Thursday, March 19, 2009

ಮೂರುಗಾಲಿ ಆಟಿಕೆ

ನಮ್ಮ ಊರುಗಳಲ್ಲಿ ಒಂದೆರೆಡು ವರ್ಷದ ಮಕ್ಕಳಿಗೆ ಆಡಿಕೊಳ್ಳಲು ಮರದಲ್ಲಿ ಮಾಡಿದ ಮೂರುಗಾಲಿಯ ಆಟದ ಸಾಮಾನು ಸಿಗುತ್ತಿತ್ತು. ಬಹಳ ಸರಳವಾಗಿ ಜೋಡಿಸಲ್ಪಟ್ಟ ಈ ಆಟಿಕೆ ಅಂಬೆ ಹರಿಯುವ ಮಕ್ಕಳಿಗೆ ಓಡಾಡಲು ಅನುಕೂಲ ಮಾಡಿಕೊಡುತ್ತಿತ್ತು. ಈ ಆಟದ ಸಾಮಾನು ಈಗಲೂ ಅಲ್ಲಿ ಸಿಗುತ್ತೋ ಬಿಡುತ್ತೋ ಗೊತ್ತಿಲ್ಲ, ಈಗೆಲ್ಲ ನಮ್ಮೂರುಗಳಲ್ಲೂ ಮೆಟ್ಟೆಲ್, ಫಿಷರ್ ಪ್ರೈಸ್ ಆಟಿಕೆಗಳು (made in china) ದ ಹಾವಳಿ!

ಇಲ್ಲಿ ನನ್ನ ಹತ್ತು ತಿಂಗಳ ಮಗನಿಗೆ ನಾನೂ ಒಂದು ಹಾಗಿರುವ ಆಟಿಕೆಯೊಂದನ್ನು ಮಾಡಬಾರದೇಕೆ ಎಂಬ ಆಲೋಚನೆ ಬಂದಿದ್ದೇ ತಡ, ಸಣ್ಣದೊಂದು ಸ್ಕೆಚ್ ಹಾಕಿಕೊಂಡೆ. ಇಲ್ಲಿನ ಹೋಮ್ ಡಿಪೋ, ಲೋವ್‌ಸ್ ಅಂಗಡಿಗಳಲ್ಲಿ ಮರ-ಮುಗ್ಗಟ್ಟು ಬಹಳ ಅಗ್ಗವಾಗಿ ಸಿಗುವುದರ ಜೊತೆಗೆ ಅವರು ನಿಮಗೆ ಯಾವ ರೀತಿ ಬೇಕೋ ಹಾಗೆ ಅದನ್ನು ಕತ್ತರಿಸಿಯೂ ಕೊಡುತ್ತಾರೆ. ಅಲ್ಲದೆ ಬೇರೆ ಬೇರೆ ರೀತಿಯ ಸೈಜುಗಳೆಲ್ಲ (ರೀಪೀಸ್) ಒಂದೇ ಸೂರಿನಡಿ ಸಿಗುತ್ತವೆಂದರೆ ಮತ್ತಿನ್ನೇನು ಬೇಕು. ಸರಿ ಮರದ ರೀಪುಗಳೇನೋ ಸಿಗುತ್ತವೆ, ಈ ಗಾಲಿಗಳನ್ನು ಎಲ್ಲಿಂದ ತರುವುದು? ಹಾಗೆ ಅಂದುಕೊಂಡ ಬೆನ್ನ ಹಿಂದೇ ಅದೇ ಅಂಗಡಿಯಲ್ಲಿ ಗಾಲಿಗಳೂ ಸಿಗಬಾರದೇಕೆ ಎನ್ನಿಸಿ ಒಮ್ಮೆ ಹೋಗಿ ನೋಡಿದ್ದೂ ಆಯಿತು. ಇನ್ನೇನು ಮರದ ತುಂಡುಗಳನ್ನು ತಂದು ಹಂತ-ಹಂತವಾಗಿ ಜೋಡಿಸಿ ಒಂದು ವೀಕ್ ಎಂಡಿನ ಅರ್ಧ ದಿನವೊಂದರಲ್ಲಿ ಜೋಡಿಸಿ ನಾನೂ ಒಂದು ಆಟದ ಸಾಮಾನನ್ನು ತಯಾರಿಸಬಾರದು ಎಂದುಕೊಂಡು ಸುಮ್ಮನಾಗಿದ್ದರೆ ಚೆನ್ನಾಗಿತ್ತು, ಆದರೆ ಆಗಿದ್ದೇ ಬೇರೆ.

ನಾನು ಯಾವತ್ತೂ ಕೆಲಸವಾಗುವುದಕ್ಕಿಂತ ಮೊದಲೇ ಅದರ ಬಗ್ಗೆ ಕೊಚ್ಚಿಕೊಳ್ಳೋದು ಹೆಚ್ಚು ಎಂದು ತೋರುತ್ತೆ. ಈ ಆಟಿಕೆಯನ್ನು ಕುರಿತು ನನ್ನ ಹೆಂಡತಿಯ ಜೊತೆ ಹೇಳಿಕೊಂಡಾಗ ಆಕೆ ಪಕಪಕನೆ ನಗಲಾರಂಭಿಸಿದಳು. ಜೊತೆಗೆ ಗಾಯಕ್ಕೆ ಉಪ್ಪು ಸವರುವ ಮಾದರಿಯಲ್ಲಿ ವಾಲ್‌ಮಾರ್ಟ್‌ನಲ್ಲಿ ಇದೇ ರೀತಿಯ ಆಟದ ಸಾಮಾನೊಂದನ್ನು ನೋಡಿದ್ದೇನೆ, ಅದನ್ನು ತರಬಾರದೇಕೆ ಎಂದಳು. ಈ ಅಲ್ಪನ ಕೈಚಳಕಕ್ಕೂ ಆ ವಾಲ್‌ಮಾರ್ಟಿನ ಸಾಧ್ಯತೆ-ಬಾಧ್ಯತೆಗಳಿಗೂ ಎಲ್ಲಿಯ ಸಮ? ಸರಿ ಸುಮಾರು ಅದೇ ದಿನ ಅಥವಾ ಮರುದಿನ ಆಕೆ ಹೋಗಿ ಬಹಳ ಮುದ್ದಾದ ಫಿಷರ್ ಪ್ರೈಸ್ ಆಟದ ಸಾಮಾನೊಂದನ್ನು ತಂದೇ ಬಿಟ್ಟಳು. ಅದರ ಮೂಲ ಬೆಲೆ ಹತ್ತೊಂಭತ್ತು ಡಾಲರ್ ಅಂತೆ, ಅದು ಏಳು ಡಾಲರ್‌ನಲ್ಲಿ ಸೇಲ್‌ ಇದ್ದುದಾಗಿಯೂ ತಿಳಿಸಿದಳು. ನಾನೇ ಅದರ ಪೆಟ್ಟಿಗೆಯನ್ನು ತೆರೆದು ಜೋಡಿಸಿದಾಗ ಒಂದೆರಡು ನಿಮಿಷದಲ್ಲಿ ನಡೆದಾಡುವ ನಾಲ್ಕು ಗಾಲಿಯ, ತನ್ನ ಮೈ ತುಂಬಾ ಸುಂದರವಾದ ಚಿತ್ರವುಳ್ಳ, ಅಲ್ಲಲ್ಲಿ ಅನೇಕ ಆಟದ ಸವಲತ್ತನ್ನು ಒದಗಿಸುವ ಬಣ್ಣಬಣ್ಣದ ಆಟಿಕೆ ತಯಾರಾಯಿತು. ಈ ಕಡೆ ನನ್ನ ಸ್ಕೆಚ್ಚು, ಪೆಚ್ಚು ಮೋರೆಯೂ ಎರಡೂ ಆ ಆಟಿಕೆಯ ಸ್ಟರ್ಡಿ ಕನ್ಸ್‌ಟ್ರಕ್ಷನ್ನನ್ನು ನೋಡಿ ಚಕಿತಗೊಂಡವು. ನಾನು ಮೊಳೆ ಅಥವಾ ಸ್ಕ್ರೂ ಹೊಡೆದು ಮಾಡಬೇಕೆಂದಿದ್ದ ಮರದ ಆಟದ ಸಾಮಾನು ಇಲ್ಲಿ ಮೊಳೆಯೇ ಇಲ್ಲ ಚೈಲ್ಡ್ ಪ್ರೂಫ್ ಪ್ಲಾಸ್ಟಿಕ್ ಆಟಿಕೆಯ ಮುಂದೆ ಯಾವ ತುಲನೆಗೂ ನಿಲುಕದಾಯಿತು.

ನನ್ನ ಮನದಲ್ಲಿ ನೆಲೆನಿಂತಿರುವ ಆ ಮರದ ಮೂರುಗಾಲಿಯ ಆಟಿಕೆ ಇಂದಿಗೆ ಇಲ್ಲದಿರಬಹುದು, ಅದರ ಸಂತತಿ ಕ್ಷೀಣಿಸಿರಬಹುದು ಅಥವಾ ಇಂದಿನ ಪ್ಲಾಸ್ಟಿಕ್ ಗ್ಲೋಬಲ್ ಯುಗದಲ್ಲಿ ನಿರ್ನಾಮವಾಗಿರಬಹುದು. ಆದರೆ ನಾನೇ ಸ್ವತಃ ಸ್ಕೆಚ್ ಹಾಕಿ ಮರವನ್ನು ಜೋಡಿಸಿ ತಯಾರಿಸಿದ ಆಟಿಕೆಯಷ್ಟು ತೃಪ್ತಿ ಈ ಹೊಸ ಫ್ಯಾನ್ಸಿ ಆಟಿಕೆ ನನಗಂತೂ ಕೊಡಲಾರದು. ಆದರೆ ನನ್ನ ಹತ್ತು ತಿಂಗಳ ಮಗನಿಗೆ ಇವು ಯಾವದರ ಪರಿವೆಯೂ ಇಲ್ಲದೆ ತನ್ನ ಹೊಸ ಆಟಿಕೆಯ ಜೊತೆ ಆಟವಾಡುತ್ತಾನೆ, ಜೊತೆಗೆ ಅದು ಮಾಡುವ ಸದ್ದಿಗೆ ಹಾಗೂ ಅದರ ಬಣ್ಣಗಳ ಮೋಡಿಗೆ ಮಾರು ಹೋಗಿದ್ದಾನೆ.

Tuesday, March 17, 2009

ಅವೇ ಆಲೋಚನೆಗಳು...

ಆಲೋಚನೆಗಳೇ ಹಾಗೆ ನಿಲ್ಲೋದೇ ಇಲ್ಲ, ಅವುಗಳ ಒರತೆ ಬತ್ತೋದಂತೂ ಖಂಡಿತ ಇಲ್ಲ. ನೀವು ಜನನಿಬಿಡ ಮರಳುಗಾಡಿನಲ್ಲೇ ಇರಲಿ ಅಥವಾ ಯಾವ ಕಾಡಿನ ಯಾವ ಮೂಲೆಯಲ್ಲಿದ್ದರೂ ಆಲೋಚನೆಗಳ ಸರಣಿ ನಿರಂತರವಾಗಿ ನಡೆಯುತ್ತಲೇ ಇರುತ್ತೆ. ನಾನು ಇತ್ತೀಚೆಗೆ ಖರೀದಿ ಮಾಡಿದ ಉಗುರಿನಷ್ಟು ದೊಡ್ಡ ಸೆಮಿಕಂಡಕ್ಟರ್ ಸ್ಟೋರೇಜ್ ಡಿವೈಸಿನಲ್ಲಿ ಹದಿನಾರು ಗಿಗಾಬೈಟುಗಳಷ್ಟು ಮಾಹಿತಿಯನ್ನು ಸ್ಟೋರ್ ಮಾಡಬಹುದು ಎನ್ನುವುದು ನನ್ನಂತಹವನ ಕಣ್ಣಿಗೆ ದೊಡ್ಡ ಅಚೀವ್‌ಮೆಂಟ್ ಆಗಿ ಕಾಣಬಹುದು. ಹಾಗೆ ಕಂಡ ಮರುಘಳಿಗೆಯಲ್ಲಿಯೇ ಈ ಸೃಷ್ಟಿಯ ಸ್ಟೋರೇಜಿನ ಮುಂದೆ ಇವೆಲ್ಲಾ ಯಾವ ಲೆಕ್ಕ ಎನ್ನಿಸಲೂ ಬಹುದು. ನಮ್ಮ ಮಿದುಳು ಸಂಸ್ಕರಿಸಿ, ಪೋಷಿಸುವ ಅದೆಷ್ಟೋ ಆಡಿಯೋ ವಿಡಿಯೋ, ಡೇಟಾ ಮತ್ತಿತರ ಅಂಶಗಳನ್ನೆಲ್ಲ ಪೋಣಿಸಿ ಗಿಗಾಬೈಟುಗಳಲ್ಲಿ ಎಣಿಸಿದ್ದೇ ಆದರೆ ಇಂದಿನ ಟೆರಾಬೈಟ್ ಮಾನದಂಡವೂ ಅದರ ಮುಂದೆ ಸೆಪ್ಪೆ ಅನಿಸೋದಿಲ್ಲವೇ? ಈ ಸೃಷ್ಟಿಯ ಅದ್ಯಾವ ತಂತ್ರಜ್ಞಾನ ಅದು ಹೇಗೆ ನರಮಂಡಲದ ವ್ಯೂಹವಾಗಿ ಬೆಳೆದುಬಂದಿದ್ದಿರಬಹುದು ಎಂದು ಸೋಜಿಗೊಂಡಿದ್ದೇನೆ.

ಇಂತಹ ಸೋಜಿಗಗಳಿಂದ ದಿಢೀರ್ ಮತ್ತೊಂದು ಆಲೋಚನೆ: ನಮ್ಮಲ್ಲಿ ನಿಕ್ ನೇಮ್ ಗಳನ್ನು ಬಳಸುವ ಬಗ್ಗೆ. ಭಾರತದಲ್ಲಿ ’ಕೃಷ್ಣಮೂರ್ತಿ’ ಎನ್ನುವ ಅಫಿಷಿಯಲ್ ನೇಮ್ ಮನೆಯಲ್ಲಿ ’ಕಿಟ್ಟಿ’ ಆಗಿ ರೂಪಗೊಳ್ಳಬಹುದು, ಅದೇ ಅಮೇರಿಕದಲ್ಲಿ ’ವಿಲಿಯಮ್’ ಎನ್ನುವ ಅಫಿಷಿಯಲ್ ನೇಮ್ ’ಬಿಲ್’ ಉಪಯೋಗಕ್ಕೊಳಗಾಗಬಹುದು. ಇದರಲ್ಲಿ ಒಂದು ವ್ಯತ್ಯಾಸವಂತೂ ಇದೆ - ನಮ್ಮ ನಿಕ್ ನೇಮ್‌ಗಳು ಖಾಸಗಿ ಆದರೆ ಇಲ್ಲಿಯವರ ನಿಕ್ ನೇಮ್‌ಗಳು ಎಲ್ಲರ ಬಳಕೆಗೂ ಸಿಗುತ್ತವೆ, ಅದು ಎಷ್ಟರ ಮಟ್ಟಿಗೆ ಪ್ರಭಾವಿ ಎಂದರೆ ಪ್ರೆಸಿಡೆಂಟುಗಳಿಂದ ಹಿಡಿದು ಸಾಮಾನ್ಯ ’ಜೋ’ ವರೆಗೂ ಅವರ ನಿಕ್‌ನೇಮ್ ಗಳೇ ಮುಖ್ಯನಾಮ. ಅಫಿಷಿಯಲ್ ನೇಮ್ ಏನಿದ್ದರೂ ಪುಸ್ತಕಕ್ಕೆ ಮಾತ್ರ.

ಈ ಆಲೋಚನೆಯಿಂದ ಹೊರಬರುವ ಹೊತ್ತಿಗೆ, ಭಾರತಕ್ಕೆ ಒಂದು ಫೋನು ಮಾಡಬಾರದೇಕೆ ಎನ್ನಿಸಿ, ತಕ್ಷಣ ಸೆಲ್ ಫೋನಿನಲ್ಲಿ ಕುಕ್ಕ ತೊಡಗಿದೆ. ೮೦೦ ನಂಬರ್ ಅನ್ನು ಹೊಡೆದು ಇನ್ನೊಂದೆರೆಡು ಕ್ಷಣಗಳಲ್ಲಿ ಎಲೆಕ್ಟ್ರಾನಿಕ್ ಚೆಲುವೆಯ (ಧ್ವನಿ) ಕೃಪೆಯಿಂದ ನನ್ನ ಅಣ್ಣನ ಮೊಬೈಲ್ ನಂಬರನ್ನು ಒತ್ತತೊಡಗಿದೆ. ಎರಡು ರಿಂಗುಗಳ ನಂತರ ಆತ ಫೋನ್ ಎತ್ತಿಕೊಂಡ, ಉಭಯ ಕುಶಲೋಪರಿಯ ಜೊತೆಗೆ ಎಲ್ಲಿದ್ದೀಯಾ? ಆಫೀಸಿಗೆ ಹೊರಟಿದ್ದೀಯಾ? ಏನು ತಿಂಡಿ? ಎಂದು ಕೇಳುವ ಅವನ ಪ್ರಶ್ನೆಗಳಿಗೆ ಡ್ರೈವ್ ಮಾಡುತ್ತಿದ್ದೇನೆ, ಇನ್ನೇನು ಆಫೀಸು ಹತ್ತಿರ ಬಂತು. ’ತಿಂಡಿ ಮಾಮೂಲಿ - ಅದೇ ಬ್ರೆಡ್ಡು, ಬಾಳೆಹಣ್ಣು, ಜ್ಯೂಸ್, ಕಾಫಿ’, ಎಂದೆ. ನಾನು ಹೀಗೆ ಹೇಳಿದಾಗಲೆಲ್ಲ ಆ ಕಡೆಯಿಂದ ಮಾಮೂಲಿ ಮೌನ. ಮತ್ತೆ ನಾನೇ ಅದೂ-ಇದೂ ಕೇಳಿದಂತೆ ಸಂಭಾಷಣೆ ವಿಷಯನ್ನು ಆಧರಿಸಿ ಎರಡು ನಿಮಿಷದಿಂದ ಹಿಡಿದು ಇಪ್ಪತ್ತು ನಿಮಿಷದ ವರೆಗೂ ನಡೆಯುತ್ತೆ.

ನಾನೆಂದೆ, ’ಹೌದು, ನೀನು ಇತ್ತೀಚೆಗೆ ಅಡುಗೆ ಮಾಡಿದ್ದು ಯಾವತ್ತು?’
ಅವನೆಂದ, ’ನಾನು ಆಡುಗೆ ಮಾಡಿ ಅದ್ಯಾವ ಕಾಲವೋ ಆಗಿದೆ.’
’ನೀನು, ಮನೆಯನ್ನು ಸ್ವಚ್ಛ ಮಾಡಲು ಸಹಾಯ ಮಾಡ್ತೀಯೋ, ಇಲ್ವೋ?’
’ಖಂಡಿತ, ಇಲ್ಲ - ನಾನು ಶಾಲೆಗೆ ಹೋಗಿ ಬರೋ ಹೊತ್ತಿಗೆ ಸಾಕಾಗಿರುತ್ತೆ, ಮತ್ತೇನೂ ಮಾಡೋದಿಲ್ಲ’

ಹೀಗೆ ನಾನು ಹುಡುಕಿ-ಹುಡುಕಿ ಕೇಳಿದ ಪ್ರಶ್ನೆಗಳು ನಾನು ಇಲ್ಲಿ ಆಗಾಗ್ಗೆ (ನಿತ್ಯ, ವಾರಕ್ಕೊಮ್ಮೆ, ತಿಂಗಳಿಗೊಮ್ಮೆ) ಮಾಡೋ ಕೆಲಸಗಳನ್ನು ಕುರಿತವಾಗಿದ್ದವು (ಉದಾಹರಣೆಗೆ ಬಟ್ಟೆ ಒಗೆದು ಒಣಗಿಸಿ ಮಡಚಿಡುವುದು). ಆದರೆ ಅವನು ಮನೆಗೆ ಸಂಬಂಧಿಸಿದ ಎಲ್ಲ ಕೆಲಸಗಳಿಗೂ ಒಂದೇ ನಮ್ಮ ಅತ್ತಿಗೆಯ ಹೆಸರನ್ನೋ ಅಥವಾ ಆಳುಗಳು ಮಾಡುವ ಕೆಲಸವೆಂದೋ ಹೇಳುತ್ತಿದ್ದ.

ಅವನಿಗೆ ’ಬೈ’ ಹೇಳಿ ಫೋನ್ ಇಟ್ಟ ಹೊತ್ತಿಗೆಲ್ಲ ಕುಡಿಯುತ್ತಿದ್ದ ಸುಡುಸುಡು ಕಾಫಿ ಇತ್ತೀಚೆಗಷ್ಟೇ ಎಲೆಕ್ಷನ್ನು ಗೆದ್ದು ಅಸೆಂಬ್ಲಿ ಸೇರಿದ ರೆಪ್ರೆಸೆಂಟಿವ್‌ನ ಥರ ನರಮಂಡಲದ ಮೇಲೆ ತನ್ನ ಪ್ರಭಾವವನ್ನು ಬೀರುತ್ತ ಕೆಲಸವನ್ನು ಆರಂಭಿಸಿತ್ತು. ಥೂ, ಈ ಅಮೇರಿಕದಲ್ಲಿ ನಮ್ಮ ನಮ್ಮ ಕೆಲಸಗಳನ್ನು ನಾವು ನಾವೇ ಮಾಡಿಕೊಂಡು ಜೀವಿಸೋದರಲ್ಲೇ ಕಾಲ ಕಳೆದು ಹೋಗುತ್ತೆ. ಎಷ್ಟು ದುಡ್ಡಾಗಲಿ ಏನು ಕೆಲಸವಾಗಲಿ ಇದ್ದರೆ ಏನು ಬಂತು - ದಿನಾ ನಮ್ಮ ದುಗುಡ ಇದ್ದದ್ದೇ. ಬನೀನ್ ಎಲ್ಲಿದೆ? ಪ್ಯಾಂಟಿಗೆ ಮ್ಯಾಚ್ ಆಗುವ ಕಾಲುಚೀಲ ಸಿಗುತ್ತಿಲ್ಲ (ಬೆಳಗ್ಗೆ ಅದೂ ಚಿಮುಚಿಮು ಬೆಳಕಿನಲ್ಲಿ)! ಕಾಫಿ ಮಾಡಿಕೋ ಬೇಕು, ತಿಂಡಿಗೆ ಅವೇ ಬ್ರೆಡ್ಡು ಸ್ಲೈಸುಗಳು, ಅವೇ ಜ್ಯೂಸಿನ ಬಾಟಲುಗಳು. ವಾರಾಂತ್ಯದಲ್ಲಿ ಅಪರೂಪಕ್ಕೆ ಬ್ರೇಕ್‌ಫಾಸ್ಟ್‌ಗೆಂದು ತಿನ್ನುವ ದೋಸೆ-ಇಡ್ಲಿಗಳು ಹೆಚ್ಚಾಗಿ ಮಧ್ಯಾಹ್ನ ಲಂಚ್ ಸೇರದ ಅಥವಾ ರುಚಿಸದ ಅನುಭವ. ಮಿಸ್ಟರ್ ಕಾಫಿಯಿಂದ ಇಳಿದ ಲಾರ್ಜ್ ಕಾಫಿಯ ಗುಲಾಮಗಿರಿಯನ್ನು ಒಪ್ಪಿಕೊಂಡ ನರಮಂಡಲ ಚಿಕ್ಕ ಲೋಟಾದಲ್ಲಿ ಕುಡಿಯುವ ಕಾಫಿಯನ್ನು ’ಚಿಕ್ಕ ಸೈಜ್’ ಎಂದು ಪರಿಗಣಿಸುವ ಅನುಭೂತಿ. ಕಾಫಿಯ ಸ್ಟಿಮ್ಯುಲೇಶನ್ನಿಂದ ಹುಟ್ಟಿ ಕಾಫಿಯ ವಿರುದ್ಧವೇ ತಿರುಗುವ ಆಲೋಚನೆಗಳ ಪಾಪಪ್ರಜ್ಞೆ!

ಇಷ್ಟು ಹೊತ್ತಿಗೆ ಆಫೀಸಿನ ವಾತಾವರಣ ಹತ್ತಿರ ಬರುತ್ತಿದ್ದ ಹಾಗೆ - Oh! there is a 8 am meeting today! ಎನ್ನುವ ಅಮೇರಿಕನ್ ಉದ್ಗಾರ ನನ್ನಲ್ಲಿಯ ಕನ್ನಡತನವನ್ನು ಇನ್ನು ಹತ್ತು ಘಂಟೆಗಳ ಮಟ್ಟಿಗೆ ಅದುಮಿಕೊಳ್ಳುವ ಹಾಗೆ ಸೆಡ್ಡು ಹೊಡೆಯುವ ಅಟ್ಟಹಾಸದ ಆಲೋಚನೆ. ಆಫೀಸ್ ಬಂದೇ ಬಿಡ್ತು, ಇಲ್ಲ ನಾನೇ ಅದರ ಹತ್ತಿರ ಹೋಗ್ತಾ ಇದ್ದೇನೆ. ದೂರದ ಇಂಡಿಯಾಕ್ಕೆ ಕಾಲ್ ಮಾಡಿ ಸಂಭಾಷಣೆಯಿಂದ ಸೋತ ಸೆಲ್ ಫೋನ್ ಪಕ್ಕದಲ್ಲಿ ಬಿದ್ದುಕೊಂಡಿದೆ, ಅದರ ಗಂಟಲನ್ನೂ ಹಿಚುಕಿ (ವೈಬ್ರೇಷನ್ನ್ ಮೋಡ್‌ಗೆ ಹಾಕಿ) ಕೋಟಿನ ಜೇಬಿನಲ್ಲಿ ತುರುಕಿ ಲಂಚ್ ಪ್ಯಾಕ್ (ಅದೇ ಅನ್ನ, ಸಾರು, ಮೊಸರು, ಕೆಲವೊಮ್ಮೆ ಪಲ್ಯ) ಅನ್ನು ಕೈಯಲ್ಲಿ ಹಿಡಿದುಕೊಂಡು ಲಗುಬಗೆಯಿಂದ (ಇನ್ನೇನು ಆಫೀಸು ಎಲ್ಲಿಯಾದರೂ ಓಡಿ ಹೋದೀತೋ ಎನ್ನುವಂತೆ) ಹೆಜ್ಜೆ ಹಾಕತೊಡಗುತ್ತೇನೆ.

ಆಲೋಚನೆಗಳು ಇನ್ನೂ ಮುಂದುವರೆಯುತ್ತಲೇ ಇವೆ...

Sunday, March 08, 2009

ಹೊಸವರ್ಷ ಹೊಸತನ್ನು ತರಲಿ!

ಎಲ್ಲಾ ಇಂಡೆಕ್ಸುಗಳೂ ಮಾರ್ಕೆಟ್ ಇಂಡಿಕೇಟರುಗಳು ಇಳಿಮುಖ ಹಿಡಿಯುತ್ತಿದ್ದಂತೆ ದಿನಕ್ಕೊಮ್ಮೆ ಅಲ್ಲದಿದ್ದರೂ ವಾರಕ್ಕೊಮ್ಮೆಯಾದರೂ ನಮ್ಮ ನಮ್ಮ ಪೊಸಿಷನ್ನುಗಳನ್ನು ಪ್ರಶ್ನಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರೆ ಅತಿಶಯವಾಗಲಾರದು. ಸೆಕ್ಯುರಿಟೀಸ್‌ಗಳ ಮೇಜರ್ ಇಂಡಿಕೇಟರುಗಳು ಅಮೇರಿಕದಲ್ಲಿ ಹನ್ನೆರಡು ಹದಿಮೂರು ವರ್ಷದ ಕೆಳಗಿನ ಮಟ್ಟಕ್ಕೆ ಕುಸಿದಿರುವಾಗ ಈ ಹನ್ನೆರಡು ವರ್ಷಗಳಿಂದ ನಾವಿಲ್ಲಿ ದುಡಿದು ಉಳಿಸಿ ಬೆಳೆಸಿದ್ದು ಎಲ್ಲವೂ ಮರೀಚಿಕೆಯಂತಾಗಿ ಹೋಗಿದೆ ಅನ್ನೋದು ನನ್ನ ತಲೆಮಾರಿನವರ ತಳಮಳ. ಹೆಚ್ಚಿನ ಎಕ್ಸ್‌ಪರ್ಟ್‌ಗಳು ಹೇಳೋ ಹಾಗೆ ನಿಮ್ಮ ಎಮರ್ಜನ್ಸಿ ಫಂಡ್ ಅನ್ನು ಹೆಚ್ಚಿಸಿಕೊಳ್ಳಿ, ನಿಮ್ಮ ಪೊಸಿಷನ್ ಹೀಗೇ ಇರಲಿ, ಇವತ್ತಲ್ಲ ಮುಂದೆ ಮಾರ್ಕೆಟ್ ಮೇಲೆ ಬಂದೇ ಬರುತ್ತದೆ ಎನ್ನುವುದೆಲ್ಲ ಸುಳ್ಳಿನ ಪ್ರಣಾಳಿಕೆಗಳಾಗಿ ಕಂಡುಬರುತ್ತಿವೆ.

ಇಲ್ಲಿ ನಮಗೆ ನಾವೇ ದಿಕ್ಕು ದೆಸೆಗಳಾಗಿ ಬದುಕುತ್ತಿರುವ ಅನಿವಾಸಿಗಳಿಗೆ ಈ ಏರಿಳಿತದಿಂದ ದೊಡ್ಡ ಹೊಡೆತ ಬಿದ್ದೇ ಬೀಳುತ್ತದೆ. ನಾವು ಇರುವ ರೆಸಿಡೆನ್ಸ್ ಅನ್ನು ಹೊರತುಪಡಿಸಿ ಇರುವುದೆಲ್ಲವೂ ನಮ್ಮ ನೆಟ್‌ವರ್ತ್‌ನಲ್ಲಿ ಸೇರಿಕೊಳ್ಳುವ ಅಸ್ಸೆಟ್ ಎಂದು ಪರಿಗಣಿಸಿಕೊಂಡರೆ ಎಲ್ಲ ಕಡೆಯೂ ಹೊಡೆತವೆ. ರಿಟೈರ್‌ಮೆಂಟ್ ಉಳಿತಾಯದಿಂದ ಹಿಡಿದು ಇನ್ವೆಸ್ಟ್‌ಮೆಂಟಿನವರೆಗೆ ನಮ್ಮದು ಎನ್ನುವ ಎಲ್ಲವೂ ಕುಸಿದು ಹೋದ ಹಾಗಿನ ಅನುಭವ ಒಂದು ರೀತಿ ಸಮುದ್ರದ ತೆರೆಗಳು ನಮ್ಮ ಕಾಲಿನ ಕೆಳಗಿನ ಮರಳನ್ನು ಸಡಿಲಗೊಳಿಸುತ್ತಾ ಕ್ರಮೇಣ ನೀರಿನಲ್ಲಿ ಹೂತುಹೋಗುವ ಹಾಗೆ.

***

ಈ ಇಳಿತ ಎಲ್ಲರಿಗೂ ಆಗುತ್ತಿರುವುದೇ ಆದ್ದರಿಂದ ಅದರ ಬಗ್ಗೆ ಹಾಡಿದ್ದೇ ಹಾಡಿದಲ್ಲಿ ಏನೂ ಪ್ರಯೋಜನವಂತೂ ಇಲ್ಲ. ಇನ್ನು ಮುಂದೆ ಹೇಗೆ ಎಂದು ಏನಾದರೂ ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟರೂ ಅವುಗಳು ಹೆದರಿಸುವುದು ಸಾಮಾನ್ಯ. ಇನ್ನು ಈ ಮಾರ್ಚ್ ತಿಂಗಳು ಕಳೆಯುತ್ತಿದ್ದ ಹಾಗೆ ಏಪ್ರಿಲ್ ಮೊದಲ ದಿನಗಳಲ್ಲಿ ಪ್ರಥಮ ಕ್ವಾರ್ಟರ್ ನಂಬರುಗಳು ಎಲ್ಲ ಕಡೆಯಿಂದ ಬರತೊಡಗಿ ಮತ್ತೆ ಮಾರುಕಟ್ಟೆ ಕುಸಿಯುವಂತೆ ಆದರೂ ಆಗಬಹುದು, ಜೊತೆಗೆ ಎಲ್ಲಕ್ಕಿಂತ ಮುಖ್ಯವಾಗಿ ಪ್ರಥಮ ಕ್ವಾರ್ಟರ್ ನಂತರ ಕಂಪನಿಗಳು ಕಡಿಮೆ ಮಾಡುವ ಎಕ್ಸ್‌ಪೆನ್ಸ್ ನಿಂದಾಗಿ ಜನರ ಕೆಲಸ ಹೋಗುವ ಸಾಧ್ಯತೆಯೂ ಹೆಚ್ಚು. ನಮ್ಮ ಟೀಮುಗಳಲ್ಲಂತೂ ವರ್ಷದೆಲ್ಲದ ಲೆಕ್ಕವನ್ನು ಇನ್ನೊಂದೆರಡು ವಾರಗಳಲ್ಲಿ ಮುಗಿಸಿ ಕೊನೆಗೆ ಅದರಲ್ಲಿ ಮೇಲಿನವರ ಆದೇಶದಂತೆ ಕಡಿತಗೊಳಿಸುತ್ತಾ ಬರುವುದು ಪದ್ಧತಿ, ಅದಕ್ಕೆ ಈ ವರ್ಷ ಭಿನ್ನವೇನೂ ಆಗೋದಿಲ್ಲ.

ಈ ಕೆಟ್ಟ ನ್ಯೂಸ್/ವಿಚಾರಗಳ ಸಂಘವೇ ಬೇಡ ಎಂದು ರೆಡಿಯೋ/ಇಂಟರ್ನೆಟ್ ಮೊದಲಾದವನ್ನು ಮುಚ್ಚಿ ಇಟ್ಟರೂ ಒಂದಲ್ಲ ಒಂದು ರೀತಿಯಿಂದ ಕೆಟ್ಟ ವಿಚಾರಗಳು ಮಿದುಳನ್ನು ಹೊಕ್ಕೇ ತೀರುತ್ತವೆ ಎಂದು ಪ್ರತಿಜ್ಞೆ ಮಾಡಿದವರ ಹಾಗೆ ಮುತ್ತಿಕೊಳ್ಳುತ್ತವೆ. ಈಗಾಗಲೇ ಇರುವ ಸ್ಟ್ರೆಸ್ ಕಡಿಮೆ ಎನ್ನುವ ಹಾಗೆ ಇನ್ನೂ ಏನೇನೋ ಕೆಟ್ಟ ಆಲೋಚನೆಗಳನ್ನು ವಿಜೃಂಬಿಸಿ ಬರೆಯುವವರ ವರದಿಗಳೂ ಸಿಗತೊಡಗುತ್ತವೆ. ಹೇಗಾದರೂ ಮಾಡಿ ಕೆಟ್ಟ ವಿಚಾರಗಳು ಯಾವುವೂ ನಮ್ಮನ್ನು ಹಿಂಸಿಸದಿರುವಂತೆ ಮಾಡುವುದು ಅಸಾಧ್ಯವೆನಿಸತೊಡಗುತ್ತದೆ. ಅವೇ ಹಳಸಲು ಅಂಕಿ-ಅಂಶಗಳು, ಅವೇ ವಿಚಾರಗಳು, ಎಲ್ಲ ಕಡೆ ಕೋಲಾಹಲ -- ಇಷ್ಟೇ.

ಕೊರೆಯುವ ಕೆಟ್ಟ ಛಳಿಯ ಮಾರನೇ ದಿನ ಬೆಚ್ಚಗಿನ ಬಿಸಿಲಿನ ಹಾಗೆ ಹೊಸ ವರ್ಷದ ದಿನಗಳಾದರೂ ಶುಭವನ್ನು ತರಲಿ, ಮುಂದಿನ ಯುಗಾದಿ ಹೊಸ ಸಂವತ್ಸರಗಳು ಹೊಸತನ್ನು ಹಾರೈಸಲಿ!

Tuesday, February 17, 2009

ನಾನು ಮತ್ತು ನನ್ನ ದೇವರುಗಳು - ಭಾಗ ೧

ಶಾಲಾ ಕಾಲೇಜು ದಿನಗಳಲ್ಲಿ ದೇವರನ್ನು ಕುರಿತು ಅದೆಷ್ಟೋ ವಾದ-ವಿವಾದಗಳನ್ನು ನಡೆಸಿಕೊಂಡು ಬಂದು, ’ದೇವಸ್ಥಾನಕ್ಕೆ ಏಕೆ ಹೋಗಬೇಕು?’, ’ದೇವರೆಲ್ಲಿದ್ದಾನೆ?’ ಎನ್ನುವ ಅರ್ಥ ಕೊಡುವ ಇನ್ನೂ ಹಲವಾರು ಪ್ರಶ್ನೆಗಳಿಗೆ ನಮ್ಮದೇ ಆದ ಉತ್ತರಗಳನ್ನು ಕಂಡುಕೊಂಡು ನಾವು ಸಮಾಧಾನ ಪಟ್ಟಿದ್ದಿದೆ. ಕೊನೆಗೆ ದೇವರ ಪೂಜೆಯನ್ನು ಮಾಡದೇ, ಹಬ್ಬ-ಹರಿದಿನಗಳಿಗೆ ಮನೆಯಲ್ಲಿ ಅಬ್ಸೆಂಟ್ ಆಗುತ್ತಾ ಬಂದು ಒಂದು ರೀತಿಯ ರೆಬೆಲ್ ಜೀವನವನ್ನು ಸಾಗಿಸಿದ ನನ್ನಂತಹವರು ಈಗ ಮೇಲೇರಿದ ಏಣಿ ಗೋಡೆಗೆ ಹೆಚ್ಚು ಒರಗುವಂತಾಗುವ ಹಾಗೆ ದಿನವೂ ದೇವರ ನಾಮ ಸ್ಮರಣೆಯಿಲ್ಲದೇ ದಿನವನ್ನು ಆರಂಭಿಸೋದು ಕಡಿಮೆ. ದೇವರು ಎನ್ನುವ ಕಾನ್ಸೆಪ್ಟಿಗೂ ಮೂರ್ತಿ ಪೂಜೆ (ವಿಗ್ರಹಾರಾಧನೆ) ಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ದೇವರು ಎನ್ನುವ ಪ್ರತಿಮೆ ಒಬ್ಬ ವ್ಯಕ್ತಿ (ಪರಿವಾರ) ಕ್ಕೆ ಸೀಮಿತಗೊಳ್ಳಬಹುದು, ಅಥವಾ ಅದು ನಿಸರ್ಗದ ಮತ್ತೊಂದು ವಸ್ತು/ಜೀವಿಗೆ ನಾವು ನಮ್ಮ ಮನದಲ್ಲಿ ಕೊಡಬಹುದಾದ ಉನ್ನತ ಪರಿಭಾಷೆ ಇರಬಹುದು. ದೇವರು ಎನ್ನುವುದು ಇಂದಿಗೆ ಪ್ರಸ್ತುತವಾದ ಅಂಶವಿರಬಹುದು ಅಥವಾ ಸಾವಿರಾರು ವರ್ಷಗಳ ಹಿಂದಿನ ಯಾವುದೋ ಒಂದು ಉಲ್ಲೇಖಕ್ಕೆ ಸಂಬಂಧಪಟ್ಟಿರಬಹುದು. ಹೀಗೆ ದೇವರು ಎನ್ನುವ ಎಂದೂ ಮುಗಿಯದ ವಿಚಾರಗಳ ಖಜಾನೆಯನ್ನು ಶೋಧಿಸಿದಂತೆಲ್ಲ ಅವರವರ ಪರಿಮಿತಿಗೆ ಹಾಗೂ ಅನುಕೂಲಕ್ಕೆ ತಕ್ಕಂತೆ ಒಂದಲ್ಲ ಒಂದು ರೂಪ/ಆಕೃತಿ ಅದರಿಂದ ಹೊರ ಹೊಮ್ಮುತ್ತಲೇ ಇರುತ್ತೆ ಎನ್ನುವುದು ನನ್ನ ಅಂಬೋಣ.

ಉದಾಹರಣೆಗೆ, ನಮ್ಮ ಇಂದಿನ ಅನಿವಾಸಿ ಬದುಕಿನ ಒಂದು ದಿನವನ್ನು ಅವಲೋಕಿಸಿಕೊಳ್ಳೋಣ: ಇಲ್ಲಿ ನಾವು ಬೇಡವೆಂದರೂ ಘಂಟೆಗಳ ನಿನಾದ ನಮ್ಮ ಕಿವಿಗೆ ಬೀಳುವ ಗಲ್ಲಿಗಳ ದೇವಸ್ಥಾನಗಳ ಗೊಂದಲವಿಲ್ಲ. ’ಲಾ ಇಲಾಹ ಇಲ್ಲಲ್ಲ...’ ಎನ್ನುವ ಮುಂಜಾನೆ ಐದೂವರೆಗೆ ಮಸೀದಿಯಿಂದ ಕೂಗುವ ಮುಲ್ಲಾನ ಸ್ವರವಿಲ್ಲ. ಮೊದಲು ವೇಣುವಾದನದಲ್ಲಿ (ಮೋಹನರಾಗ) ಆರಂಭಗೊಂಡು ಶಹನಾಯಿವಾದನದ ಮೂಲಕ ನಮ್ಮನ್ನು ಎದ್ದೇಳಿಸುವ ಬಾನುಲಿಗಳಿಲ್ಲ (ರೆಡಿಯೋ ಸ್ಟೇಷನ್‌). ಅಪರಿಮಿತವಾಗಿ ನಮ್ಮ ಇಂದ್ರಿಯಗಳಿಗೆ ದೊರೆಯುವ ಒಂದಲ್ಲ ಒಂದು ರೀತಿಯ ದೇವರ ಉಲ್ಲೇಖಗಳಿಲ್ಲ. ಹೀಗೆಲ್ಲ ಇದ್ದಾಗ್ಯೂ ನಾನು ಕಂಡ ಅನೇಕಾನೇಕ ಅನಿವಾಸಿಗಳ ಮನೆಗಳ ಮೂಲೆಗಳಲ್ಲಿ ಕಾರಿನ ಮೂಲೆಗಳಲ್ಲಿ ದೇವರಿಗೆ ಸ್ಥಾನವಿದೆ, ಜೊತೆಗೆ ಅವರವರ ಅನುಕೂಲಕ್ಕೆ ತಕ್ಕಂತೆ ದಿನಕ್ಕೊಮ್ಮೆ, ತಿಂಗಳಿಗೊಮ್ಮೆ ಅಥವಾ ವರ್ಷಕ್ಕೊಮ್ಮೆ ಈ ದೇವರುಗಳ ದರ್ಶನ ಮಾಡುವ ರೂಢಿಯಿದೆ. ಭಾರತದಲ್ಲಿ ಎಲ್ಲವೂ ಇದ್ದು ಅಲ್ಲಿ ನಮಗಿಲ್ಲದ ದೇವರುಗಳ ಜೊತೆ/ಸಾಂಗತ್ಯಕ್ಕೆ ಇಲ್ಲಿ ಹೆಚ್ಚಿನ ಅಗತ್ಯ ಕಂಡುಬರುತ್ತೆ.

ಜನವರಿ-ಫೆಬ್ರುವರಿ ದಿನಗಳಲ್ಲಿ ನಾನು ಆಫೀಸಿಗೆ ಹೋಗೋ ಹೊತ್ತಿಗೆಲ್ಲಾ ಸೂರ್ಯೋದಯದ ಸಮಯ. ದಿನಕ್ಕೊಂದು ಬಗೆಬಗೆಯ ಚಿತ್ತಾರವನ್ನು ಆಕಾಶದಲ್ಲಿ ಸೃಷ್ಟಿಸಿರೋ ಆ ಮೋಡಿಗೆ ಮಾರುಹೋಗದೇ ಇರಲು ಯಾರಿಗಾದರೂ ಹೇಗೆ ಸಾಧ್ಯ? ಅದೇ ಸಮಯಕ್ಕೆ ನಾನು ’ಓ ದಿನಕರ ಶುಭಕರ ಧರೆಗೆ ಬಾ ಎಂದು ಹಾಡುತ್ತೇನೆ’, ಅಥವಾ ’ಓ ಮಿತ್ರಾಯ ನಮಃ’ ಎನ್ನುತ್ತೇನೆ, ಅಥವಾ ತೈತ್ರೇಯ ಉಪನಿಷತ್ತೋ ಅಥವಾ ಮತ್ತಿನ್ನೆಲ್ಲೋ ಉಲ್ಲೇಖಗೊಂಡ ’ನಿನ್ನ ಹೊನ್ನ ಕಿರಣಗಳಿಂದ ನಮ್ಮನ್ನು ಪಾವನಗೊಳಿಸು’ ಎಂದು ಬೇಡಿಕೊಳ್ಳುತ್ತೇನೆ. ನಾನು ಹೀಗೆ ಮಾಡದಿದ್ದರೂ (ಅಥವಾ ಸೂರ್ಯನನ್ನು ನೋಡದೇ ಇದ್ದರೂ) ಸೂರ್ಯನ ದಿನಚರಿಯಲ್ಲಿ ಏನೂ ಬದಲಾಗೋದಿಲ್ಲ. ಹಾಗೆಂದಾಕ್ಷಣ ಎರಡು ಪ್ರಶ್ನೆಗಳು ಮನಸ್ಸಿನಲ್ಲಿ ಹುಟ್ಟುತ್ತವೆ: ೧) ನಿಯಮಿತವಾಗಿ ನಡೆಯುವ ಪ್ರಕೃತಿಯ ಕ್ರಿಯೆಗೆ ನಾನು ಪ್ರತಿಕ್ರಿಯಿಸಿದರೆಷ್ಟು ಬಿಟ್ಟರೆಷ್ಟು? ೨) ಈ ಪ್ರಕೃತಿಯ ಬದಲಾವಣೆಯ ಉಲ್ಲೇಖಕ್ಕೂ ದೇವರಿಗೂ ಏನು ಸಂಬಂಧ?

ಬಹಳ ಸುಲಭವಾಗಿ ದೇವರನ್ನು ಹೀಗೆ ಪರಿಕಲ್ಪಿಸಿಕೊಳ್ಳಬಹುದು: ನಮ್ಮ ಪ್ರಕೃತಿಯೇ ದೇವರು. ಅದರಲ್ಲಿ ಸೂರ್ಯ-ಚಂದ್ರರಿದ್ದಾರೆ, ನದಿ-ಸಾಗರಗಳಿವೆ, ಹಾವು-ಮುಂಗುಸಿ-ಹಂದಿ-ಕಪ್ಪೆ ಇತ್ಯಾದಿಗಳಿದ್ದಾವೆ, ಪಕ್ಷಿಗಳಿವೆ, ಎಲ್ಲವೂ ಇವೆ. ಎಲ್ಲಕ್ಕಿಂತ ಮುಖ್ಯವಾಗಿ ಆಹಾರ ಸರಪಳಿ ಇದೆ. ಯಾವ ವಿಜ್ಞಾನಿಯೂ ಬರೆದಿಡದ ತತ್ವದ ಪ್ರಕಾರ ನಡೆಯುವ ಅದೆಷ್ಟೋ ಅನನ್ಯವಾದ ಚಕ್ರಗಳಿವೆ, ಕೋಟ್ಯಾನುಕೋಟಿ ಜೀವರಾಶಿ ಇದೆ, ಇನ್ನೂ ಏನೇನೋ ಇದೆ. ನನಗೆ ಮುಂಜಾನೆ ಸೂರ್ಯ ದೇವರಾಗಿ ಕಂಡು ಬಂದರೆ ಒಬ್ಬ ರೈತನಿಗೆ ಅವನ ಬೆಳೆಯನ್ನು ಕಾಡುವ ಇಲಿಗಳಿಂದ ರಕ್ಷಣೆಕೊಡುವ ಹಾವು ದೇವರಾಗಿ ಕಂಡುಬರಬಹುದು, ಇನ್ನೊಬ್ಬರಿಗೆ ಅನ್ನವನ್ನು ಕೊಡುವ ಭೂತಾಯಿ ದೇವರಾಗಬಹುದು. ನೀರೆ ಒಂದು ದೊಡ್ಡ ಸಿದ್ಧಾಂತವಾಗಬಹುದು. ಗಾಳಿ, ಮಳೆ, ಬೆಂಕಿ ಮಣ್ಣು, ಮತ್ತೊಂದು ಎಲ್ಲವೂ ಅವರವರ ದೇವರಾಗಬಹುದು. ಈ ಸೃಷ್ಟಿಯ ಅಗಾಧತೆ ಹಾಗೂ ಅದರಲ್ಲಿನ ಶಕ್ತಿ ಎಲ್ಲಗಿಂತ ಮಿಗಿಲಾಗಿರಬಹುದು - ಸಣ್ಣದಾಗಿ ದೇವರ ಮುಂದೆ ಉರಿಯುವ ನಂದಾದೀಪದ ಬೆಂಕಿಗೂ ಇತ್ತೀಚೆಗಷ್ಟೇ ಆಷ್ಟ್ರೇಲಿಯದಲ್ಲಿ ಸಾವಿರಾರು ಮೈಲನ್ನು ಕಬಳಿಸಿದ ಕಾಡ್ಗಿಚ್ಚಿಗೂ ನಂಟಿದೆ. ಈ ಭೂಮಿಯನ್ನು ಸುಮಾರು ಎಂಭತ್ತು ಭಾಗ ಆವರಿಸಿಕೊಂಡ ನೀರಿನ ಅವತಾರಗಳಿಗೆ ಅಪರಿಮಿತ ಶಕ್ತಿ ಇದೆ.

ಈ ಮೇಲೆ ಉಲ್ಲೇಖಿಸಿದ ದೇವರಿನ ಪರಿಕಲ್ಪನೆಗೆ ಜಾತಿಗಳಿಲ್ಲ, ಪ್ರವಾದಿಗಳಿಲ್ಲ, ಮತಗಳಿಲ್ಲ ಹಾಗೇ ಇವು ಎಲ್ಲವೂ ಎಲ್ಲ ಕಡೆಯೂ ಇವೆ. ಅದೇ ಸರ್ವಾಂತರ್ಯಾಮಿ. ಅದೇ ಸರ್ವಶಕ್ತ. ಅದೇ ಭಗವಂತ.

***
’ಓ ಶ್ರೀ ಗಣೇಶಾಯ ನಮಃ’ ಎಂದು ನಮ್ಮ ಮಕ್ಕಳಿಗೆ ಹೇಳಿಕೊಡುತ್ತೇವೆ. ಅಪರೂಪಕ್ಕೊಮ್ಮೆ ದೇವಸ್ಥಾನದಲ್ಲಿ ಕಾಲು ನೋಯಿಸಿಕೊಂಡು ವಿಷ್ಣು ಸಹಸ್ರನಾಮ ಓದಿ ಬರುತ್ತೇವೆ. ಧರ್ಮಸ್ಥಳದಲ್ಲಿ ಕೊಟ್ಟ ಶಿವಸಹಸ್ರ ನಾಮಾರ್ಚನೆಯ ಪುಸ್ತಕದಲ್ಲಿ ಕೊನೆಯ ಪಕ್ಷ ಒಂದು ನೂರು ನಾಮವನ್ನಾದರೂ ಬಾಯಿ ಪಾಠ ಮಾಡಿಕೊಂಡಿದ್ದೇವೆ. ಹಬ್ಬ-ಹರಿದಿನಗಳಿಗೆ ನಮ್ಮದೇ ಒಂದು ವರ್ಶನ್ನನ್ನು ಅನ್ನು ಸೃಷ್ಟಿಸಿಕೊಂಡಿದ್ದೇವೆ. ದಿನವನ್ನು ಆರಂಭಿಸುವ ಮೊದಲು ದೇವರ ಮುಂದೆ ದೀಪ ಹಚ್ಚುತ್ತೇವೆ, ಅಪರೂಪಕ್ಕೊಮ್ಮೆ ಸ್ಮೋಕ್ ಡಿಟೆಕ್ಟರುಗಳಿಗೆ ಹೆದರಿಕೊಂಡೇ ಊದುಬತ್ತಿಯನ್ನು ಉರಿಸುತ್ತೇವೆ. ಹಬ್ಬ ಹರಿದಿನಗಳೇನಾರೂ ವಾರಾಂತ್ಯಕ್ಕೆ ಒದಗಿ ಬಂದರೆ ದೇವಸ್ಥಾನಗಳ ಕಡೆಗೆ ಮುಖ ತಿರುಗಿಸುತ್ತೇವೆ.

ಈ ದೇವಸ್ಥಾನ ಎನ್ನುವುದು ನಮ್ಮ ಸಮುದಾಯ. ಭಾರತದಲ್ಲಿ ವಿಷ್ಣು ದೇವರ ಮುಂದೆ ಹಾಗೂ ಆಜೂ-ಬಾಜಿನಲ್ಲಿ ಹೆಚ್ಚು ದೇವರುಗಳನ್ನು ನಾವು ಸೃಷ್ಟಿಸಿಕೊಳ್ಳೋದಿಲ್ಲ, ಆದರೆ ನಮ್ಮ ಅನಿವಾಸಿ ಬದುಕಿನಲ್ಲಿ ನಾವು ಎಡೆತಾಕುವ ದೇವಸ್ಥಾನಗಳ ಹೆಸರುಗಳು ಏನೇ ಇದ್ದರೂ ಅದರಲ್ಲಿ ಎಲ್ಲವೂ ಇವೆ. ಗಣೇಶ (ಅದರಲ್ಲೂ ಹಲವಾರು ವಿಧ, ಭಂಗಿ, ಗಾತ್ರ - ಒಂದೇ ದೇವಸ್ಥಾನದ ಹಲವು ಕಡೆ), ಶಿವ, ಅಂಬಿಕೆ, ಸತ್ಯನಾರಾಯಣ ಸ್ವಾಮಿ (ಪರಿವಾರ), ರಾಮ (ಪರಿವಾರ), ಭೂಮಿ, ದುರ್ಗೆ, ಲಕ್ಷ್ಮಿ, ಸರಸ್ವತಿ, ಪಾರ್ವತಿ (ಪರಿವಾರ), ಶ್ರೀಕೃಷ್ಣ (ಪರಿವಾರ), ಆಂಜನೇಯ, ನವಗ್ರಹಗಳು, ಇತ್ಯಾದಿ - ಜೊತೆಗೆ ಮುಖ್ಯ ದೇವತೆ (ದೇವಸ್ಥಾನದ ಹೆಸರಿಗೆ ತಕ್ಕಂತೆ). ದೊಡ್ಡ ಬಾಲಾಜಿಯು ವಿಗ್ರಹದ ಕೆಳಗೆ ಸಣ್ಣದೊಂದಿದೆ, ಅದಕ್ಕೂ ಚಿಕ್ಕದಾಗಿ ಮತ್ತೊಂದು ಗಣೇಶ ಮೂರ್ತಿ ಇದೆ. ಪ್ರದಕ್ಷಿಣೆ ಹಾಕುವಾಗ ಅಲ್ಲಲ್ಲಿ ಬೇಕಾದಷ್ಟು ಸಣ್ಣ-ಪುಟ್ಟ ಗಣೇಶ-ಶಿವರು ಕಂಡುಬರುತ್ತಾರೆ.

ಒಂದು ಲೆಕ್ಕದಲ್ಲಿ ಹೇಳೋದಾದರೆ ಈ ಅನಿವಾಸಿಗಳು ಸೃಷ್ಟಿಸಿಕೊಂಡ ದೇವಸ್ಥಾನಗಳು ದೇವಸ್ಥಾನಗಳೇ ಅಲ್ಲ ಎನ್ನಬಹುದು. ಇಲ್ಲಿನ ಮಳೆ-ಛಳಿ-ವ್ಯವಸ್ಥೆಗೆ ತಕ್ಕಂತೆ ಬನಿಯನ್-ಕಾಲುಚೀಲ ಧರಿಸಿ ಪೂಜೆ ನಡೆಸಿಕೊಡುವ ಅರ್ಚಕರಿದ್ದಾರೆ. ಆ ಮೂಲ ವಿನೀತ ಭಾವನೆಯಿಂದ ದೇವರಿಗೆ ನಮ್ಮ ಪ್ರಾರ್ಥನೆಯನ್ನು ಅರ್ಪಿಸಿಕೊಳ್ಳುವ (ನಮ್ಮಲ್ಲಿ) ಮನೋಭಾವನೆಯಲ್ಲಿ ಬಹಳಷ್ಟು ಬದಲಾವಣೆ ಇದೆ/ಆಗಿದೆ. ಬೇಸಿಗೆ ಸಮಯದಲ್ಲಿ ಹೊರಗಡೆ ಜೀನ್ಸ್ ಚೆಡ್ಡಿ(ಬರ್ಮುಡಾ) ವನ್ನು ಧರಿಸಿಕೊಂಡು ಓಡಾಡುವ ನಮಗೆ ದೇವಸ್ಥಾನಗಳಲ್ಲಿ ’ಶಿಸ್ತಾಗಿ ಬನ್ನಿ’ ಎನ್ನುವ ವಿನಂತಿ/ಆದೇಶವಿದೆ. ಶೂಗಳನ್ನು ಯಾವಾಗಲೂ ರ್ಯಾಕ್‌ನಲ್ಲೇ ಇಡಿ ಎಂದು ಅದ್ಯಾವುದೇ ಭಾಷೆಯಲ್ಲಿ ಅದೆಷ್ಟೇ ಬೋರ್ಡುಗಳನ್ನು ಬರೆಸಿಹಾಕಿದ್ದರೂ ಅದನ್ನೆಲ್ಲ ಧಿಕ್ಕರಿಸಿ ಬಾಗಿಲ ಬಳಿಯೇ ಚಪ್ಪಲಿ/ಶೂ ರಾಶಿ ಪೇರಿಸುವ ’ಅದು ನಮಗಲ್ಲ’ ಎಂದು ಕೊಡಗಿಕೊಳ್ಳುವ ಮನೋಭಾವನೆ ಇದೆ (ಇದೇ ಒಂದು ಅಂಶ ಸಾಕು ನಾವು, ಭಾರತೀಯರು ರೂಲ್ಸ್, ರೆಗ್ಯುಲೇಶನ್ನ್ ಹಾಗೂ ಕಾನೂನನ್ನು ಹೇಗೆ ಪರಿಪಾಲಿಸುತ್ತೇವೆ ಎಂದು ಸಾಧಿಸಲು).

ಹೀಗೆ ನಮ್ಮ ಮನೆ, ಮನ, ಕಾರುಗಳಲ್ಲಿರುವುದು ದೇವರೋ ಅಥವಾ ಈ ದೇವಸ್ಥಾನವೆಂದು ಹೆಸರಿಟ್ಟುಕೊಂಡ ಸಮುದಾಯಗಳಲ್ಲಿರುವುದು ದೇವರೋ ಅಥವಾ ನಮ್ಮ ಊರು/ಪರಂಪರೆಯಲ್ಲಿರುವುದು ದೇವರೋ ಎನ್ನುವ ಪ್ರಶ್ನೆ ಬಹುಷಃ ಎಲ್ಲರಿಗೂ ಬಂದಿರಬಹುದು. ಇಷ್ಟೆಲ್ಲಾ ದೇವರಿನ ಪರಿಕಲ್ಪನೆ ಸಾಲದು ಎಂದು ನಮ್ಮ ನಮ್ಮ ಕಲ್ಪನೆಯ ಮಠಗಳನ್ನು ಹುಟ್ಟು ಹಾಕಿಕೊಂಡಿದ್ದೇವೆ. ಸಂಕಟಕ್ಕೆ ತಿರುಪತಿಯ ವೆಂಕಟರಮಣನಿದ್ದಾನೆ, ಧರ್ಮಸ್ಥಳದ ಮಂಜುನಾಥ ಸ್ವಾಮಿಯಿದೆ (ಒಂದು ಆಬ್ಜೆಕ್ಟ್ ಪರಿಕಲ್ಪನೆ ಗಮನಿಸಿ), ಮಂತ್ರಾಲಯವಿದೆ, ಹೊರನಾಡಿದೆ, ಶೃಂಗೇರಿಯಿದೆ. ನಮ್ಮ ಊರಿನ ಕೈಟಭೇಶ್ವರನಿದ್ದಾನೆ, ಸರ್ಕಲ್ಲಿನ ಚೌಡಮ್ಮಳಿದ್ದಾಳೆ, ತೊಗರ್ಸಿಯ ಮಲ್ಲಿಕಾರ್ಜುನ ಸ್ವಾಮಿ ಇದ್ದಾನೆ, ಸುಬ್ರಹ್ಮಣ್ಯ ಸ್ವಾಮಿಯ ಸಾನಿಧ್ಯವಿದೆ. ನಮ್ಮ ಹಿಂದೂ ಪರಿಕಲ್ಪನೆಯೇ ಎಷ್ಟು ವಿಸ್ತಾರವಾದುದೆಂದು ನಾನು ಸೋಜಿಗಗೊಂಡಿದ್ದೇನೆ - ಅವರವರ ಅನುಕೂಲಕ್ಕೆ ತಕ್ಕಂತೆ ಯಾರು/ಏನನ್ನು ಬೇಕಾದರೂ ಮೆಚ್ಚಿ/ಹಚ್ಚಿಕೊಳ್ಳುವ ಸ್ವಾತಂತ್ರ್ಯವಿದೆ.


***

ಸೃಷ್ಟಿ, ಪ್ರಕೃತಿ ಹಾಗೂ ಮೂರ್ತಿ ಪೂಜೆಯ ಆಧಾರದಲ್ಲಿ ಈ ಎಲ್ಲ ಉಲ್ಲೇಖಗಳನ್ನು ಮಂಡಿಸಿದಂತೆ ಒಂದು ಅಂಶ ಪ್ರಸ್ತುತವಾಗುತ್ತದೆ - ಅದೇ ನಮ್ಮ ಸಮುದಾಯ. ಭಾರತದಲ್ಲಿ ನಾವು ಬೆಳೆದುಬಂದಂತೆ ಒಂದು (ಮೆಜಾರಿಟಿ) ವ್ಯವಸ್ಥೆಯ ಅಂಗವಾಗಿದ್ದೆವು, ಆ ವ್ಯವಸ್ಥೆ ಇಲ್ಲಿ ಇರದಿದ್ದ ಮಾತ್ರಕ್ಕೆ ಅದನ್ನು ನಾವು-ನಾವೇ ಹುಟ್ಟುಹಾಕಿಕೊಂಡಿರೋದು (ಪ್ರಯತ್ನ). ಸಂಘಜೀವ ಪ್ರತಿಯೊಬ್ಬರಿಗೂ ಬೇಕಾದ ಹಾಗೇ ಒಂದಲ್ಲ ಒಂದು ಗೋಡೆಗೆ ನಾವು ಒರಗಿಕೊಳ್ಳಲೇ ಬೇಕಾಗುತ್ತದೆ. ನಮ್ಮ ಮನ-ಕಾರು-ಮನೆಗಳಲ್ಲಿನ ದೇವರುಗಳನ್ನು ಒಂದು ಸ್ವಲ್ಪ ದಿನಗಳ ಮಟ್ಟಿಗೆ ತೆಗೆದುಹಾಕಿ ನೋಡಿದಾಗ (ಸಾಧ್ಯವಿದ್ದರೆ) ಅಲ್ಲಿ ಒಂದು ನಿರ್ವಾತ (ವ್ಯಾಕ್ಯೂಮ್) ಹುಟ್ಟತ್ತದೆ, ಈ ನಿರ್ವಾತದ ವಿಶೇಷವೆಂದರೆ ಅದನ್ನು ಮತ್ತೊಂದರಿಂದ ತುಂಬಲೇ ಬೇಕಾಗುತ್ತದೆ. ಒಂದು ರೀತಿಯ ಪೆಂಡುಲಮ್ ಗುಂಡು ಇದ್ದ ಹಾಗೆ, ನೀವು ಒಂದು ಎಕ್ಸ್‌ಟ್ರೀಮ್‌ಗೆ ತೆಗೆದುಕೊಂಡು ಹೋದಂತೆಲ್ಲ ಅದು ಅಷ್ಟೇ ವಿರುದ್ಧ ದಿಕ್ಕಿಗೆ ಚಲಿಸುವ ಸಹಜತೆ ಇರುವ ಹಾಗೆ.

ಪ್ರತಿಯೊಬ್ಬರಿಗೂ ಅವರವರ ಬೇಡಿಕೆಗಳಿವೆ ಹಾಗೂ ಅಗತ್ಯಗಳಿವೆ, ಅದಕ್ಕೆ ತಕ್ಕಂತೆ ಅವರವರ ಮನಸ್ಸಿನಲ್ಲಿ ಎಲ್ಲೋ ಮೂಲೆಯಲ್ಲಿ ದೇವರ ಪರಿಕಲ್ಪನೆ ಇದೆ. ದೇವರು ಇಲ್ಲ ಎನ್ನುವ ವಾದವೂ, ದೇವರ ಮೇಲಿನ ಸೇಡೂ, ವಿರೋಧಾಲೋಚನೆಗಳು ಎಲ್ಲವೂ ಆ ದೇವರ ಕೃಪೆಯೇ ಎಂದುಕೊಂಡರೆ ಎಲ್ಲವೂ ದೇವರ ಮಯ. ದೇವರು ಎನ್ನುವ ಭಾವನೆ ಅಥವಾ ಆ ಭಾವನೆ ಇಲ್ಲದಿರುವ ಭಾವನೆಯೇ ದಿವ್ಯವಾದುದು, ಅಷ್ಟೇ!

Monday, February 16, 2009

ಈಗಿನ ಹುಡ್ರು ಕಥೆ

ಪಾಪ, ಈಗಿನ ಹುಡ್ರು ತಮ್ ತಮ್ ಒಳಗೆ ಹಿಂಗೂ ಮಾತಾಡ್‌ಕೊಂತರೆ ನೋಡಿ, ಕರ್ರಗಿದ್ದೋರನ್ನ ಕರಿಯಾ ಅನ್ನೋದರಲ್ಲಿ ಅಫೆನ್ಸ್ ಏನಿದೆ? ದಿನಕ್ಕೆ ಐವತ್ತು ಸೆಂಟ್ಸ್ ಕೊಟ್ಟು ವಾರಕ್ಕೊಂದು ಸರ್ತಿ ಉದಯಾ ಟಿವಿ ನೋಡೋ ಭಾಗ್ಯದ ದೆಸೆಯಿಂದ ಈ ಹಾಡು ಕಿವಿಗೆ ಬಿದ್ದು ಹೀಗೆ ಬರೀಬೇಕಾಯ್ತು ನೋಡಿ.

ಕರಿಯಾ ಐ ಲವ್ ಯೂ
ಕರುನಾಡ ಮೇಲ್ ಆಣೆ
ಬೆಳ್ಳಿ ಐ ಲವ್ ಯೂ
ಬಿಳಿ ಮೋಡದಾ ಮೇಲ್ ಆಣೆ

ಭಾಳಾ ಹಿಂದಕೆ ಏನಿಲ್ಲ ಪ್ರೇಮಿಗಳೆಲ್ಲ ಇನ್ನೂ ಏನೇನನ್ನೋ ಇಟ್ಟು ಆಣೆ ಮಾಡಿಕೊಂತಿದ್ರು ಇಂದಿನ್ ಕಾಲ್ದಲ್ಲಿ ಅವೆಲ್ಲಾ ಶಾನೆ ಬದ್ಲಾಗಿರಂಗಿದೆ ಬಿಡಿ, ಏನ್ ಮಾಡಣ. ಇವತ್ತಿನ್ ಹುಡ್ರೆಲ್ಲಾ ಟೈಪ್‌ರೈಟರ್ ಕುಟ್ಟಿ ನೋಡಿಲ್ಲ, ರೆಕಾರ್ಡ್ ಪ್ಲೇಯುರ್ ತಟ್ಟೇನೆಲ್ಲ ಕಂಡೇ ಇಲ್ಲ. ನಮ್ ಕಾಲ್ದ ರೆಕಾರ್ಡ್ ತಟ್ಟೆಗಳ ಮೇಲ್ ಧೂಳೂ ಪಾಳೂ ಕುಂತಿದ್ದೇ ಆದ್ರೆ ಬರೀ ಹೇಳಿದ್ದೇ ಹೇಳ್ತಿತ್ತು, ಅದೇ ಈಗಿನ ಕಾಲ್ದ ತಟ್ಟೆಗಳೋ ಕೆಲ್ಸಾ ಮಾಡೋದೇ ನಿಲ್ಲಿಸ್ತವೆ. ಹೇಳಿದ್ದೇ ಹೇಳೋದ್ ಬೆಷ್ಟೋ ಅಥ್ವಾ ಕೆಲ್ಸಾ ನಿಲ್ಸೋದ್ ಬೆಷ್ಟೋ ನಿಮ್ ನಿಮ್ಗೇ ಬಿಟ್ಟಿದ್ದು. ಕೆಲವಂದ್ ಸರ್ತಿ ಹೇಳಿದ್ದೇ ಹೇಳೋ ಕಿಸ್‌ಬಾಯ್ ದಾಸ್ರೇ ಸರಿ, ಸುಮ್ಕಿರ್ ಮಂಗ್ಯಾನ್ ಮಕ್ಳೀಗ್ ಹೋಲ್ಸಿ ನೋಡಿದ್ರೆ ಅನ್ಸಲ್ಲಾ?

ನಿನಗೊಂದು ಪ್ರೇಮದ ಪತ್ರಾ
ಬರೆಯೋದು ನನಗಾಸೆ
ನಾನೆ ಇರುವೇ ಹತ್ರ
ಬಿಡು ಆಸೆ ಓ ಕೂಸೇ


ಆಯ್ತಲ್ಲಾ ಕಥೇ, ಪ್ರೇಮದ ಪತ್ರಾ ಇರ್ಲಿ, ಪತ್ರದ ಗೋಜಿಗೇ ಹೋಗಂಗಿಲ್ಲ ಈಗಿನ ಹುಡ್ರೂ ಅಂತೀನಿ. ಎಲ್ಲೋ ಇ-ಮೇಲೂ ಪಾಮೇಲೂ ಅಂತ ಕುಟ್ಟಿಗಂಡು ಬದುಕ್ಯಂಡಿದ್ದ್ ಬಡ್ಡಿ ಹೈಕ್ಳು ಈಗೀಗ ಎಸ್‌ಎಮ್ಮೆಸ್ ದಾರಿ ಹಿಡಕಂಡು ಒಂಥರಾ ಕಾಡುಕುದ್ರೆ ದಾರಿ ಹಿಡಿದವೆ ಇವರ ಕಮ್ಮ್ಯೂನಿಕೇಷನ್ನು. ಜೊತೆಗೆ ಸೆಂಟ್ರಲೈಜ್ಡ್ ಪೋಸ್ಟ್ ಆಫೀಸ್ ಕಥೆ ಏನ್ ಹೇಳಾಣ, ಅವರ ಪತ್ರಗಳ ಎಣಿಕೆ ಕಡಿಮೆ ಆದಂತೆ ಅವರ ಕಮ್ಮೀ ಆದ ಆದಾಯ ನೋಡಿ ಇಂದಿನ ಪೋಸ್ಟ್ ಮಾಸ್ಟರ್ ಜನರಲ್ಲುಗಳಿಗೆ ರಾತ್ರಿ ನಿದ್ದೇನೇ ಬರಂಗಿಲ್ಲಂತೆ ನಿಜವೇ? ಇವತ್ತಿನ ಮೊಬೈಲ್ ಫೋನ್ ಜಮಾನಾದಾಗೆ ಜನಗಳು ಲೆಟ್ರು ಬರೆಯೋದಿರ್ಲಿ ಮಾತೇ ಆಡೇ ಬರೀ ಫಿಂಗರ್ರುಗಳ ಮಸಲ್ಲುಗಳನ್ನು ಬೆಳೆಸ್ತಾ ಇದಾರಂತೆ ಹಿಂಗೇ ನಡೆದ್ರೆ ಇನ್ನು ಮುಂದಿನ ಪೀಳಿಗೆಗಳಿಗೆ ಒಂದೊಂದು ಬೆರಳು ಹೆಚ್ಚು ಹುಟ್ಟುತ್ತೋ ಏನೋ - ವಿಕಾಸವಾದದ ದೊರೆಗಳ್ನೇ ಕೇಳ್ಬೇಕು. ಬ್ಲ್ಯಾಕ್‌ಬೆರಿ ಅಂತಂದು ಜೀವನದುದ್ದಕ್ಕೂ ಯಾವ್ದೇ ಬೆರ್ರಿನ್ನೂ ಚೆರ್ರಿನ್ನೂ ನೋಡ್ದೇ ಇರೋರಿಗೆ ಕಮ್ಮ್ಯೂನಿಕೇಷನ್ನ್ ಫಿವರ್ರ್ ಹುಟ್ಟಿಸಿರೋರನ್ನ ಜೈಲಿಗೆ ಹಾಕ್ಬೇಕು, ಮತ್ತೇನು. ಇಷ್ಟೆಲ್ಲಾ ಮಾಧ್ಯಮಾ, ಕಮ್ಮ್ಯೂನಿಕೇಷನ್ನೂ ಅಂತಾ ಇದ್ರೂ ಜನಗಳ ನಡ್ವೆ ಸಂಬಂಧಗಳ ಅಪಸ್ವರ ಹೆಚ್ತಾನೇ ಇರೋದು ಇನ್ಯಾವ ವಾದದ ಮಾತೂ ಅಂತೀನಿ.

ಇವತ್ತಿನ ಕಾಯಂಗಿಲ್ಲ, ಕೆನೆ ಕಟ್ಟಂಗಿಲ್ಲ. ನೋಡಿಕ್ಯಂತಿರಿ ಇವತ್ತಲ್ಲ ನಾಳೆ ಒಂದು ನಿಮಿಷದೊಳಗೆ ಹಾಲು ಕೆನೆಕಟ್ಟೋ ಯಂತ್ರ ಕಂಡ್ ಹಿಡಿತಾರೋ ಇಲ್ಲಾ ಅಂತ. ಮೊಸರಿಗೆ ಇಡೋವಾಗ ಹಾಲನ್ನು ಬಿಸಿ ಮಾಡಿ ಆಮೇಲೆ ತಣ್ಣಗೆ ಮಾಡಿ ಅದರ ಮೇಲೆ ಹೆಪ್ಪು ಯಾಕ್ ಹಾಕಬೇಕು, ಯಾರ್ ಮಾಡಿದ್ರಪ್ಪಾ ಆ ನೀತೀನ.

Monday, February 09, 2009

ಅವರವರ ಹಾಡು ಅವರದು...

ಕೆಳಗಿನ ಮೂರು ವಾರದಿಂದ ಭರ್ಜರಿ ಕೆಲಸ. ಜನವರಿ ಬಂತೋ ಬಂತು ಬಹಳಷ್ಟು ಬದಲಾವಣೆಗಳನ್ನ ತಂದಿತು, ಅದರಲ್ಲಿ ನನ್ನ ಬದಲಾದ ಬಾಸು ಅದರ ಜೊತೆಗೆ ಬಂದ ಪ್ರಾಜೆಕ್ಟು ಇವೆಲ್ಲ ಉಳಿದವನ್ನೆಲ್ಲ ನಗಣ್ಯ ಮಾಡಿವೆ ಎಂದರೆ ತಪ್ಪೇ ಇಲ್ಲ. ಸಿನಿಮಾದಲ್ಲಿ ಆಗೋ ಹಾಗೆ ನಮ್ಮ ಆಫೀಸಿನಲ್ಲಿ ಕಳೆದ ಐದು ವಾರಗಳಲ್ಲಿ ಅದೆಷ್ಟೋ ಬದಲಾವಣೆಗಳು ನಡೆದು ಹೋದವು, ಇದ್ದುದರಲ್ಲಿ ಸ್ಟೇಬಲ್ಲ್ ಆಗಿರೋ ವಿಡಿಯೋ ಡಿವಿಜನ್ನಲ್ಲಿ ಹೀಗಾದರೆ ಇನ್ನುಳಿದ ಕಡೆ ಹೇಗೆ ಎಂದು ಯಾರೂ ಊಹಿಸಿಕೊಳ್ಳಬಹುದು, ಅದೂ ಇನ್ನುಳಿದ ಕಂಪನಿಗಳಲ್ಲಿ ಅದರಲ್ಲೂ ಫೈನಾನ್ಸಿಯಲ್ ಇಂಡಸ್ಟ್ರಿಯಲ್ಲಂತೂ ಭರ್ಜರಿ ಕಷ್ಟವಂತೆ.

ನನ್ನ ಇನ್ ಬಾಕ್ಸುಗಳಲ್ಲಿ ಈಗಾಗಲೇ ಕೆಲಸ ಕಳೆದುಕೊಂಡ ಹಲವರ ರೆಸ್ಯುಮೆ ಬಂದು ಹೋಗಿವೆ. ಅವರಿಗೆ ಇಂತಲ್ಲಿ ಕೆಲಸ ಹುಡುಕಿ ಎನ್ನುವುದಾಗಲೀ ಅಥವಾ ಹೀಗೆ ಮಾಡಿ ಎಂದು ಹೇಳುವುದಾಗಲೀ ಈಗ ಮೊದಲಿನಷ್ಟು ಸುಲಭವಂತೂ ಅಲ್ಲ. ಜನವರಿ ಒಂದರಲ್ಲೇ ಅಮೇರಿಕದಲ್ಲಿ ಸುಮಾರು 600 ಸಾವಿರ ಜನ (ನಾನ್ ಫಾರ್ಮ್) ಪೇರೋಲ್ ನಿಂದ ಹೊರಗೆ ಬಂದರಂತೆ, ಇನ್ನು ಇದೇ ಗತಿ ಇನ್ನೊಂದೆರಡು ತಿಂಗಳು ಅಥವಾ ವರ್ಸ್ಟ್ ಎಂದರೆ ಇನ್ನೊಂದರೆ ಕ್ವಾರ್ಟರು ಮುಂದುವರೆದದ್ದೇ ಆದರೆ ಒಬ್ಬೊರನೊಬ್ಬರು ಕಿತ್ತು ತಿನ್ನೋ ಪರಿಸ್ಥಿತಿ ಬರೋದಂತೂ ನಿಜ. ಯಾವಾಗಲೂ ಸೊನ್ನೆಯಿಂದ ಕೆಳಗೆ ಕೊರೆಯುತ್ತಿರುವ ಛಳಿ ಇರುವ ನಮ್ಮೂರಿನಲ್ಲಿ ನಿನ್ನೆ ಮರ್ಕ್ಯುರಿ ಅರವತ್ತು ಡಿಗ್ರಿ (ಫ್ಯಾರನ್‌ಹೈಟ್) ದಾಟಿ ಮುಂದು ಹೋಯಿತೆಂದುಕೊಂಡು ನಾನು ಜನರೆಲ್ಲ ಶಾಪ್ಪಿಂಗ್ ಮಾಲ್‌ಗಳಲ್ಲಿ ತುಂಬಿರುತ್ತಾರೆ ಎಂದುಕೊಂಡದ್ದು ತಪ್ಪಾಗಿ ಹೋಯಿತು. ವಾಲ್‌ಮಾರ್ಟ್ ಮುಂದಿನ ಪಾರ್ಕಿಂಗ್ ಲಾಟ್‌ಗಳೂ ಖಾಲಿ ಇದ್ದುದು ಇಂತಹ ದಿನಗಳಲ್ಲಿ ದೊಡ್ಡ ಆಶ್ಚರ್ಯವೇ ಸರಿ. ಇವೆಲ್ಲ ಅತಿಕಷ್ಟದ ಫೈನಾನ್ಸಿಯಲ್ ಸಮಯ, ಇಂತಹ ಸಮಯದಲ್ಲಿ ನಾವೆಲ್ಲ ಸರ್ವೈವಲ್ ಮೋಡ್‌ಗೆ ಹೋಗಿಬಿಟ್ಟಿರೋದು ಸಹಜವೇ.

ಈ ಕಷ್ಟದ ಆರ್ಥಿಕ ದಿನಗಳಲ್ಲಿ ಒಬ್ಬರಿಗೊಬ್ಬರಿಗೆ ಫ್ಯಾಮಿಲಿ ಸಪೋರ್ಟ್ ಖಂಡಿತ ಬೇಕೇ ಬೇಕಾಗುತ್ತದೆ. ಬೇಕಾದಷ್ಟು ಇದ್ದು, ತಿಂದು-ತೇಗಿ, ದುಂದು ವೆಚ್ಚ ಮಾಡುವ ದಿನಗಳಿಗಿಂತ ಕಠಿಣ ಆರ್ಥಿಕ ಪರಿಸ್ಥಿತಿ ಇರುವ ದಿನಗಳಲ್ಲೇ ಫ್ಯಾಮಿಲಿಗಳು ಒಬ್ಬರಿಗೊಬ್ಬರು ಕಷ್ಟಕ್ಕಾಗುವುದು ಎನ್ನುವುದು ನನ್ನ ಥಿಯರಿ. ಈ ದಿನಗಳಲ್ಲಿ ಎಷ್ಟೇ ಕಷ್ಟ ಬಂದರೂ ನಾವು ಒಬ್ಬೊರಿಗೊಬ್ಬರು ಆಗಿಯೇ ತೀರುತ್ತೇವೆ ಎನ್ನೋದು ಒಂದು ಕುಟುಂಬದ ಮೂಲ ಮಂತ್ರವಾಗಿ, ಜನರೆಲ್ಲ ದಿನ-ವಾರ-ತಿಂಗಳುಗಳನ್ನು ನಿಧಾನವಾಗಿ ತಳ್ಳುತ್ತಲಿರುವಾಗ ಜಗಳ-ವೈಮನಸ್ಯ-ವಿಚ್ಛೇದನಗಳಿಗೆ ಸಮಯವೂ ಇಲ್ಲ, ವ್ಯವಧಾನವೂ ಇಲ್ಲ ಎಂತಲೇ ಹೇಳಬೇಕಾಗುತ್ತದೆ. ಜೊತೆಗೆ ಪ್ರತಿಯೊಂದನ್ನು ಒಟ್ಟಿಗಿಡುವುದಕ್ಕೆ ಎಷ್ಟು ದುಡ್ಡು ತೆರಬೇಕಾಗುತ್ತದೆಯೋ ಅದನ್ನೆಲ್ಲ ವಿಭಜಿಸೋದಕ್ಕೂ ಹೆಚ್ಚೂಕಡಿಮೆ ಅಷ್ಟೇ ಖರ್ಚಾಗುತ್ತದೆ ಎಂದರೂ ತಪ್ಪಲ್ಲ.

ನಮ್ಮ ಇನ್‌ವೆಷ್ಟ್‌ಮೆಂಟ್ ಪೋರ್ಟ್‌ಫೋಲಿಯೋ ಆಗಲೀ, ನಮ್ಮ ಉಳಿತಾಯವನ್ನಾಗಲೀ ನೋಡಿದರೆ ಕಣ್ಣಲ್ಲಿ ನೀರೇ ಬರುತ್ತೆ. ಕಳೆದ ವರ್ಷ ಪ್ರತಿಶತ ನಲವತ್ತರಷ್ಟು ಮೌಲ್ಯದಲ್ಲಿ ಕುಸಿದಿದ್ದ ನಂಬರುಗಳಿಗೆ ಈ ವರ್ಷದ ಜನವರಿಯಲ್ಲಿ ಮತ್ತೂ ಹತ್ತು ಪರ್ಸೆಂಟ್ ಕಡಿತ. ಇವೆಲ್ಲ ಇಳಿಮುಖದಿಂದಾಗಿ ನನ್ನಂತಹವರಿಗೆ ಸುಮಾರು ಆರೇಳು ವರ್ಷಗಳಲ್ಲಿ ದುಡಿದು-ಕೂಡಿಹಾಕಿದ್ದು ಏನೇನೂ ಇಲ್ಲ ಎನ್ನುವಂಥ ಪೆಚ್ಚು ಅನುಭವ. ಹ್ಞೂ, ಇವತ್ತಲ್ಲ ನಾಳೆ ಮುಂದೆ ಬಂದೇ ಬರುತ್ತೆ ಆದರೆ ನಮ್ಮ ನಂಬರುಗಳೆಲ್ಲ ಈಗ ಏಳು ವರ್ಷದ ಕೆಳಗೆ ಹೋಗಿವೆ, ಇದು ಇನ್ನು ಮೇಲೆ ಬರಲು ಮೂರು ವರ್ಷಗಳಾದರೂ ಬೇಕು, ಅಲ್ಲಿಗೆ ಈ ಹತ್ತು ವರ್ಷಗಳಲ್ಲಿ ನಾವು ಕಡಿದ್ದು ಹಾಕಿದ್ದು ಶೂನ್ಯ, ಅಷ್ಟೇ. ಈ ನಂಬರುಗಳಿಗೆಲ್ಲ ನನ್ನ ಧಿಕ್ಕಾರವಿರಲಿ, ಅದರ ಬದಲಿಗೆ ಚಿರಾಸ್ತಿ (immovable assett), ಅನ್ನೋದನ್ನೇನಾದರೂ ಗಳಿಸಿದ್ದರೆ ಅದು ಇಷ್ಟರ ಮಟ್ಟಿಗೆ ಕುಸಿಯುತ್ತಿರಲಿಲ್ಲ. ಉದಾಹರಣೆಗೆ ಹತ್ತು ವರ್ಷದ ಹಿಂದೆ ಒಂದೈದು ಎಕರೆ ತೋಟ ಮಾಡಬಹುದಾದ ಭೂಮಿಯನ್ನು ಖರೀದಿಸಿ ಅದರಲ್ಲಿ ಥರಥರನ ವಾಣಿಜ್ಯ ಬೆಳೆಯನ್ನು ಆರಂಭಿಸಿದ್ದರೆ ಇವತ್ತಿಗೆ ಒಂದು ಗಂಜಿ ಕಾಸಿನ ಆದಾಯವಾದರೂ ಬರುತ್ತಿತ್ತು.

ನಾವು ಮೊದಲೆಲ್ಲ - ’ಅಮೇರಿಕಕ್ಕೆ ಏಕೆ ಬಂದಿರಿ?’ ಎನ್ನುವ ಪ್ರಶ್ನೆಯನ್ನು ಕಠಿಣವಾದ ಪ್ರಶ್ನೆ ಎಂದುಕೊಳ್ಳುತ್ತಿದ್ದೆವು, ಈಗ ’ಭಾರತಕ್ಕೆ ಏಕೆ ಹಿಂತಿರುಗಿ ಹೋಗಬೇಕು?’ ಎನ್ನುವುದು ಅದಕ್ಕಿಂತ ಕಠಿಣ ಪ್ರಶ್ನೆಯಾಗಿ ತೋರುತ್ತಿದೆ. ಮೊದಲೆಲ್ಲ ಹಿಂತಿರುಗಿ ಹೋಗೋದಾದರೂ ಒಂದು ಆಫ್ಷನ್ನ್ ಆಗಿತ್ತೋ ಏನೋ, ಈಗಂತೂ - ಥ್ಯಾಂಕ್ಸ್ ಟು ಹತ್ತು ವರ್ಷದ ಹಿಂದಿನ ನಂಬರ್ಸ್ - ನಾವು ಹಿಂತಿರುಗಿ ಹೋಗೋದು ಸಾಧ್ಯವೇ? ಎಲ್ಲಿಗೆ, ಹೇಗೆ, ಯಾವ ಕೆಲಸಕ್ಕೆ, ಯಾವ ಊರಿಗೆ, ಎಂದು - ಮೊದಲಾದ ಪ್ರಶ್ನೆಗಳಿಗೆ ಯಾವ ಉತ್ತರವಂತೂ ತೋರೋದಿಲ್ಲ. ಅಮೇರಿಕದ ವ್ಯವಸ್ಥೆಯನ್ನು ಆಧರಿಸಿ ಉಳಿದ ವ್ಯವಸ್ಥೆಗಳು, ಉಳಿದವನ್ನು ಆಧರಿಸಿ ಆಮೇರಿಕದ್ದು ಎನ್ನುವಲ್ಲಿ ಇಲ್ಲಿನ ಕಷ್ಟ ಎಲ್ಲಾ ಕಡೆಗಿದೆ - ಬೆಂಗಳೂರಿನಿಂದ ಹಿಡಿದು ಬೀಜಿಂಗ್‌ನವರೆಗೆ ಎಲ್ಲರಿಗೂ ಬಿಸಿ ಈಗಾಗಲೇ ತಟ್ಟಿದೆ. ಕೆಲಸ ಕಳೆದುಕೊಳ್ಳುವವರ ಲೆಕ್ಕ ಮುಗಿಲು ಮುಟ್ಟಿದೆ ಹಾಗೇ ಕಂಪನಿಗಳೂ ಸಹ ಸರ್ವೈವಲ್ಲ್ ಮೋಡಿಗೆ ಹೋಗಿ ಬಿಟ್ಟಿವೆ, ಅನಗತ್ಯ ಖರ್ಚು ವೆರ್ಚಗಳು ಈಗಾಗಲೇ ನಿಂತು ಹೋಗಿವೆ. ನಮ್ಮ ಕಂಪನಿಯಲ್ಲಿ ಮೊದಲೆಲ್ಲ ಟೀಮ್ ಲಂಚ್ ಅನ್ನೋದನ್ನು ನನ್ನಂಥವರು ಎಷ್ಟು ಸಾರಿ ಬೇಕಾದರೂ ಸುಲಭವಾಗಿ ಹೊಂದಿಸಿಕೊಳ್ಳಬಹುದಾಗಿತ್ತು, ಈಗ ಅವೆಲ್ಲಕ್ಕೂ ಎಕ್ಸಿಕ್ಯೂಟಿವ್ ಪರ್ಮಿಷನ್ನ್ ಬೇಕಾಗಿದೆ. ನಮ್ಮ ಆಫೀಸಿನ ಉಳಿದೆಲ್ಲ ಡಾಕ್ಯುಮೆಂಟುಗಳಿಗೆ ಹೋಲಿಸಿದಾಗ spreadsheet rules! ಇಲ್ಲಿರುವ ನಂಬರುಗಳೇ ಪ್ರತಿಯೊಂದನ್ನು ನಿರ್ಧರಿಸೋದು, ಇಲ್ಲಿರುವ ನಂಬರುಗಳಿಗಿಂತ ಹೊರತಾಗಿ ಇನ್ನೇನೂ ಇಲ್ಲ.

1930 ರ ದಶಕದ ಡಿಪ್ರೆಷ್ಷನ್ನಿಗೂ ಇಂದಿಗೂ ಬಹಳಷ್ಟು ವ್ಯತ್ಯಾಸವಿದೆ. ಚೀನಾ ದೇಶದಲ್ಲಿ ಎಷ್ಟೋ ಜನ ತಮ್ಮ ಮನೆ-ಜಮೀನುಗಳನ್ನು ಮಾರಿ ಸ್ಟಾಕ್ ಮಾರ್ಕೆಟ್ಟಿನಲ್ಲಿ ಹೆಚ್ಚಿನ ಉತ್ಪನ್ನಕ್ಕೆಂದು ಹಣ ತೊಡಗಿಸಿದ್ದರಂತೆ, ಅವರದ್ದೆಲ್ಲ ಪರಿಸ್ಥಿತಿ ಈಗ ಹೇಗಿದ್ದಿರಬಹುದು? ಇಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಜನ ಮಾರ್ಕೆಟ್ಟಿನಲ್ಲಿ ತಮ್ಮ ಹಣವನ್ನು ತೊಡಗಿಸಿ ಶಾರ್ಟ್ ಮತ್ತು ಲಾಂಗ್ ಟರ್ಮ್ ಇನ್ವೆಸ್ಟ್‌ಮೆಂಟಿನಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಭಾಗಿಗಳಾಗಿದ್ದಾಗ, ಈಗಿನ ರಿಸೆಷನ್ನುಗಳು ಹೆಚ್ಚು ಜನರನ್ನು ತೊಂದರೆಗೀಡು ಮಾಡುತ್ತವೆ ಎನ್ನುವುದು ನನ್ನ ಲೆಕ್ಕ. ಸರ್ಕಾರಿ ಹಾಗೂ ಖಾಸಗಿ ನೌಕರರ ಸಂಖ್ಯೆಯಲ್ಲೂ ಬಹಳಷ್ಟು ವ್ಯತ್ಯಾಸವಾಗಿದೆ. ಮೊದಲೆಲ್ಲ ಸರ್ಕಾರದ ಕೆಲಸವೇ ಉನ್ನತ ಕೆಲಸ ಎನ್ನುವ ದಕ್ಷಿಣ ಭಾರತದಲ್ಲಿ ಇಂದು ಬೇಕಾದಷ್ಟು ಖಾಸಗಿ ಕೆಲಸಗಳು ಹುಟ್ಟಿಕೊಂಡಿವೆ (ಎಂಭತ್ತು, ತೊಂಭತ್ತರ ದಶಕದಲ್ಲಿ ಬದಲಾದ ಅಂಕಿಅಂಶಗಳ ಸಹಾಯದಿಂದ). ಬೆಂಗಳೂರು, ಮೈಸೂರು ಎನ್ನುವ ನಮ್ಮ ನೆರೆ ಊರುಗಳಲ್ಲಿ ಮಾರ್ಟ್‌ಗೇಜ್‌ನಲ್ಲಿ ಮನೆ ತೆಗೆದುಕೊಂಡವರ ಸಂಖ್ಯೆ ಹೆಚ್ಚಿದೆ. ನಾವು ಸಾಲವಿಲ್ಲದ ಕುಟುಂಬ ಎನ್ನುವಲ್ಲಿ, ಸಾಲದ ಮೇಲೇ ನಾವು ನಿಂತಿರೋದು ಎನ್ನುವ ಪ್ರಸಂಗ ಬಂದಿದೆ. ಹಾಗಿರುವಲ್ಲಿಯೇ ನಮ್ಮ-ನಿಮ್ಮ ಡಿಪೆಂಡೆನ್ಸಿ ಗ್ಲೋಬಲ್ ಮಾರ್ಕೆಟ್ ಮೇಲೆ ಹೆಚ್ಚಿರೋದು. ಹಳ್ಳಿಯ/ಪಟ್ಟಣದ ವರ್ಷದ ಕಂದಾಯವನ್ನು ಕಟ್ಟಿಕೊಂಡು ಪೆನ್ಷನ್ ಹಣದಲ್ಲಿ ಜೀವನ ಸಾಗಿಸುತ್ತಿರುವ ಪೋಷಕರಿಗೂ ತಾವು ಕೆಲಸ ಮಾಡುತ್ತಿರುವ ಕಾರ್ಪೋರೇಷನ್ನುಗಳ ಹಾಗೇ ಎಲ್ಲವೂ ಸಾಲದ ಮೇಲೆ ನಿಂತು ತಿಂಗಳು-ತಿಂಗಳಿಗೆ ಕಂತು ಕಟ್ಟುವ ಮುಂದಿನ ಜನರೇಷನ್ನಿಗೂ ಬಹಳಷ್ಟು ವ್ಯತ್ಯಾಸವಿದೆ. ಜೊತೆಗೆ ಒಂದಿಷ್ಟು ಜನರ ಜೀವನ ಶೈಲಿ ದಿಢೀರ್ ಬದಲಾಗಿ ಹೋಗಿದ್ದೂ ಇದಕ್ಕೆಲ್ಲ ಪುಷ್ಟಿ ತಂದಿದೆ, ಅಲ್ಲಲ್ಲಿ ನಾಯಿಕೊಡೆಗಳ ಹಾಗೆ ಹುಟ್ಟಿದ ಕಂಪನಿಗಳಲ್ಲಿ ಕೆಲಸ ಮಾಡುತ್ತ ನಮ್ಮೂರಿನ ಹುಡುಗ-ಹುಡುಗಿಯರು ವರ್ಷಕ್ಕೆ ಲಕ್ಷಾಂತರ ಎಣಿಸೋದಕ್ಕೆ ಶುರು ಮಾಡಿದ ಮೇಲೆ ಆರ್ಥಿಕ ಅವಲಂಭನೆಗೆ ಹೊಸದೊಂದು ಅರ್ಥ ಹುಟ್ಟಿದೆ.

ಕಾದುಕೊಂಡು ಕುಳಿತಿರೋದನ್ನು ಬಿಟ್ಟು ಇನ್ನೇನನ್ನು ಮಾಡಲು ಸಾಧ್ಯ ಎಂದು ಯೋಚಿಸಿದರೆ ಹೆಚ್ಚು ಆಪ್ಷನ್ನುಗಳೇನು ತೋಚುತ್ತಿಲ್ಲ. ಡ್ರಾಸ್ಟಿಕ್ ಬದಲಾವಣೆಗಳನ್ನು ಮಾಡುವ ಮೊದಲು ಬೇಕಾದಷ್ಟು ಆಲೋಚಿಸಿದರೂ ಯಾವ ದಾರಿಯನ್ನು ಆಯ್ದುಕೊಂಡರೂ ಹೊಡೆತ ಬೀಳುವುದಂತೂ ಗ್ಯಾರಂಟಿ ಆಗಿದೆ. ನೀರಿನಲ್ಲಿ ಮುಳುಗಿದೋರಿಗೆ ಛಳಿಯೇನು ಮಳೆಯೇನು ಅಂತಾರಲ್ಲ ಹಾಗೆ ಸುಮ್ಮನಿರಬೇಕು, ಅಷ್ಟೇ.

***

An executive in my company..."I don't mind the change (move), thank god I have a job, it is good to be busy!'

Saturday, January 24, 2009

ಆಹಾ, ಜನವರಿ!

ಓಹ್, ಈ ಜನವರಿಯಲ್ಲಿ ಅದೇನೇನೆಲ್ಲಾ ಆಗ್ತಾ ಇದೆ! ಓಬಾಮಾ ಪಬಾಮಾ ಪ್ರೆಸಿಡೆಂಟ್ ಆಗಿರೋ ಬಗ್ಗೆ ಬೇರೆ ಎಲ್ರೂ ಬರೀತಾ ಇರೋವಾಗ ನಾನೂ ಅದನ್ನೇ ಬರೆದ್ರೆ ಏನ್ ಪ್ರಯೋಜನ? ಈ ಜನವರಿಯ ಇಪ್ಪತ್ತನಾಲ್ಕು ದಿನಗಳಲ್ಲಿ ಆಗ್ಲೇ ಹನ್ನೊಂದು ಹನ್ನೆರಡು ಪರ್ಸೆಂಟ್ ಡೌನ್ ಆಗಿರೋ ನನ್ನ ಪೋರ್ಟ್‌ಫೋಲಿಯೋ ಬಗ್ಗೆ ಚಿಂತಿಸ್ಲೋ ಅಥವಾ ಇತ್ತೀಚೆಗೆ ನನ್ನ ಜೊತೆಯಾದ ಹೊಸ ಬಾಸ್ ಹಾಗೂ ಹೊಸ ಕೆಲಸಗಳ ಬಗ್ಗೆ ಕೊರೆದರೆ ಹೇಗೆ?

ಈ ಇಂಗ್ಲೀಷ್ ಕ್ಯಾಲೆಂಡರಿನ ಜನವರಿ ಅದೆಷ್ಟು ಹೊಸದನ್ನು ತಂದಿದೆ ಈ ವರ್ಷ - ಅಮೇರಿಕದ ಹೊಸ ಪ್ರೆಸಿಡೆಂಟ್ ಓಬಾಮ ಸಿಂಹಾಸನವನ್ನೇರಿದ್ದು, ಆ ಸಮಾರಂಭದಲ್ಲಿ ಸುಮಾರು ಇಪ್ಪತ್ತು ಲಕ್ಷ ಜನ ಸೇರಿದ್ರಂತಲ್ಲಪ್ಪ! ಅಬ್ಬಾ, ಅದೆಂತಾ ಪವರ್ ಇದ್ದಿರಬಹುದು?

’ಲೋ, ಸುಮ್ನಿರಯ್ಯಾ. ನಮ್ಮ್ ದೇವೇಗೌಡ್ರು ಮುಖ್ಯಮಂತ್ರಿ ಆದ ದಿನ ಇದಕ್ಕಿಂತ ಹೆಚ್ಚು ಜನಗಳನ್ನ ಸೇರಿಸಿರ್‌ಲಿಲ್ವಾ? ದಾವಣಗೆರೇಲಿ ಬಂಗಾರಪ್ಪ ಒಂದೇ ಸಮಾವೇಶಕ್ಕೆ ಹತ್ತು ಲಕ್ಷ ಜನ ಸೇರ್ಸಿದ್ ಮುಂದೆ ಅಮೇರಿಕದ ಮಿಲಿಯನ್ನು ಯಾವ ಲೆಕ್ಕ?’ ಎಂದು ಎಲ್ಲಿಂದಲೋ ಯಾವ್ದೋ ಧ್ವನಿ ಕೇಳಿದ ಹಾಗಾಯ್ತು, ಒಡನೇ ಸುಬ್ಬನ ಕಾಲ್ ಸ್ಪೀಕರ್ ಫೋನಿನಲ್ಲಿ ಬಂದ ಅನುಭವ, ಆದ್ರೆ ಇವೆಲ್ಲ ನನ್ನ ಭ್ರಮೆ ಅಂದ್‌ಕೊಂಡು ಮುಂದೆ ಯೋಚಿಸ್ತಾ ಹೋದೆ. ಆ ಪಾಟಿ ಜನ ವೋಟ್ ಹಾಕಿದ್ರಂತಲ್ಲ ಈ ಸರ್ತಿ, ಪಾಪ ಕರಿಯ ಮೇಲ್ ಬಂದವನೇ, ಮೊದಲ್ನೇ ಸರ್ತಿ ದಾಖಲೆ ನಿರ್ಮಿಸ್ಲಿ ಅಂತ ಇದ್ದಿರಬಹುದೋ ಏನೋ.

’ಯಾರ್ ಪ್ರೆಸಿಡೆಂಟ್ ಆದ್ರೆ ನಮಗೇನ್ ಸ್ವಾಮೀ? ದುಡಿಯೋ ಹೆಸರಿಗೆ ಬಂದ ಬಡ್ಡೀ ಹೈಕ್ಳು ನಾವು, ಅದೇ ನಮ್ ಕಾಯ್ಕ ನೋಡಿ!’ ಅಂತ ಮತ್ತೊಂದು ಧ್ವನಿ ಕೇಳಿಸ್ತು, ಈ ಸರ್ತಿ ನಿಜವಾಗ್ಲೂ ಯಾರೋ ನನ್ನ ತಲೆ ಒಳಗೆ ಸೇರಿಕೊಂಡು ನುಡಿದ ಅನುಭವ.

ಜನಗಳು ಅಂದ್ಕೊಂಡವರೆ, ಪ್ರೆಸಿಡೆಂಟ್ ಬದಲಾದ ಕೂಡ್ಲೆ ಎಲ್ಲವೂ ದಿಢೀರನೆ ಬದಲಾಗುತ್ತೆ ಅಂತ. ಡಿಸೆಂಬರ್ ಮುವತ್ತೊಂದರಿಂದ ಜನವರಿ ಒಂದರೊಳಗೆ ಏನೂ ಬದಲಾಗೋದಿಲ್ಲ, ಕ್ಯಾಲೆಂಡರ್ ಒಂದನ್ನು ಬಿಟ್ಟು. (ಅದೇ ಚೈತ್ರ ಮಾಸ ಶುರುವಾಗಲಿ ನೋಡಿ ಬೇಕಾದಷ್ಟು ಬದಲಾವಣೆಗಳು ನಿಮಗೆ ಅರಿವಿಗೆ ಬಂದೋ ಬರದೆಯೋ ನಡೆದೇ ಇರತ್ತೆ.)

ಸಾವಿರಾರು ಜನಗಳು ಕೆಲ್ಸ ಕಳೆದುಕೊಂಡ್ರು. ಭಾರತದಲ್ಲಿ ನಂಬರ್ ಮೂರನೇ ಕಂಪನಿಯ ಗುರುವಾಗಿದ್ದವರು ಶಾಪವಾದವರು. ಒಂದು ಕಾಲದಲ್ಲಿ ಯಶಸ್ಸಿನ ಉತ್ತುಂಗವನ್ನು ಮೆರೆದವರು ಇಂದು ಇತಿಹಾಸವಾಗಿ ಹೋದರು. ಎಂಟು ವರ್ಷ ಆಳ್ವಿಕೆ ಮಾಡಿ ಹೊರಗೆ ಹೋದ ಬುಷ್ ಸರ್ಕಾರದ ಲೆಕ್ಕಾಚಾರವನ್ನು ಯಾರೂ ಯಾಕೆ ಮಾಡುತ್ತಿಲ್ಲ? ಅಂದು ಹಾಗೆ ಮಾಡುತ್ತೇವೆ ಹೀಗೆ ಮಾಡುತ್ತೇವೆ ಎಂದು ಕೊಚ್ಚಿಕೊಂಡದ್ದರ ಲೆಕ್ಕವನ್ನು ಯಾರೂ ಯಾಕೆ ಕೇಳುತ್ತಿಲ್ಲ?

ಇನ್ನೇನು ಜನವರಿ ಮುಗಿಯುತ್ತಾ ಬಂದರೂ ಆರ್ಥಿಕ ಸ್ಥಿತಿಗತಿಯಲ್ಲಿ ವ್ಯತ್ಯಾಸವೇನೂ ಆಗಿಲ್ಲ. ಈಗ ಬಂದು ಹಾಗೆ ಹೋಗೋ ೨೦೦೯ ಇಸ್ವಿ ೨೦೦೮ ಕ್ಕಿಂತ ಕೆಟ್ಟದಾಗಿರುತ್ತೆ ನೋಡ್ತಾ ಇರಿ, ಅಂತ ಎಷ್ಟೋ ಜನ ಈಗಾಗ್ಲೇ ಹೆದರ್ಸಿರೋದ್ರಿಂದ್ಲೇ ಬಹಳಷ್ಟು ಜನ ಕನ್ಸರ್‌ವೇಟೀವ್ ಆಗಿ ಆಲೋಚಿಸ್ತಾ ಇರೋದು. ನೋಡೋಣ ಇನ್ನೇನು ಕಾದಿದೆ ಈ ವರ್ಷ ಅಂತ.

Thursday, January 01, 2009

ಹೊಸತು ಹಳೆಯದರ ನಡುವೆ

2008 ಅನ್ನೋದು ಈಗ ಇತಿಹಾಸ, ಇಷ್ಟೊತ್ತಿಗಾಗಲೇ ವಿಶ್ವದೆಲ್ಲಾಕಡೆ ಗಡಿಯಾರಗಳು ೨೦೦೯ ನ್ನು ತೋರಿಸ್ತಿರೋ ಹೊತ್ತಿನಲ್ಲಿ ಒಬ್ಬರೊನ್ನೊಬ್ಬರು ಕರೆ ಮಾಡಿ ’ಹೊಸ ವರ್ಷದ ಹಾರ್ಧಿಕ ಶುಭಾಶಯಗಳು’ ಎಂದು ವಿಶ್ ಮಾಡೋದು ನಿಂತು ಹೋಗಿರಬಹುದು. ಈ ಹಿಂದೆ ಹಲವಾರು ಸಾರಿ ಬರೆದ ಹಾಗೆ ನಾವು ನಮ್ಮನ್ನು ಇಂಗ್ಲೀಷ್ ಕ್ಯಾಲೆಂಡರಿಗೆ ಸಮರ್ಪಿಸಿಕೊಂಡಿದ್ದೇವೆ. ನಮ್ಮ ಮಾರ್ಚ್-ಏಪ್ರಿಲ್ ತಿಂಗಳ ನಡುವೆ ಎಲ್ಲೋ ಬರುವ ಚಂದ್ರಮಾನ ಯುಗಾದಿ, ಚೈತ್ರ ಮಾಸ ವಸಂತ ಋತು ಉತ್ತರಾಯಣ ಪುಣ್ಯಕಾಲಾರಂಭ ಇವೆಲ್ಲವೂ ನಿಧಾನವಾಗಿ ಮರೆಯಾಗುತ್ತಿವೆ. ಇದೇ ಹಾಡನ್ನು ಸ್ವಲ್ಪ ಜೋರಾಗಿ ಹಾಡಿದರೆ ’ಹಿಂದೂ ಮೂಲಭೂತವಾದಿ’ಯಾಗಿ ಬಿಡಬಹುದಾದ ಸಾಧ್ಯತೆಗಳೂ ಇವೆ, ಹಾಡನ್ನು ಹಾಡದೇ ಸುಮ್ಮನಿದ್ದರೆ ನಮ್ಮತನವನ್ನು ಕಳೆದುಕೊಂಡ ಅನುಭವಾಗುವುದೂ ನಿಜವೇ ಹೌದು.

ನಿನ್ನೆ ರಾತ್ರಿಯ ಇಪ್ಪತ್ತರ ಡಿಗ್ರಿ ಫ್ಯಾರನ್‌ಹೈಟ್ ಛಳಿಯಲ್ಲಾಗಲೀ ಇಂದು ಹೊಸ ವರ್ಷದ ದಿನದಲ್ಲಾಗಲೀ ಹೆಚ್ಚಿನ ಬದಲಾವಣೆಯೇನೂ ಇಲ್ಲ. ಬೇವುಗಳು ಇನ್ನೂ ಚಿಗುರಿಲ್ಲ, ಬೆಲ್ಲ ಮಾಡುವ ಸೀಜನ್ನೂ ಅಲ್ಲ. ಮರಗಳೆಲ್ಲ ಮರಗಟ್ಟಿ ಹೋಗೀ ನಿತ್ಯ ಹರಿದ್ವರ್ಣಿಗಳ ಮೇಲಿನ ಹಸಿರನ್ನು ಹೊರತುಪಡಿಸಿದರೆ ಮತ್ತೆಲ್ಲಾ ಛಳಿಯ ಬಣ್ಣವನ್ನು ಹೊದ್ದಿರುವ ಹೊರಗಿನ ವಾತಾವರಣ. ಅಲ್ಲಲ್ಲಿ ಬಿದ್ದ ಹಿಮ, ಮತ್ತೆ ಅದೇ ಅದರ ಛಳಿಗೆ ಹರಳುಗಟ್ಟಿ ಘನೀಭವಿಸಿ ಮತ್ತಿನ್ನಷ್ಟು ಶೀತಲತೆಯನ್ನು ಮುಖದ ಮೇಲೆ ತಂದುಕೊಂಡು ನೋಡೋಕೆ ಪುಡಿಯಂತೆ ಕಂಡುಬಂದರೂ ಒಳಗೆ ಗಟ್ಟಿಪದರವನ್ನು ಕಟ್ಟಿಕೊಂಡು ತನ್ನ ಮೈ ಶಾಖದಲ್ಲಿ ತಾನು ಯಾವುದೋ ಪ್ರಪಂಚವನ್ನು ಸೃಷ್ಟಿಸಿಕೊಂಡಿರುವ ಹೆಮ್ಮೆಯಿಂದ ಬೀಗುತ್ತಿರುವ ಹಾಗೆ ಕಂಡುಬಂತು. ಬೇಕಾದಷ್ಟು ಬೀಸುತ್ತಿರುವ ಗಾಳಿಗೆ ತಲೆ ತೂಗೀ ತೂಗೀ ಕಂಗಾಲಾದ ಮರಗಳು ಯಾವುದೋ ದಿಕ್ಕಿನಲ್ಲಿ ಅವಿತುಕೊಂಡ ವಾಯು-ವರುಣರಿಗೆ ಚಪ್ಪೆ ಮುಖವನ್ನು ತೋರಿಸುವಷ್ಟು ದೀನರಾಗಿ ಹೋಗಿದ್ದರೆ, ಕಪ್ಪಾದ ರಸ್ತೆಯ ಮೇಲ್ಮೈ ಸಹ ಇಂದು ಬೀಳದ ಬಿಸಿಲಿಗೆ ಶಪಿಸುತ್ತಾ ತಮ್ಮ ಕಳೆದುಕೊಂಡ ಕಾವಿಗೆ ಚಡಪಡಿಸಿ ತಮ್ಮ ಮೈ ಮೇಲೆ ತೆಳ್ಳಗೆ ಸವರಿದ ಬಿಳಿಯ ಮಂಜಿನ ಪುಡಿಗೆ ಹೆದರಿಕೊಂಡಿದ್ದವು. ನಿನ್ನೆ-ಇಂದಿಗೆ ಹೆಚ್ಚು ವ್ಯತ್ಯಾಸ ಕಂಡು ಬರದ ನನ್ನ ಹಾಗಿನ ಉಳಿದವೆಲ್ಲವೂ ಇದೊಂದು ದಿನ ಮತ್ತೊಂದು ದಿನ ಎಂದುಕೊಂಡು ಸುಮ್ಮನಿದ್ದವು.

ಹಳೆಯ ವರ್ಷ ಗೆದ್ದವರು ಬಿದ್ದವರೆದ್ದೆಲ್ಲವನ್ನು ಟಿವಿ ಪರದೆ ತಾನು ತೋರಿಸಿಯೇ ತೀರುತ್ತೇನೆ ಎಂದು ಸೆಡ್ಡು ಹೊಡೆದುಕೊಂಡು ನಿಂತಿತ್ತು. ಈ ವರ್ಷದ ಆರಂಭದ ಕ್ಷಣಗಣನೆ ಮುಗಿದು ಘಂಟೆಗಳೇ ಕಳೆದಿದ್ದರೂ ಹೊಸತಕ್ಕೆ ಈಗಾಗಲೇ ಹೋದವರಿಗಿಂತಲೂ ಹಳೆಯದ್ದಕ್ಕೆ ಅಂಟಿಕೊಂಡವರಿಗಿಂತಲೂ ಇನ್ನೂ ಹಳೆಯದು-ಹೊಸತರ ನಡುವೆ ಓಲಾಡುತ್ತಿರುವವರು ಓಲಾಡುತ್ತಲೇ ಇರುವವರ ಹಾಗೆ ಕೆಲವು ಚಿತ್ರಗಳಲ್ಲಿ ಕಂಡುಬಂತು. ಕ್ಯಾಲೆಂಡರಿನ ದಿನ ಬದಲಾದಂತೆ ತಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳು ತೊಲಗಿ ಹೋದವು ಎಂದುಕೊಂಡು ಬೀಗಿ ನಿಂತವರು ಈ ಮೊದಲು ಹೇಳಿದ ಯಾವುದೇ ಗುಂಪಿನಲ್ಲಿ ಸೇರದೇ ತಮ್ಮದೇ ಒಂದು ಪಂಥವನ್ನು ಕಟ್ಟಿಕೊಂಡವರಂತೆ ಕಂಡುಬಂದರು. ’ಹಾಗಾದರೆ ನಮ್ಮೆಲ್ಲ ಕಷ್ಟಗಳೆಲ್ಲ ತೊಲಗಿದವೇನು ಇಂದಿಗೆ?’ ಎಂದು ನಾನೆಸೆದ ಪ್ರಶ್ನೆಯೊಂದಕ್ಕೆ ನಮ್ಮ ಬ್ಯಾಂಕಿನ ಮ್ಯಾನೇಜರಿಣಿ ’ಇದು ಕೇವಲ ಐಸ್‌ಬರ್ಗಿನ ತುದಿ ಮಾತ್ರ!’ ಎಂದು ಈಗಾಗಲೇ ಕುಸಿದ ವ್ಯವಸ್ಥೆ ಮತ್ತಿನ್ನಷ್ಟು ಕುಸಿದು ಹೋಗುವ ಮುನ್ಸೂಚನೆಯನ್ನು ನೀಡಿದಳು. ಅದೇ ಐಸ್‌ಬರ್ಗ್ - ಅದೆಷ್ಟೋ ವರ್ಷಗಳಿಂದ ಹರಳುಕಟ್ಟಿದ ಹಿಮ, ನೀರಿನ ಒಳಗೇ ತನ್ನದೊಂದು ಪುಟ್ಟ ಪ್ರಪಂಚದ ವಾಸ್ತ್ಯವ್ಯವನ್ನು ಸ್ಥಾಪಿಸಿಕೊಂಡಿರುವ ಅದು ಅಷ್ಟು ಸುಲಭವಾಗಿ ಕರಗಲಾರದು, ಅದು ಪುಡಿಯಾಗಿ-ಕರಗುವ ಮೊದಲು ಅದೆನ್ನೆಷ್ಟು ಟೈಟಾನಿಕ್ ವ್ಯವಸ್ಥೆಗಳನ್ನು ಬಲಿತೆಗೆದುಕೊಳ್ಳಬೇಕೋ ಬಲ್ಲವರಾರು?

ನಿನ್ನೆಗೆ ಕೊರಗಬಾರದು, ನಾಳೆಗೆ ನರಳಬಾರದು, ಇಂದಿನದನ್ನು ಇಂದೇ ನೋಡಿ ಅನುಭವಿಸಿ ತೀರುವ ಪುಟ್ಟದೊಂದು ತಂತ್ರ. ಆ ತಂತ್ರದಲ್ಲಿನ ಸೂತ್ರದಾರನ ಬೆನ್ನಿಗೆ ಎಲ್ಲೆಲ್ಲಿಂದಲೋ ಹೊತ್ತು ತಂದ ಈವರೆಗೆ ಶೇಖರಿಸಿಕೊಂಡ ಒಂದಿಷ್ಟು ಬ್ಯಾಗುಗಳು. ನಾಗಾಲೋಟದ ಮನಸು, ಅದಕೆ ವ್ಯತಿರಿಕ್ತವಾಗಿ ಗಟ್ಟಿಯಾದ ಭೂಮಿಗೆ ಅಂಟಿಕೊಂಡು ಅದರಲ್ಲಿನ ಘರ್ಷಣೆ ಅದರ ಮೇಲ್ಮೈ ಎತ್ತಿ ಕೊಡುವ ವಿರುದ್ಧ ಬಲದ ಸಹಾಯದಿಂದ ನಿಧಾನವಾಗಿ ಚಲಿಸುವ ಕಾಲುಗಳು, ಹೊಟ್ಟೆಗಾಗಿ ಏನೇನೋ ಮಾಡೋ ಜೀವದ ಸಂತೃಪ್ತಿಗೆ ಮತ್ತೆ ಅದೇ ನೆಲದಲ್ಲಿ ಸಿಕ್ಕ ಅಂಶಗಳಿಂದ ಪೋಷಣೆ. ಮತ್ತೆ ಎಲ್ಲರಿಗೂ ಇದ್ದು ಯಾರಿಗೂ ಸಿಗದಿರುವ ಪಂಚಭೂತಗಳು. ಈ ತಂತ್ರಗಾರಿಕೆಯ ವ್ಯವಸ್ಥೆಯನ್ನು ಚಲಾಯಿಸೋದಕ್ಕೆ ಅವರವರ ದುಡ್ಡೂ-ಕಾಸು, ಅದಕ್ಕೆ ತಕ್ಕನಾದ ಮೋಜು-ಮಸ್ತಿ. ಮನೆಯಲ್ಲಿದ್ದರೆ ಕೆಲಸದ ಬಗ್ಗೆ, ಕೆಲಸದಲ್ಲಿದ್ದರೆ ಮನೆಯ ಬಗ್ಗೆ ಚಿಂತಿಸುವ ಕೊರಗು. ಅದ್ಯಾರೋ ದೊಡ್ಡ ಮನುಷ್ಯರು ಹೇಳಿದ ಹಾಗೆ ಇರೋದನ್ನೆಲ್ಲ ಬಿಟ್ಟು ಇರುದುದರೆಡೆಗೆ ತುಡಿವ ಮರುಗು.

ಈ ಆಸೆಯದ್ದೇ ವಿಶೇಷ - ನಾಳಿನದ್ದೆಲ್ಲ ಒಳ್ಳೆಯದೇ ಎನ್ನುವ ಹೋಪ್ ಬಹಳ ಪ್ರಭಲವಾದದ್ದು. ಮಾರುಕಟ್ಟೆಗೆ ಸಂಬಂಧ ಪಟ್ಟಂತೆ ಹಲವಾರು ವರ್ಷಗಳಲ್ಲಿ ಬಿದ್ದ ದಿನಗಳಿಗಿಂತಲೂ ಮೇಲೆ ಎದ್ದ ದಿನಗಳೇ ಹೆಚ್ಚಾದರೂ ಕಳೆದುಕೊಳ್ಳುವವರಿಗೆ ಕಳೆದುಕೊಂಡವರಿಗೇನೂ ಕಡಿಮೆ ಇಲ್ಲ. ಒಬ್ಬರು ಕಳೆದುಕೊಂಡರೆ ತಾನೇ ಮತ್ತೊಬ್ಬರು ಗಳಿಸೋದು - ಆದರೆ ಅದು ಯಾವ ನ್ಯಾಯ? ಹಾಗಾದರೆ ಈ ಪ್ರಪಂಚದಲ್ಲಿ ಕೂಡುವವರು ಇದ್ದಾರೆಂದರೆ ಕಳೆಯುವವರೂ ಇದ್ದಾರೆ ಎಂತಲೇ ಅರ್ಥವೇ? ಇದೆಲ್ಲದರ ಒಟ್ಟು ಮೊತ್ತ ಯಾವಾಗಲೂ ಶೂನ್ಯವೇ? ಹಾಗಿದ್ದ ಮೇಲೆ ಕೊಡು ಕೊಳ್ಳುವ ವ್ಯವಹಾರವಾದರೂ ಏಕೆ ಬೇಕು? ಕೂಡುವುದು ನಿಜವಾದ ಮೇಲೆ, ಅದರ ಜೊತೆಗೆ ಕಳೆದುಕೊಳ್ಳುವುದೂ ನಿಜವೆಂದ ಮೇಲೆ ಶ್ರೀ ಕೃಷ್ಣ ಉಪದೇಶ ಮಾಡಿದ ಸ್ಥಿತಪ್ರಜ್ಞ ಸ್ಥಿತಿಯನ್ನು ಜನರು ಅದೇಕೆ ತಲುಪೋದಿಲ್ಲ? ಸಾಕು ಎನ್ನುವುದು ಹೆಚ್ಚು ಕೇಳಿ ಬರದಿರುವಾಗ ಬೇಕು ಎನ್ನುವುದು ಪ್ರಭಲವಾಗಿ ಕಂಡರೆ ಅದೊಂದೇ ಅನನ್ಯವಾದರೆ, ಅದೇ ಸ್ಥಿತಿ ಎಲ್ಲರಲ್ಲೂ ಸೇರಿಕೊಂಡರೆ, ಬೇಕು ಎನ್ನುವುದೇ ಬದುಕಾದರೆ...ಬೇಕು ಎನ್ನುವ ಆಸೆಗೆ ಕೂಡುವುದು ಇದೇ ಜೊತೆಗೆ ಕಳೆಯುವುದೂ ಇದೆ ಎಂದ ಮೇಲೆ ನಾಳಿನದ್ದೆಲ್ಲ ಒಳ್ಳೆಯದೇ ಎನ್ನುವುದು ಎಷ್ಟರ ಮಟ್ಟಿಗೆ ಸರಿ; ಜೊತೆಗೆ ಒಬ್ಬರ ಒಳಿತು ಇನ್ನೊಬ್ಬರ ಒಳಿತಾಗಬೇಕೆಂದೇನೂ ಇಲ್ಲ ಎಂದು ಯೋಚಿಸಿಕೊಂಡಾಗ ಅದೇ ಶೂನ್ಯದ ಸಂಭ್ರಮ, ಎಲ್ಲವನ್ನೂ ತನ್ನ ಹೊಟ್ಟೆಯೊಳಗೆ ತುಂಬಿಕೊಂಡ ಶುಷ್ಕ ನಗೆ.

Tuesday, December 30, 2008

ಛಳಿಗಾಲದ ಕುರುಕು

ಡಿಸೆಂಬರ್ ೨೧ ಬಂತು ಅಂದ್ರೆ ಛಳಿಗಾಲದ ಆರಂಭ ಅಂತ ಕೊರಗೋದು ಒಂದು ರೀತಿ, ಅದರ ಬದಲಿಗೆ ಅದೇ ದಿನವನ್ನ ವರ್ಷದ ಲಾಂಗೆಷ್ಟ್ ನೈಟ್ ಎಂದುಕೊಂಡರೆ ಇನ್ನೊಂದು ವಿಚಾರವೂ ಸಿಗುತ್ತೆ, ಅದೇ ನಂತರದ ದಿನಗಳಲ್ಲಿ ದಿನೇದಿನೇ ಹೆಚ್ಚುವ ಡೇ ಲೈಟ್ ಸಮಯ, ಹಾಗೂ ಜೂನ್ ೨೧ ರ ವರೆಗೆ ದಿನೇದಿನೇ ಹೆಚ್ಚುವ ಡೇ ಲೈಟ್ ಸಮಯ ಛಳಿಗೆ ಅಷ್ಟೊಂದು ಹೊಂದಿಕೊಂಡಿರದ ನಮ್ಮನ್ನು ಕೊನೇಪಕ್ಷ ರಾತ್ರಿ ಒಂಭತ್ತರ ವರೆಗೆ ಬೆಳಕಿರುವ ದಿನಗಳಲ್ಲಿ ಹೊರಗೆ ಕಳೆಯುವಂತೆ ಮಾಡುವ ಸಿಗುವ ಅವಕಾಶಗಳು.

ನಾವೆಲ್ಲ ಶಾಲೆಗೆ ಹೋಗಿ ಬರುತ್ತಿದ್ದ ಕಾಲದಲ್ಲಿ ಹೇಮಂತ ಋತುವಿನಲ್ಲಿ ಶನಿವಾರ ಬೆಳಗ್ಗೆ ಎಂಟು ಘಂಟೆಗೆ ಎಳೆಬಿಸಿಲಿನಲ್ಲಿ ಹೋಗಿ ನಿಲ್ಲುವ ಮನಸ್ಸಾಗುತ್ತಿತ್ತು. ನಮ್ಮ ಮೇಷ್ಟ್ರು ಪಿ.ಟಿ. ತರಗತಿಗಳನ್ನು ಬಯಲಿನಲ್ಲಿ ನಡೆಸುತ್ತಿದ್ದು ಮುಂಜಾವಿನ ಛಳಿಯಲ್ಲಿ ಅದು ಬಹಳ ಹಿತವನ್ನು ನೀಡುತ್ತಿತ್ತು. ನಾವು ಭಾರತದಲ್ಲಿ ಬಲ್ಲ ಹಾಗೆ ಶಿವಮೊಗ್ಗದ ಹತ್ತರಿಂದ ಹನ್ನೆರಡು ಡಿಗ್ರಿ ಡಿಸೆಂಬರ್ ಛಳಿ ದೊಡ್ದದು - ಜಮ್ಮು-ಕಾಶ್ಮೀರದ ಹಿಮಾವೃತ ದೃಶ್ಯಗಳನ್ನು ಟಿವಿಯಲ್ಲಿ ನೋಡಿದರೆ ಛಳಿಯ ಅನುಭವವೇನೂ ಆಗುತ್ತಿರಲಿಲ್ಲ!

ಇಲ್ಲಿಗೆ ಬಂದ ಮೇಲೆ ಫಾಲ್ ಮತ್ತು ವಿಂಟರ್ ಸೀಸನ್‌ಗಳನ್ನು ವಿಶೇಷವಾಗಿ ನೋಡುವ ಭಾಗ್ಯ ಒದಗಿ ಬಂದಿದ್ದು. ಉದಾಹರಣೆಗೆ ಈ ವರ್ಷವನ್ನೇ ತೆಗೆದುಕೊಳ್ಳೋಣ, ಲೇಟ್ ಫಾಲ್‌ನಲ್ಲಿ, ಅಂದರೆ ನವಂಬರ್ ಕೊನೆ ಮತ್ತು ಡಿಸೆಂಬರ್ ಮೊದಲೆರಡು ವಾರಗಳಲ್ಲಿ ವಿಪರೀತ ಛಳಿ. ನೂರಾ ಹದಿಮೂರು ವರ್ಷದ ಇತಿಹಾಸದಲ್ಲಿ ಈ ವರ್ಷಾ ಹ್ಯಾಲೋವಿನ್ (ಅಕ್ಟೋಬರ್ ೩೧) ಮೊದಲು ನಾವು ಎಂಟು ಇಂಚು ಸ್ನೋ ನೋಡಿದ್ದೂ ಆಯಿತು. ಫಾಲ್‌ನಲ್ಲೇ ಪೂರ್ತಿ ಛಳಿಗಾಲವನ್ನು ಅನುಭವಿಸುವ ಸುಖ ಸಿಕ್ಕಮೇಲೆ ಇನ್ನು ನಿಜವಾದ ಛಳಿಗಾಲಕ್ಕೇನು ಬೆಲೆ ಕೊಡೋಣ ಹೇಳಿ? ಒಂದು ರೀತಿ ನೀರಿನಲ್ಲಿ ಮುಳುಗಿದೋನಿಗೆ ಛಳಿಯೇನು ಮಳೆಯೇನು ಅಂದಹಾಗೆ ಈ ಫಾಲ್ ವಾತಾವರಣವೇ ನನ್ನನ್ನು ಹಣ್ಣುಗಾಯಿ ನೀರುಗಾಯಿ ಮಾಡಿರುವಾಗ ಇನ್ನು ವಿಂಟರ್‌ಗೆ ಹೆದರುವುದಾದರೂ ಏಕೆ?

ನಾವೆಲ್ಲ ಸೂರ್ಯವಂಶದವರು, (ಅಂದರೆ ಸೂರ್ಯ ಹುಟ್ಟಿದ ಮೇಲೆ ಎದ್ದೇಳುವವರು ಅಂತಲ್ಲ), ಬೆಳಗಿನ ಎಳೆ ಬಿಸಿಲಿನಲ್ಲಿ ಉದಯಿಸುತ್ತಿರುವ ಸೂರ್ಯನನ್ನು ನೋಡಿಕೊಂಡು ಕೈಯಲ್ಲಿ ಕಾಫೀ ಮಗ್ಗ್ ಅನ್ನು ಹಿಡಿದುಕೊಂಡು ಆಫೀಸಿಗೆ ಹೊರಡುವ ಉತ್ಸಾಹವೇ ಬೇರೆ. ಅದರ ಬದಲಿಗೆ ಫಾಲ್‌ನಲ್ಲಿ ಕತ್ತಲೋ ಕತ್ತಲು. ಮುಂಜಾನೆ ಎಂಟರಿಂದ ಸಂಜೆ ಐದರವರೆಗೆ ಮಾತ್ರ ಸೂರ್ಯ ಕಿರಣಗಳು ನೋಡೋಕೆ ಸಿಕ್ಕರೆ ಪುಣ್ಯ. ನಮ್ಮನ್ನು ಹೈರಾಣಾಗಿಸಲೆಂದೇ ಇಲ್ಲಿಯವರು ವರ್ಷಕ್ಕೆರಡು ಸಲ ಟೈಮ್ ಛೇಂಜ್ ಮಾಡೋದು - ಡೇ ಲೈಟ್ ಸೇವಿಂಗ್ ನೆಪದಲ್ಲಿ. ಈ ಅಮೇರಿಕದಲ್ಲಿ ನೆಟ್ಟಗೆ ನಡೆಯುತ್ತಿರುವ ಗಡಿಯಾರವೂ ತನ್ನನ್ನು ತಾನು ವರ್ಷಕ್ಕೆ ಎರಡು ಸಲ ತಿದ್ದಿಕೊಳ್ಳಬೇಕು - ಔಟ್ ಡೇಟೆಡ್ ಆಗದೇ ಇರಲು!

ನಿನ್ನೆ ವೆದರ್ ಚಾನೆಲ್‌ನಲ್ಲಿ ಅರವತ್ತು ವರ್ಷಗಳ ಹಿಂದೆ ಡಿಫ್ಟೀರಿಯಾ ವ್ಯಾಕ್ಸೀನ್ ಅನ್ನು ಅಲಾಸ್ಕಾದ ಹಿಮಾವೃತ ಪ್ರದೇಶದ ಪಟ್ಟಣಗಳಿಗೆ ತಲುಪಿಸಲು ಸಬ್ ಝೀರೋ ಟೆಂಪರೇಚರ್‌ನಲ್ಲಿ ಜನರು ಕಷ್ಟಪಟ್ಟದ್ದನ್ನು ನೋಡಿದಂದಿನಿಂದ ನಮ್ಮಲ್ಲಿನ ೩೦ ರ ಆಸುಪಾಸಿನ (ಫ್ಯಾರನ್‌ಹೈಟ್ ಸ್ಕೇಲಿನಲ್ಲಿ) ಛಳಿ ಏನು ಮಹಾ ದೊಡ್ಡದು ಎನ್ನಿಸಿದೆ. ಅದಕ್ಕೇ ಈ ಉಷ್ಣ-ಛಳಿ ಮನೋಭಾವನೆ ಎಲ್ಲ ರಿಲೇಟಿವ್ ಅನ್ನೋದು - ಮೈನಸ್ ಐವತ್ತರ ಹತ್ತಿರದ ಉಷ್ಣತೆಯನ್ನು ಬಲ್ಲವರಿಗೆ ಸೊನ್ನೆಯ ಹತ್ತಿರದ ಛಳಿ ಛಳಿಯೇ ಅಲ್ಲ!

ಈ ಯೂನಿಟ್‌ಗಳು ಮತ್ತು ಅವುಗಳ ಬಳಕೆಯನ್ನು ಕುರಿತು ಈ ಕೆಳಗಿನ ಅಂಶವನ್ನು ಗಮನಿಸಿ:
- ಅಮೇರಿಕದಲ್ಲಿ ಪೌಂಡು-ಮೈಲು-ಇಂಚುಗಳನ್ನು ಬಳಸುವ ವ್ಯವಸ್ಥೆಯಲ್ಲಿ ಕ್ಯಾಮೆರಾದ ಲೆನ್ಸ್‌ ವಿಚಾರಕ್ಕೆ ಬಂದಾಗ ಮಿಲಿ ಮೀಟರ್ ಅನ್ನೇ ಜನರು ಬಳಸೋದು, ಜೊತೆಗೆ ಟೆಂಪರೇಚರ್ ಸ್ಕೇಲ್ (ಫ್ಯಾರನ್‌ಹೈಟ್) ಬಳಕೆ ಇಲ್ಲಿಯ ಉಷ್ಣತೆಯ ವೇರಿಯೇಷನ್ನಿಗೆ ಸೂಕ್ತವಾಗೇ ಇದೆ.
- ಭಾರತದಲ್ಲಿ ಕೆಜಿ-ಕಿಲೋಮೀಟರು-ಸೆಂಟಿಮೀಟರ್‌ಗಳನ್ನು ಬಳಸುವ ವ್ಯವಸ್ಥೆಯಲ್ಲಿ ಉಳಿದೆಲ್ಲ ಟೆಂಪರೇಚರ್ರ್‌ಗೆ ಸೆಲ್ಸಿಯಸ್ ಸ್ಕೇಲು ಬಳಸಿದರೂ ಮನುಷ್ಯನ ದೇಹದ ಉಷ್ಣತೆಯನ್ನು ಫ್ಯಾರನ್‌ಹೈಟ್ ಸ್ಕೇಲಿನಲ್ಲೇ ಬಳಸೋದು.

ಈ ವೆದರ್ರು, ಟೆಂಪರೇಚರ್ರು ಇವೆಲ್ಲ ಜನರಲ್ ವಿಷಯ - there is nothing you can do about it! ಅನ್ನೋದು ಒಂದು ವಿಚಾರ. ಮಳೆ ಬರುತ್ತೆ ಅಂತ ಫೋರ್‌ಕಾಸ್ಟ್ ನೋಡಿಕೊಂಡು ಛತ್ರಿ/ರೈನ್ ಕೋಟ್ ತೆಗೆದುಕೊಂಡು ಹೋಗೋದು ಬಿಡೋದು ಅವರವರ ಡಿಸಿಷನ್ನಿಗೆ ಸೇರಿದ್ದು ಅನ್ನೋದು ಮತ್ತೊಂದು ವಿಚಾರ.

Friday, December 26, 2008

ಗಿರಕಿ ಹೊಡೆಯೋ ಲೇಖನಗಳು...

ಯಾಕೋ ಈ ವರ್ಷ ಆಲೋಚನೆಗಳ ಒರತೆಯಲ್ಲಿ ಬರೆಯುವಂತಹ ವಿಚಾರಗಳ ಸೆಲೆ ಉಕ್ಕಿ ಬಂದಿದ್ದೇ ಕಡಿಮೆ ಎನ್ನಬಹುದು, ಕಳೆದ ಒಂದೆರಡು ವರ್ಷಗಳಿಗೆ ಹೋಲಿಸಿದರೆ ೨೦೦೮ ರಲ್ಲಿ ಬರೆದ ಬರಹಗಳ ಪಟ್ಟಿ ಅವುಗಳ ಅರ್ಧದಷ್ಟೂ ಇಲ್ಲ ಎಂದು ಗೊತ್ತಾದ ಮೇಲಂತೂ ಏಕೆ ಹೀಗೆ ಎನ್ನುವ ಆಲೋಚನೆಗಳು ಹುಟ್ಟತೊಡಗಿದವು.

ಈ ವರ್ಷ ಜನವರಿ ೨೦ ರಂದು "ಅಂತರಂಗ-೩೦೦" ರ ಲೇಖನದಲ್ಲಿ ಬರೆದ ಮುಂದಿನ ಗುರಿ/ಒತ್ತಾಸೆಗಳೆಲ್ಲ ಇನ್ನೂ ಹಾಗೇ ಇವೆ. ಬರಹಗಳ ಸಂಖ್ಯೆ ಇಳಿಮುಖವಾದರೂ ಅವುಗಳ ಗುಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದೆಲ್ಲ ಅಂದುಕೊಂಡಿದ್ದಷ್ಟೇ ಬಂತು, ’ಅಂತರಂಗ’ದಲ್ಲಿ ಯಾವತ್ತಿದ್ದರೂ ಒಂದೇ ರೀತಿ ಬರಹಗಳು ಎಂದು ಕೆಲವು ಪ್ರಯೋಗಗಳನ್ನು ಮಾಡಿದ್ದು ಆಯ್ತು. ಇನ್ನು ಈ ಬ್ಲಾಗಿಗೆ ಪ್ರತ್ಯೇಕ ವೆಬ್‌ಸೈಟ್ ಬೇರೆ (ಕೇಡಿಗೆ); ಈ ಪುಕ್ಕಟೆ ಬ್ಲಾಗನ್ನು ಅಪ್‌ಡೇಟ್ ಮಾಡಿಕೊಂಡಿದ್ದರೆ ಸಾಲದೂ ಅಂತ ಸ್ವತಂತ್ರ ವೆಬ್‍ಸೈಟ್ ಅನ್ನು ಮ್ಯಾನೇಜ್ ಮಾಡೋ ಕಷ್ಟ ಬೇರೆ.

ಮುಂದಿನ ಗುರಿ/ಒತ್ತಾಸೆಗಳು:
- ’ಅಂತರಂಗ’ವನ್ನು ಬ್ಲಾಗರ್‌ನಿಂದ ಮುಕ್ತವಾಗಿಸಿ ಸ್ವತಂತ್ರ ವೆಬ್‌ಸೈಟ್ ತರುವುದು
- ಬರಹಗಳು ನಿಧಾನವಾಗಿ ಪ್ರಕಟಗೊಂಡರೂ ಬರಹದ ಸಂಖ್ಯೆ ಇಳಿಮುಖವಾದರೂ ಉತ್ಕೃಷ್ಟತೆಗೆ ಹೆಚ್ಚಿನ ಆದ್ಯತೆ ನೀಡುವುದು
- ಅಲ್ಲಲ್ಲಿ ಆಯ್ದ ಬರಹಗಳನ್ನು ಉಳಿದ ಮಾಧ್ಯಮಗಳಲ್ಲೂ ಪ್ರಕಟಿಸುವುದು


’ಅಂತರಂಗ’ದಲ್ಲಿ ನೀವು ಪ್ರಕಟಿಸೋ ಬರಹದಂತಿರುವವುಗಳನ್ನು ನಾವು ನಮ್ಮ ಸೈಟ್‌ನಲ್ಲಿ ಪ್ರಕಟಿಸೋದಿಲ್ಲ ಅಂತ ಬೇರೆ ಹೇಳಿಸಿಕೊಳ್ಳಬೇಕಾಗಿ ಬಂತು - ಅದೂ ನನಗೆ ದಶಕಗಳಿಂದ ಪರಿಚಯವಿರುವ ಸಂಪಾದಕರೊಬ್ಬರಿಂದ - ಅದೂ ಈ ಲೇಖನಗಳು ಉದ್ದವಾದುವು ಈಗಿನ ಚೀಪ್ ಸ್ಟೋರೇಜ್ ಯುಗದಲ್ಲೂ ನಮ್ಮಲ್ಲಿ ನಿಮ್ಮ ಲೇಖನಗಳಿಗೆ ಸ್ಥಳಾವಕಾಶವಿಲ್ಲ ಎಂಬುದಾಗಿ - I think he was just being decent, in saying so.

***

- ಯಾಕೆ ನಮ್ಮ ಲೇಖನಗಳು ನಮ್ಮ ಮಕ್ಕಳ ಹಾಗೆ ಯಾವಾಗಲೂ ನಮ್ಮ ಸುತ್ತಲೇ ಗಿರಕಿ ಹೊಡಿತಾ ಇರ್ತವೆ?
- ಯಾಕೆ ನಮ್ಮ ಲೇಖನಗಳಲ್ಲಿ ಇನ್ನೊಬ್ಬರ ಹೃದಯಸ್ಪರ್ಶಿ ಅಂಶಗಳು ಕಡಿಮೆಯಾಗಿ ಹೋಗಿವೆ?
- ಯಾಕೆ ನಮ್ಮ ಸೃಜನಶೀಲತೆ ಅನ್ನೋದು ಮಳೆಗಾಲದಲ್ಲಿ ಮಂಡಕ್ಕಿ ಮಾರೋ ಸಾಬಿಯ ಪ್ಯಾಂಟಿನ ಹಾಗೆ ಮಂಡಿಗಿಂತ ಮೇಲೆ ಮಡಿಚಿಕೊಂಡಿದೆ?
- ನಮ್ಮ ಲೇಖನಗಳಲ್ಲಿ ಬಡತನ, ನೋವು, ಬದಲಾವಣೆಗಳಿಗೆ ಸ್ಪಂದನವೇ ಸಿಗೋದಿಲ್ಲವೆ?
- ಈ ಆನ್‌ಲೈನ್ ಮಾಧ್ಯಮಗಳ ಓದುಗರಿಗೆ ಏನು ಬೇಕೋ ಅದನ್ನು ಕೊಡೋದಕ್ಕೆ ನಮ್ಮ ಕೈಯಲ್ಲಾಗೋದಿಲ್ಲವೇನು?
- ನಮ್ಮ ವರದಿಗಳಾಗಲೀ, ನಮ್ಮ ಭಾಷಣಗಳಾಗಲೀ ಮೊನಟನಸ್ ಆಗಿ ಹೋಗೋದೇಕೆ?

****

ಆಫೀಸಿನಲ್ಲಿ ವಿಪರೀತ ಕೆಲಸ ಸಾರ್, ಜೊತೆಗೆ ಅನಿವಾಸಿತನ ಬೇರೆ. ಈ ವರ್ಷವನ್ನೇ ತೊಗೊಳ್ಳಿ, ಪ್ರತೀವಾರ ಐವತ್ತೈದು ಅರವತ್ತು ಘಂಟೆಗಳ ಕೆಲಸ ಮಾಡೋದು ನಮ್ಮ ಕರ್ಮ ಜೀವ(ನ); ಯಾವ ಪುಸ್ತಕವನ್ನೂ ಓದಿಲ್ಲ, ಯಾರೊಬ್ಬ ಸ್ನೇಹಿತರ ಜೊತೆ ಮುಖಕ್ಕೆ ಮುಖ ಕೊಟ್ಟು ಮಾತನಾಡಿದ ನೆನಪಿಲ್ಲ. ಹೀಗೇ ಆಗ್ತಾ ಹೋದ್ರೆ ನಮ್ಮ ಪ್ರೇರಣೆಗಳು, ಸೃಜನಶೀಲತೆ ಬದುಕಿದ ಹಾಗೇ. ಆನ್‌ಲೈನ್ ಮಾಧ್ಯಮದಲ್ಲಿ ಬೇಕಾದಷ್ಟು ಓದೋ ಹಾಗಿದ್ದರೂ ಓದೋಕೆ ಸಮಯವಿಲ್ಲವೋ ಅಥವಾ ಓದೋಕೆ ಸಾಧ್ಯವೇ ಇಲ್ಲವೋ ಅನ್ನೋ ಹಾಗೆ ಆಗಿದೆ.

ಇದಕ್ಕೆಲ್ಲ ನಮ್ಮ ಬೆಳವಣಿಗೆಯೂ ಕಾರಣ ಅನ್ನಬೇಕು. ಈ ಹಾಳಾದ ಇ-ಮೇಲ್‌ ಗಳನ್ನು ಓದೀ-ಓದಿ ಉದ್ದವಾದದ್ದನ್ನು ಬೇರೆ ಏನೂ ಓದೋಕ್ಕೇ ಸಾಧ್ಯವಿಲ್ಲವೆನ್ನುವ ಹಾಗೆ ಆಗಿದೆ. ಆಫೀಸಿನಲ್ಲಿ ಯಾರಾದರೂ ಬರೆದ ಉದ್ದವಾದ ಇ-ಮೇಲ್ ಅನ್ನೋ ಅಥವಾ ಡಾಕ್ಯುಮೆಂಟ್ ಅನ್ನೋ ಓದಿ ಅರ್ಥ ಮಾಡಿಕೊಂಡು ಉತ್ತರ ಕೊಡೋದಾಗಲೀ ಅಥವಾ ತಿದ್ದೋದಾಗಲೀ ಪೀಕ್ ಅವರ್ ನಲ್ಲಿ ಸಾಧ್ಯವೇ ಇಲ್ಲದ ಚಟುವಟಿಕೆಯಾಗಿ ಹೋಗಿದೆ. ನಾವೆಲ್ಲ (ಅಥವಾ ನಾನು) ಅಲ್ಪತೃಪ್ತರಾಗಿ ಹೋಗಿದ್ದೇವೆ, ಏನಾದರೊಂದನ್ನು ಹಿಡಿದುಕೊಂಡು ಹಠ ಸಾಧಿಸುವುದಿರಲಿ ಒಂದು ಪುಸ್ತಕಕ್ಕೆ ಅರ್ಧ ಘಂಟೆ ಮನಸ್ಸು ಕೊಡದವರಾಗಿ ಹೋಗಿದ್ದೇವೆ. ಒಂದು ಒಳ್ಳೆಯ ಪದ್ಯವನ್ನು ಓದಿ, ಒಂದು ಉತ್ತಮವಾದ ಕಾದಂಬರಿಯನ್ನು ಮೆಲುಕು ಹಾಕಿ ಜಮಾನವಾಗಿ ಹೋಗಿದೆ ಎನ್ನುವಷ್ಟರ ಮಟ್ಟಿಗೆ ನನ್ನ ತಿಳುವಳಿಕೆ ಸೀಮಿತವಾಗಿದೆ.

ಮೊದಲೆಲ್ಲ ಒಂದಿಷ್ಟು ಟೆಕ್ನಿಕಲ್ ಸ್ಕಿಲ್ಸ್ ಆದರೂ ಇತ್ತು - ಜಾವಾದಲ್ಲಿ ಬರೆದು ಡಿಬಿ೨ (DB2) ಡೇಟಾ ತೆಗೆದು ಅನಲೈಸ್ ಮಾಡುವುದಾಗಲೀ, ಸಿಐಸಿಎಸ್ (CICS) ನಲ್ಲಿ ಮಲ್ಟಿ ಯೂಸರ್ ಸೆಷನ್ನುಗಳನ್ನು ಕ್ರಿಯೇಟ್ ಮಾಡಿ ಅದನ್ನು ಈ ದೇಶದ ನಾನಾ ಭಾಗಗಳಿಂದ ಯೂಸರ್‌ಗಳು ಟೆಸ್ಟ್ ಮಾಡಿ ಸಾಧಿಸಿಕೊಂಡಿದ್ದಾಗಲೀ ಇವತ್ತು ಇತಿಹಾಸವಾಗಿ ಹೋಗಿದೆ. ಒಂದು ಸಣ್ಣ HTML ಟ್ಯಾಗ್‌ಗೆ ಕೂಡಾ ರೆಫೆರೆನ್ಸ್ ಬೇಕಾಗಿದೆ. ನನ್ನ ಇಂಡಷ್ಟ್ರಿ ಸ್ಕಿಲ್ಸ್ ಅನ್ನುವುದು ಏನೇ ಇದ್ದರೂ ಕರಿಮಣಿ ಸರದ ನಡುವೆ ಇರುವ ತಾಳಿಯ ಹಾಗೆ, ಈ ಕಂಪನಿಯಿಂದ ಹೊರಗೆ ಬಂದು ಮತ್ತೊಂದು ಕಂಪನಿಯ ಹಿತಾಸಕ್ತಿಯಿಂದ ನೋಡಿದರೆ ಅದಕ್ಕಷ್ಟು ಮೌಲ್ಯವಿಲ್ಲ. ಈ ಹದಿಮೂರು ವರ್ಷಗಳ ಎಕ್ಸ್‌ಪೀರಿಯನ್ಸ್ ಅನ್ನುವುದು ಎರಡೂ ಕಡೆ ಹರಿತವಾದ ಕತ್ತಿಯ ಹಾಗೆ, ಅದರ ಬಳಕೆಯ ಬಗ್ಗೆ ಹುಷಾರಾಗಿರುವುದೇ ಒಳ್ಳೆಯದು. ಮೊದಲೆಲ್ಲ ಕನ್ಸಲ್‌ಟೆಂಟ್ ಆಗಿದ್ದಾಗ ಒಂದು ಕಂಪನಿಯಿಂದ ಮತ್ತೊಂದಕ್ಕೆ ಹಾರಲು ಅನುಕೂಲವಾದ ಸ್ಕಿಲ್‌ಗಳೆಲ್ಲ ಇಂದು ಒಂದೇ ಕಂಪನಿಯಲ್ಲಿ ಇದ್ದ ಪ್ರಯುಕ್ತ ಸಾಣೆ ಹಿಡಿಯದ ಕತ್ತಿಯಾಗಿ ಹೋಗಿದೆ. ಆಫೀಸಿನಲ್ಲಿ ನಾನು ಮಾಡುವ ತಪ್ಪುಗಳು ಅವು ಹುಟ್ಟಿದ ಹಾಗೇ ಮುಚ್ಚಿಯೂ ಹೋಗುತ್ತವೆ.

***
You have to get your ass kicked once in a while... ಅಂತಾರಲ್ಲ ಹಾಗೆ. ಏನಾದರೊಂದು ಛಾಲೆಂಜ್ ಇರಬೇಕು ಬದುಕಿನಲ್ಲಿ. ಯಾವುದೋ ಕಷ್ಟಕರವಾದ ಕಾದಂಬರಿಯನ್ನು ಹತ್ತು ಸಾರಿ ಓದಿ ಆಯಾ ಪಾತ್ರಗಳ ಹಿಂದಿನ ಸಂವೇದನೆಯನ್ನು ಅರ್ಥ ಮಾಡಿಕೊಳ್ಳುವ ಜಾಯಮಾನವಾಗಲೀ; ಇಂದಿನ ಕಷ್ಟಕರವಾದ ಎಕಾನಮಿಯಲ್ಲಿ ಎಲ್ಲೂ ಇದ್ದು ಬದುಕಬಲ್ಲೆ ಎನ್ನುವ ಛಲಕ್ಕೆ ಬೇಕಾದ ಸ್ಕಿಲ್ಲುಗಳನ್ನು ಬೆಳೆಸಿಕೊಳ್ಳುವುದಾಗಲೀ; ನಿರಂತರವಾಗಿ ಒಂದಿಷ್ಟು ಪುಸ್ತಕಗಳನ್ನು ಅಭ್ಯಸಿಸುವ ರೂಢಿಯಾಗಲೀ ಅಥವಾ ಸ್ನೇಹಿತರ-ಸಂಬಂಧಿಕರ-ಒಡನಾಡಿಗಳಿಗೆ ಸ್ಪಂದಿಸುವ ಮನಸ್ಥಿತಿಯಾಗಲೀ...ಹೀಗೆ ಒಂದಿಷ್ಟು ತೊಡಗಿಕೊಳ್ಳುವುದು ಯೋಗ್ಯ ಅನ್ನಿಸೋದು ಈ ಹೊತ್ತಿನ ತತ್ವ. ಅಂತೆಯೇ ಈ ಮುಂದಿನ ವರ್ಷಕ್ಕೆ ಯಾವುದೇ ಗುರಿ/ಒತ್ತಾಸೆಗಳು ಇಲ್ಲದಿರುವುದೇ ಇಂದಿನ ವಿಶೇಷ!

Saturday, December 06, 2008

ಈ ತತ್ವಗಳ ಹಣೇಬರಾನೇ ಇಷ್ಟು...

...ಅಂತ ಅನ್ಸಿದ್ದು ಇತ್ತೀಚೆಗಷ್ಟೇ ಏನಲ್ಲ, ಆದ್ರೆ ಈ ಹೊತ್ತಿನ ತತ್ವದ ಹಿನ್ನೆಲೆಗೆ ಒಂದು ಸಮಜಾಯಿಷಿಯಂತೂ ಖಂಡಿತ ಇದೆ. ನಾನು ನನ್ನ ಕ್ರೆಡಿಟ್ ಕಾರ್ಡ್ ಬಿಲ್ಲುಗಳನ್ನ ಸಮಯ ಸಿಕ್ಕಾಗ ರಿವ್ಯೂವ್ ಮಾಡ್ತಾ ಇದ್ದಾಗ ಒಂದು ಸಂಗತಿ ಗೊತ್ತಾಯಿತು, ಆದೇನಂದರೆ ನನ್ನ ಸಂಬಳದ ಒಂದು ಅಂಶ ನಿಯಮಿತವಾಗಿ ವಾಲ್‌ಮಾರ್ಟ್ ಹಾಗೂ ಸಾಮ್ಸ್‌ಕ್ಲಬ್‌ಗೆ ಹೋಗ್ತಾ ಇರೋದು! ಅಂದ್ರೆ ಅದೇನು ಇಲ್ಲೀಗಲ್ ಟ್ರಾನ್ಸಾಕ್ಷನ್ನ್ ಅಲ್ಲ, ನಾನೇ ಹೋಗಿ ಬಂದು ಅಲ್ಲಿ ಖರೀದಿ ಮಾಡಿದ ಸಾಮಾನಿನ ಪ್ರತಿಯಾಗಿ ಅವರು ನನ್ನ ಕ್ರೆಡಿಟ್ ಕಾರ್ಡಿನಿಂದ ಎಳೆದುಕೊಂಡ ಹಣ, ಎಲ್ಲ ನ್ಯಾಯವಾದ್ದೇ ಅದ್ರಲ್ಲೇನೂ ತಪ್ಪಿಲ್ಲ ಬಿಡಿ. ಆದ್ರೆ, ಇತ್ತೀಚೆಗೆ ಪ್ರತೀ ತಿಂಗಳು ವಾಲ್‌ಮಾರ್ಟ್, ಸ್ಯಾಮ್ಸ್‌ಕ್ಲಬ್ಬಿಗೆ ಹೋಗಿ ಅಲ್ಲಿ ಖರೀದಿ ಮಾಡಿ ತರುವ ಸಾಮಾನುಗಳ ಪಟ್ಟಿ ಬೆಳೆದಿದ್ದು ಹೇಗೆ? ಮೊದ್ಲೆಲ್ಲ ಆ ಸ್ಟೋರುಗಳಿಂದ ದೂರವಿರಬೇಕು ಎಂಬ ಪಣತೊಟ್ಟ ತ್ರಿವಿಕ್ರಮನಂತೆ ನಾನು ದೂರವಿದ್ದು ಕೊನೆಗೆ ಬೇತಾಳನ ಸವಾಲಿಗೆ ಸರಿಯಾಗಿ ಉತ್ತರ ಹೇಳಿಯೂ ಅದು ಹೆಗಲು ಬಿಟ್ಟು ಹಾರಿ ಹೋಗಿ ಕೊನೆಗೆ ಕೊಂಬೆಗೆ ನೇತಾಡುವ ರೀತಿಯಲ್ಲಿ ನಾನು ವಾಲ್‌ಮಾರ್ಟ್ ಅಂಗಡಿಯಿಂದ ದೂರವಿದ್ದಷ್ಟೂ ಅದಕ್ಕೆ ಹತ್ತಿರ ಹತ್ತಿರ ಹೋಗಿ ಕೊನೆಗೆ ನನ್ನ ಹೆಚ್ಚಿನ ಪರ್ಚೇಸುಗಳೆಲ್ಲ ಅವೇ ಅಂಗಡಿಯಿಂದ ಆಗುತ್ತಿದೆ ಏನಾಶ್ಚರ್ಯ!

ವಾಲ್‌ಮಾರ್ಟ್ ಅಂದರೆ ನನಗೇನೂ ಅಲರ್ಜಿ ಇಲ್ಲ, ಆದರೆ ಅದು ಅಮೇರಿಕನ್ ಕ್ಯಾಪಿಟಲಿಸಮ್ ಅನ್ನು ಪರಮಾವಧಿ ಮುಟ್ಟಿಸಿರುವ ಕಂಪನಿ ಎಂದೂ; ಆ ಅಂಗಡಿಗಳಲ್ಲಿ ಸಾಮಾನುಗಳನ್ನು ಕಡಿಮೆ ದರದಲ್ಲಿ ಮಾರಬೇಕಾಗುವಲ್ಲಿ ಬೇಕಾದಷ್ಟು ತಂತ್ರಗಳನ್ನು ಅಳವಡಿಸಿ ಅದನ್ನು ಅನುಸರಿಸಿರುತ್ತಾರೆಂತಲೂ; ನಮ್ಮ ಊರಿನ ಹಾಗೂ ನೆರೆಹೊರೆಯವರು ನೆಲಸಮಾಧಿಯಾಗುವಷ್ಟು ಮಟ್ಟಿನ ಸ್ಪರ್ಧೆಯನ್ನು ಒಡ್ಡುವುದರಲ್ಲಿ ನಿಸ್ಸೀಮರೆಂತಲೂ, ಮಿಲಿಯನ್ನ್‌ಗಟ್ಟಲೆ ಜನರನ್ನು ಎಂಪ್ಲಾಯ್ ಮಾಡಿಕೊಂಡಿದ್ದರೂ ಗ್ರಾಹಕರಿಗೆ ಬೇಕಾದ ಸಮಯದಲ್ಲಿ ಕಷ್ಟಮರ್ ಸರ್ವೀಸ್ ಹೇಳ ಹೆಸರಿಲ್ಲದೇ ನೀಲಿ ಓವರ್‌ಕೋಟ್ ಧರಿಸಿದ ಯಾವೊಬ್ಬರೂ ಕಣ್ಣಿಗೆ ಬೀಳೋದೇ ಇಲ್ಲವೆಂತಲೂ; ಗೋಲ್ಡ್‌‌ಫಿಶ್‌ನಿಂದ ಹಿಡಿದು ಒಣ ಸಗಣಿಯವರೆಗೆ (ಉತ್ಪ್ರೇಕ್ಷೆ) ಒಂದೇ ಸೂರಿನಡಿಯಲ್ಲಿ ಉದ್ದಾನುದ್ದ ಸ್ಟೋರುಗಳಲ್ಲಿ ಮಾರಿ ಗ್ರಾಹಕರಿಗೆ ತಲೆಕೆಡಿಸುತ್ತಾರೆಂತಲೂ; ಘಂಟೆಗೆ ಎಂಟು-ಹತ್ತು ಡಾಲರ್‌ ಕೊಟ್ಟು ಬೆನಿಫಿಟ್ ಹೆಸರಿನಲ್ಲಿ ಎಂಪ್ಲಾಯಿಗಳನ್ನು ಶೋಷಿಸುತ್ತಾರೆಂತಲೂ, ಇತ್ಯಾದಿ ಇತ್ಯಾದಿಯಾಗಿ ಬಹಳಷ್ಟು ಹೇಳಲಾಗದ ಕಾರಣಗಳಿಂದ ನಾನು ದೂರವಿರಬೇಕು ಎಂಬುದು ನನ್ನ ತತ್ವವಾಗಿತ್ತು.

ಈ ಹೇಟ್ರೆಡ್ ಹಿಂದೆ ಕೆಲವು ನಿಜ ಅಂಶಗಳೂ ಇನ್ನು ಕೆಲವು ನಾನೇ ಕಲ್ಪಿಸಿಕೊಂಡವುಗಳೂ ಇರಲಿಕ್ಕೆ ಸಾಕು, ಕೈಲಾಗದವನು ಮೈಯೆಲ್ಲಾ ಪರಚಿಕೊಂಡನಂತೆ ಹಾಗೆ. ನಾನು ಯಾವುದನ್ನು ಬಹಳಷ್ಟು ದ್ವೇಷಿಸುತ್ತೇನೆಯೋ ಅದಕ್ಕೇ ನಾನು ಹೆಚ್ಚು ಹೆಚ್ಚು ಜೋತು ಬೀಳುವ ನಿದರ್ಶನ ಇವತ್ತು ನಿನ್ನೆಯದಲ್ಲ - ಆ ಪಟ್ಟಿಗೆ ಇಂದು ವಾಲ್‌ಮಾರ್ಟ್ ಅನ್ನೂ ಸೇರಿಸಿಕೊಂಡಿದ್ದೇನೆ. (ಆ ಪಟ್ಟಿಯ ಇನ್ನುಳಿದವುಗಳೆಂದರೆ - ನಾನು ಮದ್ರಾಸ್ ಅನ್ನು ಮನಸಾ ದ್ವೇಷಿಸಿದ್ದ ಪಾಡಿನಿಂದಾಗಿ ಮದ್ರಾಸಿನ ಹೊರವಲಯದಲ್ಲಿ ಹದಿನೆಂಟು ತಿಂಗಳು ಕಳೆಯುವಂತಾಗಿದ್ದು, ಅಮೇರಿಕದ ಹಾದಿಯೇ ಬೇಡವೆಂದವನಿಗೆ ಈಗ ಹತ್ತಿರ ಹತ್ತಿರ ಹನ್ನೆರಡು ವರ್ಷ "ವನವಾಸ" ತಾಗಿಕೊಂಡಿದ್ದು, ಬೆಂಗಳೂರಿನ ಕನ್ನಡಿಗರೋ, ದೇವಾ, ಅವರನ್ನು ನೀನೇ ಕಾಪಾಡಬೇಕು ಎಂದು ದ್ವೇಷಿಸಿದಂತೆ ಬೆಂಗಳೂರಿನ ಕನ್ನಡತಿಯೇ ನನ್ನ ಅರ್ಧಾಂಗಿಯಾಗಿದ್ದು, ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ). (ನಾನು ದ್ವೇಷಿಸಿದ್ದಲ್ಲ ಹತ್ತಿರವಾಗುತ್ತಿರುವ ನಿದರ್ಶನಗಳನ್ನು ಕಂಡರೆ ನಾಳೆಯಿಂದ ಮಿಲಿಯನ್ನುಗಟ್ಟಲೆ ಹಣಗೆಲ್ಲುವ ಲಾಟರಿ ಟೆಕೇಟ್ ಅನ್ನು ದ್ವೇಷಿಸಿದರೆ ಹೇಗೆ ಎನ್ನುವುದು ಈ ಹೊತ್ತಿನ ತತ್ವಗಳ ಉಪತತ್ವ, ಆ ಮಾತು ಬೇರೆ).

***

ಏಪ್ರಿಲ್, ೨೦೦೮ ರ ಹೊತ್ತಿಗೆಲ್ಲ ಒಂದು ಗ್ಯಾಲನ್ ಗ್ಯಾಸೋಲಿನ್ ಬೆಲೆ ಡಾಲರ್ 3.41 ಇದ್ದಿತ್ತು. ಅದು ಕ್ರಮೇಣ ನಂತರದ ಐದಾರು ತಿಂಗಳಲ್ಲಿ ಗ್ಯಾಲನ್‌ಗೆ ಡಾಲರ್ 3.99 ಆಗಿ ಹೋಗಿತ್ತು. ನಾನು ಒಮ್ಮೆ ನನ್ನ ಕಾರನ್ನು ಫಿಲ್ ಮಾಡಿಸಿದರೆ ಸುಮಾರು 65 ಡಾಲರ್ ಕೊಡಬೇಕಾದ ಪರಿಸ್ಥಿತಿ, ಎಲ್ಲರಂತೆ ನಾವೂ ಕೂಡ ಅನಗತ್ಯ ಪ್ರಯಾಣಗಳಿಗೆ ಕತ್ತರಿ ಹಾಕಿದ್ದೆವು. ಈ ಏರುತ್ತಿರುವ ಗ್ಯಾಸೋಲಿನ್ ಬೆಲೆಗೂ ಸ್ಯಾಮ್ಸ್‌ಕ್ಲಬ್ಬಿನಲ್ಲಿ ಮಾರುವ ಜೋಡಿ ಬ್ರೆಡ್ಡುಗಳ ಕಂತೆಗೂ ಎಲ್ಲೋ ಅವಿನಾಭಾವ ಸಂಬಂಧ. ಮೊದಲು ಜೋಡಿ ಬ್ರೆಡ್ ಲೋಫ್‌ಗೆ $2.07 ಇದ್ದಿದ್ದು ಮುಂದೆ $3.40 ಆಗಿ ಹೋಯಿತು. ಏನೇ ಆದ್ರೂ ಸ್ಯಾಮ್ಸ್‌ಕ್ಲಬ್ಬ್‌ನಲ್ಲಿ ದೊರೆಯುವ ಹಾಲು, ಬ್ರೆಡ್ಡುಗಳಷ್ಟು ಕಡಿಮೆ ಬೇರೆ ಯಾರೂ ಮಾರಲಿಕ್ಕಿಲ್ಲ. ಇಲ್ಲಿನ ಗೌಳಿಗರ ಮನೆಯಲ್ಲಿನ ಹಾಲೂ ಅದಕ್ಕಿಂತ ತುಟ್ಟಿಯಾಗಿದ್ದಿರಬಹುದು! ಮೊದಲೆಲ್ಲ, ಇಷ್ಟು ಎಕಾನಮಿ ಹದಗೆಟ್ಟಿರಲಿಲ್ಲ; ಒಂದು ವರ್ಷದ ಮೊದಲು ನನ್ನ ಪೋರ್ಟ್‌ಫೋಲಿಯೋ ಡಬಲ್ ಡಿಜಿಟ್ ಗೈನ್ ಮಾಡಿಕೊಂಡು ನಗುತ್ತಿತ್ತು (ಅವೆಲ್ಲ ಪೇಪರ್ ಹಣ ಮಾತ್ರ). 2008 ರ ಮಧ್ಯ ಭಾಗದಿಂದ ಶುರುವಾಯಿತು ನೋಡಿ ಕಷ್ಟಗಳು - ಒಂದೇ, ಎರಡೇ...ಬೇಕಾದಷ್ಟು. ನಾವು ಪೇ ಚೆಕ್ ನಂಬಿಕೊಂಡವರದೆಲ್ಲ ಆದಾಯ ಅಷ್ಟೇ, ಆದರೆ ಖರ್ಚು ಮಾತ್ರ ಮುಗಿಲೆತ್ತರ. ಈ ದಿನಗಳಲ್ಲೇ ಇರಬೇಕು ನಾನು ಬೇರೆಲ್ಲ ಅಂಗಡಿ ಮುಗ್ಗಟ್ಟುಗಳಿಗೆ ಹೋಗೋದನ್ನು ನಿಲ್ಲಿಸಿ ಇದ್ದುದರಲ್ಲಿ ಕಡಿಮೆ ಬೆಲೆಗೆ ಮಾರುವ ಸ್ಯಾಮ್ಸ್‌ಕ್ಲಬ್/ವಾಲ್‌ಮಾರ್ಟ್ ನಂಬಿಕೊಂಡಿದ್ದು. ಮುಂಬರುವ ದಿನಗಳು ಹೇಗೋ ಏನೋ, ಕೆಲಸವಿದ್ದರೆ ಇತ್ತು, ಇಲ್ಲದಿದ್ದರೆ ಇಲ್ಲ - ಅದಕ್ಕಾಗಿ ಎಲ್ಲರೂ ಉಳಿಸುವವರೇ, ಮಿತವಾಗಿ ಖರ್ಚು ಮಾಡುವವರೇ. ನಮ್ಮ ಮನೆಗೆ ಹತ್ತಿರವಿರುವ ಎಕ್ಸಾನ್‌ನಲ್ಲಿ ಕೆಲಸ ಮಾಡುವ ಪಟೇಲ ಒಂದೇ ಶಿಫ್ಟಿನಲ್ಲಿ ಹದಿನೈದು ಸಾವಿರ ಡಾಲರ್ ವ್ಯಾಪಾರಮಾಡಿ ದೊಡ್ಡ ರೆಕಾರ್ಡ್ ಮಾಡಿದ್ದನ್ನು ಬಹಳ ಹೆಮ್ಮೆಯಿಂದ ಹೇಳಿಕೊಂಡಿದ್ದ, ಆದರೆ ಇಲ್ಲಿ ಬರುವ ವಾಹನಗಳು ಕಡಿಮೆಯಾಗಿವೆ ಇತ್ತೀಚೆಗೆ ಅನ್ನೋದನ್ನೂ ಮರೆಯದೇ ಹೇಳಿದ್ದ. ಪಕ್ಕದಲ್ಲಿನ ಡಂಕಿನ್ ಡೋನಟ್ಸ್ ಅಂಗಡಿಯಲ್ಲಿ ನಾನು ಸರತಿ ಸಾಲಿನಲ್ಲಿ ನಿಂತಿರುವಂತೇ ಇಬ್ಬರು ತಮ್ಮ ಕೆಲಸ ಇತ್ತೀಚೆಗಷ್ಟೇ ಕಳೆದುಕೊಂಡಿದ್ದರ ಬಗ್ಗೆ ಮಾತನಾಡಿಕೊಳ್ಳುತ್ತಿದ್ದುದು ನನ್ನ ಕಿವಿಗೆ ಬಿತ್ತು - ಹೀಗೆ ಎಲ್ಲರದೂ ಕಷ್ಟದ ಪರಿಸ್ಥಿತಿ.

ಇನ್ನೊಬ್ಬರ ಕಷ್ಟಕ್ಕೆ ಲಘುವಾಗಿ ಸ್ಪಂದಿಸುವ ನಾನು, ಅವರ ಕಷ್ಟಗಳು ನನಗೇನಾದರೂ ಬಂದರೆ ಎಂದು ಯೋಚಿಸಿಕೊಂಡಂತೆಲ್ಲ ನನ್ನಲ್ಲಿ ಹಲವಾರು ಬದಲಾವಣೆಗಳಾಗ ತೊಡಗಿದವು: ನಮ್ಮ ಪಟ್ಟಣದ ಒಂದು ಫ್ಯಾಮಿಲಿ ಬೇಕರಿಗೆ ನಾನು ಭೇಟಿಕೊಡೋದನ್ನೇ ನಿಲ್ಲಿಸಿ ಬಿಟ್ಟೆ (ಖರೀದಿ ಮಾಡುವ ಸಾಮಾನುಗಳು ಬರೀ ಫ್ರೆಶ್ ಆಗಿದ್ದರೆ ಮಾತ್ರ ಸಾಲದು); ಅಗತ್ಯ ವಸ್ತುಗಳಿಗೆ ಈ ಕಡಿಮೆ ಬೆಲೆಯ ವಾಲ್‌ಮಾರ್ಟ್ ನಿಯಮಿತ ಭೇಟಿ ಕೊಡುವ ಸಂಗತಿಯಾಗಿ ಹೋಯಿತು; ಹೂವು/ಹಣ್ಣಿನ ಅಂಗಡಿಗಳಿಗೆ ಕಾಲಿಟ್ಟು ಎಷ್ಟೋ ತಿಂಗಳುಗಳಾಯಿತು; ಇಂಡಿಯನ್ ಫುಡ್ ಇಡುವ ಫಾಸ್ಟ್‌ಫುಡ್ ರೆಸ್ಟೋರೆಂಟುಗಳಿಗೆ ಇಂಡಿಯನ್ ಹೋಟೆಲುಗಳಿಗೆ ಹೋಗೋ ದಾರಿಯನ್ನೇ ಮರೆತದ್ದಾಯಿತು; ನನ್ನಲ್ಲಿ ಹುದುಗಿದ್ದ ಅಪ್ಪಟ ಕ್ಯಾಪಿಟಲಿಸ್ಟ್ ವಿರೋಧಿ ಮನಸ್ಥಿತಿ ಇತಿಹಾಸವಾಯಿತು; ಲೋಕಲ್ ಅಂಗಡಿಗಳು ಬದುಕಿದರೆಷ್ಟು ಬಿಟ್ಟರೆಷ್ಟು ಎನ್ನುವ ಧೋರಣೆ ತಲೆದೋರಿ ಮುಂದೆ ಅದೇ ಬದುಕಾಯಿತು; ಈ ಅಂಗಡಿಗಳಿಗೆ ಹೆಚ್ಚೆಚ್ಚು ಹೋಗಿ ಬಂದ ಫಲವಾಗಿ ಅಲ್ಲಿನ ಜಾಗೃತಿಯಂತಹ ಎಂಪ್ಲಾಯಿಗಳು ಪರಿಚಿತರಾದರು; ಆ ದೊಡ್ಡ ಅಂಗಡಿಗಳಲ್ಲೂ ಯಾವ ಯಾವ ವಸ್ತುವನ್ನು ಎಲ್ಲೆಲ್ಲಿ ಇಟ್ಟಿರುತ್ತಾರೆ ಎನ್ನುವ ಇಮೇಜ್ ತಲೆಯಲ್ಲಿ ಕೂತು ಹೋಯಿತು...ಹೀಗೆ ಅಥವಾ ಒಟ್ಟಾರೆ ನಾನು ಸಂಪೂರ್ಣ ವಾಲ್‌ಮಾರ್ಟ್ ಮಯವಾಗಿ ಹೋಗುವಂತಾಯಿತು.

***

ಅದಕ್ಕೇ ಹೇಳಿದ್ದು, ಈ ತತ್ವಗಳ ಹಣೇಬರಹವೇ ಇಷ್ಟು ಎಂದು. ನೀವು ಕೇಳಿಲ್ವೇ - ಆಚಾರ ಹೇಳೋರು ಬದನೇಕಾಯಿ ತಿನ್ನೋ ವಿಚಾರಾನ? ಈ ಬರಹ ಅದರ ಹಿಂದಿನ ಸ್ಪಂದಿಸೋ ಮನಸ್ಥಿತಿ ಇವೆಲ್ಲ ಬರೀ ಹೊಟ್ಟೆ ತುಂಬಿದ ಮೇಲಿನ ವಿಚಾರಗಳ ಆಟ್ರಿಬ್ಯೂಟ್ ಸಾರ್. ಅದ್ರಲ್ಲೇನು ಹುರುಳಿಲ್ಲ ಬಿಡಿ. ನಮ್ಮದು ನಮ್ಮ ತತ್ವ ಅಂತ ಜೋತು ಬೀಳೋದರ ಗುಂಗು ಹಾಗಿರಲಿ, ಗಾಳಿ ಬಂದಾಗ ತೋರಿಕೊಳ್ಳೋದೇ ಜಾಣತನವಾಗಿ ಹೋಗಿದೆ (ಅಷ್ಟು ಧಮ್ ಇದ್ರೆ ಗಾಳಿ ಇಲ್ದಾಗ ತೂರು ನೋಡೋಣ ಅನ್ನೋದು ಮತ್ತೊಂದು ದಿನದ ಚಾಲೆಂಜ್, ನಮಗೇ ನಾವು ಬೀಸುವ ಗಾಳಿಯನ್ನು ಸೃಷ್ಟಿ ಮಾಡೋ ತಾಕತ್ತಿದ್ದರೆ ತೂರೋ ಕಷ್ಟವೆಲ್ಲಿಂದ ಬರುತ್ತಿತ್ತು). ಆಫೀಸಿನಲ್ಲಿ struggle for existence ಆಗಿ ಹೋಗಿದೆ - ಕೆಲಸ ಕಳೆದುಕೊಂಡವರ ಬಗ್ಗೆ ಮೊದಲೆಲ್ಲ ಹಲ್ಲಿಯ ಹಾಗೆ ಲೊಚಗುಟ್ಟುತ್ತಿದ್ದವನಿಗೆ ಈಗ ಅವನು ಕಳೆದುಕೊಳ್ಳದಿದ್ದರೆ ಇನ್ಯಾರಾದರೂ (ನಾನೂ ಸೇರಿ) ಕಳೆದುಕೊಳ್ಳಬೇಕಿತ್ತು, ಅವನು ಹೋಗಿದ್ದೇ ಒಳ್ಳೆಯದಾಯ್ತು (ಎಲ್ಲಿ ನನ್ನ ಕುತ್ತಿಗೆಗೆ ಬಂದು ಬಿಡುತ್ತೋ ಎಂದು) ಎನ್ನುವ ಸಮಜಾಯಿಷಿ ತನ್ನಷ್ಟಕ್ಕೆ ತಾನೇ ಹುಟ್ಟಿಕೊಳ್ಳುತ್ತೆ. ದುಡಿಮೆಯನ್ನು ನಂಬಿಕೊಂಡು ಬಂದ ನಮಗೆ ಇಲ್ಯಾರೂ ಇಲ್ಲಾ ಸಾರ್ ನಮ್ಮನ್ನು ಬಿಟ್ರೆ. ಊರಿನಲ್ಲಾದ್ರೆ ಆರಾಮಾಗಿ ಅಣ್ಣ ಅಕ್ಕನ ಮನೆಗೆ ಹೋಗಿ ಒಂದು ವಾರ ಇದ್ದು ಬರಬಹುದಿತ್ತು, ಇಲ್ಲಿ ಆ ಭಾಗ್ಯ ಇಲ್ಲ. ಕೆಲಸವನ್ನು ನಂಬಿಕೊಂಡು ಬದುಕೋ ನಮಗೆ ಅದೇ ಎಲ್ಲ - ನಮಗೆ ಕಣ್ಣು ತುಂಬಿ ಬರೋ ನಿದ್ರೆಯಿಂದ ಹಿಡಿದು ನಮ್ಮನ್ನು ಕಾಡುವ ಚಿಂತೆಗಳವರೆಗೆ ಕೆಲಸದ ಕುರಿತ ವಿಷಯಗಳ ಕಾರುಭಾರು. (ಹಾಗಿದ್ರೆ ಇದನ್ನೆಲ್ಲ ಬಿಟ್ಟು ಬಂದು ಬಿಡಿ, ಅನ್ನೋದು ಸುಲಭ - ಆ ಪ್ರಾಜೆಕ್ಟ್ ಕೈಗೂಡೋದಕ್ಕೆ ಕೊನೇಪಕ್ಷ ಒಂದು ವರ್ಷದ ತಯಾರಿ ಆದ್ರೂ ಬೇಕು).

ಅಷ್ಟೇ, ಮತ್ತೆನಿಲ್ಲ - ಈ ಹೊತ್ತಿನ ತತ್ವ ಅಂತ ಬರೆದೂ ಬರೆದೂ ಅವುಗಳ ಲಿಮಿಟೇಷನ್ನ್ ನಿಮಗೆ ಗೊತ್ತಾದ್ರೆ ಸಾಕು.

Sunday, November 23, 2008

ಆನೆ ಭಾರ ಆನೆಗೆ ಇರುವೆ ಭಾರ ಇರುವೆಗೆ


ವರ್ಷದ ಆಗಷ್ಟು ಎರಡರ ಮಧ್ಯಾಹ್ನ 1:11:25 (August 02, 08) ಇದ್ದ ನ್ಯಾಷನಲ್ ಸಾಲದ ಗಡಿಯಾರದ ಪ್ರಕಾರ US ನ ಪ್ರತಿಯೊಂದು ಫ್ಯಾಮಿಲಿಯ ದೇಶದ ಸಾಲದ ಪಾಲು ಸುಮಾರು 81 ಸಾವಿರ ಡಾಲರುಗಳು. ಟೈಮ್ ಸ್ಕ್ವಯರ್ ಹತ್ತಿರದಲ್ಲಿದ್ದ ಈ ಗಡಿಯಾರದ ಚಿತ್ರವನ್ನು ನಾನು ಬಹಳ ವರ್ಷಗಳಿಂದ ತೆಗೆಯಬೇಕು ಎಂದುಕೊಂಡರೂ ಆಗದಿದ್ದುದು ಕೊನೆಗೆ ೨೦೦೮ ರಲ್ಲಿ ಕೈಗೂಡಿತು, ಆದರೆ ಏನಾಶ್ಚರ್ಯ ಈ ಗಡಿಯಾರದ ಅವಧಿಯೂ ಮುಗಿಯುತ್ತ ಬಂದಹಾಗಿದೆಯಲ್ಲ ಎಂದುಕೊಂಡವನಿಗೆ ನನ್ನ ಊಹೆಗೆ ತಕ್ಕಂತೆ ಈ ಗಡಿಯಾರದ ಡಿಜಿಟ್ಟುಗಳೆಲ್ಲ "ಖಾಲಿ" ಆಗಿ ಮತ್ತೆ ಈ ಗಡಿಯಾರದ ಡಿಜಿಟ್ಟುಗಳನ್ನು ಹೆಚ್ಚಿಸಬೇಕಾಗಿ ಬಂದಿತೆಯಂತೆ. ಅಂದರೆ ಈ ದೇಶದ ಸಾಲ ಹತ್ತು ಟ್ರಿಲಿಯನ್ ಡಾಲರ್‌ಗಳಿಗೂ ಹೆಚ್ಚು!

ಈ ಗಡಿಯಾರದ ಮೂಲ Durst Organization ಹೇಳಿಕೆ ಪ್ರಕಾರ ಮುಂದಿನ ವರ್ಷ ಇದರಲ್ಲಿನ ಸಂಖ್ಯೆಗಳನ್ನು ಹೆಚ್ಚಿಸುತ್ತಾರಂತೆ, ಹೀಗೆ ಹೆಚ್ಚಿಸುವ ಸಂಖ್ಯೆಗಳ ಬಳಕೆ ಇನ್ನೆಷ್ಟು ಬರುತ್ತದೋ ಕಾದು ನೋಡಬೇಕು.

ಅಂದಹಾಗೆ ಈ ಗಡಿಯಾರದ ಹಿಂದಿನ ತತ್ವವನ್ನು ಪಂಡಿತರಿಗೆ ಬಿಡೋಣ, ಅಂಥವರು ಈ ಬರಹದ ಓದುಗರ ಸಮುದಾಯದಲ್ಲಿದ್ದಲ್ಲಿ ನಮಗೂ ಒಂದಿಷ್ಟು ವಿವರವನ್ನು ತಿಳಿಸಬಾರದೇಕೆ?

Friday, November 21, 2008

ದೇವ್ರು ಇಲ್ಲಾ ಅಂತ ಅಂದೋರು ಯಾರು

ನಾವೆಲ್ಲಾ ಚಿಕ್ಕವರಿದ್ದಾಗ ದೇವ್ರು-ದೆವ್ವಗಳು ಇದ್ದಾವೋ ಇಲ್ಲವೋ ಅಂತ ಚಿಂತೆ-ಚಿಂತನೆ ನಡ್ಸಿ ನಡ್ಸಿ ಬಹಳ ಟೈಮು ಕಳೀತಿದ್ವಿ, ನಮ್ಮ ನಮ್ಮ ಮಟ್ಟಿನ ತತ್ವಗಳು ತರ್ಕಗಳು ನಮ್ಮನ್ನು ವಾದ-ವಿವಾದಗಳಲ್ಲಿ ತೊಡಗಿಸಿ ಕೆಲವೊಂದು ಕಥೆಗಳನ್ನು ಬಹಳ ರೋಚಕಗೊಳಿಸಿ (ಅಂದ್ರೆ ಮಸಾಲೆ ಸೇರಿಸಿ) ಹೇಳಿ ಹಂಚಿಕೊಳ್ಳುತ್ತಿದ್ದೆವು. ಪ್ರಪಂಚದಲ್ಲಿ ಇದ್ದ ಇಲ್ಲದ ದೆವ್ವ ಭೂತಗಳು, ಕೊಳ್ಳಿ ದೆವ್ವಗಳು ಇವೆಲ್ಲಾ ನಮ್ಮ ತಂಡದ ಅನುಪಸ್ಥಿತ ಸದಸ್ಯರಾಗಿದ್ದವು. ನಮ್ಮ ನಮ್ಮ ದೇವರುಗಳ ಜೊತೆಗೆ ನಮ್ಮೂರಿನ ಶ್ಮಶಾನದಲ್ಲಿದ್ದ ದೆವ್ವಗಳು ಹಾಗೂ ಅವುಗಳ ಕಥೆಗಳು ನಮ್ಮ ಜೊತೆಗೆ ಅಮೇರಿಕಕ್ಕೆ ಹೇಗೆ ಬಂದ್ವು, ಅವುಗಳಿಗೆ ವೀಸಾ ಕೊಟ್ಟೋರು ಯಾರು ಅನ್ನೋ ಪ್ರಶ್ನೆಗಳು ಇನ್ನು ಪ್ರಶ್ನೆಗಳಾಗೇ ಉಳಿದಿವೆ ಬಿಡಿ.

ಈ ತಣ್ಣನೆ ಹೊತ್ತಿನಲ್ಲಿ ದೇವ್ರ ಬಗ್ಗೆ ನೆನೆಸಿಕೊಳ್ಳೋದಕ್ಕೆ ಏನು ಕಾರಣ ಅಂತ ನನಗೇ ಅನ್ಸಿ ಒಂದು ನಗು ಹೊರಗೆ ಬಂತು, ಅದರ ಹಿಂದೇನೇ ದೇವ್ರ ಹೆಸರನ್ನ ಹಿಡಿದು ಒಂದಿಷ್ಟು ಕೀಟಲೆ ಮಾಡೋಣ ಅಂತ್ಲೂ ಅಂದುಕೊಂಡೆ, after all ಯಾವ ದೇವ್ರ ತಂಡವೂ ನಮ್ಮನ್ನೇನು sue ಮಾಡೋಲ್ಲ ಅಲ್ವೇ?

***

Thanks to my three year old - ಪ್ರತಿಯೊಂದು ಆಲ್ಟರ್‌ನೇಟ್ ಪದ ಇಂಚರಳ ಬಾಯಿಯಿಂದ ಹೊರಡೋದು "Why?" (but why, ಮತ್ತೆ ಅದಕ್ಕೆ ಅಮೇರಿಕನ್ ಆಕ್ಸೆಂಟಿನ ಟಚ್ ಜೊತೆ ಹಲವಾರು ವೇರಿಯೇಷನ್ನುಗಳೂ ಇವೆ!). ಅವಳ ಪ್ರಶ್ನೆಗಳಿಗೆ ಉತ್ತರ ಕೊಡೋ ಹಿನ್ನೆಲೆ ಅಥವಾ ನೆಪದಲ್ಲಿ ಈ ಕೆಳಗಿನ ಪ್ರಶ್ನೆಗಳು ಅಷ್ಟೇ...(ತಮಾಷೆಗೆಂದು)

- ದೇವ್ರು ಬ್ಲಾಕೋ ವೈಟೋ ಅಥವಾ ಮಿಕ್ಸೋ? ಅಥ್ವಾ ಕಲರ್ಡ್ ಸ್ಕಿನ್ನೋ? ಹೌದೌದು, ರಾಮ-ಕೃಷ್ಣರ ಚಿತ್ರಗಳನ್ನು ನೋಡಿ ಸ್ವಲ್ಪ ನೀಲಿಯಾಗಿರುತ್ವೆ, ಶಿವನ ಕಂಠವೂ ಕೂಡಾ ನೀಲಿ.
- ಈ ಬ್ರಹ್ಮನ ತಲೆ ಕೂದಲನ್ನು ಕತ್ತರಿಸೋ ಪ್ರವೀಣ ಕಲಾವಿದ ಯಾರು? ಆ ನಾಲ್ಕು ತಲೆಗಳ ನಡುವೆ ಅವನ ಕತ್ತರಿ ಹೇಗೆ ಸಲೀಸಾಗಿ ಹರಿದಾಡುತ್ತೆ? ಯಾವ ಬಾಯಿಯಿಂದ ಹರಿಯೋ ಸಂವಾದಕ್ಕೆ ಆ ನಾಪಿತ ಯಾವ ಉತ್ತರ ಕೊಡ್ತಾನೆ?
- ಈ ನಾಲ್ಕು ಕೈ ಇರೋ ದೇವತೆಗಳಿಗೆ ಬಟ್ಟೆ ಹೊಲಿದು ಕೊಡೋರು (ಅಂದ್ರೆ ಡಿಸೈನರ್ಸ್) ಯಾರು?
- ಹತ್ತು ತಲೆ ಇರೋ ರಾವಣ ಯಾವ ಬಾಯಲ್ಲಿ ಅನ್ನಾ ಹಾಕ್ತಿದ್ದ?
- ಶಂಕರ ಕೋಪದಲ್ಲಿ ತ್ರಿಶೂಲದಿಂದ ಬಾಲಕನ ತಲೆಯನ್ನು ಕತ್ತರಿಸಿದ (why?), ಭಂಟರು ಹೋಗಿ ಉತ್ತರಕ್ಕೆ ತಲೆ ಹಾಕಿ ಮಲಗಿದ ಆನೆ ತಲೆಯನ್ನು ಕತ್ತರಿಸಿ ತಂದರು (why?), ಹಾರ್ಟು, ಕಿಡ್ನಿ ಟ್ರಾನ್ಸ್‌ಪ್ಲಾಂಟ್ ಮಾಡೋದನ್ನ ಕೇಳಿದ್ದೇವೆ, ಪ್ರಾಣಿಯಿಂದ ಮನುಷ್ಯನಿಗೆ ತಲೆ ಟ್ರಾನ್ಸ್‌ಪ್ಲಾಂಟ್ ಮಾಡಿದ್ದು ಯಾವ ಸರ್ಜನ್ನು? ಅನಸ್ತೇಷಿಯಾ ಕೊಟ್ಟೋರು ಯಾರು? ಆ ಬಾಲಕನ ಕಡಿದು ಹೋದ ತಲೆಯನ್ನೇ ಹುಡುಕಿ ಮತ್ತೇಕೆ ಜೋಡಿಸಲಿಲ್ಲ, ಆ ಆನೆಯ ಮುಂಡ ಏನಾಯ್ತು? ಇಡೀ ಬ್ರಹ್ಮಾಂಡದಲ್ಲಿ ಬರೀ ಅದೊಂದು ಬಡಪಾಯಿ ಆನೆ ಮಾತ್ರ ಉತ್ತರಕ್ಕೆ ತಲೆ ಹಾಕಿ ಮಲಗಿತ್ತೇ?
- ಈ ಕ್ಲೀನ್ ಶೇವನ್ನ್ ವಿಷ್ಣು ಬಳಸೋ ಬ್ಲೇಡ್ ಯಾವ್ದು? ಕೇವಲ ಶಿವ, ರಾಘವೇಂದ್ರ ಸ್ವಾಮಿ, ಹನುಮಂತ ಗಡ್ಡ ಬೆಳೆಸಿಕೊಂಡಿರೋ ಚಿತ್ರ ಮಾತ್ರ ನೋಡೋಕೆ ಯಾಕೆ ಸಿಗುತ್ತೆ?

ಈ ಮೇಲಿನ ಏನೆಲ್ಲ ಪ್ರಶ್ನೆಗಳು (ಹಾಗೂ ಅವುಗಳ ಉತ್ತರಗಳು) ಇದ್ರೂ ನಾವು ದೇವರನ್ನ ಘಟ್ಟಿಯಾಗಿ ನಂಬಿದವರೇ, ಪ್ರತಿನಿತ್ಯ ಶ್ರೀ ಗಣೇಶಾಯ ನಮಃ ಅಂದೇ ನಮ್ಮ ಜೀವನಗತಿಯನ್ನು ಆರಂಭಿಸುವವರೇ. ಈ ಪ್ರಶ್ನೆಗಳನ್ನ ನಾನು ಯಾವತ್ತೂ ಯಾರಿಗೂ ಕೇಳಿದ್ದಿಲ್ಲ (ಇಲ್ಲಿಯವರೆಗೆ), ಇವುಗಳೆಲ್ಲ ಹೀಗೆ ಬಾಲಿಶ ಅನ್ನಿಸಿದ್ರೂ ಪ್ರಶ್ನೆ ಕೇಳಬೇಕಾದ ವಯಸ್ಸಿನಲ್ಲಿ ಕೇಳಿದ್ರೆ ಉತ್ತರ ಕೊಡೋ ಬದಲು ’ಹೋಗೋ ತಲೆಹರಟೆ, ಅಧಿಕಪ್ರಸಂಗಿ...’ ಅಂತ ಯಾರಾದ್ರೂ ಬೈತಾರೆ ಅನ್ನೋ ಅವ್ಯಕ್ತ ಭಯವನ್ನು ಯಾರು ಹುಟ್ಟಿಹಾಕಿದ್ರೋ ಯಾರಿಗೆ ಗೊತ್ತು?

***

ಹೀಗೇ ಒಂದು ದಿನ ವರ್ಜೀನಿಯಾದ ಅಲೆಕ್ಸಾಂಡ್ರಿಯಾ ಮನೆಯಲ್ಲಿ ನಮ್ಮ ಮನೆಯ ಗೋಡೆಗಳಿಗೆ ಬಣ್ಣ ಹಚ್ಚೋಣ ಅನ್ನೋ ಆಲೋಚನೆ ಬಂದಿದ್ದೇ ತಡ ಬಣ್ಣ ಹಚ್ಚಲು ಬೇಕಾದ ಪರಿಕರಗಳನ್ನೆಲ್ಲ ಜೋಡಿಸಿಕೊಂಡು ಸುಸಜ್ಜಿತನಾದೆ, ಮೊದಮೊದಲು ಇದ್ದ ಉತ್ಸಾಹ ಕೆಲ್ಸಾ ಮಾಡ್ತಾ ಮಾಡ್ತಾ ಬತ್ತಿ ಹೋಗೋದರ ಜೊತೆಗೆ ದೊಡ್ಡ ತಲೆನೋವು ಇದು ಅನ್ನೋ ಭಾವನೆ ಬಲವಾಗಿ ಮುತ್ತಿಕೊಳ್ಳತೊಡಗಿತು. ದಿನಗಳೆದ ಮೇಲೆ ಇನ್ನೇನು ಸುಮಾರಾಗಿ ಎಲ್ಲ ಕೆಲ್ಸ ಮುಗಿದು ಫಯರ್ ಪ್ಲೇಸಿನ ಮೇಲೆ ಇದ್ದ ಗೋಡೆಯನ್ನು ಅರ್ಧ ಪೈಂಟ್ ಮಾಡುವ ಹೊತ್ತಿಗೆ ಅಚಾನಕ್ಕಾಗಿ ಏರ್‌ಪೋರ್ಟಿನಿಂದ ನನ್ನ ಸ್ನೇಹಿತನ ಕರೆ ಬಂತು.

’I am hungry, tired, jet lagged, cold - come and get me out of here!' ಅನ್ನೋ ಆಜ್ಞೆ. ನಮ್ಮ ಮನೆಯಿಂದ ಡಲ್ಲಸ್ ಏರ್‌ಪೋರ್ಟಿಗೆ ಕನಿಷ್ಠ ಒಂದು ಘಂಟೆ ದೂರ, ಮೊದಲೇ ಕೆಲಸ ಕಳ್ಳ ನಾನು (ಬಣ್ಣ ಹಚ್ಚೋ ಕೆಲಸ) ಒಂದು ನೆವ ಸಿಕ್ಕಿತೆಂದು ಕೆಲಸವನ್ನು ಅಲ್ಲೇ ಬಿಟ್ಟು ಏರ್‌ಪೋರ್ಟಿನ ಕಡೆ ಹೊರಟೆ. ನಾನು ಬರುವ ಹೊತ್ತಿಗೆ ಸುಮಾರು ಮೂರ್ನಾಲ್ಕು ಘಂಟೆ ಕಳೆದು ಹೋಗಿತ್ತು, ಟ್ರೇನಲ್ಲಿ ಇದ್ದ ಪೈಂಟೂ ಹಾಗೂ ನನ್ನ ರೋಲರ್ರುಗಳು, ಬ್ರಷ್ಷೂ ಇವೆಲ್ಲ ಒಣಗಿ ಹೋಗಿ ಉಪಯೋಗಕ್ಕೆ ಬಾರದವಾಗಿತ್ತು. ನೀರಿನಲ್ಲಿ ತೊಳೆದು ಅದೇನೇನು ಮಾಡಿದರೂ ಮೊದಲಿನ ಹಾಗೆ ಬಣ್ಣ ಹಚ್ಚಲು ಬಾರದವಾಗಿ ಹೋಗಿದ್ದವು. ಅದೇ ತಾನೆ ಮನೆಗೆ ಬಂದ ನನ್ನ ಸ್ನೇಹಿತನಿಗೆ ಸಹಸ್ರ ನಾಮ ಹಾಕುತ್ತಲೇ ಮತ್ತೆ ಇದ್ದ ಬದ್ದ ಒಣಗಿ ಕೃಶವಾದ ರೋಲರುಗಳಿಂದಲೇ ಬಣ್ಣ ಹಚ್ಚುವ ಬುದ್ಧಿವಂತ ಸಾಹಸಕ್ಕೆ ತೊಡಗಿದ್ದ ನನಗೆ ಬುದ್ಧಿ ಕಲಿಸುವ ಸಲುವಾಗಿ ಫೈಯರ್ ಪ್ಲೇಸಿನ ಮೇಲಿನ ಗೋಡೆಯ ಬಣ್ಣ ಬರೆಬರೆಯಾಗಿ ಹೋಯಿತು, ಮೊದಲು ಇದ್ದದ್ದಕ್ಕಿಂತಲೂ ಹಾಳಾಗಿ ಹೋಯಿತು. ಅದೂ ಸೆಮಿ ಗ್ಲಾಸ್ ಪೈಂಟು, ಅದರ ಸ್ಥಿತಿ ಇನ್ನೂ ಕಷ್ಟವಾಗಿ ಹೋಗಿದ್ದ ಹಿನ್ನೆಲೆಯಲ್ಲಿ ನನ್ನ ಎಲ್ಲ ಕರ್ಮಾಕರ್ಮಗಳನ್ನು ಹಳಿಯುತ್ತ ಇದನ್ನೆಲ್ಲ ಹೇಗೆ ಸರಿಪಡಿಸಲಿ ಎಂದು ಯೋಚಿಸುತ್ತಿದ್ದ ನನಗೆ ಮರುದಿನ ಬಹಳ ಆಶ್ಚರ್ಯವೊಂದು ಕಾದಿತ್ತು.

ನಮ್ಮ ಮಹಡಿಯ ಮನೆಯ ಮೇಲೆ ಆಟಿಕ್‌ನಲ್ಲಿ ಆ ವರ್ಷ ಇದ್ದ ಮಹಾನ್ ಛಳಿಯಲ್ಲಿ ನೀರಿನ ಪೈಪುಗಳು ಒಡೆದು ಹೋಗಿ ಒಂದೆರಡು ಮಹಡಿಗಳ ಮನೆಗಳಲ್ಲೆಲ್ಲಾ ನೀರು-ನೀರು ಹರಿದುಹೋಗಿತ್ತು. ಎರಡು ಮಹಡಿ ಕೆಳಗಿರುವ ನಮ್ಮ ಮನೆಯಲ್ಲೂ ನೀರಿನ ಪ್ರಭಾವ ಕಾಣುತ್ತಿತ್ತು. ವಿಶೇಷವೆಂದರೆ ನಮ್ಮ ಮನೆಯ ಎಲ್ಲಾ ಗೋಡೆಯನ್ನು ಹೊರತುಪಡಿಸಿ ಕೇವಲ ಆ ಫೈಯರ್ ಪ್ಲೇಸಿನ ಮೇಲೆ ನಾನು ಕೆಟ್ಟದಾಗಿ ಪೈಂಟ್ ಮಾಡಿದ್ದೆನಲ್ಲ, ಅಲ್ಲಿ ಮಾತ್ರ ನೀರಿನ ಕಲೆ ಬಿದ್ದಿತ್ತು! It is true, ನನ್ನ ಕಣ್ಣನ್ನೇ ನಾನು ನಂಬದ ನಿಜ!

Thanks to america, it is not my problem any more! ನಮ್ಮ ಕಾಂಡೋ ಅಸೋಸಿಯೇಷನ್ನಿನ್ನ ಇನ್ಷೂರೆನ್ಸ್ ಪಾಲಿಸಿಯ ದಯೆಯಿಂದ ಎಲ್ಲೆಲ್ಲಿ ನೀರಿನ ಡ್ಯಾಮೇಜ್ ಇತ್ತೋ ಅದನ್ನೆಲ್ಲ ಅಸೋಸಿಯೇಷನ್ನ್ ನವರು ಸರಿಮಾಡಿಸಿಕೊಟ್ಟರು, ನಮ್ಮ ಫಯರ್ ಪ್ಲೇಸಿನ ಗೋಡೆಯನ್ನೂ ಸೇರಿ! ಅವತ್ತೇ ಅಂದುಕೊಂಡಿದ್ದು ನಾನು, ನನ್ನ ಆಕ್ರಂದನ ಆದ್ಯಾವ ಮುಗಿಲು (celing) ಮುಟ್ಟಿತೋ ಆ ದೇವರು ಕಣ್ಣು ಬಿಟ್ಟು ನಮ್ಮ ಗೋಡೆಯ ಬಣ್ಣವನ್ನು ಸರಿ ಮಾಡಿಕೊಟ್ಟನಲ್ಲ ಎಂದು. ಅವತ್ತಿಂದ ಇವತ್ತಿನವರೆಗೆ ದೇವರು ಇದ್ದಾನೆ ಅಂತ್ಲೇ ಅಂದುಕೊಂಡಿರೋದು ನಾನು, ಆದ್ರೆ ಅವತ್ತಿನಿಂದ ಮುಗಿಲು ನೋಡಿ ಆರ್ತನಾಗಿ ಮೊರೆ ಇಡುವಾಗ ಮನೆಯಿಂದ ಹೊರಗೆ ಪ್ರಾರ್ಥನೆಯನ್ನು ಸಲ್ಲಿಸುತ್ತೇನೆ, the last thing you want is another broken water pipe in the middle of a winter - that is below freezing weather.

Sunday, November 16, 2008

ತುಮಕೂರಿನ ಶಾಲೆಯೂ ಬಡ್‌ಲೇಕಿನ ವೈನ್ ಅಂಗಡಿಯೂ...

ನವೆಂಬರ್ ಮಾಸದಲ್ಲಿ ಕನ್ನಡ-ಕನ್ನಡಿಗರ ಬಗ್ಗೆ ಬರೆಯದಿದ್ದರೆ ಅಪಚಾರವಾದಂತಲ್ಲವೇ?! ನಮ್ಮ ಕನ್ನಡಿಗರು ಯಾರು ಎಂದು ವ್ಯಾಖ್ಯಾನಿಸೋದು ಹಾಗಿರಲಿ, ದೇಶ-ವಿದೇಶಗಳ ಜನರಿಗೆ ವಿದ್ಯೆ ಹಂಚುವ ನಮ್ಮ ಕರುನಾಡಿನ ಸಂಸ್ಥೆಗಳಲ್ಲಿ ಓದಿದವರನ್ನು, ಕೊನೇಪಕ್ಷ ಕರ್ನಾಟಕದಲ್ಲಿ ಒಂದೈದು ವರ್ಷ ಕಳೆದವರನ್ನು ಕನ್ನಡಿಗರು ಎಂದು ನಾವು ಗಣನೆಗೆ ತೆಗೆದುಕೊಂಡಿದ್ದೇ ಆದರೆ ಐದು ಕೋಟಿ ಕನ್ನಡಿಗರ ಸಂಖ್ಯೆ ಬೆಳೆಯೋದಂತೂ ನಿಜ, ಆದರೆ ಕರ್ನಾಟಕದಲ್ಲಿ ಒಂದೈದು ವರ್ಷ ಓದಿ ಬೆಳೆದರೂ ’ಸ್ವಲ್ಪ-ಸ್ಪಲ್ಪ ಆತಾ ಹೈ’ ಅನ್ನೋ ಅಷ್ಟು ಮಟ್ಟಿಗೆ ಮಾತ್ರ ನಮ್ಮಲ್ಲಿಯ ವಿಸಿಟರುಗಳಿಗೆ ಕನ್ನಡ ಕಲಿಸೋದು ನಮ್ಮ ಉದಾರತೆ ಅಲ್ಲದೇ ಮತ್ತಿನ್ನೇನು?

ನಾವಿರುವ ಫ್ಲಾಂಡರ್ಸ್ ಊರಿನ ಅದೇ ಮೌಂಟ್ ಆಲಿವ್ ಟೌನ್‌ಶಿಪ್‌ಗೆ ಹೊಂದಿಕೊಂಡಿಂತಿರುವ ಊರೇ ಬಡ್ ಲೇಕ್. ಒಂದು ಎಂಟು ಸಾವಿರ ಜನರಿರುವ ಪುಟ್ಟ ಊರು, ಇಲ್ಲಿ ನಾವು ಕೆಲವು ಅಂಗಡಿಗಳಿಗೆ ಹೋಗಿ ಬರೋದು ಇದೆ, ಅವುಗಳಲ್ಲಿ ಸ್ಯಾಂಡಿಸ್ ಡಿಸ್ಕೌಂಟ್ ಲಿಕರ್ ಶಾಪ್ (Sandy's) ಕೂಡಾ ಒಂದು. ನಾನು ಮೊದಲು ಹೋದಾಗ ಇದು ಭಾರತೀಯ ಮೂಲದವರೊಬ್ಬರು ನಡೆಸುತ್ತಿರುವ ಸಣ್ಣ ಬಿಸಿನೆಸ್ ಎಂದು ಗೊತ್ತೇ ಇರಲಿಲ್ಲ, ಆ ಬಗ್ಗೆ ತಲೆಕೆಡಿಸಿಕೊಂಡಿರಲೂ ಇಲ್ಲ. ನಂತರ ಭೇಟಿ ನೀಡಿದಾಗ ಅಂಗಡಿಯ ಓನರ್ ಅನ್ನು ಕೇಳಿಯೇ ಬಿಟ್ಟೆ (ನಮ್ಮ ಸಂಭಾಷಣೆ ಇಂಗ್ಲೀಷ್-ಹಿಂದಿ ಮಿಶ್ರ ಭಾಷೆಯಲ್ಲಿ ನಡೆಯುತ್ತಿತ್ತು) - ತಾವು ಎಲ್ಲಿಯವರು ಎಂಬುದಾಗಿ. ಅವರು ಗುಜರಾತಿನ ಮೂಲದವರು ಎಂಬುದು ಗೊತ್ತಾಯಿತು. ನನ್ನ ಬಗ್ಗೆ ವಿಚಾರಿಸಿದ್ದಕ್ಕೆ ನಾವು ಕರ್ನಾಟಕದವರು ಎಂದು ಪರಿಚಯಿಸಿಕೊಂಡೆ. ’ಕರ್ನಾಟಕದಲ್ಲಿ ಎಲ್ಲಿ?’ ಎಂದು ಕೇಳಿದ್ದಕ್ಕೆ ಆಶ್ಚರ್ಯವಾಗಿ ’ಶಿವಮೊಗ್ಗ’ ಎಂದು ಉತ್ತರಕೊಡಲು, ’I know that place!' ಎಂಬ ಉತ್ತರ ಬಂತು.

ಶಿವಮೊಗ್ಗದ ಬಗ್ಗೆ ಹೇಗೆ ಗೊತ್ತು ಎಂದು ಕೆದಕಿ ಕೇಳಲು, ಅವರು ತುಮಕೂರಿನ ಸಿದ್ಧಗಂಗಾ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಓದಿದ್ದು ಎಂದೂ ತಿಳಿಯಿತು. ಉದ್ದೇಶ ಪೂರ್ವಕವಾಗಿ ಕೇಳಿದ ನನ್ನ ಮುಂದಿನ ಪ್ರಶ್ನೆ - ಕನ್ನಡದ ಪೆನೆಟ್ರೇಷನ್ ಅಥವಾ ಪ್ರಚಾರದ ಬಗ್ಗೆ - ’ಹಾಗಾದರೆ ನಿಮಗೆ ಕನ್ನಡ ಬರುತ್ತೆ!’ ಎನ್ನುವುದಕ್ಕೆ ’ಸ್ವಲ್ಪ-ಸ್ಪಲ್ಪ ಆತಾ ಹೈ’ ಎನ್ನುವ ಉತ್ತರ ಬಂತು. ಅವರ ಶ್ರೀಮತಿಯವರ ಹೆಸರು ಸಂಧ್ಯಾ ಎಂದು, ಅದನ್ನೇ ಬದಲಾಯಿಸಿ Sandy ಮಾಡಿಕೊಂಡಿದ್ದೂ ಗೊತ್ತಾಯಿತು.

***

ನಮ್ಮ ಹುಟ್ಟು-ಬೆಳವಣಿಗೆ-ವಿದ್ಯಾಭ್ಯಾಸ ಹಾಗೂ ನಾವು ಎಲ್ಲಿ (ಎಲ್ಲೆಲ್ಲಿ) ನೆಲೆಸುತ್ತೇವೆ ಎನ್ನೋದನ್ನು ಯೋಚಿಸಿಕೊಂಡಾಗ ಬಹಳಷ್ಟು ವಿಚಾರಗಳು ತಲೆತಿನ್ನತೊಡಗುತ್ತವೆ. ಭಾರತೀಯ ಸಂಜಾತ ಇಂಜಿನಿಯರ್ ಒಬ್ಬರು ಅಮೇರಿಕದ ಒಂದು ಸಣ್ಣ ಪಟ್ಟಣದಲ್ಲಿ ಡಿಸ್ಕೌಂಟ್ ಲಿಕರ್ ಎನ್ನುವ ಸ್ಮಾಲ್ ಬಿಸಿನೆಸ್ ನಡೆಸುತ್ತಿರುವುದು ಇಲ್ಲಿಯ ಚರ್ಚೆಯ ವಿಷಯ. ಪ್ರತಿಯೊಬ್ಬರದೂ ಅವರವರ ಜೀವನ ಶೈಲಿ - ಅದರಲ್ಲಿ ತಪ್ಪೇನೂ ಇಲ್ಲ.

ಇಲ್ಲಿಗೆ ನನಗೆ ಹೊಳೆದ ಅಂಶಗಳನ್ನು ಇಲ್ಲಿ ಬರೆದು ಹಾಕುತ್ತೇನೆ, ಅವುಗಳು ಯಾವುದೇ ರೀತಿಯ ಚರ್ಚೆಯನ್ನು ಮೂಡಿಸಲೂ ಬಹುದು, ಇರದೆಯೂ ಇರಬಹುದು:
- ನಾನು ಇಂಜಿನಿಯರ್ ಆಗುತ್ತೇನೆ ಎಂದು ಕನಸುಕಂಡು ಭಾರತೀಯ ವ್ಯವಸ್ಥೆಯಲ್ಲಿ ಇಂಜಿನಿಯರ್ ಆಗಿ ಹೊರಬಹುದಾದ ಪಧವೀದರನ ಹಿನ್ನೆಲೆ
- ಭಾರತದಲ್ಲಿ ಒಬ್ಬ ಇಂಜಿನಿಯರ್ ಅನ್ನು ಹೊರತರಲು ಸಮಾಜ ತೊಡಗಿಸುವ ಸಂಪನ್ಮೂಲಗಳು
- ಅಮೇರಿಕಕ್ಕೆ ಕನಸುಗಳನ್ನು ಹೊತ್ತುಕೊಂಡು ಬಂದು ಇಲ್ಲಿಯ ವ್ಯವಸ್ಥೆಯಲ್ಲಿ ಒಂದು ಸಣ್ಣ ಉದ್ಯಮವನ್ನು ಹುಡುಕಿಕೊಂಡು ಇಲ್ಲೇ ನೆಲೆಸುವ ನಿರ್ಧಾರವನ್ನು ಕೈಗೊಳ್ಳುವುದರ ಹಿಂದಿರುವ ಮನಸ್ಥಿತಿ
- ’ತಾನೇನು ಆಗಬೇಕು’ ಎನ್ನುವ ಗುರಿ ಹಾಗೂ ’ತಾನೆಲ್ಲಿ ತಲುಪಬಲ್ಲೆ / ತಲುಪಿದ್ದೇನೆ’ ಎನ್ನುವ ನಿಜ ಸ್ಥಿತಿಗಳ ವ್ಯತ್ಯಾಸ, if any
- ಅಮೇರಿಕದಲ್ಲಿದ್ದವರದೆಲ್ಲ ಗ್ರ್ಯಾಂಡ್ ಜೀವನವವಲ್ಲ ಎನ್ನುವ ಸಮಜಾಯಿಷಿ, ಒಂದು ಸಣ್ಣ ಉದ್ಯಮ ಬಹಳ ಫ್ರಾಫಿಟೆಬಲ್ ಆಗಿಯೂ ಇರಬಹುದು ಹಾಗೆ ಇರದಿರಲೂ ಬಹುದು
- ಹೀಗೆ ವಲಸೆಗಾರರಾಗಿ ಬಂದವರು ಮತ್ತು ಅವರ ಮುಂದಿನ ಸಂತತಿಗಳು ಸಮಾಜದ ಬೇರೆ ಬೇರೆ ಸ್ಥರಗಳಲ್ಲಿ ನೆಲೆನಿಲ್ಲಬಹುದಾದ ಬೆಳವಣಿಗೆ (ಒಬ್ಬ ಉದ್ಯಮದಾರ ಅಥವಾ ಪ್ರೊಫೆಷನಲ್ ಕುಟುಂಬದ ಹಿನ್ನೆಲೆಯವರ ಸಂತತಿ ಹಾಗೇ ಮುಂದುವರೆಯಬಹುದು ಎನ್ನುವ ಕಲ್ಪನೆಯ ವಿರುದ್ಧ ಹಾಗೂ ಪೂರಕವಾಗಿ)

***

’ನೀನು ದೊಡ್ಡವನಾದ ಮೇಲೆ ಏನಾಗ್ತೀಯೋ?’ ಅಂದ್ರೆ ನಾನಂತೂ ಮೊದಲೆಲ್ಲ ’ಪೈಲಟ್!’ ಅಂತಿದ್ದೆ. ನಮ್ಮ ವಂಶದವರು ಯಾವತ್ತೂ ಹತ್ತಿ ಕೂರದಿದ್ದ ಆಕಾಶಪಕ್ಷಿಯನ್ನು ನಡೆಸುವ ಕಾಯಕವೆಂದರೆ ಸುಮ್ಮನೆಯೇ? ಅವೆಲ್ಲ ನಾಲ್ಕನೇ ಕ್ಲಾಸು ಮುಗಿಸಿ ಮಾಧ್ಯಮಿಕ ತರಗತಿಗಳನ್ನು ತಲುಪುತ್ತಿದ್ದ ಹಾಗೆ ಬದಲಾದ ಹಾಗೆ ನೆನಪು. ನಾನು ಇವತ್ತು ನಡೆಸಿಕೊಂಡು ಬರುತ್ತಿರುವ ಪ್ರಾಜೆಕ್ಟ್ ಮ್ಯಾನೇಜರ್ ಕೆಲಸವನ್ನಂತೂ ನಾನೂ ಒಂದು ದಿನ ಮಾಡಿಕೊಂಡಿರುತ್ತೇನೆ ಎಂದು ಕನಸನ್ನಂತೂ ಕಂಡಿದ್ದಿಲ್ಲ ಆದರೆ ಎಲ್ಲೋ ಇದ್ದವನು ನಾನು ಇಲ್ಲಿಗೆ ಬಂದು ತಲುಪಿದ್ದು ಈ ಸ್ಥಿತಿಯಲ್ಲಿ ಈಗ ಇರೋದಂತೂ ನಿಜವೇ.

ನಮ್ಮ ಡೆಸ್ಟಿನಿ ನಮ್ಮ ಮೂಲ ಇವುಗಳ ಬಗ್ಗೆ ನಿಮಗಂತೂ ನಂಬಿಕೆ ಇದೆಯೋ ಇಲ್ಲವೋ. ಎಲ್ಲೋ ಅಹಮದಾಬಾದಿನ ಆಸುಪಾಸಿನಲ್ಲಿ ಹುಟ್ಟಿ ಬೆಳೆದು ತುಮಕೂರಿನಲ್ಲಿ ಪದವೀಧರನಾಗಿ ಮುಂದೆ ಈ ಬಡ್‌ಲೇಕಿನ ಅಂಗಡಿಯಿಂದ ಜನರಿಗೆ ಮದ್ಯ ಸರಬರಾಜು ಮಾಡುವ Sandy's Liquor ಅಂಗಡಿಯ ಮಾಲಿಕನ ನಸೀಬನ್ನು ನೆನೆದು ಹೀಗೆ ಬರೆಯಬೇಕಾಯಿತಷ್ಟೇ.

Tuesday, November 04, 2008

ಇತ್ತೀಚಿನ ಮೂರು ಬೆಳವಣಿಗೆಗಳು ಹಾಗೂ ಪ್ರತಿಕ್ರಿಯೆ

ದಿನಗಳಲ್ಲಿ ರೆಪ್ಪೆ ಮಿಟುಕಿಸುವುದರೊಳಗೆ ಏನೇನೆಲ್ಲ ಆಗಿ ಹೋಗೋ ಸಾಧ್ಯತೆಗಳಿರುವಾಗ ಪ್ರತಿಕ್ರಿಯೆಯನ್ನು ಒಡನೆಯೇ ದಾಖಲಿಸಬೇಕಾದ ಅಗತ್ಯ ಒಮ್ಮೊಮ್ಮೆ ಕಂಡು ಬರೋದು ನಿಜ. ಅಂದರೆ ಎಲ್ಲವೂ ಆಗಿ ಹೋದ ಮೇಲೆ ಅಲ್ಲಲ್ಲಿ ಸಿಗೋ ಪ್ರತಿಕ್ರಿಯೆ ವರದಿಗಳನ್ನು ಓದಿಕೊಂಡು ನಮ್ಮ ಅನಿಸಿಕೆ ಅಭಿಪ್ರಾಯವನ್ನು ದಾಖಲಿಸೋದು ಒಂದು ರೀತಿ, ಇಲ್ಲವೇ ಎಲ್ಲವೂ ಆಗಿ ಹೋಗುತ್ತಿರುವಾಗಲೇ ನಮ್ಮ ನಿಲುವು ಅಭಿಪ್ರಾಯವನ್ನು ದಾಖಲಿಸೋದು ಮತ್ತೊಂದು ರೀತಿ.

೧. ಉತ್ತರ ಅಮೇರಿಕದ ಮುಂದಿನ ಅಧ್ಯಕ್ಷರು ಯಾರು?
ನನ್ನ ಪ್ರಕಾರ ಸೆನೆಟರ್ ಮೆಕ್ಕೈನ್ ಪಾಪ್ಯುಲಾರಿಟಿ ಮತವನ್ನು ಗೆಲ್ಲದಿದ್ದರೂ ಟ್ರೆಡಿಷನಲ್ ರಿಪಬ್ಲಿಕನ್ ಪಕ್ಷದ ಸ್ಟ್ರಾಂಗ್‌ಹೋಲ್ಡ್ ದೆಸೆಯಿಂದ ಹಾಗೂ ಇಂಡಿಯಾನ, ಫ್ಲೋರಿಡಾ, ಒಹಾಯೋ, ಪೆನ್ಸಿಲ್‌ವೇನಿಯಾ ಮೊದಲಾದ ಸ್ವಿಂಗ್ ಸ್ಟೇಟ್‌ಗಳಲ್ಲಿ ಬೇಕಾದ ಮತವನ್ನು ಗಳಿಸಿದ್ದೇ ಆದರೆ ಮುಂದಿನ ಪ್ರೆಸಿಡೆಂಟ್ ಆಗುವುದು ಖಂಡಿತ.

ಸದ್ಯದ ಸಮೀಕ್ಷೆಗಳ ಪ್ರಕಾರ ಸೆನೆಟರ್ ಒಬಾಮಾ ಪಾಪ್ಯುಲರ್ ಮತವನ್ನು ಗೆಲ್ಲುವಂತೆ ಕಂಡರೂ ಮತ್ತೆ ಈ ಸ್ವಿಂಗ್ ಸ್ಟೇಟ್‌ಗಳಲ್ಲಿಯ ಮತವೇ ಮುಖ್ಯವಾಗುತ್ತದೆ. ಈ ವರ್ಷದ ಚುನಾವಣೆಯಲ್ಲಿ ಬಹಳ ಹೆಚ್ಚಿನ ಜನರು ಮತಕಟ್ಟೆಗಳಿಗೆ ಬರುತ್ತಿರುವುದನ್ನು ನೀವೂ ಗಮನಿಸಿರಬಹುದು. ಮೊಟ್ಟ ಮೊದಲನೇ ಬಾರಿಗೆ ಅಮೇರಿಕಕ್ಕೆ ಆಫ್ರಿಕನ್ ಅಮೇರಿಕನ್ ಪ್ರೆಸಿಡೆಂಟ್ ಇರಲಿ ಎಂದು ಎಷ್ಟೋ ಜನರು ಪೋಲ್‌ಗಳಲ್ಲಿ ಹೇಳಿದ್ದರೂ ಸಹ ಕೆಲವರ ಮನಸ್ಸಿನಲ್ಲಿ ತಮ್ಮನ್ನು ರೇಷಿಯಲ್ ಎಂದು ತಿಳಿದುಕೊಳ್ಳದಿರಲಿ ಎಂದು ಸುಳ್ಳು ಸಮೀಕ್ಷೆಗಳಿಗೆ ಉತ್ತರ ಕೊಟ್ಟಿರಬಹುದು ಎಂಬ ಸಂದೇಹವೂ ಮನಸ್ಸಿನಲ್ಲಿದೆ.

ಚುನಾವಣೆಯ ಉತ್ತರವೇನಾದರೂ ಇರಲಿ - ಆಫ್ರಿಕನ್ ಅಮೇರಿಕದ ಮೂಲದ ಪ್ರೆಸಿಡೆಂಟ್ ಚುನಾಯಿತರಾದಲ್ಲಿ ಅಮೇರಿಕದ ಜನರ ಮನೋವೈಶಾಲ್ಯತೆಯನ್ನು ಜಗತ್ತಿಗೆ ಸಾರುವುದರ ಜೊತೆಗೆ ಉತ್ತರ ಅಮೇರಿಕದ ಕಾಂಗ್ರೆಸ್, ಸೆನೆಟ್ ಹಾಗೂ ಪ್ರೆಸಿಡೆನ್ಸಿ ಎಲ್ಲವೂ ಡೆಮೋಕ್ರಾಟ್‌ಮಯವಾಗುವುದು ನಿಜ. ಅಲ್ಲದೇ ಯಾವ ಪ್ರೆಸಿಡೆಂಟ್ ಹಾಗೂ ಸರ್ಕಾರ ಮುಂದೆ ಬಂದರೆ ನಮ್ಮ ದೇಶಕ್ಕೆ ಅದರಿಂದ ಏನು ಅನುಕೂಲ/ಅನಾನುಕೂಲ ಎನ್ನುವುದು ಇನ್ನೂ ದೊಡ್ಡ ಪ್ರಶ್ನೆ.

೨. ಕನ್ನಡ ಹಾಗೂ ಶಾಸ್ತ್ರೀಯ ಸ್ಥಾನಮಾನ
ಓಹ್, ಉತ್ತರ ಅಮೇರಿಕದಿಂದ ನೇರವಾಗಿ ಕರ್ನಾಟಕ್ಕೆ ಬರೋಣ. ತಮಿಳರ ಭಾಷಾ ವ್ಯಾಮೋಹ ಹಾಗೂ ಅವರು ಅಳವಡಿಸಿಕೊಂಡ ತಂತ್ರಗಳು ಕನ್ನಡದ ಔದಾರ್ಯಗಳಿಗೆ ಅನ್ವಯವಾಗುವಲ್ಲಿ ಇಷ್ಟು ಕಾಲ ಬೇಕಾಯಿತು. ಈ ಬೆಳವಣಿಗೆ ನಿಜವಾಗಿಯೂ ಸ್ವಾಗತಾರ್ಹ. ನಮಗೂ ನಮ್ಮತನವಿದೆ, ನಮ್ಮ ಭಾಷೆಗೆ ಅದರದ್ದೇ ಆದ ಇತಿಹಾಸವಿದೆ. ಎಲ್ಲಕ್ಕಿಂತ ಮುಖ್ಯವಾಗಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡಕ್ಕೆ ಸಿಗುವ ಮನ್ನಣೆ, ಕನ್ನಡ ಸಂಬಂಧಿ ಯೋಜನಗೆಗಳು ಅಭಿವೃದ್ಧಿಗಳು ಇವೆಲ್ಲವೂ ನಮಗೆ ಬೇಕಾಗಿತ್ತು. ಕೊನೆಗೆ ಏನಿಲ್ಲವೆಂದರೂ ೨೦೦೮ ರಲ್ಲಾದರೂ ಕೇಂದ್ರದ ಅಸ್ತು ಸಿಕ್ಕಿತಲ್ಲ ಅದು ಮುಖ್ಯ.

೩. ಭಾರತ ಹಾಗೂ ನ್ಯೂಕ್ಲಿಯರ್ ಎನರ್ಜಿ ಸಂಬಂಧಿ ಬೆಳವಣಿಗೆಗಳು
ಇತ್ತೀಚೆಗಷ್ಟೇ ಅಮೇರಿಕದ ಅಪ್ರೂವಲ್ ಮೊಹರನ್ನು ಒತ್ತಿಕೊಂಡ ಕಾಗದ ಪತ್ರಗಳು ಹಾಗೂ ಮನಮೋಹನ್ ಸಿಂಗ್ ಆಡಳಿತಕ್ಕೆ ಸಿಕ್ಕ ಜಯ ವಿಶ್ವದಾದ್ಯಂತ ಭಾರತವನ್ನು ನ್ಯೂಕ್ಲಿಯರ್ ಅಪ್ರೂವ್ಡ್ ದೇಶವನ್ನಾಗಿ ನೋಡಲು ಸಹಾಯ ಮಾಡಿದವು. ಈ ಹಿಂದೆ ಅಂತರಂಗದಲ್ಲಿ ಬರೆದ ಹಾಗೆ ಹೆಚ್ಚಿನ ಎನರ್ಜಿ ಬೇಡಿಕೆಗೆ ನ್ಯೂಕ್ಲಿಯರ್ ಮೂಲ ಬೇಕೇ ಬೇಕು ಎನ್ನುವ ಪರಿಸ್ಥಿತಿ ಇರುವಾಗ ಕನ್ವೆನ್ಷನಲ್ ಹಾಗೂ ಉಳಿದ ಸೋರ್ಸ್‌ಗಳ ಜೊತೆ ನ್ಯೂಕ್ಲಿಯರ್ ತಂತ್ರಜ್ಞಾನವನ್ನು ನಾವು ಬಳಸುವಂತಾಗುವುದು ಬಹಳ ಮಹತ್ವದ ವಿಷಯ ಹಾಗೂ ಬೆಳವಣಿಗೆ. ನಾವೆಲ್ಲ ಮುಂದೆ ಏನಾಗುವುದೋ ಎಂದು ಕಾದು ನೋಡಬೇಕಷ್ಟೆ.