Thursday, June 17, 2010

ಗೋಲ್ಡ್ ಫಿಶ್ - 2010

 

ನಮ್ಮ ಮನೆಯಲ್ಲಿ ಒಂದು ಚಿಕ್ಕ ಅಕ್ವೇರಿಯಂ, ಅದರಲ್ಲಿ ೨೦೦೩ ರಿಂದ ನೆಲೆ ನಿಂತಿದ್ದ ಒರ್ಯಾಂಡಾ (oranda) ಜಾತಿಯ ಗೋಲ್ಡ್ ಫಿಶ್ ಮೊನ್ನೆ ಸತ್ತು ಹೋಯಿತು.  ಒಂದು ಸಾಕು ಪ್ರಾಣಿಯ ಕುರಿತು, ಅದರ ನೆಲೆಗೆ ಹೊಂದಿಕೊಂಡ ನಮ್ಮ ನಡವಳಿಕೆಗಳ ಕುರಿತು ಈ ಲೇಖನ.

 

Gold fish 2010

***

ಮಕ್ಕಳಿದ್ದವರ ಮನೆಯಲ್ಲಿ ಈ ಪ್ರಶ್ನೆ ಬಂದೇ ಬರುತ್ತೆ - ನಮ್ಮ ಮನೆಯಲ್ಲೂ ಬೇರೆ ಬೇರೆ ಸಾಕು ಪ್ರಾಣಿಗಳೇಕಿಲ್ಲ? ಎಂಬುದಾಗಿ.  ಈ ನಿಟ್ಟಿನಲ್ಲಿ ಹೆಚ್ಚಿನವರು ಒಂದು ಬೆಕ್ಕನ್ನೋ ಅಥವಾ ನಾಯಿಯನ್ನೋ ಸಾಕುವುದು ಸಾಮಾನ್ಯ, ಇನ್ನೂ ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ಮೊಲವನ್ನೋ, ಗಿಣಿಯನ್ನೋ ಇಟ್ಟುಕೊಂಡಾರು.  ಕೆಲವರು ಎಲ್ಲರನ್ನು ಮೀರಿ exotic ಪ್ರಾಣಿಗಳಾದ ಚೇಳು, ಹಾವು ಮೊದಲಾದ ಸರೀಸೃಪಗಳನ್ನು ಪೋಷಿಸಿಯಾರು.  ಆದರೆ ಇವೆಲ್ಲಕ್ಕಿಂತ ಸುಲಭವಾದ ವಿಧಾನವೊಂದಿದೆ, ಅದು ಮನೆಯಲ್ಲೇ ಅವರವರ ಸಾಮರ್ಥ್ಯ ಅನುಕೂಲಗಳಿಗೆ ತಕ್ಕಂಥ ಫಿಶ್ ಟ್ಯಾಂಕ್ ಒಂದನ್ನು ಇಟ್ಟು ಅದನ್ನು ಜೋಪಾನವಾಗಿ ನೋಡಿಕೊಳ್ಳುವುದು.

ನಮ್ಮ ಮನೆಯಲ್ಲಿ ಸುಮಾರು ೨೦೦೧ ರಿಂದ ಹೀಗೇ ನೋಡಿಕೊಂಡು ಬಂದ ಐದು ಗ್ಯಾಲನ್ ನೀರು ಹಿಡಿಯುವ ಮೀನಿನ ಒಂದು ಚಿಕ್ಕ ಟ್ಯಾಂಕ್ ಇದೆ, ಅದರಲ್ಲಿ ಗೋಲ್ಡ್ ಫಿಶ್‌ಗಳನ್ನು ಬಿಟ್ಟು ಮತ್ತೇನನ್ನೂ ನಾವು ಸಾಕಿ ನಮಗೆ ಗೊತ್ತಿಲ್ಲ.  ನಮ್ಮ ಪ್ರಯೋಗದ ಮೊದ ಮೊದಲು ಅನೇಕ ಮೀನುಗಳು ಸಾಯುತ್ತಿದ್ದವು: ಪಿ.ಎಚ್. ಅಮೋನಿಯಾ, ಕ್ಲೋರೀನ್, ನೈಟ್ರೇಟ್, ನೈಟ್ರೈಟ್ ಮೊದಲಾದ ಕೆಮಿಕಲ್ ವಸ್ತುಗಳಲ್ಲಿ ಯಾವುದೇ ಏರುಪೇರಾದರೂ ಮೀನುಗಳು ಗೊಟಕ್.  ಹೀಗೆ ಜೋಡಿಸಿಟ್ಟ ಫಿಶ್ ಟ್ಯಾಂಕ್‌ಗೆ ನಾವು ಹೊಂದಿಕೊಳ್ಳಲು ನಮಗೆ ಸುಮಾರು ಒಂದು ವರ್ಷವೇ ಬೇಕಾಯಿತು, ಜೊತೆಗೆ ಅನೇಕ ಮೀನುಗಳನ್ನು ನಮ್ಮ ಪ್ರಯೋಗಗಳಿಗೆ ಬಲಿಕೊಟ್ಟದ್ದೂ ಆಯಿತು.  ಹೀಗೆ ನಡೆದು ಬಂದ ಫಿಶ್ ಮ್ಯಾನೇಜ್‌ಮೆಂಟ್ ಅನುಭವದ ಕೊನೆಗೆ ಬಂದು ಮುಟ್ಟಿದಾಗ ಉಳಿದವು ಎರಡು ಗೋಲ್ಡ್ ಫಿಶ್‌ಗಳು - ಅದರಲ್ಲಿ ಒಂದು ಬಿಳಿ ಬಣ್ಣದ್ದು, ಮತ್ತೊಂದು ಕಿತ್ತಳೆ ಬಣ್ಣದ್ದು.  ಎರಡೂ ಕೂಡ ಚೆನ್ನಾಗಿ ರೆಕ್ಕೆಗಳನ್ನು ಉದ್ದುದ್ದವಾಗಿ ಬೆಳೆಸಿಕೊಂಡು ಟ್ಯಾಂಕ್‌ನ ಒಂದು ಕೊನೆಯಿಂದ ಮತ್ತೊಂದು ಕೊನೆಗೆ ಈಜಾಡುವುದನ್ನು ನೋಡುವುದೇ ಎಂಥವರಿಗೂ ಮುದಕೊಡುತ್ತಿತ್ತು.

ನಮ್ಮ ಚಲನವಲನಗಳು, ವೆಕೇಷನ್ನುಗಳು ಹಾಗೂ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ನಾವು ಬದಲಾವಣೆ ಮಾಡುವುದು ಇವೆಲ್ಲ ನಮ್ಮ ಮನೆಯ ಫಿಶ್ ಟ್ಯಾಂಕ್‌ನ ನಿವಾಸಿಗಳ ಮೇಲೆ ಅಗಾಧವಾದ ಪರಿಣಾಮವನ್ನು ಬೀರುತ್ತಿತ್ತು.  ನಾವು ಮೂರು ವಾರ ಭಾರತಕ್ಕೆ ವೆಕೇಷನ್ನ್ ಹೊರಟರೆ ನಮ್ಮ ಬದಲಿಗೆ ಬೇರೆ ಯಾರಾದರೂ ನಮ್ಮ ಮನೆಗೆ ಬಂದು ಈ ಮೀನುಗಳಿಗೆ ಊಟ ಹಾಕುವ ವ್ಯವಸ್ಥೆಯನ್ನು ಮಾಡಿ ಹೋಗುತ್ತಿದ್ದೆವು, ಅಥವಾ ಈ ಮೀನಿನ ಟ್ಯಾಂಕ್ ಅನ್ನೇ ಅವರ ಮನೆಯಲ್ಲಿಟ್ಟು ನಾವು ಬರುವ ತನಕ ಜೋಪಾನವಾಗಿ ಕಾಯ್ದುಕೊಂಡಿರುವಂತೆ ಮಾಡಿದ್ದೂ ಇದೆ.  ಒಟ್ಟಿನಲ್ಲಿ ಒಂದು ಕಡೆ ಸರಿಯಾಗಿ ನೆಲೆ ನಿಂತ ಇಕೋ ಸಿಸ್ಟಂ ಅನ್ನು ಮತ್ತೊಂದು ಕಡೆ ಪ್ರತಿಷ್ಠಾಪಿಸುವುದು ಅಷ್ಟು ಸುಲಭದ ಮಾತಂತೂ ಅಲ್ಲ.  ಈ ನಿಟ್ಟಿನಲ್ಲಿ ನನ್ನ ಸಹೋದ್ಯೋಗಿಗಳಿಗೆ ಹಾಗೂ ಸ್ನೇಹಿತರಿಗೆ ಸಾಕಷ್ಟು ತೊಂದರೆಯನ್ನು ಕೊಟ್ಟಿದ್ದಿದೆ.

ನಮ್ಮ ಮನೆಯಲ್ಲಿ ಇದ್ದ ಎರಡು ಮೀನುಗಳನ್ನು ಅವುಗಳ ಟ್ಯಾಂಕ್ ಹಾಗೂ ಪರಿಕರಗಳ ಸಮೇತ ವರ್ಜೀನಿಯಾದಿಂದ ನ್ಯೂ ಜೆರ್ಸಿಗೆ ೨೫೦ ಮೈಲು ದೂರ ತಂದು ನಮ್ಮ ಮನೆಯ ಸಾಮಾನುಗಳ ಜೊತೆಗೆ ಅವುಗಳನ್ನು ಜೋಡಿಸುವಾಗ ಆದ ಕಷ್ಟ ಅಷ್ಟಿಷ್ಟಲ್ಲ.  ಹೀಗೆ ಮಾಡಿ ಅನೇಕ ತಿಂಗಳುಗಳ ತರುವಾಯ ಬಿಳಿಯ ಮೀನು ಯಾವುದೋ ಖಾಯಿಲೆಗೆ ಬಲಿಯಾಗಿ ಸತ್ತು ಹೋದ ಮೇಲೆ ಉಳಿದದ್ದು ಕಿತ್ತಳೆ ಬಣ್ಣದ ಗೋಲ್ಡ್ ಫಿಶ್ ಒಂದೇ.  ಎರಡು ಮೂರು ಮನೆಗಳನ್ನು ತಿರುಗಿ ಬಂದ ಮೇಲೆ ಅದು ಟ್ಯಾಂಕ್‌ನಲ್ಲಿ ತಾನೊಂದೇ ಪ್ರಾಬಲ್ಯವನ್ನು ಮೆರೆಯುತ್ತಾ ತಂದಾಗ ಎರಡು ಅಂಗುಲ ಉದ್ದ ಇದ್ದದ್ದು ದಿನೇ ದಿನೇ ಬೆಳೆದು ಸುಮಾರು ಆರು ಅಂಗುಲ ಉದ್ದಕ್ಕೂ ಹೆಚ್ಚು ದೊಡ್ಡದಾಯಿತು.  ಕಳೆದ ವರ್ಷ ಡಿಸೆಂಬರ್ ಸಮಯದಲ್ಲಿ ಸ್ನೇಹಿತ ಗಾರ್‌ಫೀಲ್ಡ್ ಮನೆಯಲ್ಲಿ ನಾವು ವೇಕೇಷನ್ನಿಗೆ ಹೋದಾಗ ಮೊಕ್ಕಾಂ ಹೂಡಿ ಜನವರಿಯಿಂದ ಮೇ ವರೆಗೂ ಚೆನ್ನಾಗಿಯೇ ಇತ್ತು.

ಮೇ ತಿಂಗಳ ಮೊದಲ ವಾರದಲ್ಲಿ ಅದರ ಲವಲವಿಕೆ ಕುಂಠಿತಗೊಂಡಿತು, ಅದು ಆಹಾರ ಸೇವಿಸುವುದನ್ನು ಸಂಪೂರ್ಣ ಬಿಟ್ಟು ಟ್ಯಾಂಕಿನ ಬುಡದಲ್ಲಿ ಎಲ್ಲೆಂದರಲ್ಲಿ ಅಡ್ಡಾ-ದಿಡ್ಡಿ ಬಿದ್ದುಕೊಂಡಿರುತ್ತಿತ್ತು.  ಅದು ಇನ್ನೇನು ಸರಿ ಹೋದೀತು ಎಂದುಕೊಂಡವನಿಗೆ ಮುಪ್ಪಿನಿಂದ ಅದು ದಿನೇದಿನೇ ಕುಗ್ಗತೊಡಗಿದ್ದು ಗಮನಕ್ಕೆ ಬಂದು ಈ ಮೀನಿನ ಬದುಕಿಗೆ ಯಾವ ರೀತಿಯ ಅಂತ್ಯವನ್ನು ಹಾಡಬೇಕು ಎಂದು ಗೊತ್ತಾಗದೆ ಒಂದೆರೆಡು ಬಾರಿ ಟ್ಯಾಂಕಿನ ನೀರನ್ನು ಖಾಲಿ ಮಾಡಿ ಎಲ್ಲವನ್ನು ಸ್ವಚ್ಛಗೊಳಿಸಿಟ್ಟು ಹಾಗಾದರೂ ಮೀನಿನ ಲವಲವಿಕೆ ಮರುಕಳಿಸಲಿ ಎಂದುಕೊಂಡರೆ ಹಾಗಾಗಲಿಲ್ಲ.

ನನ್ನ ಸ್ನೇಹಿತರು ಹಾಗೂ ಹಿರಿಯರು ಮಾರ್ಗದರ್ಶನ ಮಾಡಿದ ಹಿನ್ನೆಲೆಯಲ್ಲಿ ಅದನ್ನು ದೊಡ್ಡ ಟ್ಯಾಂಕಿನಿಂದ ಸಣ್ಣದೊಂದು ಗಾಜಿನ ಜಾಡಿಗೆ ಬದಲಾಯಿಸಿ ಅದರ ಬದಲಿಗೆ ಬೇರೆ ಹೊಸ ಮೀನುಗಳನ್ನು ತಂದು ಹಾಕುವುದೆಂದು ಯೋಚಿಸಿ ಹಾಗೆ ಮಾಡಲನುವಾದೆ.  ಅಂಗಡಿಗೆ ಹೋಗಿ ಉತ್ಸಾಹದಿಂದ ಪುಟಿಯುತ್ತಿದ್ದ ಅವೇ ಒರ್ಯಾಂಡಾ (oranda) ಜಾತಿಯ ಥರಾವರಿ ಬಣ್ಣಗಳ ನಾಲ್ಕು ಮೀನುಗಳನ್ನು ತಂದೆ.  ಒಂದು ಕಡೆ ಹೊಸ ಮೀನುಗಳನ್ನು ಅವುಗಳನ್ನು ತಂದ ಪ್ಲಾಸ್ಟಿಕ್ ಕವರ್ ಸಮೇತ ಟ್ಯಾಂಕಿನ ನೀರಿನ ತಾಪಮಾನಕ್ಕೆ ಹೊಂದುಕೊಳ್ಳಲು ಬಿಟ್ಟು, ಮತ್ತೊಂದು ಸಣ್ಣ ಗಾಜಿನ ಜಾಡಿಯನ್ನು ಅನುಗೊಳಿಸಿದೆ.  ಅದರಲ್ಲಿ ಹಳೆಯ ಮೀನನ್ನು ಹುಷಾರಾಗಿ ಇಟ್ಟೆ, ನಾನು ತೆಗೆದು ಹಾಕುವಾಗ ಒಂದಿಷ್ಟು ಕೊಸರಾಡಿದ ಮೀನು, ಹೊಸ ಜಾಡಿಯ ತಳದಲ್ಲಿ ನಿಧಾನವಾಗಿ ಉಸಿರಾಡುತ್ತಾ ಬಿದ್ದುಕೊಂಡಿದ್ದು ನೋಡಿ ಕರುಳು ಕಿವುಚಿದಂತಾಯಿತು.  ಅದನ್ನು ಅಲ್ಲಿಗೆ ಬಿಟ್ಟು ಹೊಸ ಮೀನುಗಳನ್ನು ದೊಡ್ಡ ಟ್ಯಾಂಕ್‌ನಲ್ಲಿ ಬಿಟ್ಟಾಗ ಅವುಗಳಿಗೆ ಒಂದು ಕಡೆ ಸಂಭ್ರಮವೂ ಮತ್ತೊಂದು ಕಡೆ ಹೆದರಿಕೆಯೂ ಸೇರಿಕೊಂಡು ಟ್ಯಾಂಕಿನ ಮೂಲೆ ಮೂಲೆಗಳಲ್ಲಿ ದಿಕ್ಕಾಪಾಲಾಗಿ ಓಡತೊಡಗಿದವು.  ಸ್ವಲ್ಪ ಹೊತ್ತಿನ ತರುವಾಯ ಅವುಗಳು ತಮ್ಮ ಹೊಸ ವಾತಾವರಣಕ್ಕೆ ಹೊಂದಿಕೊಂಡ ಎಲ್ಲ ಸೂಚನೆಗಳೂ ಕಂಡು ಬಂದು, ಈ ಟ್ಯಾಂಕಿನಲ್ಲಿ ವರ್ಷಾನುಗಟ್ಟಲೆ ಮನೆ ಮಾಡಿದ್ದ ನೆಲೆ ನಿಂತಿದ್ದ ಆ ಮಹಾಶಯನ ಗುರುತು ಪರಿಚಯವೂ ವಾಸನೆಯೂ ಅವುಗಳಿಗೆ ಒಂದಿಷ್ಟು ಇರದಿದ್ದ ಮುಗ್ಧತೆಯಲ್ಲಿ ಜೀವಿಸತೊಡಗಿದವು.

ಇತ್ತ ಸಣ್ಣ ಗಾಜಿನ ಜಾಡಿಯಲ್ಲಿನ ಹಳೆಯ ಮೀನಿನ ಬದುಕಿನಲ್ಲಿ ಹೆಚ್ಚೇನೂ ಬದಲಾವಣೆಯಾಗದೇ ಅದೇ ದಿನ ರಾತ್ರಿ ಎಷ್ಟೋ ಹೊತ್ತಿಗೆ ಅದರ ಪ್ರಾಣಪಕ್ಷಿ ಹಾರಿ ಹೋಗಿದ್ದು ನಮಗೆಲ್ಲ ನಿಚ್ಛಳವಾಯಿತು.  ನಮಗೆಲ್ಲ ಇಷ್ಟೊಂದು ವರ್ಷ ಫ್ಯಾಮಿಲಿ ಮೆಂಬರಿನಂತಿದ್ದ ಮೀನಿನ ಅಂತ್ಯಕ್ರಿಯೆಗೋಸ್ಕರ ನಾನು ಶವೆಲ್ಲೊಂದನ್ನು ತೆಗೆದುಕೊಂಡು ರಾತ್ರಿ ನಮ್ಮ ಹಿತ್ತಲಿಗೆ ಹೋಗಿ ಸಣ್ಣ ತಗ್ಗನ್ನು ತೆಗೆದು ಅಲ್ಲಲ್ಲಿ ಮಿಡತೆಗಳು ಅಳುತ್ತವೆಯೇನೋ ಎನ್ನುವ ಕಿರುಗುಟ್ಟುವಿಕೆಯ ಹಿನ್ನೆಲೆಯ ನಡುವಿನ ಮೌನದ ಸಹಾಯದಿಂದ ಯಾವೊಂದು ಮಾತನಾಡದೆ ಎರಡು ಮುಷ್ಠಿ ಮಣ್ಣನ್ನು ಕೈಯಿಂದ ಹಾಕಿ ಉಳಿದದ್ದನ್ನು ಶವೆಲ್ಲಿನಿಂದಲೇ ಮುಚ್ಚಿ ಸಂಸ್ಕಾರ ಮಾಡಿದೆ.

ಮರುದಿನ ಇಂಚರ (ನಮ್ಮ ನಾಲ್ಕು ವರ್ಷದ ಮಗಳು) ಅನೇಕ ಬಾರಿ ಹಳೇ ಮೀನು ಎಲ್ಲಿ ಹೋಯಿತು? ಅದು ಏಕೆ ಸತ್ತಿತು? ಸತ್ತಾಗ ಏನಾಗುತ್ತದೆ? ಯಾಕೆ ಹಿತ್ತಲಿನಲ್ಲಿ ಮಣ್ಣು ಮಾಡಿದೆ? ನನ್ನನ್ನೇಕೆ ಕರೆಯಲಿಲ್ಲ? ಎಂದು ಕೇಳಿದ ಅನೇಕಾನೇಕ ಪ್ರಶ್ನೆಗಳಿಗೆ ನನ್ನ ಶಕ್ತಿ ಮೀರಿ ಸರಳವಾಗಿ ಉತ್ತರಿಸಿದ್ದಾಯಿತು.  ನಾವು ಹಳೇ ಮೀನಿಗೆ ಯಾವುದೇ ಹೆಸರನ್ನಿಟ್ಟಿರಲಿಲ್ಲ - Elmo’s world ನಲ್ಲಿ ಬರುವ Dorothyಯ ದೆಸೆಯಿಂದ ಇಂಚರ ಅದನ್ನು ನಮ್ಮ ಮನೆಯ ಡೊರೋತಿ ಅಂದುಕೊಂಡಿದ್ದನ್ನು ಬಿಟ್ಟರೆ, ಅದೇ ಛಾಳಿಯನ್ನು ಮುಂದುವರೆಸಿ ನಾವು ಈ ಹೊಸ ಮೀನುಗಳಿಗೂ ಹೆಸರನ್ನೂ ಇಟ್ಟಿಲ್ಲ.

ಪ್ರತಿ ದಿನ ಆಫೀಸಿನಿಂದ ಬಂದಾಗ ಶೂ ತೆಗೆದು ಅದರ ಸ್ಥಳದಲ್ಲಿಟ್ಟು ನಂತರ ಮಾಡುವ ಕೆಲಸವೇ ಈ ಮೀನಿನ ಟ್ಯಾಂಕಿನ ಲೈಟ್ ಹಾಕಿ ಅವುಗಳಿಗೆ ಪ್ಲ್ಹೇಕ್ ಫುಡ್ಡನ್ನು ಹಾಕುವುದು, ಈ ಹೊಸ ಮೀನುಗಳ ಸಹಾಯದಿಂದ ವರ್ಷಾನುಗಟ್ಟಲೆ ನಡೆದ ಬಂದ ಕಾಯಕ ಇಂದಿಗೂ ಹಾಗೇ ಮುಂದುವರೆದಿದೆ.

***

ಸಾವು-ನೋವಿನ ವಿಚಾರಕ್ಕೆ ಬಂದಾಗ ಅಮೇರಿಕದ ನಮ್ಮ ಅನುಭವ ವ್ಯಾಪ್ತಿ ಕಡಿಮೆಯೇ.  ಬೇರೆ ಯಾರೂ ರಕ್ತ ಸಂಬಂಧಿಗಳಿಲ್ಲದ ಈ ದೇಶದಲ್ಲಿ ಸಾವು ಎನ್ನುವ ಮಹತ್ವಪೂರ್ಣವಾದ ಬದುಕಿನ ಮಜಲಿನ ಅನುಭವ ನಮಗೆ ಭಾರತದಲ್ಲಿ ಇದ್ಧಾಗ ಆಗುವಂತೆ ಇಲ್ಲಿ ಆಗುವುದಿಲ್ಲ.  ನಮ್ಮ ನೆಂಟರು-ಇಷ್ಟರು-ಬಂಧು-ಬಳಗ ಇವರೆಲ್ಲರ ಮದುವೆ ಮುಂಜಿಗಳಿಗೆ, ಕಷ್ಟ-ನಷ್ಟಗಳಿಗೆ ನಾವು ಎಂದಿನ ಸಂವೇದನೆಯನ್ನು ತೋರೋದಿಲ್ಲ.  ಸಾವನ್ನು ಬೇಕು ಎಂದು ಆರಿಸಿಕೊಳ್ಳದಿದ್ದರೂ ಹುಟ್ಟು ತರುವಷ್ಟೇ ಮುಖ್ಯವಾದ ಬದಲಾವಣೆಯನ್ನು ಸಾವೂ ತರಬಲ್ಲದು.  ಈ ನಿಟ್ಟಿನಲ್ಲಿ ಸಾಕು ಪ್ರಾಣಿ ಮೀನಿನ ಸಾವು ಅದರ ಜೊತೆಗಿದ್ದ ನಮ್ಮ ವರ್ಷಾನುಗಟ್ಟಲೆಯ ಬಂಧನವನ್ನು ಕಳಚಿ ಹಾಕುವುದರ ಮೂಲಕ ದೂರದಲ್ಲಿರುವ ನಮಗೆ ಹತ್ತಿರದ ಬಂಧುವನ್ನು ಕಳೆದುಕೊಂಡ ನೆನಪನ್ನು ಎತ್ತಿ ಹಿಡಿಯಿತು.  ಸಾವಿರದ ಮನೆಯಿಂದ ಸಾಸಿವೆ ತರುವ ಪ್ರಯತ್ನವನ್ನು ಇನ್ನೂ ಯಾರಾದರೂ ಮಾಡುತ್ತಿದ್ದರೆ ಆ ದೃಷ್ಟಿಯಲ್ಲಿ ನಾವು ಹೊರಗುಳಿದಿರುವುದು ಸ್ಪಷ್ಟವಾಯಿತು.  ನಮ್ಮಂಥ ನ್ಯೂಕ್ಲಿಯರ್ ಕುಟುಂಬಗಳಿಗೆ ಈ ಸಣ್ಣ ಅಗಲಿಕೆ ಬದುಕು ಒಡ್ಡುವ ಅನೇಕ ಬದಲಾವಣೆಗಳ ನೆನಪು ಮಾಡುವಲ್ಲಿ ಯಶಸ್ವಿಯಾಯಿತು.  ಜೊತೆಯಲ್ಲಿ ನಮ್ಮ ಸಂಬಂಧಿಗಳ, ಬಂಧು-ಮಿತ್ರರ, ಒಡಹುಟ್ಟಿದವರ ನೋವು-ನಲಿವುಗಳಿಗೆ ಸಕಾಲಕ್ಕೆ ಆಗಿಬರದ ನಾವು ಊಟಕ್ಕಿಲ್ಲದ ಉಪ್ಪಿನಕಾಯಿಯಾಗಿ ಬಿಟ್ಟೆವೇನೋ ಎನ್ನಿಸಿಬಿಟ್ಟಿತು.

Monday, May 10, 2010

Claire ಎಂಬ ಕಳೆದು ಹೋದ ನಾಯಿ...

ಇವತ್ತಿಗೆ ಸರಿಯಾಗಿ ಒಂದು ವಾರ ಆಯ್ತು, ಕಳೆದ ಸೋಮವಾರ ನಾನು ಆಫೀಸಿಗೆ ಹೋಗೋ ದಾರಿಯಲ್ಲಿ ನಾಯಿ ಕಳೆದು ಹೋಗಿದ್ದರ ಬಗ್ಗೆ Mendham ಪಟ್ಟಣದ ಸರಹದ್ದಿನಲ್ಲಿ ಹಲವಾರು ಸೈನ್ ಪೋಸ್ಟ್‌ಗಳನ್ನು ಲೈಟ್ ಕಂಭಗಳ ಮೇಲೆ ಅಂಟಿಸಿದ್ದರು, ಕೆಲವು ಕಡೆ ಬಣ್ಣ ಬಣ್ಣದ ಕೋಲುಗಳನ್ನು ಹುಗಿದು ಅದರ ಮೇಲೆ ಕಳೆದು ಹೋದ ನಾಯಿಯ ಚಿತ್ರ ಹಾಗೂ ವಿವರಗಳನ್ನು ತೋರಿಸಿ, ಸಿಕ್ಕಿದ್ದರೆ ತಿಳಿಸಿ ಎಂಬ ಮನವಿಯನ್ನು ಎಲ್ಲಾ ಕಡೆಗೂ ಅಂಟಿಸಿದ್ದರು.  ಸುಮಾರು ಐದು ಮೈಲು ಸುತ್ತಳತೆಯ ಕಾಡಿನಂತಹ ಆ ವಾತಾವರಣದಲ್ಲಿ ಕಳೆದು ಹೋದ ನಾಯಿ ಎಲ್ಲಿ ಹೋಯಿತೋ ಯಾರಿಗೆ ಸಿಕ್ಕಿತೋ, ಆದರೆ ಆ ನಾಯಿಯ ವಾರಸುದಾರರು ಪಟ್ಟ ಶ್ರಮ ನಿಜವಾಗಲೂ ಬಣ್ಣಿಸಲಸದಳವಾಗಿತ್ತು.  ನಾಯಿಯನ್ನು ಕಳೆದುಕೊಂಡ ವಾರಸುದಾರರ ಶ್ರಮವನ್ನು ನೋಡಿ ನಾನಾದರೂ ಒಂದು ದಿನ ಆಫೀಸಿಗೆ ರಜೆ ಹಾಕಿ ಹುಡುಕಲು ಸಹಾಯ ಮಾಡಲೇ ಎನ್ನಿಸದಿರಲಿಲ್ಲ.

ಆ ನಾಯಿಯ ಹೆಸರು Claire - ಕಳೆದು ಹೋಗಿದ್ದಾಳೆ, ಹುಡುಕಲು ಸಹಾಯ ಮಾಡಿ ಎಂದು ತಮ್ಮ ಫೋನ್ ನಂಬರ್ ಅನ್ನು ನೀಡಿದ ಸರಳವಾದ ಸಂದೇಶ ಆ ಪೋಸ್ಟರ್‌ಗಳಲ್ಲಿತ್ತು.  ಪೋಸ್ಟರ್‌ಗಳನ್ನು ಥರಾವರಿ ಬಣ್ಣ-ಬಣ್ಣದ ಪೇಪರುಗಳಲ್ಲಿ ಮುದ್ರಿಸಿ ಅಲ್ಲಲ್ಲಿ ಮರಗಳಿಗೆ ಮೊಳೆ ಹೊಡೆದಿದ್ದರು, ಜೊತೆಗೆ ಕಡು ಹಳದಿ ಬಣ್ಣ ಹಾಗೂ ಗುಲಾಬಿ ಬಣ್ಣಗಳ ಗೂಟಗಳನ್ನು ಅಲ್ಲಲ್ಲಿ ಹುಗಿದು ಅವುಗಳಿಗೂ ರಟ್ಟಿನ ಸೈನ್ ಅನ್ನು ಎರಡೂ ಕಡೆಗಳಿಂದಲೂ ಓದುವಂತೆ ತಗುಲಿಸಿದ್ದರು.  ನಾಯಿಯ ಚಿತ್ರವನ್ನು ಸೇರಿಸಿದ್ದರು, Claire ಸಣ್ಣ ಸೈಜಿನ ನಾಯಿ, ಚಪ್ಪರ ಕಾಲುಳ್ಳ dachshund ಜಾತಿಯ ವೆರಾಂಡಾದ ಅಲಂಕೃತ ನಾಯಿಯ ಹಾಗಿತ್ತು, Curious George ವೀಡಿಯೋಗಳಲ್ಲಿ ಬರೋ Hundley ಅಷ್ಟು ದೊಡ್ಡದಿರಬಹುದು ಎಂಬುದು ನನ್ನ ಊಹೆ.

ಒಬ್ಬ ವ್ಯಕ್ತಿ ಅಥವಾ ಸಾಕು ಪ್ರಾಣಿಯ ಬಗ್ಗೆ ನಾವು ತೋರುವ ಕಾಳಜಿ ಹಾಗೂ ಮುತುವರ್ಜಿಗಳನ್ನು ಯೋಚಿಸಿಕೊಂಡಾಗ, ಒಬ್ಬ ವ್ಯಕ್ತಿ ಅಥವಾ ಸಾಕು ಪ್ರಾಣಿ ಇಲ್ಲವಾದಾಗ ನಾವು ಅನುಭವಿಸುವ ದುಃಖ ಇವೆಲ್ಲವನ್ನೂ ಹತ್ತಿರದಿಂದ ಗಮನಿಸಿದಾಗ ಆಯಾ ದೃಷ್ಟಿಕೋನ ಅಥವಾ ಪ್ರೀತಿಯ ಆಳದ ಬಗ್ಗೆ ಅರಿವಾಗುತ್ತದೆ.  ಈ ನಾಯಿಯನ್ನು ಕಳೆದುಕೊಂಡ ವ್ಯಕ್ತಿ ಸುಮಾರು ಐವತ್ತಕ್ಕೂ ಹೆಚ್ಚು ಪೋಸ್ಟರುಗಳನ್ನು ಪ್ರಿಂಟ್ ಮಾಡಿ ಆಯಕಟ್ಟಿನ ಸ್ಥಳಗಳಲ್ಲಿ ಗೂಟಗಳನ್ನು ಹುಗಿದು ಮರಗಳಿಗೆ ಎಲ್ಲರಿಗೂ ತೋರುವ ಹಾಗೆ ಪೋಸ್ಟರುಗಳನ್ನು ಸುಮಾರು ಐದು ಚದುರ ಮೈಲು ವಿಸ್ತೀರ್ಣದಲ್ಲಿ ಹಚ್ಚಿರುವಾಗ ಅವರು ಪಟ್ಟ ಶ್ರಮವನ್ನು ನೋಡಿ ಆಶ್ಚರ್ಯವಾಯಿತು, ಈ ಪೋಸ್ಟರುಗಳ ಜೊತೆಗೆ ಇಂಟರ್ನೆಟ್ ಹಾಗೂ ಲೋಕಲ್ ಪ್ರಿಂಟ್ ಮಾಧ್ಯಮಗಳಲ್ಲೂ ’ನಾಯಿ ಕಳೆದಿದೆ’ ಎಂದು ಮೆಸ್ಸೇಜನ್ನು ಹಾಕಿರಲಿಕ್ಕೂ ಸಾಕು.  ಕಳೆದು ಹೋದ ನಾಯಿಯ ಬಗ್ಗೆಯೇ ಕಳೆದುಕೊಂಡವರ ಕಳಕಳಿ ಹೀಗಿರುವಾಗ ಕಳೆದು ಹೋಗುವ ಮೊದಲು ಆ ನಾಯಿಯ ಆರೈಕೆಯನ್ನು ಎಷ್ಟರ ಮಟ್ಟಿಗೆ ಆ ವಾರಸುದಾರರು ಮಾಡಿರಬಹುದು ಎಂದು ಊಹಿಸತೊಡಗಿದೆ.  Claire ಅಂತಹ ಕುಳ್ಳನೆ ಚಪ್ಪರ ಕಾಲಿನ ಲಾಬ್ಬಿ ನಾಯಿಗಳು ಸಾಮಾನ್ಯವಾಗಿ ಶ್ರೀಮಂತರ ಮನೆಯ ನಾಯಿಗಳು, ಅವು ಸಹಜವಾಗಿ ಎತ್ತರದ (elevated) ವಾತಾವರಣದಲ್ಲಿ ಬೆಳೆದಿರುತ್ತವೆ, ಜೊತೆಗೆ ತಕ್ಕ ಆರೈಕೆಗೂ ಒಳಗಾಗಿರುತ್ತವೆ.  ಶ್ರೀಮಂತರ ಮನೆಯ ಸಕಲೈಶ್ವೈರ್ಯವನ್ನೂ ಹೊಂದಿದ ನಾಯಿಗಳು ಆ ಮನೆಯ ಎಲ್ಲಾ ಸದಸ್ಯರಂತೆಯೇ ಎಂಬುದು ಇವತ್ತು ನಿನ್ನೆಯ ವಿಷಯವೇನಲ್ಲ.

ಹಾಗಾದರೆ ಪ್ರತಿಯೊಬ್ಬರೂ ತಮ್ಮ ನೆರೆಹೊರೆಯನ್ನು, ಬಂಧು ಮಿತ್ರರನ್ನೂ, ಸಾಕು ಪ್ರಾಣಿಗಳನ್ನು ಪ್ರೀತಿಸುವ ಅಥವಾ ನೋಡುವ ದೃಷ್ಟಿಕೋನ ಅವರವರ ಅಂತಸ್ತಿನ ಮೇಲೆ ಅವಲಂಭಿತವಾಗಿದೆಯೇ? ಬಡವರ ಮನೆಯ ನಾಯಿ ಎಂದರೆ ಈ ರೀತಿಯ ಹುಡುಕುವಿಕೆ ದೊರೆಯುತ್ತಿರಲಿಲ್ಲವೆಂದೇ? ಅಥವಾ ಬಡವರ ಮನೆಯ ನಾಯಿಗಳು ಹುಡುಕಲು ಯೋಗ್ಯವಲ್ಲವೋ? ಅಥವಾ ಬಡವರು ಶ್ರೀಮಂತರು ಎನ್ನುವ ವ್ಯತ್ಯಾಸಗಳಲ್ಲಿ ಬದುಕುವಾಗ ಅವರವರ ಅಗತ್ಯ, ಆಲೋಚನೆಗಳು ಬದಲಾಗುವುದು ಸ್ಪಷ್ಟವೋ?

***

ಅಮೇರಿಕದಲ್ಲಿ ಸಾಕು ಪ್ರಾಣಿಗಳನ್ನು ಪುಲ್ಲಿಂಗ/ಸ್ತ್ರೀಲಿಂಗವನ್ನು ಬಳಸಿ ಕರೆಯುವ ರೀತಿಯನ್ನು ನೀವು ನೋಡಿರಬಹುದು.  ನಾವು ಭಾರತದಲ್ಲಿ ನಮ್ಮ ಸಾಕು ಪ್ರಾಣಿಗಳಿಂದ ಹಿಡಿದ ಯಾವುದೇ ಪ್ರಾಣಿ-ಪಕ್ಷಿಗಳನ್ನೂ ಕೂಡಾ ಅದು-ಇದು ಎಂದು ನಪುಂಸಕ ಲಿಂಗದಲ್ಲಿ ಹೇಗೆ ಸಂಬೋಧಿಸುತ್ತೇವೋ ಇಲ್ಲಿ ಪ್ರಾಣಿ-ಪಕ್ಷಿಗಳನ್ನು ಪುಲ್ಲಿಂಗ/ಸ್ತ್ರೀಲಿಂಗವನ್ನು ಉಪಯೋಗಿಸಿ ಮಾತನಾಡುವುದು ವಿಶೇಷ ಅನ್ನಿಸುತ್ತೆ.  ತಮ್ಮದೇ ಸಾಕು ಪ್ರಾಣಿಗಳಿಂದ ಹಿಡಿದು ಕಾಡಿನ ಪಕ್ಷಿಗಳು, ರಕ್ಕೂನುಗಳು, ಇಣಚಿಗಳು...ಯಾವುದೇ ಪ್ರಾಣಿ ಪಕ್ಷಿಗಳಿಗೂ, He ಅಥವಾ She ಯ 3rd person singular ಬಳಕೆಯಾಗುತ್ತದೆ.  ಈ ಕಳೆದು ಹೋದ ನಾಯಿಯ ವಿಚಾರಕ್ಕೆ ಬಂದರೆ "Claire - ಕಳೆದು ಹೋಗಿದ್ದಾಳೆ!" ಹುಡುಕಲು ಸಹಾಯ ಮಾಡಿ ಎಂಬುದಾಗುತ್ತದೆ.

ನಮ್ಮ, ಅದರಲ್ಲೂ ಕನ್ನಡದ ನಪುಂಸಕ ಲಿಂಗದ ಬಳಕೆ ಎರಡು ರೀತಿಯದ್ದು: ಒಂದು, ಕಲ್ಲು, ಬುಕ್ಕು, ಬಸ್ಸು ಮೊದಲಾದ ’ಜೀವವಿರದ’ ವಸ್ತುಗಳನ್ನು "ಇದು, ಅದು, ಹೋಯ್ತು, ಬಂತು" ಎಂದು ಸಂಬೋಧಿಸುವ ಪರಿ; ಎರಡು, ದನ, ಕರು, ನಾಯಿ, ನರಿ, ಗಿಡ, ಮರ ಮೊದಲಾದ ಜೀವವಿರುವ ವಸ್ತುಗಳನ್ನೂ "ಇದು, ಅದು, ಹೋಯ್ತು, ಬಂತು" ಎಂದು ಸಂಬೋಧಿಸುವ ಪರಿ.  ಇದಕ್ಕೆ ಸ್ವಲ್ಪ ಭಿನ್ನವಾಗಿ ಹಿಂದಿಯಲ್ಲಿ ’ರೇಲ್ ಆ ರಹಿ ಹೈ’ ಎನ್ನುವಂತೆ ಬಸ್ಸು, ಲಾರಿ, ಟ್ರೇನುಗಳಿಗೂ ಸ್ತ್ರೀಲಿಂಗದ ಬಳಕೆ.  ಕನ್ನಡದ 3rd person singular ಬಳಕೆಯಂತೆ ನಾವು ನಮ್ಮ ಸಾಕು ಪ್ರಾಣಿಗಳನ್ನು ’ಅದು, ಇದು’ ಎಂದು ಕರೆಯಬಲ್ಲೆವು, ಹಾಗೆ ಕರೆಯುವ ರೂಢಿ ಪ್ರಾಣಿಗಳನ್ನು ನೋಡುವ ಹೊಸ ದೃಷ್ಟಿಕೋನವನ್ನು ನಮಗೆ ತಂದುಕೊಟ್ಟಿದೆ ಎಂದು ನನ್ನ ವಾದ.  ’ನಾಯಿ ಬಂತಾ?’ ಎನ್ನುವುದು ಸಹಜವಾದ ವಾಕ್ಯವೇ ಹೊರತು, ’ನಾಯಿ ಬಂದಳೋ?’ ಎನ್ನುವುದು ಅಷ್ಟು ಸರಿಯಾಗಿ ಉಪಯೋಗಕ್ಕೆ ಬಾರದು.

***

ಒಂದು ವಾರದ ನಂತರವೂ Claire ಇನ್ನೂ ಕಳೆದೇ ಹೋಗಿದ್ದಾಳೆ!  ಅಕಸ್ಮಾತ್ ಈಗಾಗಲೇ ಅವಳು ಸಿಕ್ಕಿದ್ದರೆ, ಅವಳ ವಾರಸುದಾರರು ಆ ಪೋಸ್ಟರುಗಳನ್ನು ತೆಗೆದಿರುತ್ತಿದ್ದರು.  ಸುಮಾರು ಈ ಎರಡು ವಾರಗಳ ಅಂತರದಲ್ಲಿ ಆ ಚಪ್ಪರಕಾಲಿನ ಕುಳ್ಳ ನಾಯಿಯ ಅರಣ್ಯದ ರೋಧನ ಯಾರಿಗೂ ಕೇಳಿರಲಿಕ್ಕಿಲ್ಲ.  ಸುಖದ ಸುಪ್ಪತ್ತಿಗೆಯಲ್ಲಿ ಓಲಾಡಿದ Claireಗೆ ರಾತ್ರಿ ಹೊತ್ತಿನ ಫ್ರೀಜಿಂಗ್ ಉಷ್ಣತೆಯಲ್ಲಿ ಕಷ್ಟವಾಗಿರುತ್ತದೆ, ದಪ್ಪನೆ ಚರ್ಮ ಹಾಗೂ ಕಠಿಣ ಪರಿಸ್ಥಿತಿಗಳಿಗೆ ಈಗಾಗಲೇ ಒಗ್ಗದ ಮನಸ್ಸು ಕಷ್ಟದ ಸಮಯದಲ್ಲಿ ಬಗ್ಗದೇ ಹೋಗುತ್ತದೆ.

Monday, May 03, 2010

ಮನೆಯು ಚಿಕ್ಕದಾಗಿರಬೇಕು, ಬಾತ್ ರೂಮ್ ದೊಡ್ಡದಾಗಿರಬೇಕು...

ನಮ್ಮ ಐದು ಸಾವಿರ ವರ್ಷದ ಇತಿಹಾಸ ಮತ್ತು ಪರಂಪರೆಯಲ್ಲಿ ನಾವು ಅಡುಗೆ ಮನೆಗೆ ಕೊಟ್ಟಷ್ಟು ಪ್ರಾಶಸ್ತ್ಯವನ್ನು ಬಚ್ಚಲು ಮನೆಗೆ ಕೊಡೋದಿಲ್ಲ ಅನ್ನೋದು ನನ್ನ ಅಭಿಪ್ರಾಯ ಅಷ್ಟೇ. ನಮ್ಮ ಹಿರಿಯರ ಹಳೆ ಕಾಲದ ಮನೆಗಳನ್ನೋ ಅಥವಾ ಇತ್ತೀಚೆಗೆ ೬೦X೪೦ ಸೈಟ್‌ಗಳಲ್ಲಿ ಕಟ್ಟಿದ ಸುಂದರವಾದ ಆರ್‌ಸಿಸಿ ಮನೆಗಳನ್ನೋ ಉದಾಹರಣೆಯಾಗಿ ತೆಗೆದುಕೊಂಡರೆ ನಿಮಗೇ ಗೊತ್ತಾಗುತ್ತದೆ. ಹಳೆಯ ಕಾಲದ ಮನೆಗಳಲ್ಲಿ ಗಂಡಸರು ಮುಖಕ್ಷೌರ ಮಾಡುವುದಕ್ಕೆ ಕಿಟಕಿ ಮೇಲೆ ಸಣ್ಣ ಕನ್ನಡಿಯನ್ನಿಟ್ಟುಕೊಂಡು ಅದರ ಪಕ್ಕದಲ್ಲಿ ಬಿಂದಿಗೆ ಬಿಸಿನೀರು ಇಟ್ಟುಕೊಳ್ಳುವುದು ರೂಢಿ, ದಿನಾ ನಡೆಸೋ ನಿತ್ಯ ಕರ್ಮವಾಗಿರುವ ಮುಖ ಕ್ಷೌರಕ್ಕೆ ಯಾಕಪ್ಪಾ ಇಷ್ಟೊಂದು ಕೀಳು ಪ್ರಾಶಸ್ತ್ಯ ಅನ್ನಿಸೋದಿಲ್ಲವೇ? ಹೊಸದಾಗಿ ಕಟ್ಟಿದ ಮನೆಗಳಲ್ಲೂ ಅಷ್ಟೇ ಸಿಂಕ್ ಇದ್ದರೆ, ಅದರ ಮೇಲೆ ಒಂದು ಲೈಟ್ ಇರುತ್ತದೆ (ಹೆಚ್ಚಿನ ಪಕ್ಷ ಝೀರೋ ಕ್ಯಾಂಡಲ್ ಬಲ್ಬ್ ಹೊತ್ತಿಸಿಕೊಂಡು), ಸಿಂಕ್‌ನ ಮೇಲೆ ಸೋಪ್ ಅಥವಾ ಮತ್ತಿತರ ಸಾಮಾನುಗಳನ್ನು ಇಟ್ಟುಕೊಳ್ಳೋದಕ್ಕೆ ಜಾಗ ಇರೋದೇ ಕಡಿಮೆ.

ಮನೆಯ ವಿಚಾರದಲ್ಲಿ ಬಚ್ಚಲು/ಕಕ್ಕಸ್ಸು ಮನೆಗಳಿಗೆ ಕೊಡೋ ಪ್ರಾಶಸ್ತ್ಯ ಹಾಗಿರಲಿ, ದಿನಾ ನೂರಾರು ಜನ ಬಂದು ಹೋಗೋ ಯಾವುದೇ ಹೊಟೇಲಿಗೆ ಹೋಗಿ ನೋಡಿ ತಿನ್ನೋ ವಿಚಾರಗಳಿಗೆ ಎಷ್ಟೊಂದು ಮಹತ್ವ ಕೊಟ್ಟಿರುತ್ತಾರೆ, ತಿಂದು ಕುಡಿದದ್ದನ್ನು ವಿಸರ್ಜಿಸಲು ಮಾತ್ರ ಯಾವ ಮಹತ್ವವನ್ನೂ ಕೊಟ್ಟಿರೋ ಹಾಗೆ ಕಾಣೆ. ಯಾಕೋ ನಮ್ಮ ಜನಗಳಿಗೆ ಶುಚಿ ಅಥವಾ ಸ್ವಚ್ಛತೆ ಅನ್ನೋದು ಬಂದೇ ಇಲ್ಲವೇನೋ ಅನ್ನಿಸುತ್ತೆ. ನಮ್ಮ ಇತಿಹಾಸದ ದೃಷ್ಟಿಯಲ್ಲಿ ಸಾವಿರಾರು ವರ್ಷಗಳ ಹಿನ್ನೆಲೆಯಲ್ಲಿ ಸ್ವಚ್ಛತೆಗೆ ಆದ್ಯತೆ ಏಕೆ ಸಿಗಲಿಲ್ಲ? ಬಡತನ, ಹೆಚ್ಚಿನ ಜನಸಂಖ್ಯೆ ಕಾರಣವೋ ಅಥವಾ ನಮ್ಮಲ್ಲಿ ಮೂಲಭೂತ ಸಮಸ್ಯೆಗಳು ಇಂದಿಗೂ ಮೂಲಭೂತವಾಗಿಯೇ ಉಳಿದಿರುವುದು ಏಕೆ ಎನ್ನುವುದಕ್ಕೆ ಒಂದು ಹೆಜ್ಜೆ ನಮ್ಮ ಅಂತರಾಳವನ್ನು ಹುಡುಕಬೇಕಾಗುತ್ತದೆ.

ಅಮೇರಿಕದವರು ಕಡಿಮೆ ಜನ ಹೆಚ್ಚು ಸಂಪನ್ಮೂಲಗಳನ್ನು ಬಳಸುತ್ತಾರೆ ಎನ್ನೋದನ್ನ ಹಲವು ರೀತಿಯಲ್ಲಿ ಬಳಸಬಹುದು, ಅದನ್ನ ಒಂದು ಕಂಪ್ಲೇಟ್ ಅನ್ನಾಗಿಯೂ ನೋಡಬಹುದು ಅಥವಾ ಅದನ್ನ ಒಂದು ಮುಂದುವರೆದ ಸಂಸ್ಕೃತಿಯನ್ನಾಗಿಯಾದರೂ ಅರಿತುಕೊಳ್ಳಬಹುದು. ನಮ್ಮ ಆಫೀಸಿನ ಉದಾಹರಣೆಯನ್ನು ತೆಗೆದುಕೊಳ್ಳಿ, ನಾನು ಪವರ್‌ಪಾಯಿಂಟ್ ಸ್ಲೈಡ್‌ಗಳನ್ನು ಮಾಡಿ ಕಳಿಸಿದ್ದನ್ನ ನನ್ನ ಬಾಸ್ ಕಂಪ್ಯೂಟರ್ ಸ್ಕ್ರೀನಿನಲ್ಲಿ ನೋಡದೇ ಅದನ್ನು ಕಲರ್ ಪ್ರಿಂಟರಿನಲ್ಲಿ ಮುದ್ರಿಸಿ ಅನಂತರ ಅದರಲ್ಲಿ ತಿದ್ದು ಪಡಿಗಳನ್ನು ಮಾಡುವುದು ರೂಢಿ. ಆದರೆ ನಾನು ತಿಣುಕಿ-ತಿಣುಕಿ ಕಂಪ್ಯೂಟರ್ ಸ್ಕ್ರೀನಿನಲ್ಲಿ ಓದಿದ್ದೇ ಓದಿದ್ದು, ಆದರೆ ಮುದ್ರಿತವಾದ ಕಾಗದವನ್ನು ನಾವು ಓದುವ ದೃಷ್ಟಿಯೇ ಬೇರೆ ಹಾಗಾಗಿ ಅದರಲ್ಲಿರುವ ತಪ್ಪು-ಸರಿಗಳನ್ನು ನೋಡಿದಷ್ಟು ಸುಲಭವಾಗಿ ಕಂಪ್ಯೂಟರ್ ಸ್ಕ್ರೀನಿನಲ್ಲಿ ನೋಡಲಾಗದು ಎಂಬುದು ನನ್ನ ಅನುಭವ. ಸರಿ, ಒಂದು ಪೇಜ್ ಸ್ಲೈಡ್ ಹುಟ್ಟಬೇಕಾದರೆ ಒಂದು ನಾಲ್ಕು ಡ್ರಾಪ್ಟ್ ಪೇಜ್‌ಗಳನ್ನು ಮುದ್ರಣ ಮಾಡೋಣ, ಅದರಲ್ಲೇನಂತೆ? ರಿಸೋರ್ಸುಗಳು ಇವೆ, ಸಂಪನ್ಮೂಲಗಳ ಬಳಕೆ ಹಾಗೂ ಅದರ ವೆಚ್ಚಕ್ಕೆ ನಾವೇನೂ ಹೆಚ್ಚು ತಲೆಕೆಡಿಸಿಕೊಳ್ಳಬೇಕಾಗಿಲ್ಲ, ಪೇಪರ್ರೂ ಚೀಪು, ಪ್ರಿಂಟರ್ರೂ ಚೀಪು...ಹೀಗಾದ ಮೇಲೆ ಒಂದು ಪಬ್ಲಿಕ್ ಕಂಪನಿಯ ಆಯ-ವ್ಯಯಗಳ ಕಥೆ ಹಾಗೂ ಅವುಗಳ ದೊಡ್ಡ ಲಿಸ್ಟ್ ಇದ್ದೇ ಇರುತ್ತೆ, ಹತ್ತರ ಜೊತೆ ಹನ್ನೊಂದು ಅಂತ ಇವೂ ಸೇರಿಕೊಂಡು ಒಟ್ಟಿನಲ್ಲಿ ಸಮಯಕ್ಕೆ ಸರಿಯಾಗಿ ಒಳ್ಳೆಯ ಕ್ವಾಲಿಟಿ ಸ್ಲೈಡುಗಳನ್ನು ತಯಾರು ಮಾಡಿದರೆ ಆಯಿತಪ್ಪಾ ಅಷ್ಟೇ, ಅನ್ನಿಸೋದಿಲ್ಲವೇ?

ನಮ್ಮ ದೇಶದಲ್ಲಿ ಮನೆಗೆ ಒಂದೋ ಎರಡೋ ಪ್ಲಗ್ ಪಾಯಿಂಟುಗಳಿರುತ್ತವೆ, ಇಂದಿಗೂ ಹಳೆಯ ಕಾಲದಲ್ಲಿನ ಮನೆಗಳಲ್ಲಿ ಎಲೆಕ್ಟ್ರಿಕ್ ಇಸ್ತ್ರಿ ಪೆಟ್ಟಿಗೆಯನ್ನ ಲಿವಿಂಗ್ ರೂಮಿನಲ್ಲಿಟ್ಟು ಅಲ್ಲೇ ಬಟ್ಟೇ ಇಸ್ತ್ರಿ ಮಾಡಿಕೊಳ್ಳುವುದು ರೂಢಿ. ನನಗೆ ಗೊತ್ತಿರೋ ಹಾಗೆ ಮನೆಯಲ್ಲಿರುವ ಪ್ಲಗ್ ಪ್ಲಾಯಿಂಟುಗಳ ಲೆಕ್ಕದಲ್ಲಿ ಪ್ರತಿ ತಿಂಗಳಿಗೆ ಇಂತಿಷ್ಟು ರಿಕರ್ರಿಂಗ್ ಚಾರ್ಜಸ್ ಕೊಡಬೇಕಾಗುತ್ತದೆ. ಪ್ರತಿ ತಿಂಗಳ ಎಕ್ಸ್‌ಪೆನ್ಸ್ ಲೆಕ್ಕದಲ್ಲಿ ಯಾರಿಗೆ ತಾನೆ ಹತ್ತೋ ಇಪ್ಪತ್ತು ರೂಪಾಯಿ ಕೊಡಲು ಮನಸ್ಸಾದೀತೂ ಹೇಳಿ? ಆದರೆ ಅಮೇರಿಕದ ಮನೆಗಳಲ್ಲಿ ಪ್ರತಿ ಆರು ಅಡಿಗಳಿಗೊಂದರಂತೆ ಎಲ್ಲಾ ರೂಮುಗಳಲ್ಲೂ ಎಲೆಕ್ಟ್ರಿಕ್ ಪ್ಲಗ್ ಪಾಯಿಂಟ್‌ಗಳನ್ನು ಮನೆ ಕಟ್ಟುವಾಗಲೇ ಅಳವಡಿಸಿರುವುದು ನಮ್ಮಂಥ ಅನಿವಾಸಿಗಳ ಕಣ್ಣಿಗೆ ಮೊದಲ ದಿನವೇ ಗೊತ್ತಾಗಿರುತ್ತದೆ. ವ್ಯಾಕ್ಕ್ಯೂಮ್ ಹಾಕುವುದಿರಲಿ, ಇಸ್ತ್ರಿ ಹಾಕುವುದಿರಲಿ ಯಾವ ರೂಮಿನಲ್ಲಿ ಬೇಕಾದರೂ ಹಾಕುವ ಹಾಗಿರುತ್ತದೆ. ನಿಮಗೆ ಅಗತ್ಯಕ್ಕೆ ತಕ್ಕಂತೆ ಸೌಕರ್ಯ ಬೇಕೋ ಅದಕ್ಕೆ ತಕ್ಕಂತೆ ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಪ್ರತಿಯೊಂದನ್ನೂ "ಕಡಿಮೆ ದರ" ಎನ್ನುವ ಮಾನದಂಡ ಒಂದರಲ್ಲಿ ಮಾತ್ರ ನೋಡಿದಾಗ ಅಲ್ಲಿ ಕ್ವಾಲಿಟಿಯೋ ಮತ್ತೊಂದೋ ಬಲಿಪಶುವಾಗುತ್ತದೆ. ಇದೇ ಸಮೀಕರಣವನ್ನು ಹತ್ತು ಡಾಲರ್ ಉಳಿಸುವ ವಿಚಾರಕ್ಕೆ ಬಂದಾಗ ನಾವೆಷ್ಟು ಸಮಯ (==ಹಣ) ವನ್ನು ವ್ಯಯಿಸಬಲ್ಲೆವು ಎಂಬುದಕ್ಕೂ ಅಳವಡಿಸಬಹುದು. ನಿಮ್ಮ ಮನೆಯ ಪಕ್ಕದ ಬೀದಿಯ ಅಂಗಡಿಯೊಂದರಲ್ಲಿ ಒಂದು ವಸ್ತು ಇಪ್ಪತ್ತೈದು ಡಾಲರಿಗೆ ಸಿಗುವ ಹಾಗಿರುವಾಗ ಅದೇ ವಸ್ತು ನಿಮ್ಮ ಮನೆಯಿಂದ ಅರ್ಧ ಘಂಟೆ ದೂರದ ಅಂಗಡಿಯೊಂದರಲ್ಲಿ ಹದಿನೈದು ಡಾಲರಿಗೆ ಸಿಗುವ ಹಾಗಿದ್ದರೆ ನೀವು ಅಲ್ಲಿಗೆ ಹೋಗಿ ಬಂದು ಮಾಡುವ ಸಲುವಾಗಿ ಒಂದು ಘಂಟೆಯನ್ನು ವ್ಯಯಿಸಿ ಹತ್ತು ಡಾಲರ್ರ್ ಉಳಿಸುವ ಶ್ರಮವನ್ನು ಪಡುತ್ತೀರೊ? ಅಥವಾ ನಿಮ್ಮ ಮನೆಯ ಪಕ್ಕದ ಬೀದಿಯಲ್ಲೇ ನಿಮಗೆ ಅಗತ್ಯವಿರುವ ಆ ವಸ್ತುವನ್ನು ನಿಮಗೆ ಬೇಕಾದಾಗ ಕೊಳ್ಳುತ್ತೀರೋ?

ಇನ್ನು ಬಾತ್ ರೂಮ್ ವಿಚಾರಕ್ಕೆ ಹಿಂತಿರುಗೋಣ. ನಮ್ಮ ಸಂಸ್ಕೃತಿಯಲ್ಲಿ ಅದನ್ನು "ಬಚ್ಚಲು ಮನೆ" ಎಂದು ಕರೆದು ಮನೆಯ ಪಟ್ಟವನ್ನು ಕೊಟ್ಟರೋ ವಿನಾ ಆ ಸ್ಥಳವನ್ನು ಯಾವಾಗಲೂ ಗಾಳಿ ಬೆಳಕು ಬಾರದ ರೀತಿ, ಕತ್ತಲ ಗವಿಯಾಗಿ, ತೆಗೆದ ಹಾಗೂ ಸ್ನಾನದ ನಂತರ ಉಡುವ ಬಟ್ಟೆಗಳನ್ನು ಇಡಲೂ ಸಹ ಅಗತ್ಯವಾದ ಸೌಕರ್ಯಗಳಿಲ್ಲದೆ ಕಟ್ಟಿಬಿಟ್ಟರು. ಬಾತ್ ರೂಮ್‌ಗೆ ಈ ಸ್ಥಿತಿಯಾದರೆ ಇನ್ನು ಕಕ್ಕಸು ಕೋಣೆ/ಮನೆಯ ಪರಿಸ್ಥಿತಿಯಂತೂ ಕೇಳಲೇ ಬೇಡಿ. ನಮಗೆ ತಿಂಡಿ-ಊಟದಷ್ಟೇ ಮುಖ್ಯವಾದ ಸ್ನಾನ-ಶೌಚಗಳಿಗೆ ಯಾಕಿಷ್ಟು ಕಡಿಮೆ ಬೆಂಬಲ? ನಮ್ಮ ಬೆಳೆದ ಪರಂಪರೆಗೆ ಯಾಕೆ ಈ ರೂಮುಗಳನ್ನು ತ್ಯಾಜ್ಯವಸ್ತುವನ್ನು ನೋಡುವ ರೀತಿಯ ಮನಸ್ಥಿತಿ ಬಂದೊದಗಿದೆ ಎಂದು ಕೊರಗುತ್ತೇನೆ. ನನ್ನ ಪ್ರಕಾರ ಬಡವರಿರಲಿ ಶ್ರೀಮಂತರಿರಲಿ ಅವರವರ ಶ್ಯಕ್ಯಾನುಸಾರ ಲಿವಿಂಗ್ ರೂಮ್, ಬೆಡ್ ರೂಮ್, ಅಡುಗೆ ಮನೆಗೆ ನೀಡಿದ ಪ್ರಾಶಸ್ತ್ಯವನ್ನೇ ಬಚ್ಚಲು-ಕಕ್ಕಸು ಮನೆಗಳಿಗೂ ಕೊಡಬಹುದುಲ್ಲ? ನನಗಂತೂ ಕನ್ನಡಿಯಿಲ್ಲದ ಬಾತ್‌ರೂಮ್‌ಗಳಲ್ಲಿ ಮುಖ ಕ್ಷೌರ ಮಾಡುವ ಸಾಹಸಅ ಅರಿವಿದೆ, ಸರಿಯಾದ ಬೆಳಕಿಲ್ಲದ ಗೂಡು ದೀಪದಡಿಯಲ್ಲಿನ ಬಚ್ಚಲು ದಿಂಡೆಯ ಮೇಲೆ ಒಣ ಟವಲನ್ನಿಟ್ಟು ನಾನು ಸ್ನಾನ ಮಾಡಿದ ನೀರು ಅದರ ಮೇಲೆ ಬಿದ್ದು ನನ್ನ ಜೊತೆ ಅದೂ ನೆನೆದ ಅನುಭವವಿದೆ, ಬಚ್ಚಲು ಮನೆಯ ಮೇಲೆ ನೋಡಿದರೆ ಜೇಡರ ಬಲೆಗಳು ಕಟ್ಟಿದ ಮೂಲೆಗಳು ಕಂಡಿವೆ, ಯಾವತ್ತೂ ಧೂಳು ಹೊಡೆಯ ಮಾಳಿಗೆಗಳ ಬೇಸತ್ತ ಮುಖಗಳು ಎಂದೂ ಮರೆಯದ ಹಾಗಿವೆ.

ಯಾಕೆ ಹೀಗೆ? ಇವೆಲ್ಲವನ್ನೂ ನಾವು ಬದಲಾಯಿಸ ಬಲ್ಲೆವು, ಬದಲಾಯಿಸಬೇಕು. ನಮ್ಮ ಅಡುಗೆ ಮನೆಯಷ್ಟೇ ಶುಚಿಯಾಗಿ ಬಚ್ಚಲು ಮನೆಯೂ ಇರಬೇಕು, ಅಂಗಳದಿಂದ ಹಿತ್ತಿಲವರೆಗೆ ಮನೆಯ ಪ್ರತಿಯೊಂದು ಅಂಗವೂ ಅದರದ್ದೇ ಆದ ಪ್ರಾಮುಖ್ಯತೆಯನ್ನು ಹೊಂದಿರುವಾಗ ಅವುಗಳಿಗೆ ಸರಿಯಾದ ಮಹತ್ವವನ್ನು ಕೊಡಲೇ ಬೇಕು. ಎಲ್ಲಕ್ಕಿಂತ ಮುಖ್ಯವಾಗಿ ’ಬಾತ್ ರೂಮ್‌ಗೆ ಅಷ್ಟೊಂದು ಜಾಗ್ ಯಾಕೆ ವೇಸ್ಟ್ ಮಾಡ್ತೀರಾ...’ ಎಂದು ಹಿನ್ನೆಡೆ ತೋರುವ ಮನೆ ಕಟ್ಟುವ ಇಂಜಿನಿಯರುಗಳನ್ನು ಝಾಡಿಸಬೇಕು!

Thursday, April 01, 2010

Take (good) care of yourself...

ಸ್ಪ್ರಿಂಗ್ ತರೋ ಅಲರ್ಜಿ ಸೀಜನ್ನ್ ದೆಶೆಯಿಂದ ಈ ಮಾತನ್ನ ಹೇಳ್ತಾ ಇಲ್ಲ, ನನ್ನದೊಂದು ಫಂಡಮೆಂಟಲ್ ನಂಬಿಕೆ ಇಲ್ಲಿನ ಅನುಭವಗಳ ಮೂಲಕ ಬದಲಾದ ಬಗೆಯನ್ನು ಹೇಳ್ತಾ ಇದ್ದೇನೆ ಅಷ್ಟೇ. ನೀವು ಯಾರನ್ನಾದರೂ ’Take care...' ಎಂದು ಅಮೇರಿಕದಲ್ಲಿ ಬೀಳ್ಕೊಡಬಹುದು ಅದು ’how are you?' ಅನ್ನೋ ಔಪಚಾರಿಕ ಮಾತಿನ ಹಾಗೇ ಕಂಡು ಬಂದರೂ ನನ್ನ ಮಟ್ಟಿಗಂತೂ ಅದು ಯಾವುದೋ ಒಂದು ಫಾಸಿಟಿವ್ ಫೀಡ್‌ಬ್ಯಾಕ್ ಅನ್ನು ಆಗಾಗ್ಗೆ ರೀಇನ್‌ಫೋರ್ಸ್ ಮಾಡ್ತಾ ಇರುತ್ತೆ ಅನ್ಸುತ್ತೆ ಒಂದು ರೀತಿಯಲ್ಲಿ ಟಿವಿಯಲ್ಲಿ ಬರೋ ಕಮರ್ಷಿಯಲ್ಲ್ ನೋಡಿ ನಮಗೆ ಹೌಸ್‌ಹೋಲ್ಡ್ ಕೆಲಸಗಳು ನೆನಪಿಗೆ ಬರೋಲ್ವೇ ಹಾಗೆ.

ನಮ್ಮ ಹಿಂದಿನ ತಲೆಮಾರಿನಲ್ಲಿ ಜನರು ಒಂದೇ ಕಂಪನಿಗೆ ಅಥವಾ ಸರ್ಕಾರಕ್ಕೆ ತಮ್ಮ ಪೂರ್ಣ ಸೇವೆಯನ್ನು ಸಲ್ಲಿಸಿ ಅಲ್ಲೇ ನಿವೃತ್ತರಾಗೋ ವ್ಯವಸ್ಥೆ ಅಥವಾ ನಡವಳಿಕೆ ಇತ್ತು, ಆದರೆ ಈಗಿನ ಕ್ಯಾಪಿಟಲಿಸ್ಟಿಕ್ ವ್ಯವಸ್ಥೆಯ ಇತಿ-ಮಿತಿಗಳು ನಮ್ಮನ್ನು ಸದಾ ’ಈ ಕೆಲಸ ಕೈ ಬಿಟ್ಟು ಹೋದರೆ ಮುಂದೇನು...’ ಅನ್ನೋ ಯೋಚನೆಯನ್ನು ಯಾವಾಗಲೂ ಜಾಗೃತವಾಗೇ ಇಟ್ಟಿರುತ್ತವೆ. ಹಿಂದಿನ ಪರಂಪರೆಯ ಹಾಗೆ ನಿಮ್ಮ ಬಾಸ್ ಆಗಲಿ ನಿಮ್ಮ ಸಹೋದ್ಯೋಗಿಗಳಾಗಲಿ ನಿಮ್ಮ ಯೋಗಕ್ಷೇಮವನ್ನು ನೋಡಿಕೊಂಡಾರು ಅನ್ನೋದು ಮರೀಚಿಕೆಯಾಗಿ ನಿಮ್ಮ ಕೆಲಸ ಹೇಗೇ ಇದ್ದರೂ ನಿಮ್ಮ ಫರ್‌ಫಾರ್ಮೆನ್ಸ್ ಯಾವ ರೀತಿ ಇದ್ದರೂ ಕಾರ್ಪೋರೇಟ್ ಲ್ಯಾಡರ್ರ್‌ನಲ್ಲಿ ಮೇಲೆ ಹೋಗಲೂ ಅನೇಕ ಕಸರತ್ತುಗಳನ್ನು ಮಾಡಬೇಕಾಗುತ್ತದೆ.

ಒಂದು ಕಡೆ ಹೊಸ ನೀರು ಅಂದರೆ ಹೊಸ ಕೆಲಸ ಮಾಡುವ ತಲೆಮಾರು ಕಂಪನಿಗಳಲ್ಲಿ ಬರುವ ಸಾಧ್ಯತೆ ಅಥವಾ ಸಂಖ್ಯೆ ಕಡಿಮೆಯಾಗಿದ್ದು, ಮತ್ತೊಂದು ಈಗಾಗಲೇ ಕಂಪನಿಯಲ್ಲಿ ಸೇರಿಕೊಂಡು ಬೆಳೆದ ತಿಮಿಂಗಲಗಳು ಅಲ್ಲೇ ಬೀಡುಬಿಟ್ಟಿರೋದರಿಂದ ಒಬ್ಬ ಮಧ್ಯ ವರ್ಗದ ಕೆಲಸಗಾರ ಮೇಲೆ ಹೋಗುವ ಸಾಧ್ಯತೆಗೆ ಕುತ್ತು ಬರುತ್ತದೆ. ತಾನು ಮಾಡುವ ಕೆಲಸವನ್ನು ಮತ್ತೊಬ್ಬರಿಗೆ ಕೊಡಲು ಅಲ್ಲಿ ತನ್ನ ಲೆವೆಲ್ಲ್‌ನಲ್ಲಿ ಬೇರೆ ಯಾರೂ ಇಲ್ಲ, ಜೊತೆಗೆ ತಾನು ಮೇಲೆ ಹೋಗಲೂ ಅವಕಾಶವಿಲ್ಲ ಎನ್ನೋ boxed up ಮನಸ್ಥಿತಿ ಎದುರಾಗುತ್ತದೆ. ಕಳೆದ ಹತ್ತು ವರ್ಷಗಳಲ್ಲಿ ಆದ ಆರ್ಥಿಕ ಏರುಪೇರುಗಳಲ್ಲಿ ಸುಧಾರಿಸಿಕೊಳ್ಳಲು ಕಂಪನಿಗಳು ಇನ್ನೂ ಹೆಣಗುತ್ತಿರುವಾಗ ಬೇರೆ ಕಡೆಗೆ ಅಥವಾ ಕಂಪನಿಗೆ ವಲಸೆ ಹೋಗಿ ಸೇರಿಕೊಳ್ಳುವ ಸಾಧ್ಯತೆಗಳು ಕಡಿಮೆ ಆಗುತ್ತವೆ ಅಥವಾ ರಿಸ್ಕೀ ಆಗಿರುತ್ತವೆ.

ಒಂದಂತೂ ನನಗೆ ಚೆನ್ನಾಗಿ ಮನದಟ್ಟಾಗಿದೆ: ಇಲ್ಲಿ ಯಾರೂ ನಮ್ಮ ಬಗ್ಗೆ ಕೇರ್ ಮಾಡೋದಿಲ್ಲ, ಯಾರೂ ನಮ್ಮ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳೋದಿಲ್ಲ - ನಮ್ಮ ಊರಿನ ಬಸ್ಸುಗಳಲ್ಲಿ ಬರೆದಿರುವ ಹಾಗೆ ’ನಮ್ಮ ಲಗೇಜಿಗೆ ನಾವೇ ಜವಾಬ್ದಾರರು!’. ಸರ್ಕಾರಗಳು, ಅವು ಯಾವುದೇ ಪಕ್ಷದ್ದಿರಲಿ ಯಾರ ನಾಯಕತ್ವದಲ್ಲೇ ಇರಲಿ, ತಮ್ಮ ತಮ್ಮ ಬೇಳೇಕಾಳುಗಳನ್ನು ಬೇಯಿಸಿಕೊಳ್ಳುವುದರಲ್ಲಿ ಮಗ್ನರಾಗಿರುತ್ತವೆ, ತಮ್ಮ ಓಟುಬ್ಯಾಂಕುಗಳನ್ನು ಓಲೈಸುವತ್ತ ಪಾಲಿಸಿಗಳು ವಾಲಿರುತ್ತವೆ. ಎಂಪ್ಲಾಯರ್ಸ್, ಅವರಿಗೆ ನಾವೊಂದು ಕಮಾಡಿಟಿ, ಹ್ಯೂಮನ್ ರಿಸೋರ್ಸ್, ಸ್ಪ್ರೆಡ್‌ಶೀಟ್ ಹಾಗೂ ಎಕ್ಸ್‌ಪೆನ್ಸ್ ವಿಚಾರದಲ್ಲಿ ಬಂದಾಗ ಕತ್ತರಿಸಿ ತೆಗೆದು ಬಿಸಾಡಲು ಒಂದು ಬಾಡಿ ಅಷ್ಟೇ. ಫೈನಾನ್ಶಿಯಲ್ ಅಡ್ವೈಸರ್ಸ್, ಯಾವತ್ತೂ ನಮ್ಮ ಸ್ನೇಹಿತರಂತೂ ಅಲ್ಲ, ಇವರೆಲ್ಲ hyped ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಷ್ಟೇ, ನಿಮ್ಮ ದುಡ್ಡು ಕಾಸಿನ ವಿಚಾರಕ್ಕೆ ಬಂದಾಗ ಅವರ ತರ್ಕದಲ್ಲಿ ಯಾವುದೇ ಭಾವನೆಗಳಾಗಲೀ ನೋವಾಗಲಿ ಇರೋದಿಲ್ಲ. ಸಹೋದ್ಯೋಗಿಗಳು, ನಾನು ಈ ಹಿಂದೆ ಬರೆದ ಹಾಗೆ ಸ್ನೇಹಿತರೆಂದೂ ಆಗೋದಿಲ್ಲ, ಯಾವತ್ತಿದ್ದರೂ ರ್ಯಾಟ್‌ರೇಸ್ ಅನ್ನು ನೆನಪಿಸೋ ಹಾಗೆ ಅವರವರ ಏಳಿಗೆ ಅವರವರಿಗೆ ಮುಖ್ಯ. ಹೀಗೆ ನಾವು ಒಡನಾಡುವ external circle ಅನ್ನೋ ಪರೀಕ್ಷಿಸಿ ನೋಡಿದಾಗ ಎಲ್ಲರೂ ತಮ್ಮ ಕೆಲಸದಲ್ಲಿ ಮಗ್ನರು ಅನ್ನಿಸೋದಿಲ್ಲವೇ? ಇದು ಭಾರತದಲ್ಲಿ ಕೆಲಸ ಮಾಡುವವರಿಗೂ ಅನ್ವಯವಾಗಬಹುದು, ನಮ್ಮಂಥ ಅನಿವಾಸಿಗಳಿಗೆ, ಯಾಕೆಂದರೆ ಅನಿವಾಸಿತನವನ್ನು ನೋವಿರದ ನಾಗರಿಕತೆ ಎಂದು ನಾನು ಕರೆಯೋದರಿಂದ, ಇಲ್ಲಿನ ಪಾಲಿಸಿಗಳಲ್ಲಿ ಎಲ್ಲೂ feel for pain ಇದೆ ಎಂದು ಅನ್ನಿಸೋದೇ ಇಲ್ಲ.

ಅದಕ್ಕೆ, ನಮ್ಮ ಕೇರ್ ಅನ್ನು ನಾವೇ ಮಾಡಿಕೊಳ್ಳಬೇಕು, ನೋಡಿಕೊಳ್ಳಬೇಕು ಎಂದಿದ್ದು; ಬೇರೆ ಯಾರಾದರೂ ನಿಮ್ಮ ಯೋಗಕ್ಷೇಮವನ್ನು ಮಾಡುತ್ತಾರೆ ಎಂದುಕೊಂಡಿದ್ದರೆ ತಟ್ಟನೆ ಆ ಮನಸ್ಥಿತಿಯಿಂದ ಹೊರಬನ್ನಿ.

Monday, March 15, 2010

ಕ್ವಾರ್ಟರ್ರ್ ಮುಗಿತಾ ಬಂತು...

ಮೊನ್ನೆ ಮೊನ್ನೆ ಇನ್ನೂ ಹೊಸ ವರ್ಷ ಸೆಲೆಬ್ರೇಟ್ ಮಾಡಿ ೨೦೧೦ ಫರ್‌ಫಾರ್ಮೆನ್ಸ್ ಅಬ್ಜೆಕ್ಟೀವ್ಸ್ ಬರೆದಿದ್ದೆವಲ್ಲ, ಈಗಾಗ್ಲೇ ಮೊದಲ ಕ್ವಾರ್ಟರ್ ಮುಗಿಯೋದಕ್ಕೆ ಇನ್ನು ಕೇವಲ ಹದಿನೈದೇ ದಿನ ಬಾಕಿ ಎಂದು ಗೊತ್ತಾದ ಕೂಡಲೇ ಏನಾಯ್ತು ಫರ್ಸ್ಟ್ ಕ್ವಾರ್ಟರ್‌ಗೆ ಎನ್ನೋ ಚಿಂತೆಯಲ್ಲಿ ಮನಸ್ಸು ಕಳೆದು ಹೋಯ್ತು. ಇನ್ನೊಂದು ವಾರ ಎರಡು ವಾರದಲ್ಲಿ ಈ ಮೂರು ತಿಂಗಳಲ್ಲಿ ಏನೇನು ಮಾಡಿದೆವು ಎಂದು ಲೆಕ್ಕ ಕೊಡಬೇಕು (ಒಂಥರ ಚಿತ್ರಗುಪ್ತರ ಲೆಕ್ಕದ ಹಾಗೆ), ಹಾಗೇ ವರ್ಷದ ಲೆಕ್ಕ, ನಮ್ಮ ಜೀವಮಾನದ ಲೆಕ್ಕ...ಎಲ್ಲರೂ ಲೆಕ್ಕ ಇಡೋರೇ ಇಲ್ಲಿ.

ಇನ್ನೊಂದು ಸ್ವಲ್ಪ ದಿನದಲ್ಲಿ ಚೈತ್ರ ಮಾಸ-ವಸಂತ ಋತು ಬರುತ್ವೆ, ಅವರಿಗೆಲ್ಲ ಯಾರು ಲೆಕ್ಕ ಕೇಳ್ತಾರೆ ಈ ವರ್ಷ ಏನೇನು ಮಾಡ್ತೀರಿ, ಬಿಡ್ತೀರಾ ಅಂತ? ಇನ್ನೂ ಸ್ವಲ್ಪ ದಿನ ವಿಂಟರ್ ಇರುತ್ತೆ, ಅದನ್ನು ಯಾರಾದರೂ ಗದರುತ್ತಾರೆ ಏಕೆ ಈ ವರ್ಷ ಇಷ್ಟೊಂದು ಹಿಮಪಾತವನ್ನು ಮಾಡಿದೆ ಅಂತ? ಈ ಬ್ರಹ್ಮಾಂಡದ ಸಕಲ ಚರಾಚರ ಜೀವರಾಶಿಗಳಿಗಿಲ್ಲದ performance assessment ನಮಗ್ಯಾಕೆ? ಹೀಗೊಂದು ಪ್ರಶ್ನೆಯನ್ನ ಕ್ಯಾಪಿಟಲಿಸ್ಟಿಕ್ ವ್ಯವಸ್ಥೆಯನ್ನು ಅರೆದು ಕುಡಿದಂತೆ ಆಡೋ ನಮ್ಮ ಬಾಸನ್ನ ಕೇಳ್‌ಬೇಕು ಅಂದುಕೋತೀನಿ ಎಷ್ಟೋ ಸಲ.

ಕೆಲವೊಮ್ಮೆ performance ಇಲ್ಲವೇ ಇಲ್ಲ, ಎಲ್ಲವೂ ಮಕ್ಕೀಕಾ ಮಕ್ಕಿ ಯಾರದ್ದೋ ರಾಜಕೀಯ, ಯಾವುದೋ ಕೆಲಸಗಳ ನಡುವೆ ದಿನ-ವಾರಗಳಲ್ಲಿ ನಮ್ಮನ್ನು ನಾವು ಕಳೆದುಕೊಳ್ಳುವ ಜನ, ಇನ್ನು assessment ಕೊಡೋದಾದ್ರೂ ಹೇಗೆ? ನಾವು ಏನು ಮಾಡಿದ್ರೂ ಹೇಗಿದ್ರೂ ನಮ್ಮ ಕಾರ್ಯ ವೈಖರಿ ಬದಲಾಗೋದಿಲ್ಲ, ಕೆಲಸ ಜಾಸ್ತಿ ಆದ ಹಾಗೆ ಕ್ವಾಲಿಟಿ ಕಡಿಮೆ ಅನ್ನೋದಾದ್ರೆ, ನೀವು ಹೇಗೇ ಕೆಲಸ ಮಾಡಿದ್ರೂ ನಿಮ್ಮನ್ನು expense reduction ಹೆಸರಿನಲ್ಲಿ ಕೆಲಸದಿಂದ ತೆಗೆಯೋದೇ ನಿಜವಾದಲ್ಲಿ - ಈ performance assessment ಎಲ್ಲ ಹಾಸ್ಯಾಸ್ಪದ ಅನ್ಸಲ್ಲಾ?

ಇತ್ತೀಚೆಗೆ ನಮ್ಮ ಬಾಸು ಮತ್ತೊಂದು ಹೊಸ ಡೆಫಿನಿಷನ್ನ್ ಅನ್ನು ಕಂಡುಕೊಂಡಿದ್ದಾರೆ, ವೆಕೇಷನ್ನ್ ಅಂದರೆ it is an opportunity to work from a different location ಅಂತ! ರಜಾ ಇರಲಿ ಇಲ್ಲದಿರಲಿ, ವಾರದ ದಿನಗಳೋ ವಾರಾಂತ್ಯವೋ, ಹಬ್ಬವೋ ಹರಿದಿನವೋ -- ಕೆಲಸ ಮಾತ್ರ ತಪ್ಪೋದಿಲ್ಲ. ನಾವೂ Action items, Project plans, Critical issues, Next steps ಅಂತ ಬರೀತ್ಲೇ ಇರ್ತೀವಿ, ಕೆಲಸ ಮಾತ್ರ ಅದರ ಗತಿಯಲ್ಲಿ ಅದು ಸಾಗ್ತಾ ಇರುತ್ತೆ ಒಂಥರ ಹೈವೇ ಮೇಲಿನ ಕಾರುಗಳ ಹಾಗೆ. ಈ ಕಾಲನಿಗಳನ್ನು ನಂಬಿಕೊಂಡ ಇರುವೆಗಳು ಏನಾದ್ರೂ ಅವುಗಳ ಭಾಷೆಯಲ್ಲಿ ನಮ್ಮ ರೀತಿ ಏನಾದ್ರೂ ಡಾಕ್ಯುಮೆಂಟೇಷನ್ನ್ ಮಾಡ್ತಾವಾ ಅಂತ ಎಷ್ಟೋ ಸರ್ತಿ ಸಂಶಯ ಬಂದಿದೆ. ಇರುವೆ, ಜೇನ್ನೊಣಗಳು ನಮ್ಮನ್ನು ಕಂಡು, ನೋಡಿ ನಾವೇನು ಲೆಕ್ಕ ಇಡದೆ ಹೇಗೆ ಅಚ್ಚುಕಟ್ಟಾಗಿ ಕೆಲಸವನ್ನು ಪಾಲಿಸುತ್ತೇವೆ ಅಂತ ಹಂಗಿಸುತ್ತಾವೇನ್ನೋ ಅಂತ ಹೆದರಿಕೆಯಾಗುತ್ತದೆ.

Saturday, February 20, 2010

ಎಲ್ಲೆಲ್ಲೂ ಸಂಗೀತವೇ...

...ಹಾಗಂತ ಅನ್ಸಿದ್ದು ಅದರಲ್ಲೂ ಈ ಸಂಗೀತದ ವಿಶೇಷಗಳು ಗಮನ ಸೆಳೆದಿದ್ದು ಇತ್ತೀಚಿನ ಭಾರತದ ಪ್ರವಾಸದ ಸಮಯದಲ್ಲಿ ಅಂತ ಸಾರ್‌ಕ್ಯಾಷ್ಟಿಕ್ ಆಗಿ ಹೇಳಿಕೋ ಬೇಕು ಅಷ್ಟೇ. ಎಲ್ಲಿ ನೋಡಿದರೂ ತುಂಬಿ ತುಳುಕೋ ಜನ ಸಾಗರ, ಅಂತಹ ದೊಡ್ಡ ಸಮುದಾಯಕ್ಕೆ ಕಮ್ಮ್ಯೂನಿಕೇಷನ್ನ್ ರೆವಲ್ಯೂಷನ್ನಿನ ಕೊಡುಗೆಯಾಗಿ ಕೈಗೊಂದು ಕಾಲಿಗೊಂದು ಮೊಬೈಲು ಫೋನುಗಳು, ಆ ಕ್ರಾಂತಿಯ ಬೆನ್ನುಲೆಬಾಗಿ ಸಂಗೀತ ಸರಸ್ವತಿ!

ಮ್ಯಾನುಫ್ಯಾಕ್ಚರರ್ ಕೊಟ್ಟಿರೋ ಫೋನುಗಳನ್ನು ಅವುಗಳು ಹೊರಡಿಸೋ ಸ್ವರಗಳನ್ನು ಮಿತಿಯಾಗಿ ಕಷ್ಟಮೈಜ್ ಮಾಡಿಕೊಂಡ ಪದ್ಧತಿಯವನು ನಾನು. ಇದ್ದೊಂದು ಪರ್ಸನಲ್ ಸೆಲ್‌ಫೋನ್ ಅನ್ನು ಆಫೀಸಿಗೆ ಮುಡಿಪಾಗಿಡಲಾಗಿ ಈಗ ಅದೂ ಬಿಸಿನೆಸ್ಸ್ ಫೋನಾಗಿ ಬಿಜಿಯಾಗಿದೆಯೇ ಹೊರತು ಅದು ಇಂದಿನ ಯುವ ಜನಾಂಗದ ನಡವಳಿಕೆಗಳನ್ನನುಸರಿಸಿ ಬೇರೆ ಯಾವುದ್ಯಾವುದೋ ಸ್ವರವನ್ನೇನು ಹೊರಡಿಸೋದಿಲ್ಲ. ನನ್ನ ಫೋನ್ ರಿಂಗ್ ಆಗುತ್ತಿದ್ದರೆ ೧೯೯೯ರ ಮ್ಯಾಟ್ರಿಕ್ಸ್ ಸಿನಿಮಾದಲ್ಲಿ ಕಿಯಾನೋ ರೀವ್ಸ್ (The Matrix, Keanu Reeves) ಈಗಲೋ ಆಗಲೋ ಬಂದೇ ಬಿಡುತ್ತಾನೆ ಎನ್ನುವಂತೆ ಅಕ್ಕ ಪಕ್ಕದವರು ನೋಡುವಂತೆ ಕಿರುಚಿಕೊಳ್ಳುತ್ತದೆ, ಆದರೆ ನನ್ನ ಫೋನ್ ಹುಟ್ಟಿದಾಗಿನಿಂದ ಇನ್ನು ಅದು ಸಾಯುವವರೆಗೆ ಮತ್ಯಾವ ಸ್ವರವನ್ನೂ (ರಿಂಗ್ ಟೋನ್) ಅನ್ನೂ ಅನುಸರಿಸೋದಿಲ್ಲ, ಅನುಕರಿಸೋದಿಲ್ಲ ಎಂದು ಪ್ರಮಾಣವನ್ನಂತೂ ಮಾಡಲಾರೆ...ಇನ್ನು ಮುಂದೆ ಹೇಗೋ ಏನೋ ಯಾರಿಗೆ ಗೊತ್ತು?

ನಮ್ಮಣ್ಣನ ಫೋನ್ ಕರೆ ಬಂದಾಗಲೆಲ್ಲ ಎಂ. ಡಿ. ಪಲ್ಲವಿಯವರ "ನೀನಿಲ್ಲದೇ ನನಗೇನಿದೇ..." ಹಾಡನ್ನು ಹೊರಡಿಸುತ್ತಿತ್ತು, ನಾನು ಮೊದಮೊದಲು ಈ ಹಾಡನ್ನು ಕೇಳಿದಾಗ ನನಗೆ ಮನಸ್ಸಿನ್ನಲ್ಲಿ ಉದ್ಭಸಿದ ಭಾವನೆಗಳು ಪದೇ ಪದೇ ರಿಂಗ್‌ಟೋನ್ ನೋಪಾದಿಯಲ್ಲಿ ಬಂದೂ ಬಂದೂ ಹೊಸ ಹೊಸ ಭಾವನೆಗಳು ಮೂಡಿಸತೊಡಗಿತು. ವಿಶೇಷವೆಂದರೆ ತಾವೆಷ್ಟೇ ಅಕ್ಕರೆಯಿಂದ ಕಾಸುಕೊಟ್ಟು ಕೊಂಡೋ ಅಥವಾ ಪುಕ್ಕಟೆಯಾಗಿ ರಿಂಗ್‌ಟೋನ್ ಅನ್ನು ಹಾಕಿಕೊಂಡಿದ್ದರೂ ಯಾರೂ ತಮ್ಮ ಫೋನ್ ಯಾರೋ ಕರೆ ಮಾಡಿದರೆಂದು ತಮಗೆ ಬೇಕಾದ ಹಾಡನ್ನು ನುಡಿಸಿದಾಗ ಒಂದೆರಡು ಸಾಲನ್ನಾದರೂ ಅದು ಹಾಡಲಿ ಎಂದು ಸುಮ್ಮನೆ ಬಿಡೋದಿಲ್ಲ. ಕರೆ ಬಂದು ಅದು ಹಾಡು ಶುರುಮಾಡುವಾಗಲೇ ಅದರ ಗಂಟಲನ್ನು ಹಿಚುಕಿ ತಮ್ಮ ಗಂಟಲನ್ನು ತೆರೆದುಕೊಳ್ಳುತ್ತಾರೆ. ಹೀಗಿದ್ದಾಗ್ಯೂ ನನ್ನಣ್ಣನ ಫೋನು ಒಂದೆರಡು ಬಾರಿ "ಕನಸೆಲ್ಲ ಕಣ್ಣಲ್ಲೇ ಸೆರೆಯಾಗಿದೆ..."ಯಲ್ಲಿಯವರೆಗೆ ನುಡಿಸಿತ್ತು, ಒಮ್ಮೆ ಎಲ್ಲದಕ್ಕಿಂತ ಮುಂದೆ ಹೋಗಿ "ಎದೆಯಾಸೆ ಏನು ಎಂದು ನೀ ಕಾಣದಾದೆ...’ ವರೆಗೆ ಹೋಗಿದ್ದು ನಿಜ.

ಅದೇನು ಸಾವಿರಾರು ವರ್ಷದ ಪರಂಪರೆಯೋ ಅಥವಾ ನಮನಮಗೆ ಅಂಟಿದ ಸಂಗೀತದ ಮೋಡಿಯೋ...ಭಾರತದಲ್ಲಿ ಹುಡುಕಿದರೆ ಎಲ್ಲ ಕಡೆ ಸಂಗೀತವಿದೆ: ಬೇಡುವ ಬಿಕ್ಷುಕನಿಂದ ಹಿಡಿದು, ರಿವರ್ಸ್ ತೆಗೆಯೋ ವಾಹನಗಳವರೆಗೆ, ಹಾಲು-ತರಕಾರಿ ಮಾರುವವರ ಸ್ವರಗಳಿಂದ ಹಿಡಿದು ಮನೆಯ ಹಳೆ ಗಡಿಯಾರಗಳವರೆಗೆ, ಹೆಚ್ಚೂ ಕಡಿಮೆ ಎಲ್ಲ ಟಿವಿ-ರೆಡಿಯೋ ಅಡ್ವರ್‌ಟೈಸ್‌ಮೆಂಟ್‌ಗಳಿಂದ ಹಿಡಿದು ಮೇಲೆ ಹೇಳಿದ ಹಾಗೆ ಸೆಲ್‌ಫೋನ್ ಸಂಭಾಷಣೆಗಳವರೆಗೆ. ಕೆಲವೊಮ್ಮೆ ಈ ರಿವರ್ಸ್ ತೆಗೆಯೋ ವಾಹನಗಳ ವಾರ್ನಿಂಗ್ ಸಿಗ್ನಲ್ ಆಗಿ ಬಳಸೋ ಸಿಂಫನಿಯ ಧ್ವನಿಗೆ ಕಾಫಿರೈಟ್ ಅನ್ನು ಕೊಟ್ಟವರು ಯಾರು? ಅದರಲ್ಲೂ ಅಂತಹ ಮಹಾನ್ ಸಿಂಫನಿಗಳ ಬಳಕೆ ಈ ರೀತಿಯಲ್ಲಿ ಇಷ್ಟು ಕೆಟ್ಟದಾಗಿ ಏಕಾಗುತ್ತಿದೆ ಅನ್ನಿಸಿ ತಲೆ ಚಿಟ್ಟು ಹಿಡಿದದ್ದೂ ಹೌದು. ಅಷ್ಟೊಂದು ಜನರಿದ್ದಾರೆ, ಅವರೆಲ್ಲರಿಗೂ ಸಂಗೀತ ಬೇಕು, ಆ ಸಂಗೀತ ಹಲವಾರು ವಿಧ ರೀತಿಗಳಲ್ಲಿ ತಿರುಚಲ್ಪಟ್ಟದ್ದಾಗಿದೆ, ಕಾಪಿ ಹೊಡೆದದ್ದಾಗಿದೆ ಅನ್ನೋ ಪರಿಜ್ಞಾನವೇ ಇಲ್ಲದಷ್ಟರ ಮಟ್ಟಿಗೆ ಬೆಳೆದು ಹೋಗಿದೆ.

ನಾನು ಸ್ವರ-ಸಂಗೀತ-ಮಾಧುರ್ಯ ಅಂತ ಇಬ್ಬರು ಗುರುಗಳ ಹತ್ತಿರ ಎರಡು ಸಾರಿ ಉತ್ತರಾದಿ-ದಕ್ಷಿಣಾದಿ ಸಂಗೀತದ ವಾಸನೆಯನ್ನು ಎಳೆದುಕೊಂಡೇ ಅಂದಿನ ಕಳವಳಗಳಿಗೆ ಸಂಗೀತದ ಕಲಿಕೆಯನ್ನು ಬಲಿಕೊಟ್ಟವನು, ನಾನಾದರೂ ಸಂಗೀತದ ಬಗ್ಗೆ ಏನು ಬರೆಯಬಲ್ಲೆ ಎನ್ನುವ ಕೆಳ ಮನೋಭಾವನೆಯವನಾದರೂ ನಿಶ್ಶಬ್ದವನ್ನು ಸೀಳುವ ಕಂಪನಗಳನ್ನಾಗಿ ಸಂಗೀತವನ್ನು ನೋಡುವುದರ ಜೊತೆಗೆ ಕಂಪನದ ಜೊತೆ ಹದವಾಗಿ ಬೆರೆತ ಸದ್ದಿಲ್ಲದ ಪರಿಸರವೂ ಸಂಗೀತದ ನೆಲೆನಿಲ್ಲುವಿಕೆ ಅಷ್ಟೇ ಮುಖ್ಯ. ಆದರೆ ಭಾರತದಲ್ಲಿ ಒಂದರ ಸಂಗೀತದ ಅಲೆ ಮತ್ತೊಂದರ ಸಂಗೀತದ ಅಲೆಗಳನ್ನು ಸೀಳುತ್ತದೆ, ನಿಶ್ಶಬ್ದ ಅನ್ನೋದು ಕೇವಲ ಬ್ರಾಹ್ಮೀ ಮಹೂರ್ತದ ಒಂದೆರಡು ಘಳಿಗೆ ಮೊದಲು ಮಾತ್ರ ಅನ್ನುವಂತಾಗಿದೆ, ಎಲ್ಲೆಲ್ಲಿಯೂ ಒಂದಲ್ಲ ಒಂದು ರೀತಿಯಲ್ಲಿ ತುಂಬಿ ತುಳುಕುವ ಸಂಗೀತ ಕೊನೆಗೆ ಒಂದು ದೊಡ್ಡ ಗದ್ದಲದ ರೀತಿಯಲ್ಲಿ ಕೇಳಿ ಬರುತ್ತದೆ ಕಾಣಸಿಗುತ್ತದೆ.

ಸುಮ್ಮನೇ ಯಾರೋ ಹಾಕಿಕೊಂಡಿರೋ ರಿಂಗ್‌ಟೋನಿಗೆ ನಾನು ಬೇಡವಲ್ಲದ ಮಹತ್ವವನ್ನು ಕೊಡುತ್ತೇನೆ. ಸೆಲ್‌ಫೋನ್ ಉತ್ಪಾದಕರು ಕೊಟ್ಟ ಧ್ವನಿಗಳು ಸಾಲವು ಎಂದು ಮೂರು ಡಾಲರ್ ಕೊಟ್ಟು ಹೊಸ ಧ್ವನಿಯನ್ನು ಪಡೆದು ಹಾಕಿಕೊಳ್ಳುವವನ ಮನಸ್ಸಿನ ಹಿಂದೇನಿರಬಹುದು ಎನ್ನುವ ಪ್ರಶ್ನೆಗಳು ಕಾಡುತ್ತವೆ. ನನ್ನಣ್ಣ ’...ನೀನಿಲ್ಲದೇ ನನಗೇನಿದೆ...’ ಎನ್ನುವ ಹಾಡನ್ನೇ ಏಕೆ ಹಾಕಿದ? ರಿಂಗ್ ಆದಾಗ ಬರುವ ಹಾಡಿಗೂ ಮತ್ತೊಬ್ಬರು ನಾವು ಫೋನ್ ಎತ್ತಿ ಆನ್ಸರ್ ಮಾಡುವವರೆಗೆ ಕಾಯುವಾಗ ಬ್ಯಾಕ್‌ಗ್ರೌಂಡಿನಲ್ಲಿ ರಿಂಗ್ ಬದಲಿಗೆ ಕೇಳುವ ಹಾಡಿಗೆ ಏನನ್ನುತ್ತಾರೆ? ನನಗೆ ಕರೆ ಮಾಡಿದವರು ಮಾಡುವವರು ಯಾರೋ ಅವರು ಆ ಹಾಡನ್ನೇ ಕೇಳಲಿ ಎನ್ನುವ ಉಮೇದಿನ ಆದಿ-ಅಂತ್ಯಗಳೇನು? ನನ್ನ ಉಳಿದೆಲ್ಲ ಪರ್ಸನಾಲಿಟಿ ಪ್ರತಿಬಿಂಬಿಸುವ ಅಂಶಗಳ ಜೊತೆಗೆ ತಣ್ಣಗಿದ್ದಾಗ ಜೇಬಿನ ಒಳಗಿರುವ ಈ ಎಲೆಕ್ಟ್ರಾನಿಕ್ ಉಪಕರಣ ಚಾಲೂ ಇದ್ದಾಗ ನನ್ನ ವ್ಯಕ್ತಿತ್ವದ ಪ್ರತಿಬಿಂಬವಾಗುವುದು ನಿಜವೇ? ತನಲ್ಲಿ ಇದ್ದದ್ದು ಸಾಲದು, ಮಂದಿಯದು ಬೇಕು, ಅವರ ಕೈಯಲ್ಲಿರೋದು ಒಳ್ಳೆಯದು ಎನ್ನುವ ಮೆಟೀರಿಯಲಿಸ್ಟಿಕ್ ಬದುಕನ್ನು ಸೆಲ್‌ಫೋನುಗಳು ಹುಟ್ಟು ಹಾಕುತ್ತಿದ್ದಾವೆಯೇ? ಎಲ್ಲದಕ್ಕಿಂತ ಮುಖ್ಯವಾಗಿ ಸಂಗೀತ ಎಲ್ಲರಿಗೂ ಇಷ್ಟವಾಗಲೇ ಬೇಕು ಎಂದೇನಾದರೂ ನಿಯಮವಿದೇಯೇ?

ಗುಬ್ಬಚ್ಚಿಯ ಹಾಗೆ ಕೂಗುವ ಧ್ವನಿಗಳಿಂದ ಹಿಡಿದು, ವಯಸ್ಸಾದವರಿಗೆ ಕೇಳದ ಧ್ವನಿಯ ಫ್ರೀಕ್ವೆನ್ಸಿಯವರೆಗೆ, ಉತ್ತರಾದಿ ಸಂಗೀತದಿಂದ ಹಿಡಿದು ದಕ್ಷಿಣಾದಿಯವರೆಗೆ, ಪೂರ್ವದಿಂದ ಹಿಡಿದು ಪಶ್ಚಿಮದ ಸಂಗೀತದ ಅಲೆಗಳ ಬಗ್ಗೆ ಬೇಕಾದಷ್ಟು ರಿಂಗ್ ಟೋನ್‌ಗಳಿವೆ, ಆದರೆ ಇವು ಯಾವುವೂ ಜನರ ಹಸಿವನ್ನು ಹಿಂಗಿಸಿಲ್ಲ. ಆ ಸಾಲದು ಎನ್ನುವ ಮನೋಭಾವನೆ ಅನೇಕ ಬೇಕುಗಳ ತಾಯಿಯಾಗುತ್ತಿದೆ. ಹೀಗೆ ಹುಟ್ಟುವ ತಾಯಂದಿರ ದಯೆಯಿಂದ ಮತ್ತೆ ಅನೇಕಾನೇಕ ಮಕ್ಕಳು ಸಂಗೀತ ಪ್ರಾಪ್ತಿಯನ್ನು ಹೊಂದುತ್ತಾರೆ, ಒಟ್ಟಿನಲ್ಲಿ ಸಂಗೀತವನ್ನು ಜಗತ್ತು ಎತ್ತಿಕೊಳ್ಳುತ್ತದೆ - ಸಂಗೀತ ಜನರನ್ನು ಎಚ್ಚೆರಿಸುತ್ತದೆ. ಸದ್ಯ, ಈ ಸಂಗೀತದ ಟೋನುಗಳು ಮನೆಯ ಹೊರಗೇ ಉಳಿಯುತ್ತವೆ ಹೆಚ್ಚಿನ ಮಟ್ಟಿಗೆ, ಅದ್ಯಾವ ಪುಣ್ಯಾತ್ಮನೂ ಮನೆಯ ಫೋನಿನ ರಿಂಗ್‍ಟೋನ್ ಅನ್ನು ಈ ರೀತಿಯ ಜನರ ಮನೋಭಿರುಚಿಗೆ ತಕ್ಕಂತೆ ಬದಲಾಯಿಸಿಲ್ಲವಲ್ಲ, ಅಷ್ಟು ಸಾಕು.

Tuesday, February 09, 2010

ಬೀಳದೇ ಏಳೋದಾದರೂ ಹೇಗೆ?

ಹೀಗೇ ಒಂದು ಛಳಿಗಾಲದ ದಿನ, ಮಧ್ಯಾಹ್ನ ಆಗಿ ಸಂಜೆ ನಾಲ್ಕು ಘಂಟೆ ಹೊತ್ತಿಗೆಲ್ಲಾ ಅದನ್ನು ದಿನ ಎನ್ನಬೇಕೋ, ಕತ್ತಲು ಎನ್ನಬೇಕೋ ಎಂದು ನಮ್ಮನ್ನೇ ನಾವು ಪ್ರಶ್ನಿಸಿಕೊಳ್ಳಬಹುದಾದಂತಹ ಮಸುಕು ಮುಸುಕಿದ ಮುಸ್ಸಂಜೆ. ಈಗಲೋ ಆಗಲೋ ಉಸಿರು ಕಳೆದುಕೊಂಡು ಹೋಗೇ ಬಿಟ್ಟ ಎನ್ನುವ ಸೂರ್ಯನನ್ನು ಸಂತೈಸುವ ಹಾಗೆ ಅಲ್ಲಲ್ಲಿ ಬಿದ್ದುಕೊಂಡು ಛಳಿಗೆ ಗಟ್ಟಿಯಾಗಿ ಮುಖ ಸಿಂಡರಿಸಿಕೊಂಡ ಹಿಮದ ತುಕುಡಿಗಳು ತಮ್ಮ ಮೇಲೆ ಬಿದ್ದ ಬೆಳಕನ್ನು ಪ್ರತಿಫಲಿಸಿ ಬೆಳಕಿನ ಸೈನಿಕರ ಉತ್ಸಾಹ ಕತ್ತಲಿನ ಶತ್ರುಗಳ ಎದುರು ಸಂಪೂರ್ಣವಾಗಿ ಕಳೆದು ಹೋಗದ ಹಾಗೆ ಕಾಪಾಡಿಕೊಂಡಿದ್ದವು. ಯಾವತ್ತಿನಂತೆ ರಸ್ತೆಗಳು ಊರ್ಧ್ವಮುಖಿಗಳಾಗಿ ತಮ್ಮನ್ನು ತಾವು ಸೇವೆಗೆ ಒಪ್ಪಿಸಿಕೊಂಡಿದ್ದರೂ ಕಪ್ಪಗಿನ ರಸ್ತೆಗಳ ಮೇಲೆ ಬೂದಿ ಬಳಿದುಕೊಂಡ ಹಾಗಿನ ಛಾಯೆ ಯಾಕೋ ಮುಂಬರುವ ಕೆಟ್ಟದ್ದನ್ನು ತಾವು ಬಲ್ಲೆವು ಎಂಬಂತೆ ಅಜ್ಜ-ಮುತ್ತಾತರ ಭಂಗಿಯಲ್ಲಿ ಇದ್ದವು. ನಮ್ಮ ಮನೆಯ ಡ್ರೈವ್‌ ವೇ ತನ್ನ ಮೇಲಿನ ಅರ್ಧ ಇಂಚು ದಪ್ಪಗಿನ ಐಸ್ ಲೇಯರ್‌ನ್ ಅವಶೇಷಗಳಡಿಯಲ್ಲಿ ಸಮಾಧಿಯಾಗಿತ್ತು, ನಮ್ಮ ಮನೆಯ ಮೇಲ್ ಬಾಕ್ಸ್ Mohawk Indian ಹೇರ್ ಸ್ಟೈಲ್ ಮಾಡಿಕೊಂಡು ತನ್ನ ಮೇಲೆ ಒಂದು ರೀತಿಯ ಚೂಪನೆ ಐಸ್ ಪದರವನ್ನು ನಿರ್ಮಿಸಿಕೊಂಡಿತ್ತು, ಅದರ ಬುಡದಲ್ಲಿ ಲಾಲಿ ಪಾಪ್ ನೆಕ್ಕಿ ಬಣ್ಣದ ಜೊಲ್ಲು ಸುರಿಸುವ ಮುಗ್ಧ ಮಗುವಿನಂತೆ ಬಿಸಿಲಿಗೆ ಕರಗಿ ಐಸ್ ನೀರಾಗುತ್ತ ನೀರಾಗುತ್ತ ಹನಿಗಳು ಅಲ್ಲಲ್ಲಿ ಹೆಪ್ಪು ಕಟ್ಟಿಕೊಂಡು ಮೇಲ್ ಬಾಕ್ಸ್ ಸಂರಕ್ಷರ ಹಾಗಿನ ಚೂಪುಗಳನ್ನು ನಿರ್ಮಿಸಿಕೊಂಡಿದ್ದವು.

ಬ್ಲ್ಮೂಮ್‌ಬರ್ಗ್ ರೆಡಿಯೋದಲ್ಲಿ ಮಾರ್ಕೆಟ್ ಬಿದ್ದ ಬಗ್ಗೆ ಅರಚಿಕೊಳ್ಳುತ್ತಿದ್ದರು, ಈಗಾಗಲೇ ನೀರಲ್ಲಿ ಮುಳುಗಿದೋನಿಗೆ ಮಳೆಯೇನು ಛಳಿಯೇನು ಎನ್ನುವ ಧೋರಣೆಯನ್ನು ತಾಳಿಕೊಂಡ ಜನರಿಗೆ ಇವರೆಲ್ಲ ಮತ್ತಿನ್ನಷ್ಟು ಹೆದರಿಸಲು ವ್ಯರ್ಥವಾಗಿ ಪ್ರಯತ್ನಿಸುತ್ತಿದ್ದಾರಲ್ಲ ಎನ್ನಿಸಿತು. ಈ ಅರಚುವ ರೆಡಿಯೋ ಧ್ವನಿಗಳಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿ ’ಬಿಸಿಲೇ ಇರಲಿ, ಮಳೆಯೇ ಇರಲಿ, ಕಾಡಲ್ಲಿ ಮೇಡಲ್ಲಿ ಅಲೆವೆ…’ ಎನ್ನುವಂತೆ ಎದುರು ಮನೆ ಮಕ್ಕಳು ಕೊರೆಯುವ ಛಳಿಯನ್ನೂ ನಿರ್ಲಕ್ಷಿಸಿ ಸ್ಲೆಡ್ಡಿಂಗ್ ಆಡುತ್ತಿದ್ದರು, ಅವರ ನಗುವಿನಲ್ಲಿ ಯಾವುದೇ ಒತ್ತಡವಿದ್ದ ಹಾಗಿರಲಿಲ್ಲ. ನಮ್ಮ ಮನೆಯ ಮುಂದೆ ಹಾಗೂ ಹಿತ್ತಲಿನ ಮರಗಳು ಅಲುಗಾಡಲೂ ಸಂಕೋಚಗೊಂಡವರಂತೆ ಸ್ಥಿರವಾಗಿ ನಿಂತಿದ್ದವು, ನಿತ್ಯಹರಿದ್ವರ್ಣಿಗಳಂತೂ ಈ ಟ್ಯಾಕ್ಸ್ ಸೀಜನ್ನ್‌ನಲ್ಲಿ ಎಲ್ಲಿ ನಕ್ಕರೆ ಅದಕ್ಕೆ ಟ್ಯಾಕ್ಸ್ ಹಾಕಿ ಬಿಡುತ್ತಾರೋ ಎಂದು ಬಾಯನ್ನು ಹೊಲಿದುಕೊಂಡವರಂತಿದ್ದವು.

ಮನೆಯ ಟ್ರ್ಯಾಷ್ ಕ್ಯಾನುಗಳನ್ನು ಎತ್ತಿಡುತ್ತಾ ನಾನು ’ನಿಧಾನವಾಗಿ ನಡೆಯಬೇಕು, ಬಿದ್ದರೆ ಅಷ್ಟೇ ಗತಿ…’ ಎಂದು ಏನೇನೆಲ್ಲ ಮನಸ್ಸಿನ್ನಲ್ಲಿ ಅಂದುಕೊಂಡರೂ, ಅಂದುಕೊಂಡವುಗಳು ಪ್ರಯೋಜನಕ್ಕೆ ಬಾರವು ಏನಿದ್ದರೂ ಕ್ರಿಯಾಶೀಲತೆ ಮುಖ್ಯ ಎನ್ನುವ ವಿಧಿ ಕಣ್ಣು ತೆಗೆದು ಕಣ್ಣು ಬಿಡುವಷ್ಟರಲ್ಲಿ ನನ್ನ ಕಾಲುಗಳು ತಲೆಗಿಂತ ಮೊದಲು ಹೋಗತೊಡಗಿ ದೊಪ್ಪನೆ ಜಾರಿ ಬಿದ್ದದ್ದಾಯಿತು. ಕೈ ಊರಿ ಎದ್ದು, ಮೈ ಕೈ ಕೊಡವಿಕೊಂಡು ಸುಧಾರಿಸಿಕೊಳ್ಳೂತ್ತಾ ಸದ್ಯ ಯಾವುದೇ ಎಲುಬು ಮುರಿಯಲಿಲ್ಲ ಎಂದು ಸಮಾಧಾನ ಪಡುವಂತಾಯಿತು. ಕತ್ತಲಿನ ದಯೆಗೆ ನಾನು ನೆಲಕ್ಕೆ ಅಪ್ಪಳಿಸಿದ ದೃಷ್ಯ ಜನಜನಿತವಾಗಲಿಲ್ಲ. ನೆಲದಲ್ಲಿನ ಐಸ್ ಪದರ ನಮಗೇನೂ ಆಗಿಲ್ಲ ಎಂದು ಬೀಗಿದಂತೆ ಕಾಣಿಸಿತು. ನಾನು ಚೆಲ್ಲಾ ಪಿಲ್ಲಿಯಾದ ಟ್ರ್ಯಾಷ್ ಕ್ಯಾನ್‌ಗಳನ್ನು ಮತ್ತೆ ಎತ್ತಿಟ್ಟು ಕೆಲಸ ಮುಂದುವರೆಸಿದೆ.

ಈ ಏಳು-ಬೀಳುಗಳು ಸಹಜ, ಆದರೆ ವಯಸ್ಸಾಗುತ್ತಾ ಬಂದ ಹಾಗೆ ಬೀಳುಗಳ ಬಗ್ಗೆ ಗಮನಕೊಡಬೇಕಾಗುತ್ತದೆ, ಎಲ್ಲ ಬೀಳುಗಳೂ ಏಳುಗಳಲ್ಲಿ ಕೊನೆಯಾಗಬೇಕು ಎಂದೇನೂ ಇಲ್ಲ. ಬಹಳ ಸರಳವಾದ ಸಿದ್ಧಾಂತ, ರಿಸ್ಕ್ ತೆಗೆದುಕೊಳ್ಳಬೇಕು ಎನ್ನುವುದು ಸರಿ, ಆದರೆ ಹೆಚ್ಚಿನ ರಿಟರ್ನ್ ಬಯಸಿದಂತೆ ಅಲ್ಲಿ ರಿಸ್ಕ್ ಹೆಚ್ಚಾಗುತ್ತದೆ, ಎಲ್ಲರಿಗೂ ಎಲ್ಲ ರಿಸ್ಕ್ ಟೇಕಿಂಗ್ ಸ್ಟ್ರಾಟೆಜಿ ಅನ್ವಯಿಸುವುದಿಲ್ಲ, ಕೆಲವೊಮ್ಮೆ ಸೇಫ್ಟಿ ಫರ್ಸ್ಟ್ ಎಂದುಕೊಂಡು ಯಾವುದು ನಮ್ಮ ಹಿತರಕ್ಷಣೆಯನ್ನು ಮಾಡಬಹುದೋ ಅಂತಹ ಹೂಡಿಕೆಯನ್ನು ಮಾಡುವುದು ಒಳ್ಳೆಯದು. ಇವೆಲ್ಲ ಗುಡ್ ಎಕನಾಮಿಕ್ಸ್ ಇಂಡಿಕೇಟರುಗಳು, ಹೂಡಿಕೆಯ ಮೂಲಭೂತ ಅಂಶಗಳು – ಇವುಗಳ ಬಗ್ಗೆ ಅದೆಷ್ಟೇ ಪಬ್ಲಿಷ್ ಆಗಿದ್ದರೂ ಸಹ ಬೀಳುವವರು ಮಾತ್ರ ಕಡಿಮೆಯಾಗೋದಿಲ್ಲ. ಅದರಲ್ಲೂ ನನ್ನಂತಹವರು ಎಲ್ಲವನ್ನು ತಮ್ಮಷ್ಟಕ್ಕೇ ತಾವೇ ಅನುಭವಿಸಿ ನೋಡುತ್ತೇವೆ ಎಂದು ಕಂಕಣ ತೊಟ್ಟುಕೊಂಡಿರುವಾಗ…ಯಾವ ಉಪದೇಶ ಎಲ್ಲಿಯ ಲೆಕ್ಕ ಬಿಡಿ. ಬೀಳದೇ ಏಳೋದಾದರೂ ಹೇಗೆ? ಒಮ್ಮೆ ಬಿದ್ದ ಅನುಭವದ ಲೆಕ್ಕಕ್ಕೆ ಮತ್ತೆ-ಮತ್ತೆ ಮೇಲೆ ಹೋಗುವ ರಿಯಾಯತಿ ಸಿಗಬಹುದೇ? ಬಿದ್ದರೆ ಮಾತ್ರ ಏಳಲು ಬಿಡುತ್ತೇನೆ ಎನ್ನುವ ಆಟದ ನಿಯಮಗಳನ್ನು ಯಾರು ಬರೆದವರು? ಅದನ್ನೇಕೆ ನಾವು ಒಪ್ಪಿಕೊಳ್ಳಬೇಕು? ಈ ಒಪ್ಪಿಕೊಳ್ಳದ ನಿಯಮಕ್ಕೆ ಬೀಳುವ-ಏಳುವ ಅನುಪಾತಗಳನ್ನಾದರೂ ಸಮತೂಕ ಮಾಡಬೇಕು ಎನ್ನುವ ಹಂಬಲವೇಕಿಲ್ಲ? ಕೆಟ್ಟ ಮೇಲೆ ಬುದ್ದಿ ಬಂದದ್ದು ಎಲ್ಲಿ ಹೋಯಿತು, ಅದು ಮತ್ತೆ-ಮತ್ತೆ ನಮ್ಮನ್ನು ಬೀಳದಂತೆ ತಡೆಹಿಡಿಯೋದರಲ್ಲಿ ವಿಫಲವಾಗೋದೇಕೆ?

ಬಿದ್ದರೆ ಹಾಗಾಗುತ್ತದೆ ಹೀಗಾಗುತ್ತದೆ ಎನ್ನುವ ಮಧ್ಯಮ ವರ್ಗದ ಕೊರಗುಗಳು ಎದ್ದ ಮೇಲಾಗಬಹುದಾದ ಸಂಭ್ರಮದ ಸಂತೋಷವನ್ನು ಕಸಿದುಕೊಂಡು ಬಿಡುತ್ತವೆ. ನೆಲವನ್ನು ಬಿಟ್ಟು ಮೇಲೇರದ ಮಧ್ಯಮ ವರ್ಗದ ಬಂಧನಗಳು ಎದ್ದು ಹಾರಾಡಬಹುದಾದ ಮನದ ಸ್ವಾತಂತ್ರ್ಯವನ್ನು ಸೀಮಿತಗೊಳಿಸಿ ಗೂಟಕ್ಕೆ ಕಟ್ಟಿದ ತುಡುಗು ದನದ ಮೂಗುದಾರದಂತೆ ಸುತ್ತಿಕೊಂಡುಬಿಡುತ್ತವೆ. ಇವತ್ತಿಲ್ಲದಿದ್ದರೆ ನಾಳೆ, ಇಂದಲ್ಲದಿದ್ದರೆ ಮುಂದೆ ಎನ್ನುವ ಆಶಾವಾದ ತಿಪ್ಪೆ ಸಾರುವ ಸಗಣಿಯಾಗುತ್ತದೆ. ಮುಂದಿನ ಜನ್ಮದಲ್ಲಿ ಮಾಡಿದರೆ ಆಯಿತು ಎನ್ನುವುದು ನನಗದು ಬೇಕೇ ಬೇಕು ಎಂದು ಹಠ ಹಿಡಿದ ಮಗುವಿಗೆ ನಾಳೆ ಕೊಡುತ್ತೇನೆ ಎಂದು ಸಾಂತ್ವನ ಹೇಳುವ ಒಣ ತತ್ವವಾಗುತ್ತದೆ. ಏನೆಲ್ಲವನ್ನು ಮಾಡಬೇಕು ಎನ್ನುವ ಉನ್ಮಾದ ಏನೂ ಮಾಡಿಲ್ಲವಲ್ಲ ಎನ್ನುವ ಉದ್ವೇಗದ ರಭಸದಲ್ಲಿ ಕೊಚ್ಚಿಕೊಂಡು ಹೋಗುವ ಪ್ರವಾಹದ ನೀರಿನ ಒಂದು ಭಾಗವಾಗುತ್ತದೆ. ಅವರವರ ತೂಕಕ್ಕೆ ಅವರವರ ಸಾಮರ್ಥ್ಯಕ್ಕೆ ಬೀಳದೇ ಎದ್ದೋ ಅಥವಾ ಎದ್ದು ಬಿದ್ದೋ ನೆಲೆ ನಿಲ್ಲಿಸುವ ಗುರುತ್ವಾಕರ್ಷಣ ಶಕ್ತಿ ಈ ಹೊತ್ತಿನ ತತ್ವದ ಮಹಾ ಲೆವೆಲ್ಲರ್ ಆಗಿಬಿಡುತ್ತದೆ.

Sunday, January 31, 2010

ಶ್ರದ್ದಾಂಜಲಿ

ತಿಂಗಳಲ್ಲಿ ಕನ್ನಡ ಸಂಸ್ಕೃತಿ ಲೋಕ ಕಳೆದುಕೊಂಡ ಚೇತನಗಳ ನೆನಪಿಗೆ...

ಬಿ.ವಿ. ವೈಕುಂಠರಾಜು - ಜನವರಿ ೩೧


ಚಿತ್ರಕೃಪೆ: ಪ್ರಜಾವಾಣಿ
***
ಚಿಂದೋಡಿ ಲೀಲಾ - ಜನವರಿ ೨೧




ಚಿತ್ರಕೃಪೆ: ಪ್ರಜಾವಾಣಿ

***
ಕೆ.ಎಸ್. ಅಶ್ವಥ್ - ಜನವರಿ ೧೮



ಚಿತ್ರಕೃಪೆ: ಪ್ರಜಾವಾಣಿ
’ಅಂತರಂಗ’ದ ನಮನ ಹಾಗೂ ಚಿರವಿದಾಯ.

Saturday, January 30, 2010

ನಮ್ಮೊಳಗಿನ ಬದಲಾವಣೆ ದೊಡ್ಡದು...

’ಇಂಡಿಯಾ ಪ್ರವಾಸ ಹೇಗಿತ್ತು?’ ಅನ್ನೋ ಪ್ರಶ್ನೆಗೆ ’ಅದು ಪ್ರವಾಸವೇ ಅಲ್ಲ!’ ಎಂದು ಉತ್ತರ ಕೊಟ್ಟು ಪ್ರಶ್ನೆ ಕೇಳಿದವರ ಮುಖದ ಮೇಲೆ ಸಹಜವಾಗಿ ಏಳುವ ಆಶ್ಚರ್ಯದ ಅಲೆಗಳನ್ನು ನೋಡೋದಕ್ಕೆ ಒಂದು ರೀತಿ ಖುಷಿ ಅನ್ಸುತ್ತೆ. ನಮ್ಮ ಊರಿಗೆ ನಾವು ಟೈಮ್ ಸಿಕ್ಕಾಗ ಕೊಡೋ ಭೇಟಿಯನ್ನು ಯಾರಾದ್ರೂ ಪ್ರವಾಸ ಅಂತ ಕರೀತಾರೇನು? ಅದು ಯಾವತ್ತಿದ್ದರೂ ಋಣ ಕರ್ಮಗಳಿಗೆ ಅಂಟಿಕೊಂಡಂತ ಒಂದು ಬಂಧನ, ಅಥವಾ ಅದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಅದನ್ನು ಯಾವುದೋ ಒಂದು ಹೆಸರಿನಿಂದ ಕರೆಯಲೇ ಬೇಕು ಅಂತಾದರೆ ಅದನ್ನು "ಭೇಟಿ" ಎಂದು ಕರೆಯೋಣ, ಅದು ನನ್ನ ಮಟ್ಟಿಗೆ ಪ್ರವಾಸವಂತೂ ಖಂಡಿತ ಅಲ್ಲ. ಇಲ್ಲಿಂದ ಅಲ್ಲಿಗೆ ಹೋಗಿ ಮತ್ತಿನ್ಯಾವುದಾದರೂ ಯಾತ್ರಾ ಸ್ಥಳಗಳಿಗೋ ಪ್ರೇಕ್ಷಣೀಯ ಸ್ಥಾಣಗಳಿಗೋ ಹೋಗಿ ಬಂದರೆ ಅದಾದರೂ ಪ್ರವಾಸವಾದೀತು, ನಮ್ಮದೇನಿದ್ದರೂ ಏರ್‌ಪೋರ್ಟಿನಿಂದ ಮನೆ, ಮನೆಯಿಂದ ಏರ್‌ಪೋರ್ಟ್ ಅನ್ನಬಹುದು ಅಷ್ಟೇ.

’ಸಾಕಪ್ಪಾ ಸಾಕು ಆ ಗುಂಡಿ ರಸ್ತೆಗಳು...’, ’ಸಾಕಪ್ಪಾ ಆ ಟ್ರಾಫಿಕ್ ಜ್ಯಾಮು...’ ಎಂದು ಮೂಗೆಳೆಯುವವರಿಗಂತೂ ನನ್ನ ಹತ್ತಿರ ಸಿದ್ಧ ಉತ್ತರವಿದೆ. ’ಮತ್ತಿನೇನನ್ನು ತಾನೇ ನಿರೀಕ್ಷಿಸಬಲ್ಲಿರಿ? ಬದಲಾದವರು ನೀವು ಹಾಗೂ ನಿಮ್ಮ ನಿಲುವು, ನೀವು ಬದಲಾದ ಮಾತ್ರಕ್ಕೆ ಪ್ರಪಂಚವೇ ಬದಲಾಗಬೇಕೇನು? ನೀವು ಅಮೇರಿಕದವರು ಸ್ವಿಟ್ಜರ್‌ಲೆಂಡ್ ಹೋಗಿ ಬಂದಾಕ್ಷಣ ಅಲ್ಲಿಯವರ ಹಾಗೆ ಸಮಯ ಪಾಲಿಸುತ್ತೀರೇನು?’ ನಮ್ಮ ದೇಶ ಬಡ ದೇಶವಾಗಿತ್ತು, ಈಗ ನಿಧಾನವಾಗಿ ಅಭಿವೃದ್ಧಿಯ ಹಂತಕ್ಕೆ ಕಾಲಿಡುತ್ತಿದೆ. ನಾವು ಹಾಗೂ ನಮ್ಮ ತತ್ವಗಳು ಪ್ರಜಾಪ್ರಭುತ್ವವನ್ನು ಪ್ರತಿಬಿಂಬಿಸುವವು, ರಾತ್ರೋ ರಾತ್ರಿ ಕಾನೂನನ್ನು ಸೃಷ್ಟಿಸಿ ಅದನ್ನು ಎಲ್ಲರು ನಾಳೆಯಿಂದ ಪಾಲಿಸಿ ಎನ್ನಲು ನಮ್ಮದು ಸರ್ವಾಧಿಕಾರಿ ಸರ್ಕಾರವಂತೂ ಅಲ್ಲ. ರಸ್ತೆಯ ಮೇಲೆ ಉದ್ದಾನುದ್ದಕೂ ಲೇನ್‌ಗಳನ್ನು ಎಳೆದುಕೊಂಡ ಮಾತ್ರಕ್ಕೆ ಅದನ್ನು ಎಲ್ಲರೂ ಪಾಲಿಸಬೇಕು ಎನ್ನುವ ನಿಯಮವನ್ನು ಎಲ್ಲರೂ ಅನುಕರಿಸಿದ್ದೇ ಆದರೆ ಟ್ರಾಫಿಕ್ ಲೈಟ್‌ನಿಂದ ಹಿಡಿದು ರಸ್ತೆಯ ಉದ್ದಾನುದ್ದಕ್ಕೂ, ಎಲ್ಲಿ ನೋಡಿದರಲ್ಲಿ ಟ್ರಾಫಿಕ್ ಜ್ಯಾಮ್ ಆಗುವುದರಲ್ಲಿ ಸಂದೇಹವೇ ಇಲ್ಲ. ಅವೇ ದೇಶ, ಅವೇ ರಸ್ತೆಗಳು ಆದರೆ ದಿನೇ-ದಿನೇ ಹಿಗ್ಗುತ್ತಿರುವ ಜನಸಂಖ್ಯೆ ಮತ್ತು ಅದರ ಡಿಮ್ಯಾಂಡುಗಳಿಗೆ ಸ್ಪಂದಿಸೋದಕ್ಕೆ ಆ ಹಳೆಯ ಇನ್‌ಪ್ರಾಸ್ಟ್ರಕ್ಚರ್ರಿನಿಂದ ಹೇಗಾದರೂ ಸಾಧ್ಯವಿದೆ ಹೇಳಿ?

***

ಅಮೇರಿಕದಿಂದ ಭಾರತಕ್ಕೆ ಬಂದು ಲ್ಯಾಂಡ್ ಆಗುವ ವಿಮಾನಗಳು ಹಾಗೂ ಭಾರತವನ್ನು ಬಿಟ್ಟು ಹೊರಡುವ ವಿಮಾನಗಳು ಮಧ್ಯರಾತ್ರಿಯ ನಂತರ ಹಾಗೂ ಬ್ರಾಹ್ಮೀ ಮಹೂರ್ತಕ್ಕೆ ಮುಂಚೆ ಏಕೆ ಬಂದು ಹೋಗುತ್ತವೆ ಎಂದು ಯೋಚಿಸಿದ್ದಕ್ಕೆ ಈ ಸಾರಿ ಉತ್ತರ ಸಿಕ್ಕಿತು. ನಮ್ಮಂತೆ ದೇಶವನ್ನು ಅದೆಷ್ಟೋ ವರ್ಷಗಳ ನಂತರ ಅರಸಿ ಬಂದವರಿಗೆ ಏಕ್‌ದಂ ಭ್ರಮನಿರಸನವಾಗಬಾರದಲ್ಲ ಅದಕ್ಕೆ. ಉದಾಹರಣೆಗೆ ಚಿಕಾಗೋದಿಂದ ಹೊರಟ ವಿಮಾನ ಸರಿ ಬೆಳಗ್ಗೆ ಒಂಭತ್ತು ಘಂಟೆಗೆ ಬೆಂಗಳೂರನ್ನು ತಲುಪಿತು ಎಂದುಕೊಳ್ಳಿ, ಅಲ್ಲಿನ ಪೀಕ್ ಅವರ್ ನಲ್ಲಿ ನೀವು ಆ ದಿನ ಮನೆ ಸೇರುವಾಗ ಅದೆಷ್ಟು ಹೊತ್ತಾಗುತ್ತೋ ಯಾರು ಬಲ್ಲರು? ನಿಮಗೆ ಎದಿರಾಗಿ ದಿಢೀರನೆ ಉದ್ಭವಿಸೋ ಮುಷ್ಕರ ಮೆರವಣಿಗೆಗಳಿರಬಹುದು, ಯಾರೋ ಸತ್ತರು ಎಂದು ತೂರಿ ಬರುವ ಕಲ್ಲುಗಳಿಗೆ ಆಹುತಿಯಾಗುವ ಗಾಜಿನ ತುಣುಕುಗಳಿರಬಹುದು ಅಥವಾ ಸಾಮಾನ್ಯ ಟ್ರಾಫಿಕ್ಕ್ ಜಾಮೇ ನಿಮ್ಮನ್ನು ಮೊದಲ ದಿನವೇ ಹೈರಾಣಾಗಿಸಿಬಿಡಬಹುದು. ಇಲ್ಲಿ ಬರುವಾಗ ಅದೇನೇನೋ ಕನಸುಗಳನ್ನು ಕಟ್ಟಿಕೊಂಡ ನಮಗೆ ಇಲ್ಲಿ ಬರುವ ಅವಕಾಶ ಅವಸ್ಥೆಗಳೆಲ್ಲ ಒಂದು ರೀತಿಯ ಓಪನ್ ಎಂಡೆಡ್ ಪ್ರಶ್ನೆಗಳ ಥರ, ಅದೇ ಇಲ್ಲಿಂದ ಅಲ್ಲಿಗೆ ಹೋದಾಗ ನಮ್ಮ ನಿರೀಕ್ಷೆ ಮತ್ತು ನಮಗಾಗೂ ನಿರಾಶೆಗಳ ಮೂಲವೇ ಬೇರೆ.

ಪಲಾಯನವಾದ ಅನ್ನೋದು ನಮ್ಮ ಹೆಸರುಗಳಿಗೆ ನಮ್ಮ ಪ್ರತಿಭೆಗೆ ಮಾತ್ರ ಅಂಟಿದ್ದಲ್ಲ, ನಾವು ನಮ್ಮ ಮ್ಯಾನೇಜ್‌ಮೆಂಟಿನ ಸ್ಥರಗಳಲ್ಲಿ ನಮ್ಮ ಅನುಭವಗಳನ್ನು ವಿಸ್ತರಿಸಿಕೊಂಡ ಹಾಗೆಲ್ಲ ದುತ್ತನೆ ಎದುರಾಗುವ ಸಮಸ್ಯೆಗಳಿಗೆ ಥಟ್ಟನೆ ಉತ್ತರ ಹೇಳುವಲ್ಲಿ ಸೋತು ಹೋಗುತ್ತೇವೇನೋ ಅನ್ನಿಸುತ್ತದೆ. ಎಂಥ ವಾಜ್ಞಿ ರಾಜಕಾರಣಿ ಅಧಿಕಾರಕ್ಕೆ ಬಂದರೂ ಮುಂದೆ ಪಬ್ಲಿಕ್ ಸ್ಟೇಟ್‌ಮೆಂಟ್ ಕೊಡೋವಾಗ ಪದಗಳ ನಂತರ ಪದಗಳನ್ನು ಹುಷಾರಾಗಿ ಪೋಣಿಸಿ ವಾಕ್ಯಗಳನ್ನು ರಚಿಸುವಂತೆ ಭಾರತದಲ್ಲಿ ಎದಿರಾಗೋ ಸಮಸ್ಯೆಗಳಿಗೆ ಅಮೇರಿಕದಿಂದ ಹೋದೋರು ಸ್ಪಂದಿಸೋದು ಎನ್ನುವುದು ನನ್ನ ಅಭಿಪ್ರಾಯ. ನಮ್ಮ ಓರಗೆಯವರ ಬ್ಯಾಂಕ್‌ ಬ್ಯಾಲೆನ್ಸಿಗಿಂತ ನಮ್ಮದು ತುಸು ಹೆಚ್ಚಿರಬಹುದು ಎನ್ನುವಲ್ಲಿ ನಾವೇ ಮುಂದೇ ಹೊರತು ಅಲ್ಲಿಯ ಆಗು ಹೋಗುಗಳಿಗೆ ನಿಜವಾಗಿ ಸ್ಪಂದಿಸೋದಕ್ಕೆ ನಮ್ಮಿಂದ ಸಾಧ್ಯವೇ? ನಿಮ್ಮ ಮನೆಯಲ್ಲಿ ಯಾರಿಗಾದರೂ ಹುಷಾರಿಲ್ಲ ಎಂದು ಸ್ಥಳೀಯ ಸರ್ಕಾರಿ ದವಾಖಾನೆಗೆ ಕರೆದುಕೊಂಡು ಹೋಗಿ ಅಥವಾ ಕೈಲಾದರೆ ಪ್ರೈವೇಟ್ ನರ್ಸಿಂಗ್ ಹೋಮ್‌ಗಳಲ್ಲಿ ಟ್ರೀಟ್‌ಮೆಂಟ್ ಕೊಡಿಸಿ ನೋಡಿ, ಅಲ್ಲಿಯ ಚಲನವಲನ (ಲಾಜಿಸ್ಟಿಕ್ಸ್)ಗಳಿಗೆ ನಮ್ಮಿಂದ ಹೊಂದಿಕೊಳ್ಳೋದಕ್ಕೆ ಇನ್ನೊಂದು ದಶಕವೇ ಬೇಕು ಎನ್ನಿಸುತ್ತೆ ಕೆಲವೊಮ್ಮೆ. ಇಲ್ಲಿಯ ವೇಷವನ್ನು ಕಳಚಿ ಕ್ರಮೇಣ ಅಲ್ಲಿಯವರಾದಂತೆ ನಟಿಸಿದರೂ ನಮ್ಮೊಳಗಿನ ಭಿನ್ನ ಮನ ಸದಾ ಬದಲಾವಣೆಯನ್ನು ನಿರೀಕ್ಷಿಸುತ್ತದೆ, ಆದರೆ ಅಲ್ಲಿಯ ವ್ಯವಸ್ಥೆ ಮನೋ ವೇಗಕ್ಕೆ (ಅಥವಾ ರೋಗಕ್ಕೆ) ಸ್ಪಂದಿಸೋದಾದರೂ ಹೇಗೆ ಸಾಧ್ಯ?

ನಮ್ಮ ಕೈಯಲ್ಲಿ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ - ಒಂದು ಹೊತ್ತು ಉಂಡರೆ ಮತ್ತೊಂದು ಹೊತ್ತು ಊಟದ ಬಗ್ಗೆ ಕೊರಗುವ ನಾಗರಿಕತೆ ಇರುವಾಗ, ನಮ್ಮ ಸಂಪನ್ಮೂಲ ಸ್ತೀಮಿತವಾಗುತ್ತದೆ. ನಾವು ನಿರೀಕ್ಷಿಸುವ ಬದಲಾವಣೆಗಳು ಲಾರ್ಜ್‌ಸ್ಕೇಲ್‌ನಲ್ಲಿ ಇಂಪ್ಲಿಮೆಂಟ್ ಮಾಡಲಾಗದ ಪುಸ್ತಕದ ಬದನೆಕಾಯಿಯಾಗುತ್ತದೆ. ದಿನೇ-ದಿನೇ ಉಳ್ಳವರ-ಇಲ್ಲದವರ ನಡುವಿನ ಕಂದಕ ದೊಡ್ಡದಾಗುತ್ತಾ ಹೋಗುತ್ತಿರುವಾಗ ನಮ್ಮ ಧನಾತ್ಮಕ ಆಲೋಚನೆಗಳು ಮುರಿದು ಹೋದ ಚಿಕ್ಕ ಮರದ ತುಂಡನ್ನು ಅಂಟಿಸೋ ಗೋಂದಾಗುತ್ತದೆಯೇ ಹೊರತು ಅದು ದೊಡ್ಡ ಪ್ರಮಾಣದ ಬಂಧನವಾಗೋದಿಲ್ಲ. ನಾವು ಎಲ್ಲವನ್ನು ಮಾಡಲಾಗದಿದ್ದರೂ ನಮ್ಮ ಮನಸ್ಸಿನಲ್ಲಿರುವ ಕ್ವಾಲಿಟಿಗೆ ತಕ್ಕಂತೆ ಎಲ್ಲರಿಂದ ಕೆಲಸವನ್ನು ನಿರೀಕ್ಷಿಸುವುದು ಇನ್ನೂ ಕಷ್ಟದ ಮಾತೇ. ಬೆಂಗಳೂರಿನಲ್ಲಿ ಮನೆ ಕೆಲಸದವರ ಜೊತೆ ಏಗಿ ಸರಿಯಾಗಿ ಪಾತ್ರೆ ತೊಳೆಸಿಕೊಂಡು ಬಟ್ಟೆ ಒಗೆಸಿಕೊಂಡು ನೆಲವನ್ನು ಸ್ವಚ್ಛವಾಗಿಸಿಕೊಳ್ಳುವುದಕ್ಕೆ ಪೀಪಲ್ ಮ್ಯಾನೇಜ್‌ಮೆಂಟಿನಲ್ಲಿ ಹೊಸ ಡಿಗ್ರಿ ಬೇಕಾಗುತ್ತದೆ. ಆಳು ಮಾಡಿದ್ದು ಹಾಳು...ಅಂತಹ ಹಾಳು ಕೆಲಸದ ನಡುವೆ ನಮ್ಮ ಬದುಕನ್ನು ಸುಗಮವಾಗಿ ಸಾಗಿಸಿಕೊಂಡು ಹೋಗುವಾಗ ಮೈಕ್ರೋ-ಮಿನಿ ಮ್ಯಾನೇಜುಮೆಂಟುಗಳಿಗೆ ಜೋತು ಬೀಳಬೇಕಾಗುತ್ತದೆ.

***

ಭಾರತಕ್ಕೆ ಹೋಗಿ ಬರೋ ಅನುಭವ ಪ್ರವಾಸವಲ್ಲ, ಅದು ಒಂದು ದರ್ಶನ, ಒಂದು ವಾತಾವರಣದಲ್ಲಿ ಪಕ್ವಗೊಂಡ ಮನಸ್ಸು ಮತ್ತೊಂದು ವಾತಾವರಣದಲ್ಲಿ ಬೆರೆಯುವ ಯೋಗ, ತಾಯ ಮಡಿಲನ್ನು ಸೇರಿ ಹಾಯಾಗಿ ಕಣ್ಮುಚ್ಚಿ ಮಲಗುವ ಮಗುವಿಗೆ ದೊರೆತ ಒಂದು ಅವಕಾಶ. ಸಮಸ್ಯೆಗಳು ಎಲ್ಲಿಲ್ಲ, ಹಾಗಿರುವಾಗ ನಾವು ಹೋದಲೆಲ್ಲ ಸುತ್ತಲಿನ ಕೊಳೆಯನ್ನು ಮಾತ್ರ ನೋಡಿಕೊಂಡು "ಶಿಟ್" ಎಂದು ಮೂಗು ಸಿಂಡರಿಸಿದಾಕ್ಷಣ ಅಲ್ಲಿಯದೇನೂ ಬದಲಾಗೋದಿಲ್ಲ. ಬದಲಾವಣೆ ಎಲ್ಲ ಕಡೆಗಿದೆ, ಆದರೆ ಕಡಿಮೆ ಸಮಯದಲ್ಲಿ ಹೆಚ್ಚು ಬದಲಾವಣೆಗೊಳಪಟ್ಟ ನಮ್ಮ ಮನಸ್ಸು ಎಲ್ಲ ಕಡೆ ಅದನ್ನೇ ನಿರೀಕ್ಷಿಸಿದರೆ ಅದರ ಔಚಿತ್ಯವನ್ನು ಪ್ರಶ್ನಿಸಬೇಕಾಗುತ್ತದೆ. ನಮ್ಮ ಆಫೀಸಿನಿಂದ ಬಿಸಿನೆಸ್ ಗೋಸ್ಕರ ಹೋಗುವವರಿಗೆ ನಾನು ಹೇಳೋದು ಇಷ್ಟೇ: ’ಅಲ್ಲಿ ಬೇಕಾದಷ್ಟು ಸಂಸ್ಕೃತಿಗಳಿವೆ, ಒಂದು ಬಿಲಿಯನ್ನ್‌ಗಿಂತಲೂ ಹೆಚ್ಚು ಜನರಿದ್ದಾರೆ, ದೊಡ್ಡ ಸಾಗರವನ್ನು ನೋಡೋ ಹಾಗೆ ನೋಡಿ, ಅದನ್ನು ಬಿಟ್ಟು ಆಗಾಗ್ಗೆ ಬರುವ ಅಲೆಗಳಿಗೆ ತಲೆಕೆಡಿಸಿಕೊಳ್ಳಬೇಡಿ!"

Thursday, January 07, 2010

ಲಘುವಾಗೆಲೆ ಅನಿವಾಸಿ ಮನ...

ನವೆಂಬರ್ ೧೩ ರಂದು ಬರೆದ ’ಗೆಲುವಾಗೆಲೆ ಅನಿವಾಸಿ ಮನ...’ಬರಹಕ್ಕೆ ಪೂರಕವಾಗಿ ಈ ಲೇಖನ. ನವೆಂಬರ್ ೧೩ ನಾವು ಭಾರತಕ್ಕೆ ವೆಕೇಷನ್ನ್ ಹೋಗೋದರ ಹಿಂದಿನ ದಿನ, ಹಲವಾರು ಕೆಲಸಗಳ ನಡುವೆಯೂ ನಾನು ಮೂರು ವರ್ಷಗಳಲ್ಲಿ ಮಿಸ್ ಮಾಡಿಕೊಂಡಿರೋ ಭಾರತ ಈಗ ಹೇಗಿರಬಹುದು, ಏನೇನೆಲ್ಲ ಬದಲಾವಣೆಗಳಾಗಿರಬಹುದು...ಎಂದು ಯೋಚಿಸಿಕೊಳ್ಳುತ್ತಲೇ ಇಲ್ಲಿ-ಅಲ್ಲಿಯ ತವಕಗಳ ಎರಡು ಚಿತ್ರಗಳನ್ನು ತರಾತುರಿಯಾಗಿ ಕಕ್ಕಿ ಕೊಂಡು ಆ ಲೇಖನವನ್ನು ಬರೆದು ಮುಗಿಸಿದ್ದಾಯಿತು. ಈಗ ಭಾರತದ ವೆಕೇಷನ್ನ್ ಮುಗಿಸಿ ಹಿಂತಿರುಗಿ ಬಂದ ಮೇಲೆ ಹಾಗೂ ಸುಧಾರಿಸಿಕೊಂಡ ಮೇಲೆ ನನ್ನ ಅನುಭವಗಳನ್ನು ಹೊರಹಾಕಿ ಮತ್ತೊಂದು ಲೇಖನವನ್ನು ಬರೆಯಬೇಕು ಎನ್ನುವ ಆಶಯದ ಫಲವೇ ಇದು.

ಈ ಬದುಕು-ಬವಣೆಗಳು ಅದೇನೇ ಕಷ್ಟವನ್ನು ತಂದು ಒಡ್ಡಲಿ, ಜಾಗತೀಕರಣದ ಪರಿಣಾಮಗಳು ಎಷ್ಟು ದೂರ ಬೇಕಾದರೂ ಪಸರಿಸಿಕೊಂಡಿರಲಿ ನಮ್ಮ ಊರು ನಮ್ಮ ದೇಶ ನಮ್ಮ ಮನೆ...ಇವೆಲ್ಲವೂ ಎಂದಿಗೂ ಅಪ್ಯಾಯಮಾನವೇ. ನನ್ನೊಳಗೆ ಹುದುಗಿರುವ ಫಾಸಿಟಿವ್ ಸ್ಪಿರಿಟ್ಸ್ ಈ ವಿಚಾರದಲ್ಲಿ ನೆಗೆಟಿವ್ ಎಂದೂ ಆಗಲು ಸಾಧ್ಯವಿಲ್ಲ!

***

ತೊಂಭತ್ತರ ಮಧ್ಯೆ ಹಾಗೂ ಕೊನೆಯಲ್ಲಿ ಪ್ರಪಂಚವನ್ನು ಅರಸುತ್ತಾ ಬಂದಂತಹ ನನ್ನಂಥ ಟೆಕ್ಕಿಗಳಿಗೆ (ಅಂದಿನ ಕಾಲದ ಹೆಸರು) ನಮ್ಮ ಅಗತ್ಯಗಳು ಬೇರೆಯಾಗಿದ್ದವು. ಜೇಬಿನಲ್ಲಿ ಮೂರು ಸಾವಿರ ಡಾಲರ್ ಇಟ್ಟುಕೊಂಡು ಬಂದು ನೆವರ್ಕ್ ಲಿಬರ್ಟಿ ಏರ್‌ಪೋರ್ಟಿನಲ್ಲಿ ಇಳಿದ ನನ್ನ ಹಾಗಿನವರಿಗೆ ಅವರ ದೃಷ್ಟಿಕೋನ ಬೇರೆಯಾಗಿತ್ತು. Y2K ಮುಗಿದು, ಮತ್ತೊಂದು ದಶಕವೂ ಕಳೆದು ಹೋಗಿ ಹತ್ತು ವರ್ಷಗಳಿಗಿಂತಲೂ ಹೆಚ್ಚು ಇಲ್ಲಿನ ಪೈಪೋಟಿಗೆ ಏಗಿ-ಬೇಗಿ ಹಾಗೂ ಇಲ್ಲಿನ ಸಂಪನ್ಮೂಲಗಳನ್ನುಂಡು ನಮ್ಮ ಬೆಳವಣಿಗೆ ಬೇರೆ ರೀತಿಯದ್ದೇ ಆಗಿದೆ. ನನ್ನ ಜೊತೆಯವರು, ವಾರಗೆಯವರು ಇಲ್ಲಿಗೆ ಬಂದು ಈಗಾಗಲೇ ಅಮೇರಿಕನ್ ಸಿಟಿಜನ್ನ್ ಪಟ್ಟಕಟ್ಟಿಕೊಂಡಿರಬಹುದಾದ ಸಮಯದಲ್ಲಿ ಸೇಫ್‌ನಲ್ಲಿರುವ ನನ್ನ ಭಾರತದ ಪಾಸ್‌ಪೋರ್ಟ್ ಯಾವತ್ತೋ ಒಮ್ಮೆ ಭಾರತಕ್ಕೆ ಹೋಗಿ ತಿಣುಕುವ ಆಸೆಯನ್ನು ಇನ್ನೂ ಜೀವಂತವಾಗಿಟ್ಟುಕೊಂಡಿದೆ ಎಂದೇ ಹೇಳಬೇಕು. ಸೋಜಿಗದ ವಿಷಯವೆಂದರೆ ನಾವು ಬದಲಾದಂತೆ ನಮ್ಮ ಹಳೆಯ ಪಾಸ್‌ಪೋರ್ಟಿನಲ್ಲಿರುವ ಚಿತ್ರವಾಗಲೀ ಮಾಹಿತಿಯಾಗಲೀ ಬದಲಾಗುವುದೇ ಇಲ್ಲ, ಅವು ಯಾವತ್ತಿದ್ದರೂ ’ನಾನೇ’ ಎನ್ನುವ ಚಿರಂತನ ಪ್ರತಿಮೆಯನ್ನು ಎತ್ತಿ ತೋರಿಸುವ ಮಾಧ್ಯಮ.

ಈ ಒಂದು ದಶಕದಲ್ಲಿ ಬೇಕಾದಷ್ಟಾಗಿದೆ: ನಮ್ಮ ಸ್ಪ್ರೆಡ್‌ಶೀಟು, ಗ್ರಾಫು, ನಂಬರುಗಳು ತಮ್ಮನ್ನು ತಾವು ನಮ್ಮ ಎದುರು ತೋರಿಸಿಕೊಂಡು ನಮ್ಮನ್ನು ಲೇವಡಿ ಮಾಡುವ ಪರಿಸ್ಥಿತಿಯೂ ಬಂದು ಹೋಗಿದೆ. ಈ ಒಂದು ದಶಕದಲ್ಲಿ ಮಾರ್ಕೆಟ್ಟಿನ ಮುಖ್ಯ ಮೂರು ಏಳು ಬೀಳುಗಳ ಕೃಪೆಯಿಂದಾಗಿ - ಡಾಟ್ ಕಾಮ್, ರಿಯಲ್ ಎಸ್ಟೇಟ್ ಹಾಗೂ ಕ್ರೆಡಿಟ್ ಕ್ರಂಚ್ - ನಮ್ಮ ದುಡಿಮೆಯ ಫಲ ಸ್ಟ್ರೆಸ್ಸಿಗೆ ಒಳಗಾಗಿದೆ, ನಮ್ಮ ಹೂಡಿಕೆಯ ಹಣ ಇನ್‌ಫ್ಲೇಷನ್ನಿನ ಎದುರು ತಲೆ ತಗ್ಗಿಸಿ ತನ್ನ ಮೌಲ್ಯವನ್ನು ಕಳೆದುಕೊಂಡಿದೆ. ಇವೆಲ್ಲದರ ಜೊತೆಗೆ ಸೆಪ್ಟೆಂಬರ್ ೧೧, ೨೦೦೧ ರ ಭಯೋತ್ಪಾದಕತನ ನನ್ನಂಥ ಅನಿವಾಸಿಗಳಿಗೆ ಸಾಕಷ್ಟು ಕಷ್ಟ ಸುಖದ ದರ್ಶನ ಮಾಡಿಸಿದೆ.

’ವಿಜಯ ಕರ್ನಾಟಕ’ದಂತಹ ಪತ್ರಿಕೆಗಳಲ್ಲಿ ಪ್ರಕಟವಾದ "Take it easy...ಟೆಕ್ಕಿ" ಲೇಖನಗಳು ನ್ಯೂಕ್ಲಿಯರ್ ಕುಟುಂಬಗಳ ಬವಣೆಯನ್ನು ಒಂದು ಹೆಜ್ಜೆ ಮುಂದುವರೆದು ರಸ್ತೆ ಮೇಲೆ ಬಿಸಾಡಿ ಮಾನ ಕಳೆದಿವೆ, ಆಧುನಿಕ ಕುಟುಂಬಗಳಲ್ಲಿನ ಇರಿಸು-ಮುರಿಸುಗಳು ಮನ-ಮನೆಯನ್ನು ಮುರಿಯುವ ಪ್ರಸಂಗಗಳನ್ನು ಲೇವಡಿ ಮಾಡಿವೆ. ಈ ನ್ಯೂಕ್ಲಿಯರ್ ಕುಟುಂಬಗಳ ಕ್ಲೀಷೆಗಳು ಮೈನ್‌ಸ್ಟ್ರೀಮ್ ಸಮಾಜಕ್ಕೆ ಗೊತ್ತೇ ಆಗದೇ ಒಂದು ದಶಕ ಉರುಳಿ ಹೋಗಿದ್ದು ವಿಪರ್ಯಾಸ. ’ನಮ್ಮ ಮಗ ಕಾಲ್‌ಸೆಂಟರ್‌ನಲ್ಲಿ ದುಡಿಯುತ್ತಾನೆ...’ ಎನ್ನುವುದರ ಹಿಂದೆ ಬಳುವಳಿಯಾಗಿ ಬರುವ ಫಲಾಫಲಗಳನ್ನು ದೂರದ ತಂದೆ-ತಾಯಿಯರು ಯಾಕೆ ಗುರುತಿಸುವುದರಲ್ಲಿ ಸೊರಗಿ ಹೋದರೋ? ನನ್ನ ಹಾಗೆ ಹೆಚ್ಚಿನವರು ಇಲ್ಲಿ ಬಂದೇ ಕುಟುಂಬವನ್ನು ಆರಂಭಿಸಿದ್ದು ನಿಜವಾದರೆ ನಮಗೆಲ್ಲ ಸಹಬಾಳ್ವೆ ಎನ್ನೋದರ ಪರಿಕಲ್ಪನೆಯೇ ಇಲ್ಲ ಎನ್ನಬೇಕು. ನಾವು ಪರಿವಾರದವರೊಟ್ಟಿಗೆ ಮದುವೆ-ಮುಂಜಿಗಳಲ್ಲಿ ಭಾಗವಹಿಸೋದಿಲ್ಲ, ವಾರದ ದಿನಗಳನ್ನು ಒಂದು ರೀತಿ, ವಾರಾಂತ್ಯವನ್ನು ಮತ್ತೊಂದು ರೀತಿಯಲ್ಲಿ ಉರುಳಿಸಿ ವಾರ-ವರ್ಷಗಳನ್ನು ಕಳೆಯುವ ನಮಗೆ ಅವಿಭಾಜ್ಯ ಕುಟುಂಬಗಳ ಕಷ್ಟಗಳು ಹತ್ತಿರ ಸಹ ಸುಳಿಯೋದಿಲ್ಲ. ಸಹೋದರ-ಸಹೋದರಿ, ನಾದಿನಿ, ಮೈದುನ, ಅತ್ತೆ-ಮಾವ, ತಂದೆ-ತಾಯಿ, ದೊಡ್ಡಪ್ಪ-ಚಿಕ್ಕಪ್ಪ, ದೊಡ್ಡಮ್ಮ-ಚಿಕ್ಕಮ್ಮಗಳ "interference" ನಮ್ಮ ಕುಟುಂಬಗಳಿಗಿರೋದಿಲ್ಲ. ನಮ್ಮ ಮಕ್ಕಳ ಡೈಪರ್ರ್ ತೆಗೆದು ತೊಳೆಯೋದು, ಅವರ ಯೋಗ-ಕ್ಷೇಮ ನೋಡಿಕೊಳ್ಳೋದು ನಮ್ಮ ದಿನನಿತ್ಯದ ಸಾಧನೆಗಳಲ್ಲೊಂದು. ನಾವು ನಮ್ಮ ಖರ್ಚನ್ನು ಮೀರಿ ಕೂಡಿಸೋ ಹಣ ಕೆಲವರಿಗೆ ಒಂದು ರೀತಿಯಲ್ಲಿ ನಾಯಿ ಮೊಲೆಯ ಹಾಲು - ಅದು ಬಹಳಷ್ಟು ಸಾರಿ ನೆರೆಹೊರೆಯ ಕಷ್ಟಗಳಿಗೆ ಸ್ಪಂದಿಸಿರಲಾರದು, ಹಾಗೆ ಕೂಡಿಟ್ಟ ಹಣ ಭದ್ರತೆಯಿದ್ದರೂ ಅದರ ಜೊತೆ ಅಸಹಾಯಕತೆಯನ್ನೂ ಸೇರಿಸಿಕೊಂಡಿರುತ್ತದೆ. ಹಾಗೆ ಸೇರಿಕೊಂಡ ಡಾಲರ್ ಹಣ ಇಲ್ಲಿಯ ಮಿಡ್ಲ್‌ಕ್ಲಾಸ್ ಮಟ್ಟದ್ದಿದ್ದರೂ ಅದು ಭಾರತದ ರೂಪಾಯಿಗೆ ಬದಲಾದಾಗ ಒಂದು ಹೊಸ ಅರ್ಥ ಪಡೆದುಕೊಳ್ಳುತ್ತದೆಯೇ ಹೊರತು ಕ್ಲಾಸ್ ವಿಚಾರದಲ್ಲಿ ಹೆಚ್ಚು ಬದಲಾವಣೆ ಆಗೋದಿಲ್ಲ.

***

ಯಾಕೆ ಭಾರತಕ್ಕೆ ಹಿಂತಿರುಗಿ ಹೋಗಬೇಕು? ಎನ್ನುವ ಆಲೋಚನೆಗಳು ಒಂದು ದಶಕದ ನಂತರ ಆಗಾಗ್ಗೆ ನಾಯಿಕೊಡೆಗಳಂತೆ ತಲೆ ಎತ್ತುವುದು ಸಾಮಾನ್ಯವಾಗುತ್ತದೆ. ಮೊದಲೆಲ್ಲ ಯಾವತ್ತು ಹೋದೇವೋ ಎನ್ನುವ ಆಲೋಚನೆಯೇ ರೋಮಾಂಚನವನ್ನು ಮೂಡಿಸುವಂತಹ ವಿಚಾರಗಳು ಈಗ ಹತ್ತಿರ ಸುಳಿಯೋದಿಲ್ಲ. ಅದರ ಬದಲಿಗೆ ಪ್ರಾಯೋಗಿಕವಾಗಿ ಯೋಚಿಸುವ ಮನಸ್ಸು ಎಲ್ಲರಿಗಿಂತ ಮುಂದಾಗಿ ಭಾವನೆಗಳು ಹಾಗೂ ಸ್ಪಂದನಗಳೆಂಬ ಮೊದಲಾದ ಮನಸ್ಸಿನ ಲಘು ವಿಹಾರಗಳು ಕನಸಿಗೆ ಹತ್ತಿರವಾಗತೊಡಗುತ್ತವೆ. ಮೊದಲು ಎರಡು ಭುಜಗಳ ಜೊತೆಗೆ ಎರಡು ಸೂಟ್‌ಕೇಸ್ ಇಟ್ಟುಕೊಂಡು ಬಂದವರಿಗೆ ಸಂಸಾರದ ಹಲವಾರು ಇತರ ಭುಜಗಳ ಮತ್ತಿನ್ನೊಂದಿಷ್ಟು ಬ್ಯಾಗೇಜುಗಳು ಬೆನ್ನೇರುತ್ತವೆ. ಇಲ್ಲಿ ಇದ್ದೂ ಇಲ್ಲದವರ ಹಾಗೆ ಬದುಕಿ ಸುಸ್ತಾಗಿ ಹೋದ ಪರಿಣಾಮಕ್ಕೆ ನಮ್ಮ ಇಮ್ಮೂವಬೆಲ್ಲ್ ಅಸ್ಸೆಟ್ಟಿನ ಲಿಸ್ಟಿಗೆ ಇಲ್ಲಿಯ "ಮನೆ"ಯೂ ಸೇರಿಕೊಳ್ಳುತ್ತದೆ.

ಯಾಕೆ ಹೋಗಬೇಕು ಅನ್ನೋ ಪ್ರಶ್ನೆಗೆ ಒಂದೇ ಒಂದು ಬ್ರಹ್ಮಾಸ್ತ್ರದಂತಹ ಉತ್ತರವನ್ನು ನೀಡಬಹುದು - ಅದು ನಮ್ಮೂರಿನ ಹವಾಮಾನ. ಅಲ್ಲಿನವರಿಗೆ ಅದರ ಬೆಲೆ ಖಂಡಿತ ಗೊತ್ತಿಲ್ಲ ಬಿಡಿ. ನಾನಂತೂ ಡಿಸೆಂಬರಿನ ಅಲ್ಲಿನ ಛಳಿಗಾಲದ ರಾತ್ರಿ ಹಾಗೂ ಹಗಲು ಯಾವುದೇ ಹೀಟರ್ ಅಥವಾ ಏರ್‌ಕಂಡೀಷನರ್ ಇಲ್ಲದೇ ಕಳೆಯಬಹುದಾದಂಥ ಪರಿಸ್ಥಿತಿ ಯಾವತ್ತಿದ್ದರೂ ಮನಸ್ಸಿಗೆ ಮುದ ನೀಡುವ ಅನುಭವವೇ ಹೌದು. ಹವಾಮಾನದ ಜೊತೆಗೆ ನಮ್ಮವರು, ತಮ್ಮವರು, ನಮ್ಮಂತೇ ಇರುವವರು, ನಮ್ಮ ಜೊತೆ ಒಡನಾಡುವವರು, ನಮ್ಮ ಸಂಸ್ಕೃತಿ, ಸಂಸ್ಕಾರಗಳ ಹಿನ್ನೆಲೆ ಇರುವವರು - ಮೊದಲಾಗಿ ಇಡೀ ನಾಡನ್ನೇ ’ಯಾಕೆ ಹಿಂತಿರುಗಿ ಹೋಗಬೇಕು?’ ಎನ್ನುವ ಪ್ರಶ್ನೆಗೆ ಪಣವಾಗಿ ಒಡ್ಡಬಹುದು. ಆದರೆ ’ನಮ್ಮೂರು-ನಮ್ಮ ಜನ’ ಎನ್ನುವುದು ಪ್ಲಸ್ ಪಾಯಿಂಟ್ ಹೇಗೋ ಹಾಗೇ ಮೈನಸ್ಸ್ ಕೂಡ ಆಗಬಹುದು ಎನ್ನುವುದು ವಿಪರ್ಯಾಸವಲ್ಲದೇ ಮತ್ತಿನ್ನೇನು!

ಒಂದು ದಶಕಕ್ಕಿಂತ ಹೆಚ್ಚು ನ್ಯೂಕ್ಲಿಯರ್ ಫ್ಯಾಮಿಲಿಯಾಗಿ ಬದುಕಿಕೊಂಡಿದ್ದವರಿಗೆ (ಅಥವಾ ಅದನ್ನೇ ಬದುಕು ಎಂದು ನಂಬಿಕೊಂಡಿದ್ದವರಿಗೆ) ಧಿಡೀರನೇ ಮನೆಯ ಬಾಗಿಲನ್ನು ಬಡಿದು ಬರುವ ಅಥವಾ ಹಾಗೇ ಒಳನುಗ್ಗುವ ಬಂಧು-ಬಳಗದವರು ಅನಾಗರಿಕರಂತೆ ಕಂಡು ಬರಬಹುದು. ಅಥವಾ ಮದುವೆ-ಮುಂಜಿಗಳಲ್ಲಿ ನಾವು ಡಾಲರ್ ಮಹಾತ್ಮೆಯನ್ನು ಬಲ್ಲವರಾದರೂ ನಮ್ಮ ಎದುರೇ ಗುಲಗಂಜಿ ಬಂಗಾರಕ್ಕೆ ಕಿತ್ತು ತಿನ್ನುವ ಜಗಳವಾಗಬಹುದು. ’ನಾನು ಸತ್ತರೂ ನಿಮ್ಮ ಮನೆಯಲ್ಲಿ ನೀರು ಕುಡಿಯಲ್ಲ...’ ಎನ್ನುವ ವರಸೆಯೂ; ’ನೀನು ಯಾರ ಮನೆಗೆ ಹೋದ್ರೂ ಅವರ ಮನೆಗೆ ಮಾತ್ರ ಹೋಗಬೇಡ...’ ಎನ್ನುವ ಹಕ್ಕೀಕತ್ತೂ...ಹೀಗೆ ಅನೇಕಾನೇಕ ಅಗೋಚರ ಅವ್ಯಕ್ತ ಹಾಗೂ ಅಮೂರ್ತ ಮಾನವೀಯ ಸಂಬಂಧಗಳ ದರ್ಶನದ ಓವರ್‌ಲೋಡ್ ಆಗಿಬಿಡಬಹುದು. ಇವೆಲ್ಲಕ್ಕಿಂತ ಮುಖ್ಯವಾಗಿ ನಮ್ಮ ಪರಿಸರ-ಪ್ರೈವಸಿ ಎಂಬುದರ ಬುಡವನ್ನೇ ಅಲುಗಾಡಿಸುವ ಘಟನೆಗಳು ನಡೆಯಬಹುದು. ಅಥವಾ ’ಬೆಂಡೇಕಾಯ್, ಸೋರೇಕಾಯ್...’ ಎಂದು ಬೀದಿಯಲ್ಲಿ ತರಕಾರಿ ಮಾರುವವರ ತಾರಕ ಸ್ವರದಿಂದ ಹಿಡಿದು ವಾಹನಗಳ ಹಾರ್ನ್‌ನಿಂದ ಕಮ್ಮ್ಯೂನಿಕೇಟ್ ಮಾಡುವ ಅಲ್ಲಿನ ವಾತಾವರಣ ಶಬ್ದಮಾಲಿನ್ಯವಾಗಿ ಕಾಡಬಹುದು. ಇವೆಲ್ಲದರ ಜೊತೆಯಲ್ಲಿ ಓವರ್‌ಲೋಡ್ ಆಗಿ ಓಡುವ ವಾಹನಗಳಿಂದ ಹಿಡಿದು ಲಂಗು-ಲಗಾಮಿಲ್ಲದ ಫ್ಯಾಕ್ಟರಿಗಳ ಹೊಗೆ ನಮಗೆ ಉಸಿರುಕಟ್ಟಿಸಬಹುದು. ಭಾರತದಲ್ಲಿ ಜನಸಂಖ್ಯೆ ಹೆಚ್ಚು, ಈ ಹೆಚ್ಚಿನ ಜನಸಂಖ್ಯೆ ಯಾವುದೇ ಒಂದು ಸಮಸ್ಯೆಗೂ ಅದರದ್ದೇ ಆದ ಒಂದು ಹೊಸ ಆಯಾಮವನ್ನು ಸೃಷ್ಟಿಸಬಲ್ಲದು. ಹೀಗೇ...ಅನೇಕಾನೇಕ ನೆಗೆಟಿವ್ ಕಾಂಟೆಕ್ಸ್ಟ್‌ಗಳನ್ನು ತೋರಿಸಿದರೂ ಸಹ ’ವೆದರ್’ ಎನ್ನುವ ಒಂದೇ ಒಂದು ರಾಮಬಾಣಕ್ಕೆ ನಮ್ಮ ಊರನ್ನು ಕ್ಷಣಾರ್ಧದಲ್ಲಿ ಎಲ್ಲಕ್ಕಿಂತ ಹತ್ತಿರವಾಗಿಸಬಲ್ಲ ಶಕ್ತಿ ಇರುವುದಂತೂ ನಿಜ.

ಕೇವಲ ಹವಾಮಾನದ ಬಗ್ಗೆ ನ್ಯೂ ಜೆರ್ಸಿಯಲ್ಲಿ ಈ ಕಡುವಿಂಟರಿನ ನಡುವೆ ಬೆಚ್ಚಗೆ ಕುಳಿತು ಬರೆಯೋದು ದೊಡ್ಡ ವಿಷಯವಲ್ಲ. ಜೊತೆಗೆ ನಾರ್ಥ್ ಈಸ್ಟ್ ಬಿಟ್ಟು ಈ ದೇಶದ ದಕ್ಷಿಣ ದಿಕ್ಕಿಗೆ ಮುಖ ಮಾಡಿ ನೋಡಿದರೆ ಅಲ್ಲಿ ಇಷ್ಟು ಕೆಟ್ಟ ಹವಾಮಾನ ಇಲ್ಲ. ವಾರ್ಮರ್ ಕ್ಲೈಮೇಟ್ ಬೇಕು ಎಂದರೆ ಫ್ಲೋರಿಡಾಗೆ ಹೋದರೆ ಆಗದೇ? ಬಹಳ ಸುಲಭವಾದ ಪ್ರಶ್ನೆ ಆದರೆ ಅದಕ್ಕೆ ಉತ್ತರ ಅಷ್ಟೊಂದು ಸುಲಭವಲ್ಲ. ಪ್ರತೀವರ್ಷ ಹರಿಕೇನ್‌ಗಳು ಬಂದರೂ, ಸುಂಟರಗಾಳಿ ಸುಳಿದರೂ, ಏನೇ ಹಾನಿ ಆದರೂ ಎಷ್ಟೋ ಕುಟುಂಬಗಳು ಅದೇ ಪ್ರದೇಶದಲ್ಲಿ ನೆಲೆಸೋದಿಲ್ಲವೇನು? ವೆದರ್ ಒಂದೇ ಕಾರಣವೆಂದರೆ ಇವತ್ತು ವಿಂಡೀಸಿಟಿ ಶಿಕಾಗೋ ಈ ಛಳಿಗಾಲದಲ್ಲಿ ನಿರ್ಜನಪೀಡಿತವಾಗಬೇಕಿತ್ತು. ಪ್ರತೀವರ್ಷ ಆರು ಅಡಿಗಳಷ್ಟು ಸ್ನೋ ಬಂದ ಬಫೆಲೋ ನಗರದಿಂದ ಎಲ್ಲರೂ ಗುಳೇ ಹೊರಡಬೇಕಿತ್ತು...ಹಾಗಾಗೋದಿಲ್ಲ. ಕರ್ಮವನ್ನು ಅರಸಿಬಂದ ನಮಗೆ ಒಂದು ಒಳ್ಳೆಯ ಕೆಲಸ ಬೇಕು, ಅದರ ಜೊತೆಯಲ್ಲಿ ನಮಗೆ ಅನುಕೂಲಕರವಾದ ನೆರೆಹೊರೆ ಇರಬೇಕು, ಇತ್ಯಾದಿ ಇತ್ಯಾದಿ. ಇವೆಲ್ಲವನ್ನೂ ಮೀರಿ ಒಮ್ಮೆ ಯಾರಾದರೂ ಅಮೇರಿಕದ ನೆಲದಲ್ಲಿ ಬೇರು ಬಿಡಲು ಆರಂಭಿಸಿದರೆ ಅದನ್ನು ಕಿತ್ತು ಮತ್ತೆ ಇನ್ನೇಲ್ಲೋ ನೆಲೆಸುವುದು ಕಷ್ಟದ ಮಾತೆ ಸರಿ.

***

ನಾವು ಕೇವಲ ಕರ್ಮವನ್ನು ಅರಸಿಬಂದವರು, ಅದರ ಜೊತೆಯಲ್ಲಿ ಪ್ರಾಸ್ಪೆರಿಟಿ ಕೂಡ. ಮುಂದಿನ ಹತ್ತು ವರ್ಷಗಳಲ್ಲಿ ನಮ್ಮನ್ನು ನಾವು ರಿಡಿಫೈನ್ ಮಾಡಬೇಕಾದ ಅಗತ್ಯವಿದೆ. ನಿಧಾನವಾಗಿ ಮುವತ್ತರ ಮಡಿಲಿನಿಂದ ಜಾರಿ ನಲವತ್ತರ ಹರೆಯಕ್ಕೆ ನನ್ನಂಥವರು ಬೀಳತೊಡಗುತ್ತೇವೆ. ಒಂದು ಕಾಲದಲ್ಲಿ ’ರಿಟೈರ್‌ಮೆಂಟ್ ಎಂದರೆ ನಮಗಲ್ಲ...’ ಎನ್ನುವ ಆಟಿಟ್ಯೂಡ್ ಇಟ್ಟುಕೊಂಡವರಿಗೆ ಈಗ ಮಾರ್ಕೆಟ್ಟುಗಳ ಏಳುಬೀಳುಗಳಲ್ಲಿ ಬಳಲಿದ ಮೇಲೆ ರಿಟೈರ್‌ಮೆಂಟ್ ಎನ್ನುವುದು ಮರೀಚಿಕೆಯಾಗದಿರುವಂತೆ ನೋಡಿಕೊಳ್ಳುವುದು ಅಗತ್ಯವಾಗುತ್ತದೆ. ನಮ್ಮ ಮಕ್ಕಳು ಬೆಳೆದು ದೊಡ್ಡವರಾದಂತೆ ನಮ್ಮ ಮೂಲ ಸಂಸ್ಕಾರ-ಸಂಸ್ಕೃತಿಗಳು ದಿನನಿತ್ಯದ ಅಗತ್ಯಗಳಲ್ಲೊಂದಾಗುತ್ತವೆ. ಹಣವನ್ನು ಕೂಡಿಡುವುದರ ಜೊತೆಗೆ ’ಇನ್ನು ಮುಂದೆ ಹೇಗೋ?’ ಎನ್ನುವ ಹೆದರಿಕೆ ಸೇರಿಕೊಂಡು ಕನ್ಸರ್‌ವೆಟಿವ್ ಮೈಂಡ್ ಜಾಗೃತವಾಗುತ್ತದೆ.

ಇವೆಲ್ಲ ಚಿಂತೆಗಳು ಯಾವತ್ತಿದ್ದರೂ ಇರೋವೆ, ದಿನೇದಿನೇ ಮನದಾಳದಲ್ಲಿ ಖಾಲಿಯಾಗುವ ದೂರದ ಭಾರತದ ನೆನಪು ನಾಸ್ಟಾಲ್ಜಿಯಾ ಆಗಿ ಹೋಗುತ್ತಾ ಸ್ಥಳೀಯ ಅನಿವಾಸಿ ಕರ್ಮಗಳು ಬೆನ್ನಿಗೆ ಅಂಟಿಕೊಂಡು ಹೊರೆ ಯಾವತ್ತಿಗೂ ತೂಕವಾಗೋದು ಇದ್ದೇ ಇದೆ, ಇವೆಲ್ಲದರ ನಡುವೆಯೂ ನಗುವ ಅಗತ್ಯವಿದೆ, ಸಹಜವಾಗಿ ಬದುಕುವ ತುಡಿತವಿದೆ. ಹಗುರವಾಗಬೇಕು, ಲಘುವಾಗಬೇಕು ಎಂದುಕೊಳ್ಳುತ್ತಾ ಅನಿವಾಸಿ ಮನ ಅಲ್ಲಿಯ ಹಳೆಯ ಹಾಗೂ ಇಲ್ಲಿಯ ಹೊಸ ತಲೆಮಾರುಗಳಿಗೆ ಬೆಸೆಯುವ ಕೊಂಡಿಯಾಗುತ್ತದೆ. ತನ್ನೊಳಗಿನ ತುಮುಲ-ತುಡಿತಗಳನ್ನು ಹತೋಟಿಯಲ್ಲಿಟ್ಟುಕೊಂಡೇ ಮುಂದಿನ ಸಂತತಿ ತನ್ನಂತಾಗದು ಎಂದು ಮಮ್ಮಲ ಮರಗುತ್ತದೆ, ಇವೆಲ್ಲದರ ಜೊತೆಯಲ್ಲಿ ಅಲ್ಲಿಯವರಿಗೆ ನಾವು "ಆಗಿ" ಬರಲಿಲ್ಲ ಎನ್ನುವ ಚಿಂತೆ ಕೊರೆಯತೊಡಗುತ್ತದೆ.

Thursday, December 31, 2009

ಯಾರೂ ಇದರ ಬಗ್ಗೆ ಏಕೆ ಮಾತನಾಡಲ್ಲ?

ಸದ್ಯ, ಈ ದಿನ ಪ್ರಜಾವಾಣಿ ಮುಖಪುಟ ತೆರೆದು ನೋಡ್ತಾಗ ಮೃತ್ಯುದೇವತೆ ಕನ್ನಡದ ಅಭಿಮಾನಿಗಳ ಮೇಲೆ ಹ್ಯಾಟ್ರಿಕ್ ಹೊಡೆತವನ್ನೇನೂ ಕೊಟ್ಟಿರಲಿಲ್ಲ ಎಂದು ಸಮಾಧಾನ ಮೂಡಿತು.  ಕೊನೆಗೆ ಆದ ಘಟನೆಗಳ ಸಿಂಹಾವಲೋಕನ ಮಾಡಲಾಗಿ ಅಭಿಮಾನಿಗಳು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡುತ್ತಿದ್ದುದನ್ನು ನೋಡಿ ಅವರ ತರ್ಕವೇನು ಎಂದು ಯೋಚಿಸಿ ಮನ ಹೆಣಗಿತು, ಇವೆಲ್ಲದರ ನಡುವೆ ವಿಷ್ಣುವರ್ಧನ್ ಕೇವಲ ೫೯ ವರ್ಷಕ್ಕೆ ಸಾಯಲು ಕಾರಣವೇನಿರಬಹುದು ಎಂದು ಆಶ್ಚರ್ಯವೂ ಆಯಿತು.

 

ನಮ್ಮ ನಂಬಿಕೆಯ ಪ್ರಕಾರ ಆಯಸ್ಸು ತೀರಿದವರು ಎಲ್ಲಿದ್ದರೂ ಮೃತ್ಯುದೇವತೆಯನ್ನು ವಂಚಿಸಲಾಗದು ಎನ್ನುವುದನ್ನು ತಲೆಯ ಒಂದು ಬದಿಯಲ್ಲಿಟ್ಟುಕೊಂಡೇ ಮತ್ತೊಂದು ಕಡೆ ವೈದ್ಯಕೀಯ ವಿಜ್ಞಾನ ಇಷ್ಟೊಂದು ಬೆಳೆದಿರುವಾಗ ವಿಕ್ರಂ ಆಸ್ತ್ಪತ್ರೆಯ ವೈದ್ಯರು ರಾತ್ರಿ ಕಾಡಿದ ಎದೆನೋವಿನ ಮೂಲಕಾರಣವನ್ನು ಪತ್ತೆಹಚ್ಚುವಲ್ಲಿ ವಿಫಲರಾದರೇನೋ ಎಂದು ಬಲವಾದ ಸಂಶಯ ಕೂಡ ಬಂತು.  ಒಬ್ಬ ೫೯ ವರ್ಷದ ಮನುಷ್ಯ, ಯಾರೇ ಇರಲಿ, ಎದೆ ನೋವು ಎಂದು ರಾತ್ರಿ ಹತ್ತು ಘಂಟೆಗೆ ಆಸ್ಪತ್ರೆಗೆ ಬಂದರೆ ಅಂಥವರನ್ನು ಅಡ್ಮಿಟ್ ಮಾಡಿಕೊಳ್ಳದೇ ಹೇಗೆ ಮನೆಗೆ ಕಳುಹಿಸುತ್ತೀರಿ?  ಮಾಡಬೇಕಾದ ಸ್ಕ್ಯಾನಿಂಗ್ ಎಲ್ಲವನ್ನೂ ಮಾಡಿದ್ದೀರೋ? ಅಥವಾ ಪೇಷೆಂಟ್ ತಮ್ಮ ಸ್ವ-ಇಚ್ಚೆಯಿಂದ ಸೈನ್-ಔಟ್ ಮಾಡಿ ಮನೆಗೆ ಹೋದರೋ?

 

ಅಮೇರಿಕದಲ್ಲಿ ಕುಳಿತ ನಮಗೆ ಈ ರೀತಿಯ ಒಣತರ್ಕ ಮಾಡಲು ಸುಲಭ, ಇಲ್ಲಿನ ಲಿಟಿಗೇಶನ್ ವ್ಯವಸ್ಥೆ ಏನೇನೋ ಅನಾನುಕೂಲಗಳನ್ನು ಕಲ್ಪಿಸಿದ್ದರೂ ಈ ರೀತಿ ಯೋಚಿಸುವ ಮನಸ್ಥಿತಿಯನ್ನಾದರೂ ಹುಟ್ಟಿಸಿದೆ ಎನ್ನುವುದು ದೊಡ್ಡ ವಿಷಯ.  ಯಾರಾದರೂ ವಿಕ್ರಂ ಆಸ್ಪತ್ರೆಯ ಚಾರ್ಟ್ ತೆಗೆದು ನೋಡಿದ್ದಾರಾ? ಅಂದು ರಾತ್ರಿ ಕಾಲ್‌ನಲ್ಲಿ ಇದ್ದ ಆಸ್ಪತ್ರೆ ಸಿಬ್ಬಂದಿ ಯಾರು? ಅವರು ಏನೇನು ಪರೀಕ್ಷೆಗಳನ್ನು ಮಾಡಿದ್ದಾರೆ, ರೋಗಿಯನ್ನು ಹೊರಹೋಗಲು ಬಿಡುವ ಮುನ್ನ ಯಾವ ಯಾವ ಎಚ್ಚರಿಕೆಗಳನ್ನು ಕೊಟ್ಟಿದ್ದಾರೆ?  ಏನಾದರೂ ಔಷಧಿ-ಮದ್ದನ್ನು ಕೊಟ್ಟಿದ್ದಾರೋ ಅಥವಾ ಮರುದಿನ ಮತ್ತೆ ಬರಲು ತಿಳಿಸಿದ್ದಾರೋ? ವಿಕ್ರಂ ಆಸ್ಪತ್ರೆ ಚಿಕ್ಕದ್ದಿದ್ದು ಅಲ್ಲಿ ರೋಗಿಯನ್ನು ಇಟ್ಟುಕೊಳ್ಳಲಾಗದಿದ್ದರೆ ಹತ್ತಿರದ ದೊಡ್ಡ ಆಸ್ಪತ್ರೆಗೇನಾದರೂ ವಿಷಯ ತಿಳಿಸಿದ್ದರೋ? ಇತ್ಯಾದಿ ಪ್ರಶ್ನೆಗಳು ಪ್ರಶ್ನೆಗಳಾಗೇ ಉಳಿಯುತ್ತವೆ, ಯಾರೂ ಇದರ ಬಗ್ಗೆ ಮಾತನಾಡಿದ್ದನ್ನು ನಾನು ಕೇಳಲಿಲ್ಲ/ಕಾಣಲಿಲ್ಲ.

 

ಆದದ್ದು ಆಯ್ತು, ಎಂದು ಸುಮ್ಮನೆ ಬಿಟ್ಟು ಬಿಡಬಹುದಾದ ವಿಷಯ ಇದಲ್ಲ.  ರೋಗಿ/ವ್ಯಕ್ತಿ ಯಾರೇ ಆಗಿದ್ದರೂ ಆಸ್ಪತ್ರೆ/ವೈದ್ಯರು ತಮ್ಮ-ತಮ್ಮ ಕರ್ತವ್ಯವನ್ನು ಪಾಲಿಸಲೇಬೇಕು, ಕೊನೇಪಕ್ಷ ಈ ಘಟನಾವಳಿಗಳಲ್ಲಿ ತಪ್ಪೇನಾದರೂ ನಡೆದಿದ್ದು ಸಾಬೀತಾದರೆ ಇನ್ನು ಮುಂದೆ ಹೀಗಾಗದಂತೆ ನೋಡಬೇಕು.

 

ಅದೇ ರೀತಿ ಅಶ್ವಥ್ ಸಾವೂ ಕೂಡಾ ಅನಿರೀಕ್ಷಿತ ಎಂದೇ ಹೇಳಬೇಕು.  ವೈದ್ಯರು ಇನ್ನೇನು ಗುಣಮುಖರಾಗುತ್ತಾರೆ ಎಂದು ಹೇಳಿದ್ದರಂತೆ, ಏನು ತೊಂದರೆ ಆಯಿತೋ? ಕಿಡ್ನಿ-ಲಿವರ್ ತಮ್ಮ ಸಾಮರ್ಥ್ಯಗಳಲ್ಲಿ ಕ್ಷೀಣಿಸುತ್ತಾ ಬಂದಂತೆ ಅದನ್ನು ಮೊದಲೇ ಪತ್ತೆ ಹಚ್ಚಿ ಯಾವುದಾದರೂ ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡಿದ್ದರೋ ಇಲ್ಲವೋ.  ಕ್ಷಮಿಸಿ, ನಾನು ವೈದ್ಯನೇನಲ್ಲ, ಈ ರೀತಿ ಪ್ರಶ್ನೆಗಳನ್ನು ಹಾಕುತ್ತಿರುವುದು ಉದ್ಧಟತನದಿಂದಲ್ಲ, ಕೇವಲ ಕುತೂಹಲದಿಂದ ಮಾತ್ರ.  ಎಲ್ಲೋ ಕುಳಿತು ಇನ್ನೆಲ್ಲಿಯೋ ಸರ್ಜರಿ ಮಾಡುವು ಇಂದಿನ ವೈದ್ಯಕೀಯ ವ್ಯವಸ್ಥೆಯಲ್ಲಿ ಇಬ್ಬರು ಮಹಾಚೇತನಗಳನ್ನು ಎರಡು ದಿನಗಳಲ್ಲಿ ಕಳೆದುಕೊಂಡು ರೋಧಿಸುವ ಅಭಿಮಾನಿ ಈ ರೀತಿಯ ಪ್ರಶ್ನೆಗಳನ್ನು ಕೇಳುವುದು ಸಹಜವೆಂದುಕೊಂಡಿದ್ದೇನೆ.

 

ನಿಮಗೇನಾದರೂ ಹೆಚ್ಚು ತಿಳಿದಿದ್ದರೆ ನಮಗೂ ಸ್ಪಲ್ಪ ತಿಳಿಸಿ.

 

image

(ಕೃಪೆ: ಪ್ರಜಾವಾಣಿ)

Wednesday, December 30, 2009

ಶ್ರದ್ದಾಂಜಲಿ...ವಿಷ್ಣು, ಅಶ್ವಥ್ ಇನ್ನಿಲ್ಲ

೨೦೦೯ ಸುಮ್ನೇ ಹೋಗಲಿಲ್ಲ...ತನ್ನ ಕೊನೆಯ ದಿನಗಳಲ್ಲಿ ಎರಡು ಮಹಾನ್ ಚೇತನಗಳನ್ನ ತನ್ನ ಜೊತೆ ತೆಗೆದುಕೊಂಡು ಹೋಯ್ತು...ಇನ್ನೂ ಒಂದು ದಿನ ಬಾಕಿ ಇದೆ ವರ್ಷದ ಬಾಬ್ತು ಮುಗಿಯೋದಕ್ಕೆ ಅನ್ನೋದು ಹೆದರಿಕೆಯ ವಿಷಯವೇ, ಏನೇನು ಆಗಲಿಕ್ಕೆ ಇದೆಯೋ!

 

ಕೆಲವು ತಿಂಗಳುಗಳ ಹಿಂದೆ ಅಶ್ವಥ್ ಅಮೇರಿಕಕ್ಕೆ ತಮ್ಮ ತಂಡದವರೊಂದಿಗೆ ಬಂದು ನಮಗೆಲ್ಲ ಸುಗಮ ಸಂಗೀತದ ರಸದೌತಣವನ್ನು ನೀಡಿದ್ದರು, ಅವರು ಇನ್ನಿಲ್ಲ...ತಾನು ಹುಟ್ಟಿದ ದಿನವೇ ಸಾಯುವ ಕಾಕತಾಳೀಯವನ್ನು ಬಹಳ ಜನ ಕಾಣಲಾರರು, ಅಂಥವರಲ್ಲಿ ಅಶ್ವಥ್ ಅವರು ಒಬ್ಬರು, ಇಂದಿಗೆ ಅವರಿಗೆ ಬರೋಬ್ಬರಿ ಎಪ್ಪತ್ತು ವರ್ಷ.

 

ashwath241209_1

***

 

ವಿಷ್ಣುವರ್ಧನ್, ಕೇವಲ ೫೯ ವರ್ಷಕ್ಕೆ ಹೃದಯಾಘಾತಕ್ಕೆ ಈಡಾಗುತ್ತಾರೆ ಎಂದು ಯಾರೂ ಎಣಿಸಿರಲಿಕ್ಕಿಲ್ಲ.  ಇತ್ತೀಚೆಗಷ್ಟೇ ಯಾವುದೋ ಉದಯ ಟಿವಿ ಕಾರ್ಯಕ್ರಮವನ್ನು ತೋರಿಸಿ ’ಪರವಾಗಿಲ್ಲ, ವಿಷ್ಣು ತನ್ನ ಫಾರ್ಮ್ ಚೆನ್ನಾಗಿ ಕಾಪಾಡಿಕೊಂಡಿದ್ದಾರೆ!’ ಎಂದು ಹೇಳಿದ್ದು ನನಗೆ ಚೆನ್ನಾಗಿ ನನಪಿದೆ.

 

vishnuvardhan-6677

***

ಈ ಇಬ್ಬರು ಕನ್ನಡದ ಚೇತನಗಳಿಗೆ "ಅಂತರಂಗ"ದ ನಮನ, ಅವರ ಆತ್ಮಗಳು ಶಾಂತಿಯಿಂದಿರಲಿ, ಹಾಗೂ ಮತ್ತೊಮ್ಮೆ ಕನ್ನಡ ನಾಡಲ್ಲೇ ಹುಟ್ಟಿ ಬರಲಿ.

 

picture source:

http://www.indiaglitz.com/channels/kannada/article/52939.html

http://entertainment.oneindia.in/tag/vishnuvardhan

Monday, December 28, 2009

’ಅಂತರಂಗ’ದಲ್ಲೇನು ನಡೀತಾ ಇದೆ?

’ಅಂತರಂಗ’ದಲ್ಲೇನು ನಡೀತಾ ಇದೆ? ಯಾಕೆ ಇದೀಗ ತಿಂಗಳ ಮೇಲೆ ಬರೆದೇ ಇಲ್ಲವಲ್ಲ ಎಂದು ಪ್ರಶ್ನೆಗಳ ಮೇಲೆ ಪ್ರಶ್ನೆ ಬರ್ತಾ ಇರೋದರಿಂದ ನನ್ನ ಮಾಮಾಲಿ ಸಸ್ಪೆಕ್ಟ್ ’ಸೋಮಾರಿತನ’ವನ್ನು ನೆಪಮಾಡಿಕೊಂಡು ಉತ್ತರವನ್ನೇನೋ ಕೊಡ್ತಾ ಇದ್ದೀನಿ, ಆದ್ರೆ ಇತ್ತೀಚಿನ ಭಾರತದ ಪ್ರಯಾಣ ಹಾಗೂ ವರ್ಷಾವಧಿ ಕೆಲಸಗಳ ಭರಾಟೆಯಿಂದಾಗಿ ಹೆಚ್ಚು ಬರೆಯೋದಕ್ಕಾಗಲಿಲ್ಲ, ಕ್ಷಮಿಸಿ.

ಮುಂದೆ ಪುರುಸೊತ್ತು ಮಾಡಿಕೊಂಡು, ಹಿಂದಿನ ’ಗೆಲುವಾಗೆಲೆ’ ಲೇಖನಕ್ಕೆ ’ಲಘುವಾಗೆಲೆ ಅನಿವಾಸಿ ಮನ...’ವೆಂದು ಮತ್ತೊಂದು ಆರ್ಟಿಕಲ್ ಬರ್ತಾ ಇದೆ...ಇನ್ನೇನು ’ಹೋಗಿ ಹರಿಯ’ನ್ನು ಮುಟ್ಟೋದೊಂದು ಬಾಕಿ ಅಷ್ಟೇ :-)

ಇದಲ್ಲದೇ ’ಅಂತರಂಗ’ದಲ್ಲಿ ಎಂದಿನ ತಳಮಳಗಳು ಇದ್ದೇ ಇವೆ, ನಿಮಗೆ ಗೊತ್ತಿದೆಯಲ್ಲಾ. ಎಂಥ ಮಾರ್ಕೆಟ್ಟಿನಲ್ಲೂ, ಎಂಥ ಸಂದರ್ಭದಲ್ಲೂ ನಮ್ಮ ನಮ್ಮೊಳಗೊಂದು ಕೊರಗುವ ಅಳುಮುಂಜಿ ಇದ್ದೇ ಇರುವಂತೆ.

ಇತ್ತೀಚೆಗೆ ’ಲೈವ್ ರೈಟರ್’ ಡೌನ್‌ಲೋಡ್ ಮಾಡಿಕೊಂಡಾಗಿನಿಂದಂತೂ ಬರೆಯೋದು ಮತ್ತಷ್ಟು ಸುಲಭವಾಗಿದೆ, ಬರೆಯೋದಕ್ಕೆ ಬೇಕಾದಷ್ಟು ವಿಚಾರಗಳಿವೆ, ಅಂದರೆ between the keyboard and the chair ಫ್ಯಾಕ್ಟರ್ ಅನ್ನು ಸರಿಪಡಿಸಿಕೊಳ್ಳೋದು ಮಾತ್ರ ಬಾಕಿ!

Friday, November 13, 2009

ಗೆಲುವಾಗೆಲೆ ಅನಿವಾಸಿ ಮನ…

ಅನಿವಾಸಿ(ಗಳ) ಮನದಲ್ಲೇನಿರುತ್ತೆ, ಅದರ ಆಳ-ವಿಸ್ತಾರವೇನು? ಅದರ ಮಿತಿಗಳೇನು ಎಂದು ಯೋಚಿಸುತ್ತಾ ಹೋದರೆ ಅದೊಂದು ಅಪರಿಮಿತ ಆವರಣವನ್ನೇ ಹೊರಹಾಕಿ ಬಿಡುತ್ತೆ.   ಅನಿವಾಸಿತನ ಅನ್ನೋದು ಲೋಕಲ್ ಆಗಿದ್ದವರಿಗೆ ಗ್ಲೋಬಲ್ ಪರಿಜ್ಞಾನ ಮೂಡಿಸುತ್ತೆ, ಜಾಗತೀಕರಣ, ಉದಾರೀಕರಣ ಅದೂ-ಇದೂ ಅನ್ನೋ ಹೊಸ ಕಾಯಕಲ್ಪಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಮಾಡುತ್ತೆ, ಜೊತೆಗೆ ಬೇಡವಾದ ಹಲವನ್ನು ತಂದು ತಲೆಯೊಳಗೆ ತುಂಬುತ್ತೆ.

 

ಅನಿವಾಸಿತನದ ಇತಿ-ಮಿತಿಗಳು ವ್ಯಕ್ತಿಗತವಾದವುಗಳು, ನನ್ನ ಮಟ್ಟಿಗೆ ಹಳೆಯ ಜೀಪ್ ಒಂದಕ್ಕೆ ಎತ್ತರದ ಹೊಸ ಚಕ್ರಗಳನ್ನು ಕೂರಿಸಿ ಕುದುರೆ ಸವಾ ಮಾಡಿಸಿದಂತೆ ಒಮ್ಮೊಮ್ಮೆ ನನ್ನ ಚಿಕ್ಕತನವನ್ನು ದೊಡ್ಡ ಪ್ರಮಾಣದಲ್ಲಿ ಅಳತೆ ಮಾಡಲಾಗಿದೆ.  ಇಷ್ಟು ವರ್ಷ ಇದ್ದು ಅದ್ಯಾವ ಸಂಗೀತ/ಹಾಡುಗಳನ್ನು ಅದೆಷ್ಟೇ ಬಾರಿ ಕೇಳಿ ನೋಡಿದರೂ ನಮ್ಮ ನೆಚ್ಚಿನ ಭಾವಗೀತೆಗಳು ನಮ್ಮನ್ನು ಜೀವನ ಪರ್ಯಂತ  ಕೂಡಿಕೊಳ್ಳುವ ಹಾಗೆ, ನಮ್ಮ ನೆಚ್ಚಿನ ಜಾನಪದಗೀತೆಗಳು ಹಳೆಯ ಸ್ನೇಹಿತರಾದ ಹಾಗೆ, ಎಷ್ಟೇ ಹೊಸ ಚಿತ್ರಗಳು ಬಂದರೂ ಹಳೆಯ ಗೀತೆಗಳು ನೆನಪಿನಲ್ಲಿ ಉಳಿಯುವ ಹಾಗೆ ಈ ಇಂಗ್ಲೀಷ್ ಸಾಹಿತ್ಯವಾಗಲೀ, ಸಂಗೀತವಾಗಲೀ ಉಳಿಯೋದೇ ಇಲ್ಲ.  ಮೊದಲ ಜನರೇಷನ್ನಿನ ನನಗೆ ಮಾತ್ರ ಹೀಗಾಗಬಹುದು, ಇಲ್ಲಿಯೇ ಹುಟ್ಟಿ ಬೆಳೆದ ನಂತರದ ಜನರೇಷನ್ನಿನ ಅಭಿರುಚಿಗಳು ಬೇರೆ ಇರಬಹುದು.

 

ಆಫೀಸಿನಲ್ಲಿನ ಸಹೋದ್ಯೋಗಿಗಳ ಸಂಖ್ಯೆ ನಮ್ಮ ಸ್ನೇಹಿತರ ಗುಂಪನ್ನು ಸೇರಲಾರದು, ಕೆಲಸದ ವಿಚಾರವನ್ನು ಹೊರತು ಪಡಿಸಿ ಆಟೋಟದ ವಿಚಾರದಲ್ಲಾಗಲೀ, ಹೊರಗಡೆಯ ಇನ್ಯಾವುದೇ ವಿಷಯದಲ್ಲಾಗಲೀ ನಮ್ಮನ್ನು ನಾವು ಕನೆಕ್ಟ್ ಮಾಡಿಕೊಳ್ಳಲಾರದಾಗುತ್ತೇವೆ.  ನಾವೂ ನೋಡಿದ, ನೋಡುವ ಟಿವಿ ಕಾರ್ಯಕ್ರಮಗಳು ಯಾವಾಗಲೂ ಕ್ಯಾಚ್ ಅಪ್ ಮೋಡ್‌ನಲ್ಲೇ ಇರುತ್ತವೆ.  ಯಾರು ಯಾವ ಆಟದಲ್ಲಿ ಗೆದ್ದರೇನು, ಬಿಟ್ಟರೇನು ಇಲ್ಲಿನ ಸ್ಥಳೀಯ ಸುದ್ದಿಯ ಮುಂದೆ ಪ್ರಜಾವಾಣಿಯ ಮುಖಪುಟದಲ್ಲಿ ಕರ್ನಾಟಕದವರು ಉತ್ತರ ಪ್ರದೇಶದ ಮೇಲೆ ರಣಜಿ ಕಪ್‌ನಲ್ಲಿ ಗೆದ್ದರು ಎಂಬುದು ಇವತ್ತಿಗೂ ಅಪ್ಯಾಯಮಾನವಾಗುತ್ತದೆ.  ಇತ್ತೀಚಿನ ಟ್ವೆಂಟಿ-ಟ್ವೆಂಟಿ ಪ್ರಂದ್ಯಗಳನ್ನು ನಾನು ಫಾಲ್ಲೋ ಮಾಡುತ್ತಿಲ್ಲವಾದರೂ ಅದರ ಸುತ್ತಲಿನ ಸುದ್ದಿಗಳಲ್ಲಿ ಭಾರತ ತಂಡದ ಹೆಸರನ್ನು ಕಣ್ಣುಗಳು ಗೊತ್ತೋ ಗೊತ್ತಿರದೆಯೋ ಹುಡುಕುತ್ತಿರುತ್ತವೆ.

 

ನಾನು ಈವರೆಗೆ ಕಾಲಿಡದ ಎಷ್ಟೋ ಅಂಗಡಿಗಳು ಇಲ್ಲಿವೆ, ಇಲ್ಲಿನವರ ದಿನಬಳಕೆಯ ಅದೆಷ್ಟೋ ಪದಾರ್ಥಗಳು ನನಗೆ ಪರಿಚಯವೇ ಇಲ್ಲವಾಗಿದೆ.  ಹಾಡು, ಸಿನಿಮಾ, ಸಂಸ್ಕೃತಿ, ಸಂಭ್ರಮಗಳನ್ನು ಒಂದಕ್ಕೊಂದು ಕನೆಕ್ಟ್ ಮಾಡಿಕೊಳ್ಳದೇ ಪರದಾಡಿದ್ದಿದೆ.  ನನ್ನಂಥ ಅನಿವಾಸಿಗಳಿಗೆ ಯಾರಾದರೂ “ನೀವು ಕೆಲಸಕ್ಕ ಹೋಗಬೇಡಿ, ಮನೆಯಲ್ಲೇ ಇರಿ ನಿಮಗೆ ಅಷ್ಟೇ ಸಂಬಳವನ್ನು ಕೊಡುತ್ತೇವೆ”, ಎಂದರೆ ಇನ್ನೇನನ್ನೂ ಮಾಡಲಿಕ್ಕಾಗೇ ಹುಚ್ಚೇ ಹಿಡಿಯುವ ಪ್ರಸಂಗ ಬಂದರೂ ಬರಬಹುದು.

 

****

 

ಮನೆ ಬಿಟ್ಟು, ದೇಶ ಬಿಟ್ಟು, ಭಾಷೆ ಬಿಟ್ಟು, ರೂಢಿ ಬಿಟ್ಟು ಮತ್ತೊಂದು ಕಡೆಗೆ ಹೋಗೋದೆಲ್ಲ ಕೆಟ್ಟದೇನಲ್ಲ.  ಅಲ್ಲಿ-ಇಲ್ಲಿ ಒಂದಿಷ್ಟು ಹೋಗಿ ನೋಡಿದರೆ ತಾನೆ ಗೊತ್ತಾಗೋದು?  ಈ ಬಂದು ಹೋಗುವ ಬದುಕಿಗೆ ಯಾವುದು ತಾತ್ಕಾಲಿಕ, ಯಾವುದು ಶಾಶ್ವತ? ಜಗತ್ತಿನ ಏನೇನೆಲ್ಲ ಸಂಸ್ಕೃತಿಗಳನ್ನೆಲ್ಲ ವಿಸ್ತರಿಸಿ ಕೊನೆಗೆ ಯಾವುದಕ್ಕೆ  ಬೇಕಾದರೂ ತಗುಲಿಕೊಳ್ಳಬಹುದು ತಾನೆ?  ನಮಗೆ ಗೊತ್ತಿರುವ ಒಂದೇ ನೆಲೆಗಟ್ಟಿಗೆ ಅಂಟಿಕೊಂಡೇ ತೊಳಲಾಡುವುದರಲ್ಲಿ ಯಾವ ದೊಡ್ಡಸ್ತಿಕೆ ಇದೆ ಹೇಳಿ?  ನಾವು ನಮ್ಮದನ್ನು ಬಿಟ್ಟು ಹೋಗದಿರುವ ಮನಸ್ಥಿತಿಗೂ ಕಾಂಪ್ಲಸೆನ್ಸಿಗೂ ಏನು ವ್ಯತ್ಯಾಸ್

 

ಏನು ಬೇಕಾದರೂ ಇರಲಿ ಇಲ್ಲದಿರಲಿ, ನಮ್ಮ ಕೆಲಸಗಳನ್ನೆಲ್ಲ ನಾವೇ ಮಾಡಿಕೊಳ್ಳುವ ಪರಿಪಾಟಲೆಗೆ ರೂಢಿ ಮಾಡಿಕೊಂಡಿರೋದು ಹಾಗೂ ನಮ್ಮ ನಮ್ಮ ಸಣ್ಣ ಪ್ರಪಂಚಗಳಲ್ಲೇ ಯಾರ ಉಸಾಬರಿಯೂ ಬೇಡವೆಂದು ನಿರ್ವಂಚನೆಯಿಂದ ಬದುಕೋದು ಅನಿವಾಸಿ ಜೀವನದ ಅವಿಭಾಜ್ಯ ಅಂಗ.  ಎಕ್ಸ್ಟೆಂಡೆಡ್ ಫ್ಯಾಮಿಲಿ ಇರುವವರದ್ದು ಒಂದು ರೀತಿಯ ಬದುಕಾದರೆ ನಮ್ಮ ನ್ಯೂಕ್ಲಿಯರ್ ಕುಟುಂಬಗಳದ್ದು ಮತ್ತೊಂದು ರೀತಿಯ ಬದುಕು.  ಭಾರತದಲ್ಲಿ ಬೆಳೆದು ಬಂದ ಪರಿಣಾಮವಾಗಿ ನಾವು ಹೋಗಿ ಬಂದಲ್ಲೆಲ್ಲ ನಾವು ಕೆಲಸ ಮಾಡುವಲ್ಲೆಲ್ಲ ಅವಕಾಶವಾದಿಗಳಾಗಿ ಕಂಡು ಬರುತ್ತೇವೆ.  ಸ್ಥಳೀಯ ಡಿ.ಎಮ್.ವಿ. ಲೈನ್‌ಗಳು ಇರುಲಿ, ಇಂಡಿಯನ್ ಎಂಬಸಿ ನೂಕು ನುಗ್ಗಲಾಗಲೀ ನಮಗ್ಯಾರೀಗೂ ಹೊಸತು ಎನ್ನಿಸುವುದಿಲ್ಲ.  ಟ್ರಾಫಿಕ್ ಜಾಮ್ ಆದಾಗಲೆಲ್ಲ ಮನಸ್ಸು ಅಡ್ಡ ದಾರಿ ಹುಡುಕುತ್ತಲೇ ಇರುತ್ತದೆ.  ಇದ್ದುದರಲ್ಲೇ ಅಡ್ಜಸ್ಟ್ ಮಾಡಿಕೊಂಡು ಬೆಳೆದು ಬಂದ ಪರಿಣಾಮ ಎಷ್ಟೇ ಇದ್ದರೂ ಕಡಿಮೆಯಲ್ಲೇ ಬದುಕುವುದು ಅಭ್ಯಾಸವಾಗಿ ಬಿಡುತ್ತದೆ.  ಹಾಸಿಗೆ ಇದ್ದಷ್ಟೇ ಕಾಲು ಚಾಚು ಅಂದವರಿಗೆ ನಾವು ಏಕೆ ಎಂದು ಕೇಳಲೇ ಇಲ್ಲ, ನನಗೆ ಇಷ್ಟ ಬಂದಲ್ಲಿ ಮಲಗುತ್ತೇನೆ ಎನ್ನುವುದು ಯಾವತ್ತೂ ಒಂದು ಆಪ್ಷನ್ನ್ ಆಗಿರಲೇ ಇಲ್ಲ.

 

ನಮ್ಮ ಮನೆಯ ಕಸವನ್ನು ಸಂಸ್ಕರಿಸಬಹುದು, ನಮ್ಮ ಕಸ ಮತ್ತೊಬ್ಬರಿಗೆ ಮಾರಕ ಎನ್ನುವುದು ನಮ್ಮ ಕಲ್ಪನೆಯಲ್ಲೇ ಇಲ್ಲ, ಇವತ್ತಿಗೂ ಸಹ ಸ್ಥಳೀ ಟೌನ್‌ಶಿಪ್‌ನವರ್ ಮ್ಯಾಂಡೇಟರಿ ಗಾರ್‌ಬೇಜ್ ಕಲೆಕ್ಷನ್ ಮಾಡದೇ ಹೋದರೆ, ಅದಕ್ಕೆ ತಕ್ಕ ದುಡ್ಡನ್ನು ತೆಗೆದುಕೊಳ್ಳುವುದು ಆಫ್ಷನಲ್ ಆದರೆ ನಾವೆಲ್ಲ ನಮ್ಮ ಗಾರ್‌ಬೇಜ್ ಅನ್ನು ಏನು ಮಾಡುತ್ತಿದ್ದೆವೋ ಎಂದು ಹೆದರಿಕೆಯಾಗುತ್ತದೆ.  ಎಲ್ಲರೂ ಕಸವನ್ನು ತೆಗೆದು ಕನ್ಸರ್‌ವೆನ್ಸಿಗೆ ಸುರಿದು ಕೈ ಕೊಡಗಿ ಕೊಂಡರೆ ಕನ್ಸರ್‌ವೆನ್ಸಿ ಕ್ಲೀನ್ ಮಾಡುವವರಾರು? ಸಾವಿರಾರು ವರ್ಷಗಳಿಂದ ಲಂಚಕೋರತನ ಇದ್ದರೂ, ಲಂಚ ನಿರ್ಮೂಲನ ಎನ್ನುವುದು ಯಾವ ಪೊಲಿಟಿಕಲ್ ಅಜೆಂಡಾದಲ್ಲಿ ಇದೆ ಎಂದು ಮಸೂರವನ್ನು ಇಟ್ಟು ನೋಡಬೇಕಾಗಿದೆ.  ಅದು ಎಂತಹ ಭ್ರಷ್ಟಾಚಾರ ಹಗರಣದಲ್ಲಿ ಭಾಗಿಯಾಗಿ ಸಿಕ್ಕುಬಿದ್ದು ಕೋರ್ಟಿನಲ್ಲಿ ಸಾಭೀತಾದರೂ ಅಂಥವರು ಮತ್ತೆ ಗೆದ್ದು ಬರುವ ಪದ್ಧತಿ ಹಾಗೂ ರೂಢಿ ಇದೆ.  ಇವುಗಳನ್ನು ಭಿನ್ನ ನೆಲೆಯಲ್ಲಿ ನೋಡುವ ದೃಷ್ಟಿಕೋನ ಪರಕೀಯವಾಗುತ್ತದೆ.

 

ಹೀಗೆ ಸರಿ-ತಪ್ಪು, ಅಲ್ಲಿ-ಇಲ್ಲಿ, ಹಾಗೆ-ಹೀಗೆ, ಚಿಕ್ಕದು-ದೊಡ್ಡದು ಎನ್ನುವ ಅನೇಕಾನೇಕ ವಿರೋಧಾಭಾಸಗಳ ಜೊತೆ ಏಗುವುದನ್ನು ಪ್ರವೃತ್ತಿಯನ್ನಾಗಿಸಿಕೊಂಡು ಬದುಕಿನ ಕರ್ಮ ಜೀವನವನ್ನು ನೂಕುವ ಅನಿವಾಸಿ ಮನಕ್ಕೆ ಗೆಲುವಾಗಲಿ!

Monday, November 09, 2009

ನಮ್ಮ ನೆಲೆಗಟ್ಟು ಹಾಗೂ ಆಯಾಮಗಳು

ಅಬ್ಬಾ, ಕೊನೆಗೂ ಈ ರಾಜ್ಯ ರಾಜಕಾರಣದ ಬಿಕ್ಕಟ್ಟಿನ ಸುದ್ದಿಗಳು ವೃತ್ತಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಸೆಕೆಂಡರಿಯಾಗತೊಡಗಿದವು!  ಇತ್ತೀಚೆಗೆ ಕೆಲವು ವಾರಗಳಿಂದ ಅವರಿವರು ಹಿಡಿದ ಬಿಗಿಪಟ್ಟಿಗೆ ಕೊನೆಗೂ ತೆರೆ ಬಿತ್ತು.  ಮತ್ತೆ ಮಳೆ ಅಲ್ಲಲ್ಲಿ ಹೆಚ್ಚು ಅಬ್ಬರ ತೋರಿದಂತೆ ನಮ್ಮ ಧುರೀಣರಿಗೆ ಇತ್ತೀಚಿನ ಪ್ರವಾಹದ ಪ್ರಕೋಪ ನೆನಪಿಗೆ ಬಂದು ತಮ್ಮ ತಾಲ್ಲೂಕು, ಜಿಲ್ಲೆಗಳ ಜನರಿಗೆ ಸಂತೈಸಲು ಈಗ ಸಮಯ ಸಿಕ್ಕಿರಬಹುದು ಎಂದು ನನ್ನಂತಹವರಿಗೆ ಒಂದು ರೀತಿಯ ಸಮಾಧಾನ.  ಅದೂ ಕರ್ನಾಟಕ ರಾಜ್ಯೋತ್ಸವ ಮಾಹೆಯಲ್ಲಿ ನಮ್ಮ ಸರ್ಕಾರ ಕುಸಿದು ನಮ್ಮ ವ್ಯವಸ್ಥೆ ನಗೆಪಾಟಲಿಗೆ ಗುರಿಯಾಗುವುದೆಂದರೆ?

 

ದೂರದ ಅಮೇರಿಕದಲ್ಲಿ ಕುಳಿತು ಮಾಧ್ಯಮಗಳನ್ನು ಹೇಳಿದ್ದನ್ನು ನೋಡಿ ನಂಬುವ ನಮ್ಮಂತಹವರಿಗೆ ವಸ್ತು-ವಿಷಯದ ಪೂರ್ಣ ಪರಿಚಯವಾಗುವುದೇ ಇಲ್ಲ.  ಅಧಿಕಾರಿಗಳ ನಡುವೆ ನಡೆಯುವ ಮಾತುಕಥೆ, ಅವರ ತಂತ್ರಗಳ ಸುತ್ತಲೂ ಹೆಣೆದುಕೊಳ್ಳುವ ಅಸಮಧಾನ ಇವು ಹೊಸತಲ್ಲ ಹಾಗೂ ಶಾಸಕಾಂಗದ ಪ್ರಭಾವ ಕಾರ್ಯಾಂಗದ ಮೇಲೆ ಯಾವಾಗಲೂ ಇರುವಂತೆ ರಾಜಕಾರಣಿಗಳು ಹೋಗಿ-ಬರುತ್ತಿದ್ದರೂ ಅಧಿಕಾರಿಗಳು ತಮ್ಮ ವರ್ತುಲಗಳಲ್ಲಿ ಮುಂದುವರೆಯುತ್ತಲೇ ಇರುತ್ತಾರೆ.  ಹೀಗಿದ್ದ ಅಧಿಕಾರಿಗಳ ವಲಯದಲ್ಲಿ ದಿಢೀರ್ ’ಕಾರ್ಯಾಚರಣೆ’ ನಡೆದು ಅವರಿವರನ್ನು ಜನ ಸಮ್ಮುಖದಲ್ಲಿ ತರಾಟೆಗೆ ತೆಗೆದುಕೊಂಡು ಅಲ್ಲಿಲ್ಲಿ ವರ್ಗಾವಣೆ ಮಾಡಲಾಗಿದೆ ಎನ್ನುವುದೊಂದು ಆರೋಪ.  ಅದಕ್ಕೆ ಪ್ರತಿಯಾಗಿ ಭಿನ್ನಮತ.  ಇವುಗಳಿಗೆಲ್ಲ ದೆಹಲಿಯ ವರಿಷ್ಠರ ಸೂತ್ರದಾರಿಕೆ ಹಾಗೂ ಮಾತುಕಥೆ.  ಇವುಗಳನ್ನೆಲ್ಲ ಹತ್ತಿರದಿಂದ ವೀಕ್ಷಿಸಿಕೊಂಡು ಸಿಕ್ಕಿದ್ದರಲ್ಲಿ ಅವಕಾಶ ಸಾಧನೆ ಮಾಡಿಕೊಳ್ಳುವುದು ಮತ್ತೊಂದು ಬಣ.

 

ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಕಡೆಗಣಿಸಿ ಶಾಸಕರನ್ನು ಹೈದರಾಬಾದಿನಲ್ಲಿ ನಿಯೋಜಿಸಿ ’ಮಾರಾಟ’ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಹೆಸರಿನಲ್ಲಿ ಕೋಟ್ಯಾಂಟರ ರೂಪಾಯಿಗಳಿಗೆ ಒಬ್ಬೊಬ್ಬ ಶಾಸಕರನ್ನು ಮಾರಿಕೊಳ್ಳುವ ಧರಣಿಯನ್ನು ಹಮ್ಮಿಕೊಂಡಿದ್ದರು.  ಅದು ಜನ ಸಾಮಾನ್ಯರ ಪ್ರತಿಭಟನೆಯೋ, ರಾಜಕೀಯ ಪ್ರೇರಿತವೋ ಎಂಬುದು ಸರಿಯಾಗಿ ತಿಳಿದು ಬಂದಿಲ್ಲವಾದರೂ ಶಾಸಕರ “ಕುದುರೆ ವ್ಯಾಪಾರ” ಇವತ್ತು ನಿನ್ನೆಯದಲ್ಲ ಬಿಡಿ.

 

ನಮ್ಮವರನ್ನು ಪ್ರೇರಿಪಿಸುವುದು ಇಷ್ಟೇ: ಹಣ, ಜಾತಿ ಹಾಗೂ ಬಣ.  ಇವು ಎಲ್ಲಿ ಹೋದರೂ ಸತ್ಯವಲ್ಲವೇ? ಎಂದು ಯಾರಾದರೂ ಪ್ರಶ್ನಿಸಬಹುದು, ಆದರೆ ನಮ್ಮ ಕರ್ನಾಟಕದಲ್ಲಿ ಒಂದು ವಿಶೇಷತೆ ಇದೆ – ಅವೇ ಬ್ರಾಹ್ಮಣ, ಗೌಡ, ಲಿಂಗಾಯಿತ, ಕುರುಬ ಮೊದಲಾದ ಜಾತಿಗಳು, ಅವರಲ್ಲೇ ಗಣಿ ಒಡೆತನದವರು, ಪಕ್ಷ ಕಟ್ಟಿದವರು, ಬೇರೆ ಪಕ್ಷದಿಂದ ಹಾರಿ ಸಧ್ಯಕ್ಕೆ ತಾತ್ಕಾಲಿಕ ನೆಲೆಯನ್ನು ಕಂಡುಕೊಂಡವರು, ಒಂದೂವರೆ ವರ್ಷದ ಹಿಂದೆ ಸ್ವತಂತ್ರ ಅಭರ್ಥಿಗಳಾಗಿ ಗೆದ್ದು ಇಂದು ಮತ್ತೊಂದು ಪಕ್ಷ ಸೇರಿಕೊಂಡವರು – ಮೊದಲಾದವರೆಲ್ಲ ನಮ್ಮ ರಾಜ್ಯ ರಾಜಕಾರಣವನ್ನು ವಿಶೇಷಗೊಳಿಸುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು.

 

“ನಾನು ಸತ್ತರೂ ಪರವಾಗಿಲ್ಲ, ಅವನ ಮನೆಯಲ್ಲಿ ಅಥವಾ ಅವನಿಂದ ಒಂದು ಹನಿ ನೀರೂ ನನಗೆ ಬೇಡ!” ಎನ್ನುವುದು ನಮ್ಮ ಧ್ಯೇಯವಾಕ್ಯ.  ಇದೊಂದು ವಾಕ್ಯವೇ ಸಾಕು ಪ್ರಪಂಚದ ಪ್ರಯೋಗಶೀಲತೆಯನ್ನೆಲ್ಲ ಬದಿಗೊತ್ತಲು, ಇದೊಂದೇ ವಾಕ್ಯ ಸಾಕು ನಮ್ಮ ಹಿತ್ತಲಿನ ಆಲದ ಮರವೋ ಹುಣಿಸೇ ಮರವೋ ನಮಗೆ ದೊಡ್ಡದಾಗಿ ಕಾಣಲು.  ಈ ಮನೋಭಾವನೆ ಇರುವವರೆಗೆ ನಮ್ಮಲ್ಲಿನ ರಾಜಕಾರಣ ವಿಶ್ವ ರಾಜಕೀಯದ ಮಾದರಿಯ ಪ್ರಜಾಪ್ರಭುತ್ವವನ್ನು ಅನುಸರಿಸಿಯೂ ಭಿನ್ನವಾಗಿರುತ್ತದೆ, ಹೀಗೆ ಭಿನ್ನವಾಗಿರುವ ನೆಲೆಗಟ್ಟಿಗೆ ಹಣ, ಜಾತಿ ಹಾಗೂ ಬಣಗಳೆಂಬುವವು ಹೊಸ ಹೊಸ ಆಯಾಮಗಳನ್ನು ಕೊಡುತ್ತಲೇ ಹೋಗುತ್ತವೆ.

Saturday, November 07, 2009

ನಮ್ಮ ದೇಶ ನಮ್ಮದು!

’ನೀವ್ ಇಂಡಿಯಾಕ್ ಹೋಗಿ ನೋಡಿ, ಅಲ್ಲಿ ಎಷ್ಟು ಬದಲಾವಣೆಯಾಗಿದೇ ಅಂತ!’ ಎಂದು ನನ್ನ ಬಳಿ ಹೇಳಿಕೊಂಡವರು ದೇಶದ ಉದ್ದಾರವನ್ನು ಕುರಿತು ಹೇಳಿರದೇ ಒಂದು ರೀತಿಯ ವ್ಯಂಗ್ಯದ ಇಂಟೋನೇಷನ್ನ್ ಅನ್ನು ತೋರಿಸಿಕೊಂಡಿದ್ದು ನೆನಪಿಗೆ ಬಂತು.  ಹಿಂದೆ ಅರವತ್ತೆರಡು ವರ್ಷಗಳ ಸ್ವಾತಂತ್ರ್ಯದ ಬಗ್ಗೆ ಬರೆದಂತೆ ನಮ್ಮ ದೇಶ ಎಷ್ಟೊಂದು ಬದಲಾವಣೆಗಳನ್ನು ಕಂಡಿದೆ ಹಾಗೂ ಕಾಣುವುದಕ್ಕಿದೆ ಅಂತದರಲ್ಲಿ ನಾವೆಲ್ಲ ಈವರೆಗೆ ಗಮನಿಸಿದ ಬದಲಾವಣೆಗಳು ಮಹಾನ್ ಅಲ್ಲವೇ ಅಲ್ಲ ಅನ್ನೋದು ನನ್ನ ಅನಿಸಿಕೆ.  ಅಲ್ಲದೆ ಬದಲಾವಣೆಗಳಿಗೆ ತಮ್ಮನ್ನು ತಾವು ಅಳವಡಿಸಿಕೊಂಡು ಮುಂದುವರೆಯದಿರುವುದು ದೇಶಗಳಿಗಾಗಲೀ, ಕಂಪನಿಗಳಿಗಾಗಲಿ ಅಥವಾ ವ್ಯಕ್ತಿ-ಕುಟುಂಬಗಳಿಗೆ ಸಾಧುವೂ ಅಲ್ಲ.

 

ಎಂಭತ್ತರ ದಶಕದಿಂದೀಚೆಗೆ ನಮ್ಮನ್ನು ನಾವು ಪ್ರಪಂಚದ ಇತರೆ ಬೆಳವಣಿಗೆಗಳಿಗೆ ತೊಡಗಿಸಿಕೊಂಡಿದ್ದು ನಿಮಗೆಲ್ಲ ನೆನಪಿರಬಹುದು.  ಮೊದಲೆಲ್ಲ ಕುಟುಂಬ ಯೋಜನೆ ಎಂದರೇನು ಎಂದು ಗೊತ್ತಿರದೇ ಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದ ಕುಟುಂಬಗಳು ಎಷ್ಟೋ.  ಒಂದೇ ಸೂರಿನೆಡೆ ಬಡತನದಲ್ಲಿ ಹಲವಾರು ಮಕ್ಕಳ ಹೊಟ್ಟೆ ತುಂಬುವುದು, ಅವುಗಳಿಗೆ ಸರಿಯಾದ ವಿದ್ಯೆಯನ್ನು ಕಲಿಸಿಕೊಡುವುದು ಎಲ್ಲವೂ ಸಾಧ್ಯವಿಲ್ಲದ ಮಾತಾಗಿತ್ತು.  ಈ ತಲೆಮಾರು ಇರುವ ಹಾಗೆಯೇ ಮುಂದಿನ ಒಂದೆರಡು ತಲೆಮಾರುಗಳು ಮುಂದುವರೆದ ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ ಮೊದಲಾದವುಗಳ ಪಲಾನುಭವಿಗಳಾಗಿ ಬೆಳೆಯುವ ಭಾಗ್ಯ ಕಂಡುಕೊಂಡವು.  ಹೀಗೆ ತಲೆಮಾರುಗಳು ತಮ್ಮನ್ನು ತಾವು ಬದಲಾವಣೆಗಳಿಗೆ ಒಳಪಡಿಸಿಕೊಂಡು ಬಂದಂತೆ ಜಗತ್ತು ಚಿಕ್ಕದಾಯಿತು.  ಎಲ್ಲೆಲ್ಲೋ ಇದ್ದವರಿಗೆ ಎಲ್ಲಿಯದೋ ಮಾಹಿತಿ ದೊರೆಯುವಂತಾಯಿತು.

 

ತಂತ್ರಜ್ಞಾನವೇ ಇರಲಿ, ಮಾಹಿತಿ-ಸಂವಹನಗಳಾಗಲಿ ಭಾರತ ಜಗತ್ತಿನ ಅತಿ ದೊಡ್ಡ ಲ್ಯಾಬೋರೇಟರಿ ಇದ್ದ ಹಾಗೆ.  ಹೊಸ ವಸ್ತು, ವಿಷಯಗಳಿಗೆ ಕೋಟ್ಯಾಂತರ ಭಾರತೀಯರು ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಲೇ ಬಂದರು.  ಬೇರೆ ಯಾವೊಂದು ದೇಶದಲ್ಲೂ ಸಿಗದಷ್ಟು ಬಳಕೆದಾರರು ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ದೇಶ-ವಿದೇಶಗಳ ಗುರಿಯಾದರು.  ೧೯೫೦ ರ ದಶಕ ಅಮೇರಿಕನ್ನರಿಗೆ ನಾವು ಬೆಳೆದ ಬಗೆಯನ್ನು ತಿಳಿಸಿ ಹೇಳಿದಾಗ ಅಲ್ಲಿ ಬೇಕಾದಷ್ಟು ಸಾಮ್ಯತೆ ಸಿಗುತ್ತದೆ, ನಮ್ಮ ನಡೆ-ನುಡಿಯನ್ನು ಗಮನಿಸಿದಾಗ ಅದು ಸ್ಪಷ್ಟವಾಗುತ್ತದೆ. ಆದರೆ ನಮ್ಮ ಮುಂದಿನ ಜನರೇಶನ್ನುಗಳಲ್ಲಿ ವಿಶ್ವದ ಯಾವುದೇ ಮೂಲೆಯಲ್ಲಿ ನಿಂತು ನೋಡಿದರೂ ಎಲ್ಲ ಯುವ ಪೀಳಿಗೆಗಳೂ ಒಂದೇ ಪೋಷಣೆಗಳಿಗೆ ಒಳಗಾದಂತೆ ಕಂಡು ಬರುತ್ತದೆ.  ಉದಾಹರಣೆಗೆ, ಒಂದು ಕಾಲದಲ್ಲಿ ಭಾರತವನ್ನು ಪೀಡಿಸುತ್ತಿದ್ದ ಪೋಲಿಯೋ ಈಗ ಜಗತ್ತಿನುದ್ದಕ್ಕೂ ನಿರ್ಮೂಲನದ ಹಾದಿ ಹಿಡಿದಿದೆ.  ಪೋಲಿಯೋ ಪೀಡಿತರಾದವರು ಹಳೆಯ ಸಂತತಿಗಳ ಉದಾಹರಣೆಗಳಾದರು.  ವಿಶ್ವದ ಒಂದು ಮೂಲೆಯಲ್ಲಿ ನಡೆಯುವ ವಿಚಾರಗಳು ಇನ್ನೆಲ್ಲೋ ತಮ್ಮ ಅಲೆಗಳನ್ನು ಎಬ್ಬಿಸುವ ಸುನಾಮಿಗಳಾಗುವುದು ಇತ್ತೀಚೆಗೆ ಸಹಜ ಹಾಗೂ ನಿರೀಕ್ಷಿತ.

 

ನಮ್ಮ ಭಾರತದ ಹಳೆಯ ನೆನಪುಗಳು ’ನಾಷ್ಟಾಲ್ಜಿಯ’ವಲ್ಲದೇ ಮತ್ತೇನು?  ರಸ್ತೆಯ ತುಂಬ ಕಡಿಮೆ ಕಾರುಗಳು ಓಡಾಡುತ್ತಿದ್ದ ೭೦-೮೦ ರ ದಶಕದ ದಿನಗಳಲ್ಲಿ ಬೆಳೆದು ಬಂದ ನಾವು ಇಂದು ಮನೆಗೊಂದು ಕಾರಿನ ದಿಢೀರ್ ಬೆಳವಣಿಗೆಯನ್ನು ವಕ್ರ ದೃಷ್ಟಿಯಿಂದ ನೋಡುತ್ತೇವೇಕೆ? ಜಾತಿ-ಜಾತಕಗಳ ಮುಖಾಂತರ ಮದುವೆಯಾಗಿ ಬಂದ ನಮಗೆ ಅಂತರ್ಜಾತಿ-ಅಂತರ್ಮತ ವಿವಾಹಗಳು ಹೊಸದಾಗಿ ಕಂಡುಬಂದರೆ ಅದು ನಮ್ಮ ಮಿತಿಯೆಂದೇಕನಿಸುವುದಿಲ್ಲ?  ನಾವಿದ್ದಾಗಲೇ “ಎಷ್ಟೊಂದು ಜನ!” ಎಂದು ಉದ್ಗಾರವೆತ್ತುತ್ತಿದ್ದವರಿಗೆ ಈಗ ದೇಶ ಬೆಳೆದಿದೆ ಎಂಬುದನ್ನು ಸಕಾರಾತ್ಮಕವಾಗಿ ಸ್ವೀಕರಿಸಲೇಕಾಗುವುದಿಲ್ಲ?  ಕಡಿಮೆ ಜನ ಹೆಚ್ಚು ಸಂಪನ್ಮೂಲಗಳ ಅಮೇರಿಕದ ನೀರು ಕುಡಿದು ಬಡತನದ ನಮ್ಮ ನೆರೆಹೊರೆಗಳು ಕ್ಷುಲ್ಲಕವಾಗಿ ಕಾಣುವುದೇಕೆ?  ನಮಗೆಲ್ಲ ಭಾರತ ಅನ್ನೋದು ಗಂಡನ ಮನೆಯಲ್ಲಿ ಮುನಿಸು ಸಾಧಿಸಿಕೊಂಡು ಸಾಂತ್ವನಕ್ಕೆ ಓಡುವ ಹೆಣ್ಣಿನ ತವರು ಮನೆಯೇಕಾಗಬೇಕು?  ದೂರ ಹೋಗಿಯೂ ತವರು ನಾವು ಕಂಡುಕೊಂಡ ಹಾಗೇ ಇರಬೇಕು ಎನ್ನುವುದು ಈ ನಿರಂತರ ಬದಲಾವಣೆಯ ದಿನಗಳಲ್ಲಿ ನ್ಯಾಯವೇ?

 

ಬದಲಾವಣೆಗಳಿಗೆ ಓಗೊಟ್ಟ ಯಾರೊಬ್ಬರೂ ಭಾರತದ ಬೆಳವಣಿಗೆಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಲಾರರು.  ಒಂದು ಕಾಲದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಟ್ರಂಕ್ ಕಾಲ್ ಮಾಡಿ ಕಾದು ಒಂದು ದೂರವಾಣಿಯ ಸಂದೇಶವನ್ನು ಸಾಗಿಸುತ್ತಿದ್ದವರಿಗೆ ಇಂದಿನ ಮೊಬೈಲ್ ಯುಗ ವರದಾನವಾಗಿರುವಾಗ ಅದನ್ನು ನಾವು ಮಾಲಿನ್ಯ (ನಾಯ್ಸ್) ಎನ್ನುವುದು ಸ್ವಾರ್ಥವಾಗುತ್ತದೆ.  ಕಾರುಗಳು ಶ್ರೀಮಂತರಿಗಷ್ಟೇ ಇದ್ದು ಐಶಾರಾಮವಾಗಿದ್ದ ದಿನಗಳಿಗೆ ಹೋಲಿಸಿಕೊಂಡು ಇಂದಿನ ಟ್ರಾಫಿಕ್ ಜಾಮ್‌ ಅನ್ನು ದೂರುವುದು ನಮ್ಮ ಮಿತಿಯಾಗುತ್ತದೆ.  ಒಳ್ಳೆಯದೆಲ್ಲ ನಮಗೇ ಇರಲಿ ಎನ್ನುವುದು ಯಾವ ದೊಡ್ಡತನದ ಪ್ರತೀಕವಾದೀತು ನೀವೇ ಹೇಳಿ.

Tuesday, November 03, 2009

...there goes Jon Corzine!

ನ್ಯೂ ಜೆರ್ಸಿ ಅಂದರೆ ಡೆ‌ಮಾಕ್ರಟಿಕ್ ರಾಜ್ಯ - ಹತ್ತು ವರ್ಷಗಳಿಗಿಂತಲೂ ಹೆಚ್ಚು ಡೆಮಾಕ್ರಟಿಕ್ ಪಕ್ಷದವರು ಆಡಳಿತ ನಡೆಸಿಕೊಂಡು ಬಂದ ಸಂಭ್ರಮ ಇಂದು ಗವರ್ನರ್ ಜಾನ್ ಕಾರ್‌ಝೈನ್ ಎಲೆಕ್ಷನ್ನಿನ್ನಲ್ಲಿ ಸೋಲುವುದರೊಂದಿಗೆ ಕೊನೆಯಾಯಿತು ಅನ್ನಬಹುದು.

ನಮ್ಮಂಥವರು, ಅದೇ ಹಸಿರು ಕಾರ್ಡು ಫಲಾನುಭವಿಗಳು, ಇಲ್ಲಿ ಮತ ಚಲಾವಣೆ ನಡೆಸದಿದ್ದರೂ ರಾಜ್ಯದಾದ್ಯಂತ ನಡೆಯೋ ಚುನಾವಣೆಯ ವಿಚಾರಗಳನ್ನು ಬೇಡವೆಂದು ದೂರವಿರಿಸಿದರೂ ಅವುಗಳ ವಿಚಾರ ಒಂದಲ್ಲ ಒಂದು ರೀತಿಯಿಂದ ನಮ್ಮ ಮನ-ಮನೆಗಳಲ್ಲಿ ನುಸುಳುವುದು ಸಹಜ. ರಾಜ್ಯದ ಬಜೆಟ್, ನಿರುದ್ಯೋಗ, ಆದಾಯ ತೆರಿಗೆ, ಹೈವೇ ಸುಂಕ ಮೊದಲಾದವುಗಳು ಎಲ್ಲರಿಗೂ ಅನ್ವಯವಾಗುತ್ತವೆ.

ವಾಲ್‌ಸ್ಟ್ರೀಟ್ ಗುರು, ಗೋಲ್ಡ್‌ಮನ್ ಸ್ಯಾಕ್ಸ್‌ನ ಎಕ್ಸಿಕ್ಯೂಟಿವ್ ಎಂದೇ ಪ್ರಖ್ಯಾತಿಯಾಗಿದ್ದ ಜಾನ್ ಕಾರ್‌ಝೈನ್ ಕೇವಲ ವರ್ಷಕ್ಕೆ ಒಂದೇ ಒಂದು ಡಾಲರ್ ಸಂಬಳ ತೆಗೆದುಕೊಂಡು ಹೆಸರು ಮಾಡಿದ ಮನುಷ್ಯ. ಜಾನ್ ಪಕ್ಕದ ನ್ಯೂ ಯಾರ್ಕ್ ನಗರ ಮೇಯರ್ (ಮತ್ತೊಮ್ಮೆ ಮೂರನೇ ಟರ್ಮ್‌ಗೆ ಇಂದು ಆಯ್ಕೆಗೊಂಡ) ಮೈಕಲ್ ಬ್ಲೂಮ್‌ಬರ್ಗ್ ಥರ ಬಿಲಿಯುನರ್ ಅಲ್ಲದಿದ್ದರೂ ಮಲ್ಟಿ ಮಿಲಿಯನರ್ ಖಂಡಿತ ಹೌದು. ಅಂಥವರಿಗೆ ಈ ಗವರ್ನರ್‌ಗೆ ಕೊಡುವ ಸಂಬಳ ಯಾವ ಲೆಕ್ಕವೂ ಅಲ್ಲ. ಜಾನ್ ಕಾರ್‌ಝೈನ್‌ನ ಮಾತುಗಳನ್ನು ಕೇಳಿದರೆ, ಅದು ಯಾವುದೇ ಸಮಾರಂಭದಲ್ಲಿರಬಹುದು ಅಥವಾ ಎಲೆಕ್ಷನ್ನ್ ಕ್ಯಾಂಪೇನ್‌ನಲ್ಲಿರಬಹುದು, ಅವರು ಹಿಂದೆ ವಾಲ್‌ಸ್ಟ್ರೀಟ್‌ನಲ್ಲಿ ಒಬ್ಬ ಎಕ್ಸಿಕ್ಯೂಟಿವ್ ವರ್ಚಸ್ಸನ್ನು ಬಳಸಿಕೊಳ್ಳೋದಿಲ್ಲ ಅಥವ ತೋರಿಸಿಕೊಳ್ಳೋದಿಲ್ಲ ಎನ್ನೋದು ನನ್ನ ಅನಿಸಿಕೆ. ಜೊತೆಗೆ, ಒಬ್ಬ ಸೀಜನ್ಡ್ ರಾಜಕಾರಣಿಯ ಚಾಕಚಕ್ಯತೆ, ತಂತ್ರಗಳೂ ಅವರಿಗೆ ಈ ನಾಲ್ಕು ವರ್ಷಗಳಲ್ಲಿ ಸಿದ್ಧಿಸಿದ ಹಾಗೆ ಕಂಡುಬರಲಿಲ್ಲ.

ಐತಿಹಾಸಿಕವಾಗಿ ಹಾಲಿ ಗವರ್ನರ್ ಮರು ಎಲೆಕ್ಷನ್ನಿನ್ನಲ್ಲಿ ಸೋಲುವುದು ನ್ಯೂ ಜೆರ್ಸಿಯಲ್ಲಿ ಗಮನಾರ್ಹವಾದುದು. ಕೇಂದ್ರದಲ್ಲಿ ಡೆಮಾಕ್ರಟಿಕ್ ಸರ್ಕಾರ ಇದ್ದು - ಕಾಂಗ್ರೆಸ್, ಸೆನೆಟ್, ವೈಟ್‌ಹೌಸ್ ಎಲ್ಲಕಡೆಗೆ ಡೆಮಾಕ್ರಟ್ ಪಕ್ಷದವರು ತುಂಬಿರುವ ಸನ್ನಿವೇಶದಲ್ಲಿ ಹಾಗೂ ಒಬಾಮ ಖುದ್ದಾಗಿ ಬಂದು ಕ್ಯಾಂಪೇನ್‌ನಲ್ಲಿ ಭಾಗವಹಿಸಿದ್ದರೂ ಇದ್ದ ಸೀಟ್ ಅನ್ನು ಉಳಿಸಿಕೊಳ್ಳಲಿಲ್ಲ ಎನ್ನುವುದು ಬಹಳ ದೊಡ್ಡ ವಿಷಯವಾಗುತ್ತದೆ. ಇಲ್ಲಿ ರಿಪಬ್ಲಿಕನ್ ಪಕ್ಷದ್ದ ಕ್ರಿಸ್ ಕ್ರಿಸ್ಟೀಯ ಜಯ, ಸಫಲತೆ ಮುಖ್ಯವಾಗಿ ಕಾಣಿಸುತ್ತದೆ. ಹೀಗೇ ವರ್ಜೀನಿಯ ರಾಜ್ಯದಲ್ಲೂ ಅಲ್ಲಿನ ಡೆಮಾಕ್ರಟಿಕ್ ಪಕ್ಷದ ಗವರ್ನರ್ ಸೀಟು ಉಳಿಯದೆ ಅದೂ ರಿಪಬ್ಲಿಕನ್ ಪಕ್ಷದವರ ಪಾಲಾಗಿರುವುದು ಮತ್ತೊಂದು ಮುಖ್ಯ ಅಂಶ.

ಈ ಎರಡು ಅಂಶಗಳನ್ನು ಗಮನಿಸಿ ಇನ್ನು ಮೂರು ವರ್ಷಗಳ ನಂತರ ಬರುವ ಪ್ರೆಸಿಡೆಂಟ್ ಎಲೆಕ್ಷನ್ನ್ ಬಗ್ಗೆ ಈಗಲೇ ಏನನ್ನು ಹೇಳುವುದು ತಪ್ಪಾಗುತ್ತದೆ. ಆದರೆ, ಕಳೆದ ವರ್ಷ ಓಟಿನಲ್ಲಿ ಭಾಗವಹಿಸಿದಷ್ಟು ಜನ ಮುಖ್ಯವಾಗಿ ಮೊಟ್ಟ ಮೊದಲನೇ ಭಾರಿ ಮತ ಚಲಾಯಿಸಿದವರ ಸಂಖ್ಯೆ ಗಮನಾರ್ಹವಾಗಿ ಇಳಿಮುಖುವಾಗಿರುವುದು ಗೊತ್ತಾಗುತ್ತದೆ.

ನಾವು, ನ್ಯೂ ಜೆರ್ಸಿಯ ಜನ, ಈ ಹೊಸ ರಿಪಬ್ಲಿಕನ್ ರಾಜ್ಯ ಸರ್ಕಾರದ ಕಡೆಗೆ ನೋಡುತ್ತೆವೆ, ಹಾಗಾದರೂ ಒಂದಿಷ್ಟು ಟ್ಯಾಕ್ಸ್ ಕಡಿಮೆಯಾಗಲಿ ಎಂದು!

***

ದೂರದಲ್ಲಿ - ನಾವು, ನಮ್ಮ ಕರ್ನಾಟಕದ ಮುಖ್ಯಮಂತ್ರಿ ಎಡೆಯೂರಪ್ಪನವರ ಸರ್ಕಾರ, ಅವರ ಖುರ್ಚಿಗೆ ಏನು ಆತಂಕ ಕಾದಿದೆಯೋ ಎಂದು ಬಿಟ್ಟುಗಣ್ಣು ಬಿಟ್ಟು ನೋಡುತ್ತಲೇ ಇದ್ದೇವೆ. ಅಲ್ಲಿ ಐದು ವರ್ಷಗಳ ಒಬ್ಬ ಮುಖ್ಯ ಮಂತ್ರಿಯ ಆಳ್ವಿಕೆ ಮುಂದುವರೆಯಲಿ, ರಾಜ್ಯದ ಜನರಿಗೆ ನೆಮ್ಮದಿ ಸಿಗಲಿ ಎನ್ನುವುದು ಆಶಯ ಅಷ್ಟೇ. ಎರಡೆರಡು ವರ್ಷಕ್ಕೊಮ್ಮೆ ಎಲೆಕ್ಷನ್ನುಗಳನ್ನು ನಡೆಸಿಕೊಂಡು ಹಣ ಚೆಲ್ಲುವುದರ ಬದಲು ಇದ್ದ ಸರ್ಕಾರವನ್ನೇ ಮುಂದುವರೆಸಿಕೊಂಡು ಒಳಜಗಳಗಳು ಮುಖ್ಯವಾಗದೇ ರಾಜ್ಯದ ಅಭಿವೃದ್ಧಿ ಕಾರ್ಯಗಳತ್ತ ಮುಖ ತೋರುವುದು ಒಳಿತು.

Monday, November 02, 2009

ಬಿಸಿನೆಸ್ಸ್ ಮೈಂಡ್

’ವ್ಯವಹಾರ ಅನ್ನೋದು ನಮ್ಮ ರಕ್ತದಲ್ಲೇ ಬಂದಿಲ್ಲಾ ಕಣ್ರಿ!’ ಎಂದು ನನ್ನ ಸಹೋದ್ಯೋಗಿಯೊಬ್ಬರಿಗೆ ಹೇಳಿದ್ದಕ್ಕೆ ಅವರು ದೊಡ್ಡದಾಗಿ ನಕ್ಕು ’ಅದು ರಕ್ತದಲ್ಲಿ ಬರಬೇಕಾದ್ದಿಲ್ಲ, ಮನಸ್ಸಿನಲ್ಲಿದ್ದರಾಯಿತು, ರಿಸ್ಕ್ ತೆಗೆದುಕೊಂಡು ಮುಂದುಬರಬೇಕು ಎನ್ನುವುದು ವಂಶಪಾರಂಪರ್ಯವಾಗಿರಬೇಕು ಎಂದೇನು ಇಲ್ಲವಲ್ಲ’ ಎಂದರು.

ಇತ್ತೀಚೆಗೆ ನನ್ನ ಮತ್ತೊಬ್ಬ ಗುಜರಾತ್ ಮೂಲದ ಸಹೋದ್ಯೋಗಿಯೊಬ್ಬರು once for all, for good ಎಂದು ನಮ್ಮ ಕಂಪನಿಯಿಂದ ರಿಟೈರ್‌ಮೆಂಟ್ ಪ್ಯಾಕೇಜ್ ತೆಗೆದುಕೊಂಡು ತಮ್ಮ ತಂದೆಯ ಬಿಸಿನೆಸ್ಸ್ ನೋಡಿಕೊಳ್ಳುವುದಕ್ಕೋಸ್ಕರ ಭಾರತಕ್ಕೆ ಹೊರಡುವ ಸುದ್ದಿಯ ಹಿನ್ನೆಲೆಯಲ್ಲಿ ನಾವು ಮಾತನಾಡಿಕೊಳ್ಳುತ್ತಿದ್ದೆವು.

ನಾವು ಈ ಕಂಪನಿಯ ನೌಕರರಾಗಿ ಇಲ್ಲಿ ತೊಡಗಿಸುವ ಶ್ರಮವನ್ನೇ ನಮ್ಮ ನಮ್ಮ ಉದ್ಯಮದಲ್ಲಿ ತೊಡಗಿಸಿದ್ದೇ ಆದರೆ ಅದು ಖಂಡಿತವಾಗಿ ಮುಂದೆ ಬರುವುದುರಲ್ಲಿ ಸಂಶಯವಿಲ್ಲ, ಎಲ್ಲರೊಳಗೂ ಒಬ್ಬ ಆಂಟ್ರಪ್ರೀನರ್ (entrepreneur) ಇರುತ್ತಾನೆ, ಆ ಸುಪ್ತಾವಸ್ಥೆಯ ಮನಸ್ಥಿತಿಯನ್ನು ಜಾಗೃತಗೊಳಿಸಬೇಕಷ್ಟೇ ಎನ್ನುವುದು ನನ್ನ ಸಹೋದ್ಯೋಗಿಯ ವಾದ.

ಅದಕ್ಕೆ ಪ್ರತಿಯಾಗಿ, ಬಿಸಿನೆಸ್ಸ್ ಎಂದರೆ ಸುಮ್ಮನೇ ಆಗುತ್ತಾ, ಹತ್ತರಲ್ಲಿ ಒಂಭತ್ತು ಮುಳುಗುವ ಸಾಧ್ಯತೆಯೇ ಹೆಚ್ಚಿರುವಾಗ, ಎಲ್ಲೋ ಒಂದು nitch ಏರಿಯಾ ಹಿಡಿದುಕೊಂಡು ಅದನ್ನೇ ಹಗಲೂ-ರಾತ್ರಿ ಧ್ಯಾನಿಸಿ ಮೇಲೆ ತಂದು ಅದನ್ನು ಬೆಳೆಸುವುದು ಅಂದರೆ ಸುಮ್ಮನೆಯೇ? ಅದಕ್ಕೆ ಈಗ - ಈ ಪರಿಸ್ಥಿತಿ, ಕಾಲ, ಸಂದರ್ಭ - ಇವೆಲ್ಲ ತಕ್ಕುವೇನು? ಎನ್ನುವುದು ನನ್ನ ವಾದ.

ನಾವು ಮೊದಲಿನಿಂದಲೂ ಅಷ್ಟೇ, ದಕ್ಷಿಣ ಭಾರತೀಯರು. ಸರ್ಕಾರಿ ಕೆಲಸ ಸಿಗುವುದು ನಮ್ಮ ಮನೆತನಗಳಲ್ಲಿ ದೊಡ್ಡ ವಿಷಯ, ತಲ-ತಲಾಂತರದಿಂದ ಸರ್ಕಾರದ ಸೇವೆ ದೇವರ ಸೇವೆ ಎಂದು ಬೆಳೆದುಬಂದವರು ನಾವು. ಈ ಬಿಸಿನೆಸ್ಸ್ ಸ್ಯಾವಿ ಮನಸ್ಸು, ಅದರ ಒಳ-ಹೊರಗಿನ ಸೆನ್ಸಿಟಿವಿಟಿಗಳು ನಮಗೆ ತಿಳಿದವೇ? ನಮಗೆ ಒಂದು ಸಹಾಯ ಹಸ್ತವೂ ಇಲ್ಲದಿರುವಾಗ ಯಾವ ಪಾರ್ಟನರುಗಳನ್ನು ನೆಚ್ಚಿಕೊಂಡು ಏನನ್ನು ಸಾಧಿಸೋದು? ಬಿಸಿನೆಸ್ಸು ಎಂದರೆ ಯಾವ ರಂಗವನ್ನು ಆಯ್ದುಕೊಳ್ಳೋದು? ಅದರ ಮಾರ್ಕೆಟ್ ರಿಸರ್ಚ್ ಮಾಡುವವರು ಯಾರು? ಮಾಡುವುದು ಯಾವಾಗ? ಅದಕ್ಕೆ ತಕ್ಕ ಇನ್‌ವೆಸ್ಟ್‌ಮೆಂಟ್ ಎಲ್ಲಿಂದ ತರೋದು? ಕಷ್ಟಮರುಗಳು ಯಾರು? ಕಂಪನಿಯ ಧ್ಯೇಯ-ಧೋರಣೆಗಳೇನು? ಉತ್ಪಾದಿಸುವ ವಸ್ತು ಯಾವುದು? ಕೊಡುವ ಸೇವೆ ಏನು, ಇತ್ಯಾದಿ ಇತ್ಯಾದಿ...ಪುಂಖಾನುಪುಂಕ ಪ್ರಶ್ನೆಗಳು ಶುರುವಷ್ಟೇ ಇದು.

ಇದೇ ದಿನ ಮಧ್ಯಾಹ್ನ ಟೆಕ್ಸಾಸ್‌ ಮೂಲದ ಬಿಸಿನೆಸ್ಸ್ ಅನ್ನು ನಮ್ಮ ಕಂಪನಿಗೆ ಪರಿಚಯಿಸಲು ವಿಸಿಟರ್ರ್ ಒಬ್ಬರು ಬಂದಿದ್ದರು. ಅವರು ಭಾರತೀಯ ಮೂಲದವರು ಎಂದು ತಿಳಿದು ಆಶ್ಚರ್ಯದ ಜೊತೆ ಸಂತೋಷವೂ ಆಯಿತು. ಗಂಡ-ಹೆಂಡತಿ ಇಬ್ಬರು ಸೇರಿ ಅಮೇರಿಕದಲ್ಲಿ ಒಂದು ಕನ್ಸಲ್‌‍ಟಿಂಗ್ ಕಂಪನಿಯನ್ನು ತೆರೆದಿದ್ದಾರೆ, ಅದರ ಮಾರ್ಕೆಟಿಂಗ್‌ನಿಂದ ಹಿಡಿದು ಎಲ್ಲ ವಿಷಯವನ್ನೂ ಗಂಡ-ಹೆಂಡತಿಯೇ ನೋಡಿಕೊಳ್ಳುತ್ತಾರೆ ಎಂದು ತಿಳಿದು ಆಶ್ಚರ್ಯವಾಯಿತು. ೨೦೦೬ ರಲ್ಲಿ ಕೆಲಸ ಕಳೆದುಕೊಂಡ ಅವರು ಒಂದು ಹೊಸ ಕಂಪನಿಯನ್ನು ಹುಟ್ಟುಹಾಕಿ ಒಂದು ಮಟ್ಟಕ್ಕೆ ಬೆಳೆಸಿದ್ದು ಈ ಎಕಾನಮಿಯಲ್ಲಿ ಗಮನಾರ್ಹವೇ.

ಹೀಗೆ ಅಲ್ಲಲ್ಲಿ ಹಲವಾರು ಯಶಸ್ಸಿನ ಹಾಗೂ ಫೇಲಾದ ಉದ್ಯಮಗಳು ಕೇಳಿಬರುವುದು ಸಹಜ, ಆದರೆ ನನ್ನ ಮನಸ್ಸು ಮಾತ್ರ ಪೇ-ಚೆಕ್ ನಿಂದ ಪೇ-ಚೆಕ್‌ಗೆ ಅಂಟಿಕೊಂಡು ಬಿಟ್ಟಿದೆ. ರಿಸ್ಕ್ ತೆಗೆದುಕೊಳ್ಳುವುದಿರಲಿ, ಅದರ ಬಗ್ಗೆ ಯೋಚಿಸುವುದಕ್ಕೂ ಪುರುಸೊತ್ತು ಇಲ್ಲ ಎನ್ನುವಂತಾಗಿದೆ.

ನಿಮ್ಮ ನಿಮ್ಮ ಪರಿಸ್ಥಿತಿ ಏನು? ನೀವು ನಿಮ್ಮದೇ ಬಿಸಿನೆಸ್ಸ್ ಆರಂಭಿಸಿದ್ದೀರೋ ಅಥವಾ ಬೇರೆಯವರ ಬಿಸಿನೆಸ್ಸಿನಲ್ಲಿ ಒಂದಾಗಿ ಹೋಗಿದ್ದೀರೋ?

Sunday, November 01, 2009

ಅದುಮಿಕೊಂಡ ಆಸೆ-ಆತಂಕ

B&H ಪ್ರೊಫೆಷನಲ್ ಕ್ಯಾಟಲಾಗ್ ಇಟ್ಟುಕೊಂಡು ಒಂದೊಂದೇ ಕೆಟಗರಿಯನ್ನು ನೋಡುತ್ತಾ ಇದ್ದಂತೆಲ್ಲಾ ಏನೇನ್ನನ್ನೆಲ್ಲ ಮಾಡಬಹುದು ಮಾಡಬಹುದಿತ್ತು ಎನ್ನಿಸಿತು. ಪ್ರೊಫೆಷನ್ ಆಡಿಯೋ, ವಿಡಿಯೋ, ಆಪ್ಟಿಕಲ್, ಕಂಪ್ಯೂಟರ್, ಸ್ಟೋರೇಜ್, ಕ್ಯಾಮೆರಾ...ಹೀಗೆ ವಿಧ ವಿಧವಾದ ವಸ್ತುಗಳನ್ನೆಲ್ಲ ನೋಡುತ್ತಿದ್ದ ಹಾಗೆ, ಅಯ್ಯೋ ಅದನ್ನು ಮಾಡಬಹುದಿತ್ತು, ಇದನ್ನು ಮಾಡಬಹುದಿತ್ತು...ಎನ್ನಬಹುದಾದ ಆಸೆಗಳೆಲ್ಲವೂ ಅದೆಲ್ಲೋ ಅದುಮಿಟ್ಟು ಹೊರಗೆ ಬಿಟ್ಟ ಸ್ಪ್ರಿಂಗಿನಂತೆ ತಮ್ಮೊಳಗಿನ ಪ್ರಚನ್ನ ಶಕ್ತಿಯನ್ನು ತೋರ್ಪಡಿಸತೊಡಗಿದವು.

ಟರ್ಮಿನಲ್ ಕಾಯಿಲೆಗೊಳಗಾದ ಕ್ಯಾನ್ಸರ್ ರೋಗಿಯ ಮನದಾಳದ ಆಸೆಗಳಂತಲ್ಲದಿದ್ದರೂ ಪ್ರತಿಯೊಬ್ಬರಿಗೂ ಅವರವರೊಳಗೆ ಮೂಲೆಗುಂಪು ಮಾಡಿದ ಅದೆಷ್ಟೋ ಮನದಾಳದ ಆಮಿಷಗಳಿದ್ದಾವು: ಅದು ಫೋಟೋ ತೆಗೆಯುವ ಹವ್ಯಾಸವಾಗಿರಬಹುದು, ಚಿತ್ರಕಲೆಯಾಗಿರಬಹುದು, ಸಂಗೀತದ ಸಾಧನೆಯ ವಿಷಯವಾಗಿರಬಹುದು, ಪುಸ್ತಕ ಬರೆದು ಪ್ರಕಟಿಸುವ ಹುನ್ನಾರವಿರಬಹುದು, ನಾಟಕ-ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಇರಬಹುದು, ಮ್ಯಾರಥಾನ ಓಡುವ ಕನಸಿರಬಹುದು, ದೊಡ್ಡ ಉದ್ಯಮಿಯಾಗುವ ಬಯಕೆ ಇರಬಹುದು, ಅಥವಾ ಊರಿನ ಪಂಚಾಯತಿಯ ಮುಖಂಡನೋ ದೊಡ್ಡ ರಾಜಕೀಯ ವ್ಯಕ್ತಿಯೋ...ಇನ್ನೂ ಏನೇನೋ ಕನಸುಗಳಿರಬಹುದು.

ನಮಗೆಲ್ಲ ಹೀಗೆ ಒಂದೊಂದು ಸಾಫ್ಟ್ ಕಾರ್ನರ್ ಇದೆ, ನಮ್ಮ ದಿನನಿತ್ಯದ ಗೊಂದಲವನ್ನು ಬದಿಗಿಟ್ಟು ಯಾವುದಾದರೊಂದು ರಿಸಾರ್ಟ್‌ನ ಹಾಸುಗಲ್ಲಿನ ಮೇಲೆ (ಅಥವಾ ಬೆಂಚ್‌ನ ಮೇಲೆ) ಮಲಗಿ ಅಗಾಧವಾದ ಮುಗಿಲನ್ನು ನೋಡುತ್ತಾ ಆತ್ಮಾವಲೋಕನವನ್ನು ಮಾಡಿಕೊಳ್ಳುತ್ತಾ ಇದ್ದರೆ ಒಂದು ದಿನವೋ ಅಥವಾ ಒಂದು ವಾರದ ನಂತರವಾದರೂ ಹೀಗೆ ಮಾಡಬೇಕು ಅಥವಾ ಮಾಡಬಹುದಿತ್ತು ಎನ್ನುವ ಅನೇಕಾನೇಕ ಯೋಚನೆಗಳು ಖಂಡಿತ ಬಂದೇ ಬರುತ್ತವೆ. ಆಂತೊನಿ ಬೋರ್ಡೇನ್‌ನ ಟ್ರಾವೆಲ್ ಅನುಭವದ ಬಗ್ಗೆ ಬರೆಯುತ್ತಾ ಮರಳುಗಾಡು ನಮಗೆ ಹೇಗೆ ಅತಿ ಅಗತ್ಯವಾದ ಧ್ಯಾನಕ್ಕೆ ತಕ್ಕುನಾದ ನಿಶ್ಯಬ್ದವಾದ ಒಂದು ನೆಲೆಯನ್ನು ಒದಗಿಸುವ ಬಗ್ಗೆ ಬರೆದಿದ್ದೆ. ಒಂದಲ್ಲ ಒಂದು ದಿನ ನಮ್ಮ ನಮ್ಮ ಮನಸ್ಥಿತಿಯನ್ನು ಇಂತಹ ಒಂದು ಸೈಲೆನ್ಸ್‌ಗೆ ಗುರಿಮಾಡಿ ಅದರಿಂದ ಏನು ಹೊರಬಂದೀತು ಎಂದು ಕಾದು ನೋಡುವುದು ಒಳ್ಳೆಯ ಅನುಭವವಾದೀತು.

ನನ್ನ ಹತೋಟಿಯಲ್ಲಿದ್ದ ಒಂದು ಘಂಟೆಯ ಸಮಯದಲ್ಲಿ ಸುಮಾರು ಐನೂರು ಪುಟಗಳ ಕ್ಯಾಟಲಾಗ್ ಅನ್ನು ಸೆಕ್ಷನ್ನ್‌ ನಿಂದ ಸೆಕ್ಷನ್ನ್‌ಗೆ ತಿರುವಿ ಹಾಕಿದ್ದೇ ಬಂತು: ಅದರ ಪರಿಣಾಮವಾಗಿ ನನ್ನ ಕನಸಿನ ರೆಕಾರ್ಡಿಂಗ್ ಸ್ಟುಡಿಯೋಗೆ ಬೇಕಾದ ಪರಿಕರಗಳು ಕಂಡು ಬಂದವು, ಹೆಚ್ಚಿನ ಎಕ್ಸ್‌ಟರ್ನಲ್ ಕಂಪ್ಯೂಟರ್ ಸ್ಟೋರೇಜ್ ಕಾಣಿಸಿತು, ಹಗಲು-ರಾತ್ರಿ ನೋಡಬಹುದಾದ ಬೈನಾಕ್ಯುಲರ್ ಮನದಲ್ಲಿ ಒಂದು ಕ್ಷಣ ನಿಂತಿತು, ಎಲ್ಲಾ ಮ್ಯೂಸಿಕ್ ಚಾನೆಲ್ಲಿನ ಲವಲೇಶಗಳನ್ನೂ ಬಿಡಿಬಿಡಿಯಾಗಿ ಹೊರಗೆ ಹಾಕುವ ಸುಂದರ ಹೋಮ್ ಥಿಯೇಟರ್ ಸಿಸ್ಟಮ್ಮ್‌ಗಳು ಕಂಡು ಬಂದವು, ನೂರೈವತ್ತು-ಇನ್ನೂರು ವ್ಯಾಟ್ ಪವರ್ ಇರುವ ಸ್ಪೀಕರುಗಳು ಕಂಡುಬಂದವು...ಹೀಗೆ ಪಟ್ಟಿ ಬೆಳೆಯುತ್ತಲೇ ಹೋಯಿತು.

ಇನ್ನು ಈ ಎಕ್ಸ್‌ಪ್ಲೋರೇಷನ್ನಿನ್ನ ಮುಂದುವರಿದ ಭಾಗವಾಗಿ ಒಂದೆರಡು ಅಂಶಗಳ ಬಗ್ಗೆ ಇಂಟರ್ನೆಟ್ಟಿನಲ್ಲಿ ರಿಸರ್ಚ್ ಮಾಡಿದ್ದೂ ಆಯಿತು...ಒಂದು ಘಂಟೆಯ ನಂತರ ಪ್ರಚನ್ನ ಶಕ್ತಿಯ ಬಲದಿಂದಾಗಿ ಚಿಮ್ಮಿದ ಆಸೆ-ಆಕಾಂಕ್ಷೆಗಳು ಮತ್ತೆ ಗೂಡು ಸೇರಿಕೊಂಡವು. ಅದು ಮಾಡಬಹುದು-ಇದು ಮಾಡಬಹುದು ಎನ್ನುವ ಹೇಳಿಕೆಯ ಮೊದಲೇ ಅದು ಮಾಡಬೇಕು-ಇದು ಮಾಡಬೇಕು (ಭಾನುವಾರ ಮುಗಿಯುವುದರೊಳಗೆ) ಎನ್ನುವುದು ಬಲವಾಗತೊಡಗಿತು.

***
ಇಲ್ಲಿನ ಕಿರಾಣಿ ಅಂಗಡಿಯಲ್ಲಿ ನೋಡಿ-ಕೇಳಿದ್ದು: ಮಧ್ಯಮ ವಯಸ್ಸಿನ ಕಕೇಷಿಯನ್ ದಂಪತಿಗಳಿಬ್ಬರು ಅಂಗಡಿಯಲ್ಲಿ ಮಾರಟಕ್ಕೆ ಇಟ್ಟ ರಕ್ಕಸಕಳ್ಳಿಯನ್ನು (Aloe-vera) ನೋಡಿ:
"ಇದನ್ನು ಏತಕ್ಕೆ ಮತ್ತು ಹೇಗೆ ಬಳಸುತ್ತಾರೆಂದು ನಿನಗೆ ಗೊತ್ತೇನು?"
"ಇಲ್ಲ..."
"May be we will give it a shot in our next life..."

***
ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ಧಿಕ ಶುಭಾಶಯಗಳು!

Wednesday, October 28, 2009

ಇನ್‌ಫರ್‌ಮೇಷನ್ನ್ ಓವರ್‌ಲೋಡ್ ಅಂದ್ರೆ ಇದೇನಾ?

ರೇಡಿಯೋ ನ್ಯೂಸ್ ಆಗ್ಲಿ ಅಥವಾ ಬಿಸಿನೆಸ್ ನ್ಯೂಸ್‌ಗಳನ್ನ ಕೇಳ್ತಾ ಹೋದ್ರೆ, ಅಲ್ಲಿ-ಇಲ್ಲಿ ಓದ್ತಾ ಇದ್ರೆ ತುಂಬಾ ತಲೆ ತಿಂತಾರೆ ಅನ್ಸಿದ್ದು ಇತ್ತೀಚೆಗೆ. ಬಹಳಷ್ಟು ಇನ್‌ಫರ್‌ಮೇಷನ್ ಓವರ್‌ಲೋಡ್, ಜೊತೆಗೆ ಸಾವಿರಾರು ಅನಾಲಿಸಿಸ್ಸುಗಳು ರಿಪೋರ್ಟುಗಳು ಇತ್ಯಾದಿ. ಅಬ್ಬಾ, ಸಾಕಪ್ಪಾ ಸಾಕು ಅನ್ಸೋ ಮಟ್ಟಿಗೆ ಒಮ್ಮೊಮ್ಮೆ.

ಯಾವ್ದೇ ಬಿಸಿನೆಸ್ ಚಾನೆಲ್ಲನ್ನ ಹಾಕಿ ನೋಡಿ ಅಲ್ಲಿನ ರಿಪೋರ್ಟರುಗಳು, ಮಾಡರೇಟರುಗಳು ಎಲ್ಲರೂ ತಾರಕ ಸ್ವರದಲ್ಲಿ ಕಿರುಚಿಕೊಳ್ತಾರೇನೋ ಅನ್ನೋ ಮಟ್ಟಿಗೆ ಉದ್ರಿಕ್ತರಾಗಿರ್ತಾರೆ. ಜೊತೆಗೆ ಉನ್ನತ ತಂತ್ರಜ್ಞಾನದ ಸಹಾಯದಿಂದ ಟಿವಿ ಸ್ಕ್ರೀನಿನ ತುಂಬಾ ಎಷ್ಟೊಂದು ಬಾರ್ಕರ್ ಮೆಸ್ಸೇಜುಗಳು, ವಿಡಿಯೋಗಳಲ್ಲೇ ವಿಡಿಯೋಗಳು, ಬ್ಯಾನರುಗಳು, ಗ್ರಾಫ್, ನಂಬರುಗಳು, ಹಲವಾರು ಕಮಾಡಿಟಿಗಳು ಅವುಗಳ ಬೆಲೆಯಲ್ಲಿನ ನಿರಂತರ ಬದಲಾವಣೆಯನ್ನು ನಿಖರವಾಗಿ ತೋರಿಸಿ ಅಳೆಯೋ ಸೂಚಕಗಳು, ಹೀಗೆ ಹಲವಾರು ರೀತಿಯ "ಕಣ್ಸೆಳೆಯುವ" ವಿಧಿವಿಧಾನಗಳು.

ಟಿವಿ ಸ್ಟೇಷನ್ನುಗಳಿಗೆ ಒಮ್ಮೆ ಅಲ್ಲಿಗೆ ಬಂದ ವೀಕ್ಷಕರನ್ನು ಕಟ್ಟಿ ಹಾಕುವ ಚಿಂತೆ. ರಿಪೋರ್ಟರುಗಳಿಗೆ ತಮ್ಮ ಅನಾಲಿಸಿಸ್ಸೇ ದೊಡ್ಡದು ಎಂದು ತೋರಿಸಿಕೊಳ್ಳುವ ಹಂಬಲ. ಜೊತೆಗೆ ಅವರು ತೋರಿಸೋ ಸಂದೇಶಗಳ ಹಿಂದೆ ಸ್ಮಾಲ್ ಪ್ರಿಂಟು. "ನಾವು ನಾಳೆಯನ್ನು ಕಂಡಿಲ್ಲ" ಎನ್ನುವ ಸೂಚನೆಯ ಜೊತೆಗೇ "ನಮ್ಮ ಚಿಂತನೆ ನಾಳೆಯ ಪ್ರತಿರೂಪ" ಎನ್ನುವ ಅಹವಾಲು! ಈ ಅಹವಾಲು, ಕೋರಿಕೆ, ಸಂದೇಶ, ಚಿಂತನೆ ಇವೆಲ್ಲ ನೋಡುಗರ ಮುಂದೆ ದೊಡ್ಡ ಜನರ ಸಂತೆಯಂತೆ ಕಂಡೂ ಅವುಗಳಲ್ಲಿ ಕೆಲವೇ ಕೆಲವು ಒಬ್ಬೊಬ್ಬರಿಗೆ ಲಾಂಗ್‌ಟರ್ಮ್ ಇಂಡಿಕೇಟರ್ ಆಗಬಲ್ಲ ಹುನ್ನಾರ ಅಷ್ಟೇ, ಅದೂ ಏಕೆ - ತೋರಿಸಿದ್ದನ್ನೇ ತೋರಿಸ್ತಾ ಇದ್ರೆ ಇವತ್ತಲ್ಲ ನಾಳೆ ಜನಗಳು ನಂಬಿಯಾರು ಎನ್ನುವ ದೂರಾಲೋಚನೆ.

ಇವುಗಳ ಮಧ್ಯೆ ಹೇಗೆ ಬದುಕೋದು. ಎಲ್ಲದರ ಹತ್ತಿರ ಇದ್ದೂ ದೂರ ಹೇಗೆ ಇರೋದು? ಯಾವೊಂದು ಮಾಧ್ಯಮಕ್ಕೆ ಅಂಟಿಕೊಳ್ಳದೇ ನಮ್ಮ ನಮ್ಮ ರಿಟೈರ್‌ಮೆಂಟ್ ಆಗಲಿ ಹಣಕಾಸಿನ ವಿಚಾರಗಳಲ್ಲಿ ಹುಷಾರಾಗಿರೋದು ಹೇಗೆ? ಯಾರನ್ನ ನಂಬೋದು ಯಾರನ್ನ ಬಿಡೋದು? ಇನ್‌ಫರ್‌ಮೇಷನ್ನ್ ಓವರ್‌ಲೋಡ್ ಅಂದ್ರೆ ಇದೇನಾ?

ಈ ಅನುಭವಗಳ ಮಿತಿಯ ಬಗ್ಗೆ ಹಿಂದೆ ಬರೆದಿದ್ದೆ - ಊರು ಕೊಳ್ಳೆ ಹೊಡೆದ ಮೇಲೆ ದೊಡ್ಡಿ ಬಾಗಿಲು ಮುಚ್ಚಿದ್ರಂತೆ ಹಾಗಾಯ್ತು. ಕಳೆದ ಎರಡು ವರ್ಷಗಳಲ್ಲಿ ಮಾರ್ಕೆಟ್ಟಿನಲ್ಲಿ ಹಣ ಕಳೆದುಕೊಂಡವರ ಸಂಖ್ಯೆ ಹೆಚ್ಚು, ಈಗ ಹಿಂತಿರುಗಿ ನೋಡಿದ್ರೆ ’ಅಯ್ಯೋ, ನಮಗೇಕೆ ಈ ವಿಷಯ ಹೊಳೆದಿರಲಿಲ್ಲ!’ ಅನ್ಸತ್ತೆ. ಹಣ ಕಳೆದುಕೊಂಡು ಚೆನ್ನಾಗಿ ಪಾಠ ಕಲಿತ ಮೇಲೆ, ಅದನ್ನು ಇಂಪ್ಲಿಮೆಂಟ್ ಮಾಡೋವಾಗ ಇನ್ನೊಂದು ಹತ್ತು ವರ್ಷ ಹಿಡಿಯುತ್ತೆ, ಅಷ್ಟರೊಳಗೆ ಮತ್ತೊಂದು ಏರಿಳಿತದ ಸೈಕಲ್ಲ್ ಬಂದಿರುತ್ತೆ. ಹೀಗೆ ಕಲಿತ ಪಾಠ ಹಳೆಯದಾಗುತ್ತಲೇ ಇರುತ್ತೆ.

ನೀವೆಲ್ಲ ಯಾವ ಯಾವ ಮಾಧ್ಯಮಗಳಿಗೆ ಗಂಟು ಬಿದ್ದುಕೊಂಡಿದ್ದೀರಿ? ನಿಮಗೆ ಯಾವ ಮಾಹಿತಿ ಯಾವ ರೂಪದಲ್ಲಿ ಯಾವುದರಿಂದ ದೊರಕುತ್ತೆ? ಅಥವಾ ನೀವೆಲ್ಲರೂ ನನ್ನ ಹಾಗೆ ಓವರ್‌ಲೋಡ್‌ನಿಂದ ಒತ್ತಡದಲ್ಲಿ ಸಿಲುಕಿಕೊಂಡಿದ್ದೀರೋ?

Thursday, October 01, 2009

ಕ್ರಿಕೆಟ್ ಕ್ಯಾಪ್ಟನ್ ಕಲಿತ ಪಾಠ

ಒಮ್ಮೆ ನಮ್ಮ ಹೈ ಸ್ಕೂಲು ವಿದ್ಯಾರ್ಥಿಗಳಲ್ಲೇ ಎರಡು ತಂಡಗಳನ್ನು ಮಾಡಿ ಒಂದು ಕ್ರಿಕೆಟ್ ಮ್ಯಾಚ್ ನಡೆಸುವ ಇರಾದೆ ನಮ್ಮ ಪಿ.ಇ. ಮೇಷ್ಟ್ರಿಗೆ ಇದ್ದಿತ್ತು. ಕ್ರಿಕೆಟ್ ಟೀಮಿನ ಮುಖ್ಯಸ್ಥನಾಗಿ ಆ ಜವಾಬ್ದಾರಿ ನನಗೇ ಬಂತು. ಆಸಕ್ತಿ ಇದ್ದ ಸಹಪಾಠಿಗಳನ್ನು ಸೇರಿಸಿಕೊಂಡು, ಅವರೆಲ್ಲರಿಂದ ಒಂದೊಂದು ರುಪಾಯಿ ಶುಲ್ಕ ವಸೂಲು ಮಾಡಿಕೊಂಡು ಕೊನೆಗೆ ಎರಡು ತಂಡಗಳನ್ನಾಗಿ ಮಾಡುವಾಗ ಆ ವಯಸ್ಸಿಗೆ ಅದು ದೊಡ್ಡ ಕೆಲಸವಾಗಿರಬೇಕು. ಈ ಎರಡು ತಂಡಗಳಲ್ಲಿ ಒಂದಕ್ಕೆ ನಾನು ಕ್ಯಾಪ್ಟನ್, ಮತ್ತೊಂದಕ್ಕೆ ನನ್ನ ಸಹಪಾಠಿಯೊಬ್ಬ. ಕೊನೆಯಲ್ಲಿ ಮ್ಯಾಚ್ ದಿನ ಹತ್ತಿರ ಬಂದಾಗ ಅದೂ ನಮ್ಮ ತಂಡ ಫೀಲ್ಡಿಂಗ್ ಮಾಡುತ್ತಿದ್ದ ಸಮಯದಲ್ಲಿ ಅಂಪೈರ್ ಒಂದು ಫೌಲ್ ಕಾಲ್ ಕೊಟ್ಟರು. ಆ ಸಮಯದಲ್ಲಿ ಎಣಿಸಲಾಗಿ ಫೀಲ್ಡಿಂಗ್ ಮಾಡುತ್ತಿದ್ದವರಲ್ಲಿ ಬೌಲರ್ ಕೀಪರ್ ಎಲ್ಲರನ್ನೂ ಸೇರಿಸಿಕೊಂಡು ಹದಿನಾಲ್ಕು ಜನ ಫೀಲ್ಡಿಂಗ್ ಮಾಡುತ್ತಿದ್ದೆವು, ಆದರೆ ನಿಯಮದ ಪ್ರಕಾರ ಹನ್ನೊಂದು ಜನ ಮಾತ್ರ ಫೀಲ್ಡಿಂಗ್ ಮಾಡಬೇಕಿತ್ತು.

ಆಗ ಅದು ದೊಡ್ಡ ಪ್ರಮಾದ, ಮ್ಯಾಚ್ ಸಂಬಂಧ ಅದಕ್ಕೆ ತಕ್ಕ ಬೆಲೆಯನ್ನು ನಾನು ತೆರಬೇಕಾಯ್ತು, ಜೊತೆಗೆ ನನ್ನ ಸಹಪಾಠಿಗಳ ಎದುರಿಗೆ ಹಾಗೆ ಅವರ ಎದುರಲ್ಲಿ ತಂಡವನ್ನು ಸರಿಯಾಗಿ ಮ್ಯಾನೇಜ್ ಮಾಡದಿದ್ದುದಕ್ಕೆ ಅಪಹಾಸ್ಯಕ್ಕೂ ಗುರಿಯಾಗಬೇಕಾಗಿ ಬಂತು. ನಾವೆಲ್ಲ ಇಲ್ಲಿಗೆ ಬಂದು ಕನ್ನಡ ಟಿವಿ ಸೀರಿಯಲ್ಲ್ ನಲ್ಲಿ ನೋಡಿದ ಹಾಗೆ ಅಲ್ಲಿನವರಿಗೆ (ಅಂದರೆ ಭಾರತದಲ್ಲಿ) ಈತರಹದ ಸಣ್ಣ-ಪುಟ್ಟ ಘಟನೆಗಳು ಬಹಳ ದೊಡ್ಡವಾಗಿ ಹೋಗುತ್ತವೆ, ಸಹಪಾಠಿಗಳೊಡನೆ, ನೆರೆಹೊರೆಯವರೊಂದಿಗೆ ಮಾನ-ಮರ್ಯಾದೆಯ ಪ್ರಶ್ನೆಯಾಗಿ ಬಿಡುತ್ತದೆ. ನನಗೂ ಅಂದು ಹಾಗಿದ್ದರಿಂದಲೇ ಎರಡು ದಶಕಗಳ ನಂತರ ಇವತ್ತಿಗೂ ಅದು ನನ್ನ ಸ್ಮರಣಪಠಲದಲ್ಲಿರೋದು ಅಂದರೆ ತಪ್ಪೇನಿಲ್ಲ.

ಆದದ್ದಿಷ್ಟೇ: ಯಾರು ಯಾರು ಕ್ರಿಕೇಟ್ ತಂಡಕ್ಕೆ ಸೇರಿಕೊಳ್ಳಬೇಕು ಎಂದುಕೊಂಡಿದ್ದರೋ ಅವರೆಲ್ಲ ಒಂದೊಂದು ರುಪಾಯಿ ಸಲ್ಲಿಸಿ ತಮ್ಮ ಹೆಸರನ್ನು ನನ್ನ ಬಳಿ ಬರೆಸಿಕೊಂಡಿದ್ದರು. ಟೀಮಿಗೆ ಹನ್ನೊಂದು ಜನ, ಒಂದಿಬ್ಬರು ಬ್ಯಾಕ್‌ಅಪ್ ಜನರನ್ನು ಬಿಟ್ಟರೆ ಉಳಿದವರಿಗೆ ಆಡಲು ಅವಕಾಶ ಸಿಗುವ ಸಾಧ್ಯತೆ ಕಡಿಮೆ ಇರುವಾಗ ಉತ್ಸಾಹಿ ಸಹಪಾಠಿಗಳ ಪಟ್ಟಿಯನ್ನು ಕಂಟ್ರೋಲ್ ಮಾಡಿ ಅವರೆಲ್ಲರಿಗೂ ಇತಿ-ಮಿತಿ ಹಾಗೂ ಅವರು ಆಟದಲ್ಲಿ ಆಡುವ ಅವಕಾಶ ಹಾಗೂ ನಾವು ಗೆಲ್ಲುವ ಸಾಧ್ಯತೆಗಳ ಬಗ್ಗೆ ತಿಳಿಸಿ ಹೇಳಬೇಕಾಗಿತ್ತು. ಜೊತೆಗೆ ಅಗತ್ಯಕ್ಕಿಂತ ಹೆಚ್ಚಿನ ಜನ ಆಸಕ್ತಿ ತೋರಿಸಿದಾಗ ಯಾರು ಯಾರು ತಂಡಲಿದ್ದಾರೆ, ಯಾರಿಲ್ಲ ಎನ್ನುವುದನ್ನು ಸರಿಯಾಗಿ ಬಿಡಿಸಿ ಹೇಳಬೇಕಾಗಿತ್ತು ಹಾಗೂ ಟೀಮುಗಳಲ್ಲಿ ಸೆಲೆಕ್ಟ್ ಆಗದವರ ಹಣವನ್ನು ಹಿಂತಿರುಗಿಸಿ ಕೊಡಬೇಕಾಗಿತ್ತು. ಇದೆಲ್ಲವನ್ನು ನಾನು ಮಾಡಬೇಕಿತ್ತೋ, ನಮ್ಮ ಮೇಷ್ಟ್ರು ಮಾಡಬೇಕಿತ್ತೋ ಅನ್ನುವುದು ಅಷ್ಟೊಂದು ಸರಿಯಾಗಿ ನೆನಪಿಲ್ಲ. ಆದರೆ ಇವೆಲ್ಲಕ್ಕೂ ನನ್ನ ಹೊಣೆಗಾರಿಕೆಯನ್ನು ಗುರುತಿಸಿಕೊಂಡು ಅಂದು ಕಲಿತದ್ದನ್ನು ನಾನು ಯಾವತ್ತೂ ಮರೆಯಲಾರದ ಪಾಠ ಎಂದೇ ನಾನು ಈ ಘಟನೆಯನ್ನು ಗುರುತಿಸಿಕೊಳ್ಳೋದು.

ಈಗ ನನಗಿರುವ ಕೆಲಸದ ಚೌಕಟ್ಟಿನಲ್ಲಿ ಪ್ರತಿದಿನವೂ ಮಾತನಾಡುತ್ತೇವೆ - ಅವೇ ರೆಸ್ಪಾನ್ಸಿಬಿಲಿಟಿ, ಅಕೌಂಟೆಬಿಲಿಟಿ, ಲೀಡರ್‌ಶಿಪ್, ಇನಿಷಿಯೇಟಿವ್ - ಮೊದಲಾದ ಪದಗಳು ಪುಂಖಾನುಪುಂಖವಾಗಿ ಬಳಕೆಯಾಗುತ್ತವೆ. ಒಂದು ವ್ಯವಸ್ಥೆಯ ಅಡಿಯಲ್ಲಿ ಕೆಲಸ ಮಾಡುವಾಗ ಒಂದು ಸಂಸ್ಕೃತಿಯ ಚೌಕಟ್ಟಿನಲ್ಲಿ ದುಡಿಯುವಾಗ ನಾವು ಅಂದುಕೊಂಡಂತೆ ಮಾಡುವುದಕ್ಕಿಂತ ಇತರರ ಗವರ್ನೆನ್ಸ್‌ಗೆ ನಮ್ಮನ್ನು ಒಳಪಡಿಸಿಕೊಳ್ಳುತ್ತೇವೆ. ಈ ವಿಚಾರಗಳನ್ನು ನಾವು ನಮ್ಮ ಮುಖ್ಯ ಕೆಲಸಕ್ಕೂ ಹಾಗೂ ವಾಲೆಂಟಿಯರ್ ಆಗಿ ಮಾಡುವ ಕೆಲಸಗಳಿಗೂ ಅನ್ವಯಿಸಬಹುದು. ಉದಾಹರಣೆಗೆ ಯಾವುದೋ ಒಂದು ಕಮಿಟಿಯನ್ನು ಹುಟ್ಟು ಹಾಕಬೇಕಾಗಿ ಬಂದಿದೆಯೆಂದುಕೊಳ್ಳಿ, ಯಾರನ್ನು ಆಯ್ದುಕೊಳ್ಳುತ್ತೀರಿ, ಮತ್ತು ಏಕೆ? ಹೀಗಿರುವ ಆಯ್ಕೆಯ ಹಿಂದಿರುವ ರೂಪುರೇಶೆಗಳೇನು? ಯಾವ ನಿಯಮಗಳ ಅಡಿಯಲ್ಲಿ ಇವು ನಡೆಯುತ್ತವೆ? ಯಾವುದಾದರೂ ಇನ್‌ಫ್ಲುಯೆನ್ಸ್‌ಗೆ ಒಳಗಾಗುತ್ತೀರೋ, ಅಥವಾ ಅವುಗಳಿಂದ ಹೇಗೆ ದೂರವಿರಲು ಪ್ರಯತ್ನಿಸುತ್ತೀರಿ? ನಿಮ್ಮಲ್ಲೇ ಮನೆ ಮಾಡಿಕೊಂಡಿರುವ ಸ್ಟೀರಿಯೋಟೈಪ್‌ಗಳು ನೀವು ಕೈಗೊಂಡ ನಿರ್ಧಾರಗಳ ಮೇಲೆ ಯಾವ ಪರಿಣಾಮ ಬೀರುತ್ತವೆ? ಇತ್ಯಾದಿ.

ನಾವು ಅಂದು ಬಡ ಹೈ ಸ್ಕೂಲುಗಳಲ್ಲಿ ಓದುತ್ತಿದ್ದೆವು, ಸಾರ್ವಜನಿಕ ಹೈ ಸ್ಕೂಲುಗಳ ಪರಿಸ್ಥಿತಿಯಲ್ಲಿ ಎಲ್ಲ ರೀತಿಯ ಸಂಪನ್ಮೂಲಗಳಿಗೂ ಕೊರತೆ ಇತ್ತು. ಅಂದು ಯಾರಾದರೊಬ್ಬರು ತಂಡವನ್ನು ನಿರ್ಮಿಸುವ ಸೂಕ್ಷತೆಗಳ ಬಗ್ಗೆ ತಿಳಿಸಿ ಹೇಳಿದ್ದರೆ ಅಥವಾ ನಾನು ಹೈ ಸ್ಕೂಲು ಕ್ರಿಕೆಟ್ ತಂಡ ಸದಸ್ಯರನ್ನು ಗುರುತಿಸಿ ಆಯ್ಕೆ ಮಾಡುವಾಗ ಮಾರ್ಗದರ್ಶನ ನೀಡಿದ್ದರೆ...ಹೀಗೆ ಅನೇಕ ’ರೆ’ಗಳನ್ನು ಇಂದು ಯೋಚಿಸಿಕೊಂಡು ನಗು ಬರುತ್ತದೆ. ಒಂದಂತೂ ನಿಜ, ಲೀಡರ್‌ಶಿಪ್, ಮ್ಯಾನೇಜ್‌ಮೆಂಟ್, ಆರ್ಗನೈಜೇಶನ್ ಮೊದಲಾದ ಸಮೂಹ ಸಂಬಂಧಿ ಪ್ರಕ್ರಿಯೆಗಳು ಅಮೇರಿಕಕ್ಕೆ ಮಾತ್ರ ಸೀಮಿತವಾಗಿಲ್ಲ ಅಲ್ಲದೇ ಅವು ಸಂಪನ್ಮೂಲಗಳು ಇದ್ದಲ್ಲಿ ಮಾತ್ರ ಹುಟ್ಟಿ ಬೆಳೆಯಬೇಕೆಂದೇನೂ ಇಲ್ಲ. ಎಲ್ಲರಿಗೂ ಅವರ ಜೀವನಕ್ರಮಕ್ಕನುಸಾರವಾಗಿ ಅವರ ಸವಾಲುಗಳನ್ನು ಸಿಕ್ಕೇ ಸಿಗುತ್ತವೆ, ಅವುಗಳನ್ನು ಹೇಗೆ ನಿಭಾಯಿಸಬಲ್ಲೆವು ಎಂಬುದರ ಹಾಸುಹೊಕ್ಕಾಗಿ ಇರುವುದೇ ಅವರವರ ಶಕ್ತಿ. ನಮಗೆ ಜೀವನದಲ್ಲಿ ಎದುರಾಗುವ ಬದಲಾವಣೆಗಳನ್ನೇ ನಾವು ಅವಲೋಕಿಸುತ್ತಾ ಬಂದರೆ ಒಂದು ನಿರ್ಣಯವನ್ನು ಅನೇಕ ಮಜಲುಗಳಲ್ಲಿ ಹೇಗೆ ನೋಡಬಹುದೋ ಹಾಗೇ ನಮಗೆ ವಹಿಸಿದ ಕೆಲಸಗಳ ಫಲಿತಾಂಶ ಕೂಡಾ.

ಪ್ರಾಕ್ಟಿಕಲ್ಲಾಗಿ ಆಲೋಚಿಸಬೇಕು ಮತ್ತು ಹಾಗೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎನ್ನುವುದು ಒಂದು ಕಡೆ, ಅದಕ್ಕೆ ವಿರುದ್ಧವಾಗಿ ಎಮೋಷನಲ್ಲಾಗಿ ಯೋಚಿಸಿ ಇನ್ಯಾವುದೋ ಮಾನದಂಡಗಳಿಗೆ ಒಳಪಟ್ಟೋ ಪಡೆದೆಯೋ ನಾವು ನಡೆಸಿಕೊಂಡು ಬರುವ ಕೆಲಸ ಕಾರ್ಯಗಳು ಹಾಗೂ ಅವುಗಳ ದೂರದ ಪರಿಣಾಮಗಳು ಮತ್ತೊಂದು ಕಡೆ.

Tuesday, September 29, 2009

(ಕುರುಚಲು ಗಡ್ಡ, ಓಡುವ ಮೋಡ ಹಾಗೂ) ಆಲೋಚನೆಗಳು

ಈ ಆಲೋಚನೆಗಳೇ ಹಾಗೆ ಕೆಲವೊಮ್ಮೆ ತಂಡೋಪತಂಡವಾಗಿ ಸರಣಿಗಳಲ್ಲಿ ಬಂದು ಮುತ್ತಿಗೆ ಹಾಕಿ ಬಿಡುತ್ತವೆ, ತಿಳಿಯಾದ ಕೊಳವನ್ನು ಕಲಕಿ ರಾಡಿಯನ್ನು ಮೆಲಕೆತ್ತಿದ ಹಾಗೆ ಹಳೆಯದೆಲ್ಲ ಮೇಲಕ್ಕೆದ್ದು ಕೇಂದ್ರೀಕೃತ ಅಲೆಗಳ ಹಿಂಡು ದಡವನ್ನು ಅಪ್ಪಳಿಸುವಂತೆ ಕಣ್ಣು ಮುಚ್ಚಿ ಬಿಡುವುದರೊಳಗೆ ಏನೇನೋ ಅಗಿ ಹೋಗುತ್ತದೆ. ಈ ಮನಸೆಂಬ ಮರ್ಕಟ ಹಾರಿ ಬಂದ ಮರಗಳ ರೆಂಬೆ-ಕೊಂಬೆಗಳಿಗೆ ಹೇಗೆ ಕೊನೆಯಿಲ್ಲವೋ ಹಾಗೆ ಆಲೋಚನೆಗಳ ದಂಡು.

ಈ ಆಲೋಚನೆಗಳಿಗೂ ಓಡುವ ಮೋಡಗಳಿಗೂ ಏನು ಸಂಬಂಧ? ಈ ಆಲೋಚನೆಗಳಿಗೂ ಕುರುಚಲು ಗಡ್ಡಕ್ಕೂ ಏನು ನಂಟು? ಎಂದು ಯೋಚಿಸಿಕೊಂಡಂತೆಲ್ಲ ಮೇಲ್ಮಟ್ಟದಲ್ಲಿ ಗೋಕುಲಾಶ್ಠಮಿ-ಇಮಾಮ್ ಸಾಬಿಗಳಂತೆ ಕಂಡುಬಂದರೂ ಒಳಗೊಳಗೆ ಅವುಗಳ ಅರ್ಥಬದ್ಧ ಬಾಂಧವ್ಯದ ಬಗ್ಗೆ ನನಗೆ ತಿಳಿದದ್ದು ಇತ್ತೀಚೆಗಷ್ಟೇ. ಈ ಆಳವಾಗಿ ಆಲೋಚಿಸುವ ಕೆಲವರು ಮುಗಿಲನ್ನು ಎವೆಯಿಕ್ಕದೆ ದಿಟ್ಟಿಸುವುದನ್ನು ನೀವು ಗಮನಿಸಿರಬಹುದು. ಹೌದು, ಈ ಆಳವಾದ ದೃಷ್ಟಿಯೇ ಮುಗಿಲಿನ ಹಂದರದಲ್ಲಿ ಹರವಿಕೊಂಡ ಆ ಮೋಡಗಳಲ್ಲಿ ಚಲನಶಕ್ತಿಯನ್ನು ಕುದುರಿಸೋದು. ಹಾಗೇ ಆಲೋಚನೆಯಲ್ಲಿ ಮುಳುಗಿದವರು ಗದ್ದಕ್ಕೆ ಕೈಯಿಟ್ಟು ಯೋಚನೆ ಮಾಡಿದಂತೆಲ್ಲ ನುಣುಪಾದ ಅಂಗೈ ಹಾಗೂ ಕೆನ್ನೆಯ ನಡುವೆ ಘರ್ಷಣೆ ಹುಟ್ಟುವ ಹೊತ್ತಿನಲ್ಲಿ ಕೈ ಜಾರದಂತೆ ಜೀವವಿಕಾಸ ಸೃಷ್ಟಿಸಿದ ವಿಸ್ಮಯಗಳಲ್ಲಿ ಕುರುಚಲು ಗಡ್ಡವೂ ಒಂದು!

ಆಲೋಚನೆಗಳನ್ನು ಮಾಡಿ ತಲೆ ಕೆಡಿಸಿಕೊಂಡವರೇ ಹೆಚ್ಚು, ಉದ್ದಾರವಾದವರು ಯಾರು ಎಂದು ಅಲ್ಲಗಳೆಯಬೇಡಿ, ಹೆಚ್ಚು ಆಲೋಚನೆ ಮಾಡಿದವರೇ ದೊಡ್ಡ ಮನುಷ್ಯರು, ಅವರವರ ಆಲೋಚನೆಗಳ ಆಳ ಅವರವರ ಚಿಂತನಶೀಲತೆಯ ಪ್ರತೀಕ ಎಂದರೆ ತಪ್ಪೇನು ಇಲ್ಲ. ಆದರೆ ಆಲೋಚನೆ, ಕೊರಗು, ಚಿಂತೆ ಹಾಗೂ ಚಿಂತನೆಗಳಲ್ಲಿ ಬೇಕಾದಷ್ಟು ವ್ಯತ್ಯಾಸಗಳಿವೆ. ನನ್ನ ಪ್ರಕಾರ ಆಲೋಚನೆ ತನ್ನ ಪ್ರಭೇದದ ಇತರ ಸೋದರರಾದ ಕೊರಗು-ಮರುಗು-ಚಿಂತೆ-ಚಿಂತನೆಗಳಿಗಿಂತ ಸ್ವಲ್ಪ ಭಿನ್ನ ಹಾಗೂ ತನ್ನಷ್ಟಕ್ಕೆ ತಾನು ಒಂದು ಅಮೋಘವಾದ ಸಾಮ್ರಾಜ್ಯವನ್ನು ಸೃಷ್ಟಿಸಿಕೊಂಡ ಧೀರ ಬೇರೆ. ಆಲೋಚನೆಗೆ ಯಾವುದೇ ವಿಷಯ-ವಸ್ತುವೆಂಬುದಿಲ್ಲ, ಎಂದು ಇತರರ ಜೊತೆ ಬೆಳೆದು ಸಮಾಲೋಚನೆಯಾಗಬಹುದು, ಅಥವಾ ತನ್ನ ದೂರದ ಮಟ್ಟಕ್ಕೆ ದೂರಾಲೋಚನೆಯಾಗಬಹುದು, ಕೆಟ್ಟ ವಸ್ತುಗಳಿದ್ದರೆ (ಕೆಟ್ಟದು ಎಂಬುದು ಸಾಪೇಕ್ಷವಾದುದು) ದುರಾಲೋಚನೆಯೂ ಆಗಬಹುದು. ಆಲೋಚನೆ ಎನ್ನುವುದು ತನ್ನಷ್ಟಕ್ಕೆ ತಾನು ಇದ್ದರಿರಬಹುದು ಅಥವಾ ಅದು ಉಳಿದವರ ಜೊತೆ ಸೇರಿ ಒಂದು ಸಿದ್ಧಾಂತವಾಗಬಹುದು. ಒಟ್ಟಿನಲ್ಲಿ ಆಲೋಚನೆ ಎನ್ನುವುದು ನೀರಿದ್ದ ಹಾಗೆ, ಅದು ತನ್ನಷ್ಟಕ್ಕೆ ತಾನು ಯಾವುದೇ ಆಕಾರ, ಗಾತ್ರ, ಬಣ್ಣ, ವಾಸನೆ, ಗಡಿರೇಖೆಗಳಿಗೆ ಒಳಪಡದ ಒಂದು ರೀತಿಯ ಎಲ್ಲವನ್ನು ತ್ಯಜಿಸಿದ ಸಂತನ ಮನಸ್ಥಿತಿಯನ್ನು ಪ್ರತಿಬಿಂಬಿಸುವುದರ ಜೊತೆ ಜೊತೆಗೆ ತಾನು ಇದ್ದ ಯಾವುದೇ ಒಂದು ವಸ್ತುವಿನ ರೂಪರೇಶೆಗಳನ್ನು ದಿಢೀರನೆ ಪಡೆದುಕೊಂಡುಬಿಡಬಲ್ಲದು.

ಒಟ್ಟಿನಲ್ಲಿ ಈ ಆಲೋಚನೆಯ ಪರಿ ಭಿನ್ನ. ನನ್ನ ಮನಸ್ಸಿನಲ್ಲಿ ಬರುವ ಆಲೋಚನೆಗಳ ಮಹಾಪೂರವನ್ನು ನೋಡಿ ಕೆಲವೊಮ್ಮೆ ಈ ಪರಿಯ ಸೊಬಗ ಇನ್ಯಾವ ಮನಸ್ಥಿತಿಯಲೂ ಕಾಣೆ ಎಂದು ಹಾಡಿಕೊಂಡಿದ್ದಿದೆ. ಈ ಆಲೋಚನೆಗಳೆಂಬುವುದಕ್ಕೆ ಮಿತಿಯಂತೂ ಇಲ್ಲವೇ ಇಲ್ಲ - ಅದರಲ್ಲಿ ಬಿಳಿ-ಕಪ್ಪಿದೆ, ಕೆಟ್ಟದ್ದು-ಒಳ್ಳೆಯದಿದೆ, ಸಂಭ್ರಮ-ಸಂಗಮಗಳಿವೆ, ನೋವು-ನಲಿವಿದೆ, ಹೀಗೆ ಅನೇಕಾನೇಕ ಪರ-ವಿರೋಧಗಳನ್ನು ತನ್ನೊಡಲಿನಲ್ಲಿ ಹರವಿಕೊಂಡ ಅಲೋಚನೆಗಳ ದಿಬ್ಬಣವನ್ನು ನಾನು ನಮ್ಮೂರ ಜಾತ್ರೆಯ ತೇರಿಗೆ ಹೋಲಿಸಿಕೊಳ್ಳೋದು. ತೇರಿನ ಗರ್ಭಗುಡಿಯಲ್ಲಿ ದೇವತೆಯ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದ್ದಂತೆ ಅಸಂಖ್ಯ ಭಕ್ತರು ಎಳೆದು ಜನತುಂಬಿ ತುಳುಕುತ್ತಿರುವ ರಸ್ತೆಯ ಮಧ್ಯದಲ್ಲಿ ನಿಧಾನವಾಗಿ ತೇಲಿ ಹೋಗುವ ತೇರಿನ ಹಾಗೆ - ನಾವು ಎಲ್ಲಿದ್ದರೂ ಹೇಗಿದ್ದರೂ ಏನನ್ನೇ ಮಾಡುತ್ತಿದ್ದರೂ ನಮ್ಮ ಮನದಲ್ಲಿ ಈ ಆಲೋಚನೆಗಳ ತೇರು ಎಳೆಯಲ್ಪಡುತ್ತಿರುತ್ತದೆ, ನಿರಂತರವಾಗಿ.

Monday, September 28, 2009

ಕಾಫಿ ಫಿಲ್ಟರ್, ಕಿವಿಗೆ ಹಾಕುವ ಹತ್ತಿ ಹಾಗೂ ಅನಿವಾಸಿತನ

ಭಾರತದಿಂದ ಬಂದ ಹೊಸತರಲ್ಲಿ ಅಮೇರಿಕದಲ್ಲಿ ದೊರೆಯುವ ಕಾಫಿ (ಲೋಟಾಗಳ) ಸೈಜು, ಅದನ್ನು ಬಳಸುವ ಬಳಕೆದಾರರೆಲ್ಲ ನನ್ನಲ್ಲಿ ಬಹಳ ಕಳವಳವನ್ನೂ ದಿಗ್ಬ್ರಾಂತಿಯುನ್ನು ಮೂಡಿಸುತ್ತಿದ್ದರು ಎನ್ನುವುದು ನನ್ನ ಅನುಭವ ಅಥವಾ ಅನಿಸಿಕೆ. ಇಲ್ಲಿ ಎಲ್ಲವೂ ಲಾರ್ಜ್ ಸೈಜು - ಕಾಫಿ, ಸೋಡಾ, ತಿನ್ನುವ ಸ್ಯಾಂಡ್‌ವಿಚ್, ಆಹಾರ ಪದಾರ್ಥ, ಆಚಾರ-ವಿಚಾರ ಎಲ್ಲವೂ. ನಮ್ಮ ಭಾರತೀಯ ಪದ್ದತಿಯ ಪ್ರಕಾರ ನಾನು ಬೆಳಗ್ಗೆ ಒಂದು ಲೋಟಾ ಮತ್ತು ಸಂಜೆ ಒಂದು ಲೋಟಾ ಕಾಫಿ ಅಥವಾ ಚಹಾಕ್ಕೆ ಹೊಂದಿಕೊಂಡವನು. ಇಲ್ಲಿ ಬಂದ ಹೊಸತರಲ್ಲಿ ಈ ಲಾರ್ಜ್ ಸೈಜುಗಳು ಖಂಡಿತ ನನ್ನಂತಹವರಿಗಲ್ಲ ಅಲ್ಲದೇ ಎಂದೂ ನನಗೆ ಇಷ್ಟು ದೊಡ್ಡ ಸರ್ವಿಂಗ್ ಸೈಜಿನ ಅಗತ್ಯವಿಲ್ಲ ಎಂಬುದು ಅಂದಿನ ನಿಲುವಾಗಿತ್ತು.

ಭಾರತದಲ್ಲಿ ನಾವು ಫಿಲ್ಟರ್ ಕಾಫಿ ಕುಡಿಯುತ್ತಿದ್ದೆವು, ಆದರೆ ಅಲ್ಲೆಲ್ಲೂ ಹತ್ತು-ಹನ್ನೆರಡು ಕಪ್ ಕಾಫಿ ಹಿಡಿಯುವಷ್ಟು ದೊಡ್ಡ ಪ್ರಮಾಣದ ಫಿಲ್ಟರ್ ನಾನು ನೋಡಿರಲಿಲ್ಲ. ಇಲ್ಲಿಗೆ ಬಂದ ಹೊಸತರಲ್ಲಿ ಒಮ್ಮೆ ನಾವು ಒಂದಿಷ್ಟು ಜನ ಬ್ಯಾಚುಲರ್ಸ್ ಸೇರಿಕೊಂಡು ಕಾಫಿ ಫಿಲ್ಟರ್ ಹೆಸರಿನಲ್ಲಿ ಒಂದಿಷ್ಟು ಕಾಫಿ ಫಿಲ್ಟರುಗಳನ್ನು ತಂದು, ಈ ಪೇಪರಿನ ಕೊಟ್ಟೆಯನ್ನು ಹೇಗೆ ಉಪಯೋಗಿಸಬೇಕು ಎಂಬುದು ತಿಳಿಯದೇ ಅದನ್ನು ಹಾಗೇ ಎಸೆದ ಹಾಗೆ ನೆನಪು.

ಅದಾದ ನಂತರದ ಕೆಲವು ವರ್ಷಗಳಲ್ಲಿ ಇಲ್ಲಿನ ಕಾಫಿ ಕುಡಿಯುವುದಕ್ಕೆ ಒಗ್ಗಿ ಹೋದ ನಾನು ಲಾರ್ಜ್ ಕಾಫಿಗಳನ್ನು ಗಣನೀಯ ಪ್ರಮಾಣದಲ್ಲಿ ಸೇವಿಸ ತೊಡಗಿದ ಮೇಲೆ ಮಿಸ್ಟರ್ ಕಾಫಿಯ ಬಳಕೆಗೆ ಹೊಂದಿಕೊಂಡಿದ್ದು. ಹಾಗೇ ದಿನದ ಆರಂಭದಲ್ಲಿ ನಮ್ಮೂರಿನ ನಾಲ್ಕು ಲೋಟಾಗಳು ಹಿಡಿಯುವಷ್ಟು ಕಾಫಿಯನ್ನು ಅರ್ಧ ಘಂಟೆಯ ಒಳಗೆ ಒಂದು ಕೈಯಿಂದ ಕಾರನ್ನು ಡ್ರೈವ್ ಮಾಡುತ್ತಲೇ ಮತ್ತೊಂದು ಕೈಯಿಂದ ಸೇವಿಸುವುದನ್ನು ಕರತಾಮಲಕ ಮಾಡಿಕೊಂಡಿದ್ದು. ಇಲ್ಲಿ ನಮ್ಮ ಮನೆಯಲ್ಲಿ ಇಂತಹ ದಿನನಿತ್ಯ ಉಪಯೋಗಿ ವಸ್ತುವಾಗಿ ಕಾಫಿಯ ಬಳಕೆಯಾದ ಮೇಲೆ ಅದರ ಸಂಗಾತಿ ಪೇಪರ್ ಫಿಲ್ಟರ್ರೂ ಇಲ್ಲವೆಂದರೆ ಹೇಗೆ? ಜೊತೆಗೆ ಒಂದೋ ಎರಡೋ ಕಾಫಿ ವೆರೈಟಿಗೆ ಹೊಂದಿಕೊಂಡ ದೇಹಕ್ಕೆ (ಹಾಗೂ ಮನಸ್ಸಿಗೆ) ಇಲ್ಲಿನ ಹತ್ತು ಹಲವಾರು ಪ್ಲೇವರುಗಳೂ ಅವುಗಳ ಜೊತೆಗೆ ಕಾಫಿ ಬೀಜದ ರೋಸ್ಟ್ (ಲೈಟ್, ಮೀಡಿಯಂ, ಡಾರ್ಕ್) ಸೇರಿಕೊಂಡು ಆಹ್ಲಾದಕರ ಕಾಫಿಯ ಅನುಭವಕ್ಕೆ ಇನ್ನೊಂದಿಷ್ಟು ರುಚಿಗಳನ್ನು ಸೇರಿಸಿಕೊಂಡಿದ್ದು.

ಇಲ್ಲಿ ನಾವು ಹೋಲ್ ಸೇಲ್ ಮಳಿಗೆಗಳಲ್ಲಿ ದಿನಸಿ ಸಾಮಾನುಗಳನ್ನು ಕೊಳ್ಳುವಲ್ಲಿ ಕೇವಲ ಎರಡೂವರೆ ಡಾಲರ್‌ಗೆ ಆರು ನೂರು (೬೦೦) ಫಿಲ್ಟರುಗಳನ್ನು ತಂದು ಬಳಸುವುದು ರೂಢಿ. ಆದರೆ ಒಮ್ಮೆ ಖರೀದಿಸಿದ ಈ ಫಿಲ್ಟರ್ ಖಾಲಿ ಆಗುವಾಗ ದಿನಕ್ಕೊಂದರಂತೆ ಬಳಸಿದರೂ ಮನಯಲ್ಲಿ ಕಾಫಿ ಕುದಿಸದ ವರ್ಷದ ಇತರ ದಿನಗಳನ್ನು ಲೆಕ್ಕ ಹಾಕಿದರೆ ಕೊನೇ ಪಕ್ಷ ಆರು ನೂರು ಫಿಲ್ಟರ್ ಪೇಪರುಗಳು ಎರಡು ವರ್ಷದ ಮಟ್ಟಿಗಾದರೂ ಬಂದಾವು. ಆದರೆ ನಾನು ಕಾಫಿ ಹೀರುವ ಪ್ರಮಾಣ ಗಣನೀಯವಾಗಿ ಹೆಚ್ಚಿದ್ದು ಇತ್ತೀಚೆಗೆ ಮಾತ್ರ ಹಾಗಾಗಿ ಐದು ವರ್ಷಗಳ ಹಿಂದೆ ತಂದ ಫಿಲ್ಟರ್ ಪೇಪರುಗಳು ಖಾಲಿಯಾಗಿ ಹೀಗೆ ಈ ಘಳಿಗೆಯಲ್ಲಿ ಅವುಗಳ ಬಗ್ಗೆ ಬರೆಯುವಂತಾಯಿತು.

ಕಾಫಿ ಫಿಲ್ಟರುಗಳಿಗೆ ಅನ್ವಯವಾಗುವ ಇತಿಹಾಸ ಹಾಗೂ ವಾಸ್ತವದ ಅನುಭವಗಳು ಕಿವಿಗೆ ಹಾಕುವ ಹತ್ತಿಯ ಕಡ್ಡಿಗೂ ಅನ್ವಯಿಸುತ್ತವೆ ಎಂದೇ ಹೇಳಬೇಕು. ಐದು ಡಾಲರುಗಳಿಗೆ ಸಾವಿರದ ಇನ್ನೂರು (೧೨೦೦) ಹತ್ತಿ ಕಡ್ಡಿಯನ್ನು ತಂದು ಅದೆಷ್ಟೋ ವರ್ಷಗಳ ಹಿಂದೆ ಮನೆಯಲ್ಲಿಟ್ಟು ಈಗ ಖಾಲಿ ಆಗಿ ಹೋಗಿದೆ. ಮತ್ತೆ ಫಿಲ್ಟರುಗಳ ಹಾಗೆ ಒಂದು ದೊಡ್ಡ ಪ್ರಮಾಣದ ಖರೀದಿಯನ್ನು ಸಣ್ಣ ಬೆಲೆಗೆ ಮಾಡಬೇಕಾಗಿ ಬಂದಿದೆ, ಅವಿನ್ನು ಖಾಲಿಯಾಗುವುದು ಇನ್ನೆಷ್ಟು ವರ್ಷಗಳ ನಂತರವೋ. ನಾವೇನು ಭಾರತದಲ್ಲಿ ಪ್ರತಿನಿತ್ಯ ಸ್ನಾನ ಮಾಡಿದ ನಂತರ ಕಿವಿಯೊಳಗೆ ಹತ್ತಿಯನ್ನು ತೂರಿಸಿ ಕ್ಲೀನ್ ಮಾಡಿಕೊಳ್ಳುತ್ತಿರಲಿಲ್ಲ, ಹಾಗೇ ಇಲ್ಲೂ ಕೂಡ. ಕಿವಿಗೆ ಹಾಕುವ ಹತ್ತಿ ಕಡ್ಡಿಯ ಉಪಯೋಗ ಅಪರೂಪಕ್ಕೊಮ್ಮೆ, ಅದೂ ಕೆಲವೊಮ್ಮೆ ಸೈನ್‌ಫೆಲ್ಡ್‌ನ ಕ್ರೇಮರ್ ಕಿವಿಯೊಳಗೆ ನೀರು ತುಂಬಿಸಿಕೊಂಡು ಕುಣಿದಾಡುವ ಪ್ರಸಂಗ ಬಂದ ಹಾಗೆ ನಮಗೂ ಈ ಹತ್ತಿ ಕಡ್ಡಿಯ ಬಳಕೆಗೂ ನಂಟು.

ಈ ಅನಿವಾಸಿತನಕ್ಕೂ ಈ ಕಾಫಿ ಫಿಲ್ಟರ್-ಹತ್ತಿ ಕಡ್ಡಿಯ ಅವಿನಾಭಾವ ಸಂಬಂಧದ ಬಗ್ಗೆ ಬರೆಯೋದಕ್ಕೂ ಒಂದು ಕಾರಣವಿದೆ. ಸಂಪನ್ಮೂಲಗಳು ಕಡಿಮೆ ಇದ್ದು ಅವು ಹೆಚ್ಚು-ಹೆಚ್ಚು ಮಟ್ಟದಲ್ಲಿ ಸಿಗದ ಅಥವಾ ಅಭಾವದ ಪರಿಸ್ಥಿತಿ ಒಂದು ಕಡೆ, ಆದರೆ ಇಲ್ಲಿ ಹಣವೊಂದಿದ್ದರೆ ಸಾಕು ಬೇಕಾದಷ್ಟು ಸಿಗುವುದು ಮತ್ತೊಂದು ಕಡೆ. ಚಿಕ್ಕ ಸೈಜಿನ ಕಾಫಿ ಲೋಟಾಗಳಿಂದ ಹಿಡಿದು ಕಿವಿಗೆ ಹಾಕುವ ಹತ್ತಿಯ ಬಳಕೆಯ ಪ್ರಮಾಣ ಕಡಿಮೆಯಿತ್ತು, ಆದರೆ ಇಲ್ಲಿ ಎಲ್ಲವೂ ಲಾರ್ಜ್ ಸೈಜು. ಒಂದೋ ಎರಡೋ ಎಕರೆ ಗದ್ದೆ-ಭೂಮಿ ಪ್ರಮಾಣ ನನ್ನಂಥವರ ಮಧ್ಯಮ ವರ್ಗದವರಿಗೆ ದೊಡ್ಡವಾಗಿದ್ದವು, ಆದರೆ ಇಲ್ಲಿ ನನ್ನ ಸಹೋದ್ಯೋಗಿಗಳಲ್ಲಿ ಕೆಲವರು ಎರಡು-ಮೂರು ಸಾವಿರ ಎಕರೆಗಳ ಒಡೆಯರು. ನನ್ನ ಪಕ್ಕದಲ್ಲಿ ಕುಳಿತುಕೊಳ್ಳುವ ನನ್ನ ಸಹೋದ್ಯೋಗಿ ಇತ್ತೀಚೆಗೆ ಇಪ್ಪತ್ತು ಎಕರೆಗಳನ್ನು ತನ್ನ ಸ್ವಂತ ಊರಿನಲ್ಲಿ ಖರೀದಿಸಿದ್ದು ದೊಡ್ಡ ಸುದ್ದಿಯಲ್ಲ. ನಮ್ಮ ಕಾರುಗಳ ಇಂಜಿನ್ ದೊಡ್ಡವು. ನಿನ್ನೆ ಗಾರ್‌ಫೀಲ್ಡ್ ಪರಿಚಿಯಿಸಿದ ಸಾಧಾರಣ ಗಾತ್ರದ ಅವನ ಮೋಟಾರ್‍ ಸೈಕಲ್ ಇಂಜಿನ್ ೧೫೦೦ ಸಿ.ಸಿ. (1500 cc), ಭಾರತದಲ್ಲಿ ಎಷ್ಟೋ ಕಾರುಗಳ ಇಂಜಿನ್ ಇದಕ್ಕಿಂತ ಚಿಕ್ಕವು. ದೊಡ್ಡ ರಸ್ತೆಗಳು. ದೊಡ್ಡ ದೇಶ - ಎಲ್ಲವೂ ದೊಡ್ಡದೇ.

ಆದರೆ ಈ ಮಹಾನ್ ಗಾತ್ರ ಹಾಗೂ ಮಹಾನ್ ಸಂಸ್ಕೃತಿಗೆ ನಮ್ಮ ಚಿಕ್ಕ ಅಥವಾ ಮೀಡಿಯಮ್ ಸೈಜಿನ ಮನಸ್ಸುಗಳಾಗಲೀ, ಆಚಾರ-ವಿಚಾರಗಳಾಗಲಿ ದಿಢೀರನೆ ಹೇಗೆ ಹೊಂದಿಕೊಂಡಾವು. ಇವತ್ತೋ ನಿನ್ನೆಯೋ ಭಾರತದಿಂದ ಬಂದವರಿಗೆ ಒಂದು ಲಾರ್ಜ್ ಸ್ಟಾರ್‌ಬಕ್ಸ್ ಕಾಫಿ ಕೊಟ್ಟು ನೋಡಿ, ಅದನ್ನು ಅವರು ಪೂರ್ತಿ ಮುಗಿಸುತ್ತಾರೆಯೇ ಎಂದು. ಈ ಚಿಕ್ಕ-ದೊಡ್ಡ ವಿಚಾರಗಳು ಮೊದಲಿನಿಂದ ಕೊನೆಯವರೆಗೆ ನಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುತ್ತಲೇ ಇರುತ್ತವೆ ಎನ್ನೋದು ಈ ಹೊತ್ತಿನ ನನ್ನ ತತ್ವ.

ಇಂದು ಖರೀದಿಸಿ ಆದಷ್ಟು ಬೇಗನೇ ಬಳಸಿ ಮತ್ತೆ ಹೊಸತನ್ನು ಖರೀದಿಸುವುದು ಒಂದು ವಿಧ, ನಮ್ಮಲ್ಲಿ ಉಗ್ರಾಣಗಳಿವೆ ಎಂದು ಬೇಕಾದ್ದನ್ನೆಲ್ಲ ಹೋಲ್‌ಸೇಲ್ ದರದಲ್ಲಿ ಕೊಂಡು ಹಲವು ವರ್ಷಗಳ ವರೆಗೆ ಅನುಭವಿಸುವುದು ಮತ್ತೊಂದು ವಿಧ. ಪ್ರೆಸೆಂಟ್ ವ್ಯಾಲ್ಯೂ ಫ್ಯೂಚರ್ ವ್ಯಾಲ್ಯೂನಿಂದಾನಾದರೂ ಲೆಕ್ಕ ಹಾಕಿ, ಬೇಕಾಗಿದ್ದು ಸಾಕಾದಷ್ಟು ಇರಲಿ ಎಂದಾದರೂ ಸಮಜಾಯಿಸಿ ಕೊಟ್ಟುಕೊಳ್ಳಿ.

ಅವೇ ಲಾರ್ಜ್ ಕಾಫಿಗಳನ್ನು ಬಿಕರಿ ಮಾಡುವ ಪೇಪರ್ ಫಿಲ್ಟರುಗಳು, ಸಾವಿರಗಟ್ಟಲೆ ಸಿಗುವ ಕಿವಿಗೆ ಹಾಕುವ ಹತ್ತಿ ಕಡ್ಡಿಗಳು ಅಗಾಧ ಪ್ರಮಾಣದಲ್ಲಿ ಸಿಗುವ ಇವುಗಳನ್ನು ನಿಯಂತ್ರಣಕ್ಕೆ ತಂದುಕೊಂಡು ದಿನ-ವಾರ-ವರ್ಷಗಳನ್ನು ದೂಡುವ ಅನಿವಾಸಿ ಬದುಕು. ಇವುಗಳ ಮುಂದೆ ಹರಿದು ಹೋಗುವವರೆಗೆ ಉಪಯೋಗಕ್ಕೆ ಬರುವ ನಮ್ಮ ಅಲ್ಯುಮಿನಮ್ ಅಥವಾ ಪ್ಲಾಸ್ಟಿಕ್ ಜಾಲರಿ ಇರುವ ಫಿಲ್ಟರುಗಳು ಹಳೆಯವಾಗುತ್ತವೆ, ಅಮೇರಿಕದ ಮಿಸ್ಟರ್ ಕಾಫಿ ಇಳಿಸಲು ಭಾರತದ ಫಿಲ್ಟರ್ ಕೆಲಸ ಮಾಡದಾಗುತ್ತದೆ. ಇಲ್ಲಿನ ಹೆಚ್ಚು ಧೂಳಿಲ್ಲದ ಏರ್ ಕಂಡೀಷನ್ನ್ ವಾತಾವರಣದಲ್ಲಿ ಬೆಳೆಯುತ್ತಿದ್ದರೂ ಕಿವಿಯಲ್ಲಿ ಸೇರಿದ ಕೊಳೆ ತೆಗೆಯಲು ಸಾವಿರ ಸಂಖ್ಯೆಯಲ್ಲಿ ಸಿಗುವ ಕಡ್ಡಿ ಸರದಾರರು ನೆರವಿಗೆ ಬರುತ್ತಾರೆ, ಹಿಂದೆ ಹಗಲೂ-ರಾತ್ರಿ ಧೂಳಿನಲ್ಲೇ ಜೀವನ ಸಾಗಿಸಿ ಬಂದು ಯಾವತ್ತೋ ಕಿವಿಯ ಕೊಳೆಯನ್ನು ತೆಗೆದಿದ್ದು ಗೌಣವಾಗುತ್ತದೆ.

Sunday, September 27, 2009

ಅವನ ರೂಮು ಅವನ ಮನ

ಒಂಟಿ ಗೂಟಕ್ಕೆ ತಗುಲಿ ಹಾಕಿದಾ ಕೋಟು
ಒಣಗಿದ ಹೂಗಳ ತುರುಕಿಕೊಂಡ ಕಪಾಟು
ಅಲ್ಲಲ್ಲಿ ಚೆದುರಿ ಹೋದ ಪುಸ್ತಕಗಳ ಸಂತೆ
ಹುಲ್ಲು ಕುತ್ರೆ ತಲೆಯಲ್ಲಿ ಹಿಡಿಸಲಾರದ ಕಂತೆ.

ಯುದ್ಧವಿರದ ಸಿಪಾಯಿ ಕಾಡ ಮೇಲಿನ ದಂಗೆ
ಹಸಿವಿರದಿದ್ದರೂ ಕೂಳಿನ ಅಟ್ಟಹಾಸದ ನಗೆ
ಕಾಣದ ಕೈಗಳು ದೂರದಿಂದಲೇ ಆಡಿಸೊ ಆಟ
ಗೊತ್ತಿದ್ದೂ ಗೊತ್ತಿರದ ಚಕ್ರವ್ಯೂಹದ ಹೂಟ.

ಇವನ್ಯಾರು ಅವನ್ಯಾರು ಅದು ಬೇರೆ ಇದು ಬೇರೆ
ದೂರವಿರೆ ಮುಂದೆ ಬೇರೆ ಪ್ರಮೇಯವೇ ಬರದು
ಸಂತೆಯೊಳಗೆ ಹರವಿಟ್ಟ ಹತ್ತು ಹಲವು ತರಕಾರಿ
ಬರಿ ಬಿಸಿಲೊಳಗೇ ಬೇಯಿಸಿ ಹದ ಮಾಡುವ ಪರಿ.

ಪ್ರತಿ ಬಾಗಿಲಿಗೂ ಚಿಲಕವಿರೆ ಏನಂತೆ ಮನಕಿಲ್ಲವಲ್ಲ
ಕೋಣೆ ಕೋಣೆಗೆ ಅವುಗಳದೇ ಒಂದು ವಾಸ್ತವ್ಯವಲ್ಲ
ಹರವಿಬಿಟ್ಟ ಮನ ಎಲ್ಲೂ ಹೋಗದೆ ನಿಂತ ಹಾಗಿದೆ
ಮುಚ್ಚಿಟ್ಟ ಕೋಣೆ ನಿಂತು ನಿಂತಲ್ಲೇ ಎಲ್ಲೋ ಹೋಗಿದೆ.

ಚೌಕ ಆಯತಾಕಾರಗಳ ಪ್ರತಿಬಿಂಬ ಅವನ ಕೋಣೆ
ಆದರವನ ಮನದ ಮೂಲೆಗಳ ಇತಿಮಿತಿಗಳ ಕಾಣೆ
ಒಂದರದು ನಿಂತ ಹಾಗಿರುವಾಗಲೇ ಒಂದೊಂದು ಚಿತ್ರ
ಮತ್ತೊಂದರದು ಎಲ್ಲಾ ಕಡೆ ತಿರುಗಿಕೊಂಡಿಹ ವಿಚಿತ್ರ.

(ಲೈಬ್ರರಿಯ ರೀಡಿಂಗ್ ರೂಮಿನಲ್ಲಿ ತದೇಕ ಚಿತ್ತನಾಗಿ ಓದುತ್ತಿದ್ದ ವ್ಯಕ್ತಿಯೊಬ್ಬನನ್ನು ಕುರಿತು)

Friday, September 04, 2009

ಮತ್ತೆ ಅವನ ದರ್ಶನವಾಯ್ತು...

ನನ್ನ ಪಾಡಿಗೆ ನಾನು ಸುಮ್ಮನೇ ಒಂದು ಮುಂಜಾನೆ ಕೆಲಸಕ್ಕೆ ಹೊರಟಿರೋ ಹೊತ್ತಿಗೆ ಸುತ್ತಲಿನ ಮರಗಳು ಕುಲಕಿದಂತಾಗಿ ಅವುಗಳತ್ತ ನೋಡಿದೆ ಯಾವೊಂದು ವಿಶೇಷವೂ ಕಾಣಲಿಲ್ಲ, ಆದರೆ ಮರಗಳ ಎಲೆಗಳು ಅಲುಗಾಡುವಿಕೆಯಲ್ಲಿ ಏನೋ ಒಂದು ರೀತಿಯ ಹೊಸತನವಿದ್ದಂತೆ ತೋರಿತು. ಸುಮ್ಮನೇ ಹೀಗೇ ಇರಬಹುದು ಎಂದು ನನ್ನ ಪಾಡಿಗೆ ಕಾರು ಡ್ರೈವ್ ಮಾಡಿಕೊಂಡು ಹೋಗುತ್ತಿದ್ದಾಗಲೂ ಯಾರೋ ಆಹ್ವಾನಿಸದ ಅತಿಥಿಯೊಬ್ಬರು ನನ್ನ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾರೆ ಎನ್ನಿಸಿದಾಗಲಂತೂ ಮೈ ನಡುಗತೊಡಗಿತು. ಸುತ್ತಲೂ ನೋಡಿದೆ ಯಾರೂ ಕಾಣಲಿಲ್ಲ.

ಮುಂದೆ ಸ್ವಲ್ಪ ದೂರಗಳ ದಾರಿ ಸವೆಸಿದಂತೆ ಮರಗಿಡಗಳ ನಡುವೆ ಸೂರ್ಯ ಕಿರಣಗಳು ತೂರಿಬರಲು ಹರಸಾಹಸ ಮಾಡುತ್ತಿದ್ದವು. ಸೂರ್ಯನ ಬೆಳಕೂ ಕೂಡ ಮಂದಗತಿಯನ್ನು ತಲುಪಿತ್ತು. ಮುಂಜಾನೆ ಚುರುಕಾದ ಕಿರಣಗಳು ಮಲಗಿದವನ್ನೆಲ್ಲ ಬಡಿದೆಬ್ಬಿಸುವುದರ ಬದಲು ತಮ್ಮ ಮಂದ ಬೆಳಕಿನಲ್ಲೂ ಎದ್ದವರ ಕಣ್ಣನ್ನು ಕುಕ್ಕುತ್ತಿದ್ದವೇ ವಿನಾ ಮಲಗಿದವರ ಹತ್ತಿರ ಕೂಡಾ ಸುಳಿಯುತ್ತಿರಲಿಲ್ಲ. ಇದು ಸಾಲದು ಎಂಬಂತೆ ವಾತಾವರಣದ ಉಷ್ಣತೆಯೂ ಸ್ವಲ್ಪ ಸ್ವಲ್ಪ ಕಡಿಮೆಯಾದಂತಾಗಿ ಮಲಗಿದವರು ಕಂಬಳಿ-ಕೌದಿಯನ್ನು ಈಗಾಗಲೇ ಹುಡುಕಿಕೊಂಡು ಹೋಗುವುದು ಅನಿವಾರ್ಯವೆನ್ನಿಸಿರಬಹುದಾದದ್ದು ಜನರಲ್ಲಿ ಲವಲವಿಕೆಯನ್ನು ಮೂಡಿಸುವಲ್ಲಿ ಯಾವ ಉತ್ಸಾಹವನ್ನೂ ಕೂಡಿಹಾಕುತ್ತಿರಲಿಲ್ಲ. ಆದರೂ ನಾನು ದಾರಿ ಸವೆಸಿದಂತೆಲ್ಲಾ ಇಂದು ವಿಶೇಷವಾದ ಏನೋ ಒಂದು ಬದಲಾವಣೆ ಇದೆ ಎಂದು ಬಲವಾಗಿ ಅನ್ನಿಸುತ್ತಿದ್ದುದಂತೂ ನಿಜ.

ನನ್ನ ಹಿಂದೆ ಮುಂದೆ ಇದ್ದ ಕಾರುಗಳತ್ತ ಕಣ್ಣು ಹಾಯಿಸಿದೆ, ಅವರೆಲ್ಲರ ಅರ್ಧ ಮುಖಗಳು ಬೆಳಕಿನಲ್ಲಿ ಇನ್ನರ್ಧ ಮುಖಗಳು ನೆರಳಿನಲ್ಲಿ ಕಾಣಿಸುವಂತೆ ಎದುರಿನ ಸನ್ ಸ್ಕ್ರೀನ್ ನಿರ್ದೇಶಿಸುತ್ತಿತ್ತು. ಕಪ್ಪು ಕನ್ನಡಕ ಧರಿಸಿದ್ದ ಅವರೆಲ್ಲರೂ ಈ ಬೆಳಕು-ಕತ್ತಲಿನ ಬದಲಾವಣೆಗಳಿಗೆ ಹೆಣಗುವವರು ಯಾರು ಎಂದು ತಮ್ಮ ಸವಾಲನ್ನು ಯಾವತ್ತೋ ಬಿಟ್ಟಂತಿತ್ತು. ರಸ್ತೆಯ ಬದಿಯ ಮನೆಯ ಚಿಮಣಿಯ ಪಕ್ಕದಲ್ಲಿದ್ದ ಹೊಗೆ ಕೊಳವೆಯಲ್ಲಿ ಗ್ಯಾಸ್ ಹೀಟರ್ ಉರಿಯುತ್ತಿರುವುದರ ಪ್ರತೀಕವಾಗಿ ಕಪ್ಪು-ಕಂದು ಮಿಶ್ರಿತ ಹೊಗೆ ನಿಧಾನವಾಗಿ ವಾತಾವರಣದಲ್ಲಿ ತನ್ನ ಅಸ್ಥಿತ್ವವನ್ನು ಸ್ಥಾಪಿಸುತ್ತಿತ್ತು. ಹಾಗೆ ಸ್ಥಾಪಿಸಿದ ಅಸ್ಥಿತ್ವ ಮರುಕ್ಷಣವೇ ಮಾಯವಾಗುವ ಹಾಗೆ ಕಂಡು ಇವು ಎಲ್ಲ ಎಷ್ಟೊಂದು ಕ್ಷಣಿಕ ಎನ್ನಿಸುವಂತಾಯಿತು. ಇಷ್ಟೊತ್ತಿಗಾಗಲೇ ಹಬ್ಬಿ, ಹರಡಿ ಹಾಗೂ ಕದಡಿ ಹೋದ ಹೊಗೆ ಶುಭ್ರ ವಾತಾವರಣದಲ್ಲಿ ಮಂದವಾದ ಸೂರ್ಯನ ಕಿರಣಗಳ ದಯೆಯಿಂದ ಗೋಧೂಳಿಯ ತಿಳಿ ಪದರನ್ನು ಕಣ್ಣ ಮುಂದೆ ನಿರ್ಮಿಸುವಲ್ಲಿ ಹೆಣಗುತ್ತಿತ್ತು. ಹೀಗೇ ಏನೇನೇನೋ ಆಲೋಚನೆಗಳ ನಡುವೆಯೂ ಇಂದು ಅದೇನೋ ವಿಶೇಷವಿದೆ ಎನ್ನುವ ನನ್ನ ಭಾವನೆಗಳು ಬಲವಾಗುತ್ತಲೇ ಹೋದವು.

ನಡುವೆ ಬೇಕು ಎಂದರೂ ನಿಲ್ಲದ ಪಯಣ, ರಸ್ತೆಯಲ್ಲಿ ಇಳಿದ ಮೇಲೆ ಎಲ್ಲರಂತಿರಲೇ ಬೇಕಲ್ಲ, ನಾನೂ ಮುನ್ನಡೆದೆ. ನಮ್ಮ ಮನೆಯಿಂದ ಸರಿಯಾಗಿ ಆರು ಪಾಯಿಂಟ್ ಒಂದು ಮೈಲು ದೂರದಲ್ಲಿ ಕೊನೆಯಾಗುವ ಪ್ಲೆಸೆಂಟ್ ವ್ಯಾಲಿ ವೇ ಅಂತ್ಯದಲ್ಲಿ ಆರಂಭವಾಗುವ ಓಕ್‌ಡೇಲ್ ಅವೆನ್ಯೂನಲ್ಲಿ ಒಂದಿಷ್ಟು ಓಕ್ ಮರಗಳ ನಡುವೆ ದಾರಿಯಲ್ಲಿ ಬಂದಿದ್ದವನ್ನೆಲ್ಲ ಇರಿದು ಬಿಡುತ್ತೇವೆ ಎನ್ನುವ ಇರಾದೆಯಲ್ಲಿ ಬಲಿಯುತ್ತಿದ್ದ ಕಿರಣಗಳು ನನ್ನ ಕಣ್ಣುಗಳನ್ನು ಚುಚ್ಚಿದಾಗಲೇ ಈ ಅಪರೂಪದ ಅತಿಥಿ ಯಾರು ಎಂದು ನನಗೆ ಅರ್ಥವಾದದ್ದು! ಆ ಅತಿಥಿಯೇ ಫಾಲ್ (Fall) ದಿನ, ಮುಂಬರುವ ಛಳಿಗಾಲದ ಮುನ್ಸೂಚಕ, ಚಿಗುರಿ ಬಲಿತು ಮುಂದೆ ಬೆಳೆಯ ಬೇಕಾದ ಎಲೆಗಳಿಗೂ ಕರುಣೆ ತೋರದೆ ಎಲ್ಲವನ್ನೂ ಕೆಳಗೆ ಇಳಿಸುವವ, ಹಸಿರು-ಹಳದಿಯನ್ನು ಕೆಂಪಗಾಗಿಸುವವ, ಮರ-ಗಿಡಗಳ ಮೂಗು ಮುಸುಡಿಯನ್ನು ನೋಡದೆ ಬೆತ್ತಲಾಗಿಸುವವ, ರೀಸೈಕಲ್ ಪರಮಗುರು, ಎಂಥಾ ಮರವನ್ನು ನಡುಗಿಸುವವ, ಗಾಳಿಯಲ್ಲಿನ ತೇವವನ್ನು ತಿಂದು ತೇಗಿ ಬಿಡುವವ. ನಮ್ಮಂಥ ಹುಲು ಮಾನವರ ಕಥೆ ಹಾಗಿರಲಿ ಉರಿವ ಸೂರ್ಯನಿಗೂ ಸರಿಯಾಗಿ ಕೆಲಸ ಮಾಡಲು ಬಿಡದೆ ಅವನ ದಿನಗಳನ್ನೆಲ್ಲ ಮೊಟಕು ಹಾಕಿ ಬಿಡುವವ.

ಫಾಲ್ ದಿನ ಎಂದರೆ ಹೊಸತನವನ್ನು ಸ್ವಲ್ಪ ನಿಧಾನವಾಗಿಯೇ ತರುವ ಸಂಭ್ರಮದ ಆಶಾವಾದಿಯೇ ಎಂದು ನನ್ನನ್ನು ನಾನು ಸಂತೈಸಿಕೊಂಡಿದ್ದೇನೆ. ಅಥವಾ ಬಿಸಿಯಾಗಿದ್ದನ್ನು ತಂಪಾಗಿಸಿ ನಮ್ಮವರ ಮನ-ಮನೆಗಳಲ್ಲಿ ಡಿಪ್ರೆಷ್ಷನ್ನನ್ನು ಉಂಟು ಮಾಡುವ ನಿರಾಶಾವಾದಿಯೇ ಎಂದು ನಿಟ್ಟುಸಿರಿಟ್ಟಿದ್ದೇನೆ. ಬೇಸಿಗೆ ಮತ್ತು ಛಳಿಗಾಲಗಳ ನಡುವೆ ಬಂದು ಹೋಗುವ ಇವನ ಹೂಟವೇನು? ತರಗಲೆಗಳನ್ನೆಲ್ಲ ಸುತ್ತಿ ಎಲ್ಲಿಂದ ಎಲ್ಲಿಗೋ ಎಸೆಯುವ ಇವನ ಆಟವೇನು? ಬದುಕನ್ನು ಬಯಲಾಗಿಸಿ ನೋಡುವ ಇವನ ಮಾಟವೇನು?

ಇನ್ನೂ ಇಪ್ಪತ್ತು ದಿನಗಳಾದರೂ ಇವೆ ಅಧಿಕೃತವಾಗಿ ಸಮ್ಮರ್ ಮುಗಿಯಲು ಎಂದರೆ ಅಭ್ಯಾಗತ ಅತಿಥಿ ಈಗಾಗಲೇ ಬಂದು ಒಕ್ಕರಿಸಿದ್ದಾನೆ. ಬೆಳ್ಳಂಬೆಳಗ್ಗೆ ವಾತಾವರಣದ ಉಷ್ಣತೆಯನ್ನು ನಲವತ್ತೈದು ಡಿಗ್ರಿ ಫ್ಯಾರನ್‌ಹೈಟ್ ಮಟ್ಟಕ್ಕೆ ಇಳಿಸಿ ಸಂತಸ ಪಡುತ್ತಾನೆ. ಇದ್ದ ಒಂದೆರಡು ದಿನಗಳನ್ನಾದರೂ ಹಾಯಾಗಿ ಡೆಕ್ ಮೇಲೆ ಕಳೆಯೋಣವೆಂದರೆ ಈತ ವರುಣನೊಂದಿಗೆ ಬಿನ್ನಾಣದ ಸ್ನೇಹವನ್ನೂ ಬೆಳೆಸಿ ವರ್ಷಧಾರೆಯನ್ನು ಸುರಿಸುತ್ತಾನೆ. ಬೇಡಾ-ಬೇಡಾ ಎಂದರೂ ಬೇಡದ್ದನ್ನೇ ಮಾಡದ ಹಠ ಹಿಡಿದ ಪೋರನಂತೆ, ಇಂದು ಏನಾದರೂ ಸಿಕ್ಕಿದ್ದು ಸಿಕ್ಕಲಿ ಎನ್ನುವ ಚೋರನಂತೆ ಇವನ ಮನ. ಇವನ ಸ್ನೇಹವನ್ನು ಬೆಳೆಸದಿದ್ದರೆ ಬೇರೆ ದಾರಿಯೇನಿದೆ? ಇವನಿಗೆ ಸಲಾಮು ಹೊಡೆದು ಸಹಕರಿಸುತ್ತಿದ್ದ ಹಾಗೆ ಇವನ ಅಣ್ಣ ವಿಂಟರ್ ಬರುತ್ತಾನೆ - ಇವರೆಲ್ಲರ ಅಟ್ಟ ಹಾಸಕ್ಕೆ ಸಿಕ್ಕಿ ನೆರೆಹೊರೆ ಮರುಗುವುದರೊಳಗೆ ಮತ್ತೆ ನಂತರ ಸ್ಪ್ರಿಂಗ್ ಬಂದು ಸೂರ್ಯನ ಮಾಮೂಲಿ ಡ್ಯೂಟಿ ಆರಂಭವಾಗುವಾಗ ಇನ್ನು ಯಾವ ಕಾಲವಿದೆಯೋ ಅದೆಷ್ಟು ದೂರವೋ ಎಂದು ಎಣಿಸುತ್ತಿರುವ ಹೊತ್ತಿಗೆ ಯಾವಾಗಲೂ ಒಂದೇ ಮುಖವನ್ನು ಹೊತ್ತಿಕೊಂಡ ಆಫೀಸಿನ ಬಿರುಸು ಡ್ರೈವ್ ವೇ ಎದುರಿಗೆ ಸಿಕ್ಕು ಮತ್ತಿನ್ಯಾವುದೋ ಆಲೋಚನೆಯಲ್ಲಿ ಮನಸ್ಸು ತೊಡಗಿಕೊಳ್ಳುತ್ತದೆ. ಹೀಗೆ ಆಫೀಸ್ ಹೊಕ್ಕು ಮತ್ತೆ ಹೊರಬರುವವರೆಗೆ ಈ ಅತಿಥಿಗಳು ನನ್ನನ್ನು ಅಷ್ಟೊಂದು ಕಾಡೋದಿಲ್ಲವೆನ್ನುವುದು ನಿಜ.

Sunday, August 30, 2009

ನಾವೂ ನಮ್ಮ ವೆಕೇಷನ್ನೂ...

ನಮ್ಮ ಆಫೀಸಿನಲ್ಲಿ ಸಮ್ಮರ್ ಬಂತೆಂದರೆ ವೆಕೇಷನ್ನುಗಳ ಅಧಿಕೃತ ಆರಂಭವೆಂದೇ ಅರ್ಥ. ಮಾರ್ಚ್‌ಗೆ ಆರಂಭವಾಗುವ ಸ್ಪ್ರಿಂಗ್ ತನ್ನ ಆಗಮನದ ಜೊತೆಗೆ ಒಂದಿಷ್ಟು ಚಿಗುರುಗಳಲ್ಲಿ ಹುರುಪನ್ನು ಮೂಡಿಸುತ್ತದೆಯೇ ವಿನಾ ವಾತಾವರಣದ ಉಷ್ಣತೆ ಎಪ್ಪತ್ತು ಡಿಗ್ರಿ (ಫ್ಯಾರನ್‌ಹೈಟ್) ಮೇಲೆ ಏರಿ ಸುಯ್ ಎಂದು ತೀಡುವ ಮೃದುವಾದ ಗಾಳಿಯಿಂದ ರೋಮಾಂಚನವಾಗುವುದರಿಂದ ಹಿಡಿದು ಸಾಕಪ್ಪಾ ಸಾಕು ಈ ಬಿಸಿಲು ಎನ್ನುವಷ್ಟರಲ್ಲಿ ಸಮ್ಮರ್ ಹೋಗೇ ಬಿಟ್ಟಿರುತ್ತದೆ. ಜೂನ್‌ನಿಂದ ಸೆಪ್ಟೆಂಬರ್ ವರೆಗೆ ಶಾಲೆಗಳಿಗೆ ರಜೆ, ಪೋಷಕರು ತಮ್ಮ ಮಕ್ಕಳನ್ನು ವರ್ಷಾವಧಿ ವೆಕೇಷನ್ನುಗಳಿಗೆ ಕೊಂಡೊಯ್ಯುವುದು ಕುಟುಂಬ ರೂಢಿ.

ನಾನು ನ್ಯೂ ಜೆರ್ಸಿಯಲ್ಲಿ ನೋಡಿರೋ ಹಾಗೆ ಅನಫಿಷಿಯಲ್ ಸಮ್ಮರ್ ಎಂದರೆ ಮೇ ತಿಂಗಳ ಕೊನೆಯಲ್ಲಿ ಬರುವ ಮೆಮೋರಿಯಲ್ ಡೇ ವೀಕ್ ಎಂಡ್ ನಿಂದ ಆರಂಭವಾಗಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಬರುವ ಲೇಬರ್ ಡೇ ವರೆಗೆ. ಜೂನ್-ಜುಲೈ-ಆಗಷ್ಟ್ ಇವೇ ಮೂರು ತಿಂಗಳು, ಅದೇನು ಕಡಿದು ಹಾಕುತ್ತೀರೋ ಬಿಡುತ್ತೀರೋ, ಇವೇ ವರ್ಷದ ಉಳಿದ ಒಂಭತ್ತು ತಿಂಗಳನ್ನು ಸಹಿಸಿಕೊಳ್ಳುವಂತೆ, ಪ್ರತಿ ಸಮ್ಮರ್‌ನಲ್ಲಿ ಹೊಸದೇನನ್ನೋ ಸೃಷ್ಟಿಸುವಂತೆ ನಮ್ಮನ್ನೆಲ್ಲ ಕಟ್ಟಿ ಹಾಕಿರೋದು.

ಸಾಗರದ ಎಲ್.ಬಿ. ಕಾಲೇಜಿನಲ್ಲಿ ಓದಿಕೊಂಡಿರುವಾಗ ಇದ್ದಿಲು ಒಲೆಗೆ ಬೆಂಕಿ ತಗಲಿಸಿ ಹೊಟ್ಟೆ ತುಂಬಿಕೊಂಡ ಕರ್ಮ ಇನ್ನೂ ಮುಗಿದಿಲ್ಲವೇನೋ ಅನ್ನೋ ಹಾಗೆ ನಮ್ಮನೆ ಡೆಕ್ ನಲ್ಲಿ ಇರುವ ಕಲ್ಲಿದ್ದಲು ಗ್ರಿಲ್‌ ಏಪ್ರಿಲ್ ಅಂಚಿನಲ್ಲಿ ಬೇಸ್‌ಮೆಂಟ್ ನಿಂದ ಡೆಕ್‌ ಮೇಲೆ ಬಂದು ಇದ್ದಿಲಿಗೂ ನನಗೂ ಇರುವ ಋಣವನ್ನು ನೆನಪಿಸಿಕೊಡುತ್ತದೆ. ’ವೆಜಿಟೇರಿಯುನ್ನ್ ಜನ ನೀವೇನು ಗ್ರಿಲ್ ಮಾಡ್ತೀರಿ?’ ಎನ್ನೋರು ವಿಸ್ಮಿತರಾಗುವ ಹಾಗೆ ನನ್ನ ವೆಜಿಟೇರಿಯನ್ನ್ ಗ್ರಿಲ್ಲಿಂಗ್ ಪುರಾಣವನ್ನೆಲ್ಲ ಹೊರಗೆ ತೆಗೆದಿಡುತ್ತೇನೆ. ಈ ಕಲ್ಲಿದ್ದಲು ಶಾಖ ಎಷ್ಟು ಜೋರು ಅಂದ್ರೆ ಸರಿಯಾಗಿ ಮ್ಯಾನೇಜ್ ಮಾಡಿದ್ರೆ ಒಂದು ದಿನದ ಊಟ-ವ್ಯವಸ್ಥೆಯನ್ನು ಈ ಗ್ರಿಲ್ ಒಲೆಯಲ್ಲೇ ಮಾಡಿಬಿಡಬಹುದು. ಅಮೇರಿಕನ್ ಊಟದ ಪದ್ಧತಿಯ ಹಾಗೆ ನಾವು ಒಂದಿಷ್ಟು ವೆಜಿಟೇರಿಯನ್ ಪ್ಯಾಟ್ಟಿಗಳು, ಉಪ್ಪು-ಹುಳಿ-ಖಾರ ಸವರಿದ ಗೊಂಜೋಳ, ಸ್ಕಿವರ್‌ಗೆ ಪೋಣಿಸಿದ ಥರಥರ ತರಕಾರಿಗಳು, ಚಿಪ್ಸ್ ಮುಳುಗಿಸಿ ತಿನ್ನಲಿಕ್ಕೆ ಮಾವಿನ ಹಣ್ಣಿನ ಚಟ್ನಿ (ಸಾಲ್ಸಾ), ಸವತೆಕಾಯಿ ತುಂಡುಗಳು, ಮಾವಿನ ಹಣ್ಣು, ಮನೆಯಲ್ಲೇ ಮಾಡಿದ ಲಿಂಬೆ ಪಾನಕ (ಲೆಮನೇಡ್), ಹಲವು ಥರದ ಬ್ರೆಡ್ಡು, ಕೆಚಪ್, ಸುಟ್ಟ ಈರುಳ್ಳಿ, ರೆಡ್ ವೈನ್ ಮೊದಲಾದವುಗಳನ್ನು ನಮ್ಮ ಬ್ಯಾಕ್ ಯಾರ್ಡ್‌ನಲ್ಲಿ ಹರಡಿಕೊಂಡು ವರ್ಷದ ಒಂದಿಷ್ಟು ದಿನಗಳು ಮನೆಯಲ್ಲೇ "ಪಿಕ್‌ನಿಕ್" ಮಾಡೋದು ರೂಢಿ. ಇವುಗಳ ಜೊತೆಗೆ ಮೆಣಸಿನ ಕಾಯಿ ಬೋಂಡಾ, ಆಲೂಗಡ್ಡೆ ಬಜ್ಜಿ ಹಾಗೂ ಪನ್ಕೋಡಾ ಸೇರಿಕೊಂಡು ನಮ್ಮ ಸಮ್ಮರ್ ಪಾರ್ಟಿಗಳನ್ನು ಯಶಸ್ವಿಯಾಗಿ ಮಾಡಿಬಿಡುತ್ತವೆ. ಸ್ವಿಚ್ ಒತ್ತಿ ಗ್ಯಾಸ್ ಗ್ರಿಲ್ ಮೇಲೆ ಒಂದೇ ಕ್ಷಣದಲ್ಲಿ ಬರ್ಗರ್‌ಗಳನ್ನು ಮಾಡುವುದಕ್ಕಿಂತ ಕಲ್ಲಿದ್ದಲ ಗ್ರಿಲ್ ಹೊತ್ತಿಸಿ ಅದಕ್ಕೆ ಗಾಳಿ ಬೀಸಿ ನಿಧಾನವಾಗಿ ಹೊತ್ತಿ ಉರಿಯುವ ಬೆಂಕಿಯಲ್ಲಿ ದಿನದ ಒಂದೆರಡು ಘಂಟೆ ಹೊರಗಿರುವುದು ಸುಖ ತರುತ್ತದೆ. ನಮ್ಮ ಅತಿಥಿಗಳ ಜೊತೆಗೆ ಹೆಚ್ಚು ಸಮಯವನ್ನು ಕಳೆಯುವ ಅವಕಾಶ ಹುಟ್ಟುತ್ತದೆ.

ಆದರೆ ಇವು ಯಾವುದೂ ನಮ್ಮ ವೇಕೇಷನ್ನ್ ಅಲ್ಲವೇ ಅಲ್ಲ. ಬಾರ್ ಬೇ ಕ್ಯೂ ಏನಿದ್ದರೂ ವಾರಾಂತ್ಯದಲ್ಲಿ ನಾವು ಮನೆಯಿಂದ ಹೊರಗಿರುವ ಪ್ರಯತ್ನವಷ್ಟೇ. ಇನ್ನು ಎಲ್ಲರಂತೆ ಪಡೆದುಕೊಳ್ಳುವ ನಮ್ಮ ವೆಕೇಶನ್ನ್ ದಿನಗಳು ಎಲ್ಲಿಗೆ ಹೋಗುತ್ತವೆ, ಹೋಗಿಬಿಟ್ಟವು. ವರ್ಷಕ್ಕೆ ಒಂದೋ ಎರಡೋ ಬಾರಿ ಸಮುದ್ರ ಇನ್ನೂ ಇದೆಯೋ ಇಲ್ಲವೋ ಎಂದು ನೋಡಿಕೊಂಡು ಬರುವ ಹಾಗೆ ಬೀಚ್‌ಗೆ ಹೋಗುವುದು ವೇಕೇಷನ್ನ್ ಅಲ್ಲ. ಮುಂದಿನ ವರ್ಷ ನೋಡೋಣ ಎನ್ನುತ್ತಲೇ ಮುಂದೆ ತಳ್ಳುತ್ತ ಬಂದ ಡಿಸ್ನಿ ವರ್ಲ್ಡ್ ಮತ್ತು ಇತರ ಸ್ಥಳೀಯ ಆಕರ್ಷಣೆಗಳು ಇನ್ನೂ ಪುಸ್ತಕದ ಗಂಟಾಗೇ ಉಳಿದಿವೆ. ನಮ್ಮ ಮನೆಯಿಂದ ಕೇವಲ ಐವತ್ತೇ ಮೈಲು ದೂರದ ನ್ಯೂ ಯಾರ್ಕ್ ನಗರವನ್ನು ನೋಡೋದು ಯಾವಾಗಲೋ ಒಂದು ಬಾರಿ, ’ಯಾರು ಹೋಗುತ್ತಾರೆ ಅಲ್ಲಿಗೆ, ಹಳ್ಳ-ಕೊಳ್ಳವನ್ನು ದಾಟಿ’ ಎನ್ನುವ ಉದಾಸೀನ ಗೆದ್ದು ಬಿಡುತ್ತದೆ. ಅಮೇರಿಕದ ನಮ್ಮ ಬದುಕಿನಲ್ಲಿ ಆಫೀಸಿನ ಕೆಲಸ, ಕಾರ್ಯ ಹಾಗೂ ಅದರ ಸಂಬಂಧಿ ಯೋಚನೆಗಳನ್ನು ತೆಗೆದು ಹಾಕಿ ಬಿಟ್ಟರೆ ನಮ್ಮದು ಎಂದು ಉಳಿಯುವ ಭಾಗ ಬಹಳ ಕಡಿಮೆಯೇ ಎನ್ನಿಸಿ ಒಮ್ಮೆ ಭಯವಾಗುತ್ತದೆ.

ಹಿಂದೆ ಮದ್ರಾಸಿನಲ್ಲಿ ಕೆಲಸ ಮಾಡುವಾಗ ವಾರಕ್ಕೆರಡು ಮತ್ತು ತಿಂಗಳಿಗೆರಡು ಸಿಗುವ ರಜೆಗಳನ್ನು ಒಟ್ಟು ಪೋಣಿಸಿಕೊಂಡು ವಾರಗಟ್ಟಲೆ ಕರ್ನಾಟಕದಲ್ಲಿ ತಿರುಗಾಡಿದರೂ ಇನ್ನೂ ಮುಗಿಯದ ಕೆಲಸಗಳು ಹವ್ಯಾಸಗಳು ಅದೆಷ್ಟೋ ಇದ್ದವು. ಇನ್ನೂ ತಂತ್ರಜ್ಞಾನ ಇಷ್ಟು ಮುಂದುವರಿಯದೆ ನಮ್ಮ ನಮ್ಮ ನಡುವೆ ಅಗಾಧ ದೂರಗಳಿದ್ದರೂ ಭೇಟಿಯಾಗಿ, ಮಾತನಾಡಿ, ಮುಟ್ಟಿ, ಹರಟಿ, ಹಾಡಿ, ಜಗಳವಾಡಿ ಮತ್ತೆ ಒಂದು ಗೂಡಿ, ಕುಣಿದು ಕುಪ್ಪಳಿಸುವ ಅನೇಕ ಚಟುವಟಿಕೆಗಳ ತುಡಿತವಿತ್ತು. ಬೇಕಾದಷ್ಟು ನೆಪಗಳಿದ್ದವು, ನೆನಪುಗಳಿದ್ದವು. ಸಾಕಷ್ಟು ಸಂಖ್ಯೆಯ ಗುರುತು-ಪರಿಚಯದವರಿದ್ದರು, ಸಂಬಂಧಿಗಳಿದ್ದರು. ತಿರುಗಲು ದೇವಸ್ಥಾನಗಳಿದ್ದವು, ಮರುಗುವ ಮನಸ್ಸಿತ್ತು. ಎಷ್ಟಿದ್ದರೂ ಸಾಲದು ಇನ್ನೂ ಬೇಕು ಎನ್ನುವ ತುಡಿತವಿತ್ತು. ಸಾಹಿತ್ಯವಿತ್ತು, ಸಂಗೀತವಿತ್ತು, ಸಿನಿಮಾಗಳಿದ್ದವು, ಪುಸ್ತಕಗಳಿದ್ದವು, ನಿಯತಕಾಲಿಕಗಳಿದ್ದವು. ಒಂದೂರಿನಿಂದ ಮತ್ತೊಂದು ಊರಿಗೆ ಹೋಗುವ ಮಾರ್ಗದಲ್ಲಿ ಓದಿ ಮುಗಿಸಿದ ಅದೆಷ್ಟೋ ಲಂಕೇಶ್, ಸುಧಾ, ತರಂಗ, ಮಯೂರ, ಉತ್ಥಾನ, ಮಲ್ಲಿಗೆ, ಪ್ರಜಾಮತದ ವಾಹಿನಿಗಳಿದ್ದವು. ಊರಿಗೊಂದಿರುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಬೇಂದ್ರೆ, ಭೈರಪ್ಪ, ತರಾಸು, ಕಾರಂತ, ಮಾಸ್ತಿ, ಕುವೆಂಪು ಮೊದಲಾದ ಸ್ನೇಹಿತರ ಅನುಭವಗಳು ಅನಂತವಾಗಿ ಹಾಗೂ ಪುಕ್ಕಟೆಯಾಗಿ ಸಿಗುತ್ತಿದ್ದವು. ಇಂತಹ ಅಪರಿಮಿತ ಅನುಭವಗಳನ್ನು ಪಠಿಸಿ-ಪ್ರವಚಿಸಿದ ಘಟಾನುಗಟಿಗಳ ಸಾರ ಸುಲಭವಾಗಿ ಸಿಗುತ್ತಿತ್ತು. ಹಲವಾರು ತತ್ವಗಳು ಸಿಗುತ್ತಿದ್ದವು - ಒಂದು ರೀತಿ ಬಯಲಿನಲ್ಲಿ ಮೇಯುವ ದನಕ್ಕೆ ಸಿಗುವ ಅವಕಾಶದ ಹಾಗೆ, ಅಂತಹ ಅಗಾಧವಾದ ಅನೇಕಾನೇಕ ಬಯಲುಗಳು ಮೇಯಲಿದ್ದವು.

ಇವೆಲ್ಲದರ ಬಗ್ಗೆ ಈಗ ಬರೀತಾ ಹೋದರೆ ಅದು ಸವಿ ನೆನಪಾಗುತ್ತದೆ, ಅದರ ಮರುಘಳಿಗೆ ಅದು ನಾಸ್ಟಾಲ್ಜಿಯಾವಾಗಿ ಕಾಣುತ್ತದೆ. ಆದರೆ ಈವರೆಗೆ ಒಂದು ವಿಷಯವಂತೂ ಸತ್ಯ - ನಾವು, ನಮ್ಮ ವೇಕೇಷನ್ನುಗಳು, ನಮ್ಮ ದುಡಿಮೆ-ಇಡುಗಂಟು ಇವೆಲ್ಲದರ ಸಾಕ್ಷಾತ್ಕಾರ ಈ ಮೇಲಿನ ನಾಸ್ಟಾಲ್ಜಿಯಾದೊಂದಿಗೆ ಮಾತ್ರವೇ. ಅದನ್ನು ಹೊರತು ಪಡಿಸಿ, ಅಮೇರಿಕದಲ್ಲಿ ನಮ್ಮ ವೇಕೇಷನ್ನುಗಳಿಗೆ ಪೂರ್ಣ ಅರ್ಥ ಬಂದಿದ್ದಿಲ್ಲ, ನಮ್ಮ ಅರ್ಥ ಪರಿಸ್ಥಿತಿ ಪರಿಪೂರ್ಣವಾದದ್ದಿಲ್ಲ. ನಿಜವಾಗಿಯೂ ನಮ್ಮತನವನ್ನು ಕಲಕಿ ನೋಡುವ ವೆಕೇಷನ್ನುಗಳು ಕೆಲವು ಪುಣ್ಯಾತ್ಮರಿಗೆ ವರ್ಷಕ್ಕೊಮ್ಮೆ ಬರುತ್ತವೆ, ಇನ್ನು ಕೆಲವು ನಮ್ಮಂಥವರಿಗೆ ಮೂರು-ನಾಲ್ಕು ವರ್ಷಕ್ಕೊಮ್ಮೆ ಕೂಡಿ ಬರುತ್ತದೆ. ಬರೀ ವಿದೇಶ ಪ್ರಯಾಣದ ಯೋಗವೊಂದಿದ್ದರೆ ಸಾಲದು, ಮತ್ತೆ ಮರಳಿ ಸ್ವದೇಶವನ್ನು ಆಗಾಗ್ಗೆ ನೋಡುವ ಯೋಗವೂ ಇರಬೇಕು ಎನ್ನುವ ಆಲೋಚನೆ ಬಂದಿದ್ದು ಇತ್ತೀಚೆಗೆ ಮಾತ್ರ.

ಹಿಂದೆ ಎರಡು ಭುಜಗಳಿದ್ದ ಮನಕ್ಕೆ ಇಂದು ಎಂಟು ರೆಕ್ಕೆಗಳಿವೆ, ಎಲ್ಲಿಗಾದರೂ ಹೋಗಬೇಕು ಬರಬೇಕು ಎಂದರೆ ಅದರ ಮುಂದಿನ ತಯಾರಿ ಮತ್ತು ಅದರ ನಂತರದ ಚಿಂತೆಗಳು ಅನಿವಾರ್ಯವಾಗುತ್ತವೆ. ಹಣ ಹೆದರಿಕೆ ಎರಡೂ ಒಂದೇ ನಾಣ್ಯದ ಮುಖಗಳ ಹಾಗೆ ಒಂದನ್ನೊಂದು ಅನುಸರಿಸಿಕೊಂಡು ಬಂದಿವೆ - ಹಿಂದೆ ಹೆಗ್ಗೋಡಿನಿಂದ ಸಾಗರಕ್ಕೆ ನಿನಾಸಂ ನಾಟಕ ಮುಗಿಸಿ ನಡೆದುಕೊಂಡು ಬಂದಾಗ ಕತ್ತಲಿನ ದಾರಿಯಲ್ಲಿ ಹಾವಿದ್ದರೆ ಎನ್ನುವ ಹೆದರಿಕೆ ಇರಲಿಲ್ಲ, ಇಂದು ಕಾರಿನಲ್ಲಿ ಬೆಚ್ಚಗೆ ಕುಳಿತು ರಾತ್ರಿ ಡ್ರೈವ್ ಮಾಡುತ್ತಿದ್ದರೆ ರಸ್ತೆಯ ನಡುವೆ ಜಿಂಕೆಗಳು ಬಂದರೆ ಎಂದು ಕಂಪನ ಶುರುವಾಗುತ್ತದೆ.

ವರ್ಷವಿಡೀ ದುಡಿದು ಇರುವ ಮೂರು ನಾಲ್ಕು ವಾರಗಳನ್ನು ಒಟ್ಟುಗೂಡಿಸಿ ಕೆಲವು ವರ್ಷಗಳಿಗೊಮ್ಮೆ ಮಾಡುವ ಸ್ವದೇಶ ಪ್ರಯಾಣ ತರುವ ಸುಖಕ್ಕಿಂತ ಹೆಚ್ಚು ಕೆಲಸವಾಗುತ್ತದೆ, ವೆಕೇಷನ್ನಿನ್ನಲ್ಲಿ ಎಲ್ಲರೂ ಎಣಿಸಿ ಖರ್ಚು ಮಾಡುವುದಕ್ಕಿಂತ ಹೆಚ್ಚೇ ಕಾಸು ಕಳಚಿ ಹೋಗುತ್ತದೆ. ನಮ್ಮನ್ನು ಭೇಟಿಯಾಗುವವರ ಅನೇಕಾನೇಕ ಮುಖಗಳು ಅವುಗಳ ಹಿಂದಿನ ಕಥನವನ್ನು ಮನಸ್ಸಿನಲ್ಲಿ ತೆರೆದುಕೊಳ್ಳುತ್ತವೆ. ನಮ್ಮ ನೆನಪಿನಲ್ಲಿರುವ ಹಾಗಿನ ಎಷ್ಟೋ ವ್ಯಕ್ತಿಗಳು ಇನ್ನೂ ಹರೆಯದವರಾಗಿರದೆ ಮುದುಕುರಾಗಿರುವುದನ್ನು ಅಪ್‌ಡೇಟ್ ಮಾಡಿಕೊಳ್ಳಲು ವಿದುಳು ಹೆಣಗುತ್ತದೆ. ಇತ್ತೀಚೆಗೆ ಕೇಳಿರದ ಅನೇಕ ಪದ-ವಾಕ್ಯಗಳ ಬಳಕೆ ಬೆಚ್ಚಿ ಬೀಳಿಸುತ್ತದೆ. ಅಲ್ಲಲ್ಲಿ ಕೇಳಿಬರುವ ಸಿನಿಮಾ ಹಾಡುಗಳು ಹೊಸದಾಗೇ ಉಳಿಯುತ್ತವೆ. ಹುಟ್ಟಿದ ಹೊಸಬರು, ಸತ್ತ ಹಳೆಯವರನ್ನು ಕುಟುಂಬಗಳ ಹಿನ್ನೆಲೆಯಲ್ಲಿ ತಾಳೆ ಹಾಕಿಕೊಳ್ಳುವುದು ಮುಗಿಯದ ಲೆಕ್ಕವಾಗುತ್ತದೆ.

’ನಾಲ್ಕು ವಾರ ವೆಕೆಷೆನ್ನಾ...’ ಎಂದು ಕೇಳಿ ಬರುವ ಉದ್ಗಾರಗಳಿಗೆ ಉತ್ತರವಾಗಿ ’ನಮ್ಮ ವೆಕೇಷನ್ನುಗಳ ಹಣೆಬರಹ ಇವರಿಗೇನು ಗೊತ್ತು!’ ಎನ್ನುವ ಹೇಳಿಕೆ ಮನದಲ್ಲೇ ಉಳಿದುಬಿಡುತದೆ. ವೆಕೇಷನ್ನಿಗೆ ಹೋಗುವುದಕ್ಕಿಂತ ಮೊದಲು ಹಾಗೂ ವೆಕೇಷನ್ನಿಂದ ಬಂದ ನಂತರ ಕೆಲಸಗಳು ಮಾತ್ರ ಅತಿಯಾಗಿ ಹೋಗುತ್ತವೆ. ಪ್ರತಿವರ್ಷ ಹೀಗೆ ಹೋಗಬೇಕು ಎನ್ನುವ ಆಸೆ, ಆಸೆಯಾಗಿಯೇ ಉಳಿದು ಕಣ್ಣು ಮುಚ್ಚಿ ತೆರೆಯುವುದರೊಳಗೆ ಮೂರು-ನಾಲ್ಕು ವರ್ಷಗಳಿಗೊಮ್ಮೆಯಾಗಿ ಬಿಡುತ್ತದೆ.

Sunday, August 16, 2009

ಕೇವಲ 62 ವರ್ಷದ ಸ್ವಾತ್ಯಂತ್ರ್ಯ

ನಿನ್ನೆ ಸ್ವಾತಂತ್ರ್ಯೋತ್ಸವಗಳನ್ನು ಟಿವಿಯಲ್ಲಿ ನೋಡ್ತಾ ಇದ್ದಾಗ, ವರದಿಗಳನ್ನು ಓದ್ತಾ ಇದ್ದಾಗ ನಮ್ಮದು ಕೇವಲ 62 ವರ್ಷದ ಸ್ವಾತ್ಯಂತ್ರ್ಯ ಅಷ್ಟೇ ಅಂತ ಅನ್ಸಿದ್ದು ವಿಶೇಷ. ಈ ಹಿಂದೆ ನನಗೆ ನೆನಪಿರೋ ಹಾಗೆ ನಮ್ಮ ಹೈ ಸ್ಕೂಲು ದಿನಗಳಿಂದ ಹಿಡಿದು ನಲವತ್ತು, ಐವತ್ತು, ಅರವತ್ತು ವರ್ಷಗಳ ಆಚರಣೆಗಳನ್ನು ಮಾಡಿ-ನೋಡಿದ್ದರೂ ಈಗ ಅನ್ನಿಸ್ತಿರೋ ಹಾಗೆ ನಮ್ಮ ದೇಶ ಬ್ರಿಟೀಷರಿಂದ ಸ್ವಾತ್ರಂತ್ರ್ಯ ಪಡೆದದ್ದು ರಿಲೇಟಿ‌ವ್ ಆಗಿ ಇತ್ತೀಚೆಗೆ ಅನ್ನೋ ಭಾವನೆ ಬಲವಾಗ್ತಿದೆ.

ಈ ಆರು ದಶಕಗಳ ಸ್ವಾತಂತ್ರ್ಯದಲ್ಲಿ ನನಗೆ ಗೊತ್ತಿರೋ ಹಾಗೆ ಎರಡು-ಮೂರು ದಶಕಗಳನ್ನು ಚೆನ್ನಾಗಿ ಗಮನಿಸಿದರೆ, ಅದರಲ್ಲೂ ನಮ್ಮ ವಯಸ್ಸಿನವರಿಗೆ ಅನ್ವಯವಾಗುವ ಎಂಭತ್ತು ಹಾಗೂ ತೊಂಭತ್ತರ ದಶಕಗಳಲ್ಲಿ ಭಾರತ ಬಹಳಷ್ಟು ಬೆಳೆದಿದೆ. ತದನಂತರ ಎರಡು ಸಾವಿರದ ದಶಕದಲ್ಲಂತೂ ಎಲ್ಲಾ ಬೆಳವಣಿಗೆಗಳು ಮುಗಿಲು ಮುಟ್ಟಿದವು ಎಂದೇ ಹೇಳಬೇಕು. ನಾವು ಪಾಕಿಸ್ತಾನದವರ ಹಾಗೆ ಸ್ವಾತಂತ್ರ್ಯ ಸಿಕ್ಕ ಮೊದಲನೇ ದಿನದಿಂದ ವಿದೇಶಿಯರಿಗೆ ನಮ್ಮ ಮಾರ್ಕೆಟ್ಟುಗಳನ್ನು ತೆರೆದುಕೊಳ್ಳಲಿಲ್ಲ, ಎಂಭತ್ತು ಹಾಗು ತೊಂಭತ್ತರ ದಶಕದ ಅಂತ್ಯದವರೆಗೂ ಎಲ್ಲವೂ ಸರ್ಕಾರೀ ಸ್ವಾಧೀನದಲ್ಲೇ ಇತ್ತು. ಇಂದಿಗೂ ಸಹ ಬೇಕಾದಷ್ಟು ರಂಗಗಳಲ್ಲಿ ಸರ್ಕಾರಿ ಹಿಡಿತವಿದೆ. ನಮ್ಮ ದೇಶಕ್ಕೆ ವಿದೇಶಿ ಸರಕುಗಳು ನಿಧಾನವಾಗಿ ಬಂದವು. ರಕ್ಷಣಾ ತಂತ್ರಜ್ಞಾನವೇನೋ ಮೊದಲೇ ತೆರೆದುಕೊಂಡಿತು, ಆದರೆ ಮಿಕ್ಕವು ತಡವಾಗಿದ್ದಂತೂ ನಿಜ.

ಈ ಜಾಗತೀಕರಣ ಅನ್ನೋ ನಾಣ್ಯಕ್ಕೆ ಎರಡು ಮುಖಗಳಿದ್ದರೆ, ಅದರಲ್ಲಿ ಮೊದಲನೆಯದು ಒಂದು ದೇಶದ ಒಳಗಿನಿಂದ ಹೊರಹೋಗುವುದನ್ನು ಪ್ರತಿಬಿಂಬಿಸಿದರೆ ಮತ್ತೊಂದು ಹೊರದೇಶಗಳಿಂದ ಒಳಬರುವುದನ್ನು ಪ್ರತಿನಿಧಿಸುತ್ತದೆ. ಈ ಒಳ-ಹೊರ ಹೋಗುವುದನ್ನು ಯಾವುದೇ ವಿಚಾರಕ್ಕೂ ಅಳವಡಿಸಬಹುದು - ಆಮದು/ರಫ್ತು, ಸಂಸ್ಕೃತಿ, ಭಾಷೆ, ತಂತ್ರಜ್ಞಾನ, ವಿನ್ಯಾಸ, ವಿದ್ಯೆ, ಆಚಾರ-ವಿಚಾರ, ಇತ್ಯಾದಿ. ಸರಿ, ನಮಗೇನೋ ಇಂಗ್ಲೀಷರಿಂದ ಸ್ವಾತ್ರಂತ್ರ್ಯ ಸಿಕ್ಕಿತು, ಆದರೆ ಇವತ್ತಿನವರೆಗೂ ಉಳಿದ ದೇಶಗಳಲ್ಲಿ ಇಂಗ್ಲೀಷರ ಸಂತಂತಿ ಅಳಿದುಳಿದ ಹಾಗೆ ಭಾರತದಲ್ಲಿ ಏಕೆ ಮುಂದುವರೆಯಲಿಲ್ಲ ಎನ್ನುವ ಪ್ರಶ್ನೆ ಬರುತ್ತದೆ. ಯಾವಾಗಲೂ ಛಳಿಯೆಂದು ಒದ್ದಾಡುವ ಯುರೋಪಿಯನ್ನರಿಗೆ ಭಾರತದಂತಹ ದೇಶದಲ್ಲಿ ಬೇಕಾದಷ್ಟು ಹವಾಮಾನದ ವೇರಿಯೇಷನ್ನುಗಳಿರುವಂಥ ಪ್ರದೇಶಗಳಿರುವಾಗ ನಮ್ಮಲ್ಲಿ ಎರಡನೇ ಮೂರನೇ ಜನರೇಷನ್ನ್ ಭಾರತೇತರ ಮೂಲದ ಜನರು ಏಕೆ ನೆಲಸದಿದ್ದಿರಬಹುದು? ಅದೇ ಬ್ರಿಟೀಷರಿಂದ ಸ್ವಾತಂತ್ರ್ಯ ಪಡೆದ ಉಳಿದ ದೇಶಗಳಲ್ಲಿ ಹೆಚ್ಚು ಹೆಚ್ಚು ಯುರೋಪ್ ಪ್ರಭಾವವನ್ನು ಇವತ್ತಿನವರೆಗೂ ನಾವು ಕಾಣಬಹುದು. ಏಕೆ ಹೀಗೆ?

ಭಾರತದ ನೆಲವನ್ನು ಶತಮಾನಗಳ ಕಾಲ ಆಳಿದ ಯುರೋಪಿಯನ್ನರ ಪ್ರಭಾವ ನಮ್ಮಲ್ಲಿ ಇವತ್ತಿಗೂ ಬಹಳ ದೊಡ್ಡದು. ಒಳ್ಳೆಯದು ಕೆಟ್ಟದ್ದು ಎಂದು ಆಲೋಚಿಸುವುದನ್ನು ಆಬ್ಜೆಕ್ಟಿವ್ ಆಗಿ ಮಾಡಬೇಕಾಗುತ್ತದೆ. ನಮ್ಮಲ್ಲಿ ಹರಿದು ಹಂಚಿ ಹೋಗಿದ್ದ ಪ್ರಾಂತ್ಯಗಳನ್ನು, ಸ್ಥಳೀಯ ರಾಜ ಪರಂಪರೆಗಳನ್ನು ಒಡೆದು-ಒಂದುಗೂಡಿಸಿ ಆಳಿ ಒಂದು ಭಾರತ ದೇಶವಾಯಿತು. ಜೊತೆಗೆ ರೇಲ್ ರೋಡ್, ಅಂಚೆ ವ್ಯವಸ್ಥೆ, ಆಂಗ್ಲ ವಿದ್ಯಾಭ್ಯಾಸ, ವಸ್ತ್ರ ವಿನ್ಯಾಸಗಳು, ಕೇಶ ಶೈಲಿ, ಮತ ಪಂಗಡಗಳು, ಆಹಾರ-ವಿಚಾರಗಳು, ಪಾನೀಯಗಳು, ಹೂವುಗಳು, ತರಕಾರಿಗಳು, ವಿಷಯ-ವಸ್ತುವನ್ನೊಂದನ್ನು ಬೇರೆ-ಬೇರೆ ರೀತಿಯಲ್ಲಿ ನೋಡುವ ದೃಷ್ಟಿಕೋನ... ಹೀಗೆ ಪಟ್ಟಿ ಮುಂದುವರೆಯುತ್ತದೆ. ಇವೆಲ್ಲ ನಮ್ಮನ್ನು ಆಳಿದವರು ನಮಗೆ ನೀಡಿದ ಬಳುವಳಿ. ಇಂತಹ ಬಳುವಳಿಗಳು ಸ್ವಾತಂತ್ರ್ಯೋತ್ತರ ಸಮಾಜದಲ್ಲಿ ತಲೆಮಾರುಗಳು ಮುಂದುವರೆದ ಹಾಗೆ ಅವುಗಳು ಒಂದೊಂದೇ ವಿಶೇಷ ರೂಪಗಳನ್ನು ಪಡೆದುಕೊಳ್ಳತೊಡಗಿದವು. ಯಾವುದು ಸಾವಿರಾರು ವರ್ಷಗಳ ನಮ್ಮ ಇತಿಹಾಸದಲ್ಲಿ ಒಂದು ಭಾಷೆಯಾಗಿ ಯಾವುದು ಉತ್ತರ-ದಕ್ಷಿಣ-ಪೂರ್ವ-ಪಶ್ಚಿಮಗಳಲ್ಲಿ ನಮ್ಮನ್ನು ಒಂದುಗೂಡಿಸಿರಲಿಲ್ಲವೋ ಆ ಕೆಲಸವನ್ನು ಇಂಗ್ಲೀಷ್ ಮಾಡಿತು. ತಲೆ ತಲೆಮಾರುಗಳ ತರುವಾಯ ಯಾವ ವ್ಯವಹಾರ-ವಾಣಿಜ್ಯ ನಮ್ಮಲ್ಲಿ ಉಳಿದು-ಬೆಳೆದುಕೊಂಡು ಬಂದಿತ್ತೋ ಅದರ ಸ್ಥಳದಲ್ಲಿ ಇಂಗ್ಲೀಷ್ ಮೂಲದ ಬಿಸಿನೆಸ್ಸ್ ಪ್ರಾಸೆಸ್ಸುಗಳು ಬಂದವು. ಈ ಜಗತ್ತಿನಲ್ಲಿ ಯಾರು-ಏನು-ಎಲ್ಲೆಲ್ಲಿ-ಹೇಗೆ ಎನ್ನುವ ನಿರ್ಧಾರಗಳು ನಿಲುವುಗಳು ಬದಲುಗೊಂಡವು. ಜಗತ್ತು ಚಿಕ್ಕದಾಯಿತು, ಮನುಷ್ಯ ಪರಂಪರೆಗಳು ಮೊದಲಿಗಿಂತ ಹತ್ತಿರ ಬಂದವು.

ನಮ್ಮ ಸಾವಿರಾರು ವರ್ಷಗಳ ಪರಂಪರೆಯ ಮುಂದೆ ಈ ಸ್ವಾತಂತ್ರ್ಯೋತ್ತರ ಆರು ದಶಕಗಳು ಸಂಖ್ಯೆಯಲ್ಲಿ ಬಹಳ ದೊಡ್ಡವೇನು ಅಲ್ಲ, ಆದರೆ ಈ ಆರು ದಶಕಗಳಲ್ಲಿ ಆದ ದೇಶದ ಬೆಳವಣಿಗೆ ಹಾಗೂ ಪ್ರಗತಿ ಗಣನೀಯ. ನಮಗೆ ನಮ್ಮ ಮೂಲಭೂತ ಸಮಸ್ಯೆಗಳು ಎಂದಿಗೂ ಇರುವಂಥವೇ ಎನ್ನಿಸುವಂತಾಗಿದೆ, ನಮ್ಮ ದೇಶದಲ್ಲಿ ನೂರಕ್ಕೆ ಐವತ್ತು ಮಂದಿಗೆ ತಮ್ಮ ಹೆಸರನ್ನು ಬರೆಯಲು ಬಾರದು ಎನ್ನುವುದರಲ್ಲಿ ಬದಲಾವಣೆಯನ್ನು ಕಾಣಲು ಇನ್ನೂ ಬಹಳ ವರ್ಷಗಳೇ ಬೇಕಾಗುತ್ತವೆ, ನಮ್ಮವರಿಗೆಲ್ಲ ಸ್ವಚ್ಛ ಕುಡಿಯುವ ನೀರಿನ ಅಗತ್ಯ ಯಾವತ್ತಿನಿಂದ ಇದ್ದರೂ ಅದನ್ನು ಪೂರೈಸುವುದು ಇನ್ನೂ ಪ್ರಯತ್ನವಾಗಿಯೇ ಉಳಿಯುತ್ತದೆ, ಕೋಟ್ಯಾಂತರ ಜನರು ಕೆಲಸ ಮಾಡಬಲ್ಲವರಾದರೂ, ಕೆಲಸವಿಲ್ಲದವರಾಗುತ್ತಾರೆ. ಜನರಿಂದ ಜನರಿಗಾಗಿ ಬೇಕಾಗುವ ಕೆಲಸ ಹುಟ್ಟಿ ಇಂಡಸ್ಟ್ರಿಗಳು ಬೆಳೆಯದೇ ಹೋಗಿ, ಅಗತ್ಯದ ಕೆಲಸ ಕಾರ್ಯಗಳಲ್ಲಿ ಚಿಕ್ಕ ಮಕ್ಕಳ ಬಳಕೆಯಾಗುತ್ತದೆ. ವೃತ್ತಿ ಶಿಕ್ಷಣ ಸಂಬಂಧಿ ನಿಲುವು ಹೆಚ್ಚಾಗದೇ ಒಂದು ವಿದ್ಯೆ, ಬಿಸಿನೆಸ್ಸನ್ನು ತಮ್ಮದೆನ್ನಿಸಿಕೊಳ್ಳದೇ ಎಲ್ಲರಿಗೂ ಎಲ್ಲವೂ ಗೊತ್ತು ಆದರೆ ಯಾರೂ ಪರಿಣಿತರಿಲ್ಲವೆನ್ನುವಂತಾಗುತ್ತದೆ.

ನನ್ನಂಥವರಿಗೆ ಆರು ದಶಕಗಳ ಸ್ವಾತಂತ್ರ್ಯದ ಸವಿಯುಂಡ ಒಂದು ದೇಶದ ಹಿನ್ನೆಲೆಯಿದೆ, ಜೊತೆಗೆ ೨೩ ದಶಕಗಳ ಸ್ವಾತಂತ್ರ್ಯವನ್ನು ಅನುಭವಿಸುತ್ತಿರುವ ಮತ್ತೊಂದು ದೇಶದ ಸದರಿ ಆಗು-ಹೋಗುಗಳ ಅರಿವಿದೆ. ತಂತ್ರಜ್ಞಾನ-ಸಂವಹನ ರಂಗದಲ್ಲಿ ಇತ್ತೀಚೆಗೆ ಕ್ರಾಂತಿಯಾದದ್ದನ್ನು ನಾವು ಕಣ್ಣಾರೆ ಕಂಡು ಅನುಭವಿಸಿದ್ದೇವೆ. ಇನ್ನೂ ಎರಡು ದಶಕಗಳ ಬಳಕೆಯಲ್ಲಿ ಬೆಳೆಯುತ್ತಿರುವ ಸಾಮಾನ್ಯ ಜನರ ಅಂತರ್ಜಾಲದ ಸೂಪರ್ ಹೈವೇ ಹಾಗೂ ನೂರಾರು ವರ್ಷಗಳ ಹಿಂದೆ ಯಾರೋ ತೆರೆದಿಟ್ಟ ದಾರಿಗಳಿರುವಾಗ ಮುಂದೆ ಇವೆಲ್ಲ ಮುಂದೆ ಹೇಗೆ ಎನ್ನುವ ಕುತೂಹಲ ಎಂದಿಗಿಂತಲೂ ಇನ್ನೂ ಬಲವಾಗಬಹುದು.

ನಮ್ಮಲ್ಲಿ ಸಮಸ್ಯೆಗಳು ಹೆಚ್ಚು ಎಂದು ಕೈ ಚೆಲ್ಲಿ ಕೂರುವುದರಲ್ಲಿ ಅರ್ಥವಿಲ್ಲ. ನಮ್ಮಲ್ಲಿನ ಹೆಚ್ಚು ಜನಸಂಖ್ಯೆಯೇ ಎಲ್ಲದಕ್ಕೂ ಕಾರಣ ಎಂದು ದೂರಿ ಫಲವಿಲ್ಲ. ಇವೆಲ್ಲ ನಮ್ಮತನದಲ್ಲಿ ಅವಿಭಾಜ್ಯವಾಗಿ ಸೇರಿಹೋಗಿವೆ. ನಮ್ಮ ದೇಶವನ್ನು ಅಮೇರಿಕದಷ್ಟು ಉದ್ದ-ಅಗಲವಾಗಿ ಹಿಗ್ಗಿಸಲಾಗದು. ನಮ್ಮಲ್ಲಿ ಅಮೇರಿಕದ ಸವಲತ್ತು-ಸಂಪನ್ಮೂಲಗಳನ್ನು ಒಂದೇ ದಿನದಲ್ಲಿ ಸೃಷ್ಟಿಸಲಾಗದು. ನಮ್ಮ ಮೂಲಭೂತ ಸಮಸ್ಯೆಗಳನ್ನು ಒಂದೇ ಕ್ಷಣದಲ್ಲಿ ನಿರ್ಮೂಲನ ಮಾಡಲಾಗದು. ಇವುಗಳಿಗೆಲ್ಲ ಉತ್ತರ ಬಹಳ ದೂರದ ಪ್ರಯಾಣ ಹಾಗೂ ಅಂತಹ ಅಪರಿಮಿತ ಪ್ರಯಾಣದಲ್ಲಿ ದೊರಕುವ ಯಶಸ್ಸಿನ ಮೈಲುಗಳು ಈ ಸಮಸ್ಯೆಗಳಿಗೆ ಉತ್ತರಗಳು. ಇನ್ನೂ ನೂರು-ಇನ್ನೂರು ವರ್ಷಗಳಲ್ಲಾದರೂ ನಾವು ಪ್ರಭಲರಾಗುತ್ತೇವೆ. ನಮ್ಮ ಸಂಖ್ಯೆ ನಮ್ಮ ಶಕ್ತಿಯಾಗುತ್ತದೆ. ನಾವು ಎಲ್ಲರಿಗಿಂತ ಮುಂದಿರುತ್ತೇವೆ.

ಇವು ಬರೀ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮಾಡೋ ವಿಷ್ ಆಗಲೀ ವಿಷ್‌ಫುಲ್ ಆಲೋಚನೆಗಳಾಗಲೀ ಆಗದೇ ಆದಷ್ಟು ಬೇಗ ನಿಜವಾಗುವುದನ್ನು ನಮ್ಮ ತಲೆಮಾರು ನೋಡಿದ್ದರೆ ಎಷ್ಟೊಂದು ಚೆನ್ನಿತ್ತು ಅನ್ನಿಸೋದಿಲ್ಲವೇ?

Friday, August 14, 2009

ಕಷ್ಟಗಳು, ಉಳಿತಾಯ ಹಾಗೂ ಮೋಕ್ಷ

’ಬಹಳ ಕಷ್ಟಾ ಸ್ವಾಮಿ, ಇತ್ತೀಚೆಗೆ’. ಅನ್ನೋ ಮಾತು ಆಗಾಗ್ಗೆ ಕೇಳಿ ಬರ್ತಾನೇ ಇರುತ್ತೆ. ಕೆಲಸ ಕಳೆದುಕೊಂಡವರ ಬಗ್ಗೆ, ಮನೆಗಳ ಬೆಲೆ ಕುಸಿದು ಮಾರಲೂ ಆಗದೇ ಅವುಗಳ ಸಾಲವನ್ನು ಕಟ್ಟಲೂ ಆಗದೇ ಕೊರಗುವವರ ಬಗ್ಗೆ, ಒಂದೇ ಮನೆಯಲ್ಲಿ ಇತ್ತೀಚೆಗಷ್ಟೇ ಕಾಲೇಜು ಮುಗಿಸಿದ ಕೆಲಸ ಹುಡುಕುತ್ತಿರುವ ಮಕ್ಕಳ ಜೊತೆಗೆ ಪೋಷಕರೂ ಕೆಲಸ ಹುಡುಕುತ್ತಿರುವುದರ ಬಗ್ಗೆ, ಇನ್ನೇನು ನಿವೃತ್ತರಾಗಬೇಕು ಎನ್ನುಕೊಳ್ಳುವವರು ಮತ್ತಿನ್ನೊಂದಿಷ್ಟು ವರ್ಷಗಳ ಕಾಲ ಕೆಲಸ ಮಾಡಲೇ ಬೇಕು ಎನ್ನುವುದರ ಬಗ್ಗೆ ಹೀಗೆ ಹಲವಾರು ವರದಿಗಳು ಅಲ್ಲಲ್ಲಿ ಕಾಣಸಿಗುತ್ತವೆ.

ಬಡತನದಲ್ಲಿ ಹುಟ್ಟಿ ಬೆಳೆದವರಿಗೆ ಮುಂದೆ ಅವರು ಯಾವುದೇ ಸ್ಟೇಟಸ್‌ನಲ್ಲಿದ್ದರೂ ಅವರ ಸರ್ವೈವಲ್ ತಂತ್ರಗಳು ಯಾವಾಗಲೂ ಜೀವಂತವಾಗಿಯೇ ಇರುತ್ತವೆ ಎಂದು ಹೇಳಬೇಕು. ಒಮ್ಮೆ ಬಡತನದಲ್ಲಿ ಸಿಕ್ಕಿಕೊಂಡರೆ ಅದರ ಪರಿಣಾಮಗಳು ಒಂಥರಾ ರಕ್ತದಲ್ಲಿರುವ ಯಾವುದೇ ಖಾಯಿಲೆಯ ವೈರಾಣುಗಳ ಹಾಗೆ ಯಾವತ್ತೂ ಜೀವಂತವಾಗೇ ಉಳಿದು ಕಷ್ಟದ ಪರಿಸ್ಥಿತಿಯಲ್ಲಿ ಹಳೆಯ ಇನ್‌ಸ್ಟಿಂಕ್ಸ್ ಎಲ್ಲ ಕೆಲಸ ಮಾಡಲು ಆರಂಭಿಸುತ್ತವೆ. ಅದೇ ಹುಟ್ಟಿದಂದಿನಿಂದ ಬಡತನವನ್ನು ಕಾಣದೇ ಇದ್ದವರ ಮೊದಲ ಬಡತನದ ಬವಣೆ ಬಲುಕಷ್ಟ.

ನಮ್ಮ ಪಕ್ಕದ ಮನೆಯವರು ಈ ಹತ್ತು ವರ್ಷಗಳಿಂದಲೂ ಪ್ರತಿನಿತ್ಯ ತಮ್ಮ ಮನೆಯ ಸುತ್ತಲೂ ಕನಿಷ್ಠ ಇಪ್ಪತ್ತು ವಿದ್ಯುತ್ ದೀಪಗಳನ್ನು ಉರಿಸುತ್ತಿದ್ದರು - ಗರಾಜ್ ಲೈಟ್‌ಗಳು, ಎದುರು ಲಾನ್‌ನಲ್ಲಿರುವ ಮರಗಳಿಗೆ ಫೋಕಸ್ ಲೈಟ್‌ಗಳು, ಮನೆಯ ಮುಂದಿನ ಬಾಗಿಲಿಗೆ, ಡ್ರೈವ್‍ ವೇ ಅಕ್ಕಪಕ್ಕದಲ್ಲಿ ಇತ್ಯಾದಿ. ಈ ಲೈಟುಗಳೆಲ್ಲ ಅಟೋಮ್ಯಾಟಿಕ್ ಆಗಿ ರಾತ್ರಿ ಪೂರ್ತಿ ಉರಿದು ಬೆಳಿಗ್ಗೆ ಆರಿಹೋಗುತ್ತಿದ್ದವು, ಅದೇ ನಮ್ಮ ಮನೆಯಲ್ಲಿ ದಿನಕ್ಕೆ ಕೆಲವು ಘಂಟೆಗಳು ಮಾತ್ರ ಮುಂದಿನ ಬಾಗಿಲಿನ ಎರಡು ಎನರ್ಜಿ ಎಫಿಷಿಯಂಟ್ ಬಲ್ಬ್‌ಗಳು ಉರಿಯುತ್ತಿದ್ದವು. ಹೋದ ವರ್ಷದ ಕೊನೆಯಲ್ಲಿ ಇದ್ದಕ್ಕಿದ್ದ ಹಾಗೆ ನಮ್ಮ ಇಲೆಕ್ಟ್ರಿಕ್ ಬಿಲ್ ಡಬಲ್ ಆಯಿತು, ನಾನೂ ಗಾಬರಿಗೊಂಡು ಒಂದಿಬ್ಬರನ್ನು ಕೇಳಿ ತಿಳಿದಾಗ ಅವರದ್ದೂ ಅದೇ ಪರಿಸ್ಥಿತಿ. ಹಾಗಾದ ಮರುದಿನವೇ ಪಕ್ಕದ ಮನೆಯ ಲೈಟುಗಳು ಎಲ್ಲವೂ ನಿಂತು ಹೋದವು, ಅವರು ಮನೆಯಲ್ಲಿದ್ದ ದಿನಗಳು ಮಾತ್ರ ಮುಂದಿನ ಬಾಗಿಲಿಗೆ ಒಂದು ಎನರ್ಜಿ ಎಫಿಷಿಯಂಟ್ ಲೈಟ್ ಬಲ್ಬ್ ಉರಿಯತೊಡಗಿತು. ಕೇವಲ ಎಲೆಕ್ಟ್ರಿಕ್ ಬಿಲ್ ವಿಚಾರವೊಂದೇ ಅಲ್ಲ, ಅವರ ಖರ್ಚು-ವೆಚ್ಚ ಜೀವನ ಶೈಲಿಯಲ್ಲೂ ಬದಲಾವಣೆಗಳು ಗೋಚರಿಸತೊಡಗಿದವು: ನ್ಯೂಸ್ ಪೇಪರ್ ಸಬ್‌ಸ್ಕ್ರಿಫ್ಷನ್ ನಿಂತು ಹೋಗುವುದು, ವರ್ಷದ ವೆಕೇಷನ್ನ್ ಕ್ಯಾನ್ಸಲ್ ಆಗುವುದು, ಮುಂತಾಗಿ.

ಒಂದು ವಸ್ತು ನಮ್ಮದೋ ಅಲ್ಲವೋ ಎಲ್ಲ ಕಡೆ ಕನ್ಸರ್‌ವೇಟಿವ್ ಆಗಿರುವುದು ಒಂದು ಬಗೆ - ಉದಾಹರಣೆಗೆ ನಮ್ಮ ಆಫೀಸಿನಲ್ಲಿ ನಾವು ಪ್ರಿಂಟ್ ಮಾಡುವ ಪ್ರತಿಯೊಂದು ಡಾಕ್ಯುಮೆಂಟ್ ಜೊತೆಗೆ ನಮ್ಮ ಹೆಸರಿನ ಕವರ್ ಪೇಜ್ ಅನ್ನು ನಾನು ಸಾಧ್ಯವಾದಷ್ಟು ಬಳಸುತ್ತೇನೆ, ಅದರ ಖಾಲಿ ಇರುವ ಮತ್ತೊಂದು ಪುಟದಲ್ಲಿ ಏನಾದರೂ ನೋಟ್ಸ್ ಮಾಡುವುದಕ್ಕೋ ಅಥವಾ ಚಿಕ್ಕದಾಗಿ ಕತ್ತರಿಸಿಕೊಂಡು ’ಪೋಸ್ಟ್ ಇಟ್’ ನೋಟ್ಸ್ ಥರವೋ, ಅಥವಾ ಇನ್ನೊಂದು ರೀತಿ. ಇನ್ನುಳಿದವರು ಆ ಕವರ್ ಪುಟವನ್ನು ಟ್ಯ್ರಾಷ್ ಮಾಡಬಹುದು, ಅಥವಾ ರಿಸೈಕಲ್ ಮಾಡಬಹುದು, ಹೀಗೆ ಅವರವರ ಬುದ್ಧಿಗೆ ತಕ್ಕಂತೆ ಆ ಕವರ್ ಪೇಜ್ ಬಳಕೆಗೊಳ್ಳುತ್ತೆ. ಇಲ್ಲಿ ಒಂದೇ ಸರಿಯುತ್ತರವೆಂಬುದೇನೂ ಇಲ್ಲ, ಆ ಪುಟವನ್ನು ಹೇಗೆ ಬಳಸಬೇಕು ಎನ್ನುವುದಕ್ಕೆ ಹಲವಾರು ಸರಿ ಉತ್ತರಗಳಿವೆ. ನನ್ನ ನಿಲುವಿನಲ್ಲಿ ಅಥವಾ ನಾನು ಹೇಗೆ ಆ ಕವರ್ ಪುಟವನ್ನು ಬಳಸುತ್ತೇನೆ ಎಂಬುದರಲ್ಲಿ ಯಾವುದೇ ಬದಲಾವಣೆಗಳೂ ಆಗಲಾರವು, ಅದು ಎಕಾನಮಿಯನ್ನೂ ಆದರಿಸಿಲ್ಲ, ಅದಕ್ಕೆ ನೇರವಾಗಿ ನಾನು ಹಣಕೊಡುವುದೂ ಇಲ್ಲ. ಇದು ಹೇಗೆ ನನ್ನ ನಿಲುವೋ ಉಳಿದವರದೂ ಹಾಗೆ, ಅಷ್ಟೇ.

ಇನ್ನು ಕಷ್ಟದ ಮಾತಿಗೆ ಬರೋಣ, ಅವರವರ ಕಷ್ಟ ಅವರಿಗೆ ಆನೆಯ ಭಾರ ಆನೆಗೆ ಇರುವೆಯ ಭಾರ ಇರುವೆಗೆ. ಆದರೆ ಕಷ್ಟಗಳು, ಸಾಂಸಾರಿಕ ಜಂಜಾಟಗಳು, ನಮಗೊದಗುವ ಅನೇಕ ತೊಂದರೆಗಳನ್ನು ಹಲವಾರು ರೀತಿಯಲ್ಲಿ ನೋಡಬಹುದು. ಅವುಗಳ ತುಲನಾತ್ಮಕ ಅರಿವು ನಮ್ಮನ್ನು ಎಷ್ಟೋ ಸಾರಿ ’ಸದ್ಯ, ನಮಗೆ ಹಾಗಾಗದಿದ್ದರೆ ಸಾಕು!’ ಎನ್ನುವ ಮನೋಭಾವನೆಯಿಂದ ಆ ಮಟ್ಟಿಗೆ ಸಮಾಧಾನ ಹುಟ್ಟಬಹುದು. ದೈಹಿಕ ಕೆಲಸಗಳಿಂದ ಸ್ನಾಯುಗಳು ಬಲಗೊಳ್ಳುವ ಹಾಗೆ ಈ ಸಂಕಷ್ಟಗಳ ಪರಂಪರೆ ಮನಸ್ಸನ್ನು ಗಟ್ಟಿಗೊಳಿಸಬಹುದು. ಎಲ್ಲದಕ್ಕಿಂತ ಮುಖ್ಯವಾಗಿ ಈ ಜಂಜಾಟಗಳಲ್ಲಿ ಬಳಲಿ, ತೊಳಲಿ, ಬಗ್ಗಿ, ಬಾಗಿ, ನೊಂದು, ನಲಿದು ಮುಂದೆ ಇವೆಲ್ಲದರ ದೆಸೆಯಿಂದ ಲಕ್ಷಾಂತರ ಜನ್ಮಗಳಲ್ಲಿ ಮೋಕ್ಷ ಸಿಗಬಹುದು.

ನಮಗೆಲ್ಲ ಕಷ್ಟದ ಬಗ್ಗೆ ಏನು ಗೊತ್ತಿದೆ? ಮನೆಯಲ್ಲಿ ಮೂರೋ ನಾಲ್ಕು ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಡಬೇಕು ಎನ್ನುವ ಪೋಷಕರ ನಡುವೆ, ಹುಟ್ಟಿದಂದಿನಿಂದ ವಿಕಲಾಂಗರಾಗಿ ಬೆಳೆಯುವ ಮಕ್ಕಳನ್ನು ಪೋಷಿಸುವ ತಂದೆ-ತಾಯಿಗಳ ನಡುವೆ, ಇಂದಿದ್ದರೆ ನಾಳೆ ಬೆಳಿಗ್ಗೆ ತಿನ್ನುವುದಕ್ಕಿಲ್ಲ ಎನ್ನುವವರ ನಡುವೆ, ಯಾವಾಗಲೂ ಒಂದಲ್ಲ ಒಂದು ಖಾಯಿಲೆಯಿಂದ ನರಳುತ್ತಿರುವ ಕುಟುಂಬದ ಸದಸ್ಯರ ಜೊತೆ ತಮ್ಮ ದಿನಚರಿಯನ್ನು ಕಂಡುಕೊಳ್ಳುವವರ ನಡುವೆ, ಇದ್ದ ಮಕ್ಕಳಲ್ಲಿ ಕೆಲವರನ್ನು ದುರಂತಗಳಲ್ಲಿ ಕಳೆದುಕೊಂಡು ಜೀವನ ಪರ್ಯಂತ ನರಳುವವರ ನಡುವೆ, ಆಫೀಸಿನ ಕೆಲಸ ಮನೆಯಲ್ಲಿನ ಕೆಲಸಗಳ ಜೊತೆಗೆ ತಮ್ಮ ಕುಟುಂಬದ ಹಿರಿಯರನ್ನು ಪೋಷಿಸಿಕೊಂಡು ಹೋಗುವವರ ನಡುವೆ, ತಮ್ಮ ಪ್ರೈಮರಿ ರೆಸಿಡೆನ್ಸ್ ಅಥವಾ ತಮ್ಮ ಜೀವನದ ಇಡುಗಂಟನ್ನು ಕಳೆದುಕೊಂಡವರ ನಡುವೆ...ಹೀಗೆ ಈ ಪಟ್ಟಿ ಮುಂದುವರೆಯುತ್ತದೆ. ಪ್ರತಿಯೊಬ್ಬರ ಕಷ್ಟದ ಅರಿವು ಹಾಗೂ ಅವರ ಅನುಭವ ಸಾಪೇಕ್ಷವಾದುದು. ನಮ್ಮ ಕಷ್ಟ ದೊಡ್ಡದು ಎಂದೆನಿಸಿದ ಮರು ಕ್ಷಣವೇ ಮತ್ತೊಬ್ಬರ ಇನ್ನೂ ಹೆಚ್ಚಿನ ಕಷ್ಟದ ಸ್ಥಿತಿಯನ್ನು ಕೇಳಿದಾಗ ಸಮಾಧಾನವಾಗುತ್ತದೆ. ಹೀಗೆ ಆದಾಗಲೆಲ್ಲ ’ಸದ್ಯ ನಮಗೆ ಆ ಪರಿಸ್ಥಿತಿ ಬರಲಿಲ್ಲವಲ್ಲ’ ಎನ್ನುವ ದನಿಯೂ ಹುಟ್ಟುತ್ತದೆ, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇಂತಹ ಕ್ಷಣದಲ್ಲಿ ’ದೇವರ ದಯೆ’ ಅಥವಾ ’ದೇವರು ದೊಡ್ಡವನು’ ಭಾವನೆಯೂ ಉದ್ಭವಿಸುತ್ತದೆ.