Showing posts with label ಇಲ್ಲಿ-ಅಲ್ಲಿ. Show all posts
Showing posts with label ಇಲ್ಲಿ-ಅಲ್ಲಿ. Show all posts

Monday, June 01, 2020

ಕೆಲಸಕ್ಕೆ ಜನರಿಲ್ಲ!



ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ತುಲನೆ ಮಾಡಿ ನೋಡಿದಾಗ, ಹಿಂದಿನ ತಲೆಮಾರಿನವರು ಕಷ್ಟ ಜೀವಿಗಳು ಅನ್ನಿಸೋದು ಸಹಜ.  ತಂತ್ರಜ್ಞಾನ ದಿನದಿಂದ ದಿನಕ್ಕೆ ಬೆಳೆದ ಹಾಗೆ ನಾಗರೀಕತೆ, ನಗರೀಕರಣ, ಜನರ ವಲಸೆ ಮೊದಲಾದವು ಬದಲಾಗುತ್ತಿರುತ್ತವೆ.  ನಮ್ಮ ಪೂರ್ವಜರು ತಮ್ಮ ಇಡೀ ಜೀವಮಾನದಲ್ಲಿ ಪ್ರಯಾಣಿಸಿದ ದೂರವನ್ನು ನಾವು ಒಂದು ತಿಂಗಳಲ್ಲೇ ಪ್ರಯಾಣಿಸಿ ಅವರನ್ನು ಮೀರಿಸಬಲ್ಲೆವು.  ಆದರೆ,  ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ಹೆಚ್ಚಾಗುತ್ತಿರುವ ಅಂತರವನ್ನು ಗ್ರಹಿಸಲು ಈ ಕೆಳಗಿನ ಎರಡು ಸೂಕ್ಷ್ಮಗಳನ್ನು ಗಮನಿಸಿ:


1. ಹಿಂದೆಲ್ಲ ಕೆಲಸಗಾರರು ಸಿಗುತ್ತಿದ್ದರು, ಇಂದು ಕೆಲಸಗಾರರು ಸಿಗುವುದಿಲ್ಲ.  ಸಿಕ್ಕರೂ ಸಹ "ನಿಯತ್ತಿ"ನಿಂದ ಮೈ ಬಗ್ಗಿಸಿ ದುಡಿಯುವುದಿಲ್ಲ.  ಕಡಿಮೆ ಕೆಲಸಕ್ಕೆ ಹೆಚ್ಚು ಬೆಲೆ ಕೇಳುತ್ತಾರೆ.

2.  ಎಲ್ಲರೂ ಓದಿದವರಾಗಿ ಮೇಲ್ಮಟ್ಟದ ಕೆಲಸಗಳನ್ನೇ ಯಾಚಿಸುವುದಾದರೆ, ಉಳಿದೆಲ್ಲ ಕೆಲಸಗಳನ್ನು ಯಾರು ಮಾಡುವವರು? ತೋಟ-ಗದ್ದೆಗಳಲ್ಲಿ ಕೆಲಸ ಮಾಡಲು, ರಸ್ತೆ ಗುಡಿಸಲು, ನೆಲ ಒರೆಸಲು, ಬಟ್ಟೆ ಒಗೆಯಲು, ಮನೆ ಕಟ್ಟಲು, ಮರಳು ಹೊರಲು, ಕಟ್ಟಿಗೆ ಒಡೆಯಲು, ಸುಣ್ಣ-ಬಣ್ಣ ಹಚ್ಚಲು, ತೆಂಗಿನಕಾಯಿ ಕೊಯ್ಯಲು, ಮನೆ ಕೆಲಸ ಮಾಡಲು... ಕೆಲಸಕ್ಕೆ ಯಾರು ಸಿಗುತ್ತಾರೆ?

***



ಕಳೆದ ಇಪ್ಪತ್ತು ವರ್ಷಗಳಲ್ಲಿ ಯು.ಎಸ್.ಎ. ಒಂದು ದೇಶದಲ್ಲಿಯೇ (ಒಂದು ಅಧ್ಯಯನದ ಪ್ರಕಾರ) ಸುಮಾರು 50 ಲಕ್ಷ ಮ್ಯಾನ್ಯುಫ್ಯಾಕ್ಚರಿಂಗ್ ಕೆಲಸಗಳು ಕಾಣೆಯಾದವು.  60 ರ ದಶಕದಲ್ಲಿ ಸುಮಾರು ನೂರಕ್ಕೆ 25% ಜನರು ಮ್ಯಾನ್ಯುಫ್ಯಾಕ್ಚರಿಂಗ್‌ನಲ್ಲಿ ತೊಡಗಿಕೊಂಡಿದ್ದರೆ, ಇಂದು ಅದರ ಪ್ರಮಾಣ ಸುಮಾರು 5% ಮಟ್ಟಿಗೆ ಇಳಿದಿದೆ.  ಒಂದು ಕಾಲದಲ್ಲಿ Ford ಅಂಥ ಕಂಪನಿಗಳು ತಮ್ಮ supply chainನಲ್ಲಿ ಬರುವ ಎಲ್ಲ ವಿಧವಾದ ಪರಿಕರ/ವಸ್ತುಗಳನ್ನು ತಮ್ಮಷ್ಟಕ್ಕೆ ತಾವೇ ತಯಾರಿಸುತ್ತಿದ್ದರು.  ಆದರೆ, ಈಗ ಅವರ ಮುಖ್ಯವಾದ components (such as engine parts) ಸಹ ಬೇರೆ ಕಡೆಯಿಂದ ಆಮದಾಗುವ ಪರಿಸ್ಥಿತಿ ಇದೆ.

ಮ್ಯಾನ್ಯುಫ್ಯಾಕ್ಚರಿಂಗ್ ವಲಯದಲ್ಲಿರುವ ಕೆಲಸಗಾರರು ಅಮೇರಿಕದಲ್ಲಿ ಒಂದು ಘಂಟೆಗೆ 20 ಡಾಲರ್‌ ಅಷ್ಟುಸಂಬಳದಲ್ಲಿ ಕೆಲಸ ಮಾಡುವ ಸ್ಥಿತಿ ಇದೆ.  ಇದು, ಇಲ್ಲಿನ ಕನಿಷ್ಠ ವೇತನದ ಮೂರು ಪಟ್ಟು ಹೆಚ್ಚು ಎಂದುಕೊಳ್ಳಬಹುದು.  ಅದೇ ಗುಣಮಟ್ಟದ ವಸ್ತುಗಳು, ಹೊರದೇಶದಿಂದ ಕಡಿಮೆ ಬೆಲೆಗೆ ಸಿಗುವಂತೆ (ವಿಶೇಷವಾಗಿ ಚೀನಾದಿಂದ) ಆಮದಾಗುವ ಪರಿಸ್ಥಿತಿ ಇರುವುದಾದರೆ ಇಲ್ಲಿ ಮ್ಯಾನ್ಯುಫ್ಯಾಕ್ಚರಿಂಗ್ ಹೇಗೆ ಉಳಿಯುತ್ತದೆ? ಹೇಗೆ ಬೆಳೆಯುತ್ತದೆ?

***

ಸಾಮಾನ್ಯ ಜನರ ಅನುಕೂಲ: ತೊಂಭತ್ತರ ದಶಕದ ಕೊನೆಯಲ್ಲಿ ಭಾರತದ ಬ್ಯಾಂಕುಗಳಿಗೆ ನಿಧಾನವಾಗಿ ಕಂಪ್ಯೂಟರುಗಳು ನುಸುಳತೊಡಗಿದಾಗ ನಮ್ಮನಮ್ಮಲ್ಲಿ ವಾದ-ವಿವರಣೆಗಳು ನಡೆಯುತ್ತಿದ್ದವು.  ಒಂದಿಷ್ಟು ಜನ ಈ ಕಂಪ್ಯೂಟರುಗಳು ಜನರ ಕೆಲಸವನ್ನು ನುಂಗಿ ಹಾಕುತ್ತವೆ ಎಂದೂ, ಇನ್ನೊಂದಿಷ್ಟು ಜನ ಈ ಕಂಪ್ಯೂಟರುಗಳು ಜನರ ದಕ್ಷತೆಯನ್ನೂ (efficiency), ಜನರ ಕೆಲಸದ ನಿಖರತೆಯನ್ನೂ (accuracy) ಹೆಚ್ಚಿಸುತ್ತವೆ ಎಂದೂ ವಾದವನ್ನು ಮಂಡಿಸುತ್ತಿದ್ದೆವು.  ಆಗಿನ ಕಾಲವೆಲ್ಲ ದಪ್ಪನಾದ ಲೆಡ್ಜರುಗಳ ಕಾಲ, ಎಲ್ಲಿ ನೋಡಿದರೂ ಅಲ್ಲಿ ಪೇಪರುಗಳದ್ದೇ ದರಬಾರು, ಅವುಗಳದ್ದೇ ಕಾರುಬಾರು.

ನಂತರ ಕಂಪ್ಯೂಟರುಗಳು ನಿಧಾನವಾಗಿ ಎಲ್ಲ ಕಡೆಗೆ ಹರಡಿಕೊಂಡ ಮೇಲೆ ನಾವೆಲ್ಲರೂ ಅದರ ಅನುಕೂಲವನ್ನು ಪಡೆದಿದ್ದೇವೆ.  ಆದರೆ, ಕಂಪ್ಯೂಟರುಗಳು ಬಂದ ನಂತರ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಕಡಿಮೆ ಏನೂ ಆಗಿಲ್ಲ.  ಬ್ಯಾಂಕುಗಳು ಬೆಳೆದಂತೆ, ಬ್ರ್ಯಾಂಚುಗಳು ಹೆಚ್ಚಾದವು, ಎಟಿಎಮ್ ಮಿಷೀನುಗಳು ಎಲ್ಲ ಕಡೆ ತಲೆ ಎತ್ತಿದವು.  ಮುಂದೆ ಕ್ರೆಡಿಟ್ ಕಾರ್ಡ್, ನಂತರದಲ್ಲಿ ಆನ್‌ಲೈನ್ ಪೇಮೆಂಟ್, ಪೇಟಿಎಮ್ ನಂತಹ ಸೇವೆಗಳು ಬಂದು ಹಣ ವಿಲೇವಾರಿ ತ್ವರಿತವಾಯಿತು.  ಹಣದುಬ್ಬರ (inflation) ಹೆಚ್ಚಾದಂತೆ ಪ್ಯಾಂಟ್ ಜೇಬಿನಲ್ಲಿ ತೆಗೆದುಕೊಂಡು ಹೋಗುವ ಹಣ ಯಾವ ಕೆಲಸಕ್ಕೂ ಸಾಕಾಗದೇ ರಾಶಿ ರಾಶಿ ಹಣವನ್ನು ಚಿಟಿಕೆ ಹೊಡೆಯುವಷ್ಟರಲ್ಲಿ ಅಲ್ಲಿಂದಿಲ್ಲಿಗೆ ವಹಿವಾಟು ನಡೆಸುವಂತಾಯಿತು.  ಈ ಅನುಕೂಲಗಳೆಲ್ಲ ಒಂದು ರೀತಿಯಲ್ಲಿ ಕಂಪ್ಯೂಟರ್ ಕ್ಷೇತ್ರದಲ್ಲಿ ಆದ ಅವಿಷ್ಕಾರಗಳಿಂದಲೇ ಸಾಧ್ಯವಾದದ್ದು.

ಸಿರಿವಂತರ ನೋವು: ಯಾವುದಾದರೂ ಹಳೆಯ ಕನ್ನಡ ಸಿನಿಮಾಗಳನ್ನೋ ಅಥವಾ ಫೋಟೋಗಳನ್ನೋ ನೀವು ನೋಡಿದರೆ ಒಂದಂತೂ ನಿಮಗೆ ಗ್ಯಾರಂಟಿಯಾಗುತ್ತದೆ.  ನಾವು ನೋಡಿದ ಎಂಭತ್ತರ ದಶಕದಲ್ಲಿ ಟ್ರಾಫಿಕ್ ಜಾಮ್ ಅನ್ನೋ ಪರಿಸ್ಥಿತಿ ಇರುತ್ತಲೇ ಇರಲಿಲ್ಲ.  ಊರಿನಲ್ಲಿ ಕೆಲವೇ ಕೆಲವು ಮನೆಗಳಿಗೆ ಫೋನ್ ಕನೆಕ್ಷನ್ ಇರುತ್ತಿತ್ತು.  ದೂರದ ಊರುಗಳಿಂದ ಟ್ರಂಕ್ ಕಾಲ್ ಮಾಡಿ ಕರೆ ಮಾಡಬೇಕಿತ್ತು.  ಅದರ ಜೊತೆಗೆ ಊರಿನಲ್ಲಿ ನಿಗದಿತ ಸಮಯಕ್ಕೆ ಹೋಗಿ ಬರುತ್ತಿದ್ದ ಬಸ್ಸುಗಳು, ಆಗಾಗ್ಗೆ ಬಂದು ಹೋಗುತ್ತಿದ್ದ ಲಾರಿಗಳನ್ನು ಬಿಟ್ಟರೆ ಕೇವಲ ಶ್ರೀಮಂತರ ಮನೆಯ ಕಾರುಗಳಿಗೆ ರಸ್ತೆಗಳು ಮೀಸಲಾಗಿದ್ದವು. ಕೇವಲ ಹಳ್ಳಿಗಳಷ್ಟೇ ಏಕೆ, ಜಿಲ್ಲಾ ಕೇಂದ್ರಗಳೂ, ಬೆಂಗಳೂರಿನಲ್ಲೂ ಸಹ ಅಷ್ಟೊಂದು ಕಾರುಗಳು ಓಡಾಡುತ್ತಿರಲಿಲ್ಲ.  ಕಾರು ಇಟ್ಟುಕೊಂಡವರಿಗೆ ಯಾವತ್ತೂ ಪಾರ್ಕಿಂಗ್ ಸಮಸ್ಯೆ ಬಂದುದನ್ನು ನಾನು ನೋಡಿಲ್ಲ, ಕೇಳಿಲ್ಲ.

ಈಗ ಹೆಚ್ಚಿನ ಮಧ್ಯಮ ವರ್ಗದ ಕುಟುಂಬಗಳಲ್ಲಿ ಕಾರು ಇದೆ.  ಕೆಲವೊಂದು ಮನೆಗಳಲ್ಲಿ ಕಾರುಗಳನ್ನು ನಿಲ್ಲಿಸಲು ಜಾಗವಿರದಿದ್ದರೂ ಅವರ ಹತ್ತಿರ ಕನಿಷ್ಠ ಒಂದಾದರೂ ಕಾರು ಇರುವುದು ಸಾಮಾನ್ಯವಾಗಿದೆ.  ದೇಶದ ಉದ್ದಗಲಕ್ಕೂ ಇಂದು ಕಾರುಗಳ ಪ್ರಮಾಣ ಬಹಳಷ್ಟು ಹೆಚ್ಚಾಗಿದೆ.  ಎಕನಾಮಿಕ್ ಟೈಮ್ಸ್ ವರದಿಯ ಪ್ರಕಾರ ಕಳೆದ ನಲವತ್ತು ವರ್ಷಗಳಲ್ಲಿ ಬೆಂಗಳೂರು ನಗರ ಒಂದರಲ್ಲಿಯೇ ವಾಹನಗಳ ಪ್ರಮಾಣ 6000% ದಷ್ಟು ಏರಿರುವುದನ್ನು ಕಾಣಬಹುದು.

ಊರು-ಕೇರಿಯ ರಸ್ತೆಗಳು ಕೇವಲ ಸಿರಿವಂತರಿಗೆ ಮಾತ್ರ ಎನ್ನುವಂತಿದ್ದ ಒಂದು ಕಾಲಕ್ಕೂ ಈಗಿನ ಎಲ್ಲರೂ ರಸ್ತೆ ಮೇಲೆ ತಮ್ಮ ಸವಾರಿಯನ್ನು ಚಲಾಯಿಸುತ್ತಿರುವುದಕ್ಕೂ ಬಹಳಷ್ಟು ವ್ಯತ್ಯಾಸವಿದೆ.  ಇದರಿಂದ ಸಾಮಾನ್ಯ ಜನರಿಗಂತೂ ಅನುಕೂಲವೇ ಸರಿ, ಆದರೆ ಆಗಿನ ಸಿರಿವಂತರು ತಮ್ಮ ವಿಶೇಷವಾದ ಸೌಲಭ್ಯವನ್ನು ಕಳೆದುಕೊಂಡರು ಎನ್ನುವುದು ನನ್ನ ಅಭಿಪ್ರಾಯ.

***
ಇಂದಿನ ಚಿಕ್ಕದಾದ ಕುಟುಂಬಗಳಲ್ಲಿ ದಿನನಿತ್ಯದ ಕೆಲಸ ಕಾರ್ಯಗಳನ್ನು ಪೂರೈಸುವಲ್ಲಿ ಮೆಷೀನುಗಳ ಪಾತ್ರ ಇರುವುದು ಹಿರಿದಾಗಿದೆ.  ನಗರದ  ಹೆಚ್ಚಿನ ಮನೆಗಳಲ್ಲಿ ಇಂದು ವಾಷಿಂಗ್ ಮೆಷೀನ್ ನುಸುಳಿದೆ.  ಸೋಲಾರ್ ಪವರ್‌ನಿಂದ ನೀರು ಕಾಯಿಸಿಕೊಳ್ಳುವ ಅನೇಕರು ಸ್ವಿಚ್ ಹಾಕಿದರೆ ಬಿಸಿ ನೀರು ಪಡೆಯುವ ಸ್ಥಿತಿಯನ್ನು ಕಾಣಬಹುದು.  ನೆಲವನ್ನು ಗುಡಿಸಲು, ಪಾತ್ರೆ ತೊಳೆಯಲು ಮತ್ತು ಬಟ್ಟೆ ಒಗೆಯಲು ಪ್ರತಿದಿನ ಕೆಲಸಕ್ಕೆ ಬಂದು ಹೋಗುವವರು ಸಿಗುತ್ತಾರೆ.  ತಿಂಗಳಿಗೆ ಇಷ್ಟು ಎನ್ನುವ ನಿಗದಿತ ಸಂಬಳಕ್ಕೆ ಕೆಲಸ ಮಾಡುವ ಇವರುಗಳು ತಮ್ಮ ಅಗತ್ಯಕ್ಕೆ ತಕ್ಕಂತೆ ವಟಾರದ ಒಂದಿಷ್ಟು ಮನೆಗಳಲ್ಲಿ ಕೆಲಸ ಮಾಡಿಕೊಂಡು ಜೀವನವನ್ನು ಸಾಗಿಸುತ್ತಾರೆ.  ಹೆಚ್ಚಿನವರಿಗೆ ಒಳ್ಳೆಯ ಉತ್ಪನ್ನವೂ ಇರುವುದು ಕೇಳಿ ಬರುತ್ತದೆ.  ಇನ್ನು ಮನೆಯ ಚಿಕ್ಕ-ಪುಟ್ಟ ಕೆಲಸಗಳ ಜೊತೆಗೆ ಮನೆ ಮಂದಿಗೆ ಅಡುಗೆ ಮಾಡಿಕೊಂಡು ಹೋಗುವುದು ಮನೆಯವರ ಕೆಲಸ.  ಅದರಲ್ಲೂ ಸಹ ನ್ಯೂಕ್ಲಿಯರ್ ಫ್ಯಾಮಿಲಿಗಳಿಗೆ ತೊಂದರೆ ಹೆಚ್ಚು, ಎಲ್ಲದಕ್ಕೂ ಗಂಡ ಹೆಂಡತಿ ಹೊಂದಿಕೊಂಡು ಹೋಗಬೇಕಾಗುತ್ತದೆ.  ಇನ್ನು ಮನೆಯಲ್ಲಿ ಹಿಂದಿನ ತಲೆಮಾರಿನ ಹಿರಿಯರು ಯಾರಾದರೂ ಇದ್ದರೆ, ಅಡುಗೆಯ ಕೆಲಸದಲ್ಲಿ, ಮಕ್ಕಳನ್ನು ನೋಡಿಕೊಳ್ಳಲು ಸಾಕಷ್ಟು ನೆರವಾಗುತ್ತದೆ.  ನೂರು ಕೋಟಿಗಿಂತಲೂ ಹೆಚ್ಚು ಜನರಿರುವ ಭಾರತದಲ್ಲಿ ಎಲ್ಲರ ಮನೆಯೂ ಹೀಗೆ ಎಂದು ನಿರ್ದಿಷ್ಟವಾಗಿ ಹೇಳಲಾಗದು.  ಆದರೆ, ಸೀನಿಯರ್ ಸಿಟಿಜನ್ಸ್ ಜನಸಂಖ್ಯೆ ಹೆಚ್ಚುತ್ತಿರುವ ಭಾರತದಲ್ಲಿ ವ್ಯವಸ್ಥೆ ಅಷ್ಟೊಂದು ಮುಂದುವರೆದ ಹಾಗಿಲ್ಲ.  ಇವತ್ತಿಗೂ ಹೆಚ್ಚಿನ ವೃದ್ಧ ತಂದೆ-ತಾಯಂದಿರು ತಮ್ಮ ಮಕ್ಕಳನ್ನು ನಂಬಿಕೊಂಡಿರುವುದು ಕಂಡು ಬರುತ್ತದೆ.  ಇಂಥವರ ಪೋಷಣೆಗೆ ಅದರಲ್ಲೂ ಖಾಯಿಲೆ ಬಿದ್ದಿರುವ ಹಿರಿಯರಿಗೆ ದಿನನಿತ್ಯದ ನೆರವಿಗೆ ಕೆಲಸಗಾರರು ಸಿಗುತ್ತಿಲ್ಲ.

ಸೀನಿಯರ್ ಸಿಟಿಜನ್ಸ್‌ಗಳನ್ನು ನೋಡಿಕೊಳ್ಳುವುದು ಬಹಳ ಸೂಕ್ಷ್ಮ ಹಾಗೂ ಕಷ್ಟದ ಕೆಲಸ.  ಬಹಳಷ್ಟು ಜನರಿಗೆ ಒಂದಲ್ಲ ಒಂದು ರೀತಿಯ ಖಾಯಿಲೆ ಬಾಧಿಸುತ್ತಿರುತ್ತದೆ.  ಅವರ ಪ್ರಿನ್ಸಿಪಲ್ಸ್, ಅವರಿಗೆ ಬೇಕಾದ ಊಟ-ತಿಂಡಿ ಅಗತ್ಯಗಳು, ಅವರ ಮನರಂಜನೆ, ಇತ್ಯಾದಿ ಇವೆಲ್ಲವೂ ಬೇರೆಯ ಒಂದು ಆಯಾಮವನ್ನೇ ಪಡೆದುಕೊಂಡಿರುತ್ತವೆ.  ಹೀಗಿರುವಾಗ ಮನೆಯಲ್ಲಿ ಯಾರಿಗಾದರೊಬ್ಬರಿಗೆ ಗಂಭೀರ ಸ್ವರೂಪದ ಖಾಯಿಲೆ ಏನಾದರೂ ಬಂದರೆ, ಅವರನ್ನು ಸಂತೈಸುವುದು ಬಹಳ ಕಷ್ಟದ ವಿಷಯವಾಗುತ್ತದೆ... ಈ ನಿಟ್ಟಿನಲ್ಲಿ ಭಾರತದುದ್ದಕ್ಕೂ ವೃದ್ಧಾಶ್ರಮಗಳು ಅಷ್ಟೊಂದು ಬೆಳೆಯದಿದ್ದರೂ ಇನ್ನು ಮುಂದೆ ಬೆಳೆಯುವುದನ್ನು ಊಹಿಸಬಹುದು. 

ಆದರೆ, ಇತ್ತೀಚೆಗೆ ಮನೆಗಳಲ್ಲಿ ಕೆಲಸ ಮಾಡಲು ಸಿಗುವವರು "ನಿಯತ್ತಿ"ನಿಂದ ಕೆಲಸ ಮಾಡೋದಿಲ್ಲ ಎನ್ನುವ ಆರೋಪಗಳು ಸಾಕಷ್ಟು ಕೇಳಿ ಬರುತ್ತವೆ.  ಯುವ ಜನತೆ ಯಾವಾಗಲೂ ತಮ್ಮ ತಮ್ಮ ಮೊಬೈಲು ಫೋನುಗಳಿಗೆ ಶರಣಾಗಿರುತ್ತಾರೆ.  ಹಿಂದಿನ ಕಾಲದವರ ಹಾಗೆ ನಿಯತ್ತಿನಿಂದ ನಡೆದುಕೊಳ್ಳೋದಿಲ್ಲ, ಕೆಲಸಗಳ್ಳರು, ಯಾವಾಗಲೂ ಸಬೂಬುಗಳನ್ನು ಹೇಳಿ ತಪ್ಪಿಸಿಕೊಳ್ಳುತ್ತಾರೆಯೇ ಹೊರತು ವಹಿಸಿಕೊಂಡ ಕೆಲಸವನ್ನು ಮೈಬಗ್ಗಿಸಿ ಮಾಡೋದಿಲ್ಲ.  ಹೀಗೆ ಅನೇಕ ಹೇಳಿಕೆಗಳನ್ನು ಕೇಳುವುದು ಸಾಮಾನ್ಯವಾಗಿದೆ.  ಎಲ್ಲರೂ ಐಶಾರಾಮಿ ಬದುಕಿನ ಕನಸನ್ನು ಕಂಡು ಅದರಲ್ಲೇ ಬದುಕುವ ಹಾಗಿದ್ದರೆ, ಈ ಐಶಾರಾಮಿತನಕ್ಕೆ ಅರ್ಥವೂ ಬರೋದಿಲ್ಲ. ಜೊತೆಗೆ ಅದು ಸೃಷ್ಟಿಸುವ "ಟ್ರಾಫಿಕ್ ಜಾಮ್" ಕೂಡಾ ಭೀಕರವಾಗಿರುತ್ತದೆ.  ಊರಿನಲ್ಲಿ ಕೆಲವೇ ಕೆಲವು ಕಾರುಗಳಿದ್ದಾಗ ಹೇಗೆ ಒಂದು ವ್ಯವಸ್ಥೆ ಚಾಲನೆಯಲ್ಲಿತ್ತೋ, ಅದೇ ವ್ಯವಸ್ಥೆ ಊರಿನ ಪ್ರತಿಯೊಬ್ಬರೂ ಸಮತೋಲಿತದವರಾದಾಗ ಸಂತುಲನ (equilibrium) ವನ್ನು ಕಳೆದುಕೊಳ್ಳುತ್ತದೆ.  ಯಾರಿಗೂ ಯಾವ ಕೆಲಸವನ್ನೂ ಮಾಡಿಕೊಡಲು ಯಾರೂ ಸಿಗದೇ ಹೋಗುವ ಪರಿಸ್ಥಿತಿ ಬರುತ್ತದೆ.  ಕಿತ್ತ ಚಪ್ಪಲಿಗಳನ್ನು ದುರಸ್ತಿ ಮಾಡಿಸುವುದಾಗಲೀ, ಬಟ್ಟೆಯನ್ನು ಅಳತೆಗೆ ತಕ್ಕಂತೆ ಹೊಲಿಸಿಕೊಳ್ಳುವುದಾಗಲೀ ಕಡಿಮೆಯಾಗಿ ಎಲ್ಲರೂ ದಿನದಿನಕ್ಕೂ "ಹೊಸ"ತನ್ನು ನಂಬಿಕೊಳ್ಳುವ ಗ್ರಾಹಕ ಪ್ರವೃತ್ತಿ (consumerism) ಬೆಳೆಯುತ್ತದೆ.  ಅದರಿಂದ ಎಕಾನಮಿ ದೊಡ್ಡದಾಗುತ್ತದೆ ಎಂದು ಎಷ್ಟೋ ಜನ ತಮ್ಮ ತತ್ವಗಳನ್ನು ಮಂಡಿಸಬಹುದು.  ಆದರೆ, ಅದರಿಂದ ನಾವು ಅನೇಕ ವ್ಯತಿರಿಕ್ತ ಪರಿಣಾಮಗಳನ್ನೂ ಅನುಭವಿಸಬೇಕಾಗುತ್ತದೆ.

ಹೀಗೆ ತಲೆಮಾರಿನಿಂದ ತಲೆಮಾರಿಗೆ ಪ್ರತಿಯೊಬ್ಬರೂ "ಸಿರಿವಂತ"ರಾಗುತ್ತಲೇ ಇದ್ದಾರೆ... ಆದರೆ, ಸಿರಿವಂತರೆನ್ನುವುದು ಒಂದು ತುಲನಾತ್ಮಕ ಹಣೆಪಟ್ಟಿ ಅಷ್ಟೇ.

Friday, May 08, 2020

ಕೊರೋನಾಗೂ ಮತ್ತು ಊಟ-ತಿಂಡಿಗೂ ಎತ್ತಣ ಸಂಬಂಧ?

ಊಟ-ತಿಂಡಿಯ ವಿಷಯವನ್ನು ಎಂದೂ ಲಘುವಾಗಿ ತೆಗೆದುಕೊಳ್ಳಲೇ ಬಾರದು ಎನ್ನುವುದು ಈ ಹೊತ್ತಿನ ತತ್ವ.  ಈ ಕೋವಿಡ್ ದೆಸೆಯಿಂದ ಸಮಯಕ್ಕೆ ಸರಿಯಾಗಿ ದಿನಕ್ಕೆ ಮೂರು ಹೊತ್ತು ಮನೆಯ ಪಾಕವೇ ಗತಿಯಾದ್ದರಿಂದ ಎಲ್ಲರಂತೆ ನಾನೂ ಸಹ ಕುಕಿಂಗ್ ಶೋ, ರೆಸಿಪಿಗಳನ್ನು ಹುಡುಕಿಕೊಂಡು ಹೋಗಿರುವುದು ಇತ್ತೀಚಿನ ಬೆಳವಣೆಗೆಗಳಲ್ಲೊಂದು!  ಮೊದಲೆಲ್ಲವಾದರೆ, ಮಧ್ಯಾಹ್ನದ ಊಟಕ್ಕೆ ಸಾಕಾಗುವಷ್ಟು ಬೆಳಿಗ್ಗೆಯೇ ಡಬ್ಬಿಯಲ್ಲಿ ಕಟ್ಟಿಕೊಂಡು ಹೋಗಿ, ಆಫೀಸಿನ ಕೆಲಸದ ಮಧ್ಯೆ ಮೈಕ್ರೋವೇವ್ ಅವನ್‌ನಲ್ಲಿ ಬಿಸಿಮಾಡಿಕೊಂಡು ತಿಂದ ಹಾಗೆ ಶಾಸ್ತ್ರ ಮಾಡುವುದನ್ನು ಊಟವೆಂದು ಕರೆಯುತ್ತಿದ್ದೆವು.  ಕೊರೋನಾ ವೈರಸ್ಸಿನ ಸಹಾಯದಿಂದಾಗಿ ನಾವು ಈಗ ಮನೆಯಲ್ಲೇ ಬಿಸಿಬಿಸಿಯಾಗಿ ಮತ್ತು ಸಮಯಕ್ಕೆ ಸರಿಯಾಗಿ ಒಂದು ರೀತಿಯಲ್ಲಿ "ಸಾತ್ವಿಕ"ವಾಗಿ ಆಹಾರವನ್ನು ಸವಿದು ಸೇವಿಸುತ್ತಿದ್ದೇವೆಂದರೆ ಅತಿಶಯೋಕ್ತಿಯೇನಲ್ಲ!

***
ಅಮೇರಿಕಕ್ಕೆ ಬಂದು ಎರಡು ದಶಕದ ಮೇಲಾದರೂ ಇವತ್ತಿಗೂ ನಾನು ಭಾರತದ ಅನುಕೂಲಗಳ ಪೈಕಿ ಅತ್ಯಂತ ಮಿಸ್ ಮಾಡಿಕೊಳ್ಳುವುದೆಂದರೆ ಹೊಟೆಲ್/ಖಾನಾವಳಿಯಲ್ಲಿ ದೊರೆಯುವ ಸಾಂಬಾರು, ಪಲ್ಯಗಳು, ಸರಿ ರಾತ್ರಿ ಎರಡು-ಮೂರು ಘಂಟೆಯವರೆಗೂ ಬಸ್‌ಸ್ಟ್ಯಾಂಡಿನ ಬದಿಯಲ್ಲಿ ಇಟ್ಟುಕೊಂಡ ಚಾ ಅಂಗಡಿಗಳು, ಯಾವತ್ತಿಗೂ ಎಲ್ಲೆಲ್ಲಿಯೂ ಸಿಗುವ ಇಡ್ಲಿ-ಚಟ್ಣಿಗಳು!  ನಾನು ವಿದ್ಯಾರ್ಥಿ ದೆಸೆಯಿಂದಲೇ (ಸುಮಾರು ಹದಿನೈದು ವರ್ಷ ವಯಸ್ಸಿನವಾಗಿದ್ದಾಗಿನಿಂದ) ಮನೆಯಿಂದ ಹೊರಗೆ ಉಳಿದವನಾಗಿದ್ದರಿಂದ ಈ ಹೊಟೇಲು-ಖಾನಾವಳಿಗಳಲ್ಲಿ ಎರಡು ರೂಪಾಯಿಗೆ ಕೊಡುತ್ತಿದ್ದ ಸಾಂಬಾರು-ಪಲ್ಯಗಳು ಎಷ್ಟೋ ಸಾರಿ ದಿನದ ಹಸಿವನ್ನ ತಣಿಸಿವೆ ಎನ್ನಬಹುದು.  ಅದೂ ಪರೀಕ್ಷೆ ಹತ್ತಿರ ಬರುತ್ತಿದ್ದ ಸಂದರ್ಭಗಳಲ್ಲಿ ನನ್ನ ರೂಮಿನಲ್ಲಿ ಒಂದಿಷ್ಟು ಅನ್ನ ಮಾಡಿಕೊಂಡು ಹತ್ತಿರದ ಹೊಟೇಲಿನಿಂದ ಸಾರು ತಂದು ಊಟ ಮಾಡಿದ ದಿನಗಳು ಎಷ್ಟೋ ಇವೆ. ಅಲ್ಲದೇ ರಾತ್ರಿಯ ಹೊತ್ತು ಓದಿ ಬೋರಾದರೆ ಸ್ನೇಹಿತರ ಜೊತೆಗೆ ಎಷ್ಟು ಹೊತ್ತಿಗೆ ಬೇಕಾದರೂ ಟೀ ಕುಡಿಯಲು ಕೈಗಾಡಿಗಳ ಬಳಿಗೆ ಹೋಗಬಹುದಿತ್ತು.

ಅಮೇರಿಕದಲ್ಲಿ ಊಬರ್ ಈಟ್ಸ್ ಇರಲಿ ಮತ್ತೊಂದು ಇರಲಿ, ಆಗ ಅಲ್ಲಿ ಸಿಗುತ್ತಿದ್ದ ಅನುಕೂಲಗಳನ್ನು ಮಾತ್ರ ಸೃಷ್ಟಿಸಲಾರವು.  ಒಂದು ರೀತಿಯಲ್ಲಿ ಇವತ್ತಿಗೂ ಭಾರತದಲ್ಲಿ ಈ ರೀತಿಯ ಸರ್ವಿಸುಗಳು ಇರಬಹುದೇನೋ.  ಆಗ ಜೇಬಿನಲ್ಲೆಲ್ಲಾ ಹತ್ತು ರೂಪಾಯಿ ಇದ್ದರೆ ಅದು ಬಹಳ "ದೂರ" ಬರುತ್ತಿತ್ತು... ಈಗಂತೂ ಹಣದುಬ್ಬರ ಹಣದ ಬೆಲೆಯನ್ನೇ ತಿಂದು ಹಾಕಿತಂತಾಗಿ, ನೂರು ರೂಪಾಯಿ ನೋಟಿನಲ್ಲಿ ಗಾಂಧೀ ಮುಖವೂ ಬಾಡಿದಂತಿದೆ.

***
ನಮ್ಮ ಭಾರತೀಯ ಆಹಾರ ಪದ್ಧತಿಯನ್ನು ಎಷ್ಟು ಕೊಂಡಾಡಿದರೂ ಸಾಲದು.  ಈ ಸಾಲನ್ನು ಬರೆಯಲು ನನಗೆ ಯಾವ ಅಥಾರಿಟಿಯೂ ಇಲ್ಲ, ಹಾಗೆ ಇರಬೇಕೆಂದೇನೂ ಇಲ್ಲ... ಶತಮಾನಗಳಿಂದ ನಮ್ಮ ಆಹಾರ ಪದ್ದತಿ ಬಹಳಷ್ಟು ಬೆಳೆದು ಬಂದಿದೆ.  ಈ ಕೊರೋನಾ ವೈರಸ್ ಸೃಷ್ಟಿಸಿದ ಒಂದು ತಾತ್ಕಾಲಿಕ ನಿರ್ವಾತವನ್ನು ಮುಚ್ಚಿಕೊಳ್ಳಲು ನಾವೆಲ್ಲ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿರುವಂತೆ, ಇತ್ತೀಚೆಗೆ ನಾನು ನಡೆಸಿದ "ಸಾತ್ವಿಕ" ಆಹಾರದ ಬಗ್ಗೆ "ಸಂಶೋಧನೆ"ಯೂ ಒಂದು... ಅದರ ಬಗ್ಗೆ ಇನ್ನೊಮ್ಮೆ ಬರೆದರೆ ಆಗದೇ?!

ನಿಮಗೆ ಹೊತ್ತು ಹೊತ್ತಿಗೆ ಊಟ-ತಿಂಡಿಯ ಅಗತ್ಯವೇನು ಅದರ ಮಹತ್ವವೇನು ಎಂದು ತಿಳಿಯಲು ಹೆಚ್ಚಿನ ಅಧ್ಯಯನವನ್ನೇನೂ ಮಾಡಬೇಕಾಗಿಲ್ಲ... ಇಬ್ಬರು ಮಿಡ್ಲ್‌ಸ್ಕೂಲ್ ಮಕ್ಕಳನ್ನು ಮೂರು ತಿಂಗಳು ಮನೆಯಲ್ಲೇ ಇಟ್ಟುಕೊಂಡು ಸಮಯಕ್ಕೆ ಸರಿಯಾಗಿ ಊಟಕೊಟ್ಟು ಅವರನ್ನು ಸಾಕಿ ನೋಡಿ... ನಿಮಗೆ ಗೊತ್ತಿರದಂತೆ ನೀವೊಬ್ಬ ದೊಡ್ಡ ಎಕ್ಸ್‌ಪರ್ಟ್ ಆಗಿರುತ್ತೀರಿ!

Thursday, December 31, 2009

ಯಾರೂ ಇದರ ಬಗ್ಗೆ ಏಕೆ ಮಾತನಾಡಲ್ಲ?

ಸದ್ಯ, ಈ ದಿನ ಪ್ರಜಾವಾಣಿ ಮುಖಪುಟ ತೆರೆದು ನೋಡ್ತಾಗ ಮೃತ್ಯುದೇವತೆ ಕನ್ನಡದ ಅಭಿಮಾನಿಗಳ ಮೇಲೆ ಹ್ಯಾಟ್ರಿಕ್ ಹೊಡೆತವನ್ನೇನೂ ಕೊಟ್ಟಿರಲಿಲ್ಲ ಎಂದು ಸಮಾಧಾನ ಮೂಡಿತು.  ಕೊನೆಗೆ ಆದ ಘಟನೆಗಳ ಸಿಂಹಾವಲೋಕನ ಮಾಡಲಾಗಿ ಅಭಿಮಾನಿಗಳು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡುತ್ತಿದ್ದುದನ್ನು ನೋಡಿ ಅವರ ತರ್ಕವೇನು ಎಂದು ಯೋಚಿಸಿ ಮನ ಹೆಣಗಿತು, ಇವೆಲ್ಲದರ ನಡುವೆ ವಿಷ್ಣುವರ್ಧನ್ ಕೇವಲ ೫೯ ವರ್ಷಕ್ಕೆ ಸಾಯಲು ಕಾರಣವೇನಿರಬಹುದು ಎಂದು ಆಶ್ಚರ್ಯವೂ ಆಯಿತು.

 

ನಮ್ಮ ನಂಬಿಕೆಯ ಪ್ರಕಾರ ಆಯಸ್ಸು ತೀರಿದವರು ಎಲ್ಲಿದ್ದರೂ ಮೃತ್ಯುದೇವತೆಯನ್ನು ವಂಚಿಸಲಾಗದು ಎನ್ನುವುದನ್ನು ತಲೆಯ ಒಂದು ಬದಿಯಲ್ಲಿಟ್ಟುಕೊಂಡೇ ಮತ್ತೊಂದು ಕಡೆ ವೈದ್ಯಕೀಯ ವಿಜ್ಞಾನ ಇಷ್ಟೊಂದು ಬೆಳೆದಿರುವಾಗ ವಿಕ್ರಂ ಆಸ್ತ್ಪತ್ರೆಯ ವೈದ್ಯರು ರಾತ್ರಿ ಕಾಡಿದ ಎದೆನೋವಿನ ಮೂಲಕಾರಣವನ್ನು ಪತ್ತೆಹಚ್ಚುವಲ್ಲಿ ವಿಫಲರಾದರೇನೋ ಎಂದು ಬಲವಾದ ಸಂಶಯ ಕೂಡ ಬಂತು.  ಒಬ್ಬ ೫೯ ವರ್ಷದ ಮನುಷ್ಯ, ಯಾರೇ ಇರಲಿ, ಎದೆ ನೋವು ಎಂದು ರಾತ್ರಿ ಹತ್ತು ಘಂಟೆಗೆ ಆಸ್ಪತ್ರೆಗೆ ಬಂದರೆ ಅಂಥವರನ್ನು ಅಡ್ಮಿಟ್ ಮಾಡಿಕೊಳ್ಳದೇ ಹೇಗೆ ಮನೆಗೆ ಕಳುಹಿಸುತ್ತೀರಿ?  ಮಾಡಬೇಕಾದ ಸ್ಕ್ಯಾನಿಂಗ್ ಎಲ್ಲವನ್ನೂ ಮಾಡಿದ್ದೀರೋ? ಅಥವಾ ಪೇಷೆಂಟ್ ತಮ್ಮ ಸ್ವ-ಇಚ್ಚೆಯಿಂದ ಸೈನ್-ಔಟ್ ಮಾಡಿ ಮನೆಗೆ ಹೋದರೋ?

 

ಅಮೇರಿಕದಲ್ಲಿ ಕುಳಿತ ನಮಗೆ ಈ ರೀತಿಯ ಒಣತರ್ಕ ಮಾಡಲು ಸುಲಭ, ಇಲ್ಲಿನ ಲಿಟಿಗೇಶನ್ ವ್ಯವಸ್ಥೆ ಏನೇನೋ ಅನಾನುಕೂಲಗಳನ್ನು ಕಲ್ಪಿಸಿದ್ದರೂ ಈ ರೀತಿ ಯೋಚಿಸುವ ಮನಸ್ಥಿತಿಯನ್ನಾದರೂ ಹುಟ್ಟಿಸಿದೆ ಎನ್ನುವುದು ದೊಡ್ಡ ವಿಷಯ.  ಯಾರಾದರೂ ವಿಕ್ರಂ ಆಸ್ಪತ್ರೆಯ ಚಾರ್ಟ್ ತೆಗೆದು ನೋಡಿದ್ದಾರಾ? ಅಂದು ರಾತ್ರಿ ಕಾಲ್‌ನಲ್ಲಿ ಇದ್ದ ಆಸ್ಪತ್ರೆ ಸಿಬ್ಬಂದಿ ಯಾರು? ಅವರು ಏನೇನು ಪರೀಕ್ಷೆಗಳನ್ನು ಮಾಡಿದ್ದಾರೆ, ರೋಗಿಯನ್ನು ಹೊರಹೋಗಲು ಬಿಡುವ ಮುನ್ನ ಯಾವ ಯಾವ ಎಚ್ಚರಿಕೆಗಳನ್ನು ಕೊಟ್ಟಿದ್ದಾರೆ?  ಏನಾದರೂ ಔಷಧಿ-ಮದ್ದನ್ನು ಕೊಟ್ಟಿದ್ದಾರೋ ಅಥವಾ ಮರುದಿನ ಮತ್ತೆ ಬರಲು ತಿಳಿಸಿದ್ದಾರೋ? ವಿಕ್ರಂ ಆಸ್ಪತ್ರೆ ಚಿಕ್ಕದ್ದಿದ್ದು ಅಲ್ಲಿ ರೋಗಿಯನ್ನು ಇಟ್ಟುಕೊಳ್ಳಲಾಗದಿದ್ದರೆ ಹತ್ತಿರದ ದೊಡ್ಡ ಆಸ್ಪತ್ರೆಗೇನಾದರೂ ವಿಷಯ ತಿಳಿಸಿದ್ದರೋ? ಇತ್ಯಾದಿ ಪ್ರಶ್ನೆಗಳು ಪ್ರಶ್ನೆಗಳಾಗೇ ಉಳಿಯುತ್ತವೆ, ಯಾರೂ ಇದರ ಬಗ್ಗೆ ಮಾತನಾಡಿದ್ದನ್ನು ನಾನು ಕೇಳಲಿಲ್ಲ/ಕಾಣಲಿಲ್ಲ.

 

ಆದದ್ದು ಆಯ್ತು, ಎಂದು ಸುಮ್ಮನೆ ಬಿಟ್ಟು ಬಿಡಬಹುದಾದ ವಿಷಯ ಇದಲ್ಲ.  ರೋಗಿ/ವ್ಯಕ್ತಿ ಯಾರೇ ಆಗಿದ್ದರೂ ಆಸ್ಪತ್ರೆ/ವೈದ್ಯರು ತಮ್ಮ-ತಮ್ಮ ಕರ್ತವ್ಯವನ್ನು ಪಾಲಿಸಲೇಬೇಕು, ಕೊನೇಪಕ್ಷ ಈ ಘಟನಾವಳಿಗಳಲ್ಲಿ ತಪ್ಪೇನಾದರೂ ನಡೆದಿದ್ದು ಸಾಬೀತಾದರೆ ಇನ್ನು ಮುಂದೆ ಹೀಗಾಗದಂತೆ ನೋಡಬೇಕು.

 

ಅದೇ ರೀತಿ ಅಶ್ವಥ್ ಸಾವೂ ಕೂಡಾ ಅನಿರೀಕ್ಷಿತ ಎಂದೇ ಹೇಳಬೇಕು.  ವೈದ್ಯರು ಇನ್ನೇನು ಗುಣಮುಖರಾಗುತ್ತಾರೆ ಎಂದು ಹೇಳಿದ್ದರಂತೆ, ಏನು ತೊಂದರೆ ಆಯಿತೋ? ಕಿಡ್ನಿ-ಲಿವರ್ ತಮ್ಮ ಸಾಮರ್ಥ್ಯಗಳಲ್ಲಿ ಕ್ಷೀಣಿಸುತ್ತಾ ಬಂದಂತೆ ಅದನ್ನು ಮೊದಲೇ ಪತ್ತೆ ಹಚ್ಚಿ ಯಾವುದಾದರೂ ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡಿದ್ದರೋ ಇಲ್ಲವೋ.  ಕ್ಷಮಿಸಿ, ನಾನು ವೈದ್ಯನೇನಲ್ಲ, ಈ ರೀತಿ ಪ್ರಶ್ನೆಗಳನ್ನು ಹಾಕುತ್ತಿರುವುದು ಉದ್ಧಟತನದಿಂದಲ್ಲ, ಕೇವಲ ಕುತೂಹಲದಿಂದ ಮಾತ್ರ.  ಎಲ್ಲೋ ಕುಳಿತು ಇನ್ನೆಲ್ಲಿಯೋ ಸರ್ಜರಿ ಮಾಡುವು ಇಂದಿನ ವೈದ್ಯಕೀಯ ವ್ಯವಸ್ಥೆಯಲ್ಲಿ ಇಬ್ಬರು ಮಹಾಚೇತನಗಳನ್ನು ಎರಡು ದಿನಗಳಲ್ಲಿ ಕಳೆದುಕೊಂಡು ರೋಧಿಸುವ ಅಭಿಮಾನಿ ಈ ರೀತಿಯ ಪ್ರಶ್ನೆಗಳನ್ನು ಕೇಳುವುದು ಸಹಜವೆಂದುಕೊಂಡಿದ್ದೇನೆ.

 

ನಿಮಗೇನಾದರೂ ಹೆಚ್ಚು ತಿಳಿದಿದ್ದರೆ ನಮಗೂ ಸ್ಪಲ್ಪ ತಿಳಿಸಿ.

 

image

(ಕೃಪೆ: ಪ್ರಜಾವಾಣಿ)

Wednesday, December 30, 2009

ಶ್ರದ್ದಾಂಜಲಿ...ವಿಷ್ಣು, ಅಶ್ವಥ್ ಇನ್ನಿಲ್ಲ

೨೦೦೯ ಸುಮ್ನೇ ಹೋಗಲಿಲ್ಲ...ತನ್ನ ಕೊನೆಯ ದಿನಗಳಲ್ಲಿ ಎರಡು ಮಹಾನ್ ಚೇತನಗಳನ್ನ ತನ್ನ ಜೊತೆ ತೆಗೆದುಕೊಂಡು ಹೋಯ್ತು...ಇನ್ನೂ ಒಂದು ದಿನ ಬಾಕಿ ಇದೆ ವರ್ಷದ ಬಾಬ್ತು ಮುಗಿಯೋದಕ್ಕೆ ಅನ್ನೋದು ಹೆದರಿಕೆಯ ವಿಷಯವೇ, ಏನೇನು ಆಗಲಿಕ್ಕೆ ಇದೆಯೋ!

 

ಕೆಲವು ತಿಂಗಳುಗಳ ಹಿಂದೆ ಅಶ್ವಥ್ ಅಮೇರಿಕಕ್ಕೆ ತಮ್ಮ ತಂಡದವರೊಂದಿಗೆ ಬಂದು ನಮಗೆಲ್ಲ ಸುಗಮ ಸಂಗೀತದ ರಸದೌತಣವನ್ನು ನೀಡಿದ್ದರು, ಅವರು ಇನ್ನಿಲ್ಲ...ತಾನು ಹುಟ್ಟಿದ ದಿನವೇ ಸಾಯುವ ಕಾಕತಾಳೀಯವನ್ನು ಬಹಳ ಜನ ಕಾಣಲಾರರು, ಅಂಥವರಲ್ಲಿ ಅಶ್ವಥ್ ಅವರು ಒಬ್ಬರು, ಇಂದಿಗೆ ಅವರಿಗೆ ಬರೋಬ್ಬರಿ ಎಪ್ಪತ್ತು ವರ್ಷ.

 

ashwath241209_1

***

 

ವಿಷ್ಣುವರ್ಧನ್, ಕೇವಲ ೫೯ ವರ್ಷಕ್ಕೆ ಹೃದಯಾಘಾತಕ್ಕೆ ಈಡಾಗುತ್ತಾರೆ ಎಂದು ಯಾರೂ ಎಣಿಸಿರಲಿಕ್ಕಿಲ್ಲ.  ಇತ್ತೀಚೆಗಷ್ಟೇ ಯಾವುದೋ ಉದಯ ಟಿವಿ ಕಾರ್ಯಕ್ರಮವನ್ನು ತೋರಿಸಿ ’ಪರವಾಗಿಲ್ಲ, ವಿಷ್ಣು ತನ್ನ ಫಾರ್ಮ್ ಚೆನ್ನಾಗಿ ಕಾಪಾಡಿಕೊಂಡಿದ್ದಾರೆ!’ ಎಂದು ಹೇಳಿದ್ದು ನನಗೆ ಚೆನ್ನಾಗಿ ನನಪಿದೆ.

 

vishnuvardhan-6677

***

ಈ ಇಬ್ಬರು ಕನ್ನಡದ ಚೇತನಗಳಿಗೆ "ಅಂತರಂಗ"ದ ನಮನ, ಅವರ ಆತ್ಮಗಳು ಶಾಂತಿಯಿಂದಿರಲಿ, ಹಾಗೂ ಮತ್ತೊಮ್ಮೆ ಕನ್ನಡ ನಾಡಲ್ಲೇ ಹುಟ್ಟಿ ಬರಲಿ.

 

picture source:

http://www.indiaglitz.com/channels/kannada/article/52939.html

http://entertainment.oneindia.in/tag/vishnuvardhan

Wednesday, May 06, 2009

ಬೆಂಗಳೂರ್ ಹೋಯ್ತು ಬಫೆಲೋ ಬಂತು - ಡುಂ! ಡುಂ!

’ಲೋ, ಒಳ್ಳೇ ನಾಯ್ಕನನ್ನೇ ಆರ್ಸಿಕೊಂಡಿದ್ದೀರಿ ಕಣ್ರೋ!’ ಎಂದಿದ್ದು ಇನ್ಯಾರು ಅಲ್ಲ - ನಮ್ ಸುಬ್ಬ.
ಸುಮ್ನೇ ಕುಶಾಲಕ್ಕೆ ’ಹೆಂಗಿದ್ಯೋ?’ ಅಂತ ಫೋನ್ ಕಾಲ್ ಮಾಡಿದ್ರೆ ತಗಳಾಪ್ಪಾ ಪೂರ್ತಿ ರಾಮಾಯ್ಣನೇ ಶುರು ಹಚ್ಚಿಕೊಂಬಿಟ್ನಲ್ಲಾ!

ಮತ್ತೆ ಮುಂದುವರೆಸುತ್ತಾ, ’...ಬೆಂಗ್ಳೂರಿಗೂ ಬಫೆಲೋಗೂ ಎಲ್ಲಿಯ ಹೋಲಿಕೆ ಹೊಂದಾಣಿಕೆ, ಏನೋ ಕರಿಯರ ನಾಯ್ಕ ಅಂತ ಸುಮ್ನೇ ಇದ್ದಿದ್ದಕ್ಕೆ ಸಪೋರ್ಟ್ ಮಾಡಿದ್ದಕ್ಕೆ ತಂದ್ನಲ್ಲಪ್ಪಾ ಕಾಣಿ. ಒಂದಿಷ್ಟ್ ಜನ ಅವ್ನನ್ನ ಮುಸ್ಲಿಮ್ ಅಂತಾರೆ, ಒಂದಿಷ್ಟ್ ಜನ ಅವನನ್ನ ಬಿಳಿಯ ಅಂತಾರೆ, ಒಂದಿಷ್ಟು ಜನ ಅವನೇ ದೇವ್ರು ಅಂತ ಕೊಂಡಾಡ್ತಾರೆ, ಒಳ್ಳೇ ಬ್ರೂಸ್ ಆಲ್‌ಮೈಟ್ ಕಥೆ ಆಯ್ತು ನೋಡು!’ ಎಂದು ಸುಮ್ಮನಾದ.

’ಯಾರೋ ಮುಸ್ಲೀಮ್, ಅವನೋ ಚರ್ಚಿಗೆ ಹೋಗೋ ಒಳ್ಳೇ ಕ್ರಿಶ್ಚಿಯನ್ನ್ ಅಲ್ವೇ?’ ಎನ್ನೋ ಪ್ರಶ್ನೆಯನ್ನ ತಾಳಲಾರದೆ ತಾಳಿಕೊಂಡು,
’ಲೋ, ಹುಸೇನ್ ಅಂತ ಮಿಡ್ಲ್ ನೇಮ್ ಇಟ್ಟುಕೊಂಡು ಮಿಡ್ಲ್ ಈಸ್ಟ್ ನಲ್ಲಿ ಪಾಪ್ಯುಲ್ಲರ್ ಅಗೀರೊ ಬರಾಕ್ ಅಂದ್ರೆ ಏನ್ ಅಂತ ತಿಳುಕೊಂಡಿದೀಯಾ? ಬರಾಕ್‍ಗೆ ಬಹು ಪರಾಕ್! ಹಹ್ಹಹ್ಹ...’ ಎಂದು ದೊಡ್ಡದಾಗಿ ನಗಾಡಿದ.

’ಹ್ಞೂ, ಅದಿರ್ಲಿ, ಬೆಂಗ್ಳೂರಿನವರು ಏನಂತಾರೆ?’

’ಬೆಂಗ್ಳೂರಿಗೂ ಬಫೆಲ್ಲೋಗೂ ಏನು ತಾಳೆ ಗುರುವೇ? ವರ್ಷದ ಆರು ತಿಂಗಳು ಆರು ಅಡಿ ಸ್ನೋನಲ್ಲಿ ಮುಚ್ಚಿರೋ ನಗರಕ್ಕೂ ಸೌತ್ ಇಂಡಿಯನ್ ಸ್ವರ್ಗಕ್ಕೂ ಎಲ್ಲಿಂದೆಲ್ಲಿಯ ಸಂಬಂಧ? ಈ ನನ್ ಮಕ್ಳು ನಮ್ಮಲ್ಲಿನ ರಸವನ್ನೆಲ್ಲ ಹೀರಿಕೊಂಡು ಈಗ ಸಿಪ್ಪೆ ಬಿಸಾಡಿದ ಹಾಗಾಯ್ತು. ನನ್ ಕೇಳಿದ್ರೆ ಔಟ್‌ಸೋರ್ಸಿಂಗ್ ವಿರುದ್ಧ ತಿರುಗಿ ಬಿದ್ದಿರೋ ಅಮೇರಿಕನ್ಸ್ ನೀತಿ ವಿರೋಧಿಸಿ ದೊಡ್ಡ ರ್ಯಾಲಿ ಆಗಬೇಕು. ಏನ್ ಆದ್ರೆ ಏನಂತೆ, ಇವೆಲ್ಲ ಕ್ವಾಣನ ಮುಂದೆ ಕಿನ್ನರಿ ಬಾರಿಸಿದಂಗೇ ಸೈ’.

’ಅಂದ ಹಾಗೆ, ನ್ಯೂ ಯಾರ್ಕ್ ರಾಜ್ಯದ ಬಫೆಲ್ಲೋಗೂ ಕಾಡು ಎಮ್ಮೆಗೂ ವ್ಯತ್ಯಾಸವಿದೆ ಗೊತ್ತಲ್ವಾ? ನಮ್ ನ್ಯೂಸ್ ಪೇಪರ್ರ್‌ಗಳು ಎಮ್ಮೆ-ಕ್ವಾಣ ಅಂತ ಬರೆಯೋಕ್ ಮುನ್ನ ಸ್ವಲ್ಪ ಯೋಚಿಸ್ಲಿ ಅಂತ ಹೇಳ್ದೆ ಅಷ್ಟೇ...’

’ಏನಾದ್ರೂ ಹಾಳಾಗ್ ಹೋಗ್ಲಿ ಬಿಡು, ಈಗಿನ ಕಾಲ್ದಲ್ಲಿ ನ್ಯೂಸ್ ಪೇಪರ್ ಓದೋರ್ ಯಾರು? ಎಲ್ಲರೂ ದಿವಾಳಿ ಆಗ್ಲಿ, ಅಡ್ವರ್‌ಟೈಸ್ ರೆವಿನ್ಯೂ ನಂಬಿಕೊಂಡಿರೋ ನ್ಯೂ ಯಾರ್ಕ್ ಟೈಮ್ಸ್ ಬಂಡವಾಳವೇ ಅಲುಗಾಡ್ತಾ ಇರುವಾಗ ಇನ್ನು ರೀಜನಲ್ಲ್ ನ್ಯೂಸ್ ಪ್ರಿಂಟ್‌ಗಳ ಕಥೆ ದೇವ್ರೆ ಕಾಪಾಡ್‌ಬೇಕು.’

’ಮತ್ತೇನಾದ್ರೂ ಇದೆಯಾ? I got to go' ಎಂದೆ.

’ಏನೂ ಇಲ್ಲ, ಬೆಂಗ್ಳೂರ್ ಹೋಯ್ತು, ಬಫೆಲ್ಲೋ ಬಂತು, ಡುಂ, ಡುಂ!’ ಎಂದ, ಕಾಲ್ ಕತ್ತರಿಸಿದೆ.

Sunday, April 05, 2009

ಸಗಣಿಯೊಳಗಿನ ಹುಳಗಳೂ ಬಾವಿ ಕಪ್ಪೆಗಳೂ...



























ಮಾರ್ಚ್ ೨೯ ರ ವಿ.ಕ.ದಲ್ಲಿ ’ಜನಗಳ ಮನ’ದಲ್ಲಿ ರವಿ ರೆಡ್ಡಿ ಹಾಗೂ ಜಗದೀಶ್ ರಾವ್ ಕಲ್ಮನೆಯವರ ಬಗ್ಗೆ ಓದಿ ಹೀಗನಿಸಿದ್ದು ನಿಜ.

ಹ್ಞೂ, ’ಇಂಥವರ ಬಗ್ಗೆ ಎರಡು ಸಾಲು ಬರೆದರೂ ಜಾಗ ವೇಷ್ಟು’ ಎಂದಿದ್ದಾರಲ್ಲವೇ? ಜೊತೆಗೆ, ’...ಬೆಂಗಳೂರು ಸುಧಾರಣೆಯಾಗಬೇಕಿದೆ.’ ಎನ್ನುವ ಕುಹಕ ಅಲ್ಲ, ನಿಜ ಸ್ಥಿತಿ ಬೇರೆ ಕೇಡಿಗೆ.

***

’ನಾವು ಭಾರತೀಯರೂ, ಒಹೋಯ್!’ ಎಂದು ಮೊನ್ನೆ ಮೊನ್ನೆ ತಾನೆ ಅಶ್ವಥ್ ಕೂಗಿ ಹೋಗಿದ್ದರಲ್ಲವೇ? ಸಗಣಿಯೊಳಗಿನ ಹುಳುಗಳಿಗೆ ಅದೇ ಪ್ರಪಂಚ, ಒಂದು ವೇಳೆ ಅವುಗಳನ್ನೇನಾದರೂ ಯಾರಾದರೂ ಎತ್ತಿ ಹೊರಗೆ ಬಿಟ್ಟರೂ ಮತ್ತೆ ಸಗಣಿಯೊಳಗೆ ಸಿಗುವ ಸುಖಕ್ಕೆ ಜೋತು ಬೀಳುವ ಜಾತಿ. ಹಾಗೇ ಬಾವಿ ಕಪ್ಪೆಗಳೂ ಕೂಡ, ತಮ್ಮದೇ ಪ್ರಪಂಚದಲ್ಲಿ ತಾವೇ ದೊಡ್ಡವರು ಎಂದುಕೊಂಡ ಹಾಗೆ.

ಇವೇ ಅತಿರಥ-ಮಹಾರಥರು ಅಮೇರಿಕದ ಸಮ್ಮೇಳನಗಳಿಗೆ ಬಂದಾಗ ಬಾಲ ಮುದುರಿಕೊಂಡು ತಮಗೆ ತೋಚಿದ್ದನ್ನ ಬರೀತಾರೇ ವಿನಾ ಯಾರೊಬ್ಬರ ಹೆಸರಿಗೂ ಮಸಿ ಬಳಿಯುವ ಕಾಯಕಕ್ಕಂತೂ ಕೈಗೂಡಿದ್ದನ್ನ ನಾನು ನೋಡಿಲ್ಲ. ಎಲ್ಲದಕ್ಕಿಂತ ಮುಖ್ಯವಾಗಿ ಅಮೇರಿಕದಲ್ಲಿ ಇನ್ನೂ ಮುಗಿಯದೇ ಇದ್ದ ’ಬಾಲ್ಟಿಮೋರ್ ಸಮ್ಮೇಳನ’ವನ್ನು ಈಗಾಗಲೇ ಮುಗಿದು ಹೋಯಿತು ಎಂದು ವರದಿಯನ್ನು ಹೊರಗೆ ಹಾಕಿದ್ದಕ್ಕೂ ಒಂದು ಅಪಾಲಜಿ ಇವುಗಳ ಮುಸುಡಿಯಿಂದ ಹೊರಡಲ್ಲ. ಇದ್ದ ಬದ್ದ ಸುದ್ದಿಗೆ ಒಂದಿಷ್ಟು ಕಣ್ಣೊರೆಸುವ ಚಾಕಚಕ್ಯತೆಯನ್ನು ಮುಟ್ಟಿಸಿ ಸುಳ್ಳಿನ ಮೇಲೆ ನೂರೆಂಟು ಸುಳ್ಳನ್ನು ಹೇಳೋ ಪದ್ಧತಿಯೂ ಇನ್ನೂ ನಿಂತ ಹಾಗಿಲ್ಲ.

***

’ಮೌಲ್ಯ’ವೆಂದರೇನು ಎಂದು ತಿಳಿದು ಅದನ್ನು ಪಚನ ಮಾಡಿಕೊಳ್ಳಲು ಇನ್ನೂ ಒಂದೈದು ಸಾವಿರ ವರ್ಷಗಳಾಗಬೇಕು ನಮಗೆ. ಇನ್ನು ಮೌಲ್ಯವನ್ನು ಆಧರಿಸಿದ ರಾಜಕಾರಣವೆಂದರೇನದು? ನಾವೆಲ್ಲ ಕುರಿಗಳು ಎಂದು ಕವಿಗಳು ಆಡಿ ಅಣಗಿಸಲಿಲ್ಲವೇ? ಅಂಥ ಕುರಿಗಳ ಮಂದೆಗೆ ಅಮೇರಿಕದೊಂದಿಷ್ಟು ಜನ ಪಾಪ ಏನೋ ಸಹಾಯವಾಗಲಿ ಎಂದು ಮನೆ-ಮಠ ಬಿಟ್ಟು, ಇರುವ ರಜಾ ವಜಾ ಮಾಡಿಕೊಂಡು, ಕೈಯಲ್ಲಿನ ಕಾಸು ಕರಗುವ ವರೆಗೂ ಪ್ರಯತ್ನ ಮಾಡುವ ಗೋಜಿಗಾದರೂ ಹೋಗುತ್ತಾರಲ್ಲ ಅದೇ ಮುಖ್ಯ.

ಐವತ್ತು ವರ್ಷಗಳಿಂದ ಚಲಾವಣೆಯಲ್ಲಿದ್ದ ಸಂವಿಧಾನ ಬದ್ಧ ’ಬಾವುಟ ಹಾರಿಸುವ ಕಾಯಿದೆ’ಯನ್ನು ಮುರಿದು ನಮ್ಮ ದೇಶದ ಬಾವುಟವನ್ನು ನಾವು ನಮ್ಮ ಮನೆ ಮುಂದೆ ಹಾರಿಸಿದರೆ ತಪ್ಪೇ? ಎಂದು ಸಾಧಿಸಿಕೊಂಡಿದ್ದು ನಮ್ಮಂಥ ಒಬ್ಬ ಅನಿವಾಸಿಯೇ.
ಅಮೇರಿಕದಲ್ಲಿ ಓದಿಕೊಂಡು, ಸದನದಲ್ಲಿ ಹಲವು ಹುದ್ದೆಗಳನ್ನು ಅಲಂಕರಿಸಿ ಮುಂದೆ ಒಬ್ಬ ಪ್ರತಿಭಾವಂತ ಮುಖ್ಯಮಂತ್ರಿ ಎಂದು ಎಸ್. ಎಮ್. ಕೃಷ್ಣ ಹೆಸರು ತೆಗೆದುಕೊಳ್ಳಲಿಲ್ಲವೇ?

***

ಇಂಥವರ ಬಗ್ಗೆ ಬರೀ ಬೇಡ್ರಿ, ನಿಮ್ಮ ಮೂರುಕಾಸ್ ಪತ್ರಿಕೆಯಲ್ಲಿ, ಯಾರ್ ಕೇರ್ ಮಾಡ್ತಾರೆ? ಹಾಗೆ ಬರೆಯದೇ ಉಳಿದ ಜಾಗೆಯಲ್ಲಿ ಅವೇ-ಅವೇ ಪ್ರಭೃತಿಗಳ ದರ್ಶನ ಮಾಡಿಸಿಕೊಂಡು ಸುಖವಾಗಿರಿ. ಲಂಚ, ಭ್ರಷ್ಟಾಚಾರ ಅನ್ನೋದು ಹಾಡು ಹಗಲಿನ ದಂದೆಯಾಗಿದ್ದರೂ ಅದನ್ನು ಇದ್ದ ಹಾಗೆ ಬರೆದು ವರ್ಷಕ್ಕೊಬ್ಬ ಪುಂಡು ರಾಜಕಾರಣಿಯನ್ನಾದರೂ ಜೈಲಿಗೆ ಸೇರಿಸಿದ್ದೇ ನಿಜವಾಗಿದ್ದರೆ ಪತ್ರಿಕೆ ಪಾವನವಾಗುತ್ತಿತ್ತು, ಹಾಗಾಗೋದಿಲ್ಲ ಎಂದ ಮೇಲೆ ತಿಪ್ಪೇ ಸಾರಿಸಿಕೊಂಡೇ ಬಿದ್ದಿರಿ.

ಹೆಂಡ-ಸೀರೆ ಹಂಚಿ ಮತ ತೆಗೆದುಕೊಳ್ಳೋ ನಿಮ್ಮ ದೊರೆಗಳ ಪಾದ ನೆಕ್ಕೊಂಡು ಬಿದ್ದಿರಿ, ಇವತ್ತಲ್ಲ ನಾಳೆ ನಿಮಗೂ ಬೆಳಕಿನ ದರ್ಶನವಾದೀತು. ಬಡವರನ್ನ ದೋಚಿ ಸುಲಿಗೆ ಮಾಡಿ ಜಾತಿ ರಾಜಕಾರಣ ಮಾಡೋರು ನಿಮಗೆಲ್ಲ ಆದರ್ಶವಾಗಲಿ.

ದೇಶ ಬಿಟ್ಟು ಭಾಷೆ ಬಿಟ್ಟು, ಎಲ್ಲರಿಗಿಂತ ಹೆಚ್ಚು ಕೊರಗಿಕೊಂಡು, ಮನಸಲ್ಲಿ ಅಪ್ಪಟ ಮಾನವನಾಗಿ ಬೆಳೆಯೋ ಆಲೋಚನೆಗಳಿಗೆ ದಿನೇದಿನೇ ನೀರು ಕುಡಿಸುತ್ತಾ ಒಂದು ಕಡೆ ಬೇಡವೆಂದರೂ ದೂರ ಹೋಗುವ ಭಾರತೀಯತೆಯನ್ನು ಮತ್ತೊಂದು ಕಡೆ ಗಟ್ಟಿಯಾಗಿ ಅಪ್ಪಿಕೊಂಡೇ ನಾವು ನಿಟ್ಟುಸಿರು ಬಿಡ್ತೀವಿ, ಅವು ನಿಮಗೆಲ್ಲ ಖಂಡಿತ (ಈ ಜನುಮದಲ್ಲಿ) ಅರ್ಥ ಆಗಲ್ಲ ಬಿಡಿ.

Sunday, March 22, 2009

ಸ್ಪ್ರಿಂಗ್ ಬಂತು ಸ್ಪ್ರಿಂಗು

ಮೊನ್ನೆ ಇಲ್ಲೆಲ್ಲಾ ಸ್ಪ್ರಿಂಗ್ ಆರಂಭವಾದ ದಿನ. ಇವತ್ತಾದರೂ ಪರಿಸ್ಥಿತಿ ಹೇಗಿದೆ ನೋಡೋಣ ಎಂದು ಪ್ಯಾಟಿಯೋದಿಂದ ಹೊರಗೆ ನೋಡಿದರೆ ಅಂತಾ ಏನೂ ವಿಶೇಷ ಕಾಣಿಸ್ಲಿಲ್ಲ. ಮರ-ಗಿಡಗಳೆಲ್ಲ ಅವೇ ಗ್ರೇ ಸ್ಕೇಲ್ ಪೇಂಟಿಂಗ್‌ನಲ್ಲಿ ನಿಂತ ಹಾಗೆ ಒಂದಿನಿತೂ ಅಲುಗಾಡದೆ ನಿಂತಿದ್ದವು. ಡೆಕ್ ಮೇಲೆ ಅಮ್ಮ ಚಪಾತಿ ಮಣೆಯ ಮೇಲೆ ಹಿಟ್ಟು ಸವರಿಕೊಳ್ಳೋ ಹಾಗೆ ಒಂದು ಪದರು ಸ್ನೋ ಬಿದ್ದಿತ್ತು. ಹೊರಗಡೆ ಇರೋ ಥರ್ಮಾ ಮೀಟರ್‌ನ ಮುಳ್ಳು ಕೆಟ್ಟು ಹೋಗಿರುವ ಗಡಿಯಾರದಲ್ಲಿ ಮುಳ್ಳುಗಳು ನಿರ್ಜೀವವಾಗಿ ಬಿದ್ದ ಹಾಗೆ ಮುವತ್ತು ಡಿಗ್ರಿಯ (ಫ್ಯಾರನ್‌ಹೈಟ್) ಬಲಮಗ್ಗುಲಿಗೆ ಸತ್ತು ಬಿದ್ದ ಹಾಗಿತ್ತು.

ಈ ಸ್ಪ್ರಿಂಗ್ ನದೇ ವಿಶೇಷ, ಇಲ್ಲಿ ಅದೆಷ್ಟು ವರ್ಷ ಇದ್ದರೂ ನಮಗಿನ್ನೂ ಚರ್ಮದಿಂದ ಕೆಳಗೆ ಇಳಿಯೋದೇ ಇಲ್ಲ. ಸ್ಪ್ರಿಂಗ್‌ಗೆ ಕನ್ನಡದಲ್ಲಿ ಏನಂತಾರೆ ಎಂದು ಡಿಕ್ಷನರಿಯನ್ನು ನೋಡಿದರೆ ಅಲ್ಲೂ ನಿರಾಶೆ ಕಾದಿತ್ತು. ಇವರೋ ವರ್ಷವನ್ನು ಸಮನಾಗಿ ನಾಲ್ಕು ಭಾಗಗಳನ್ನಾಗಿ ವಿಂಗಡಿಸಿ ಅವುಗಳನ್ನು ಸ್ಪ್ರಿಂಗು, ಸಮ್ಮರ್ರು, ಫಾಲ್ ಹಾಗೂ ವಿಂಟರ್ ಎಂದು ಕರೆದರು. ಆದರೆ ನಮ್ಮ ಚೈತ್ರ, ವೈಶಾಖ ಮಾಸಗಳಾಗಲೀ ವಸಂತ ಋತುವಾಗಲಿ ವರ್ಷವನ್ನು ನೋಡುವ ರೀತಿಯೇ ಬೇರೆ. ಅಲ್ಲದೆ ನಮ್ಮ ಕಡೆಗೆಲ್ಲ ಬೇಸಿಗೆ ಕಾಲ, ಮಳೆಗಾಲ, ಛಳಿಗಾಲ ಎಂದು ಮಾತನಾಡಿಕೊಂಡಿದ್ದನ್ನು ಕೇಳಿದ್ದೆನೆಯೇ ವಿನಾ ಈ ಸ್ಪ್ರಿಂಗ್ ಬಗ್ಗೆ ಕೇಳಿಲ್ಲ. ಇದನ್ನು ಸುಗ್ಗಿ ಅನ್ನೋಣವೇ, ಸಂಕ್ರಮಣ ಅನ್ನೋಣವೇ, ಯುಗಾದಿ ಅನ್ನೋಣವೇ, ಅಥವಾ ಬಾಯ್ತುಂಬ ಸ್ಪ್ರಿಂಗ್ ಎಂದು ಸುಮ್ಮನಿದ್ದು ಬಿಡೋಣವೆ.

ಇಲ್ಲಿ ಮಂಜಿನ ಹನಿಗಳದೊಂದು ಮತ್ತೊಂದು ವಿಶೇಷ, ಹಗುರವಾಗಿ ನೆಲದ ಮೇಲೆಲ್ಲಾ ಹರಡಿ ಹೂ-ಎಲೆಗಳನ್ನು ಸ್ಪರ್ಶಿಸಿ ಅವುಗಳನ್ನು ತೇವವಾಗಿಡುವುದರ ಬದಲು ಇಳಿಯುವ ಉಷ್ಣತೆಯ ದೋಸ್ತಿಗೆ ಕಟ್ಟುಬಿದ್ದು ಅವೂ ಘನೀಭವಿಸತೊಡಗಿವೆ. ಡಿಸೆಂಬರ್ ಇಪ್ಪತ್ತೊಂದರಿಂದಲೇ ಮೆಜಾರಿಟಿಗೆ ಬಂದ ಸೂರ್ಯನ ಕಿರಣಗಳು ಈಗಾಗಲೇ ತಮ್ಮ ಮಧ್ಯ ವಯಸ್ಸನ್ನು ತಲುಪಿ ಮುದುಕರಂತೆ ಕಂಡು ಬರುತ್ತಿವೆ, ಇನ್ನೇನು ಜೂನ್ ಇಪ್ಪತ್ತೊಂದು ಬರುವಷ್ಟರೊಳಗೆ ಸತ್ತೇ ಹೋದಾವೇನೋ ಎನ್ನೋ ಹಾಗೆ.

ಛಳಿಯಲ್ಲಿ ಇದ್ದು ಬಂದವರಿಗೆ ಬೇಸಿಗೆಯ ಆಸೆ, ಬೇಸಿಗೆಯಲ್ಲಿ ಒಂದೇ ಒಂದಿಷ್ಟು ಬಿಸಿಲಲ್ಲಿ ಬಸವಳಿದು ಹೋದರೂ ತಂಪಾಗಿರಬಾರದೇ ಎನ್ನುವ ತವಕ. ಏನೇ ಅಂದರೂ ಶೇಕ್ಸ್‌ಪಿಯರ್ ಅಂಥವರು - shall I compare thee to a summers day! ಎಂದು ಏಕೆ ಬರೆದರು ಎಂದು ಅನುಭವಿಸಲು ಅಂತಹ ವಾತಾವರಣದಲ್ಲೇ ಇರಬೇಕು ಎನ್ನುವುದು ನನ್ನ ಅಭಿಮತ. ಮಳೆಯಲ್ಲಿ ನೆಂದವರ ಬವಣೆಯನ್ನು ಅರಿಯಲು ಓದುಗರು ಮಳೆಯಲ್ಲಿ ನೆನೆದು ನೋಡಬೇಕಾಗೇನೂ ಇಲ್ಲ, ಆದರೆ ವರ್ಷದ ಎಂಟು ತಿಂಗಳು ಶೀತ ವಾತಾವರಣವನ್ನು ಅನುಭವಿಸಿ ಇರುವ ಒಂದೋ ಎರಡೋ ತಿಂಗಳ ಬೇಸಿಗೆಯ ಸುಖದಲ್ಲಿ ಚಿಗುರುವ ಕವಿಯ ಕಲ್ಪನೆಗಳು ನಮ್ಮ ದಕ್ಷಿಣ ಭಾರತದ ಸುಡು ಬಿಸಿಲಿನಲ್ಲಿ ಹುಟ್ಟಿ ಬೆಳೆದು ಓದಿದವರಿಗೇನು ಗೊತ್ತು?

ನಮಗಿಲ್ಲಿ ಕ್ಯಾಲೆಂಡರಿನಲ್ಲಿ ಹೇಳಿ ಕೊಟ್ಟಂತೆ ಸ್ಪ್ರಿಂಗ್ ಬರುತ್ತದೆ. ಅವಾಗಾವಾಗ ಅಮ್ಮ ನೆನಪಿಸುತ್ತಲೇ ಇರುತ್ತಾಳೆ, ಈ ತಿಂಗಳು ಇಪ್ಪತ್ತೇಳಕ್ಕೆ ಯುಗಾದಿ ಹಬ್ಬ ಇದೆ, ನೀವೂ ಮಾಡಿ ಎಂದು. ನಮಗಿಲ್ಲಿ ಎಳ್ಳೂ-ಬೆಲ್ಲ ಬರಲಿಲ್ಲ, ಮುಂದೆ ಬೇವೂ-ಬೆಲ್ಲವೂ ಇರೋದಿಲ್ಲ. ಇಲ್ಲಿ ನಮಗೆ ಹೊಂಗೆ ಹೂವ ತೊಂಗಲು ಕಣ್ಣಿಗೆ ಕಾಣೋದಿಲ್ಲ, ಯಾವುದೋ ಭಾಷೆಯಲ್ಲಿ ಅದೇನೆಂದೋ ಕರೆಯುವ ಒಂದಿಷ್ಟು ಮರಗಿಡಗಳು ದಾರಿ ಉದ್ದಕ್ಕೂ ಕಾಣ ಸಿಗುತ್ತವೆ, ತಮ್ಮ ಸುತ್ತ ಮುತ್ತಲೂ ಬಣ್ಣದೋಕುಳಿಯನ್ನು ಹರಡಿಕೊಳ್ಳುತ್ತವೆ. ಮಾವಿನೆಲೆಗಳಾಗಲೀ, ಚಿಗುರುಗಳಾಗಲೀ ನೋಡದೇ ಎಷ್ಟೋ ವರ್ಷಗಳೇ ಕಳೆದವೇನೋ, ಅವುಗಳ ಬದಲಿಗೆ ನಮ್ಮ ಮನೆಯ ಬಾಗಿಲಿಗೆ ಯಾವತ್ತೂ ಹಸಿರನ್ನು ತರುವ ಪ್ಲಾಸ್ಟಿಕ್ ಎಲೆಗಳನ್ನು ಪೋಣಿಸಿದ ಸರವೊಂದನ್ನು ನೇತು ಹಾಕಿದ್ದಾಗಿದೆ. ಸಂವತ್ಸರಗಳು ಕೆಲವೇ ಕೆಲವು ನೆನಪಿವೆ. ಆರು ಋತುಗಳನ್ನು ನೆನಪಿಸಿಕೊಳ್ಳಲು ಕನಿಷ್ಠ ಆರು ನಿಮಿಷವಾದರೂ ಬೇಕು, ಚೈತ್ರ-ವೈಶಾಖರನ್ನು ಎಡಬಿಡದೆ ಕಲಿತದ್ದರಿಂದಾಗಿ ಇನ್ನೂ ಸ್ಮೃತಿಪಠಲದಲ್ಲೇ ಇವೆ. ಅಶ್ವಿನಿ-ಭರಣಿ-ಕೃತ್ತಿಕಾ-ರೋಹಿಣಿಯರು ಒಮ್ಮೊಮ್ಮೆ ಪೂರ್ಣ ನೆನಪಿಗೆ ಬರುತ್ತಾರೆ, ಮತ್ತೆ ಇಲ್ಲ. ಯಾವ ಮಳೆ ನಕ್ಷತ್ರ ಯಾವ ತಿಂಗಳಲ್ಲಿ ಎನ್ನುವುದು ನೆನಪಿಗೆ ಗುಡ್ ಬೈ ಹೇಳಿ ಬಹಳ ವರ್ಷಗಳೇ ಆಗಿವೆ. ಯಾವ ಹುಣ್ಣಿಮೆಗೆ ಏನೇನು ವಿಶೇಷ ಎನ್ನುವುದು ಈಗ ಇತಿಹಾಸವಷ್ಟೇ.

ನಮಗಲ್ಲಾದರೆ ಯುಗಾದಿ ಒಂದು ಸಮೂಹದಾಚರಣೆಯಾಗುತ್ತಿತ್ತು. ಒಂದೆರಡು ಬೇವು-ಮಾವಿನ ಮರಗಳನ್ನು ಹತ್ತಿಳಿದು ಎಲೆಗಳನ್ನು ಕಿತ್ತು ತರುತ್ತಿದ್ದೆವು. ಅದೇ ದಿನ ಸಂಜೆಯೋ ಮರುದಿನವೋ ಕಂಡೂ ಕಾಣದ ಚಂದ್ರನ ಗೆರೆಯನ್ನು ತವಕದಿಂದ ಹುಡುಕುತ್ತಿದ್ದೆವು. ನಾವು ತಿಂದು ಹಂಚುವ ಬೇವು-ಬೆಲ್ಲದ ಪ್ರತೀಕ ಬಹಳ ದೊಡ್ಡದಿತ್ತು. ಇಲ್ಲಿ ಸ್ಪ್ರಿಂಗ್ ಬಂದರೆ it's just another day, ಅದೇ ರೀತಿ ಉಳಿದ ದಿನಗಳೂ ಬಂದು ಹೋಗುತ್ತವೆ. ಹಾಗೆ ಬಂದು ಹೋಗುವ ಕಾಲ(ಮಾನ)ಕ್ಕೆ ನಾವು ಒಂದಿಷ್ಟು ಪ್ರತಿರೋಧ ಒಡ್ಡಿದಂತೆ ಮಾಡುತ್ತೇವಾದರೂ ಅಂತಹ ಪ್ರತಿರೋಧದ ಧ್ವನಿಯೂ ನಮ್ಮಲ್ಲೇ ಹುಟ್ಟಿ ಅಲ್ಲೇ ಮುದುರಿಕೊಳ್ಳುವುದು ಈ ಸ್ಪ್ರಿಂಗ್ ಬಂದು ಹೋದಷ್ಟೇ ಸಹಜವಾಗಿ ಹೋಗುತ್ತದೆ.

Tuesday, December 30, 2008

ಛಳಿಗಾಲದ ಕುರುಕು

ಡಿಸೆಂಬರ್ ೨೧ ಬಂತು ಅಂದ್ರೆ ಛಳಿಗಾಲದ ಆರಂಭ ಅಂತ ಕೊರಗೋದು ಒಂದು ರೀತಿ, ಅದರ ಬದಲಿಗೆ ಅದೇ ದಿನವನ್ನ ವರ್ಷದ ಲಾಂಗೆಷ್ಟ್ ನೈಟ್ ಎಂದುಕೊಂಡರೆ ಇನ್ನೊಂದು ವಿಚಾರವೂ ಸಿಗುತ್ತೆ, ಅದೇ ನಂತರದ ದಿನಗಳಲ್ಲಿ ದಿನೇದಿನೇ ಹೆಚ್ಚುವ ಡೇ ಲೈಟ್ ಸಮಯ, ಹಾಗೂ ಜೂನ್ ೨೧ ರ ವರೆಗೆ ದಿನೇದಿನೇ ಹೆಚ್ಚುವ ಡೇ ಲೈಟ್ ಸಮಯ ಛಳಿಗೆ ಅಷ್ಟೊಂದು ಹೊಂದಿಕೊಂಡಿರದ ನಮ್ಮನ್ನು ಕೊನೇಪಕ್ಷ ರಾತ್ರಿ ಒಂಭತ್ತರ ವರೆಗೆ ಬೆಳಕಿರುವ ದಿನಗಳಲ್ಲಿ ಹೊರಗೆ ಕಳೆಯುವಂತೆ ಮಾಡುವ ಸಿಗುವ ಅವಕಾಶಗಳು.

ನಾವೆಲ್ಲ ಶಾಲೆಗೆ ಹೋಗಿ ಬರುತ್ತಿದ್ದ ಕಾಲದಲ್ಲಿ ಹೇಮಂತ ಋತುವಿನಲ್ಲಿ ಶನಿವಾರ ಬೆಳಗ್ಗೆ ಎಂಟು ಘಂಟೆಗೆ ಎಳೆಬಿಸಿಲಿನಲ್ಲಿ ಹೋಗಿ ನಿಲ್ಲುವ ಮನಸ್ಸಾಗುತ್ತಿತ್ತು. ನಮ್ಮ ಮೇಷ್ಟ್ರು ಪಿ.ಟಿ. ತರಗತಿಗಳನ್ನು ಬಯಲಿನಲ್ಲಿ ನಡೆಸುತ್ತಿದ್ದು ಮುಂಜಾವಿನ ಛಳಿಯಲ್ಲಿ ಅದು ಬಹಳ ಹಿತವನ್ನು ನೀಡುತ್ತಿತ್ತು. ನಾವು ಭಾರತದಲ್ಲಿ ಬಲ್ಲ ಹಾಗೆ ಶಿವಮೊಗ್ಗದ ಹತ್ತರಿಂದ ಹನ್ನೆರಡು ಡಿಗ್ರಿ ಡಿಸೆಂಬರ್ ಛಳಿ ದೊಡ್ದದು - ಜಮ್ಮು-ಕಾಶ್ಮೀರದ ಹಿಮಾವೃತ ದೃಶ್ಯಗಳನ್ನು ಟಿವಿಯಲ್ಲಿ ನೋಡಿದರೆ ಛಳಿಯ ಅನುಭವವೇನೂ ಆಗುತ್ತಿರಲಿಲ್ಲ!

ಇಲ್ಲಿಗೆ ಬಂದ ಮೇಲೆ ಫಾಲ್ ಮತ್ತು ವಿಂಟರ್ ಸೀಸನ್‌ಗಳನ್ನು ವಿಶೇಷವಾಗಿ ನೋಡುವ ಭಾಗ್ಯ ಒದಗಿ ಬಂದಿದ್ದು. ಉದಾಹರಣೆಗೆ ಈ ವರ್ಷವನ್ನೇ ತೆಗೆದುಕೊಳ್ಳೋಣ, ಲೇಟ್ ಫಾಲ್‌ನಲ್ಲಿ, ಅಂದರೆ ನವಂಬರ್ ಕೊನೆ ಮತ್ತು ಡಿಸೆಂಬರ್ ಮೊದಲೆರಡು ವಾರಗಳಲ್ಲಿ ವಿಪರೀತ ಛಳಿ. ನೂರಾ ಹದಿಮೂರು ವರ್ಷದ ಇತಿಹಾಸದಲ್ಲಿ ಈ ವರ್ಷಾ ಹ್ಯಾಲೋವಿನ್ (ಅಕ್ಟೋಬರ್ ೩೧) ಮೊದಲು ನಾವು ಎಂಟು ಇಂಚು ಸ್ನೋ ನೋಡಿದ್ದೂ ಆಯಿತು. ಫಾಲ್‌ನಲ್ಲೇ ಪೂರ್ತಿ ಛಳಿಗಾಲವನ್ನು ಅನುಭವಿಸುವ ಸುಖ ಸಿಕ್ಕಮೇಲೆ ಇನ್ನು ನಿಜವಾದ ಛಳಿಗಾಲಕ್ಕೇನು ಬೆಲೆ ಕೊಡೋಣ ಹೇಳಿ? ಒಂದು ರೀತಿ ನೀರಿನಲ್ಲಿ ಮುಳುಗಿದೋನಿಗೆ ಛಳಿಯೇನು ಮಳೆಯೇನು ಅಂದಹಾಗೆ ಈ ಫಾಲ್ ವಾತಾವರಣವೇ ನನ್ನನ್ನು ಹಣ್ಣುಗಾಯಿ ನೀರುಗಾಯಿ ಮಾಡಿರುವಾಗ ಇನ್ನು ವಿಂಟರ್‌ಗೆ ಹೆದರುವುದಾದರೂ ಏಕೆ?

ನಾವೆಲ್ಲ ಸೂರ್ಯವಂಶದವರು, (ಅಂದರೆ ಸೂರ್ಯ ಹುಟ್ಟಿದ ಮೇಲೆ ಎದ್ದೇಳುವವರು ಅಂತಲ್ಲ), ಬೆಳಗಿನ ಎಳೆ ಬಿಸಿಲಿನಲ್ಲಿ ಉದಯಿಸುತ್ತಿರುವ ಸೂರ್ಯನನ್ನು ನೋಡಿಕೊಂಡು ಕೈಯಲ್ಲಿ ಕಾಫೀ ಮಗ್ಗ್ ಅನ್ನು ಹಿಡಿದುಕೊಂಡು ಆಫೀಸಿಗೆ ಹೊರಡುವ ಉತ್ಸಾಹವೇ ಬೇರೆ. ಅದರ ಬದಲಿಗೆ ಫಾಲ್‌ನಲ್ಲಿ ಕತ್ತಲೋ ಕತ್ತಲು. ಮುಂಜಾನೆ ಎಂಟರಿಂದ ಸಂಜೆ ಐದರವರೆಗೆ ಮಾತ್ರ ಸೂರ್ಯ ಕಿರಣಗಳು ನೋಡೋಕೆ ಸಿಕ್ಕರೆ ಪುಣ್ಯ. ನಮ್ಮನ್ನು ಹೈರಾಣಾಗಿಸಲೆಂದೇ ಇಲ್ಲಿಯವರು ವರ್ಷಕ್ಕೆರಡು ಸಲ ಟೈಮ್ ಛೇಂಜ್ ಮಾಡೋದು - ಡೇ ಲೈಟ್ ಸೇವಿಂಗ್ ನೆಪದಲ್ಲಿ. ಈ ಅಮೇರಿಕದಲ್ಲಿ ನೆಟ್ಟಗೆ ನಡೆಯುತ್ತಿರುವ ಗಡಿಯಾರವೂ ತನ್ನನ್ನು ತಾನು ವರ್ಷಕ್ಕೆ ಎರಡು ಸಲ ತಿದ್ದಿಕೊಳ್ಳಬೇಕು - ಔಟ್ ಡೇಟೆಡ್ ಆಗದೇ ಇರಲು!

ನಿನ್ನೆ ವೆದರ್ ಚಾನೆಲ್‌ನಲ್ಲಿ ಅರವತ್ತು ವರ್ಷಗಳ ಹಿಂದೆ ಡಿಫ್ಟೀರಿಯಾ ವ್ಯಾಕ್ಸೀನ್ ಅನ್ನು ಅಲಾಸ್ಕಾದ ಹಿಮಾವೃತ ಪ್ರದೇಶದ ಪಟ್ಟಣಗಳಿಗೆ ತಲುಪಿಸಲು ಸಬ್ ಝೀರೋ ಟೆಂಪರೇಚರ್‌ನಲ್ಲಿ ಜನರು ಕಷ್ಟಪಟ್ಟದ್ದನ್ನು ನೋಡಿದಂದಿನಿಂದ ನಮ್ಮಲ್ಲಿನ ೩೦ ರ ಆಸುಪಾಸಿನ (ಫ್ಯಾರನ್‌ಹೈಟ್ ಸ್ಕೇಲಿನಲ್ಲಿ) ಛಳಿ ಏನು ಮಹಾ ದೊಡ್ಡದು ಎನ್ನಿಸಿದೆ. ಅದಕ್ಕೇ ಈ ಉಷ್ಣ-ಛಳಿ ಮನೋಭಾವನೆ ಎಲ್ಲ ರಿಲೇಟಿವ್ ಅನ್ನೋದು - ಮೈನಸ್ ಐವತ್ತರ ಹತ್ತಿರದ ಉಷ್ಣತೆಯನ್ನು ಬಲ್ಲವರಿಗೆ ಸೊನ್ನೆಯ ಹತ್ತಿರದ ಛಳಿ ಛಳಿಯೇ ಅಲ್ಲ!

ಈ ಯೂನಿಟ್‌ಗಳು ಮತ್ತು ಅವುಗಳ ಬಳಕೆಯನ್ನು ಕುರಿತು ಈ ಕೆಳಗಿನ ಅಂಶವನ್ನು ಗಮನಿಸಿ:
- ಅಮೇರಿಕದಲ್ಲಿ ಪೌಂಡು-ಮೈಲು-ಇಂಚುಗಳನ್ನು ಬಳಸುವ ವ್ಯವಸ್ಥೆಯಲ್ಲಿ ಕ್ಯಾಮೆರಾದ ಲೆನ್ಸ್‌ ವಿಚಾರಕ್ಕೆ ಬಂದಾಗ ಮಿಲಿ ಮೀಟರ್ ಅನ್ನೇ ಜನರು ಬಳಸೋದು, ಜೊತೆಗೆ ಟೆಂಪರೇಚರ್ ಸ್ಕೇಲ್ (ಫ್ಯಾರನ್‌ಹೈಟ್) ಬಳಕೆ ಇಲ್ಲಿಯ ಉಷ್ಣತೆಯ ವೇರಿಯೇಷನ್ನಿಗೆ ಸೂಕ್ತವಾಗೇ ಇದೆ.
- ಭಾರತದಲ್ಲಿ ಕೆಜಿ-ಕಿಲೋಮೀಟರು-ಸೆಂಟಿಮೀಟರ್‌ಗಳನ್ನು ಬಳಸುವ ವ್ಯವಸ್ಥೆಯಲ್ಲಿ ಉಳಿದೆಲ್ಲ ಟೆಂಪರೇಚರ್ರ್‌ಗೆ ಸೆಲ್ಸಿಯಸ್ ಸ್ಕೇಲು ಬಳಸಿದರೂ ಮನುಷ್ಯನ ದೇಹದ ಉಷ್ಣತೆಯನ್ನು ಫ್ಯಾರನ್‌ಹೈಟ್ ಸ್ಕೇಲಿನಲ್ಲೇ ಬಳಸೋದು.

ಈ ವೆದರ್ರು, ಟೆಂಪರೇಚರ್ರು ಇವೆಲ್ಲ ಜನರಲ್ ವಿಷಯ - there is nothing you can do about it! ಅನ್ನೋದು ಒಂದು ವಿಚಾರ. ಮಳೆ ಬರುತ್ತೆ ಅಂತ ಫೋರ್‌ಕಾಸ್ಟ್ ನೋಡಿಕೊಂಡು ಛತ್ರಿ/ರೈನ್ ಕೋಟ್ ತೆಗೆದುಕೊಂಡು ಹೋಗೋದು ಬಿಡೋದು ಅವರವರ ಡಿಸಿಷನ್ನಿಗೆ ಸೇರಿದ್ದು ಅನ್ನೋದು ಮತ್ತೊಂದು ವಿಚಾರ.

Saturday, December 06, 2008

ಈ ತತ್ವಗಳ ಹಣೇಬರಾನೇ ಇಷ್ಟು...

...ಅಂತ ಅನ್ಸಿದ್ದು ಇತ್ತೀಚೆಗಷ್ಟೇ ಏನಲ್ಲ, ಆದ್ರೆ ಈ ಹೊತ್ತಿನ ತತ್ವದ ಹಿನ್ನೆಲೆಗೆ ಒಂದು ಸಮಜಾಯಿಷಿಯಂತೂ ಖಂಡಿತ ಇದೆ. ನಾನು ನನ್ನ ಕ್ರೆಡಿಟ್ ಕಾರ್ಡ್ ಬಿಲ್ಲುಗಳನ್ನ ಸಮಯ ಸಿಕ್ಕಾಗ ರಿವ್ಯೂವ್ ಮಾಡ್ತಾ ಇದ್ದಾಗ ಒಂದು ಸಂಗತಿ ಗೊತ್ತಾಯಿತು, ಆದೇನಂದರೆ ನನ್ನ ಸಂಬಳದ ಒಂದು ಅಂಶ ನಿಯಮಿತವಾಗಿ ವಾಲ್‌ಮಾರ್ಟ್ ಹಾಗೂ ಸಾಮ್ಸ್‌ಕ್ಲಬ್‌ಗೆ ಹೋಗ್ತಾ ಇರೋದು! ಅಂದ್ರೆ ಅದೇನು ಇಲ್ಲೀಗಲ್ ಟ್ರಾನ್ಸಾಕ್ಷನ್ನ್ ಅಲ್ಲ, ನಾನೇ ಹೋಗಿ ಬಂದು ಅಲ್ಲಿ ಖರೀದಿ ಮಾಡಿದ ಸಾಮಾನಿನ ಪ್ರತಿಯಾಗಿ ಅವರು ನನ್ನ ಕ್ರೆಡಿಟ್ ಕಾರ್ಡಿನಿಂದ ಎಳೆದುಕೊಂಡ ಹಣ, ಎಲ್ಲ ನ್ಯಾಯವಾದ್ದೇ ಅದ್ರಲ್ಲೇನೂ ತಪ್ಪಿಲ್ಲ ಬಿಡಿ. ಆದ್ರೆ, ಇತ್ತೀಚೆಗೆ ಪ್ರತೀ ತಿಂಗಳು ವಾಲ್‌ಮಾರ್ಟ್, ಸ್ಯಾಮ್ಸ್‌ಕ್ಲಬ್ಬಿಗೆ ಹೋಗಿ ಅಲ್ಲಿ ಖರೀದಿ ಮಾಡಿ ತರುವ ಸಾಮಾನುಗಳ ಪಟ್ಟಿ ಬೆಳೆದಿದ್ದು ಹೇಗೆ? ಮೊದ್ಲೆಲ್ಲ ಆ ಸ್ಟೋರುಗಳಿಂದ ದೂರವಿರಬೇಕು ಎಂಬ ಪಣತೊಟ್ಟ ತ್ರಿವಿಕ್ರಮನಂತೆ ನಾನು ದೂರವಿದ್ದು ಕೊನೆಗೆ ಬೇತಾಳನ ಸವಾಲಿಗೆ ಸರಿಯಾಗಿ ಉತ್ತರ ಹೇಳಿಯೂ ಅದು ಹೆಗಲು ಬಿಟ್ಟು ಹಾರಿ ಹೋಗಿ ಕೊನೆಗೆ ಕೊಂಬೆಗೆ ನೇತಾಡುವ ರೀತಿಯಲ್ಲಿ ನಾನು ವಾಲ್‌ಮಾರ್ಟ್ ಅಂಗಡಿಯಿಂದ ದೂರವಿದ್ದಷ್ಟೂ ಅದಕ್ಕೆ ಹತ್ತಿರ ಹತ್ತಿರ ಹೋಗಿ ಕೊನೆಗೆ ನನ್ನ ಹೆಚ್ಚಿನ ಪರ್ಚೇಸುಗಳೆಲ್ಲ ಅವೇ ಅಂಗಡಿಯಿಂದ ಆಗುತ್ತಿದೆ ಏನಾಶ್ಚರ್ಯ!

ವಾಲ್‌ಮಾರ್ಟ್ ಅಂದರೆ ನನಗೇನೂ ಅಲರ್ಜಿ ಇಲ್ಲ, ಆದರೆ ಅದು ಅಮೇರಿಕನ್ ಕ್ಯಾಪಿಟಲಿಸಮ್ ಅನ್ನು ಪರಮಾವಧಿ ಮುಟ್ಟಿಸಿರುವ ಕಂಪನಿ ಎಂದೂ; ಆ ಅಂಗಡಿಗಳಲ್ಲಿ ಸಾಮಾನುಗಳನ್ನು ಕಡಿಮೆ ದರದಲ್ಲಿ ಮಾರಬೇಕಾಗುವಲ್ಲಿ ಬೇಕಾದಷ್ಟು ತಂತ್ರಗಳನ್ನು ಅಳವಡಿಸಿ ಅದನ್ನು ಅನುಸರಿಸಿರುತ್ತಾರೆಂತಲೂ; ನಮ್ಮ ಊರಿನ ಹಾಗೂ ನೆರೆಹೊರೆಯವರು ನೆಲಸಮಾಧಿಯಾಗುವಷ್ಟು ಮಟ್ಟಿನ ಸ್ಪರ್ಧೆಯನ್ನು ಒಡ್ಡುವುದರಲ್ಲಿ ನಿಸ್ಸೀಮರೆಂತಲೂ, ಮಿಲಿಯನ್ನ್‌ಗಟ್ಟಲೆ ಜನರನ್ನು ಎಂಪ್ಲಾಯ್ ಮಾಡಿಕೊಂಡಿದ್ದರೂ ಗ್ರಾಹಕರಿಗೆ ಬೇಕಾದ ಸಮಯದಲ್ಲಿ ಕಷ್ಟಮರ್ ಸರ್ವೀಸ್ ಹೇಳ ಹೆಸರಿಲ್ಲದೇ ನೀಲಿ ಓವರ್‌ಕೋಟ್ ಧರಿಸಿದ ಯಾವೊಬ್ಬರೂ ಕಣ್ಣಿಗೆ ಬೀಳೋದೇ ಇಲ್ಲವೆಂತಲೂ; ಗೋಲ್ಡ್‌‌ಫಿಶ್‌ನಿಂದ ಹಿಡಿದು ಒಣ ಸಗಣಿಯವರೆಗೆ (ಉತ್ಪ್ರೇಕ್ಷೆ) ಒಂದೇ ಸೂರಿನಡಿಯಲ್ಲಿ ಉದ್ದಾನುದ್ದ ಸ್ಟೋರುಗಳಲ್ಲಿ ಮಾರಿ ಗ್ರಾಹಕರಿಗೆ ತಲೆಕೆಡಿಸುತ್ತಾರೆಂತಲೂ; ಘಂಟೆಗೆ ಎಂಟು-ಹತ್ತು ಡಾಲರ್‌ ಕೊಟ್ಟು ಬೆನಿಫಿಟ್ ಹೆಸರಿನಲ್ಲಿ ಎಂಪ್ಲಾಯಿಗಳನ್ನು ಶೋಷಿಸುತ್ತಾರೆಂತಲೂ, ಇತ್ಯಾದಿ ಇತ್ಯಾದಿಯಾಗಿ ಬಹಳಷ್ಟು ಹೇಳಲಾಗದ ಕಾರಣಗಳಿಂದ ನಾನು ದೂರವಿರಬೇಕು ಎಂಬುದು ನನ್ನ ತತ್ವವಾಗಿತ್ತು.

ಈ ಹೇಟ್ರೆಡ್ ಹಿಂದೆ ಕೆಲವು ನಿಜ ಅಂಶಗಳೂ ಇನ್ನು ಕೆಲವು ನಾನೇ ಕಲ್ಪಿಸಿಕೊಂಡವುಗಳೂ ಇರಲಿಕ್ಕೆ ಸಾಕು, ಕೈಲಾಗದವನು ಮೈಯೆಲ್ಲಾ ಪರಚಿಕೊಂಡನಂತೆ ಹಾಗೆ. ನಾನು ಯಾವುದನ್ನು ಬಹಳಷ್ಟು ದ್ವೇಷಿಸುತ್ತೇನೆಯೋ ಅದಕ್ಕೇ ನಾನು ಹೆಚ್ಚು ಹೆಚ್ಚು ಜೋತು ಬೀಳುವ ನಿದರ್ಶನ ಇವತ್ತು ನಿನ್ನೆಯದಲ್ಲ - ಆ ಪಟ್ಟಿಗೆ ಇಂದು ವಾಲ್‌ಮಾರ್ಟ್ ಅನ್ನೂ ಸೇರಿಸಿಕೊಂಡಿದ್ದೇನೆ. (ಆ ಪಟ್ಟಿಯ ಇನ್ನುಳಿದವುಗಳೆಂದರೆ - ನಾನು ಮದ್ರಾಸ್ ಅನ್ನು ಮನಸಾ ದ್ವೇಷಿಸಿದ್ದ ಪಾಡಿನಿಂದಾಗಿ ಮದ್ರಾಸಿನ ಹೊರವಲಯದಲ್ಲಿ ಹದಿನೆಂಟು ತಿಂಗಳು ಕಳೆಯುವಂತಾಗಿದ್ದು, ಅಮೇರಿಕದ ಹಾದಿಯೇ ಬೇಡವೆಂದವನಿಗೆ ಈಗ ಹತ್ತಿರ ಹತ್ತಿರ ಹನ್ನೆರಡು ವರ್ಷ "ವನವಾಸ" ತಾಗಿಕೊಂಡಿದ್ದು, ಬೆಂಗಳೂರಿನ ಕನ್ನಡಿಗರೋ, ದೇವಾ, ಅವರನ್ನು ನೀನೇ ಕಾಪಾಡಬೇಕು ಎಂದು ದ್ವೇಷಿಸಿದಂತೆ ಬೆಂಗಳೂರಿನ ಕನ್ನಡತಿಯೇ ನನ್ನ ಅರ್ಧಾಂಗಿಯಾಗಿದ್ದು, ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ). (ನಾನು ದ್ವೇಷಿಸಿದ್ದಲ್ಲ ಹತ್ತಿರವಾಗುತ್ತಿರುವ ನಿದರ್ಶನಗಳನ್ನು ಕಂಡರೆ ನಾಳೆಯಿಂದ ಮಿಲಿಯನ್ನುಗಟ್ಟಲೆ ಹಣಗೆಲ್ಲುವ ಲಾಟರಿ ಟೆಕೇಟ್ ಅನ್ನು ದ್ವೇಷಿಸಿದರೆ ಹೇಗೆ ಎನ್ನುವುದು ಈ ಹೊತ್ತಿನ ತತ್ವಗಳ ಉಪತತ್ವ, ಆ ಮಾತು ಬೇರೆ).

***

ಏಪ್ರಿಲ್, ೨೦೦೮ ರ ಹೊತ್ತಿಗೆಲ್ಲ ಒಂದು ಗ್ಯಾಲನ್ ಗ್ಯಾಸೋಲಿನ್ ಬೆಲೆ ಡಾಲರ್ 3.41 ಇದ್ದಿತ್ತು. ಅದು ಕ್ರಮೇಣ ನಂತರದ ಐದಾರು ತಿಂಗಳಲ್ಲಿ ಗ್ಯಾಲನ್‌ಗೆ ಡಾಲರ್ 3.99 ಆಗಿ ಹೋಗಿತ್ತು. ನಾನು ಒಮ್ಮೆ ನನ್ನ ಕಾರನ್ನು ಫಿಲ್ ಮಾಡಿಸಿದರೆ ಸುಮಾರು 65 ಡಾಲರ್ ಕೊಡಬೇಕಾದ ಪರಿಸ್ಥಿತಿ, ಎಲ್ಲರಂತೆ ನಾವೂ ಕೂಡ ಅನಗತ್ಯ ಪ್ರಯಾಣಗಳಿಗೆ ಕತ್ತರಿ ಹಾಕಿದ್ದೆವು. ಈ ಏರುತ್ತಿರುವ ಗ್ಯಾಸೋಲಿನ್ ಬೆಲೆಗೂ ಸ್ಯಾಮ್ಸ್‌ಕ್ಲಬ್ಬಿನಲ್ಲಿ ಮಾರುವ ಜೋಡಿ ಬ್ರೆಡ್ಡುಗಳ ಕಂತೆಗೂ ಎಲ್ಲೋ ಅವಿನಾಭಾವ ಸಂಬಂಧ. ಮೊದಲು ಜೋಡಿ ಬ್ರೆಡ್ ಲೋಫ್‌ಗೆ $2.07 ಇದ್ದಿದ್ದು ಮುಂದೆ $3.40 ಆಗಿ ಹೋಯಿತು. ಏನೇ ಆದ್ರೂ ಸ್ಯಾಮ್ಸ್‌ಕ್ಲಬ್ಬ್‌ನಲ್ಲಿ ದೊರೆಯುವ ಹಾಲು, ಬ್ರೆಡ್ಡುಗಳಷ್ಟು ಕಡಿಮೆ ಬೇರೆ ಯಾರೂ ಮಾರಲಿಕ್ಕಿಲ್ಲ. ಇಲ್ಲಿನ ಗೌಳಿಗರ ಮನೆಯಲ್ಲಿನ ಹಾಲೂ ಅದಕ್ಕಿಂತ ತುಟ್ಟಿಯಾಗಿದ್ದಿರಬಹುದು! ಮೊದಲೆಲ್ಲ, ಇಷ್ಟು ಎಕಾನಮಿ ಹದಗೆಟ್ಟಿರಲಿಲ್ಲ; ಒಂದು ವರ್ಷದ ಮೊದಲು ನನ್ನ ಪೋರ್ಟ್‌ಫೋಲಿಯೋ ಡಬಲ್ ಡಿಜಿಟ್ ಗೈನ್ ಮಾಡಿಕೊಂಡು ನಗುತ್ತಿತ್ತು (ಅವೆಲ್ಲ ಪೇಪರ್ ಹಣ ಮಾತ್ರ). 2008 ರ ಮಧ್ಯ ಭಾಗದಿಂದ ಶುರುವಾಯಿತು ನೋಡಿ ಕಷ್ಟಗಳು - ಒಂದೇ, ಎರಡೇ...ಬೇಕಾದಷ್ಟು. ನಾವು ಪೇ ಚೆಕ್ ನಂಬಿಕೊಂಡವರದೆಲ್ಲ ಆದಾಯ ಅಷ್ಟೇ, ಆದರೆ ಖರ್ಚು ಮಾತ್ರ ಮುಗಿಲೆತ್ತರ. ಈ ದಿನಗಳಲ್ಲೇ ಇರಬೇಕು ನಾನು ಬೇರೆಲ್ಲ ಅಂಗಡಿ ಮುಗ್ಗಟ್ಟುಗಳಿಗೆ ಹೋಗೋದನ್ನು ನಿಲ್ಲಿಸಿ ಇದ್ದುದರಲ್ಲಿ ಕಡಿಮೆ ಬೆಲೆಗೆ ಮಾರುವ ಸ್ಯಾಮ್ಸ್‌ಕ್ಲಬ್/ವಾಲ್‌ಮಾರ್ಟ್ ನಂಬಿಕೊಂಡಿದ್ದು. ಮುಂಬರುವ ದಿನಗಳು ಹೇಗೋ ಏನೋ, ಕೆಲಸವಿದ್ದರೆ ಇತ್ತು, ಇಲ್ಲದಿದ್ದರೆ ಇಲ್ಲ - ಅದಕ್ಕಾಗಿ ಎಲ್ಲರೂ ಉಳಿಸುವವರೇ, ಮಿತವಾಗಿ ಖರ್ಚು ಮಾಡುವವರೇ. ನಮ್ಮ ಮನೆಗೆ ಹತ್ತಿರವಿರುವ ಎಕ್ಸಾನ್‌ನಲ್ಲಿ ಕೆಲಸ ಮಾಡುವ ಪಟೇಲ ಒಂದೇ ಶಿಫ್ಟಿನಲ್ಲಿ ಹದಿನೈದು ಸಾವಿರ ಡಾಲರ್ ವ್ಯಾಪಾರಮಾಡಿ ದೊಡ್ಡ ರೆಕಾರ್ಡ್ ಮಾಡಿದ್ದನ್ನು ಬಹಳ ಹೆಮ್ಮೆಯಿಂದ ಹೇಳಿಕೊಂಡಿದ್ದ, ಆದರೆ ಇಲ್ಲಿ ಬರುವ ವಾಹನಗಳು ಕಡಿಮೆಯಾಗಿವೆ ಇತ್ತೀಚೆಗೆ ಅನ್ನೋದನ್ನೂ ಮರೆಯದೇ ಹೇಳಿದ್ದ. ಪಕ್ಕದಲ್ಲಿನ ಡಂಕಿನ್ ಡೋನಟ್ಸ್ ಅಂಗಡಿಯಲ್ಲಿ ನಾನು ಸರತಿ ಸಾಲಿನಲ್ಲಿ ನಿಂತಿರುವಂತೇ ಇಬ್ಬರು ತಮ್ಮ ಕೆಲಸ ಇತ್ತೀಚೆಗಷ್ಟೇ ಕಳೆದುಕೊಂಡಿದ್ದರ ಬಗ್ಗೆ ಮಾತನಾಡಿಕೊಳ್ಳುತ್ತಿದ್ದುದು ನನ್ನ ಕಿವಿಗೆ ಬಿತ್ತು - ಹೀಗೆ ಎಲ್ಲರದೂ ಕಷ್ಟದ ಪರಿಸ್ಥಿತಿ.

ಇನ್ನೊಬ್ಬರ ಕಷ್ಟಕ್ಕೆ ಲಘುವಾಗಿ ಸ್ಪಂದಿಸುವ ನಾನು, ಅವರ ಕಷ್ಟಗಳು ನನಗೇನಾದರೂ ಬಂದರೆ ಎಂದು ಯೋಚಿಸಿಕೊಂಡಂತೆಲ್ಲ ನನ್ನಲ್ಲಿ ಹಲವಾರು ಬದಲಾವಣೆಗಳಾಗ ತೊಡಗಿದವು: ನಮ್ಮ ಪಟ್ಟಣದ ಒಂದು ಫ್ಯಾಮಿಲಿ ಬೇಕರಿಗೆ ನಾನು ಭೇಟಿಕೊಡೋದನ್ನೇ ನಿಲ್ಲಿಸಿ ಬಿಟ್ಟೆ (ಖರೀದಿ ಮಾಡುವ ಸಾಮಾನುಗಳು ಬರೀ ಫ್ರೆಶ್ ಆಗಿದ್ದರೆ ಮಾತ್ರ ಸಾಲದು); ಅಗತ್ಯ ವಸ್ತುಗಳಿಗೆ ಈ ಕಡಿಮೆ ಬೆಲೆಯ ವಾಲ್‌ಮಾರ್ಟ್ ನಿಯಮಿತ ಭೇಟಿ ಕೊಡುವ ಸಂಗತಿಯಾಗಿ ಹೋಯಿತು; ಹೂವು/ಹಣ್ಣಿನ ಅಂಗಡಿಗಳಿಗೆ ಕಾಲಿಟ್ಟು ಎಷ್ಟೋ ತಿಂಗಳುಗಳಾಯಿತು; ಇಂಡಿಯನ್ ಫುಡ್ ಇಡುವ ಫಾಸ್ಟ್‌ಫುಡ್ ರೆಸ್ಟೋರೆಂಟುಗಳಿಗೆ ಇಂಡಿಯನ್ ಹೋಟೆಲುಗಳಿಗೆ ಹೋಗೋ ದಾರಿಯನ್ನೇ ಮರೆತದ್ದಾಯಿತು; ನನ್ನಲ್ಲಿ ಹುದುಗಿದ್ದ ಅಪ್ಪಟ ಕ್ಯಾಪಿಟಲಿಸ್ಟ್ ವಿರೋಧಿ ಮನಸ್ಥಿತಿ ಇತಿಹಾಸವಾಯಿತು; ಲೋಕಲ್ ಅಂಗಡಿಗಳು ಬದುಕಿದರೆಷ್ಟು ಬಿಟ್ಟರೆಷ್ಟು ಎನ್ನುವ ಧೋರಣೆ ತಲೆದೋರಿ ಮುಂದೆ ಅದೇ ಬದುಕಾಯಿತು; ಈ ಅಂಗಡಿಗಳಿಗೆ ಹೆಚ್ಚೆಚ್ಚು ಹೋಗಿ ಬಂದ ಫಲವಾಗಿ ಅಲ್ಲಿನ ಜಾಗೃತಿಯಂತಹ ಎಂಪ್ಲಾಯಿಗಳು ಪರಿಚಿತರಾದರು; ಆ ದೊಡ್ಡ ಅಂಗಡಿಗಳಲ್ಲೂ ಯಾವ ಯಾವ ವಸ್ತುವನ್ನು ಎಲ್ಲೆಲ್ಲಿ ಇಟ್ಟಿರುತ್ತಾರೆ ಎನ್ನುವ ಇಮೇಜ್ ತಲೆಯಲ್ಲಿ ಕೂತು ಹೋಯಿತು...ಹೀಗೆ ಅಥವಾ ಒಟ್ಟಾರೆ ನಾನು ಸಂಪೂರ್ಣ ವಾಲ್‌ಮಾರ್ಟ್ ಮಯವಾಗಿ ಹೋಗುವಂತಾಯಿತು.

***

ಅದಕ್ಕೇ ಹೇಳಿದ್ದು, ಈ ತತ್ವಗಳ ಹಣೇಬರಹವೇ ಇಷ್ಟು ಎಂದು. ನೀವು ಕೇಳಿಲ್ವೇ - ಆಚಾರ ಹೇಳೋರು ಬದನೇಕಾಯಿ ತಿನ್ನೋ ವಿಚಾರಾನ? ಈ ಬರಹ ಅದರ ಹಿಂದಿನ ಸ್ಪಂದಿಸೋ ಮನಸ್ಥಿತಿ ಇವೆಲ್ಲ ಬರೀ ಹೊಟ್ಟೆ ತುಂಬಿದ ಮೇಲಿನ ವಿಚಾರಗಳ ಆಟ್ರಿಬ್ಯೂಟ್ ಸಾರ್. ಅದ್ರಲ್ಲೇನು ಹುರುಳಿಲ್ಲ ಬಿಡಿ. ನಮ್ಮದು ನಮ್ಮ ತತ್ವ ಅಂತ ಜೋತು ಬೀಳೋದರ ಗುಂಗು ಹಾಗಿರಲಿ, ಗಾಳಿ ಬಂದಾಗ ತೋರಿಕೊಳ್ಳೋದೇ ಜಾಣತನವಾಗಿ ಹೋಗಿದೆ (ಅಷ್ಟು ಧಮ್ ಇದ್ರೆ ಗಾಳಿ ಇಲ್ದಾಗ ತೂರು ನೋಡೋಣ ಅನ್ನೋದು ಮತ್ತೊಂದು ದಿನದ ಚಾಲೆಂಜ್, ನಮಗೇ ನಾವು ಬೀಸುವ ಗಾಳಿಯನ್ನು ಸೃಷ್ಟಿ ಮಾಡೋ ತಾಕತ್ತಿದ್ದರೆ ತೂರೋ ಕಷ್ಟವೆಲ್ಲಿಂದ ಬರುತ್ತಿತ್ತು). ಆಫೀಸಿನಲ್ಲಿ struggle for existence ಆಗಿ ಹೋಗಿದೆ - ಕೆಲಸ ಕಳೆದುಕೊಂಡವರ ಬಗ್ಗೆ ಮೊದಲೆಲ್ಲ ಹಲ್ಲಿಯ ಹಾಗೆ ಲೊಚಗುಟ್ಟುತ್ತಿದ್ದವನಿಗೆ ಈಗ ಅವನು ಕಳೆದುಕೊಳ್ಳದಿದ್ದರೆ ಇನ್ಯಾರಾದರೂ (ನಾನೂ ಸೇರಿ) ಕಳೆದುಕೊಳ್ಳಬೇಕಿತ್ತು, ಅವನು ಹೋಗಿದ್ದೇ ಒಳ್ಳೆಯದಾಯ್ತು (ಎಲ್ಲಿ ನನ್ನ ಕುತ್ತಿಗೆಗೆ ಬಂದು ಬಿಡುತ್ತೋ ಎಂದು) ಎನ್ನುವ ಸಮಜಾಯಿಷಿ ತನ್ನಷ್ಟಕ್ಕೆ ತಾನೇ ಹುಟ್ಟಿಕೊಳ್ಳುತ್ತೆ. ದುಡಿಮೆಯನ್ನು ನಂಬಿಕೊಂಡು ಬಂದ ನಮಗೆ ಇಲ್ಯಾರೂ ಇಲ್ಲಾ ಸಾರ್ ನಮ್ಮನ್ನು ಬಿಟ್ರೆ. ಊರಿನಲ್ಲಾದ್ರೆ ಆರಾಮಾಗಿ ಅಣ್ಣ ಅಕ್ಕನ ಮನೆಗೆ ಹೋಗಿ ಒಂದು ವಾರ ಇದ್ದು ಬರಬಹುದಿತ್ತು, ಇಲ್ಲಿ ಆ ಭಾಗ್ಯ ಇಲ್ಲ. ಕೆಲಸವನ್ನು ನಂಬಿಕೊಂಡು ಬದುಕೋ ನಮಗೆ ಅದೇ ಎಲ್ಲ - ನಮಗೆ ಕಣ್ಣು ತುಂಬಿ ಬರೋ ನಿದ್ರೆಯಿಂದ ಹಿಡಿದು ನಮ್ಮನ್ನು ಕಾಡುವ ಚಿಂತೆಗಳವರೆಗೆ ಕೆಲಸದ ಕುರಿತ ವಿಷಯಗಳ ಕಾರುಭಾರು. (ಹಾಗಿದ್ರೆ ಇದನ್ನೆಲ್ಲ ಬಿಟ್ಟು ಬಂದು ಬಿಡಿ, ಅನ್ನೋದು ಸುಲಭ - ಆ ಪ್ರಾಜೆಕ್ಟ್ ಕೈಗೂಡೋದಕ್ಕೆ ಕೊನೇಪಕ್ಷ ಒಂದು ವರ್ಷದ ತಯಾರಿ ಆದ್ರೂ ಬೇಕು).

ಅಷ್ಟೇ, ಮತ್ತೆನಿಲ್ಲ - ಈ ಹೊತ್ತಿನ ತತ್ವ ಅಂತ ಬರೆದೂ ಬರೆದೂ ಅವುಗಳ ಲಿಮಿಟೇಷನ್ನ್ ನಿಮಗೆ ಗೊತ್ತಾದ್ರೆ ಸಾಕು.

Thursday, September 18, 2008

ನಿಮ್ ಮಕ್ಳೆಲ್ಲಾ ಎಸ್ಸೆಮ್ಮೆಸ್ಸ್ ಮೆಸ್ಸೇಜುಗಳಲ್ಲೇ ಅಳ್ತಾವೇನು?

ನಮ್ ಆಫೀಸಿನಲ್ಲಿ ಒಬ್ರು ಇತ್ತೀಚೆಗೆ ಹೊಸ್ತಾಗಿ ಪರಿಚಯವಾದ ಕನ್ನಡಿಗರು, ಈಗಾಗ್ಲೇ ನಮ್ಮ್ ಮಾತುಕಥೆಗಳು ಎರಡೂ ಮೂರನೇ ಭೇಟಿಯಲ್ಲಿ ಬೆಳೆಯುತ್ತಿದ್ದವುಗಳಾಗಿದ್ದರಿಂದ ಅವೇ ಕನ್ನಡಿಗರ ಸಂಕೋಚಭರಿತ ’ನಮಸ್ಕಾರ, ಚೆನ್ನಾಗಿದೀರಾ!’ ಅನ್ನೋ ಹಲ್ಲು ಗಿಂಜೋ ಪದಪುಂಜಗಳಿಂದ ಸ್ವಲ್ಪ ದೂರವಾಗಿತ್ತು ಅಂತ್ಲೇ ಹೇಳ್ಬೇಕು. ’ಏನ್ಸಾರ್ ಮತ್ತೆ ಇತ್ತೀಚೆಗೆ ಏನ್ ಓದ್ತಾ ಇದ್ದೀರಾ?’ ಎನ್ನೋ ನನ್ನ ಹುಂಬ ಪ್ರಶ್ನೆಗೆ ಅವರು ’ಏನೂ ಇಲ್ಲ, ಈ ಬ್ಲ್ಯಾಕ್‌ಬೆರ್ರಿಯಲ್ಲಿ ಬರೋವನ್ನು ಜೋಕ್‌ಗಳನ್ನ ಬಿಟ್ರೆ ಮತ್ತೇನನ್ನೂ ಓದೋದೇ ಇಲ್ಲ!’ ಎಂದು ಬಿಡಬೇಕೆ.

ಶುರುವಾಯ್ತು ತಗಳಪ್ಪ, ಅದೇ ತಾನೇ ಬೆಚ್ಚಗೆ ಕಾಫಿ ಕುಡಿದಿದ್ನಾ ಎಲ್ಲಾ ಹೊರಕ್ಕ್ ಬಂತ್ ನೋಡಿ...ಕ್ಷಮಿಸಿ ಅವ್ರಿಗೇನೂ ಬೈದಿಲ್ಲಪ್ಪ ನಾನು - ನಮ್ಮ ಕನ್ನಡಿಗರ ಜಾಯಮಾನದಂತೆ ನಕ್ಕು ಸುಮ್ಮನಾಗ್ಬಿಟ್ಟೆ.

***

ಈ ವೇಗಮಯ ಜೀವನದಲ್ಲಿ ಎಲ್ಲವೂ ಕಿರುತೆರೆಗಳಿಗೆ ಮಾತ್ರ ಸೀಮಿತವಾಗೋ ಹಾಗೆ ಕಾಣ್ತಿದೆ. ದೊಡ್ಡ ಸಿನಿಮಾ ಪರದೆ ಚಿಕ್ಕ ಟಿವಿಗೆ ಮೀಸಲಾಗೋಯ್ತು, ಈಗ ಅದರಿಂದ ಸಣ್ಣ ಮೊಬೈಲ್ ಫೋನಿನ ಮಟ್ಟಿಗೆ ಇಳಿದು ಹೋಯ್ತು. ಸೋ, ಚಿಕ್ಕದಾಗಿರದೇ ಇರೋದು ಬ್ಯಾಡವೇ ಬ್ಯಾಡಾ...ಅನ್ನೋದು ಈ ಕಾಲದ ಘೋಷಣೆ.

ಯಕ್ಷಗಾನ ಅನ್ನೋದ್ ಯಾಕೆ ಬೇಕು ಹಾಗಾದ್ರೆ? ಒಂದೇ ಒಂದು ಕ್ಷಣದಲ್ಲಿ ಪಾತಾಳ, ಭೂಲೋಕ, ಮತ್ಸ್ಯಲೋಕ, ಯಮಲೋಕ, ಸರ್ಪಲೋಕಗಳನ್ನೆಲ್ಲವನ್ನು ಯಶಸ್ವಿಯಾಗಿ ಕಲ್ಪಿಸಿಕೊಳ್ಳುವ ವೇದಿಕೆ ಇರೋವಾಗ. ಒಂದು ರಾಗ-ತಾಳದ ಹಿಮ್ಮೇಳದ ಹಾಡಿನಿಂದ ಮತ್ತೊಂದಕ್ಕೆ ಡೈನಾಮಿಕ್ ಆಗಿ ಬದಲಾವಣೆ ಇರೋವಾಗ. ಹಿಮ್ಮೇಳಕ್ಕೆ ತಕ್ಕಂತೆ ಅದೇ ಕಾಲಕ್ಕೆ ಸಂದರ್ಭವನ್ನು ಶುದ್ಧ ಕನ್ನಡ-ಸಂಸ್ಕೃತದಲ್ಲಿ ಅರ್ಥೈಸುವ ಅಭಿವ್ಯಕ್ತಿ ಇರೋವಾಗ. ಗಾನ-ನಾಟ್ಯ-ಸರ್ವ ರಸಗಳೂ ಒಂದೇ ಒಂದು ರಂಗದಲ್ಲಿ ಮೇಳೈಸುವಾಗ.

ಎಲ್ರೂ ನೂರು ರೂಪಾಯಿ ಕೊಟ್ಟು ಸಿನಿಮಾ ನೋಡ್ತಾ ಇದ್ರೆ ಸಾಕಲ್ವ - ಅವೇ ಟೇಕು ರೀಟೇಕುಗಳು ಸ್ಪೆಷಲ್ ಎಫೆಕ್ಟ್‌ಗಳೆಲ್ಲ ಇರೋವಾಗ ಅದರ ಮುಂದೆ ಬಯಲು ಸೀಮೆಯಲ್ಲಿನ ನಾಟಕ ಯಾವ ಮೂಲೆಯ ಲೆಕ್ಕ. ಎಂಟು ಡಾಲರ್ ಕೊಟ್ಟು ಒಂದೂವರೆ ಘಂಟೇಲಿ ಹಾಲಿವುಡ್ಡು ಸಿನಿಮಾಗಳು ನೋಡೋಕ್ ಸಿಗೋವಾಗ ಈ ನ್ಯೂ ಯಾರ್ಕಿನ ಬ್ರಾಡ್ ವೇ ಶೋಗಳಿಗೆ ನೂರು ಡಾಲರ್ ಯಾವನ್ನ್ ಹೋಗ್ತಾನೆ ಹೇಳಿ? ಸಿನಿಮಾದಲ್ಲಿರೋ ಮತ್ತು-ಗಮ್ಮತ್ತು ಈ ಪ್ಲೇನ್ ನಾಟಕ-ಮ್ಯೂಸಿಕಲ್ಲುಗಳಲ್ಲಿರುತ್ತೇ ಅಂತ ಅಂದೋರ್ ಯಾರು?

***

ರಾಮಾಯ್ಣ ಅಂದ್ರೆ ಸುಮ್ನೇ ಹೀಗ್ ಬರೆದ್ರೆ ಸಾಕಲ್ಪ:
ರಾಮಾ ಅನ್ನೋ ರಾಜಕುಮಾರ ಮೀನ್ ಮೈಂಡೆಡ್ ಮಂಥರೆ ಹಾಗೋ ಸ್ಟೆಪ್ ಮದರ್ ಕೈಕೆಯಿ ಮಾಡಿರೋ ಕರಾಮತ್ತಿನಿಂದಾಗಿ ತನ್ನ ಹೆಂಡ್ತಿ ಜೊತೆ ಕಾಡ್ ಸೇರ್ತಾನಂತೆ. ಆ ಹದಿನಾಲ್ಕು ವರ್ಷದ ವನವಾಸ್‌ದಲ್ಲಿ ಸುಂದರವಾದ ಹೆಂಡ್ತೀನ ಶ್ರೀಲಂಕಾದ ಒಬ್ಬ ರಾಕ್ಷಸ ಅಪಹರಿಸ್ತಾನಂತೆ. ರಾಮಾ ಮತ್ತ್ ಅವನ ತಮ್ಮ ಜೊತೆಗೆ ಕಾಡಲ್ಲೇ ಸಿಗೋ ಕಪಿ ಸೈನ್ಯದ ಸಹಾಯದಿಂದ ಲಂಕೆಗೆ ಹೋಗಿ ಆ ರಾಕ್ಷಸನನ್ನು ಕೊಂದು ಸತ್ಯಾ-ಧರ್ಮಕ್ಕೆ ಇವತ್ತೂ ಕಾಲಾ ಇದೇ ಅಂತ ಸಾಧಿಸಿ ತೋರಿಸ್ತಾರಂತೆ. ಹಂಗೇ ಹೆಣ್ತೀನೂ ಕರಕಂಡ್ ಬರ್ತಾನಂತೆ, ಆದ್ರೆ ಅವಳು ಯಾರೋ ಏನೋ ಅಂದ್ರೂ ಅಂತ ಬೆಂಕಿ ಹಾರಿ ಬೀಳ್ತಾಳಂತೆ!

ಪಾಪ ಯಾಕ್ ಆ ಕುವೆಂಪು ರಾಮಕೃಷ್ಣಾಶ್ರಮದಲ್ಲಿ ಕುತಗೊಂಡು ರಾಮಾಯಣ ದರ್ಶನಂ ಬರೀಬೇಕಿತ್ತು. ಅದೂ ಸಾಲ್ದೂ ಅಂತ ವೀರಪ್ಪ ಮೊಯಿಲಿ ಯಾಕೆ ತಮ್ಮದೇ ಆದ ಒಂದು ವರ್ಷನ್ನನ್ನ ಕುಟ್ಟಬೇಕಿತ್ತು. ಒಂದೇ ರಾಮಾಯ್ಣ ಅದನ್ನ ಹೇಳೋಕ್ ಹತ್ತಾರ್ ಭಾಷೇನಾದ್ರೂ ಯಾಕ್ ಬೇಕು, ಎಲ್ಲಾನು ಇಂಗ್ಲೀಷಿಗೆ ಟ್ರಾನ್ಸ್ಲೇಟ್ ಮಾಡಿದ್ರೆ ಆಯ್ತು, ನಾವೆಲ್ಲ ಇಂಗ್ಲೀಷ್ನಲ್ಲೇ ಓದ್‌ಕಂತೀವಲ್ಲ ಅಷ್ಟೇ ಸಾಕು. ಆ ನಾರಾಯಣಪ್ಪ ಯಾಕೆ ಕುಮಾರವ್ಯಾಸ ಭಾರತ ಬರೆದ, ಅದೂ ಸಾಲ್ದೂ ಅಂತ ಭೈರಪ್ಪನೋರು ಯಾಕೆ ತಮ್ಮ ಪರ್ವ ಕೊರೆದ್ರು? ಆ ಕಾರಂತ್ರು ನಲವತ್ತರ ಮೇಲೆ ಕಾದಂಬ್ರಿ ಬರೆದ್ರಂತೆಲ್ಲ ಅದ್ರಿಂದ ಏನಾಯ್ತು? ಅದ್ರ ಬದ್ಲಿ ಒಂದಿಷ್ಟು ಹಾಸ್ಯವಾಗಿ ಮಾತಾಡಿದ್ರೆ ಸಾಲ್ತಿತಿರ್ಲಿಲ್ವಾ?

ಯಾರೂ ಓದದ ಕೇಳದ ಕಂದಪದ್ಯಗಳು ಬೇಡವೇ ಬೇಡ. ರಗಳೆಗಳ ರಗಳೆ ಹಾಗೇ ಇರಲಿ. ಚಂಪೂ ಕಾವ್ಯ ಅಂತಂದ್ರೆ ಏನು, ಚಂದ್ರಶೇಖರ ಪಾಟೀಲರ ಹೊಸ ಕಾವ್ಯ ನಾಮಾನಾ? ಷಟ್ಪದಿ-ಗಿಟ್ಪದಿ ಅಷ್ಟೇ ಅಲ್ಲಲ್ಲೇ ಇರ್ಲಿ - ವೀರರವಿಸುತನೊಂದು ದಿನ ಪರಿತೋಷಮಿಗೆ ಭಾಗೀರತಿ ತೀರದಲಿ ತಾತಂಗರ್ಘ್ಯವನು ಕೊಡುತ - ಅಂತ ಮತ್ತಿನ್ನೆಲಾದ್ರೂ ಭಾಮಿನಿನಲ್ಲಿ ಹಾಡಿ ಬಿಟ್ಟೀರ. ದೊಡ್ಡ ನಾವೆಲ್ಲುಗಳನ್ನೆಲ್ಲ ಈ ಸರ್ತಿ ಛಳಿಗಾಲಕ್ಕೆ ಸುಟ್ಟು ಮೈ ಬೆಚ್ಚಗೆ ಮಾಡಿಕೊಳ್ಳೋಣ. ನಮ್ಮ ಸುತ್ತ ಮುತ್ಲ ಇರೋ ಲೈಬ್ರರಿಗಳನ್ನೆಲ್ಲ ಸ್ಕ್ಯಾನ್ ಮಾಡಿ ಆನ್‌ಲೈನ್‌ಗೆ ಹಾಕಿ ನಾವು ಓದ್ತೀವಿ. ಸೋಬಾನೇ ಪದ, ಸೋ ವಾಟ್? ಜನಪದ ಗೀತೆ ಹಳ್ಳಿಯೋರ್ ಗಾಥೆ ನಮಗಲ್ಲಪ್ಪ. ’ಹೊನ್ನ ಗಿಂಡಿಯ ಹಿಡಿದು ಕೈಯಲಿ...’ ಅಂದ್ರೆ ಏನ್ರಿ, ಈ ಮದ್ರಾಸಲ್ಲಿ ಗಿಂಡಿ ಇದೆಯಲ್ಲ ಅದಾ? ಆ ಡಿವಿ ಗುಂಡಪ್ಪೋರಿಗೆ ತಲೆ ನೆಟ್ಟಗಿತ್ತೋ ಇಲ್ವೋ ಅಷ್ಟೊಂದು ಬರೆಯೋದಾ? ಲೈಫು ಅಂದ್ರೆ ಸಿಂಪಲ್ಲು ಗೊತ್ತಿರಲಿಲ್ಲ ಅವ್ರಿಗೆ? ಪ್ರತಿಯೊಂದಕ್ಕೂ ಮಂಕುತಿಮ್ಮ ಅಂತ ಬರಕೊಂಡೋರ್ ಬೇರೆ, ಮಂಕುದಿಣ್ಣೇ ಅಂತ ಬರೀಲಿಲ್ಯಾಕೆ? ವಚನಾ - ಯಾರಿಗ್ ಯಾರ್ ಕೊಡೋ ಭಾಷೇ ಅದೂ?

ರೀ, ನಾಟ್ಕ ಯಾವನ್ರೀ ಬರೀತಾನೆ ಮತ್ತೆ ಅದನ್ನ ಓದೋರ್ ಯಾರು? ಸುಮ್ನೇ ಯಾವ್ದಾದ್ರೂ ಬ್ಲಾಗ್‌ನಲ್ಲೋ ಪೋರ್ಟಲಿನಲ್ಲೋ ಹಾಸ್ಯಮಯವಾಗಿ ಬರೀರಿ ಒಂದಿಷ್ಟ್ ಜನಾನಾದ್ರೂ ಓದ್ತಾರೆ. ಬಟ್, ನಿಮ್ ಬರಹ ಕೇವ್ಲ ಮುನ್ನೂರು ಪದಗಳಿಗೆ ಮಾತ್ರ ಇರ್ಲಿ, ಒಂದೊಂದು ಸಾಲೂ ಅದ್ರದ್ದೇ ಆದ ಪ್ಯಾರಾವಾಗಿರ್ಲಿ. ’ಅಂತಃಕರಣ’, ’ಅಶ್ಲೀಲ’ ಅನ್ನೋಪದಳನ್ನೇನಾದ್ರೂ ಉಪಯೋಗಿಸಿ ಬಿಟ್ಟೀರಾ ಮತ್ತೆ. ಈ ಪೋರ್ಟಲುಗಳ ಕ್ಲೈಂಟೆಲ್ಲುಗಳಿಗೆ ಗಂಟಲು ಕಟ್ಟಿಬಿಡುತ್ತೆ ಹುಷಾರು. ಮತ್ತೇ...ನಿಮ್ಮ್ ಟೈಟಲ್ಲು ಜನಪ್ರಿಯವಾಗಿರ್ಲಿ, ಯಾವ್ದಾದ್ರೂ ಹಾಡಿನ ಪಂಕ್ತಿ, ಅಲ್ಲ ಸಾಲಿದ್ರೆ ಒಳ್ಳೇದು - ’ಅನಿಸುತಿದೆ ಯಾಕೋ ಇಂದು...ಹೀಗೇ ಸುಮ್ಮನೇ’ ಅಂತ ಹಾಕಿ, ಅದು ಪ್ಯಾಪುಲ್ಲರ್ರು. ಈ ಸಾಲನ್ನು ಬರೆದ ಕವಿ ಅಂತ ಜನ ಕಾಯ್ಕಿಣಿಯವ್ರನ್ನ ಕೊಂಡಾಡೋದನ್ನ ನೋಡಿಲ್ಲ ನೀವು?

ಉತ್ತರ ಕರ್ನಾಟಕದ ಬಾಷೆ-ಮಾತು ಅದೊಂದ್ ಭಾಷೇನೇನ್ರಿ? ಏನ್ ಹೇಳೋದಿದ್ರೂ ಬೆಂಗ್ಳೂರ್ ಕನ್ನಡದಲ್ಲಿ ಹೇಳಿ. ’ನೀ ಹೀಂಗs ನೋಡಬ್ಯಾಡಾ ನನ್ನ’ ಅಂದ್ರೆ ಅದು ಕನ್ನಡಾನಾ? ಬೀದರ್-ಬೆಳಗಾವಿ ಎಲ್ಲಿವೆ? ಅಲ್ಲಿ ಯಾವ್ ಭಾಷೇ ಮಾತಾಡ್ತಾರೆ, ಜೈ ಸಿದನಾಯ್ಕ-ಮಾವೋತ್ಸೇ ತುಂಗಾ ಅಂತಾ ಕಂಬಾರರು ಅದೇನೇನೋ ಬರೆದಾರಂತಲ್ಲ?

***

ನಾವೇನೂ ಓದೋದಿಲ್ಲ ಅನ್ನೋದು ನಮ್ ಫ್ಯಾಷನ್ನ್ ಸಾರ್. ನಮ್ಮ ಸರ್ವತೋಮುಖ ಬೆಳವಣಿಗೆಗೆ ನಮ್ ನಮ್ ಮೊಬೈಲು-ಕಂಪ್ಯೂಟರ್ ಸ್ಕ್ರೀನ್‌ಗಳೇ ಸಾಕು ಸಾರ್. ಎರಡೇ ಎರಡು ಸಾಲಲ್ಲಿ ಹೇಳದ ಕಥೆ ಅದೂ ಕಥೇನಾ? ಎಸ್ಸೆಮೆಸ್ಸ್ ಮೆಸ್ಸೇಜುಗಳನ್ನು ಬಿಟ್ಟು ಇರೋವೆಲ್ಲಾ ಜೋಕಾ? ಸಂತಾ ಸಿಂಗ್, ಬಂತಾ ಸಿಂಗ್, ಕೋಲ್ಯಾ, ಸರ್ದಾರ್‌ ಜೀಗಳ ಅಜ್ಜ-ಮುತ್ತಾತರೆಲ್ಲ ಬಾವಿಯಲ್ಲಿ ಬಿದ್ದಿರೋ ಮಂದೀ ಗಡಿಯಾರಕ್ಕೆ ಕೀಲಿ ಕೊಡ್ತಾನೇ ಇದಾರ್ ಸಾರ್. ಅಲ್ಲಿಂದ ಕದ್ದು ಇಲ್ಲಿ, ಇಲ್ಲಿಂದ ತಂದು ಅಲ್ಲಿ ತುಂಬಿಸೋ ಫಾರ್ವಡ್ ಮಾಡಿರೋ ಸ್ಪ್ಯಾಮ್‌ ಸಂದೇಶಗಳೇ ಈ ಶತಮಾನದ ಅಂತಃಸತ್ವಾ ಸಾರ್...ಓಹ್ ಕ್ಷಮಿಸಿ, ಅಂತಃಸತ್ವಾ ಅಂದ್ರೆ ಏನು ಅಂತ ಯಾರಿಗ್ಗ್ ಗೊತ್ತು?

ನನ್ನದೊಂದು ಹೊಸಾ ಕವ್ನ ಬರ್ದಿದೀನಿ ಕೆಳಗೆ ನೋಡಿ: (ಪದಗಳ ಕೆಳಗೆ ಪದಗಳು ಬಂದ್ರೆ ಪದ್ಯಾ ಅಲ್ವಾ? ಪದ್ಯಾ-ಗದ್ಯಾ ಎಲ್ಲಾ ಒಂದೇ ಬಿಡಿ)
ಅಮೇರಿಕದಲ್ಲಿ ಇದೀವಿ ಕನ್ನಡ ಸಿನಿಮಾ ನೋಡಲ್ಲ
ಅಮೇರಿಕದಲ್ಲಿ ಇದೀವಿ ಕನ್ನಡ ಕಾನ್ಸರ್ಟ್ ಬ್ಯಾಡವೇ ಬ್ಯಾಡ.
ಕನ್ನಡ ಸಿಡಿ ಮಾರೋರ್ ಇದ್ರೆ ಅವರಿಂದ್ಯಾಕೆ ಕೊಳ್ಬೇಕು?
ಕನ್ನಡ ಪುಸ್ತಕ ಅನ್ನೋ ವಸ್ತೂನ ಕೊಂಡ್ ಕೊಂಡ್ ಯಾಕೆ ಓದ್ಬೇಕು?
ನಾವ್ ಇತ್ಲಾಗ್ ಕನ್ನಡ ಪ್ರೊಗ್ರಾಮ್ ನೋಡಲ್ಲ, ಇಂಗ್ಲೀಷ್ ಕಾನ್ಸರ್ಟ್ ತಿಳಿಯಲ್ಲ.
ಹಗ್ಲೂ ರಾತ್ರೀ ದುಡ್ದೂ ದುಡ್ದೂ, ಸ್ಟ್ರೆಸ್ಸಿನಿಂದ ಸೊರಗಿರೋ ಭುಜಕ್ಕೆ ಅಮೃತಾಂಜನ್ ಸ್ಟ್ರಾಂಗ್ ಲೇಪಿಸ್ಕೊಂಡು,
ನಲವತ್ತ್ ಆಗೋಕ್ಕಿಂತ ಮುಂಚೆ ಚಾಳೀಸ್ ತಗಲಾಡಿಸ್ಕೊಂಡ್
ನರನಾಡಿಗಳಲ್ಲೆಲ್ಲ ಕೊಬ್ಬು-ಕೊಲೆಸ್ಟ್ರಾಲ್ ಹೆಚ್ಚಿಸಿಕೊಂಡು
ನಮ್ಮೂರಿನ ದನಕಾಯೋ ಕೆಲಸ ಮಾಡೋರಿಗಿಂತ
ಐದೇ ಐದು ವರ್ಷ ಹೆಚ್ಗೆ ಬದುಕೋ ಬವಣೇನಾದ್ರೂ ಯಾತಕ್ಕೆ?

ಹೆಂಗಿದೆ? ನಿಮ್ಮ್ ಕಾಮೆಂಟ್ ಹಾಕಿ, ಸಕತ್ತಾಗಿದೆ ಕವ್ನಾ ಅಂತ ಬರೀರಿ. ನಿಮಿಗೆ ನಾನ್ ಕಾಮೆಂಟ್ ಹಾಕ್ತೀನಿ, ನನಿಗೆ ನೀವ್ ಹಾಕಿ. ಅದೇ ಸಂಬಂಧ ಹಂಗೇ ಬೆಳೀಲಿ. ನಾನು ಬರ್ದಾಗ್ಲೆಲ್ಲ ನೀವ್ ಬ್ಯಾಡಾ ಅಂದ್ರೂ ತಿಳಸ್ತೀನಿ - ಓದಿ, ಕಾಮೆಂಟ್ ಹಾಕಿ, ನಾನು ಅಷ್ಟೇ - ನಮ್ ಬಳಗಾ ಹಿಂಗೇ ಬೆಳೀಲಿ - ನಾಳೆ ನಮಗೆಲ್ಲರಿಗೂ ರಾಜ್ಯೋತ್ಸವ ಪ್ರಶಸ್ತಿ ಸಿಗಲಿ. ಒಂದ್ ಸ್ಟೇಜ್‌ ಮೇಲೆ ಅದೆಷ್ಟು ಜನಗಳಿಗೆ ನಿಲ್ಲೋಕ್ ಆಗುತ್ತೋ ಅವರಿಗೆಲ್ಲ ಪ್ರಶಸ್ತಿ ಸಿಗುತ್ತೆ. ಜಿಲ್ಲೆಗೊಂದೊಂದು, ಜಾತಿಗೊಂದೊಂದು, ಭೀತಿಗೊಂದೊಂದು, ಸರ್ಕಾರದ ಮಿನಿಷ್ಟ್ರುಗಳ ಶಿಫಾರಸ್ಸಿಗೊಂದೊಂದು. ನಾನು ಬರೆದಿದ್ದನ್ನೆಲ್ಲ ಬುಕ್ ಮಾಡಿಸ್ತೀನಿ. ಅದ್ರ ಬಿಡುಗಡೆಗೆ ನಿಮ್ಮನ್ನ್ ಕರ್ದು ಊಟ ಹಾಕಿಸ್ತೀನಿ. ನನ್ನ ಬುಕ್ಕ್ ಕೊಂಡು ಒಂದೈದು-ಹತ್ತು ಡಾಲರ್ ಕಳ್ಸಿ! ಯಾವ್ ಶಿವರಾಮ ಕಾರಂತ್ರೂ-ಬೈರಪ್ಪಾ-ಬೇಂದ್ರೆ ಮಾಡ್ದೇ ಇರೋ ರೆಕಾರ್ಡ್ ನನ್ನ ಪುಸ್ತಕಗಳು ಮಾಡಿವೆ, ಗೊತ್ತಿಲ್ಲಾ ನಿಮಗೇ - ನಾನೇ ಬೆಶ್ಟ್ ಸೆಲ್ಲರ್ರು.

***

ನಿಮ್ಮ್ ಮಕ್ಳು, ಅಲ್ಲ ಮಕ್ಳುಗಳು, ಕನ್ನಡದಲ್ಲೇ ಮಾತಾಡ್ತಾವಾ? ಎಲ್ರೂ ಅತ್ತಂಗೇ ಅಳ್ತಾವಾ ಅಥವಾ ಅದಕ್ಕೂ ಎಸ್ಸೆಮ್ಮೆಸ್ಸ್ ವರ್ಷನ್ನ್ ಬಂದಿದೆಯಾ? ಕನ್ನಡ ಮಾಧ್ಯಮವೇ ಬ್ಯಾಡ ಅಂತ ಕೋರ್ಟುಗಳೇ ತೀರ್ಪು ಕೊಟ್ವಂತೆ? ಪ್ರಪಂಚದ ಸಾವ್ರಾರು ಭಾಷೆ ಫೈಲುಗಳನ್ನೆಲ್ಲ ಡಿಲ್ಲೀಟ್ ಮಾಡಿ ಬಿಡಿ, ಇಂಗ್ಲೀಷ್ ಒಂದೇ ಸಾಕು. ಇನ್ನೂ ಈಗ್ತಾನೆ ಕಣ್ಣ್ ಬಿಟ್ಟು ನೋಡ್ತಾ ಇರೋ ಹುಡುಗ್ರಿಗೆ ಲೋಕಲ್ ಸಿಲಬಸ್ ಬ್ಯಾಡಾ, ಸಿಬಿಎಸ್ಸಿ-ಐಸಿಎಸ್ಸಿ ಕೊಡ್ಸಿ. ದೊಡ್ಡ ಸ್ಕೂಲಲ್ಲಿ ಓದ್ಸಿ ದೊಡ್ಡ ಮನ್ಷರಾಗ್ತಾರೆ. ಪಬ್ಲಿಕ್ ಸ್ಕೂಲ್ ಅಂತ ಹೆಸ್ರು ಇಟಗೊಂಡಿರೋ ಪ್ರೈವೇಟ್ ಸ್ಕೂಲ್‌ಗಳೇ ಚೆಂದ. ವರ್ಷವಿಡೀ ಇರೋ ಉರಿಬಿಸ್ಲಲ್ಲೂ ಮಕ್ಳು ಟೈ ಕಟ್ಲಿ, ಎಷ್ಟ್ ಚೆಂದ ಕಾಣ್ತಾರ್ ಗೊತ್ತಾ? ಅಮ್ಮ-ಅಪ್ಪ ಅನ್ನೋಕ್ ಮುಂಚೆ ಮಮ್ಮೀ-ಡ್ಯಾಡೀ ಅನ್ಲೀ ಆಗ್ಲೇ ನಮಗೊಂದ್ ಘನತೆ. ಅಯ್ಯೋ ಎಲ್ಲಾದ್ರೂ ಮಕ್ಳು ಓಡಾಡೋದು ಉಂಟೇ, ಕೈ ಕಾಲ್ ಸವದು-ಗಿವದು ಹೋದ್ರೆ ಕಷ್ಟಾ - ಹೋಗ್ ಕಾರಲ್ಲ್ ಬಿಟ್ಟ್ ಬನ್ನಿ, ಏನು?

ತಪ್ಪ್ ಮಾಡ್ದೇ ಸಾರ್ ನಾನು, ಇನ್ನೊಂದ್ ಇಪ್ಪತ್ತೈದು ವರ್ಷ ಬಿಟ್ಟು ಹುಟ್ಟಬೇಕಿತ್ತು. ನಮ್ಮ್ ಜನರೇಷನ್ನಲ್ಲಿರೋಷ್ಟು ಟೆನ್ಷನ್ನ್ ಎಲ್ಲಿದೆ ಹೇಳಿ...ನಾವೇ ದೊಡ್ಡೋರು, ನಾವೇ ಸರ್ವಸ್ವ, ನಮ್ಮದೇ ದೊಡ್ದು, ಗೊತ್ತಾಯ್ತಾ?

(Take it easy now)