತೋರಿಸಿಯೇ ತೀರುತ್ತೇನೆ ಎಂದು ಸೆಡ್ಡು ಹೊಡೆದುಕೊಂಡು ನಿಂತಿತ್ತು. ಈ ವರ್ಷದ ಆರಂಭದ ಕ್ಷಣಗಣನೆ ಮುಗಿದು ಘಂಟೆಗಳೇ ಕಳೆದಿದ್ದರೂ ಹೊಸತಕ್ಕೆ ಈಗಾಗಲೇ ಹೋದವರಿಗಿಂತಲೂ ಹಳೆಯದ್ದಕ್ಕೆ ಅಂಟಿಕೊಂಡವರಿಗಿಂತಲೂ ಇನ್ನೂ ಹಳೆಯದು-ಹೊಸತರ ನಡುವೆ ಓಲಾಡುತ್ತಿರುವವರು ಓಲಾಡುತ್ತಲೇ ಇರುವವರ ಹಾಗೆ ಕೆಲವು ಚಿತ್ರಗಳಲ್ಲಿ ಕಂಡುಬಂತು. ಕ್ಯಾಲೆಂಡರಿನ ದಿನ ಬದಲಾದಂತೆ ತಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳು ತೊಲಗಿ ಹೋದವು ಎಂದುಕೊಂಡು ಬೀಗಿ ನಿಂತವರು ಈ ಮೊದಲು ಹೇಳಿದ ಯಾವುದೇ ಗುಂಪಿನಲ್ಲಿ ಸೇರದೇ ತಮ್ಮದೇ ಒಂದು ಪಂಥವನ್ನು ಕಟ್ಟಿಕೊಂಡವರಂತೆ ಕಂಡುಬಂದರು. ’ಹಾಗಾದರೆ ನಮ್ಮೆಲ್ಲ ಕಷ್ಟಗಳೆಲ್ಲ ತೊಲಗಿದವೇನು ಇಂದಿಗೆ?’ ಎಂದು ನಾನೆಸೆದ ಪ್ರಶ್ನೆಯೊಂದಕ್ಕೆ ನಮ್ಮ ಬ್ಯಾಂಕಿನ ಮ್ಯಾನೇಜರಿಣಿ ’ಇದು ಕೇವಲ ಐಸ್‌ಬರ್ಗಿನ ತುದಿ ಮಾತ್ರ!’ ಎಂದು ಈಗಾಗಲೇ ಕುಸಿದ ವ್ಯವಸ್ಥೆ ಮತ್ತಿನ್ನಷ್ಟು ಕುಸಿದು ಹೋಗುವ ಮುನ್ಸೂಚನೆಯನ್ನು ನೀಡಿದಳು. ಅದೇ ಐಸ್‌ಬರ್ಗ್ - ಅದೆಷ್ಟೋ ವರ್ಷಗಳಿಂದ ಹರಳುಕಟ್ಟಿದ ಹಿಮ, ನೀರಿನ ಒಳಗೇ ತನ್ನದೊಂದು ಪುಟ್ಟ ಪ್ರಪಂಚದ ವಾಸ್ತ್ಯವ್ಯವನ್ನು ಸ್ಥಾಪಿಸಿಕೊಂಡಿರುವ ಅದು ಅಷ್ಟು ಸುಲಭವಾಗಿ ಕರಗಲಾರದು, ಅದು ಪುಡಿಯಾಗಿ-ಕರಗುವ ಮೊದಲು ಅದೆನ್ನೆಷ್ಟು ಟೈಟಾನಿಕ್ ವ್ಯವಸ್ಥೆಗಳನ್ನು ಬಲಿತೆಗೆದುಕೊಳ್ಳಬೇಕೋ ಬಲ್ಲವರಾರು?

ನಿನ್ನೆಗೆ ಕೊರಗಬಾರದು, ನಾಳೆಗೆ ನರಳಬಾರದು, ಇಂದಿನದನ್ನು ಇಂದೇ ನೋಡಿ ಅನುಭವಿಸಿ ತೀರುವ ಪುಟ್ಟದೊಂದು ತಂತ್ರ. ಆ ತಂತ್ರದಲ್ಲಿನ ಸೂತ್ರದಾರನ ಬೆನ್ನಿಗೆ ಎಲ್ಲೆಲ್ಲಿಂದಲೋ ಹೊತ್ತು ತಂದ ಈವರೆಗೆ ಶೇಖರಿಸಿಕೊಂಡ ಒಂದಿಷ್ಟು ಬ್ಯಾಗುಗಳು. ನಾಗಾಲೋಟದ ಮನಸು, ಅದಕೆ ವ್ಯತಿರಿಕ್ತವಾಗಿ ಗಟ್ಟಿಯಾದ ಭೂಮಿಗೆ ಅಂಟಿಕೊಂಡು ಅದರಲ್ಲಿನ ಘರ್ಷಣೆ ಅದರ ಮೇಲ್ಮೈ ಎತ್ತಿ ಕೊಡುವ ವಿರುದ್ಧ ಬಲದ ಸಹಾಯದಿಂದ ನಿಧಾನವಾಗಿ ಚಲಿಸುವ ಕಾಲುಗಳು, ಹೊಟ್ಟೆಗಾಗಿ ಏನೇನೋ ಮಾಡೋ ಜೀವದ ಸಂತೃಪ್ತಿಗೆ ಮತ್ತೆ ಅದೇ ನೆಲದಲ್ಲಿ ಸಿಕ್ಕ ಅಂಶಗಳಿಂದ ಪೋಷಣೆ. ಮತ್ತೆ ಎಲ್ಲರಿಗೂ ಇದ್ದು ಯಾರಿಗೂ ಸಿಗದಿರುವ ಪಂಚಭೂತಗಳು. ಈ ತಂತ್ರಗಾರಿಕೆಯ ವ್ಯವಸ್ಥೆಯನ್ನು ಚಲಾಯಿಸೋದಕ್ಕೆ ಅವರವರ ದುಡ್ಡೂ-ಕಾಸು, ಅದಕ್ಕೆ ತಕ್ಕನಾದ ಮೋಜು-ಮಸ್ತಿ. ಮನೆಯಲ್ಲಿದ್ದರೆ ಕೆಲಸದ ಬಗ್ಗೆ, ಕೆಲಸದಲ್ಲಿದ್ದರೆ ಮನೆಯ ಬಗ್ಗೆ ಚಿಂತಿಸುವ ಕೊರಗು. ಅದ್ಯಾರೋ ದೊಡ್ಡ ಮನುಷ್ಯರು ಹೇಳಿದ ಹಾಗೆ ಇರೋದನ್ನೆಲ್ಲ ಬಿಟ್ಟು ಇರುದುದರೆಡೆಗೆ ತುಡಿವ ಮರುಗು.

ಈ ಆಸೆಯದ್ದೇ ವಿಶೇಷ - ನಾಳಿನದ್ದೆಲ್ಲ ಒಳ್ಳೆಯದೇ ಎನ್ನುವ ಹೋಪ್ ಬಹಳ ಪ್ರಭಲವಾದದ್ದು. ಮಾರುಕಟ್ಟೆಗೆ ಸಂಬಂಧ ಪಟ್ಟಂತೆ ಹಲವಾರು ವರ್ಷಗಳಲ್ಲಿ ಬಿದ್ದ ದಿನಗಳಿಗಿಂತಲೂ ಮೇಲೆ ಎದ್ದ ದಿನಗಳೇ ಹೆಚ್ಚಾದರೂ ಕಳೆದುಕೊಳ್ಳುವವರಿಗೆ ಕಳೆದುಕೊಂಡವರಿಗೇನೂ ಕಡಿಮೆ ಇಲ್ಲ. ಒಬ್ಬರು ಕಳೆದುಕೊಂಡರೆ ತಾನೇ ಮತ್ತೊಬ್ಬರು ಗಳಿಸೋದು - ಆದರೆ ಅದು ಯಾವ ನ್ಯಾಯ? ಹಾಗಾದರೆ ಈ ಪ್ರಪಂಚದಲ್ಲಿ ಕೂಡುವವರು ಇದ್ದಾರೆಂದರೆ ಕಳೆಯುವವರೂ ಇದ್ದಾರೆ ಎಂತಲೇ ಅರ್ಥವೇ? ಇದೆಲ್ಲದರ ಒಟ್ಟು ಮೊತ್ತ ಯಾವಾಗಲೂ ಶೂನ್ಯವೇ? ಹಾಗಿದ್ದ ಮೇಲೆ ಕೊಡು ಕೊಳ್ಳುವ ವ್ಯವಹಾರವಾದರೂ ಏಕೆ ಬೇಕು? ಕೂಡುವುದು ನಿಜವಾದ ಮೇಲೆ, ಅದರ ಜೊತೆಗೆ ಕಳೆದುಕೊಳ್ಳುವುದೂ ನಿಜವೆಂದ ಮೇಲೆ ಶ್ರೀ ಕೃಷ್ಣ ಉಪದೇಶ ಮಾಡಿದ ಸ್ಥಿತಪ್ರಜ್ಞ ಸ್ಥಿತಿಯನ್ನು ಜನರು ಅದೇಕೆ ತಲುಪೋದಿಲ್ಲ? ಸಾಕು ಎನ್ನುವುದು ಹೆಚ್ಚು ಕೇಳಿ ಬರದಿರುವಾಗ ಬೇಕು ಎನ್ನುವುದು ಪ್ರಭಲವಾಗಿ ಕಂಡರೆ ಅದೊಂದೇ ಅನನ್ಯವಾದರೆ, ಅದೇ ಸ್ಥಿತಿ ಎಲ್ಲರಲ್ಲೂ ಸೇರಿಕೊಂಡರೆ, ಬೇಕು ಎನ್ನುವುದೇ ಬದುಕಾದರೆ...ಬೇಕು ಎನ್ನುವ ಆಸೆಗೆ ಕೂಡುವುದು ಇದೇ ಜೊತೆಗೆ ಕಳೆಯುವುದೂ ಇದೆ ಎಂದ ಮೇಲೆ ನಾಳಿನದ್ದೆಲ್ಲ ಒಳ್ಳೆಯದೇ ಎನ್ನುವುದು ಎಷ್ಟರ ಮಟ್ಟಿಗೆ ಸರಿ; ಜೊತೆಗೆ ಒಬ್ಬರ ಒಳಿತು ಇನ್ನೊಬ್ಬರ ಒಳಿತಾಗಬೇಕೆಂದೇನೂ ಇಲ್ಲ ಎಂದು ಯೋಚಿಸಿಕೊಂಡಾಗ ಅದೇ ಶೂನ್ಯದ ಸಂಭ್ರಮ, ಎಲ್ಲವನ್ನೂ ತನ್ನ ಹೊಟ್ಟೆಯೊಳಗೆ ತುಂಬಿಕೊಂಡ ಶುಷ್ಕ ನಗೆ.