Friday, October 30, 2015

ಕನ್ನಡಿಗನೊಬ್ಬನ ಪಿರಿಪಿರಿ...

ಅಮೇರಿಕಕ್ಕೆ ಬಂದ ಮೊದಲಲ್ಲಿ ಗೋಪಾಲಕೃಷ್ಣ ಅಡಿಗರ "ಅಳುವ ಕಡಲಲಿ ತೇಲಿ ಬರುತಲಿದೆ ನಗೆಯ ಹಾಯಿ ದೋಣಿ" ಹಾಡನ್ನು ಕೇಳಿದಾಗಲೆಲ್ಲ ನನ್ನ ಮನದಲ್ಲಿ ಈ ಕ್ಯಾಪಿಟಲಿಸಮ್ ಅನ್ನೋ ದೊಡ್ಡೋ ಸಮುದ್ರದಲ್ಲಿ ನಮ್ಮತನವೆಂಬ ಚಿಕ್ಕ ಸೋಷಿಯಲಿಸ್ಟ್ ದೋಣಿಯನ್ನು ನಾವು ಹುಟ್ಟು ಹಾಕಿ ಚಲಿಸುತ್ತಿದ್ದೇವೆಯೇನೋ ಎಂಬ ಆಲೋಚನೆಗಳು ಬರುತ್ತಿದ್ದವು.  ನಮ್ಮ ಕನ್ನಡಿಗರ ಪರಂಪರೆಯೇ ಹಾಗೆ, ದೊಡ್ಡವರನ್ನು ಗೌರವಿಸಬೇಕು, ಯಾವತ್ತೂ ನೀನು ಎಷ್ಟು ಚಿಕ್ಕವನೆಂಬುದನ್ನು ಅರಿತುಕೊಂಡಿರು...ಇತ್ಯಾದಿ ಇತ್ಯಾದಿ ಮಾತುಗಳು ನಮ್ಮ ಮನದಾಳದಲ್ಲಿ "ಗೌರವ"ವನ್ನು ಉಲ್ಬಣಿಸುವುದರ ಬದಲು ಕೀಳರಿಮೆಯನ್ನು ಸೃಷ್ಟಿಸುತ್ತಿತ್ತೇನೋ ಎಂದು ಒಮ್ಮೊಮ್ಮೆ ಗಾಭರಿಯಾಗತ್ತದೆ.  ಉದಾಹರಣೆಗೆ ನಾವು ನಂಬಿಕೊಂಡ ಪದ್ಯಗಳನ್ನು ಈ ಕ್ಯಾಪಿಟಲಿಸಮ್ಮಿನ ದರ್ಬಾರಿನಲ್ಲಿ ದಿನನಿತ್ಯವೂ ನಡೆಯುವ ಆಫೀಸಿನ ರಾಜಕೀಯದ ಮುಂದೆ ಅನ್ವಯಿಸುವುದಾದರೂ ಹೇಗೆ?

ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು
ಕಲ್ಲಾಗು ಕಷ್ಟಗಳ ಮಳೆ ವಿಧಿ ಸುರಿಯೇ
ಬೆಲ್ಲಸಕ್ಕರೆಯಾಗು ದೀನ ದುರ್ಬಲರಿಂಗೆ
ಎಲ್ಲರೊಳಗೊಂದಾಗು ಮಂಕುತಿಮ್ಮ|


ಈ ಮೇಲಿನ ಪದ್ಯವನ್ನು ಫಾಲೋ ಮಾಡುತ್ತಾ ಯಾವ ರೀತಿಯ ರಿಸ್ಕ್ ತೆಗೆದುಕೊಳ್ಳೋದು, ಯಾರನ್ನು ಎದುರು ಹಾಕಿಕೊಳ್ಳೋದು? ಅಥವಾ ಈ ವಚನವನ್ನು ನೋಡಿ:

ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ
ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ
ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ
ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ
ಇದೇ ನಮ್ಮ ಕೂಡಲ ಸಂಗಮ ದೇವನ ಒಲಿಸುವ ಪರಿ|


ಈ ವಾಕ್ಯಗಳನ್ನು ಫಾಲೋ ಮಾಡಿದ್ರೆ ನಮ್ಮ ಆಫೀಸಿನಲ್ಲಿ ನಿಮಗೆ ಪ್ರೊಮೋಷನ್ ಸಿಕ್ಕ ಹಾಗೇ ಅಂದುಕೊಳ್ಳಿ... ಸುಳ್ಳು ಮತ್ತು ಸತ್ಯದ ನಡುವೆ ತಿhiಣe ಟie ಅನ್ನೋದಿದೆಯಂತೆ ಅದಕ್ಕೆ ಕನ್ನಡದಲ್ಲಿ ಯಾವುದೇ ಪದಗಳು ಇದ್ದ ಹಾಗಿಲ್ಲ.  ಈ ಮೇಲಿನ ಮಾತುಗಳಿಗೆ ತದ್ವಿರುದ್ಧವಾಗೇ ನಮ್ಮ ಕಣ್ಣೆದೆರು ಎಷ್ಟೋ ಘಟನೆಗಳು ಆಫೀಸಿನಲ್ಲಿ ನಡೆಯುತ್ತವೆ.  ಕ್ಯಾಪಿಟಲಿಸಮ್ಮಿನ ಲೀಡರುಗಳು ಎತ್ತರದ ಆಳುಗಳು, ಗಟ್ಟಿಯಾಗಿ ಒದರುವ ಇವರುಗಳು "ನುಡಿದರೆ ಸ್ಪಟಿಕದ ಸಲಾಖೆಯಂತಿರಬೇಕು" ಎಂಬುದನ್ನು ಅಕ್ಷರಶಃ ಅರಿತು ಘಂಟೆ ಹೊಡೆದಂತೆ ಮಾತನಾಡುವವರು.  ಹಿರಿಯರು ಕಿರಿಯರು ಎನ್ನುವ ವಯೋ ಬೇಧಭಾವ ಇರೋದಿಲ್ಲ. ಹಿಡಿದ ಕೆಲಸದಲ್ಲಿ  ಕ್ವಾರ್ಟರ್ ಅಥವಾ ಅರ್ಧ ವರ್ಷ ಆದ ಮೇಲೆ ರಿಸಲ್ಟ್ ಅನ್ನು ತಂದು ತೋರಿಸಿಯೇ ಬಿಡುತ್ತಾರೆ.  ಯಾವುದೇ No ಅನ್ನುವ ಪದವನ್ನು ಸಹಿಸದವರು.  ಸದಾ ಕರ್ಮಠ ಸ್ವಭಾವದವರು.  ಅವರಿಂದ ಇವರಿಂದ ಕೆಲಸ ತೆಗೆಯುವವರು.  ರಾಜಕಾರಣಿಗಳು.  ಅಗತ್ಯ ಬಂದಾಗ ಗುಡುಗುವವರು ಮತ್ತು ನಿರ್ದಾಕ್ಷಿಣ್ಯವಾಗಿ ಹಿಂದೇಟನ್ನು ಹಾಕದೆ, "oh, it was a tough decision to make" ಎಂದು ನೂರಾರು ಕೆಲಸಗಾರರನ್ನು ಒಂದೇ ದಿನದಲ್ಲಿ ಮನೆಗಟ್ಟುವವರು, ಇತ್ಯಾದಿ, ಇತ್ಯಾದಿ.  "ನೀವು ಇಷ್ಟು ವರ್ಷ ಮಾಡಿದ್ದನ್ನ ಬಿಡಿ, ನಿಮ್ಮಿಂದ ಇನ್ನು ಮುಂದೆ ಏನೇನು ಮಾಡೋಕಾಗ್ತದೆ ಅನ್ನೋದನ್ನು ಒದರಿ ಹಾಗೂ ಸಾಬೀತು ಮಾಡಿ ತೋರಿಸಿ" ಅನ್ನೋ ಮಾತು ಯಾರು ಯಾವತ್ತು ಬೇಕಾದರೂ ಕ್ಯಾಪಿಟಲಿಸ್ಟಿಕ್ ವ್ಯವಸ್ಥೆಯಲ್ಲಿ ಹೇಳಬಹುದು ಹಾಗೂ ಕೇಳಬಹುದು.

ನಾವು ಡಾರ್ವಿನ್ನನ ಥಿಯರಿಯನ್ನು ಹಿಂದೆ ಓದುತ್ತಿದ್ದಾಗ struggle for existence ಅನ್ನೋದನ್ನ ಬೇರೆ ರೀತಿ ಅರ್ಥ ಮಾಡಿಕೊಳ್ತಿದ್ವಿ,  ಆದರೆ ಈಗ struggle ಮತ್ತು existence ಇವೆರಡೂ ಒಂದೇ ನಾಣ್ಯದ ಎರಡು ಮುಖಗಳಾಗಿವೆ.  ಒಂಥರಾ ಮೈಕ್ರೋ ಬಡ್ಡಿಯ ಸಾಲದ ಸುಳಿಯಲ್ಲಿ ಸಿಕ್ಕಿಕೊಂಡ ಹಾಗೆ ಪ್ರತಿದಿನ ಪ್ರತಿಕ್ಷಣ ನಿಮ್ಮನ್ನ ನೀವು ಪ್ರೋವ್ ಮಾಡಿಕೊಳ್ತಲೇ ಇರಬೇಕು, ಅದೇ ನ್ಯಾಯ, ಅದೇ ನಿಯಮ.

ಇಂಥಾ ಕ್ಯಾಪಿಟಲಿಸಮ್ಮಿನ ಸಾಗರದಲ್ಲಿ, ನೀರಿನ ಗುಣವಿರುವ ನಾವು ಕನ್ನಡಿಗರು ನಮ್ಮ ಯಥೇಚ್ಛವಾದ ಸಾಹಿತ್ಯ, ಸಂಗೀತ ಹಾಗೂ ಸಂದೇಶಗಳ ಹಿನ್ನೆಲೆಯಿಂದ ಒಂದು ರೀತಿ ಬಡಪಾಯಿಗಳಾಗಿ ಬಿಟ್ಟೆವೆನೋ ಅನ್ನಿಸೋದಿಲ್ವಾ ನಿಮಗೆ? ಚಿಕ್ಕ ಚಿಕ್ಕ ರಾಜಕೀಯಗಳಲ್ಲಿ rat race ಹಾಗೂ ಮೈಕ್ರೋ ಮ್ಯಾನೇಜುಮೆಂಟುಗಳಲ್ಲಿ Ph. D., ಮಾಡಿರುವ ನಮಗೆ ನಮ್ಮ ಕಾರ್ಪೋರೇಟ್ ವಲಯದಲ್ಲಿ ಯಾರೂ ಯಾವತ್ತೂ ಕರೆದು ಲೀಡರ್‌ಶಿಪ್ ರೋಲ್ ಅನ್ನು ಕೊಟ್ಟಿದ್ದು ನೋಡಿಲ್ಲ ಬಿಡಿ.  ನಮ್ಮ ಕಣ್ಣೆದುರೇ ತೆಲುಗು, ತಮಿಳು ಹಾಗೂ ಉತ್ತರ ಭಾರತದವರು ದೊಡ್ಡ ದೊಡ್ಡ ಸಾಮ್ರಾಜ್ಯಗಳನ್ನು ಕಟ್ಟಿಕೊಂಡು ಮುಂದೆ ಹೋದರೆ ನಾವು ಕನ್ನಡಿಗರು ಅವರಿಗೆ ಅಡಿಯಾಳುಗಳಾಗಿ ಕೆಲಸ ಮಾಡಿಕೊಂಡು ಅದನ್ನು "ಕಾಯಕವೇ ಕೈಲಾಸ" ಎಂದು ಕರೆದು ಹನ್ನೆರಡನೇ ಶತಮಾನದ ವಚನಕಾರರ ಜೊತೆ ಸಮನ್ವಯ ಬೆಳೆಸಿಕೊಂಡು ಬಿಡುತ್ತೇವೆ.  ಕನ್ನಡಿಗರು risk ತಗೊಳೋದಿಲ್ಲ ಬಿಡ್ರಿ.  ನೀವೆಲ್ಲ ಬರೀ ಪುಳಿಚಾರಿನ ಜನ ನಿಮ್ಮಿಂದೇನಾಗುತ್ತೇ? ಅನ್ನುವವರಿಗೆ ನಾವು ಏನು ಎಂಬುದನ್ನು ತೋರಿಸೋ ಕಾಲ ಬರೋದಾದ್ರೂ ಯಾವಾಗ?

ಊಟ ಮಾಡಿ ಸ್ವಲ್ಪ ಹೊತ್ತು ಬಿಟ್ಟು ಟೀ ಕುಡುದ್ ಮೇಲೆ ಮತ್ತೆ ನಮ್ಮನ್ನು ನಾವೇ ಈ ಪ್ರಶ್ನೆ ಕೇಳಿಕೊಂಡು ಸಮಾಧಾನ ಮಾಡ್ಕೋಬಹುದು ಅಥವಾ ಮಾಡ್ಕೋತೀವಿ: in the grand schema of things, so what?  ನಮಗೆಲ್ಲಾ ಈಗ ಕಷ್ಟಾ ಆಗೋಲ್ಲ.  ಯಾವಾಗ ನಮ್ಮ ಮಕ್ಳು ಹೈ ಸ್ಕೂಲು ಮುಗಿಸಿ ಕಾಲೇಜು ಸೇರಿ ಮೊದಲ ಸಲ ಥ್ಯಾಂಕ್ಸ್ ಗಿವಿಂಗ್‌ಗೆ ಮನೆಗೆ ಬರ್ತಾರಲ್ಲ, ಅವಾಗ ನಮ್ಮ್ ಮುಸುಡಿ ನೋಡಿ ಕೇಳ್ತಾರ್ ನೋಡಿ, "ಓ, ನೀನು ಇನ್ನು ಅದೇ ಕೆಲ್ಸದಲ್ಲಿ, ಅದೇ ಲೆವಲ್‌ನಲ್ಲಿ ಇದಿಯಾ?" ಆಗ ನಿಜವಾಗ್ಲೂ ಗೊತ್ತಾಗುತ್ತೆ ನಾವು ಯಾರು ಅಂತ.  ಅಷ್ಟೊತ್ತಿಗೆ ಸುಮಾರು ತಲೆ ಕೂದ್ಲು ಹಣ್ಣಾಗಿರುತ್ತೆ, ಇಲ್ಲಾ ಉದುರಿರುತ್ತೆ.  ಉಪೇಂದ್ರ ಹೇಳಿದ ಹಾಗೆ ಮೀಲ್ ಬೆಗ್ಗರ್ ಸ್ಟೇಟಸ್‌ಗೆ ಹತ್ರಾ ಹತ್ರಾ ಹೋಗ್ತೀವಿ.   ಇಲ್ಲೇ ಹುಟ್ಟಿ ಬೆಳೆದ ನಮ್ ಅಮೇರಿಕನ್ ಮಕ್ಳಿಗೆ ನಾವು ಬೇಡವಾಗಿ ಹೋಗ್ತೀವಿ.  ಆಗ ನಾವು, ಇನ್ನೇನು ನಾಳೆ ಇಂದನೇ ಹಂಗ್ ಮಾಡ್ತೀವಿ, ಹಿಂಗ್ ಮಾಡ್ತೀವಿ, ಅದು ಮಾಡೋಣ, ಇದು ಮಾಡೋಣ ಅಂದುಕೊಂಡು ಕನಸು ಕಾಣೋ ಅಷ್ಟರಲ್ಲಿ ತೂಕಡಿಗೆ ಜೋರಾಗಿ, ನಿದ್ರೆ ಬಂದು ಹೋಗಿರುತ್ತೆ, ನೋಡ್ತಾ ಇರಿ!

No comments: