Thursday, May 07, 2020

ಏರ್‌ಪ್ಲೇನುಗಳು ಹಾರಲು ಅದು ಹೇಗೆ ಸಾಧ್ಯ?

ನಾನು ಮೊಟ್ಟ ಮೊದಲನೇ ಸಾರಿ ಬಾಂಬೆ ಏರ್‌ಪೋರ್ಟ್‌ನಲ್ಲಿ ದೊಡ್ಡ ಜೆಂಬೋ ಜೆಟ್ ವಿಮಾನವನ್ನು ನೋಡಿದಾಗ, ಏರ್‌ಪೋರ್ಟಿನಲ್ಲಿಯೇ ನನ್ನ ಸಹ ಪ್ರಯಾಣಿಗರೊಂದಿಗೆ ಇದು ಅಷ್ಟು ವೇಗವಾಗಿ ಎತ್ತರದಲ್ಲಿ ಹಾರಾಡಲು ಹೇಗೆ ಸಾಧ್ಯ?  ಏರೋಡೈನಮಿಕ್ಕು ಅಂತೆಲ್ಲಾ ಅವರೇನೇನೋ ಸಮಾಧಾನ ಹೇಳಿದರೂ, ನನಗೆ ಅದರ ಒಳಗೆ ಕುಳಿತು ಅದು ವೇಗವಾಗಿ ಓಡಿ, ಅಂತರದಲ್ಲಿ ತೇಲತೊಡಗಿದಾಗಲೇ ನನಗೆ ಹೊರಗೆ ನೋಡಿದಾಗ ನಂಬಬೇಕೋ ಬಿಡಬೇಕೋ ಗೊತ್ತಾಗಿರಲಿಲ್ಲ!
ನಮ್ಮ ಸೈನ್ಸ್, ಫಿಸಿಕ್ಸ್ ತರಗತಿಯಲ್ಲಿ ಮನಸಿಟ್ಟು ಕೇಳುತ್ತಿದ್ದೆವೋ ಇಲ್ಲವೋ ಗೊತ್ತಿಲ್ಲ, ಆಗೆಲ್ಲ ಗಾಳಿಯಿಂದ ಪೇಪರ್ ಎದ್ದು ಹಾರಾಡುವುದೇ ಏರೋ ಡೈನಮಿಕ್ ಫೋರ್ಸ್ ಎಂದು ನಂಬಿಕೊಂಡ ದಿನಗಳು.  ಅಂತಹ ಹಳ್ಳಿಯ ಎಡಬಿಡಂಗಿ ಜಗಮೊಂಡನನ್ನು ತೆಗೆದುಕೊಂಡು ಏಕ್‌ದಂ ಮೊಟ್ಟ ಮೊದಲನೇ ಪ್ರಯಾಣವೇ ಇಂಟರ್‌ನ್ಯಾಷನಲ್ ಪ್ರಯಾಣವಾಗಿರುವಂತಾದಾಗ ಯಾರು ತಾನೆ ಹೇಗೆ ನಂಬ ಬಲ್ಲರು?

***
ಆಗಿನ ಎಂಭತ್ತರ ದಶಕದಲ್ಲಿ ಏರ್‌ಪ್ಲೇನಿನ ಸಹವಾಸ ಮಾಡುವವರು, ಮಾಡುತ್ತಿದ್ದವರು ಬಹಳ ಧನಿಕರಾಗಿರುತ್ತಿದ್ದರು.  ನಮ್ಮೂರಿನ ಬಸ್ಸು-ಲಾರಿಗಳನ್ನು ಮತ್ತು ಅಪರೂಪಕ್ಕೊಮ್ಮೆ ಕಾರುಗಳನ್ನು ರಸ್ತೆ ಮೇಲೆ ಓಡುವುದನ್ನ ನೋಡುತ್ತಿದ್ದ ನಾವು ಅನಂತರ ಅಂತರ ರಾಜ್ಯ ಪ್ರಯಾಣಕ್ಕೆ ರೈಲಿನಲ್ಲಿ ಹೋಗಿದ್ದನ್ನು ಬಿಟ್ಟರೆ, ಉಳಿದೆಲ್ಲ ರೀತಿಯ ಪ್ರಯಾಣ ಅಂದರೆ ದೊಡ್ಡ ಹಡಗು ಅಥವಾ ವಿಮಾನದಲ್ಲಿ ಓಡಾಡುವುದು ಕನಸೇ ಆಗಿತ್ತು.  ಅಪರೂಪಕ್ಕೊಮ್ಮೆ, ರಾತ್ರಿ ಎಲ್ಲಾದರೂ ಓಡಾಡುತ್ತಿದ್ದಾಗ ನಿರಾಳವಾದ ಆಕಾಶವನ್ನು ನೋಡುತ್ತಿದ್ದರೆ, ಅವುಗಳ ಸದ್ದೂ ಸಹ ಕೇಳದಷ್ಟು ಅನತಿ ದೂರದಲ್ಲಿ, ಮಿಣಿಮಿಣಿ ದೀಪ ಹಾಕಿಕೊಂಡು ಹಾರುತ್ತಿರುವ ವಿಮಾನಗಳು ನಮಗೆ ಗಗನ ಚುಕ್ಕಿಗಳೇ ಆಗಿದ್ದವು.  ಅಂತಹ ಒಂದು "ವಿಮಾನ"ದ ಕಲ್ಪನೆ ಬಹಳ ವಿಚಿತ್ರವಾಗಿರುತ್ತದೆ: ಅವುಗಳ ಕಿಟಕಿ-ಬಾಗಿಲುಗಳು ಹೀಗಿರಬಹುದು/ಹಾಗಿರಬಹುದು!  ಅವುಗಳಲ್ಲಿ ಗಗನಸಖಿಯರು ಎಷ್ಟೆಲ್ಲ ಸುಂದರಿಯರಿರುತ್ತಾರೆ! ಪ್ರಯಾಣಿಕರೆಲ್ಲ ಒಳ್ಳೊಳ್ಳೆಯ ಉಡುಪುಗಳನ್ನು ಧರಿಸಿಕೊಂಡೋ, ಸೂಟು ಬೂಟಿನಲ್ಲಿರುತ್ತಾರೆ!  ಇತ್ಯಾದಿ, ಇತ್ಯಾದಿ... ಇದು ನಿಜವಾಗಿಯೂ "ಮೇಲ್" ದರ್ಜೆಯ ಪ್ರಯಾಣದ ವಿಧಿ ವಿಧಾನ ಎಂದು ನನಗೆ ಗ್ಯಾರಂಟಿಯಾಗಿತ್ತು.  ಆದರೆ, ನನ್ನ ಮೊದಲ ಅನುಭವದಲ್ಲಿಯೇ, ಈ ಎಲ್ಲ ಅನುಭೂತಿಗಳು ಸಂಪೂರ್ಣ ಯಾವತ್ತಿಗೋ ನಶಿಸಿಹೋದವು!

ವಿಮಾನಗಳ ಕಿಟಕಿಗಳು ಬಹಳ ಚಿಕ್ಕವು.  ಬಸ್ಸು ರೈಲಿನ ಕಿಟಕಿಗಳ ಹಾಗೆ ಅವುಗಳಲ್ಲಿ ಓಪನ್/ಕ್ಲೋಸ್ ಎಂದು ನೆಗೋಟೀಯೇಟ್ ಮಾಡೋ ಅಂತದ್ದು ಏನೂ ಇರಲ್ಲ.  ಬರೀ ಅವುಗಳ ಕವರನ್ನು ಮುಚ್ಚಬೇಕು, ಇಲ್ಲ ತೆರೆದಿರಬೇಕು, ಅಷ್ಟೇ.  ಇನ್ನು ಈಗಿನ ಏರ್‌ಪ್ಲೇನುಗಳ ಸೀಟುಗಳೋ ಆ ದೇವರಿಗೇ ಪ್ರೀತಿ.  ನಮ್ಮೂರಿನ ಸೆಮಿ ಲಕ್ಸುರಿ ಬಸ್ಸುಗಳ ಸೀಟುಗಳು ಇದಕ್ಕಿಂತ ಚೆನ್ನಾಗಿದ್ದವು.  ಅವರು ಕೊಡೋ ಊಟ, ಅದನ್ನು ನಾವು ಸಮಯವಲ್ಲದ ಸಮಯದಲ್ಲಿ ಲಘುಬಗೆಯಿಂದ ತಿಂದಂತೆ ಮಾಡಿ, ಪೇಪರಿಗೆ ಕೈ ಒರೆಸಿ ದೂರವಿಡುವುದು!  ಅಲ್ಲದೇ ಸಹ ಪ್ರಯಾಣಿಕರ್‍ಯಾರೂ ಸೂಟು-ಬೂಟಿನಲ್ಲಿ ಇದ್ದಂತಿಲ್ಲ... ಯಾವುದೋ ತೇಪೆ ಹಾಕಿದ ಜೀನ್ಸ್ ಅನ್ನು ಹಾಕಿಕೊಂಡವರೂ ಇದ್ದರೂ.  ಒಮ್ಮೆ ಕುಳಿತುಕೊಂಡರೆ ಗಂಟೆಗಟ್ಟಲೆ ಕುಳಿತೇ ಇರಬೇಕು, ಅಲ್ಲಿಲ್ಲಿ ಓಡಾಡುವಂತಿಲ್ಲ, ಆಕಡೆ ತಿರುಗುವಂತಿಲ್ಲ, ಈ ಕಡೆ ತಿರುಗುವಂತಿಲ್ಲ. ಆಮೇಲೆ ಏಕತಾನತೆಯ ಒಂದೇ ಒಂದು ಸ್ವರದ ಕರ್ಕಶ ನಾದ... ಜೊತೆಯಲ್ಲಿ ಬೇರೆ ಟೊಂಕಕ್ಕೆ ಸೀಟುಬೆಲ್ಟ್ ಅನ್ನು ಕಟ್ಟಿಕೊಂಡಿರಬೇಕು. ಇನ್ನು ಗಗನ ಸಖಿಯರೆಲ್ಲ "ಕ್ಯಾಬಿನ್ ಕ್ರೂ"ಗಳಾಗಿದ್ದರು, ಅವರೂ ಸಹ ನಮ್ಮಂತೆಯೇ ಸಹಜವಾಗಿ ಕಂಡುಬಂದರು.  ಅಬ್ಬಾ, ಮೊಟ್ಟ ಮೊದಲ ಬಾರಿ ಯೂರೋಪನ್ನು ದಾಟಿ ಅಮೇರಿಕಕ್ಕೆ ಬರುವುದೆಂದರೆ, ಪ್ರಾಣವನ್ನು ಕೈಯಲ್ಲಿ ಜೋಪಾನವಾಗಿ ಹಿಡಿದುಕೊಂಡು ಬಂದಂತಾಗಿತ್ತು.  ಆದರೂ ಏನೆಲ್ಲ ಕನಸುಗಳು, ಹಾಗೆ-ಹೀಗೆ ಎನ್ನುವ ಮಾತುಗಳು... ನಮ್ಮ ಸೂಟ್‌ಕೇಸ್‌ಗಳಲ್ಲಿ ಇನ್ನೆಂದಿಗೂ ಸಾಕಾಗುವಷ್ಟು ಮಸಾಲೆ ಪದಾರ್ಥಗಳು, ಚಟ್ಣಿಪುಡಿಗಳು... (ನಮ್ಮ ಜೊತೆಗೆ ಬಂದ ಕುಮರೇಸನ್ ಒಂದು ಮೂಟೆ ಅಕ್ಕಿಯನ್ನೂ ತಂದಿದ್ದ!)... ಒಂದು ರೀತಿ ಭಾರತವನ್ನು ಬಿಟ್ಟು ಅಮೇರಿಕಕ್ಕೆ ಬರುವಾಗ ಒಂದು ರೀತಿಯ ನೋವು ಆಗಿದ್ದು ಸಹಜ... ಆದರೆ, ನಾವು ಬಂದದ್ದು H1B ವೀಸಾದಲ್ಲಿ, ಕೇವಲ ಮೂರೇ ಮೂರು ವರ್ಷಗಳ ತರುವಾಯ ವಾಪಾಸು ಹೋಗುತ್ತೇವಲ್ಲ, ಮತ್ತೇನು ತಲೆಬಿಸಿ!

***

ಕೆಲವೊಮ್ಮೆ ಹೀಗೆಯೇ ಆಗುತ್ತದೆ... ನಾವು ಊಹಿಸಿಕೊಂಡ ತತ್ವಗಳು ನಮ್ಮ ಕಲ್ಪನೆಯನ್ನು ಮೀರಿ ಬೆಳೆಯುತ್ತವೆ.  ಆದರೆ, ಆ ಬೆಳೆದ ಊಹೆಗಳು ನಮ್ಮ ಬುದ್ಧಿಗೆ ಮೀರಿ ಪ್ರಬುದ್ಧವಾಗಿರುತ್ತವೆ.  ಒಂದು ವಿಮಾನದ ಅಗಲ-ಉದ್ದ, ಇಷ್ಟಿಷ್ಟೇ ಇರಬೇಕು ಎಂದು ಇಂಜಿನಿಯರುಗಳು ಡಿಸೈನ್ ಮಾಡಿರುತ್ತಾರಲ್ಲ?  25 ಕೆಜಿ. ಸೂಟ್‌ಕೇಸ್ ಒಂದು ಗಗನದಲ್ಲಿ ಹಾರಾಡಲು ಸಾಧ್ಯವೇ? ಇಲ್ಲ.  ಆದರೆ, ಅದನ್ನು 78,000 ಕೆಜಿ, ಜೆಂಬೋ ಜೆಟ್‌ನಲ್ಲಿ ಇಟ್ಟು ಅದನ್ನು ಗಂಟೆಗೆ 920 ಕಿಲೋಮೀಟರ್ ವೇಗದಲ್ಲಿ ನೆಲದಿಂದ 11  ಕಿಲೋಮೀಟರ್ ಎತ್ತರದಲ್ಲಿ ಹಾರಿಸಿ ನೋಡಿ ಅಂತಹ ವಿಮಾನ ಬರೀ ಒಂದು ಸೂಟ್‌ಕೇಸ್ ಮಾತ್ರ ಏಕೆ 250 ಟನ್ ಭಾರವನ್ನೂ ಎತ್ತಿಕೊಂಡು ಹೋಗಬಲ್ಲದು!  ಇದನ್ನು ನಾವು ನಮ್ಮ ಹುಲುಮಾನವರ ಮನದಲ್ಲಿ ಹೇಗೆ ಊಹಿಸಲು ಸಾಧ್ಯವಿಲ್ಲವೋ ಅದೇ ರೀತಿ, ಪ್ರಪಂಚದ ಅನೇಕಾನೇಕ ಸೂಕ್ಷ್ಮಗಳು ನಮ್ಮನ್ನು ಮೀರಿದವಾಗಿರುತ್ತವೆ.  ಇಂತಹ ವಿಸ್ಮಯಗಳನ್ನು ನೋಡಿ, ಸವೆದು, ತನು-ಮನ ತಣಿಸಿಕೊಳ್ಳಲು ಎಷ್ಟು ಆಲೋಚಿಸದರೂ ಸಾಲದು ಎನ್ನುವುದು ಈ ಹೊತ್ತಿನ ತತ್ವವಾಗುತ್ತದೆ.

ನಮ್ಮ ಸುತ್ತಲಿನ ಪ್ರತಿಯೊಂದರಲ್ಲೂ ಈ ರೀತಿಯ ವಿಶ್ವರೂಪ ದರ್ಶದನ ಅವಕಾಶಗಳಿವೆ... ಅವುಗಳನ್ನು ನೋಡಲು ಕಣ್ಣುಗಳಿರಬೇಕಷ್ಟೆ!

Wednesday, May 06, 2020

ಗೌಡರು ಚಹಾ ಪುಡಿ ಕದ್ದ ಪ್ರಸಂಗವು...

ಇದು ಮೂರು ದಶಕಗಳ ಹಳೆಯ ಕಥೆಯಾದರೂ ಇವತ್ತಿಗೂ ನಮ್ಮನೆಯಲ್ಲಿ ನಗೆ ಉಕ್ಕಿಸುತ್ತದೆ.  ಮೊನ್ನೆ ಕೊರೋನಾ ವೈರಸ್ ಸ್ಪೆಷಲ್ ಎಂದು ನಮ್ಮ ಹಳವಂಡಗಳನ್ನೆಲ್ಲ ಹರಡಿಕೊಂಡು ಅಕ್ಕ-ತಮ್ಮ ಮಾತನಾಡುತ್ತಿದ್ದಾಗ, ಅಲ್ಲಿಯೂ ನುಸುಳಿತು, ಈ ಚಹಾ ಪುಡಿಯ ಕಥೆ... ಇದನ್ನು ನೆನಪಿಸಿಕೊಂಡಾಗಲೆಲ್ಲ ಇವತ್ತಿಗೂ ನಮ್ಮಲ್ಲಿ ನಗೆ ಉಕ್ಕಿಸುವುದು ಖಂಡಿತ.

***

ನನ್ನ ಅಕ್ಕ ಆನವಟ್ಟಿಯಿಂದ ಹನ್ನೆರೆಡು ಕಿಲೋ ಮೀಟರ್ ದೂರದ ಜಡೆ ಗ್ರಾಮದಲ್ಲಿ ಟೀಚರ್ ಆಗಿ ನೇಮಕಗೊಂಡಾಗ, ಪ್ರತಿನಿತ್ಯವೂ ಬಸ್ಸಿನಲ್ಲಿ ಹೋಗಿ ಬರುವ ಕಷ್ಟವೇಕೆ ಎಂದು ಅಲ್ಲಿಯೇ ಒಂದು ಬಾಡಿಗೆ ಮನೆ ಮಾಡಿಕೊಂಡು ಇದ್ದಳು.  ಆಗೆಲ್ಲಾ ಬಸ್ಸುಗಳ ಅನುಕೂಲ ಅಷ್ಟು ಇರಲಿಲ್ಲ.  ಬಸ್ಸುಗಳ ಅನುಕೂಲವಿದ್ದರೂ ಹನ್ನೆರಡು ಕಿಲೋಮೀಟರ್ ಅನ್ನು ಕಾಲುನಡಿಗೆಯಲ್ಲಿ ಎರಡೂ ಕಾಲು ಘಂಟೆಯೊಳಗೆ ಕ್ರಮಿಸಬಹುದಿತ್ತು, ಅದೇ ದೂರಕ್ಕೆ ಬಸ್ಸಿನಲ್ಲಿ ಮೂರು ಘಂಟೆಗಳ ಕಾಲ ತೆಗೆದುಕೊಳ್ಳುತ್ತಿತ್ತು.  ಅಲ್ಲದೇ ಎರಡು ಬಸ್ಸುಗಳನ್ನು ಬದಲಾಯಿಸಬೇಕಾಗಿತ್ತು: ಆನವಟ್ಟಿಯಿಂದ ತವನಂದಿಗೆ ಒಂದು, ತವನಂದಿಯಿಂದ ಜಡೆಗೆ ಹೋಗುವ ಬಸ್ಸು ಮತ್ತೊಂದು.

ಮನೆ ಅಂದ ಮೇಲೆ ಒಂದಿಷ್ಟು ಪಾತ್ರೆ-ಪಡಗ ಇವೆಲ್ಲ ಇರಬೇಕಾದ್ದೆ.  ಅಡುಗೆ ಮಾಡಿಕೊಳ್ಳುತ್ತೇವೆ ಎಂದ ಮೇಲೆ, ಎಲ್ಲ ಸೌಲಭ್ಯಗಳ ಜೊತೆಗೆ ಕಾಫಿ-ಟೀ ಮಾಡಿಕೊಳ್ಳುವುದಕ್ಕೂ ಅನುಕೂಲವಿಲ್ಲದಿದ್ದರೆ ಹೇಗೆ? ಈ ರೀತಿ, ನನ್ನ ಅಕ್ಕ ಒಂದು ಸಣ್ಣ ಕುಟುಂಬಕ್ಕೆ ಎಷ್ಟು ಬೇಕೋ ಅಷ್ಟು ಸಾಮಾನುಗಳ ಜೊತೆಗೆ ಒಂದು ಸಣ್ಣ ವ್ಯವಸ್ಥಿತ ಕುಟುಂಬಕ್ಕೆ ಏನೇನು ಬೇಕೋ ಅಷ್ಟನ್ನೂ ಹೊಂದಿಸಿಕೊಂಡು ನೆಮ್ಮದಿಯಿಂದ ಇದ್ದಳು.

ಹೀಗಿರುವಾಗ ಒಂದು ಸಣ್ಣ ತೊಂದರೆ ಕಾಣಿಸಿಕೊಳ್ಳತೊಡಗಿತು.  ಆಗಿನ ಕಾಲದಲ್ಲಿ ಕಾಫಿ ಪುಡಿ, ಟೀ-ಪುಡಿಯನ್ನು ಬಹಳಷ್ಟು ದಾಸ್ತಾನು ಮಾಡಿ ಯಾರೂ ಇಟ್ಟುಕೊಳ್ಳುತ್ತಿರಲಿಲ್ಲವೆನಿಸುತ್ತದೆ.  ಅಕ್ಕ ತಂದಿಟ್ಟುಕೊಂಡ ಚಾಪುಡಿ ಡಬ್ಬದಲ್ಲಿ ದಿನೇದಿನೇ ಪುಡಿಯ ಪ್ರಮಾಣ ಕಡಿಮೆ ಆಗುವುದನ್ನು ಇವಳು ಗಮನಿಸಿದಳು.  ಇವಳು ಬಿಟ್ಟರೆ ಮತ್ತೆ ಬೇರೆ ಯಾರೂ ಇರದ ಮನೆಯಲ್ಲಿ ಅದು ಖಾಲಿ ಆಗಲು ಹೇಗೆ ತಾನೆ ಸಾಧ್ಯ? ಅದರೂ ಇರಲಿ ಎಂದು ಡಬ್ಬದಲ್ಲಿ ಒಂದು ಗುರುತು ಮಾಡಿ ಮರುದಿನ ಶಾಲೆಗೆ ಹೋಗಿ ಬಂದು ನೋಡುತ್ತಾಳೆ ಮತ್ತೆ ಕಡಿಮೆ ಆಗಿದೆ.  ಇದು ಏನೇ ಕಿತಾಪತಿ ಇದ್ದರೂ ಪಕ್ಕದ ಮನೆ ಗೌಡರ ಕಿತಾಪತಿಯೇ ಸೈ ಎಂದು, ಇವರಿಗೆ ಬುದ್ಧಿ ಕಲಿಸಬೇಕೆಂದು ಯೋಚನೆ ಮಾಡಿದಳು.

ಒಂದು ಪೋರ್ಶನ್ ಮನೆಯಲ್ಲಿ ಎರಡು ಕುಟುಂಬಗಳು ವಾಸಿಸೋದು ಸಹಜ.  ಬಾಡಿಗೆ ಕೊಡುವ ಮುಖೇನ ಅರ್ಧ ಮನೆಯನ್ನು ಇನ್ನೊಬ್ಬರಿಗೆ ವಾಸಿಸಲಿಕ್ಕೆ ಕೊಟ್ಟು ಅದರಿಂದ ಒಂದು ನಿರ್ದಿಷ್ಟ ಆದಾಯ ಪಡೆಯುವುದು ಎಲ್ಲರೂ ಬಲ್ಲ ವಾಡಿಕೆ.  ಆದರೆ, ಈ ರೀತಿ ಬಾಡಿಗೆ ಮನೆ ಕೊಟ್ಟವರು, ಟೀ ಪುಡಿಯನ್ನು ಕದಿಯುತ್ತಾರೆ ಎಂದು ಯಾರು ತಾನೇ ಯೋಚಿಸಲಿಕ್ಕೆ ಸಾಧ್ಯ?

ನನ್ನ ಅಕ್ಕ ಅಂದಿನಿಂದ ಟೀ ಮಾಡಿ ಉಪಯೋಗಿಸಿದ್ದ ಪುಡಿಯನ್ನು ಸಂಗ್ರಹಿಸಿ ಇಡಲಾರಂಭಿಸಿದಳು.  ಅದು ಸುಮಾರು ಒಂದು ಡಬ್ಬ ತುಂಬುವ ಪ್ರಮಾಣ ಬರುತ್ತಲೇ, ಅದನ್ನು ಒಟ್ಟು ಗೂಡಿಸಿ, ಎರಡು ಮೂರು ಸಾರಿ ಚೆನ್ನಾಗಿ ಕುದಿಸಿ ಅದರಲ್ಲಿದ್ದ ಚಹಾದ ಗುಣವನ್ನೆಲ್ಲಾ ತೆಗೆದುಬಿಟ್ಟು, ನಂತರ ಬಿಸಿಲಿನಲ್ಲಿ ಚೆನ್ನಾಗಿ ಒಣಗಿ ಹಾಕಿದಳು.  ಅದು ಚೆನ್ನಾಗಿ ಒಣಗಿದ ನಂತರ, ಮೇಲ್ನೋಟಕ್ಕೆ ಕಪ್ಪು ಚಹಾಪುಡಿಯಂತೆ ಕಂಡು ಬಂದರೂ ಅದರಲ್ಲಿ ಚಹಾದ ಒಂದು ಲವಲೇಶ ಅಂಶವೂ ಇದ್ದಿರಲಿಲ್ಲ.  ನಂತರ ಆ ಪುಡಿಯನ್ನೆಲ್ಲ ತನ್ನ ಚಹಾಪುಡಿ ಡಬ್ಬದಲ್ಲಿ ಹಾಕಿಟ್ಟು ಕಳ್ಳ ಬಂದು ಕದಿಯುವುದನ್ನು ನಿರೀಕ್ಷಿಸಿದಳು.

ಒಂದೆರಡು ದಿನದಲ್ಲಿ ಕಳ್ಳ ಬಂದು ಟೀಪುಡಿಯನ್ನು ಕದ್ದಿದ್ದಾಯಿತು.  ಆದರೆ, ಪಕ್ಕದ ಮನೆಯಲ್ಲಿ ಟೀ ಕುದಿಸುತ್ತಿದ್ದವರು ಬೈಯುವುದು ಕೇಳಿ ಬಂದು ಇವಳಿಗೆ ನಗುತಡೆಯದಾಯಿತು.  ಇವಳ ಮನೆಯಿಂದ ಕದ್ದ ಟೀ ಪುಡಿಯಲ್ಲಿ ಟೀ ಅಂಶ ಇದ್ದರೆ ತಾನೆ ಅದು ತನ್ನ ಗುಣವನ್ನು ತೋರಿಸುವುದು.  ಅಂದಿನಿಂದ ಇವಳ ಮನೆಯಲ್ಲಿ ಟೀ ಪುಡಿ ಕಳ್ಳತನವಾಗುವುದು ನಿಂತು ಹೋಯಿತಂತೆ!

Tuesday, May 05, 2020

ಪಕ್ಕದ ಮನಿ ಚೈನಾದ್ ಮಂದಿ ಸುಳ್ಳ ಹೇಳ್ಯಾರ್ ರೀ

ಪಕ್ಕದ ಮನಿ ಚೈನಾದ್ ಮಂದಿ ಸುಳ್ಳ ಹೇಳ್ಯಾರ್ ರೀ
ವೈರಸ್ ಇಲ್ಲ ವೈರಸ್ ಇಲ್ಲಾಂತ ಸಾರಿ ಹೇಳ್ಯಾರ್ ರೀ|

ಇಂಗ್ಲೀಸ್ ಬರದ ಮಾತಾಡೋ ಮಂದೀನ
ಇಂಗ್ಲೀಸ್ ಪಿರಂಗಿಗಳು ನಂಬಂಗಿಲ್ಲಾರೀ
ಬ್ಯಾರೇ ದೇಶ್‌ದಾಗ್ ಏನಾರಾ ಆಗ್ಲೀ
ನಮಗ್ಯಾಕ್ ಉಸಾಬರೀ ಅಂತಾರ್ ರೀ|

ಹಿಂದಿನ ಸಾಲ ಕಟ್ಟಂಗಿಲ್ಲ ಇಂದಿನ ವ್ಯಾಪಾರ ಬಿಡಂಗಿಲ್ಲ
ಎಲ್ಲಾ ಕೆಲ್ಸಕೂ ಚೈನಾ ಮಂದೀನೆ ಬೇಕು ಅಂತಾರ್ ರೀ
ಎಡವಟ್ಟಾಗಿ ಕಾರ್ಖಾನೆ ಮುಚ್ಚಿದ ಎಡಬಿಡಂಗಿ ಮಕ್ಳೆಲ್ಲ
ಎಲ್ಲಾ ವಸ್ತೂನೂ ಚೈನಾದಿಂದಾನೆ ತರಸ್ತಾರ್ ರೀ| 

ಸರಕು ಸಾಗಣೆ ಎಲ್ಲಾ ಕಡೆಗೂ ಚೈನಾದಿಂದ್ಲೇ ಹೋಗುತಲಿತ್ತು
ಭಾರೀ ಭಾರೀ ವ್ಯಾಪಾರ್‌ದ ಹಡಗೂ ಬಂದು ನಿಲ್ತಿದ್ವು ರೀ
ಸ್ವಲ್ಪ ರೊಕ್ಕಕ ಬಾಳಾ ಸಾಮಾನು ತಂದ್ರು ಮುಂದ ಹಾಕ್ಕೊಂಡ್ರು
ಮೈ ಚರಬಿ ಬೆಳಸಿಕೊಂಡು ಕೆಲ್ಸಾ ಇಲ್ಲದೆ ಅಡ್ಡ್ಯಾಡಾರ್ ರೀ|

ಕೊರೋನಾ ವೈರಸ್ ಹಾವಳಿ ನೋಡ್ರಿ ಎಲ್ಲಾ ಆಟ ಬಂದ್ ಆತು
ಇತ್ಲಾಗ್ ಉಗಿಯಂಗಿಲ್ಲ ನುಂಗಂಗಿಲ್ಲ ಅನ್ನೋ ಹಂಗಾತ್ ರೀ
ಚೈನಾ ದೇಶದ್ ಸಾವಾಸಾ ಬ್ಯಾಡಾಂತ ಎಲ್ಲರೂ ಅಂದ್ಕೊಂಡ್ರೂ
ಅಷ್ಟು ಸುಲಭ್‌ದಾಗ ಕಳಚಕಣಂಗಿಲ್ಲ ಚೈನಾ ಮಂದಿ ಅಂತೋರ್ ರೀ|

ಏನಾರ ಆಗ್ಲಿ, ಏನಾರ ಹೋಗ್ಲಿ ನಿಯತ್ತು ಇರಬೇಕ್ರಿ
ದೊಡ್ಡ ಮಂದಿಗೆ ಇಷ್ಟು ಸಣ್ಣ ವಿಷ್ಯ ತಿಳಿದಂಗ್ ಆಗೇತ್ರಿ
ಇಂಥವ್ರನ್ನೆಲ್ಲ ನೋಡಿ ನೋಡಿ ಕಣ್ಣ್ ಕಣ್ಣ್ ಬಿಡಬೇಕ್ರಿ
ಮಾಡಿದ್ದುಣ್ಣೋ ಮಾರಾಯಾ ಅಂದು ಸುಮ್ಮನಿರಬೇಕ್ರಿ|

Monday, May 04, 2020

ತಿನ್ನಬಾರದ್ದನ್ನ ತಿಂದರೆ...

ತಿನ್ನಬಾರದ್ದನ್ನ ತಿಂದರೆ... ಆಗಬಾರದ್ದು ಆದೀತು... ಇದು ಈ ಹೊತ್ತಿನ ತತ್ವ.  ಮುನ್ನೂರು ಮಿಲಿಯನ್‌ಗೂ ಹೆಚ್ಚು ಜನಸಂಖ್ಯೆ ಹೊಂದಿದ ಯುಎಸ್‌ಎ ನಂತಹ ಮುಂದುವರಿದ ದೇಶದಲ್ಲಿ ವರ್ಷಕ್ಕೆ 60 ರಿಂದ 75 ಸಾವಿರ ಜನರು ತೀರಿಕೊಳ್ಳುತ್ತಿರುವ ವರದಿಗಳು CDCಯ ಸೈಟ್‌ನಲ್ಲಿ ಸಿಗುತ್ತವೆ. ಕಳೆದ ಇಪ್ಪತ್ತು ವರ್ಷಗಳಲ್ಲಿ ಈ ಫ್ಲೂ ಎನ್ನುವ ಮಹಾಮಾರಿ (pandemic, ಸರ್ವವ್ಯಾಪಿ ವ್ಯಾಧಿ) ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಬಲಿ ತೆಗೆದುಕೊಳ್ಳುತ್ತಲೇ ಇದೆ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಅಂಟಿಕೊಳ್ಳುವ ಈ ಖಾಯಿಲೆಯ ಸೋಂಕು ವೈರಸ್ಸುಗಳು ವರ್ಷಕ್ಕೊಂದು strain ನಂತೆ ಬದಲಾಗಿ ಮನುಕುಲಕ್ಕೆ ಸೆಡ್ಡುಹೊಡೆದಿವೆ ಎಂದರೆ ಅತಿಶಯವೇನೂ ಅಲ್ಲ. ಹೀಗೆ ಹಬ್ಬಿಕೊಳ್ಳುವ ಮತ್ತು ವರ್ಷದಿಂದ ವರ್ಷಕ್ಕೆ ವೃದ್ಧಿಸುವ ವ್ಯಾಧಿಯ ಹಿನ್ನೆಲೆಯಲ್ಲಿ ಚೈನಾದಂತಹ ರಾಷ್ಟ್ರಗಳು ಎದ್ದು ಕಾಣುತ್ತವೆ. ಫ್ಲೂ ಹೇಗೆ ಹುಟ್ಟಿ ಹೇಗೆ ಬೆಳೆಯುತ್ತದೆ ಎಂದು ನೋಡಿದಾಗ ಅದರ ಹಿನ್ನೆಲೆಯಲ್ಲಿ ಅನೇಕ ಪ್ರಾಣಿಗಳೂ ಕಂಡುಬರುತ್ತವೆ!
***


ಚೀನಾದಲ್ಲಿ ಏನೇನಾಗುತ್ತೋ, ಅದೆಷ್ಟು ಸತ್ಯ ಹೊರಗೆ ಬರುತ್ತೋ ಎನ್ನುವುದು ನಮಗೆಲ್ಲ ಮೊದಲಿಂದಲೂ ಇದ್ದ ಸಂಶಯ. ಕಮ್ಯುನಿಸ್ಟ್ ಸರ್ವಾಧಿಕಾರಿಗಳ ಕಪಿಮುಷ್ಟಿಯಲ್ಲಿ ನಲುಗುವ ಈ ರೀತಿಯ ದೇಶಗಳು ವಿಶ್ವದ ಆರ್ಥಿಕ ಮಾನದಂಡದಲ್ಲಿ ಎಲ್ಲರಿಗಿಂತಲೂ ಹೆಚ್ಚು ವೇಗವಾಗಿ ಬೆಳೆಯುತ್ತಿರುವ ದೇಶವಾಗಿವೆ. ಕೆಲವೊಮ್ಮೆ ಸರ್ವಾಧಿಕಾರದ ನಡೆ ಅನೇಕ ಕೈಗಾರಿಕೆಗಳನ್ನು ಪ್ರೋತ್ಸಾಹಿಸಿದೆ. ರಾತ್ರೋ ರಾತ್ರಿ ಎಲ್ಲರನ್ನು ತೆರವುಗೊಳಿಸಿ ಹೊಸ ಅಣೆಕಟ್ಟುಗಳನ್ನು ಕಟ್ಟಿದ್ದಿದೆ. ಅಲ್ಲದೇ ಈ ರೀತಿಯ ಅಣೆಕಟ್ಟುಗಳು ಒಡೆದು ಹೋದಾಗ ಲೆಕ್ಕಕ್ಕೆ ಸಿಗದ ಮಿಲಿಯನ್ನುಗಟ್ಟಲೆ ಜನರನ್ನು ಇನ್ನೂ ಹುಡುಕುತ್ತಿರುವವರು ಇದ್ದಾರೆ. ಮನೆಗೆ ಒಂದೇ ಮಗು, ಎಂದು ಕಾನೂನನ್ನು ಬಳಸಿ ದೇಶದ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತಂದುಕೊಳ್ಳುವಂತಹ ನಿಸರ್ಗದೊಂದಿಗೆ ಹೊಡೆದಾಡುವ ದಾರ್ಷ್ಟ್ಯವನ್ನೂ ಈ ದೇಶ ಪ್ರಕಟಿಸಿದ್ದಿದೆ. ಇಂತಹುದರಲ್ಲಿ ಅಲ್ಲಿನ ದೇಶವಾಸಿಗಳು ತಮಗೆ ಇಷ್ಟವಾದುದ್ದನ್ನು ತಿನ್ನಬೇಕು, ತಿನ್ನಬಾರದು ಎಂದು ಏಕೆ ತಾನೆ ಕಾನೂನನ್ನು ನಿರ್ಮಿಸೀತು?

ಹನ್ನೊಂದು ಮಿಲಿಯನ್ ಜನರಿರುವ ವುಹಾನ್ ನಗರದ ಮಾರ್ಕೆಟ್ಟಿನಲ್ಲಿ ಯಾವ ಯಾವ ಪ್ರಾಣಿಗಳನ್ನು ಮಾರುತ್ತಾರೆ ಎಂದು ಶೋಧಿಸಿದಾಗ ನಾಯಿ, ನವಿಲು, ಆಟರ್ಸ್, ಒಂಟೆ, ಕೊವಾಲ, ಹಾವುಗಳ ಜೊತೆಗೆ ತೋಳದ ಮರಿಗಳು, ಕಾಡು ಬೆಕ್ಕುಗಳು ಕಂಡುಬಂದವು. ಈ ಜನರ ಹೊಟ್ಟೆ ಹೊರೆಯಲು ಅಗಾಧವಾದ ಸೀ ಫುಡ್ ಇದ್ದರೂ ಸಹ ಇಲ್ಲಿನ ಜನರಿಗೆ ಕಾಡಿನಲ್ಲಿ ವಾಸಿಸುವ ಡೆಲಿಕಸಿಗಳೇ ಇಷ್ಟ! ಯುಎಸ್‌ಎನಲ್ಲಿಯೇ ಚೈನಾದ ರೆಸ್ಟೋರೆಂಟುಗಳಲ್ಲಿ ಮೀನು, ಕಪ್ಪೆ, ಲಾಬ್‌ಸ್ಟರ್‌ಗಳನ್ನು ದಯನೀಯ ಸ್ಥಿತಿಯಲ್ಲಿ ತುಂಬಿಟ್ಟುಕೊಂಡು ತಮ್ಮ ತಮ್ಮ ಹೊಟ್ಟೆ ಹೊರೆದುಕೊಳ್ಳುವ ಇವರುಗಳು ಇನ್ನು ಮೈನ್ ಲ್ಯಾಂಡ್ ಚೈನಾದ ನೆಲದಲ್ಲಿ ಪ್ರಾಣಿಗಳನ್ನು ಯಾವ ರೀತಿ ಸತಾಯಿಸುತ್ತಿರಬೇಡ. ಒಂದು ಲೆಕ್ಕದಲ್ಲಿ ಇವರೇ ಫಾರ್ಮ್‌ನಲ್ಲಿ ಬೆಳೆಸಿ ಕೊಂದು ತಿನ್ನುವುದಿದ್ದರೆ ಹೇಗಾದರೂ ಇದ್ದುಕೊಂಡಿರಲಿ ಎನ್ನಬಹುದಿತ್ತು. ಆದರೆ, ಕಾಡು ಪ್ರಾಣಿಗಳನ್ನ ತಮ್ಮ ಉದರ ಪೋಷಣೆಗೆ ಬಳಸಿಕೊಳ್ಳುವ ಇವರ ಈ ದುರ್ಗುಣವನ್ನ ಯಾವ ರೀತಿಯಿಂದಲೂ ಸಹಿಸಲಾಗದು.  ಮೇಲಾಗಿ ಕಾಡಿನಲ್ಲಿನ ಪ್ರಾಣಿಗಳನ್ನು ತಮ್ಮ ಉದರ ಪೋಷಣೆಗೆ ಬಳಸಿಕೊಳ್ಳಲು ಇವರಿಗೆ ಯಾರು ಲೈಸನ್ಸ್ ಕೊಟ್ಟವರು?  ಬಿಲಿಯನ್ನುಗಟ್ಟಲೆ ಬೆಳೆಯುತ್ತಿರುವ ಇವರ ಜನಸಂಖ್ಯೆಯನ್ನು ಮತ್ತಿನ್ಯಾವುದೋ ಜೀವಿ ಕೊಲ್ಲುವದು ನ್ಯಾಯ ಸಮ್ಮತವೇ?

ನಿಸರ್ಗದ ನಿಯಮಗಳನ್ನು ಗಾಳಿಗೆ ತೂರಿ ಅನೇಕ ಇಂಡಸ್ಟ್ರಿಗಳನ್ನು ಕಟ್ಟಿ ವಿಶ್ವದಲ್ಲಿ ಅತ್ಯಂತ ಹೆಚ್ಚು ಪೊಲ್ಯೂಷನ್ ಅನ್ನು ಹುಟ್ಟಿಸುವ ಈ ದೇಶದ ವಿರುದ್ಧ ಯಾವುದೇ ಶಕ್ತಿಯೂ ತನ್ನ ಧ್ವನಿ ಎತ್ತುವುದಿಲ್ಲ. ಮಾರುಕಟ್ಟೆಯ ಬೆಲೆ ಮತ್ತು ತನ್ನ ಕರೆನ್ಸಿಯನ್ನು ಡಾಲರ್ ಒಂದಿಗೆ ತುಲನೆ ಮಾಡಿಕೊಂಡು ರಾತ್ರೋ ರಾತ್ರಿ ಡೀವ್ಯಾಲ್ಯೂ ಮಾಡುವ ಈ ದೇಶವನ್ನು ಯಾವ ವಿಶ್ವ ಸಂಸ್ಥೆಯೂ ಎಚ್ಚರಿಸುವ ಗೋಜಿಗೆ ಹೋಗುವುದಿಲ್ಲ. ಮಿತಿಮೀರಿ ಕಟ್ಟಡ, ರಸ್ತೆ, ಡ್ಯಾಮ್ ಮೊದಲಾದವುಗಳನ್ನು ಕಟ್ಟಿ ತನ್ನ ಕಾಡನ್ನು ನಾಶಮಾಡಿಕೊಳ್ಳುವುದು ಬರೀ ಆಂತರಿಕ ಸಮಸ್ಯೆಯಾಗುತ್ತದೆ. ಯಾವುದೇ ಪೊಲ್ಯೂಷನ್ ಕಂಟ್ರೋಲ್ ಅಥವಾ ನ್ಯೂಕ್ಲಿಯರ್ ಪ್ರೊಲಿಫಿರೇಷನ್ ಕಾನೂನಿಗೆ ಸಿಗದೇ ಮನಬಂದಂತೆ ವರ್ತಿಸುವುದರಿಂದ ಹೆಚ್ಚಾಗುವ ಗ್ಲೋಬಲ್ ವಾರ್ನಿಂಗ್ ಎದುರಿಗೆ ಯಾರು ಜವಾಬು ಕೊಡುತ್ತಾರೆ?

***

ಕೊರೋನಾ ವೈರಸ್ ಇಂದು ನಿನ್ನೆಯದಲ್ಲ, ಅದು ಎಂದಿಗೂ ಸಾಯುವುದಿಲ್ಲ. ಎಲ್ಲಿಯವರೆಗೆ ಮನುಕುಲ ತನ್ನನ್ನು ತಾನು ಜನಸಂಖ್ಯೆಯ ಸ್ಫೋಟದ ಮುಖಾಂತರ ದ್ವಿಗುಣ ತ್ರಿಗುಣಗೊಳ್ಳುತ್ತಾ ತನ್ನ ಸುತ್ತಲಿನ ಸಂಪನ್ಮೂಲವನ್ನೆಲ್ಲ ತಿಂದು ತೇಗುತ್ತದೆಯೋ,  ಅಲ್ಲಿಯವರೆಗೆ ಈ ವಿಶ್ವದ ಉಳಿದ ಜೀವಿಗಳಿಗೆ ಉಳಿಗಾಲವಿಲ್ಲ. ಸಣ್ಣ ಏಕಾಣುಕೋಶದ ಜೀವಿಯಿಂದ ಹಿಡಿದು ಆನೆಯವರೆಗೆ, ತಿಮಿಂಗಲದವರೆಗೆ ಎಲ್ಲ ಪ್ರಾಣಿ-ಪಕ್ಷಿಗಳೂ ನಮ್ಮ ಕೃಪೆಯಲ್ಲಿ ಬದುಕುವಂತೆ ಮಾಡಿಕೊಂಡಿರುವುದು ನಮ್ಮ ಮುಂದುವರಿದ ಪೀಳಿಗೆಯ ಹೆಗ್ಗಳಿಕೆ.

***
ಈ ಕೆಳಗಿನ ಚಿತ್ರಗಳನ್ನು ನೋಡಿ:


ಚೈನಾದ ಮಾರ್ಕೆಟ್ಟಿನಲ್ಲಿ ಇರೋ ಒಂದು ರೇಟ್ ಫಲಕವನ್ನು ನೋಡಿ!  ನಿಜವೋ ಸುಳ್ಳೋ ಆದರೆ ಇಲ್ಲಿ ಎಲ್ಲ ರೀತಿಯ ಪ್ರಾಣಿಗಳೂ ಕಾಣ ಸಿಗುತ್ತವೆ.




ಚೈನಾದ ಮಾರ್ಕೆಟ್ಟಿನಲ್ಲಿ ಇರೋ ಮೀಟ್ ಮಾರ್ಕೆಟ್ಟಿನ ಫೋಟೋ.  

Sunday, May 03, 2020

ಸಿನಿಮಾ ವ್ಯಥೆ

ಈ ಕೋವಿಡ್ ವ್ಯಥೆಯಿಂದ ಎಷ್ಟೆಷ್ಟು ಹೊಸ ಕಥೆಗಳು ಹುಟ್ಟುತ್ತವೆಯೋ ಅಥವಾ ಕೋವಿಡ್‌ನಿಂದ ಒಂದು ಹೆಚ್ಚಿನ ಗುಣಮಟ್ಟದ ಸಿನಿಮಾ ಕಥೆಗಳು ಬರಬಹುದೋ ಎಂದು ನಿರೀಕ್ಷೆಯಲ್ಲಿದ್ದ ನನಗೆ, ನಮ್ಮ ಸಿನಿಮಾ ಉದ್ಯಮದ ಬಗ್ಗೆ ಹೆಚ್ಚು ಆಲೋಚಿಸಿದಂತೆಲ್ಲ, ನಲಿವಿಗಿಂತ ನೋವೇ ಹೆಚ್ಚಾಗಿ ಕಂಡಿತು.

ಮೊದಲೇ ಥಿಯೇಟರುಗಳಿಗೆ ಹೋಗದೇ ಹೊರಗುಳಿದಿದ್ದ ಪ್ರೇಕ್ಷಕರು ಈಗಂತೂ ಇನ್ನೂ ದೂರವೇ ಉಳಿಯುತ್ತಾರೆ.  ಎಲ್ಲ ಕಡೆಗೆ ವ್ಯವಸ್ಥಿತವಾಗಿ ಮತ್ತೆ ವ್ಯಾಪಾರ ವಹಿವಾಟುಗಳು ಓಪನ್ ಆಗುತ್ತಿದ್ದಂತೆ, ಸಿನಿಮಾ ಪ್ರಪಂಚ ಚೇತರಿಸಿಕೊಳ್ಳಲು ಇನ್ನೂ ಸಮಯ ಹಿಡಿಯುತ್ತದೆ.  ಈ ವರ್ಷವಂತೂ ನಾವೆಲ್ಲ, ಈಗಾಗಲೇ ಬಿಡುಗಡೆ ಹೊಂದಿರುವ ಸಿನಿಮಾಗಳನ್ನು ಆನ್‌ಲೈನ್ ಮಾಧ್ಯಮದಲ್ಲಿ ಮಾತ್ರ ನೋಡಿ ಖುಷಿ ಪಡಬೇಕು, ಅಷ್ಟೇ.

ಸಿನಿಮಾವನ್ನು ನಂಬಿಕೊಂಡು ಬದುಕಿದ ಕಲಾವಿದರಷ್ಟೇ ಅಲ್ಲ, ಅವರನ್ನು ಆದರಿಸಿದ ಅನೇಕ ಕುಟುಂಬ ವ್ಯವಸ್ಥೆ ಈಗ ಸಂಕಷ್ಟದಲ್ಲಿದೆ.  ಈ ವೇದನೆ ಕೇವಲ ರಾಜ್ಯ, ರಾಷ್ಟ್ರದ ಮಟ್ಟಿಗೆ ಸೀಮಿತವಾಗಿರದೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಇದೆ.

ಒಳ್ಳೆಯ ಸಿನಿಮಾವನ್ನು ಮಾಡಲು ಮೊದಲೇ ಹಿಂಜರಿಯುತ್ತಿದ್ದ ನಿರ್ಮಾಪಕರುಗಳು ಬಂಡವಾಳವನ್ನು ತೊಡಗಿಸಲು ಹಿಂದೆ ಹೆಜ್ಜೆ ಇಡುತ್ತಾರೆ.  ಅವರನ್ನು ನಂಬಿಕೊಂಡು ಒಳ್ಳೆಯ ಕಥೆಯನ್ನು ಕೈಯಲ್ಲಿಟ್ಟುಕೊಂಡ ನಿರ್ದೇಶಕರ ತಂಡ ಮಂಕಾಗುತ್ತದೆ.  ಒಂದು ಉತ್ತಮ ಸಿನಿಮಾಕ್ಕೆ ಬೇಕಾದ ಬಂಡವಾಳವನ್ನೇ ಹುಟ್ಟಿಸುವುದು ಕಷ್ಟವಾದಾಗ, ಕೆಲಸಗಾರರ ವೇತನ ಮತ್ತು ಕಲಾವಿದರ ಸಂಭಾವನೆಗಳಿಗೆ ಕತ್ತರಿ ಬೀಳುತ್ತದೆ. ಇದರಿಂದ ಹೊರಬರುವ ಸಿನಿಮಾಗಳ ಸಂಖ್ಯೆ ಮಿತಿಯಾಗುತ್ತದೆ.  ಕೊನೆಗೆ ಹೆಚ್ಚಿನ ಕಾರ್ಮಿಕ ವರ್ಗ, ಈಗಾಗಲೇ ನಲುಗಿರುವ ಕಲಾವಿದರ ನೋವು ಮುಗಿಲು ಮುಟ್ಟುತ್ತದೆ.

ಇದು ಒಂದು ರೀತಿಯ ಕಾಡ್ಗಿಚ್ಚಿನ ಅನುಭವವನ್ನು ಸೃಷ್ಟಿಸುತ್ತದೆ.  ಅದು ತನ್ನ ಹಾದಿಯಲ್ಲಿರುವ ಎಲ್ಲವನ್ನೂ ಸುಟ್ಟು ಭಸ್ಮ ಮಾಡುತ್ತದೆ.  ಕಲಾವಿದರ/ನಟ-ನಟಿಯರ ಮಾರ್ಕೆಟ್ಟುಗಳು ಕುಸಿಯತೊಡಗಿ, ಅವರು ತಮ್ಮ ಹೈ ಮೇಂಟೆನೆನ್ಸ್ ಜೀವನವನ್ನು ನಡೆಸುವುದು ದುಸ್ತರವಾಗುತ್ತದೆ.  ಕಲೆಯಿಂದ ಬದುಕೋ ಅಥವಾ ಬದುಕಿಂದ ಕಲೆಯೋ ಎನ್ನುವ ಪ್ರಶ್ನೆ ಮತ್ತೆ ಮತ್ತೆ ಕಾಡತೊಡಗುತ್ತದೆ.

ಒಮ್ಮೆ ಕಾಡ್ಗಿಚ್ಚು ಬಂದಾದನಂತರ ಅಗ್ನಿ ಆವರಿಸಿದ ಜಾಗದಲ್ಲಿ ದೈತ್ಯ ವೃಕ್ಷಗಳು ದುತ್ತನೆ ರಾತ್ರೋ ರಾತ್ರಿ ಬಂದಿಳಿಯುವುದಿಲ್ಲ.  ಮತ್ತೆ ಜೀವನ ಸಣ್ಣಸಣ್ಣ ಗಿಡಗಳಿಂದ, ನೆಲದಲ್ಲಿ ಹುದುಗಿದ ಬೀಜಗಳು ಮುಂದಿನ ಮಳೆಗಾಲದಲ್ಲಿ ಮೊಳಕೆ ಒಡೆಯುವುದರಿಂದ ಆರಂಭವಾಗುತ್ತವೆ.  ಈ ಸಂದರ್ಭದಲ್ಲಿ ಹುಟ್ಟುವ ಗಿಡಗಳು ನಿಜವಾಗಿಯೂ ಪ್ರಕೃತಿಯ ವಿಕೋಪದಿಂದಷ್ಟೇ ಅಲ್ಲ, ಪ್ರಕೃತಿಯ ಪ್ರಯೋಗಾಲಯದಲ್ಲೂ ಸಹ ಜಯಿಸಿದಂತಹವು.  ರಾತ್ರೋ ರಾತ್ರಿ ನಾಯಿಕೊಡೆಗಳಂತೆ ನೂರಾರು ಏಳದೆ, ಎಷ್ಟೋ ಚದುರ ಹೆಕ್ಟೇರ್‌ಗಳಿಗೆ ಒಂದರಂತೆ ಬೃಹತ್ ವೃಕ್ಷಗಳು ಸಸಿಗಳಾಗಿ ಹುಟ್ಟಿ ಬೆಳೆದು ಮರವಾಗಲು ಮತ್ತೆ ನೂರು ವರ್ಷವಾದರೂ ಬೇಕಾಗುತ್ತದೆ.

ನಿಜ.  ಒಂದು ನೂರು ವರ್ಷಗಳಲ್ಲಿ ಏನು ಬೇಕಾದರೂ ಆಗಬಹುದು.  ಜೀವನಗತಿ ಬದಲಾದಂತೆ ಸಿನಿಮಾವೂ ಬದಲಾಗುತ್ತದೆ.  ಸಿನಿಮಾವನ್ನು ನಂಬಿ ಬದುಕುವ ಕುಟುಂಬಗಳು ಕಡಿಮೆಯಾಗುತ್ತವೆ.  ಸಮಾಜಕ್ಕೆ ಏನನ್ನಾದರೂ ಹೊಸತೊಂದನ್ನು ಕೊಡಬೇಕು ಎನ್ನುವ ಅತೀವ ತುಡಿತದ ನಿರ್ದೇಶಕ ಕಷ್ಟಸಾಧ್ಯವಾದರೂ ತನ್ನ ಗುರಿಯನ್ನು ಕಂಡುಕೊಳ್ಳುತ್ತಾನೆ.  ಆ ನಿಟ್ಟಿನಲ್ಲಿ ಮುಂದೆ ತೆರೆಕಾಣುವ ಚಿತ್ರಗಳು ಸಮಯದ ಸಮರದಲ್ಲಿ ಬೆಂದು, ಕಷ್ಟದಲ್ಲಿ ಪುಳಕಿತವಾಗಿ ಅರಳಿದ ಹೂಗಳಂತೆ ನಮಗೆಲ್ಲರಿಗೂ ಕಾಣಿಸಿಕೊಳ್ಳಬಹುದು.

ಬಿಲಿಯನ್ ಡಾಲರ್‌ ಬಂಡಾವಾಳದ ಬಿಸಿನೆಸ್ಸ್‌ನಿಂದ ಖ್ಯಾತರಾದ ಪ್ರಪಂಚದ ಕೆಲವೇ ಕೆಲವು ಕಂಪನಿಗಳು ಈ ಕಲಾವಿದರ, ತಂತ್ರಜ್ಞರ ರಕ್ತವನ್ನು ಕುಡಿಯದಿದ್ದರೆ ಸಾಕು!

Friday, May 01, 2020

ಸಾಲವೆಂಬ ಶೂಲ!

ನಮ್ಮ ಹಳ್ಳಿಕಡೆಯಲ್ಲಿ ಒಂದು ಮಾತು ಬರುತ್ತಿತ್ತು, "ಸಾಲಾ-ಸೂಲಾ ಮಾಡಿಯಾದ್ರೂ...".  ಇದನ್ನ ಹೆಗ್ಗಳಿಕೆಯ ವಿಷಯವಾಗಿ ಬಳಸಬಹುದಿತ್ತು, ಅಥವಾ ತೆಗಳಿಕೆಯ ಮಾತಾಗಿಯೂ ಬಳಸಬಹುದಾಗಿತ್ತು.  "ಸಾಲಾ-ಸೂಲಾ ಮಾಡಿ ಓದ್ಸಿದ್ರೂ ನನ್ನ ಮಗ ಕೈಗೆ ಹತ್ತದವನಾದ!" ಎಂದು ತಲೆ ಮೇಲೆ ಕೈ ಇಟ್ಟುಕೊಂಡವರನ್ನು ನೋಡಿದ್ದೇನೆ.  ಅಂತೆಯೇ, "ಸಾಲಾ-ಸೂಲಾ ಮಾಡಿ, ದೊಡ್ಡ ಮನೆ ಕಟ್ಟಿಸಿದವರು..", ಅಂತಹವರನ್ನೂ ಸಹ ನೋಡಿದ್ದೇನೆ.  ಒಟ್ಟಿನಲ್ಲಿ ಆಗಿನ ನಮ್ಮ ಸಾಮಾಜಿಕ ವ್ಯಾಪ್ತಿಯಲ್ಲಿ ಸಾಲವೆಂಬುದು ಯಾವತ್ತಿಗೂ ಶೂಲವೇ ಆಗಿತ್ತು ಎನ್ನುವುದರಲ್ಲಿ ಎರಡು ಮಾತಿರಲಿಲ್ಲ.

ಸಾಲವನ್ನು ಕೈಗಡ ಎಂದು ತೆಗೆದುಕೊಳ್ಳಬಹುದಿತ್ತು. ಉದ್ರಿ ಎಂದು ಅಂಗಡಿಗಳಲ್ಲಿ ಬರೆಸಬಹುದಿತ್ತು.  ಎರವಲು ಪಡೆಯಬಹುದಿತ್ತು. ಕಡ ತೆಗೆದುಕೊಳ್ಳಬಹುದಿತ್ತು. ಕಯ್ಬದಲು ಮಾಡಿಕೊಂಡು "ಋಣ" ಹೆಚ್ಚಿಸಿಕೊಳ್ಳಬಹುದಿತ್ತು.  ಹೀಗೆ ತೆಗೆದುಕೊಂಡ ಸಾಲ ಎಲ್ಲವೂ "ಋಣ"ಮಯ ವಾಗಿತ್ತು ಎಂದರೆ ತಪ್ಪಾಗಲಾರದು.  ಆದ್ದರಿಂದ, ಸಹಜವಾಗೇ ಸಾಲಕ್ಕೆ ನೆಗೆಟಿವ್ ಕನ್ನೋಟೇಷನ್ ಇದ್ದೇ ಇದೆ.

***
ನಮ್ಮ ವಂಶಜರಲ್ಲಿ ಕಳೆದ ಎರಡು ತಲೆಮಾರುಗಳಲ್ಲಿ ಸಾಲ ಮಿತಿ ಮೀರಿದೆ.  ಎರಡು ತಲೆಮಾರುಗಳ ಹಿಂದೆ, ಕೈಗಡ ತೆಗೆದುಕೊಳ್ಳುವುದು ಎಂದರೆ ಅದೊಂದು ಅಕ್ಷಮ್ಯ ಅಪರಾಧವಾಗಿತ್ತು.  ಮೂಲತಃ ಸರ್ಕಾರಿ ಕೆಲಸದ ಸಂಬಳದಲ್ಲಿ (ನನಗೆ ಗೊತ್ತಿರುವ ಹಾಗೆ) ನಾಲ್ಕು ತಲೆಮಾರುಗಳಿಂದ ಬದುಕಿದ್ದ ನನ್ನ ಹಿರಿಯರು, ಯಾವಾಗಲೂ "ಹಾಸಿಗೆ ಇದ್ದಷ್ಟೇ ಕಾಲು ಚಾಚು!" ಎನ್ನುವುದನ್ನು ಅಕ್ಷರಶಃ ಪರಿಪಾಲಿಸುತ್ತಿದ್ದರು.  ನನ್ನ ತಾತನವರು ತಮ್ಮ ಟ್ರಂಕಿನಲ್ಲಿರುವ ಒಂದು ಪುಸ್ತಕದಲ್ಲಿ ತಮ್ಮ ಸಂಬಳ ಬಂದ ದಿನ ಎಲ್ಲ ರೂಪಾಯಿಗಳನ್ನು ಅಚ್ಚುಕಟ್ಟಾಗಿ ತೆಗೆದಿಟ್ಟು, ತಿಂಗಳು ಕಳೆದಂತೆ ಒಂದೊಂದೇ ನೋಟನ್ನು ಮನೆಯ ಒಂದೊಂದು ಖರ್ಚುಗಳಿಗೋಸ್ಕರ ಬಳಸುತ್ತಾ ಬರುತ್ತಿದ್ದುದು ನನಗಿನ್ನೂ ಚೆನ್ನಾಗಿ ನೆನಪಿದೆ.  ಕೊನೆಯಲ್ಲಿ ನನ್ನ ತಾತನವರು ತೀರಿಕೊಂಡಾಗ ಆ ಪುಸ್ತಕದಲ್ಲಿದ್ದ ಗರಿಗರಿಯಾದ ಹತ್ತು ರುಪಾಯಿ ನೋಟುಗಳು ನಮ್ಮ ಮನೆಯಲ್ಲಿ ಇವತ್ತಿಗೂ ಹಾಗೆಯೇ ಇದೆ.  ಆಗೆಲ್ಲ ಹತ್ತು ರುಪಾಯಿಗಳು ಬಹಳ ದೊಡ್ಡ ಮೊತ್ತವಾಗಿರುತ್ತಿತ್ತು.  ಬೇಸಿಗೆಗೆಂದು ಅಜ್ಜನ ಮನೆಗೆ ಹೋದಾಗ ಎರಡು ರುಪಾಯಿಗೆ ಒಂದು ಕೆಜಿ ಅಕ್ಕಿ ತಂದದ್ದು ನನಗೆ ನೆನಪಿದೆ.

ನನ್ನ ತಾತನವರು, ಇನ್ನೊಂದು ಮಾತನ್ನು ಯಾವಾಗಲೂ ಹೇಳುತ್ತಿದ್ದುದು, ಈಗ ಪ್ರಸ್ತುತವೆನಿಸುತ್ತಿದೆ, "ಆಳಾಗಿ ದುಡಿ, ಅರಸಾಗಿ ಉಣ್ಣು".  ತಮ್ಮ ಜೀವಿತಾವಧಿಯಲ್ಲಿ ಎಷ್ಟೊಂದು ಕಷ್ಟ ಕಾರ್ಪಣ್ಯಗಳಿದ್ದರೂ, ಕೆಲವೊಮ್ಮೆ ಗಂಜಿ-ಅಂಬಲಿಯನ್ನು ಕುಡಿದು ಬದುಕಿದ್ದರೂ ಅದು ಪರಮಾನ್ನ, ಪರಮಾತ್ಮನ ಪ್ರಸಾದವೆಂದೇ ನಂಬಿಕೊಂಡು ಇದ್ದುದರಲ್ಲಿ ಹಂಚಿಕೊಂಡು ಉಂಡು ಬದುಕಿ ಬಂದ ಕುಟುಂಬದವರು ಅವರೆಲ್ಲರು.  ಮಾನ-ಮರ್ಯಾದೆಗಳು ಎಲ್ಲಕ್ಕಿಂತ ಹೆಚ್ಚು.  ದಿನನಿತ್ಯ ತಪ್ಪದ ಶುಚಿಕರ್ಮಗಳು, ದೇವರ ಪೂಜೆ, ಶುಭ್ರವಾದ ಬಟ್ಟೆ, ಪ್ರತಿನಿತ್ಯವೂ ಗುಡಿಸಿ ಒರೆಸಿ ಸ್ವಚ್ಛ ಮಾಡಿಕೊಂಡು ಬರುತ್ತಿದ್ದ ಮನೆಯ ಒಳಗೆ-ಹೊರಗೆ, ಓದುವುದಕ್ಕೆ ಸಾಕಷ್ಟು ಪುಸ್ತಕಗಳು.  ಆಗಾಗ್ಗೆ ಬಂದು ಹೋಗುತ್ತಿದ್ದ ನೆಂಟರು-ಇಷ್ಟರು... ಬೇಡವೆಂದರೂ ಒಂದರಲ್ಲೊಂದು ತೊಡಗಿಕೊಳ್ಳ ಬೇಕಾದಂಥ ಪೂಜಾ ಕರ್ಮಗಳು, ಹಬ್ಬ ವಿಧಿ-ವಿಧಾನಗಳು -- ಹೀಗೇ ಅನೇಕ ಮಜಲುಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಸುಖವಾದ ಜೀವನ, ತುಂಬು ಕಣ್ಣಿನ ನಿದ್ರೆ, ದೈವದತ್ತ ಆರೋಗ್ಯ - ಇವೆಲ್ಲದರ ಜೊತೆ ಸಾಲರಹಿತ ಜೀವನ!  ಅವರೆಲ್ಲರೂ ಪರಿಪೂರ್ಣರು ಎಂದು ನಾನು ಬಲವಾಗಿ ನಂಬಿಕೊಂಡಿದ್ದೇನೆ.

ಲಂಚ ಅಥವಾ ಗಿಂಬಳವಿಲ್ಲದ ಸರ್ಕಾರಿ ನೌಕರಿಯಲ್ಲಿ ಸಾಲವಿಲ್ಲದೇ ಅನೇಕ ಹೊಟ್ಟೆಗಳನ್ನು ಹೊರೆಯುತ್ತಾ ದೊಡ್ಡ ಕುಟುಂಬವನ್ನು ಸಾಕುವುದು ಸುಲಭದ ಮಾತಲ್ಲ.  ಆಗೆಲ್ಲಾ ಅವಿಭಾಜ್ಯವಾಗಿ ಬದುಕುತ್ತಿದ್ದ ತುಂಬಿದ ಕುಟುಂಬಗಳಲ್ಲಿ ಬರೀ ತಮ್ಮ ತಮ್ಮ ಪರಿವಾರವನ್ನು ಹೊಟ್ಟೆ ಹೊರೆಯುವುದು ಯಾವ ದೊಡ್ಡ ವಿಚಾರವೂ ಅಲ್ಲವೇ ಅಲ್ಲ... ಅವರವರ ಕುಟುಂಬಗಳ ಜೊತೆ, ಅಜ್ಜ-ಅಜ್ಜಿ, ತಂದೆ-ತಾಯಿ, ಚಿಕ್ಕಮ್ಮ-ಚಿಕ್ಕಪ್ಪ, ಮಾವ-ಅತ್ತೆ, ಹೀಗೆ... ಅನೇಕರು ಬೇಕು-ಬೇಡವೆಂದರೂ ಆಯಾ ಕುಟುಂಬಗಳಲ್ಲಿ ಸೇರಿ ಹೋಗಿರುತ್ತಿದ್ದರು.  ಆದುದರಿಂದಲೇ ಮನೆಯಲ್ಲಿ ಒಂದಿಷ್ಟು ಜನರಿಗೆ ಯಾವಾಗಲೂ ಅಡುಗೆ ಮನೆಯನ್ನು ಬಿಟ್ಟು ಹೊರಬರಲು ಸಾಧ್ಯವಾಗದಿದ್ದುದು.  ಏಕಾದಶಿ ಅಥವಾ ಸೂತಕದ ಸಮಯದಲ್ಲೂ ಸಹ ಮನೆಯಲ್ಲಿ ಮಾಡಲು ಬೇಕಾದಷ್ಟು ಕೆಲಸಗಳು ಇರುತ್ತಿದ್ದವು.  ಮನೆಯವರಿಗೆಲ್ಲಾ ಸ್ನಾನಕ್ಕೆ ನೀರು ಕಾಸಿಕೊಟ್ಟು, ತಿಂಡಿ ಮಾಡಿ, ಕಾಫಿ ಕುಡಿಸುವುದರಲ್ಲಿ ಸಾಕಾಗಿ ಹೋಗುತ್ತಿತ್ತೇನೋ? ಅವುಗಳ ಜೊತೆಯಲ್ಲಿ ಜಾನುವಾರುಗಳಿಗೆ ಬಾಯಾರು ಕೊಡುವುದು, ನಾಯಿ-ಬೆಕ್ಕುಗಳಿಗೆ ಊಟವಿಕ್ಕುವುದು.  ಹೀಗೆ ಪ್ರತಿನಿತ್ಯ ಅನೇಕ ಬಾಯಿ ಮತ್ತು ಕೈಗಳಿಗೆ ಉಸಿರಾಗಬೇಕಿತ್ತು, ಉತ್ತರ ಕೊಡಬೇಕಿತ್ತು.  ಯಾರೂ ಯಾವತ್ತೂ ಉದಾಸೀನತೆ, ಆಲಸ್ಯಗಳಿಂದಾಗಿ ನಟ್ಟ ನಡುವಿನ ದಿನ ಮಲಗಿದ್ದನ್ನು ನಾನು ನೋಡಿಲ್ಲ!

ಸರಳ ಜೀವನವೇನೋ ಹೌದು, ಆದರೆ ಮುಂಜಾನೆಯಿಂದ ರಾತ್ರಿಯವರೆಗೆ ಒಂದು ಕ್ಷಣವೂ ಬಿಡುವಿರದೇ ದುಡಿದು ದಣಿಯುವ ದಿನಗಳು ಅವರದಾಗಿದ್ದವು.  ವಾರದ ದಿನಗಳು, ವಾರಾಂತ್ಯದ ದಿನಗಳಲ್ಲಿ ಕಛೇರಿಗೆ ಹೋಗಿ ಬರುವುದರ ಹೊರತಾಗಿ ಮತ್ತೇನೂ ವ್ಯತ್ಯಾಸವಿರಲಿಲ್ಲ.

***
ಇಂತಹ ಸೋಶಿಯಲಿಸ್ಟಿಕ್ ವ್ಯವಸ್ಥೆಯಲ್ಲಿ ಬೆಳೆದು ಬಂದ ನನಗೆ, ಅಮೇರಿಕಕ್ಕೆ ಬಂದ ಹೊಸತರಲ್ಲಿ ಮೊಟ್ಟ ಮೊದಲನೇ ಬಾರಿಗೆ ಕ್ರೆಡಿಟ್ ಕಾರ್ಡ್ ಬಂದಾಗ ಅದೇಕೆ ಅಷ್ಟೊಂದು ಸಂಭ್ರಮವಾಗಿತ್ತೋ ಗೊತ್ತಿಲ್ಲ.  ಆಗ ನಮ್ಮ ಕ್ರೆಡಿಟ್ ಹಿಸ್ಟರಿ ಎಲ್ಲೂ ಇರದ ಸಮಯದಲ್ಲಿ ನಾವೇ ಅಡ್ವಾನ್ಸ್ ಆಗಿ ದುಡ್ಡು ಕೊಟ್ಟು, ನಮ್ಮ ಕ್ರೆಡಿಟ್ ಹಾಗಾದರೂ ಬೆಳೆಯಲಿ ಎಂದು, ಒಂದು ಬಂಗಾರದ ಬಣ್ಣದ ಕ್ರೆಡಿಟ್ ಕಾರ್ಡ್ ಅನ್ನು "ಕೊಂಡಿದ್ದೆವು"!  ನಮ್ಮ ರೂಮ್‌ಮೇಟ್‌ಗಳಲ್ಲಿ ನನಗೇ ಮೊದಲು ಅಂತಹ ಕಾರ್ಡ್ ಬಂದಿದ್ದರ ಸಂತೋಷವನ್ನು ಆಚರಿಸಲು, ನಾವೆಲ್ಲರೂ ಒಟ್ಟಿಗೇ ಊಟಕ್ಕೆ ಹೋಗಿ, ಅಲ್ಲಿನ ಬಿಲ್ ಅನ್ನು ನನ್ನ ಹೊಸ ಕಾರ್ಡ್‌ನಲ್ಲಿ ಪಾವತಿಸಿದ್ದು ನನಗೆ ಇನ್ನೂ ಚೆನ್ನಾಗಿ ನೆನಪಿದೆ.

ಡೆಬಿಟ್ ಕಾರ್ಡ್ ಆದ್ದರಿಂದ, ಅದು ಒಂದು ರೀತಿಯ ಸಾಲವಲ್ಲ ಎನ್ನುವ ನಂಬಿಕೆಯಲ್ಲಿ ನಮ್ಮ ಸೋಶಿಯಲಿಸ್ಟಿಕ್ ನೆಲೆಗಟ್ಟಿನ ಮೌಲ್ಯಗಳಿಗೆ ನಾನು ಇನ್ನೂ ಗಟ್ಟಿಯಾಗಿ ಅಂಟಿಕೊಂಡಿದ್ದ ಕಾಲವದು.

ಒಂದು ದಿನ ನಾನು ನನ್ನ ಸಹಪಾಠಿ, ಪಾಕಿಸ್ತಾನದ ಆಲಿ ನಾಕ್ವಿಯ ಜೊತೆಗೆ ಸ್ಟೀವನ್ಸ್ ಇನ್ಸ್‌ಟಿಟ್ಯೂಟ್‌ಗೆ ಕಾರಿನಲ್ಲಿ ಹೋಗುತ್ತಿದ್ದಾಗ ನಾನು ಅವನಿಗೆ ಹೇಳಿದ್ದು ಚೆನ್ನಾಗಿ ನೆನಪಿದೆ.  "ಹೀಗೆ ಬಂದು ಸ್ವಲ್ಪ ಕಾಲದಲ್ಲೇ ಮತ್ತೆ ವಾಪಾಸ್ ಹೋಗುವ ನನಗೆ ಯಾವ ಸಾಲದ ಹೊರೆಯೂ ಬೇಕಾಗಿಲ್ಲ.  ಕೊನೆಯವರೆಗೂ ಹೀಗೇ ಬಾಡಿಗೆಯ ಮನೆಯಲ್ಲಿ ಇರುತ್ತೇನೆ!" ಎಂಬುದಾಗಿ.

ಅದೇ ದಿನ, ನನ್ನ ಅದೃಷ್ಟವೋ ಕಾಕತಾಳೀಯವೋ ಎಂಬಂತೆ, ಪ್ರೊಫೆಸರ್ ಸ್ಟಾಕರ್ಟ್ ಅವರು, ಫೈನಾನ್ಸಿಯಲ್ ಅನಾಲಿಸಿಸ್ ಮಾಡುತ್ತಾ, ನಾವೆಲ್ಲರೂ ಏಕೆ/ಹೇಗೆ 401Kಯಲ್ಲಿ ಹಣವನ್ನು ತೊಡಗಿಸಬೇಕು,  ಎಲ್ಲರೂ ಕಡಿಮೆ ಇಂಟರೆಸ್ಟ್‌ನಲ್ಲಿ ಮಾರ್ಟ್‌ಗೇಜ್‌ ತೆಗೆದುಕೊಂಡು, ಅದರಿಂದ ಮನೆಯನ್ನು ಕೊಳ್ಳಬೇಕು,  ಹಾಗೆ ಮಾಡುವುದರಿಂದ ಟ್ಯಾಕ್ಸ್‌ ಕೊಡುವುದರಲ್ಲಿ ಹೇಗೆ ಅನುಕೂಲವಾಗುತ್ತದೆ, ಇತ್ಯಾದಿ, ಇತ್ಯಾದಿ... ಹಾಗೆ, ಹಣಕಾಸಿನ ವಿಚಾರಗಳನ್ನು ಕೇಳುತ್ತಲೇ ಅದೇ ದಿನ ಮುಂಜಾನೆ ಮಾಡಿದ ನನ್ನ "ಭೀಷ್ಮ ಪ್ರತಿಜ್ಞೆ" ಗಾಳಿಗೆ ತೂರಿ ಹೋಗಿ, ಅಂದಿನಿಂದ ಕೇವಲ ಮೂರೇ ತಿಂಗಳುಗಳಲ್ಲಿ ನನ್ನ ಮೊದಲ "ಮನೆ"ಯನ್ನು ಖರೀದಿ ಮಾಡಿಯಾಗಿತ್ತು!

ಕೇವಲ 250 ಡಾಲರ್ ಕೊಟ್ಟರೆ ತಿಂಗಳ ಬಾಡಿಗೆ ಮುಗಿದು ಹೋಗುತ್ತದೆ,  ಇವತ್ತು ಕೆಲಸವಿದ್ದರೆ ನಾಳೆ ಇಲ್ಲ, ಹೇಳೀ ಕೇಳಿ H1B ವೀಸಾದಲ್ಲಿರುವವರು ನಾವು, ಈ ಮಾರ್ಟ್‌ಗೇಜ್ ಸಹವಾಸ ನಿನಗೇಕೆ? ಎಂದು ನನ್ನ ರೂಮ್‌ಮೇಟ್‌ಗಳು ಹೇಳಿದ್ದನ್ನು ಕೇಳಲಿಲ್ಲ!  (ಆಗಿನ ಕಾಲದಲ್ಲಿ ಕಾರ್ ಅನ್ನು ಕ್ಯಾಶ್ ಕೊಟ್ಟು ಕೊಂಡಿದ್ದರೂ, ನನ್ನ ತಿಂಗಳ ಫೋನ್ ಬಿಲ್, ಮನೆಯ ಬಾಡಿಗೆಗಿಂತ ಹೆಚ್ಚು ಇರುತ್ತಿತ್ತು!).  ಅಂತೂ-ಇಂತೂ ನಾನೂ ಸಾಲದ ಕೂಪದಲ್ಲಿ ಬಿದ್ದು, ಒಂದಲ್ಲ ಎರಡಲ್ಲ ನೂರು ಸಾವಿರ ಡಾಲರ್ ಸಾಲ ಮಾಡಿ, ಮನೆಯನ್ನು ಕೊಂಡುಕೊಂಡೆ!  ಆಗ ಒಂದು ಡಾಲರ್‌ಗೆ 34 ರುಪಾಯಿಯ ಸಮವಿತ್ತು.  ಅಂದರೆ, ಏಕ್‌ದಮ್, ಬರೋಬ್ಬರಿ 34 ಲಕ್ಷ ರುಪಾಯಿಯ ಸಾಲ!

ಸುಮಾರು 21 ವರ್ಷಗಳ ಹಿಂದೆ ಆರಂಭವಾದ ಈ ಸಾಲದ ಬಾಬತ್ತು ಯಾವತ್ತಿಗೂ ನೂರು ಸಾವಿರ ಡಾಲರಿಗಿಂತ ಕಡಿಮೆಯಾಗಲೇ ಇಲ್ಲ!  ಚಿಕ್ಕ ಮನೆಗಳು ದೊಡ್ಡವಾದಂತೆ, ಚಿಕ್ಕ ಕುಟುಂಬ ದೊಡ್ಡದಾಯಿತು.  ಚಿಕ್ಕ ಕಾರುಗಳ ಬದಲು ದೊಡ್ಡ ಕಾರು ಬಂದಿತು... ಅಂತೆಯೇ ನನ್ನ ತಲೆಯ ಮೇಲಿನ ಸಾಲವೂ ದೊಡ್ಡದಾಗುತ್ತಲೇ ಹೋಯಿತು... ವರ್ಷಗಳು ಕಳೆದಂತೆ ಒಂದರ ಮುಂದೆ ಅನೇಕ ಸೊನ್ನೆಗಳು ಸೇರುತ್ತಲೇ ಹೋದವು.  ಇವತ್ತಿಗೇನಾದರೂ ನನ್ನ ಒಟ್ಟು ಸಾಲದ ಮೊತ್ತವನ್ನೇನಾದರೂ ನನ್ನ ಹಿರಿಯರು ಬಂದು ನೋಡಿದರೆ, ಅವರೆಂದೂ ನನ್ನನ್ನು ಕ್ಷಮಿಸುವುದಿಲ್ಲ!

ಒಟ್ಟಿನಲ್ಲಿ ನನ್ನ ಪರಿವಾರದಲ್ಲಿ ಯಾರೂ ಮಾಡಿರದ ಸಾಲವನ್ನು ನಾನು ಮಾಡಿದ್ದೇನೆ... ಇನ್ನು ಮುಂದಿನ ತಲೆಮಾರುಗಳು ಹೇಗೋ ಏನೋ... ಸಾಲರಹಿತ ತಲೆಮಾರಿನಿಂದ ಸಾಲದ ತಲೆಮಾರಿಗೆ ದೊಡ್ಡ ಲಂಘನವನ್ನು ಮಾಡಿರುವಲ್ಲಿ ನನ್ನ ಪಾತ್ರ ದೊಡ್ಡದು!

***
ನಮ್ಮ ಸುತ್ತಲೂ ಈಗ ಯಂತ್ರಗಳಿವೆ:  ಅಡುಗೆ ಮಾಡಲು, ಪಾತ್ರೆ ತೊಳೆಯಲು, ಬಟ್ಟೆ ಒಗೆಯಲು, ಒಣಗಿಸಲು, ಇಸ್ತ್ರಿ ಮಾಡಲು, ಇತ್ಯಾದಿ. ಇಲ್ಲಿ ನಾವುಗಳು  ಹೆಚ್ಚು ಕೈ-ಬಾಯಿಗಳಿಗೆ ಉತ್ತರ ಕೊಡಬೇಕಾಗಿಲ್ಲ... ಹೆಚ್ಚೂ-ಕಡಿಮೆ, ಅಡುಗೆ ಮಾಡುವುದಕ್ಕೆ ಎಷ್ಟು ಸಮಯಬೇಕೋ, ತಿನ್ನುವುದಕ್ಕೂ ಅಷ್ಟೇ ಸಮಯ ಹಿಡಿಯುತ್ತದೆ!  ಸಾಲ ದೊಡ್ಡದಿದೆ.  ಹೂಡಿಕೆಗಳು ಹಲವಿವೆ.  ಆದರೂ, ಮಾರ್ಕೆಟ್‌ನ ತೂಗುಯ್ಯಾಲೆಯಲ್ಲಿ ನಮ್ಮ ನಮ್ಮ ಮನಸೂ ಕನಸೂ ತೂಗುತ್ತಿರುತ್ತವೆ... ಮೊದಮೊದಲ ಕೆಲವು ವಾರಗಳಲ್ಲಿ, ಈ ಕೊರೋನಾ ವೈರಸ್ ದೆಸೆಯಿಂದಾಗಿ, ಮನೆಯಲ್ಲೇ ಕುಳಿತು, ದಿನದ ಮೂರು ಹೊತ್ತು ಅಡುಗೆ ಮಾಡಿ, ಉಂಡು, ತೊಳೆದಿಡುವ ಕಾಯಕ ದೊಡ್ಡದೆನಿಸಿತ್ತಿತ್ತು, ಈಗ ಅದಕ್ಕೂ ಹೊಂದಿಕೊಂಡಿದ್ದಾಗಿದೆ... ಆದರೆ, "ಹಾಸಿಗೆ ಇದ್ದಕ್ಕಿಂತ ಹೆಚ್ಚು ಕಾಲು ಚಾಚುವುದು" ಬದುಕಾಗಿ ಹೋಗಿದೆ.  "ಆಳಾಗಿ ದುಡಿಯುವುದು ಇದ್ದರೂ ಅರಸಾಗಿ ಉಣ್ಣುವ" ಸಮಾಧಾನ ಚಿತ್ತ ಇನ್ನೂ ಕಾಣಬಂದಿಲ್ಲ!  ಅಂದು ಸಾಲರಹಿತ ಹಿರಿಯರು ಕಣ್ತುಂಬ ನಿದ್ರೆಯನ್ನು ಮಾಡುತ್ತಿದ್ದರೂ, ಮೈ ತುಂಬ ಸಾಲವಿರುವ ನಮಗೆ ಇಂದು ಅನೇಕ ಚಿಂತೆಗಳು ಕೊರಗುವಂತೆ ಮಾಡುತ್ತವೆ... ನಾಳೆ ಹೇಗೋ ಎನ್ನುವ ಬವಣೆ ನಮ್ಮ ನಾಳೆಯನ್ನು ಮರೀಚಿಕೆಯನ್ನಾಗಿ ದೂರದಲ್ಲೇ ಇಡುತ್ತಿದೆ!

ಇಲ್ಲಿ ನಾವಿರುವ ನೆಲ, ನೆಲೆ, ನೆರೆಹೊರೆ, ದೇಶ, ಭಾಷೆ, ಕಂಪನಿಗಳು ಮೊದಲಾದ ಎಲ್ಲವೂ ಕ್ಯಾಪಿಟಲಿಸಮ್ಮಿನಲ್ಲಿ ಮಿಂದು ಪುಳಕಗೊಂಡವುಗಳು... ಇಲ್ಲಿ ಸಾಲವೆಂಬುದು ಶೂಲ ಅಲ್ಲವೇ ಅಲ್ಲ... ಸಾಲದು ಎನ್ನುವುದು ಬೇಕು ಎಂಬುದಕ್ಕೆ ತಾಯಿಯಾದಂತೆ, ನಮಗೆಲ್ಲ ಸಾಲ ಎನ್ನುವುದು ಒಂದು ರೀತಿಯ ತೆವಲಾಗಿ (addiction) ಬಿಟ್ಟಿದೆ... ಇದನ್ನು ಬಿಟ್ಟಿರುವುದು ಸಾಧ್ಯವೇ?

Thursday, April 30, 2020

ಬರಹದತ್ತ ಮುಖ ಮಾಡಿಸಿದ ಕೋವಿಡ್

ಇವತ್ತಿಗೆ ಬರೋಬ್ಬರಿ ಏಳು ವಾರವಾಯಿತು... ನನ್ನಂಥವರು ಮನೆಯಿಂದಲೇ ಕೆಲಸ ಮಾಡಲು ಶುರು ಮಾಡಿ.  ಈ ಕೋವಿಡ್‌ನಿಂದ ಯಾರು ಯಾರಿಗೆ ಏನೇನು ಅನುಕೂಲ-ಅನಾನುಕೂಲವಾಗಿದೆಯೋ, ನನಗಂತೂ ಇದು ಬರಹ-ಓದು-ಸಂಭಾಷಣೆಗಳಲ್ಲಿ ತೊಡಗಿಸಿದೆ.

ಏನೇನು ಹೊಸತುಗಳು ಈ ಏಳು ವಾರದಲ್ಲಿ ಶುರುವಾದವು ಎಂದು ಪಟ್ಟಿ ಮಾಡುತ್ತಾ ಹೋದಾಗ ಈ ಕೆಳಗಿನವು ಕಂಡು ಬಂದವು:
- ಮೂರು ಹೊತ್ತೂ ಮನೆ ಊಟ ನಮಗೆ ಬೇಕಾದಂತೆ ಮಾಡಿಕೊಳ್ಳುವ ಸಲುವಾಗಿ ಇತ್ತೀಚೆಗೆ ಕುಕಿಂಗ್ ಶೋಗಳನ್ನು ನೋಡಲು ಶುರು ಮಾಡಿದ್ದು, ಜೊತೆಗೆ ರೆಸಿಪಿಗಳನ್ನು ಹುಡುಕಿದ್ದು
- ಮನೆಯಲ್ಲೇ ಇದ್ದುದರಿಂದ ನಾಲ್ಕೈದು ಜೊತೆ ಬಟ್ಟೆಗಳನ್ನೇ ಪುನರಾವರ್ತನೆಯಾಗಿ ಬಳಸಿದ್ದು
- ಈ ವರೆಗೆ ಮರೆತು ಹೋಗಿದ್ದ ಅನೇಕ ಬ್ಲಾಗುಗಳನ್ನು ತೆರೆದು ಓದಿದ್ದು
- ಈ ವರೆಗೆ ಮರೆತಂತಿದ್ದ "ಅಂತರಂಗ"ದ ಬಾಗಿಲು ತೆಗೆದು ಮತ್ತೆ ಬರೆಯಲು ಶುರು ಮಾಡಿದ್ದು (ಏಪ್ರಿಲ್ ತಿಂಗಳಿನಲ್ಲಿ ದಿನಕ್ಕೊಂದು ಲೇಖನವನ್ನು ಹಾಕಿದ್ದು)
- ಸ್ನೇಹಿತರ ಬಳಿ ಒಳ್ಳೆಯ ಸಿನಿಮಾಗಳ ರೆಕಮೆಂಡೇಷನ್ ಅನ್ನು ಕೇಳಿ ಸಿನಿಮಾ ನೋಡಿದ್ದು
- ಬಂಧುಗಳ ಜೊತೆ, ಸ್ನೇಹಿತರ ಜೊತೆ ದೀರ್ಘಕಾಲ ಮಾತನಾಡಿದ್ದು
- ವಾರದಲ್ಲಿ ಒಂದು ನಿಮಿಷವೂ ಕೂಡ ಕಾರಿನಲ್ಲಿ  ಪ್ರಯಾಣಿಸದೇ ಇದ್ದದ್ದು
- ಬಂದಂತ ವಾಟ್ಸಾಪ್ ಮೆಸ್ಸೇಜುಗಳನ್ನೆಲ್ಲ ನೋಡಿದ್ದು
- ವೀಕೆಂಡ್ ದಿನಗಳನ್ನು ಹೇಗೆ ಕಳೆಯುವುದಪ್ಪಾ ಎಂದು ಚಿಂತಿಸಿದ್ದು
- ನಮ್ಮ ಪಕ್ಕದ ಮನೆಯವರ ಜೊತೆ ವೆಬೆಕ್ಸ್ ಕಾನ್‌ಫರೆನ್ಸಿನಲ್ಲಿ ಮಾತನಾಡಿದ್ದು
- ಮನೆಯ ಮೂಲೆ ಮೂಲೆಯನ್ನೂ (ಸ್ಟೆಪ್ಸ್ ಕೌಂಟ್ ಆಗಲೆಂದು) ತಿರುಗಿದ್ದು
- (ಅನೇಕ ವರ್ಷಗಳ ನಂತರ) ಮನೆಯನ್ನು ವ್ಯಾಕ್ಯೂಮ್ ಕ್ಲೀನ್ ಮಾಡಿದ್ದು

ಇವೆಲ್ಲ ಏನೋ ದೊಡ್ಡ ವಿಷಯ ಎಂದು ಮೇಲ್ನೋಟಕ್ಕೆ ಅನ್ನಿಸದೇ ಇರಬಹುದು.  ಆದರೆ, ಎರಡು ತಿಂಗಳ ಹಿಂದಿನ (ವ್ಯವಸ್ಥಿತ) ವ್ಯಸ್ತ ಜೀವನ ಇಂದು ಅವ್ಯಸ್ತವಾಗಿದೆ ಎಂದು ಹೇಳಲು ಬಾರದು.  ಆದರೆ, ನಮ್ಮೆಲ್ಲರಿಗೂ ಸಿಗುವುದು ಇಂತಿಷ್ಟೇ ಸಮಯವಾದರೂ ಅದನ್ನು ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರಲ್ಲಿ ನಮ್ಮ ವ್ಯಕ್ತಿತ್ವ ನಿರ್ಮಾಣಗೊಳ್ಳುತ್ತದೆ.  ನಾವು ನಮ್ಮ ಬದುಕಿನಲ್ಲಿ ಸಾಧಿಸಿರುವುದು ಒಂದು ಸಾಸಿವೆ ಕಾಳು ಗಾತ್ರದಷ್ಟು ಮಾತ್ರ ಎನ್ನುವ ಭಾವನೆ ಮೂಡಲು ಗುರು ಶಂಕರಾಚಾರ್ಯರು ಕೇವಲ 32 ವರ್ಷದ ಅವರ ಜೀವಿತದಲ್ಲಿ ಎಷ್ಟೊಂದನ್ನು ಸಾಧಿಸಿದ್ದಾರೆ ಎಂದು ನೋಡಿದರೆ ಗೊತ್ತಾಗುತ್ತದೆ.  ಆಗಿನ ಕಾಲದಲ್ಲಿ ಚಿಕ್ಕ ವಯಸ್ಸಿನಲ್ಲಿ ಸನ್ಯಾಸವನ್ನು ಸ್ವೀಕರಿಸಿ, ಭರತ ಖಂಡದ ಉದ್ದಕ್ಕೂ ಅಲೆದಾಡಿ ಅದೆಷ್ಟು ಸಾಧನೆಗಳನ್ನು ಮಾಡಿದ್ದಾರೆ ಎಂದು ಆಶ್ಚರ್ಯವಾಗುತ್ತದೆ.


***
ಈ ಕೋವಿಡ್‌ ದಯೆಯಿಂದ ನಿಮ್ಮ ನಿಮ್ಮ ಹೊಸ ಅನುಭವಗಳೇನೇನಿವೆ? ಹಂಚಿಕೊಳ್ಳಬಹುದೇ?

Wednesday, April 29, 2020

ಅಕ್ಕಿ ಆರಿಸುವಾಗ...

ಅಕ್ಕಿ ಆರಿಸುವಾಗ...
ಕವಿ: ಕೆ. ಎಸ್. ನರಸಿಂಹ ಸ್ವಾಮಿ
ಸಂಗೀತ ಮತ್ತು ಗಾಯನ: ಸಿ. ಅಶ್ವಥ್


 ಕೆ.ಎಸ್. ನರಸಿಂಹಸ್ವಾಮಿಯವರ ಮೈಸೂರ ಮಲ್ಲಿಗೆ ಕವನ ಸಂಕಲನದಲ್ಲಿ ಮನಸ್ಸಿಗೆ ಹಿಡಿಸುವ ಕವನಗಳಲ್ಲಿ ಇದೂ ಒಂದು.  ಈ ಹಾಡನ್ನು ಸುಗಮ ಸಂಗೀತಕ್ಕೆ ಒಳಪಡಿಸಿದ ಸಿ. ಅಶ್ವಥ್ ಅವರು ಒಂದು ಬಡತನದ ವಾತಾವರಣದಲ್ಲಿ ಬೆಳೆದು ನಿಂತ ಹೆಣ್ಣುಮಗಳ ಮನದಾಳವನ್ನು ವಿಷದ ಪಡಿಸುವಲ್ಲಿ ನ್ಯಾಯ ಒದಗಿಸಿದ್ದಾರೆ ಎಂದು ಖಂಡಿತವಾಗಿ ಹೇಳಬಹುದು.  ಹೆಣ್ಣಿನ ಅಂತರಾಳದ ಒಳತೋಟಿಯನ್ನು ಹೊರಹೊಮ್ಮಿಸುವ ಗಾಯನಕ್ಕೆ ಗಂಡು ಧ್ವನಿ ಎಷ್ಟು ಹೊಂದೀತು ಎಂಬ ಪ್ರಶ್ನೆ ಪಲ್ಲವಿಯಲ್ಲಿ ನಮ್ಮ ಮನಸ್ಸಿನಲ್ಲಿ ಉದ್ಭಸಿದರೂ, ಹಾಡು ಮುಂದುವರಿದತೆಲ್ಲ ಅಶ್ವಥ್ ಅವರ ಗಾಯನ ಹೆಣ್ಣಿನ ನಿರ್ಲಿಪ್ತತೆಯನ್ನು ವರ್ಣಿಸುವುದರ ಮೂಲಕ ನಿರಾಯಾಸವಾಗಿ ಕೇಳುಗರನ್ನು ಕಟ್ಟಿ ಹಾಕುತ್ತದೆ.  ಇದು ಈ ಹಾಡಿನ ಮಹತ್ವದ ಅಂಶ ಎಂದರೆ ತಪ್ಪಾಗಲಾರದು.

ಹಾಡಿನ ಮೊದಲಿಗೆ ಕೆಲವು ಕ್ಷಣಗಳ ಕಾಲ ಕೇಳಿಸುವ ದನಕರುಗಳ ಕೂಗು, ಒಂದು ಕೊಟ್ಟಿಗೆಯ ಪರಿಸರವನ್ನು ಕೇಳುಗರಿಗೆ ಕಟ್ಟಿಕೊಡುತ್ತದೆ.  ನಿಧಾನವಾಗಿ ಒಂದು ಸರಳ ಸಂಭ್ರಮವನ್ನು ಸೂಚಿಸುವಂತೆ ಆರಂಭವಾಗುವ ಕೊಳಲಿನ ಧ್ವನಿ, ನಂತರ ಮುಂಬರುವ ವಯಲಿನ್‌ಗಳ ಮೊರೆತಕ್ಕೆ ಸೋತು ಹೋಗುವುದಕ್ಕೆ ಮೊದಲು ಭಾರವಾದಂತೆನಿಸಿ, ಈ ಹಾಡಿಗೆ ಒಂದು ಗಟ್ಟಿಯಾದ ತಳಹದಿಯನ್ನು ಒದಗಿಸುತ್ತದೆ.

ಅಕ್ಕಿ ಆರಿಸುವಾಗ ಚಿಕ್ಕ ನುಚ್ಚಿನ ನಡುವೆ
ಬಂಗಾರವಿಲ್ಲದ ಬೆರಳು


ಇತ್ತೀಚಿನ ಕಾಲದಲ್ಲಿ ಅಕ್ಕಿಯನ್ನು ಜನರು ಜರಡಿಯಾಡಿ, ಮೊರದಲ್ಲಿ ಆರಿಸುತ್ತಾರೋ ಇಲ್ಲವೋ, ಆದರೆ ಆಗಿನ ಕಾಲದ ಒಂದು ಹಳ್ಳಿಯ ಪರಿಸರದಲ್ಲಿ ಮೊರದಲ್ಲಿ ಅಕ್ಕಿಯನ್ನು ಗೇರಿ ಅಥವಾ ಜರಡಿ ಹಿಡಿದು, ನುಚ್ಚು ಮತ್ತು ಕಲ್ಲುಗಳನ್ನು ಬೇರ್ಪಡಿಸುವ ಕೆಲಸ ಪ್ರತಿನಿತ್ಯವೂ ನಮ್ಮ ಹೆಣ್ಣು ಮಕ್ಕಳು ಮಾಡುವಂಥದಾಗಿತ್ತು.  ಕವಿ ಈ ಹಾಡಿನಲ್ಲಿ ಬರೆದಂತೆ "ಅಕ್ಕಿ ಆರಿಸುವುದು" ಒಂದು ವಿಶೇಷ ಸೂಚಕ.     ಏಕೆಂದರೆ ಅಕ್ಕಿಯ ನಡುವೆ ಸಿಕ್ಕುವ ಕಲ್ಲು, ನುಚ್ಚನ್ನು ಆರಿಸುವ ಕೆಲಸಕ್ಕೂ ನಾವು "ಅಕ್ಕಿ ಆರಿಸುವುದು" ಎಂದೇ ಹೇಳುವುದು ಸಾಮಾನ್ಯ.  ಒಂದು ರೀತಿಯಲ್ಲಿ ಅಮೇರಿಕದಲ್ಲಿ ನಾವೆಲ್ಲ "hot water heater" ಎಂದು ಹೇಳುತ್ತೇವಲ್ಲ ಹಾಗೆ, ನಾವು ನಿಜವಾಗಿಯೂ cold water ಅನ್ನು heat ಮಾಡುತ್ತಿದ್ದರೂ, ಅದನ್ನು "hot water heater" ಎಂದೇ ಕರೆಯುತ್ತೇವೆ!  ಭತ್ತವನ್ನು ತೆಗೆದುಕೊಂಡು ಹೋಗಿ ಮಿಲ್ಲಿನಲ್ಲಿ ಅಕ್ಕಿ ಮಾಡಿಸಿದಾಗ, ಅಕ್ಕಿಗೆ ಪಾಲೀಷ್ ಕೊಟ್ಟ ಮೇಲೆ ನುಚ್ಚು ಉತ್ಪಾದನೆ ಆಗುವುದು ಸಹಜ.  ಆದರೆ ಮಾಡಿದ ಅನ್ನ ಬಿಡಿ ಬಿಡಿಯಾಗಿ, ಉದುರಾಗಿ ಇರಬೇಕು ಎನ್ನುವುದಾದರೆ ಅದರಲ್ಲಿ ನುಚ್ಚು ಇರಬಾರದು.  ಅದು ಎಂಥಾ ನುಚ್ಚು? "ಚಿಕ್ಕ ನುಚ್ಚು", ಅದನ್ನು ಆರಿಸಿ, ಜೊತೆಗೆ ಕಲ್ಲನ್ನೆಲ್ಲ ಹೆಕ್ಕಿದ ಮೇಲೆ ಉಳಿದ ಬರೀ ಅಕ್ಕಿಯನ್ನು ಮಾತ್ರ ಅನ್ನ ಮತ್ತಿನ್ನ್ಯಾವುದೋ ಅಡುಗೆಗೆ ಬಳಸೋದು ವಾಡಿಕೆ.  ಇಂಥಾ ಚಿಕ್ಕ ನುಚ್ಚಿನ ನಡುವೆ ಹೋರಾಟಕ್ಕೆ ಇರುವುವು "ಬಂಗಾರವಿಲ್ಲದ ಬೆರಳು"ಗಳು.  ಕವಿ ಬಂಗಾರವಿಲ್ಲದ ಬೆರಳು ಎನ್ನುವಾಗ ಅದೇ ಹಳ್ಳಿಯ ಪರಿಸರದ ಲೇಪಕ್ಕೆ ಮತ್ತೆ ಬಡತನದ ವಾತಾವರಣದ ಕಳೆಯನ್ನು ಕಟ್ಟುತ್ತಾರೆ.  ಎಷ್ಟೇ ಶ್ರೀಮಂತರಿದ್ದರೂ, ಅಕ್ಕಿ ಆರಿಸುವಾಗ ಅಂದರೆ ಮನೆ ಕೆಲಸ ಮಾಡುವಾಗ ಬಂಗಾರ ಧರಿಸುವುದು ಸಹಜವಲ್ಲ.  ಒಂದು ವೇಳೆ ಮನೆಯಲ್ಲಿದ್ದಾಗಲೂ ಬಂಗಾರವನ್ನು ಧರಿಸಿಯೇ ಇರುತ್ತಾರೆಂದರೆ ಅವರು ಬಡತನದ ವಾತಾವರಣವನ್ನು ಮೀರಿದವರಾಗಿರುತ್ತಾರೆ ಎನ್ನುವುದು ವಾಡಿಕೆ.  ಇಲ್ಲಿ ಕವಿ ಬಂಗಾರವಿಲ್ಲದ ಬೆರಳನ್ನು (ಬೆರಳುಗಳನ್ನು), ಒಂದು ರೀತಿಯ ದೈನಂದಿನ ಹೋರಾಟದ ಸಿಪಾಯಿಗಳನ್ನಾಗಿ ಬಿಂಬಿಸಿದ್ದಾರೆ. ಹಾಗೂ ಅದೇ ಸಾಲನ್ನು ಸುಗಮ ಸಂಗೀತದ ಗಾಯಕರು ಪ್ರತಿ ಪ್ಯಾರಾದ ನಂತರ ಹಾಡಿ ಅದನ್ನೇ ಒಂದು ಚುಟುಕು ಪಲ್ಲವಿಯನ್ನಾಗಿಸುವುದುರ ಮೂಲಕ ಈ ಸಿಪಾಯಿಗಳಿಗೆ ಮತ್ತಷ್ಟು ಹೆಚ್ಚಿನ ಜವಾಬ್ದಾರಿಯನ್ನು ಹೊರೆಸಿದಂತೆ ಕಾಣುತ್ತದೆ.

ತಗ್ಗಿರುವ ಕೊರಳಿನ ಸುತ್ತ ಕರಿಮಣಿ ಒಂದೇ
ಸಿಂಗಾರ ಕಾಣದ ಹೆರಳು
ಬಂಗಾರವಿಲ್ಲದ ಬೆರಳೂ|

ಯಾವುದೇ ಭಂಗಿಯಲ್ಲಿ ಕುಳಿತರೂ ಮೊರದಲ್ಲಿ ಅಕ್ಕಿಯನ್ನು ಆರಿಸುವಾಗ ಕೊರಳು ತಗ್ಗಿರುತ್ತದೆ.  ಅಂತಹ ಕೊರಳಿನ ಸುತ್ತ ಕರಿಮಣಿ ಒಂದೇ ಇರುವುದು ಮತ್ತ್ಯಾವ ಬಂಗಾರದ ಆಭರಣಗಳೂ ಇಲ್ಲದಿರುವುದನ್ನು ಸೂಚಿಸಿ ಮತ್ತೆ ಬಡತನದ ವಾತಾವರಣದ ಪ್ರತಿಮೆಯನ್ನು ಕೇಳುಗರ ಮನಸ್ಸಿನಲ್ಲಿ ನಿಲ್ಲಿಸುತ್ತವೆ. ಕರಿಮಣಿ ಒಂದೆ ಎನ್ನುವುದು ಕರಿಮಣಿ ಸರದ ರೂಪಕ, ಅದರಲ್ಲಿ ಅನೇಕ ಕಪ್ಪು ಮಣಿಗಳಿದ್ದರೂ ಅದನ್ನು ಕರಿಮಣಿ ಎಂದೇ ಕರೆಯುವುದು ರೂಢಿ. ಈ ಬಡತನದ ಚಿತ್ರಣದ ಜೊತೆ ಜೊತೆಗೆ ಸಿಂಗಾರ ಕಾಣದ ಹೆರಳು ಹೊಸತಾಗಿ ಈ ಹೆಣ್ಣಿನ ಅಂತರಂಗದ ಅಭಿವ್ಯಕ್ತಿಯನ್ನು ಸಾಬೀತು ಮಾಡಲು ಪ್ರಯತ್ನಿಸುತ್ತದೆ.  ಮನೆಯಲ್ಲೇ ಕೆಲಸದ ನಡುವೆ ಇರುವವರು ಸಾಮಾನ್ಯವಾಗಿ ಹೆರಳನ್ನು ಸಿಂಗರಿಸಿಕೊಳ್ಳದಿದ್ದರೂ ಒಂದಿಷ್ಟು ಮೇಲು ಬಾಚಣಿಕೆಯನ್ನು ಮಾಡಿಕೊಂಡು ಅಚ್ಚುಕಟ್ಟಾಗಿಟ್ಟುಕೊಳ್ಳುವುದು ವಾಡಿಕೆ, ಆದರೆ ಇಲ್ಲಿ ಈ ಹೆಣ್ಣಿನ ಅಂಗ-ಭಂಗಿಗಳ ಮೂಲಕ ಮನದಾಳದಲ್ಲಿ ಹುದುಗಿದ ಅವ್ಯಕ್ತ ಯಾತನೆ ಅಥವಾ ತವಕವನ್ನು ಹೊರಕಾಕುವ ಕವಿಯ ಚಾಕಚಕ್ಯತೆ ಎದ್ದು ಕಾಣುತ್ತದೆ.  ಮತ್ತೆ ಹೊರ ಹೊಮ್ಮುವ "ಬಂಗಾರವಿಲ್ಲದ ಬೆರಳು" ಮೇಲಿನ ಅಂಶಗಳಿಗೆ ಪುಷ್ಠಿಕೊಡುತ್ತದೆ.


ಹೆರಳಿನಾ ಭಾರಕ್ಕೆ ತುಂಬಿರುವ ಕೆನ್ನೆಯಲಿ
ಹದಿನಾರು ವರುಷದ ನೆರಳು
ದೀಪದಂತರಳಿದಾ ಸಿರಿಗಣ್ಣ ಸನ್ನೆಯಲಿ
ದೀಪದಂತರಳಿದಾ ಸಿರಿಗಣ್ಣ ಸನ್ನೆಯಲಿ
ಹುಚ್ಚು ಹೊಳೆ ಮುಂಗಾರಿನುರುಳು
ಬಂಗಾರವಿಲ್ಲದ ಬೆರಳೂ|

ಸಿಂಗಾರ ಕಾಣದ ಹೆರಳಿನ ಭಾರಕ್ಕೆ ತುಂಬಿರುವ ಕೆನ್ನೆ ಕಥಾನಾಯಕಿಯ ಯೌವನವನ್ನು ಪ್ರಚುರಪಡಿಸುತ್ತದೆ, ಸುಮಾರು ಹದಿನಾರು ವರ್ಷದ ಆಸುಪಾಸು ಇರಬಹುದಾದ ವಯಸ್ಸು, ಆಗಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಬಹಳ ಬೇಗನೆ ಲಗ್ನ ಮಾಡುತ್ತಿದ್ದರಾದ್ದರಿಂದ ಹದಿನಾರು ವರ್ಷಕ್ಕೆಲ್ಲ ಸಾಕಷ್ಟು ಪ್ರಬುದ್ಧತೆ ಈ ಹೆಣ್ಣು ಮಕ್ಕಳಿಗೆ ಇರುತ್ತಿದ್ದುದು ಸಹಜ.  ಎರಡು ಬಾರಿ ಹಾಡಿದ ದೀಪದಂತೆ ಅರಳಿದ ಸಿರಿಗಣ್ಣ ಸನ್ನೆ ಏನನ್ನೋ ನೆನಪಿಸಿಕೊಳ್ಳುತ್ತವೆಯೇನೋ ಎಂದು ಕೊಂಡರೆ ನಿಲ್ಲದ ಮುಂಗಾರಿನಲ್ಲಿ ತುಂಬಿ ಹರಿಯುವ ಹೊಳೆಯ ರೀತಿಯಲ್ಲಿರುವ ಮುಂಗುರಳನ್ನು ನೆನಪಿಗೆ ತರುತ್ತವೆ.  ತಲೆ ಹಾಗೂ ಕಣ್ಣು ಅತ್ತಿತ್ತ ಚಲಿಸಿದಂತೆಲ್ಲ ಮುಖದೊಂದಿಗೆ ಆಟವಾಡುವ ಈ ಮುಂಗುರುಳು ಒಮ್ಮೊಮ್ಮೆ ಕಾಡುವ ಮಳೆಯಂತಾಗಿರುವುದನ್ನು ಇಲ್ಲಿ ಗಮನಿಸಬಹುದು. ಮತ್ತೆ ಬಂಗಾರವಿಲ್ಲದ ಬೆರಳನ್ನು ಪುನರಾವರ್ತಿಸಿ ಗಾಯಕ ಎಂದಿನಂತೆ ತಮ್ಮ ಕಾರ್ಯದಲ್ಲಿ ತೊಡಗಿರುವ ಮನಸ್ಸನ್ನು ಅಭಿವ್ಯಕ್ತಗೊಳಿಸಿದ್ದಾರೆ.

ಕಲ್ಲ ಹರಳನು ಹುಡುಕಿ ಎಲ್ಲಿಗೋ ಎಸೆವಾಗ
ಝಲ್ಲೆನುವ ಬಳೆಯ ಸದ್ದು

ನಿಮಗೆ ಗೊತ್ತಿರುವಂತೆ ನಮಗೆ ಭಾರತದಲ್ಲಿ ಟ್ರ್ಯಾಷ್ ಎಸೆಯೋದಕ್ಕೆ ಮನೆಯ ಒಳಗೆ ಒಂದು ನಿಖರವಾದ ಜಾಗ ಅಂತೇನು  ಇರುತ್ತಿರಲಿಲ್ಲ.  ಅದರಲ್ಲೂ ಅಕ್ಕಿಯಲ್ಲಿ ಸಿಗುವ ಕಲ್ಲನ್ನು ಇಂತಲ್ಲೇ ಎಸೆಯಬೇಕು ಎಂಬ ನಿಯಮವೇನೂ ಇರಲಿಲ್ಲ.  ಆದರೆ ಮನೆಯನ್ನು ದಿನಕ್ಕೆರಡು ಬಾರಿಯಾದರೂ ಗುಡಿಸಿ-ಒರೆಸಿ ಇಟ್ಟುಕೊಂಡಿರುವಾಗ ಅಕ್ಕಿಯಲ್ಲಿ ಆರಿಸಿದ ಕಲ್ಲು ಗೌಣವಾಗುತ್ತಿತ್ತು.  ಅದು ಎಲ್ಲ ಕಸದ ಜೊತೆಗೆ ತಿಪ್ಪೆ ಸೇರುತ್ತಿತ್ತು.  ಆದರೆ ಇಲ್ಲಿ, ಕಲ್ಲ ಹರಳನು ಹುಡುಕಿ ತೆಗೆದ ಕೈಗಳಿಗೆ ಪೂರ್ಣ ಸ್ವಾತಂತ್ರ್ಯವಿದೆ, ಅದನ್ನು ಇಂತಲ್ಲಿಗೆ ಎಸೆಯಬೇಕು ಎಂಬ ನಿಯಮವೇನೂ ಇಲ್ಲ, ಜೊತೆಗೆ ಕಲ್ಲು ಅಕ್ಕಿಯಿಂದ ಬೇರ್ಪಡುವ ಪ್ರಕ್ರಿಯೆಗೆ ಮಾತ್ರ ಪ್ರಾಮುಖ್ಯತೆ ಇದೆ, ಕಲ್ಲು ಹೊರ ಹೋಗುವಾಗ ಎಲ್ಲಿಗೆ ಬೇಕಾದರೂ ಹೋಗಬಹುದು.  ಇಂಥ ಸಂದರ್ಭದಲ್ಲಿ ಪೂರ್ಣ ನಿಶ್ಶಬ್ದ ಆವರಿಸಿರುತ್ತದೆ, ಆದರೆ ಆ ಕಲ್ಲನ್ನು ಎಸೆದ ಕೈಗಳಲ್ಲಿದ್ದ ಬಳೆಗಳು ಝಲ್ಲೆಂದು ಸದ್ದು ಮಾಡುವುದು ಸ್ವಾಭಾವಿಕ... ಆದರೆ ಇಲ್ಲಿ ಝಲ್ಲೆಂದು ಸದ್ದು ಮಾಡುವ ಬಳೆಗಳು ಗಾಜಿನ ಬಳೆಗಳು, ಮತ್ತೆ ಬಡತನದ ವಾತವರಣವನ್ನು ಶ್ರೋತೃಗಳ ಗಮನಕ್ಕೆ ತರುತ್ತವೆ.


ಅತ್ತ ಯಾರೋ ಹೋದ ಇತ್ತ ಯಾರೋ ಬಂದ
ಕಡೆಗೆಲ್ಲ ಕಣ್ಣು ಬಿತ್ತು
ಬಂಗಾರವಿಲ್ಲದ ಬೆರಳೂ|

ಸಾಮಾನ್ಯವಾಗಿ ಮನೆಯ ಜಗುಲಿ ಅಥವಾ ಮುಂಗಟ್ಟುಗಳಲ್ಲಿ ಕುಳಿತು ಅಕ್ಕಿ ಆರಿಸುವುದು ಸಹಜ.  ಒಳಮನೆ ಹಾಗೂ ಆಡುಗೆ  ಮನೆಗಳಲ್ಲಿ ಅಷ್ಟೊಂದು ಬೆಳಕಿಲ್ಲದಿರಬಹುದು, ಅಲ್ಲದೇ ಹಿತ್ತಲ ಬಾಗಿಲನ್ನು ಈ ರೀತಿಯ ಕೆಲಸಗಳಿಗೆ ಹೆಚ್ಚಿನ ಜನರು ಆಯ್ಕೆ ಮಾಡಿಕೊಂಡಿರಲಾರರು.  ಈ ನಿರ್ಲಿಪ್ತತೆಯಲ್ಲಿ ಕಾರ್ಯತತ್ಪರವಾಗಿರುವ ಹೆಣ್ಣಿಗೆ ಊರಿನ ಬೀದಿಯಲ್ಲಿ ಆ ಕಡೆ ಈ ಕಡೆ ಜನರು ಓಡಾಡಿದ ದೃಶ್ಯ ಅರಿವಿಗೆ ಬರುತ್ತದೆ.  ಅವರು ಹೋದಕಡೆ, ಬಂದಕಡೆಗೆಲ್ಲ ಕಣ್ಣು ಬೀಳುವುದು ಮತ್ತೆ ಯಾವುದೋ ದುಗುಡವನ್ನು ಹೊತ್ತು ಕೊಂಡ ಭಾರದ ಮನಸ್ಸಿನ ಹೆಣ್ಣಿನ ಚಿತ್ರಣವನ್ನು ಸಾಬೀತು ಮಾಡುತ್ತವೆ.  ಕೊನೆಯಲ್ಲಿ ಬರುವ "ಬಂಗಾರವಿಲ್ಲದ ಬೆರಳು" ಈ ಬಾರಿ ಚಂಚಲ ಮನಸ್ಸು ಮತ್ತೆ ಕಾರ್ಯಮಗ್ನವಾಗುವುದನ್ನು ಬಿಂಬಿಸುತ್ತದೆ.

ಮನೆಗೆಲಸ ಬೆಟ್ಟದಷ್ಟಿರಲು ಸುಮ್ಮನೆ ಇವಳು
ಚಿತ್ರದಲಿ ತಂದಂತೆ ಇಹಳು

ಇಲ್ಲಿ ಮನಸ್ಸಿನ ಭಾರದ ಭಾವಕ್ಕೆ ಕಾರಣವೇನೋ ಎನ್ನುವಂತೆ ಬೆಟ್ಟದಷ್ಟಿರುವ ಮನೆಕೆಲಸವನ್ನು ಕವಿ ಸೂಕ್ಷ್ಮವಾಗಿ ಹೊರಹೊಮ್ಮಿಸುತ್ತಾರೆ. ಹಾಗಿದ್ದರೂ ಕೂಡ ಶೀಘ್ರವಾಗಿ ಹಿಡಿದ ಕೆಲಸವನ್ನು ಮುಂದುವರೆಸಬೇಕು ಎನ್ನುವ ಯೋಚನೆಯಿಲ್ಲದೆ, ನಿಶ್ಚಲವಾಗಿ ತನ್ನ ಕಾರ್ಯದಲ್ಲಿ ತೊಡಗಿದ್ದರೂ ಚಿತ್ರದಲ್ಲಿರುವ ಬೊಂಬೆಯಂತೆ ಇರುವ ಹೆಣ್ಣಿನ ವರ್ಣನೆಯಲ್ಲಿ ಉದಾಸೀನತೆ ಹೊರಹೊಮ್ಮುತ್ತದೆ.  ಮನೆಕೆಲಸ ಬೆಟ್ಟದಷ್ಟಿವೆ, ಎನ್ನುವ ಮಾತು ಸಾಮಾನ್ಯವಾಗಿ ಬಳಕೆಯಲ್ಲಿರುವುದೇ ಆದರೂ, ಸುಮ್ಮನೆ ಇರುವ ಇವಳು, ಅದನ್ನು ಗೌಣವಾಗಿಸುತ್ತಾಳೆ.

ಬೇಸರಿಯ ಕಿರಿಮುತ್ತು ನುಚ್ಚಿನಲಿ ಮುಚ್ಚಿಡಲು
ಹುಡುಕುತಿವೆ ಆ ಹತ್ತು ಬೆರಳು
ಬಂಗಾರವಿಲ್ಲದ ಬೆರಳೂ|

ಈ ಕಥಾನಾಯಕಿಯ ಬೇಸರಿಕೆಯನ್ನು ಮುಚ್ಚಿಡುವಂತೆ ಈ ಬಾರಿ ಎಲ್ಲಾ ಹತ್ತು ಬೆರಳುಗಳೂ ಶ್ರಮಿಸುತ್ತವೆ ಎನ್ನುವ ಮಾತು ಒಂದು ರೀತಿಯಲ್ಲಿ ನಿರಂತರವಾಗಿ ತನ್ನ ಕೆಲಸದಲ್ಲಿ ತೊಡಗಿದ ಹೆಣ್ಣಿನ ಚಿತ್ರಣವನ್ನು ಮುಂದುವರೆಸುತ್ತದೆ, ಮತ್ತೊಂದು ರೀತಿಯಲ್ಲಿ   ಅಕ್ಕಿಯಲ್ಲಿರುವ ಕಲ್ಲನ್ನು ಹುಡುಕುವುದು, ಅದೇ ಅಕ್ಕಿಯ ನುಚ್ಚಿನಲ್ಲಿ ಅದೇನನ್ನೋ ಮುಚ್ಚಿಡುವಂತೆ ಕಾಣಿಸುವುದು ವಿಶೇಷ.  ಮತ್ತೆ ಕೊನೆಯಲ್ಲಿ ಬರುವ ಬಂಗಾರವಿಲ್ಲದ ಬೆರಳು ಈ ಬಾರಿ ಬಡತನವನ್ನು ಮೀರಿ ಸಹಜತೆಗೆ ಒತ್ತು ಕೊಡುತ್ತದೆ.  ಕೊನೆಗೂ ಈ ಕಥಾ ನಾಯಕಿಯ ಬೇಸರಕ್ಕೆ ಇಂಥದೇ ಕಾರಣವೆಂಬುದು ವ್ಯಕ್ತವಾಗದಿದ್ದರೂ ಆಕೆಯ ಮನಸ್ಥಿತಿಯನ್ನು ಅವಳ ಭಾವ-ಭಂಗಿಗಳಿಂದ ವ್ಯಕ್ತಪಡಿಸಲು ಪ್ರಯತ್ನಿಸಲಾಗಿದೆ.  ಅಕ್ಕಿ ಆರಿಸುವ ಈಕೆ ಚಿಕ್ಕ ನುಚ್ಚಿನ ಜೊತೆಗೆ ತನ್ನ ಮನಸ್ಸಿನ ತಳಮಳವನ್ನು ಅವ್ಯಕ್ತವಾಗಿ ಹಂಚಿಕೊಳ್ಳುತ್ತಿದ್ದಾಳೇನೋ ಎನ್ನಿಸಿ, ನಡು ನಡುವೆ ಅಕ್ಕಿಯಲ್ಲಿ ಸಿಗುವ ಚಿಕ್ಕ ಕಲ್ಲುಗಳು ಅವಳ ಕಷ್ಟ ಅಥವಾ ಬೇಸರಿಕೆಯ ಕುರುಹಾಗಿ ಎತ್ತಲೋ ಎಸೆಯುವುದರ ಮೂಲಕ ಹೊರಹಾಕಲ್ಪಡುತ್ತವೆ.  ಹಾಡಿನ ಕೊನೆಯಲ್ಲಿ ಕೊಳಲು ಮತ್ತೆ ಹಾಡಿನಲ್ಲಿ ವ್ಯಕ್ತವಾದ ಭಾವನೆಗಳನ್ನೇ ಮುಂದುವರೆಸುವುದು ವಿಶೇಷ.

ಈ ಹಾಡನ್ನು ನೀವು ಇಲ್ಲಿ ನೋಡಬಹುದು/ಕೇಳಬಹುದು.

Tuesday, April 28, 2020

How to clean old email accounts?

ಕೋವಿಡ್ ಸಂಬಂಧಿ ಲಾಕ್‌ಡೌನ್/ಕ್ವಾರಂಟೈನ್ ಇರೋದ್ರಿಂದ ಗಂಗೆ-ಜಮುನೆಯರೂ ಕ್ಲೀನ್ ಆಗ್ತಾ ಇದ್ದಾರೆ ಅಂತ ತಿಳಿದು... ನಾನೂ ಒಂದು ಸಣ್ಣ ಕ್ಲೀನಿಂಗ್ ಪ್ರಾಜೆಕ್ಟ್ ಕೈಗೆತ್ತಿಕೊಂಡೆ - ಅದೇನೆಂದರೆ ನನ್ನ ಹಳೆಯ ಇ-ಮೇಲ್ ಅಕೌಂಟುಗಳನ್ನು ಕ್ಲೀನ್ ಮಾಡುವುದು!

ಸುಮಾರು 20 ವರ್ಷಗಳಿಗಿಂತ ಹೆಚ್ಚು ಹಳೆಯದಾದ ನನ್ನ ಯಾಹೂ ಅಕೌಂಟು ಬಹಳ ದಿನಗಳಿಂದ ಸ್ಪ್ಯಾಮ್ ಇ-ಮೇಲ್‌ಗಳ ಕಾಟದಿಂದ ನಲುಗಿ ಹೋಗಿತ್ತು.  ಕೇವಲ ಅರ್ಧ ಘಂಟೆಯ ಪರಿಶ್ರಮದಲ್ಲಿ ಹಳೆಯ ಅಕೌಂಟು ಚೊಕ್ಕವಾಯಿತು ಮತ್ತು ಬೇಕಾದ ವಿಷಯ-ವಸ್ತುಗಳು ಆರ್ಗನೈಜ್ ಆದವು.  ಇದೇ ಸುಸಂದರ್ಭ ಎಂದುಕೊಂಡು, ನನ್ನ ಜೀ-ಮೇಲ್ ಮತ್ತು ಔಟ್‌ಲುಕ್ ಅಕೌಂಟುಗಳನ್ನೂ ಸಹ ಕ್ಲೀನ್ ಮಾಡಿದೆ... ಈಗ ಎಲ್ಲವೂ ಸ್ವಚ್ಛವಾಗಿದೆ ನೋಡಿ!

ನನಗೆ ಉಪಯುಕ್ತವಾದ ಈ ಮೆತಡ್ ಅನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ... ಪ್ರಯತ್ನಿಸಿ ನೋಡಿ, ವರ್ಕ್ ಆಯಿತೋ ಇಲ್ಲವೋ ತಿಳಿಸಿ.

***
Just because you bought a thing from someone, several years ago... they have been sending you emails non-stop!  And, your never ever read them!

The usual grouping, labeling, archiving, moving to folders, etc methods are only superficial, I mean, they don't address the root cause.  While everyone wants keep their inbox clean and crisp, their remaining labels, folders, and more importantly, storage gets messed up and becomes full.

These unwanted, unsolicited emails are spams - no one ever wants them, but the spammers keep sending them anyway!

Here's what you need to do:
1. Go to All Mails or your Inbox or your largest folder
2. Look for repeating offenders: like merchants, online stores, etc that you have used once or twice in the past
3. Open one of the emails and look for "Unsubscribe" link in the bottom (sometimes it is hidden, sometimes they use very small font)
4. Click unsubscribe, it mostly opens a new window; either they confirm you're unsubscribed or you need to make another choice/click to "unsubscribe" fully (watch out for daily/weekly/monthly traps)
5. Go back to your Inbox (or largest folder), Search for that merchant (or sender) that you just unsubscribed
6. Select all the mails and click Delete/Trash

You need to repeat steps 2-6 as many times as possible, you will see the clutter reduce like a magic.

The best is yet to come - there won't be any more new emails from the ones that you just unsubscribed!

So, in the end, it is all a happy ending... I bet, your time was well spent and your inbox (including your storage) is fully recovered!

Monday, April 27, 2020

ಮೊದಲ ದಿನ ಮೌನ

ಮೊದಲ ದಿನ ಮೌನ
ಕವಿ: ಕೆ. ಎಸ್. ನರಸಿಂಹ ಸ್ವಾಮಿ



ಮೊದಲ ದಿನ ಮೌನ... ಮೈಸೂರ ಮಲ್ಲಿಗೆಯ ಈ ಹಾಡನ್ನು ಕೇಳಿದಾಗೆಲ್ಲ ಹೊಸದಾಗಿ ಮದುವೆಯಾಗಿ ಗಂಡನ ಮನೆಯನ್ನು ಪ್ರವೇಶಿಸಿದ ಹೆಣ್ಣುಮಗಳ ತಳಮಳ ಅರಿವಾಗುತ್ತದೆ.  ಆಗಿನ ಕಾಲದಲ್ಲಿ ತವರು ಮನೆ ತೊರೆದು ಮತ್ತು ಗಂಡನ ಮನೆಯನ್ನು ಸೇರಿ  ಅಲ್ಲಿ ಅವಿಭಕ್ತ ಕುಟುಂಬದಲ್ಲಿ ಹೊಸ ಜೀವನವನ್ನು ಸಾಗಿಸುವುದು ಪ್ರತಿ ಹೆಣ್ಣುಮಗಳ ಬದುಕಿನಲ್ಲಿ ಮಹತ್ವದ ಬದಲಾವಣೆಯೇ ಸರಿ.  ಈ ಹಾಡಿನ ಉದ್ದಕ್ಕೂ ಬರುವ ಅಲಂಕಾರಗಳು ಒಂದೊಂದು ಹಂತದಲ್ಲಿಯೂ ಹೊಸತನ್ನೇನೋ ಸಾರುತ್ತಿವೆ ಎನ್ನಿಸುತ್ತದೆ.  ಕನ್ನಡ ಸಾಹಿತ್ಯದಲ್ಲಿ ಮದುವೆಯಾಗಿ ಗಂಡನ ಮನೆಗೆ ಹೋದ ಹೆಣ್ಣು ಮಗಳ ಮನದ ತಲ್ಲಣವನ್ನು ಮೈಸೂರ ಮಲ್ಲಿಗೆಯ ಈ ಕವನ ಅತ್ಯಂತ ಸೂಕ್ಷ್ಮವಾಗಿ ಗಮನಿಸುವುದರ ಜೊತೆಗೆ, ಈ ಮೂರು ದಿನಗಳ ಪರಿವರ್ತನೆಯ ಸಮಯದಲ್ಲಿ ಸಾಂದರ್ಭಿಕವಾಗಿ ಆಕೆಯ ಒಳತೋಟಿಯನ್ನು ಇಣುಕಿ ನೋಡುತ್ತದೆ.  ಹಲವು ದಶಕಗಳ ಹಿಂದೆ ಎಲ್ಲರೂ ಸಹಜವಾಗಿ ಗಮನಿಸಬಹುದಾದ ಭಾವನೆಯೇನೋ ಎನ್ನುವಂತಿದ್ದ ಕಾಲದಲ್ಲಿ ಈ ಹಾಡು ಜನಮಾನಸದಲ್ಲಿ ಅದರ ಸ್ಥಾನವನ್ನು ಪಡೆದುಕೊಂಡಿದ್ದಿರಬಹುದು, ಆದರೆ ಈ ಹಾಡಿನ ಭಾವನೆಗಳ ಸಾಂದ್ರತೆಯ ವಸ್ತುನಿಷ್ಠತೆ ಇಂದಿನ ಆಧುನಿಕ ಯುಗದಲ್ಲೂ ಕೇಳುಗರನ್ನು ತನ್ನೊಳಗೆ ತಲ್ಲೀನಗೊಳಿಸಿಕೊಂಡು ಒಂದು ಕ್ಷಣ ಈ  ಹಾಡಿನಲ್ಲಿ ಅಡಗಿದ ಭಾವನೆಗಳ ಕೋಟಲೆಗಳೊಳಗೆ ಒಂದು ಮಾಡಿ ಬಿಡುತ್ತದೆ.

ಮೊದಲ ದಿನ ಮೌನ ಅಳುವೇ ತುಟಿಗೆ ಬಂದಂತೆ 
ಚಿಂತೆ ಬಿಡಿ ಹೂವ ಮುಡಿದಂತೆ 

ಗಂಡನ ಮನೆ ಸೇರಿದ ಮೊದಲ ದಿನ ಹೆಚ್ಚೂ ಕಡಿಮೆ ಮೌನದಲ್ಲೇ ಕಳೆದು ಹೋಗುತ್ತದೆ.  ಗುರುತು ಪರಿಚಯವಿಲ್ಲದ ಊರು,  ಮನೆಯಲ್ಲಿ ಮದುಮಗಳು ಅಲಂಕಾರಕ್ಕಿಟ್ಟ ಬೊಂಬೆಯೇನೋ ಎನ್ನುವಂತೆ ಎಲ್ಲರೂ ನೋಡುವವರೇ.  ಕುಳಿತರೂ ಕಷ್ಟ, ನಿಂತರೂ ಕಷ್ಟ.  ನಡುನಡುವೆ ತವರಿನ ಜ್ಞಾಪಕದಿಂದ ಕಣ್ಣು ಹನಿಗೂಡುತ್ತವೆ.  ಅಳು ತುಟಿಗೆ ಬರುತ್ತದೆ, ಆದರೆ ಗಟ್ಟಿಯಾಗಿ ಅಳಲಾಗದು.  ಚಿಂತೆ ಬಿಡಿ ಹೂವು ಮುಡಿದಂತೆ ಸಣ್ಣಗೆ ಇದ್ದರೂ ಇಲ್ಲದಂತೆ ತಲೆ ಏರಿ ಕುಳಿತಿರುತ್ತದೆ.

ಹತ್ತುಕಡೆ ಕಣ್ಣು ಸಣ್ಣಗೆ ದೀಪ ಉರಿದಂತೆ 
ಜೀವದಲಿ ಜಾತ್ರೆ ಮುಗಿದಂತೆ|

ನೆರೆ ಹೊರೆಯವರು ಹಾಗೂ ಮನೆ ಮಂದಿ ಎಲ್ಲರೂ ಬಂದು ನೋಡುವವರೇ.  ನವ ವಧು ಹೇಗಿದ್ದಾಳೆ? ಏನು ಮಾಡುತ್ತಿದ್ದಾಳೆ ಎನ್ನುವ ಕುತೂಹಲ ಚಿಕ್ಕವರಿಂದ ದೊಡ್ಡವರ ವರೆಗೆ.  ಎಲ್ಲ ಕಡೆಯಿಂದ ಇಣುಕಿ ನೋಡುವ ಕಣ್ಣುಗಳು ಸಣ್ಣಗೆ ದೀಪ ಉರಿದಂತೆ ಕಂಡರೆ, ತಳಮಳದ ಜೀವದಲ್ಲಿ ಜಾತ್ರೆ ಮುಗಿದಂತೆನಿಸುತ್ತದೆ.  ಜಾತ್ರೆ ಮುಗಿದಾಗ ಏನೇನಾಗಬಹುದು... ಜಾತ್ರೆಗೆಂದು ತಲೆ ಎತ್ತಿದ್ದ ಅಂಗಡಿ ಮುಗ್ಗಟ್ಟುಗಳು ತಮ್ಮ ಟೆಂಟನ್ನು ಕಿತ್ತು ಗಂಟು ಮೂಟೆ ಕಟ್ಟುವುದು, ಅಲ್ಲಲ್ಲಿ ನಿಲ್ಲಿಸಿದ ಎತ್ತಿನ ಬಂಡಿ ಜಾನುವಾರುಗಳು ಪುನಃ ಮನೆ ಕಡೆಗೆ ದಾರಿ ಹಿಡಿವುದು, ಇಷ್ಟೊಂದು ಹೊತ್ತು ಗಿಜುಗಿಟ್ಟುತ್ತಿದ್ದ ಬೀದಿ-ವಠಾರಗಳು ನಿಧಾನವಾಗಿ ಖಾಲಿ ಆಗುವುದು.  ಊರಿನ ತೇರು ಆಗಲೇ ಗುಡಿ ಸೇರಿ ಜನರು ದೇವಸ್ಥಾನದಿಂದ ಪುನಃ ಮನೆಗೆ ಮರಳುವುದು.  ಜನಜಂಗುಳಿಯಿಂದ ಮೇಲೆದ್ದಿದ್ದ ಧೂಳು ನಿಧಾನವಾಗಿ ತಿಳಿಯಾಗುವುದು...ಹೀಗೆ ಒಂದು ಸಂಭ್ರಮದ ಕ್ಷಣ ಸಹಜವಾಗಿ ಮುಂದಿನ ಗತಿಯಲ್ಲಿ ಲೀನವಾಗುವುದರ ಚಿತ್ರಣದ ಮೂಲಕ ಈ ಸಾಲುಗಳು ಅನೇಕ ನೆನಪುಗಳನ್ನು ಹಲವು ರೂಪಕಗಳ ಮುಖೇನ ಕಣ್ಣಿಗೆ ಕಟ್ಟಿಕೊಡುತ್ತದೆ.

ಎರಡನೆಯ ಹಗಲು ಇಳಿಮುಖವಿಲ್ಲ ಇಷ್ಟು ನಗು 
ಮೂಗುತಿಯ ಮಿಂಚು ಒಳಹೊರಗೆ 
ನೀರೊಳಗೆ ವೀಣೆ ಮಿಡಿದಂತೆ ಆಡಿದ ಮಾತು 
ಬೇಲಿಯಲಿ ಹಾವು ಹರಿದಂತೆ|

ಅಂತೂ ಕಷ್ಟದ ಮೊದಲ ದಿನ ಮುಗಿದು ಎರಡನೆಯ ದಿನ ಸ್ವಲ್ಪ ಚೇತರಿಕೆ ಶುರುವಾಗುತ್ತದೆ.  ಎರಡನೆಯ ಹಗಲು ಎಂದು ಶುರುವಾಗುವ ಸಾಲುಗಳು ಬಹಳ ನಿಧಾನವಾಗಿ ಸಾಗುವ ಉದ್ದದ ದಿನಗಳನ್ನು ತೋರಿಸುತ್ತವೆ.  ಸುತ್ತಲಿನ ಪರಿಸರ ನಿನ್ನೆಯಷ್ಟು ಹೊಸತೆನಿಸುವುದಿಲ್ಲ, ಆದ್ದರಿಂದ ಇಳಿ ಮುಖವಿರದೆ ಸ್ವಲ್ಪ ಕೊರಗು ಕಡಿಮೆಯಾದಂತೆನಿಸುತ್ತದೆ.  ಮನೆಯ ಒಳ ಹೊರಗೆ ಓಡಾಡಿದಂತೆಲ್ಲ ಹೊಸ ಮೂಗುತಿಯ ಮಿಂಚು ಅಲ್ಲಲ್ಲಿ ಕಾಣಸಿಗುತ್ತದೆ.  ಆದರೂ ಅವರಿವರ ಮಾತುಗಳಲ್ಲಿ ಅಷ್ಟೊಂದು ಸ್ಪಷ್ಟತೆ ಇಲ್ಲ, ಈ ಕಡೆ ಮಾತನಾಡಿದಂತೆಯೂ ಇರಬೇಕು, ಆಡದಂತೆಯೂ ಇರಬೇಕು.  ತೆಳುವಾದ ದುಃಖದ ಗುಂಗಿನಲ್ಲಿ ತೇಲುವ ಮನಸಿಗೆ ಆಡಿದ ಮಾತುಗಳು ಬರೀ ತುಟಿಯ ಚಲನೆಯಂತೆ ಕಂಡು ಬರಬಹುದು.  ಈ ಸಂದರ್ಭಗಳಲ್ಲಿ ಸಮಯ ಬಹಳ ನಿಧಾನವಾಗಿ ಚಲಿಸುತ್ತದೆ.  ಬೇಲಿಯಲ್ಲಿ ಹಾವು ಸರಿದಂತೆ ಎನ್ನುವ ರೂಪಕ ತವರು ಮತ್ತು ಗಂಡನ ಮನೆಯ ಎರಡು ಕಡೆಗಳಲ್ಲಿ ಹರಿದಾಡುವ ಮನಸ್ಸಿನ ಪ್ರತೀಕವಿರಬಹುದು.  ಜೊತೆಗೆ ಬೇಲಿಯಲ್ಲಿ ಹರಿದಾಡುವ ಹಾವು ಜೊತೆಗೆ ಅಲ್ಲಿ ಹರಡಿದ ಹೂವು-ಮುಳ್ಳುಗಳ ಜೊತೆಗೆ ಸಹ ಪರಿಸರದಲ್ಲಿ ಹೊಂದಿಕೊಂಡಿರುವುದನ್ನು ಕಣ್ಣಿಗೆ ಕಟ್ಟುತ್ತದೆ.

ಮೂರನೆಯ ಸಂಜೆ ಹೆರಳಿನ ತುಂಬಾ ದಂಡೆ ಹೂ 
ಹೂವಿಗೂ ಜೀವ ಬಂದಂತೆ 
ಸಂಜೆಯಲಿ ರಾತ್ರಿ ಇಳಿದಂತೆ ಬಿರು ಬಾನಿಗೂ 
ಹುಣ್ಣಿಮೆಯ ಹಾಲು ಹರಿದಂತೆ|

ಇನ್ನು ಮೂರನೆ ದಿನ ನಿಜವಾಗಿಯೂ ಚೇತರಿಕೆಯ ದಿನ.  ಮನೆಯ ಸಣ್ಣ ಪುಟ್ಟ ಕೆಲಸಗಳಲ್ಲಿ ಕೈಗೂಡಿಸಿ ಮನೆಯವರೊಂದಿಗೆ ಸೇರಿಕೊಳ್ಳುವ ಪರಿ.  ಅತ್ತೆ, ಮಾವ, ಗಂಡ, ನಾದಿನಿ, ಮೈದುನರನ್ನೆಲ್ಲ ಸಂಬಾಳಿಸಿಕೊಂಡು ಹೋಗುವ ಪರಿ.  ಹೆರಳಿನ ತುಂಬಾ ಹೂ ಮುಡಿದಂತೆ ಆ ಹೂವಿಗೂ ಜೀವ ಬಂದಂತೆ ಎನ್ನುವ ಸಾಲುಗಳು ತಾಜಾ ಹೂಗಳು ಗುಂಪಾಗಿ ದಂಡೆಯ ರೂಪದಲ್ಲಿ ಸಂಭ್ರಮಿಸುವುದನ್ನು ನೋಡಬಹುದು, ಕೇವಲ ಮೂರೇ ದಿನಗಳಲ್ಲಿ ಇದು ಬಿಡಿ ಹೂವಿನ ಚಿಂತೆಯಿಂದ ಬಹಳ ದೂರ ಬಂದ ಮನಸ್ಸಿನ ಪರಿವರ್ತನೆಯನ್ನು ತೋರಿಸುತ್ತದೆ.  ಮೂರನೆಯ ಸಂಜೆ ಎಂದು ಆರಂಭವಾಗುವ ಪದಗಳು ಎರಡನೆಯ ಭಾರವಾದ ಹಗಲಿನಿಂದ ಬಹಳಷ್ಟು ಮುಂದೆ ಬಂದ ಸೂಚನೆಯನ್ನು ಕೊಡುತ್ತದೆ.  ಜೊತೆಗೆ ರಾತ್ರಿ ಇಳಿದಂತೆ ಕತ್ತಲಾದರೂ ಇಡೀ ಬಾನನ್ನು ಆವರಿಸುವ ಹುಣ್ಣಿಮೆಯ ಹಾಲು   ಬೆಳದಿಂಗಳ ಕೊರಗುವ ಕತ್ತಲಿನಿಂದ ಮನಸ್ಸು ದೂರಸರಿದಿರುವುದನ್ನು ಪ್ರತಿಬಿಂಬಿಸುತ್ತದೆ.

ಈ ಹಾಡನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು/ಕೇಳಬಹುದು.

Sunday, April 26, 2020

ಜೀವದ ಬೆಲೆ ಜೀವದ ಸೆಲೆ


ಆರೇ ಆರು ವಾರಗಳಲ್ಲಿ ಗಂಗೆ-ಜಮುನೆ ಶುದ್ಧರಾದರು
ಜೀವಕೆ ಹೆದರಿದ ಕುಲ ಬಾಂಧವರು ಮುಗ್ಧರಾದರು
ಎಲ್ಲಾ ಜೀವಕು ಬೆಲೆ ಇದೆಯೆಂಬ ಪಾಠ ಕಲಿತರು
ತಾನೇ ಎಲ್ಲ ಎನ್ನುವ ಹಟವ ಮರೆತರು|

ಗೂಡಲಿ ಗುಹೆಯಲಿ ಅವಿತಿಹ ಮನುಜ
ಹೊರಬರಲಾರದೆ ಹೆದರಿಹ ನಿಜ
ಸಹ ಬಾಳುವೆ ಸಹ ಜೀವನ ಆಗಿದೆ ಸಜ
ತೂಗಿಸಿಕೊಳ್ಳುವ ಪ್ರಕೃತಿ ಎಂದಿಗೂ ರಾಜ|

ಕಣ್ಣಿಗೆ ಕಾಣದ ಜೀವದ ಬೆಲೆಯನು
ಕಣ್ಣಿಗೆ ಕಾಣದ ಜೀವಿಯು ಕಲಿಸಿತು
ನೋಟಕೆ ಮೀರಿದ ಪಾಠವು ನೂರಿದೆ
ಅದು ಆಟವಾಗದೆ ಅಳಲು ತೋಡಿದೆ|

ಜೀವದ ಬೆಲೆ ಜೀವದ ಸೆಲೆ ಸಂಭ್ರಮವೋ ಅಣ್ಣಾ
ತಿಂದು ತೇಗುವ ಮೊದಲು ತೆರೆಯಿರೋ ಕಣ್ಣಾ|

Saturday, April 25, 2020

ಎಲ್ಲಾ ಕಸಮಯವೋ!

ಕೊರೋನಾ ವೈರಸ್‌ಗೆ ಸಂಬಂಧಿಸಿದ ಬಿಕ್ಕಟ್ಟನ್ನು ನಾವೆಲ್ಲ ಎದುರಿಸುತ್ತಿರುವಾಗ ಒಂದು ವಿಷಯವನ್ನು ನಮ್ಮ ಅನುಕೂಲಕ್ಕೋಸ್ಕರ ಮರೆತುಬಿಡುತ್ತಿದ್ದೇವೆಂದರೆ ಅದು ನಮ್ಮ ಕಸ ಸಂಸ್ಕರಣೆಯ ವೈಫಲ್ಯ.  ನಮ್ಮ ತಂತ್ರಜ್ಞಾನಗಳು ಅದೆಷ್ಟೇ ಮುಂದುವರೆದರೂ, ಬಾಲ್ಟಿಮೋರ್‌ನಿಂದ ಬೆಂಗಳೂರಿನವರೆಗೆ ನಾವು ಕಸವನ್ನು ಪರಿಷ್ಕರಿಸುವ ರೀತಿಯನ್ನು ನೋಡಿದರೆ ತಿರಸ್ಕಾರ ಮೂಡುತ್ತದೆ.  ಇತ್ತೀಚೆಗೆ I-95ನಲ್ಲಿ ಡ್ರೈವ್ ಮಾಡುತ್ತಾ ಇನ್ನೇನು ಬಾಲ್ಟಿಮೋರ್ ನಗರವನ್ನು ಹೊಕ್ಕುತ್ತಿರುವಂತೆ (ಕಸವನ್ನು ಸುಟ್ಟು) ಗಗನಕ್ಕೆ  ಹೊಗೆಯನ್ನು ಉಗುಳುವ ಹೊಗೆ ಕೊಳವೆಗಳು ನಾವು ಇನ್ನೂ ಜೀವಂತವಿದ್ದೇವೆ ಎಂದು ನೆನಪಿಸಿದವು.  ಅದೇ ರೀತಿ ನೀವು ಭಾರತದ ಯಾವುದೇ ಮಹಾನಗರಕ್ಕೆ ಹೋದರೂ ಕಸದ ಪ್ರಮಾಣ ಮತ್ತು ಸಂಸ್ಕರಣಾ ವಿಧಾನ ಎರಡೂ ನಿಮ್ಮನ್ನು ಹೈರಾಣಾಗಿಸುತ್ತವೆ ಎಂದರೆ ತಪ್ಪೇನಿಲ್ಲ.



ದಿನೇ-ದಿನೇ ಬೃಹದಾಕಾರವಾಗಿ ಬೆಳೆಯುವ ಕಸದ ಪ್ರಮಾಣ ಒಂದು ದಿನ ಇಡೀ ಪ್ರಪಂಚದ ಪ್ರಗತಿಗೇ ಮಾರಕವಾಗಬಹುದೇ ಎಂಬ ಕೊರಗು ಇತ್ತೀಚೆಗೆ ಬಲವಾಗಿ ಕಾಡುತ್ತಿದೆ.

***
ನಮ್ಮ ಆಧುನಿಕ ಬದುಕಿನಲ್ಲಿ ನಾವೇ ಉತ್ಪಾದಿಸಿದ ಸಮಸ್ಯೆಗಳಲ್ಲಿ ಈ ಕಸವೂ ಒಂದು.  ಇದನ್ನ ಕಸ ಅನ್ನಿ, ಟ್ರ್ಯಾಶ್ ಅನ್ನಿ, ಅಥವಾ ರಬ್ಬಿಶ್ ಅನ್ನಿ, ತ್ಯಾಜ್ಯ ಅನ್ನಿ, ಕಲ್ಮಷ ಅನ್ನಿ - ಎಲ್ಲವೂ ಒಂದೇ.   ಎಲ್ಲ ದೇಶಗಳಲ್ಲೂ ಈ ಸಮಸ್ಯೆ ಇದ್ದೇ ಇದೆ, ಆದರೆ ಭಾರತದಲ್ಲಿ ಇದು ಅತಿ ಹೆಚ್ಚು ಎನ್ನಬಹುದು.  ಈಗಿನ ಎಲ್ಲೆಲ್ಲೂ ಕಸವೇ ಕಸ ಎನ್ನುವ ಅಂತಿಮ ಹಂತವನ್ನು ತಲುಪುವಲ್ಲಿ ಸಹಾಯ ಹಸ್ತ ನೀಡಿದ ಪೆಡಂಭೂತಗಳಲ್ಲಿ ಮುಖ್ಯವಾದುವು: ಯದ್ವಾತದ್ವಾ ಬೆಳೆದ ಜನಸಂಖ್ಯೆ, ಎಂಥ ಸಮಸ್ಯೆಗಳನ್ನೂ ಉಲ್ಬಣಗೊಳಿಸಬಲ್ಲ ಜನಸಾಂದ್ರಂತೆ, ಇವೆಲ್ಲಕ್ಕೂ ಮೂಲಭೂತ ಕಾರಣವಾದ ಪ್ಲಾನಿಂಗ್ (ಅಥವಾ ಪ್ಲಾನಿಂಗ್ ಇರದೇ ಇರುವ ಸ್ಥಿತಿ), ಎಂಥ ಸಂದರ್ಭವನ್ನೂ ತನ್ನ ಅನುಕೂಲಕ್ಕಾಗಿ ಬಳಸಿಕೊಳ್ಳುವ ರಾಜಕೀಯ ಮುತ್ಸದ್ದಿತನ ಹಾಗೂ ಲಂಚ ಲಂಪಟತನ.

ಭಾರತದವೆಂದರೆ ಬೆಂಗಳೂರೊಂದೇ ಅಲ್ಲ, ಆದರೆ ನಮ್ಮ ಬೆಂಗಳೂರಿಗೆ ಈ ಗತಿ ಬಂದಿರುವಾಗ ಇನ್ನುಳಿದ ನಗರಗಳ ಪಾಲು ಹೇಗಿರಬೇಡ.  ಏಳು (೨೦೧೧) ವರ್ಷಗಳ ಹಿಂದೆ ೮೫ ಲಕ್ಷ ಜನಸಂಖ್ಯೆ ಇದ್ದ ಬೆಂಗಳೂರು ಇಂದು ೧೨೫ ಲಕ್ಷ (೨೦೧೭) ತಲುಪಿದೆ. ಇಲ್ಲಿ ನೂರಕ್ಕೆ ತೊಂಭತ್ತು ಜನ ಅಕ್ಷರಕುಕ್ಷಿಗಳಿದ್ದರೂ ಸಹ, ಇಡೀ ನಗರ ಅನಾಗರೀಕರ ಬೀಡಾಗಿದೆ.  ತಮ್ಮ ಮನೆಯ ಒಳಗನ್ನು ಬೆಳಗಿಕೊಳ್ಳುವ ಜನ, ಹೊರಗನ್ನು ಅದೆಷ್ಟು ಕೊಳಕಾಗಿಟ್ಟುಕೊಂಡಿದ್ದಾರೆಂದರೆ ಅದರ ಬಗ್ಗೆ ಯಾರೂ ಮಾತನಾಡುವುದೇ ಇಲ್ಲ, ಆದ್ದರಿಂದ ಎಲ್ಲರಿಗೂ ಅದು ’ಒಪ್ಪಿಕೊಂಡ’ ಅಥವಾ ’ಒಗ್ಗಿಕೊಂಡ" ವಿಷಯವಾಗಿದೆ.

ಒಂದು ನಗರ ನಿರ್ಮಲೀಕರಣಗೊಳ್ಳ ಬೇಕಾದರೆ ಅಲ್ಲಿನ ಒಳಚರಂಡಿ ವ್ಯವಸ್ಥೆ ಚೆನ್ನಾಗಿರಬೇಕು.  ಅಲ್ಲಿ ಬಳಕೆಯಾಗುವ ನೀರನ್ನು ಪರಿಷ್ಕರಿಸಿ ತ್ಯಾಜ್ಯ ಪದಾರ್ಥಗಳನ್ನು ಬೇರ್ಪಡಿಸಿಬೇಕು.  ಇದೇ ರೀತಿ ಕಸವನ್ನು ಸಹ ಪರಿಷ್ಕರಿಸಿ, ರಿಸೈಕಲ್ ಮಾಡಬಹುದಾದವುಗಳನ್ನು ಬೇರ್ಪಡಿಸಿ ರಿಸೈಕಲ್ ಮಾಡಬೇಕು.  ಇವೆಲ್ಲಕ್ಕೂ ವ್ಯವಸ್ಥಿತವಾದ ಸಾಮಾಜಿಕ ಕಾಳಜಿ ಇರಬೇಕು.  ನಗರೀಕರಣ, ಅತಿ ಜನಸಾಂದ್ರತೆಯಿಂದ ನಮ್ಮ ಸಮಸ್ಯೆಗಳು ಹೆಚ್ಚಿ ನಮ್ಮ ಪರಿಸ್ಥಿತಿ ಹೀಗಾಗಿದೆ ಎಂದು ತಳ್ಳಿ ಹಾಕುವಂತಿಲ್ಲ.  ಉದಾಹರಣೆಗೆ, ೯೦ ಲಕ್ಷ ಜನಸಂಖ್ಯೆ ಇರುವ ನ್ಯೂ ಯಾರ್ಕ್ ನಗರ, ಇದಕ್ಕಿಂತಲೂ ನಾಲ್ಕು ಪಟ್ಟು ಜನಸಾಂದ್ರತೆ ಇರುವ ಟೋಕ್ಯೋದಲ್ಲಿ ಜನರು ಬದುಕುತ್ತಿಲ್ಲವೇ? ಅಲ್ಲಿಯೂ ಕಸದ ಸಮಸ್ಯೆ ಇದೆಯೇ ಎಂದು ಯೋಚಿಸಬೇಕಾಗುತ್ತದೆ.

ನಮ್ಮ ಕಸದ ಸಮಸ್ಯೆಗೆ ನಾವು ಏನು ಮಾಡಬೇಕು? ಈ ಹಿಂದೆ ವ್ಯವಸ್ಥಿತವಾದ ಪ್ಲಾನ್ ಇಲ್ಲದೇ ಅಡ್ಡಾದಿಡ್ಡಿಯಾಗಿ ಬೆಳೆದ ನಗರಗಳ ಕನಿಷ್ಠ ಇನ್‌ಫ್ರಾಸ್ಟ್ರಕ್ಚರ್ ಅನ್ನು ಬೆಳೆಸುವುದರ ಜೊತೆಗೆ, ಅಲ್ಲಿ ಎಲ್ಲೆಲ್ಲಿಂದಲೋ ವಲಸೆ ಬಂದು ಸೇರಿಕೊಂಡ ಜನರ ತಿಳುವಳಿಕೆಯನ್ನು ಹೆಚ್ಚಿಸಬೇಕು.  ಜೊತೆಗೆ ತಿರಸ್ಕೃತ ತ್ಯಾಜ್ಯವನ್ನು ಬೇರ್ಪಡಿಸಿ ಅದನ್ನು ಸರಿಯಾಗಿ "ವಿನಿಯೋಗಿಸುವ" ಉದ್ಯಮಗಳು ಹಾಗೂ ಅದಕ್ಕೆ ಸೂಕ್ತವಾದ ಟೆಕ್ನಾಲಜಿ ಮತ್ತು ಮಷೀನುಗಳ ಸಹಾಯದಿಂದ ಕಸದ ಪೆಡಂಭೂತವನ್ನು ನಿಯಂತ್ರಿಸಬಹುದು.   ನಾನು ನೋಡಿದಂತೆ ಬೆಂಗಳೂರಿನ ಬಹುಭಾಗದಲ್ಲಿ ಈಗ      ಚಾಲ್ತಿಯಲ್ಲಿರುವ ವ್ಯವಸ್ಥೆ ಕಲೆಕ್ಟ್ ಎಂಡ್ ಡಂಪ್.  ಇದು ಹೀಗೇ ಮುಂದುವರೆದರೆ ಇಡೀ ನಗರವೇ ತಿಪ್ಪೇಗುಂಡಿಯಾಗುವುದು ಗ್ಯಾರಂಟಿ.

ಕಸವನ್ನು ಕಲೆಕ್ಟ್ ಮಾಡಿ, ಅದನ್ನು ಸರಿಯಾಗಿ ಬೇರ್ಪಡಿಸಿ, ರಿಸೈಕಲ್ ಮಾಡುವವನ್ನು ಸರಿಯಾದ ಜಾಗಕ್ಕೆ ತಲುಪಿಸಿ, ಕೊಳೆಯುವುದನ್ನು ಕಾಂಪೋಸ್ಟ್ ಆಗಿ ಪರಿವರ್ತಿಸಿ ಮತ್ತೆ ಅವೇ ರಿಸೋರ್ಸುಗಳನ್ನು ಒಂದಲ್ಲ ಒಂದು ರೀತಿಯಲ್ಲಿ ಬಳಕೆ ಆಗುವಂತೆ ನೋಡಿಕೊಳ್ಳುವುದು ತ್ಯಾಜ್ಯವನ್ನು ಪರಿಷ್ಕರಿಸಲು ಇರುವ ಒಂದು ಸಾಲಿನ ಸೂತ್ರ.  ಮೊದಲೆಲ್ಲ ನಮ್ಮಲ್ಲಿ ಪ್ಲಾಸ್ಟಿಕ್ಕುಗಳು ಬಳಕೆಯಾಗುತ್ತಿರಲಿಲ್ಲ.  ಮನೆಗೊಂದು ತಿಪ್ಪೇಗುಂಡಿ ಇರುತ್ತಿತ್ತು, ಅಲ್ಲಿ ದಿನಬಳಕೆಯ ತ್ಯಾಜ್ಯ ಕೊಳೆತು ಗೊಬ್ಬರವಾಗುತ್ತಿತ್ತು. ಹಳೆಯ ಟೂತ್‌ಪೇಸ್ಟ್ ಟ್ಯೂಬುಗಳಿಂದ ಹಿಡಿದು, ಒಡೆದ ಪ್ಲಾಸ್ಟಿಕ್ ಕೊಡಪಾನಗಳ ತುಂಡುಗಳನ್ನು, ಖಾಲಿ ಬಾಟಲುಗಳನ್ನು, ರದ್ದಿ ಪೇಪರುಗಳನ್ನು ದುಡ್ಡು ಕೊಟ್ಟು ತೆಗೆದುಕೊಂಡು ಹೋಗುತ್ತಿದ್ದರು. ಇದಿಷ್ಟೇ ಅಲ್ಲ, ಹಳೆಯ ಪಾತ್ರೆಗಳನ್ನೂ, ರೇಷ್ಮೆ ಬಟ್ಟೆ ಮೊದಲಾದವುಗಳನ್ನೂ ಸಹ ನಮಗೆ ಗೊತ್ತಾದ ರೀತಿಯಲ್ಲಿ ’ರಿಸೈಕಲ್’ ಮಾಡುತ್ತಿದ್ದೆವು.
ಇಂದಿನ ಆಧುನಿಕ ಜನತೆಗೆ ತಮ್ಮ ತ್ಯಾಜ್ಯವನ್ನು ವಿನಿಯೋಗಿಸಲು ತಾವು ಹಣವನ್ನೇಕೆ ಖರ್ಚು ಮಾಡಬೇಕು ಎಂಬ ಸರಳ ಸತ್ಯ ತಿಳಿಯುತ್ತಿಲ್ಲ?  ನಿಮ್ಮ ಮನೆಯ ಮುಸುರೆಯನ್ನು ತೊಳೆಯುವವರಿಗೆ ದುಡ್ಡು ಕೊಡುವುದಿಲ್ಲವೇ? ಹಾಗೇ ತ್ಯಾಜ್ಯ ತೆಗೆದು ಪರಿಷ್ಕರಿಸಲು ಕೂಡ ಹಣ ತೆರಬೇಕಾಗುತ್ತದೆ.  ಅಲ್ಲದೇ ತ್ಯಾಜ್ಯವನ್ನು ಪರಿಷ್ಕರಿಸುವ ಉದ್ಯಮ/ಉದ್ಯಮಿಗಳಿಗೆ ಪ್ರೋತ್ಸಾಹ ನೀಡಿ ಅವರನ್ನು ಒಂದು ವ್ಯವಸ್ಥೆಯ ಮುಖ್ಯ ಅಂಗವನ್ನಾಗಿ ಪರಿಗಣಿಸಬೇಕಾಗುತ್ತದೆ.  ನನ್ನ ಅನಿಸಿಕೆಯ ಪ್ರಕಾರ, ನಾವು ಸೇವಿಸುವ ಆಹಾರಕ್ಕೆಷ್ಟು ಪ್ರಾಮುಖ್ಯತೆ ನೀಡುತ್ತೇವೆ ಅದರ ಕಾಲು ಪಟ್ಟಾದರೂ ತ್ಯಾಜ್ಯ ಸಂಸ್ಕರಣೆಗೆ ಮನ್ನಣೆ ನೀಡಬೇಕಾಗುತ್ತದೆ.  ಇಲ್ಲವೆಂದಾದಲ್ಲಿ ಇಂದು ನಾವು ಬೆಲೆ ತೆರದೆಯೇ ಕಸವನ್ನು ಎಲ್ಲಿ ಬೇಕಂದಲ್ಲಿ ಎಸೆದು ಮುಂದೆ ಅದು ಎಲ್ಲವನ್ನು ಮೀರಿ ಬೆಳೆತು ಅನೇಕ ಅನಾಹುತಗಳು, ಹಾನಿಗಳೂ ಸಂಭವಿಸುವಾಗ ತುಂಬಾ ನಿಧಾನವಾಗಿರುತ್ತದೆ.

***

ನಮ್ಮಲ್ಲಿ ತಂತ್ರಜ್ಞಾನ, ಅವಿಷ್ಕಾರ ಬೇರೆ ಎಲ್ಲ ದೇಶಗಳಿಗೆ ಸೆಡ್ಡು ಹೊಡೆಯುವಂತೆ ಬೆಳೆಯುತ್ತಿದೆ ಎಂದು ಎದೆತಟ್ಟಿ ಹೇಳಿಕೊಳ್ಳಲು ಸಂತೋಷವಾಗುತ್ತದೆ.  ವಿಶ್ವದ ಅತಿ ಶ್ರೀಮಂತ ರಾಷ್ಟ್ರಗಳಲ್ಲಿ ಭಾರತ ಆರನೇ ಸಾಲಿನಲ್ಲಿದೆ ಎಂದು ಓದಿದಾಗ ಖುಷಿಯಾಗುತ್ತದೆ.  ನಮ್ಮಲ್ಲಿ ಅನೇಕ ಉದ್ಯಮಗಳು ಬೆಳೆಯುತ್ತಿವೆ, ನಾವು ಅತಿ ಹೆಚ್ಚು ಇಂಜಿನಿಯರುಗಳನ್ನು ಹೊರತರುತ್ತೇವೆ ಎಂದು ಜಂಭ ಕೊಚ್ಚಿಕೊಳ್ಳುತ್ತೇವೆ. ಆದರೆ, ಈವರೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಸದ ಸಮಸ್ಯೆ ಉಲ್ಬಣಗೊಂಡಿರುವುದನ್ನು ನೋಡಿಯೂ ನೋಡದೇ ಇರುವಂತಿರುವುದು ಏಕೆ? ಎಂದು ಯೋಚಿಸಿದರೆ ಉತ್ತರ ದೊರೆಯುವುದಿಲ್ಲ.

ಅಮೇರಿಕದಲ್ಲಿ ವೇಷ್ಟ್ ಮ್ಯಾನೇಜ್‌ಮೆಂಟ್ ಕಂಪನಿಯಂಥವುಗಳು ಪಬ್ಲಿಕ್ ಟ್ರೇಡಿಂಗ್ ಕಂಪನಿಗಳಾಗಿ ಬೆಳೆದು ತಮ್ಮ ಗ್ರಾಹಕರಿಗೆ, ಬಳಕೆದಾರರಿಗೆ ಸೇವೆಯನ್ನು ಸಲ್ಲಿಸುತ್ತಿಲ್ಲವೇ? ಹಾಗೆಯೇ ನಮ್ಮಲ್ಲೂ ಸಹ ಈ ಸಮಸ್ಯೆಗೆ ಇದುವರೆಗೆ ಯಾರೂ ಉತ್ತರವನ್ನೇ ಕಂಡು ಹಿಡಿಯದಂಥ ಅಸಹಾಯಕ ಪರಿಸ್ಥಿತಿ ಬಂದಿದೆಯೇ?

ಮುಂದೆ ಇದೇ ಬೆಂಗಳೂರಿನ ಜನಸಂಖ್ಯೆ ದ್ವಿಗುಣವಾದಾಗ, ಈ ಕಸದ ಮಹಾತ್ಮೆ ಏನಾಗಿರಬೇಡ? ಮನೆಯ ದಿನನಿತ್ಯದ ಕಸದ ಜೊತೆಗೆ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ ಉತ್ಪನ್ನಗಳೂ, ಲಿಥಿಯಂ ಬ್ಯಾಟರಿಗಳೂ ಸೇರಿಕೊಂಡು, ನೀರು-ಮಣ್ಣು ಎರಡೂ ಪಾದರಸ, ಆರ್ಸೆನಿಕ್, ಮೊದಲಾದ ವಿಷ ಪದಾರ್ಥಗಳಿಂದ ಕೂಡಿಕೊಂಡರೆ ಯಾರಿಗೆ ಹಾನಿ ಎಂದು ಎಲ್ಲರೂ ಯೋಚಿಸಬೇಕಾದ ವಿಚಾರ.  ಎಲ್ಲಾ ಕಡೆ ಕಸಮಯವಾಗಿದೆ.  ಇನ್ನೂ ನಾವು ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾಗದಿದ್ದರೆ, ನಿಸರ್ಗ ಎಂದಿನಂತೆ ತನ್ನನ್ನು ತಾನು ನೋಡಿಕೊಳ್ಳುತ್ತದೆ, ಅದಕ್ಕೆಲ್ಲ ಬೆಲೆ ತೆರಬೇಕಾದವರು ನಾವೇ!

Friday, April 24, 2020

ಗಂಡಾಂತರ

ಕನ್ನಡಿಗರು ಬಹಳ ಬುದ್ಧಿವಂತರು! ಹೀಗೆಂದು ಅನ್ನಿಸಿದ್ದು, ಮೊನ್ನೆ ನಾನು ರಿಸ್ಕ್ ಎನ್ನುವ ಪದಕ್ಕೆ ಕನ್ನಡದಲ್ಲಿ ಸಮನಾರ್ಥಕ ಪದವನ್ನು ಹುಡುಕುತ್ತಿದ್ದಾಗ.  ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜನರು ಎಂತೆಂತ ರಿಸ್ಕ್‌ಗಳನ್ನು ತೆಗೆದುಕೊಳ್ಳುತ್ತಾರೋ ಇಲ್ಲವೋ, ಆದರೆ ನಾವು ಇಲ್ಲಿನ ಕ್ಯಾಪಿಟಲಿಸ್ಟ್ ವ್ಯವಸ್ಥೆಯಲ್ಲಿ ದಿನೇದಿನೇ ಅನೇಕ ರಿಸ್ಕ್‌ಗಳನ್ನು ತೆಗೆದುಕೊಳ್ಳುವುದೂ ಅಲ್ಲದೇ ಅವುಗಳನ್ನು ಮಿಟಿಗೇಟ್ ಹಾಗೂ ಮ್ಯಾನೇಜ್ ಮಾಡಬೇಕಾಗಿ ಬರುತ್ತದೆ.  ರಿಸ್ಕ್ ಮ್ಯಾನೇಜ್‌ಮೆಂಟ್ ಎನ್ನುವುದು ಬಿಸಿನೆಸ್ ಅಡ್ಮಿನಿಸ್ಟ್ರೇಷನ್ನಿನ್ನ ದೊಡ್ಡದೊಂದು ಭಾಗ.  ನಾವು ಬರೆಯುವ ಡಾಕ್ಯುಮೆಂಟ್‌ಗಳಲ್ಲಿ ರಿಸ್ಕ್ ಎನ್ನುವ ಪದ ಬಂದಾಗಲೆಲ್ಲ ನಾವು ಅದನ್ನು ತೊಂದರೆಅಥವಾ ಅವಗಢ ಎಂದುಕೊಳ್ಳದೇ ನಮ್ಮ ಕಾರ್ಯದಲ್ಲಿ ಸಹಜವಾಗಿ ಬರುವ ಸಂಕಷ್ಟಗಳು ಎಂದುಕೊಂಡು ಅದನ್ನು ಎದುರಿಸುತ್ತೇವೆ ಹಾಗೂ ಉಪಶಮನ (mitigate) ಗೊಳಿಸುತ್ತೇವೆ.



"ರಿಸ್ಕ್" ಎನ್ನುವ ಪದಗಳಿಗೆ ಇಂಗ್ಲೀಷಿನಲ್ಲಿ a situation involving exposure to danger, ಎನ್ನುವ ನಾಮ ಪದವಾಗಿ ಅಥವಾ exposing oneself to danger or harm ಎನ್ನುವ ಕ್ರಿಯಾಪದವಾಗಿಯೂ ಬಳಸುವುದನ್ನು ನೋಡುತ್ತೇವೆ.  ಮಾಮೂಲಿ ವ್ಯಾಖ್ಯೆಯಲ್ಲಿ ರಿಸ್ಕ್ ಎನ್ನುವ ಪದ ಕೆಟ್ಟದ್ದನ್ನು ಸೂಚಿಸುತ್ತದೆಯಾದರೂ, ನಾವು ನಮ್ಮ ದಿನನಿತ್ಯದ ಪ್ರಾಜೆಕ್ಟಿನಲ್ಲಿ ಬರುವ ಆಡಚಣೆಗಳನ್ನು ಹಾಗೂ ವ್ಯವಹಾರದಲ್ಲಿ ಆಗಬಹುದಾದ ಲಾಭ ಮತ್ತು ನಷ್ಟವನ್ನೂ ಸಹ ರಿಸ್ಕ್ ಅಥವಾ ರಿಸ್ಕ್ ತೆಗೆದುಕೊಂಡಿದ್ದರ ಫಲಿತಾಂಶ ಎಂದೇ ಕರೆಯುತ್ತೇವೆ.  ಇನ್ನು ರಿಸ್ಕ್ ಸೀಕಿಂಗ್ (risk seeking) ಹಾಗೂ ರಿಸ್ಕ್ ಅವರ್ಸ್ (risk averse) ಜನರೂ ಸಹ ನಮ್ಮ ಮಧ್ಯೆ ಕಾಣಸಿಗುತ್ತಾರೆ.  ರಿಸ್ಕ್ ಸೀಕಿಂಗ್ ಎಂದರೆ ತಮ್ಮನ್ನು ತಾವು ಪದೇಪದೇ ಗಂಡಾಂತರಕ್ಕೆ ಒಡ್ಡಿಕೊಳ್ಳುವವರು ಎಂದು ಭಾಷಾಂತರ ಮಾಡಲಾಗದು.

ಕನ್ನಡ ನಿಘಂಟಿನಲ್ಲಿ ರಿಸ್ಕ್ ಎನ್ನುವ ಪದಕ್ಕೆ ಅಪಾಯ, ಗಂಡಾಂತರ, ಕೇಡು, ನಷ್ಟ, ಹಾನಿ, ತೊಂದರೆ, ಮುಂದೆ ಸಂಭವಿಸಬಹುದಾದ ತೊಂದರೆ, ಕಷ್ಟ, ಕುತ್ತು ಎನ್ನುವ ಪದಗಳು ಸಿಗುತ್ತವೆ.  ಆದರೆ, ನಮ್ಮ ಇಂಗ್ಲೀಷಿನ ಪರಿಭಾಷೆಯಲ್ಲಿ ಹೇಳುವಂತೆ take risk ಎಂದು ನಾವು ಯಾರಿಗೂ ಕನ್ನಡದಲ್ಲಿ ಹೇಳೋದಿಲ್ಲ.  "ಮುಂದೆ ಗಂಡಾಂತರ ಬಂದೀತು, ಎಚ್ಚರ!" ಎಂದು ಹೇಳಿದರೂ "ಸುಮ್ಮನೇ ಅಪಶಕುನ ನುಡಿಯಬೇಡ!" ಎಂದು ಯಾರಾದರೂ ಗದರಿಸಿಬಿಟ್ಟಾರು!  ರಿಸ್ಕ್ ತೆಗೆದುಕೊಳ್ಳುವುದನ್ನು ನಾವು ಕನ್ನಡಿಗರು ತುಂಬಾ ನೆಗೆಟಿವ್ ಆಗಿ ನೋಡುವುದರಿಂದಲೇ ಏನೋ, ನಾವು ಎಂದೂ ಎಲ್ಲೂ ರಿಸ್ಕ್ ತೆಗೆದುಕೊಳ್ಳುವುದಕ್ಕೆ ಹೋಗುವುದೇ ಇಲ್ಲ, ಅದೇ ನೋಡಿ ನಮ್ಮ ಜಾಯಮಾನ...ಅದಕ್ಕೇ ನಾವು ಕನ್ನಡಿಗರು ಬಹಳ ಬುದ್ಧಿವಂತರು ಎಂದು ಆರಂಭದಲ್ಲಿ ಬರೆದಿದ್ದು.
ನಮ್ಮ ಕನ್ನಡಿಗರಿಗೆ ಒಂದು ಕೆಲಸವನ್ನು ಬಿಟ್ಟು ಮತ್ತೊಂದು ಹುಡುಕುವುದಕ್ಕಾಗಲೀ, ಒಂದು ಮನೆಯನ್ನು ಬದಲಾಯಿಸಿ ಮತ್ತೊಂದಕ್ಕೆ ಹೋಗುವುದಕ್ಕಾಗಲೀ, ಈಗಿನ ಸ್ಥಿತಿಯಿಂದ ಮತ್ತೊಂದು ಸ್ಥಿತಿಯ ಬಗ್ಗೆ ಆಲೋಚಿಸುವುದರಲ್ಲಾಗಲೀ ಎಲ್ಲೂ ಮನಸ್ಸೇ ನಿಲ್ಲೋದಿಲ್ಲ.  "ದಿನ ದಿನ ಗಂಡಾಂತರವನ್ನು ತೆಗೆದುಕೊಳ್ಳುವವರಿಗೆ ನೂರು ವರ್ಷ ಆಯಸ್ಸು" ಇದೆಯೆಂದು ಸಾರುವ ತೆಲುಗಿನ ನಾಣ್ಣುಡಿಯನ್ನು ನಮ್ಮ ಆಫೀಸಿನಲ್ಲಿ ಕೆಲಸ ಮಾಡುವ ತೆಲುಗು ಪರಂಪರೆಯವರು ಹಾಗೆಂದು ಉದ್ಧರಿಸುವುದಷ್ಟೇ ಅಲ, ಅದಕ್ಕೆ ತಕ್ಕಂತೆ ನಡೆದುಕೊಳ್ಳುತ್ತಾರೆ ಕೂಡ.  ಆದರೆ, ಅದೇ ನಮ್ಮ ಕನ್ನಡಿಗರ ವಿಷಯಕ್ಕೆ ಬಂದರೆ ಬದಲಾವಣೆಗಳ ರಿಸ್ಕ್ ನಮಗೆ ಬಹಳ ದೊಡ್ಡದಾಗಿ ಕಾಣುತ್ತದೆ.  ಎಲ್ಲವೂ ಚೆನ್ನಾಗಿಯೇ ನಡೆಯುತ್ತಿರುವಾಗ ಏನನ್ನಾದರೂ ಏಕೆ ಬದಲಿಸಬೇಕು, ನೀವೇ ಹೇಳಿ!?

ನಾವು ಕನ್ನಡಿಗರು ರಿಸ್ಕ್ ತೆಗೆದುಕೊಳ್ಳುವುದರಲ್ಲಿ ಮೊದಲಿಗರಲ್ಲ.  ಎಲ್ಲಿ ನಾವು ಮೊದಲಿಗರಾಗಲು ಹಿಂಜರಿಯುತ್ತೇವೆಯೋ ಅಲ್ಲಿ ನಾವು ಲೀಡರುಗಳಾಗೋದಿಲ್ಲ.  ಎಲ್ಲಿ ನಮ್ಮ ಹಿರಿತನವಿರುವುದಿಲ್ಲವೋ ಅಲ್ಲಿನ ಕಾರ್ಯವೈಖರಿಗಳು ನಮ್ಮ ಆಲೋಚನೆಯಂತೆ ನಡೆಯುವುದಿಲ್ಲ.  ಎಲ್ಲಿ ನಮ್ಮ ನಿರೀಕ್ಷೆಯಂತೆ ಕೆಲಸ ಕಾರ್ಯಗಳು ನಡೆಯುವುದಿಲ್ಲವೋ ಅಲ್ಲಿ ನಾವು ಯಾವಾಗಲೂ ಹೊರಗಿನವರಾಗಿರುತ್ತೇವೆ, ಅಲ್ಲದೇ ಅಲ್ಲಿ ಬೇರೊಬ್ಬರ, ಬೇರೆಯವರ ಆಲೋಚನೆಗಳಿಗೆ ಆಸ್ಪದ ಸಿಗುತ್ತದೆ.  ಇವುಗಳೆಲ್ಲದರಿಂದಾಗಿ ನಮ್ಮತನ ದೂರವಾಗಿ ನಮ್ಮನ್ನು ಮತ್ಯಾನ್ಯಾರೋ ದುಡಿಸಿಕೊಳ್ಳಲು ತೊಡಗುತ್ತಾರೆ, ಹೀಗೆ ದುಡಿದುಕೊಂಡು ಬೆಳೆಯುವ ಜೀವಕ್ಕೆ ಕರ್ಮಠತನ ಲಭಿಸುತ್ತದೆ.  ಸದಾ ಒಂದಿಲ್ಲೊಂದು ಕೆಲಸದಲ್ಲಿ ತೊಡಗಿ ವ್ಯಸ್ತವಾಗಿರುವ ಕರ್ಮಠತನದ ಮನಸ್ಸಿಗೆ ಬದಲಾವಣೆ ಬೇಕೆಂದು ಅನ್ನಿಸದೇ ಅದು ಯಥಾಸ್ಥಿತಿಗೆ (status quo) ಶರಣಾಗಿ ವಿಷವರ್ತುಲಕ್ಕೆ (vicious circle) ಸಿಕ್ಕು ವಿಲವಿಲ ಒದ್ದಾಡುವಂತಾಗುತ್ತದೆ.

ಇವುಗಳೆಲ್ಲದರಿಂದ ಮುಕ್ತಿ ಬೇಕೆಂದಾದಲ್ಲಿ, ರಿಸ್ಕ್ ತೆಗೆದುಕೊಳ್ಳಲೇ ಬೇಕಾಗುತ್ತದೆ.  ರಿಸ್ಕ್ ಅನ್ನುವ ಪದವನ್ನು ನಾವು ಕನ್ನಡಿಗರು ಅಪಾಯ ಅಥವಾ ಗಂಡಾಂತರ ಎನ್ನುವ ಅರ್ಥದಲ್ಲಿ ಬಳಸುವ ಬದಲು, ರಿಸ್ಕ್ ಅನ್ನು ಬದಲಾವಣೆಯ ಕೈಪಿಡಿಯನ್ನಾಗಿ ಸ್ವೀಕರಿಸಿ ಅದಕ್ಕೊಂದು ಸಾಹಸೀ ಪರಿಭಾಷೆಯನ್ನು ಕೊಡಬೇಕಾಗುವುದು, ಇಂದಿನ ದಿನಗಳ ಮಹಾ ಅಗತ್ಯಗಳಲ್ಲೊಂದು.
ಎದ್ದೇಳಿ, ಇನ್ನಾದರೂ ಸ್ವಲ್ಪ ರಿಸ್ಕ್ ತಗೊಳ್ಳಿ, ತೊಂದರೆ ಏನೋ ಆಗೋದಿಲ್ಲ, ಕನ್ನಡಿಗರು ರಿಸ್ಕ್ ತೆಗೆದುಕೊಳ್ಳಲಿಲ್ಲ ಎಂದರೇನೇ, ತೊಂದರೆ!

***

Risk ಅನ್ನುವುದಕ್ಕೆ ಮತ್ತಿನ್ನೇನು ಪದಗಳನ್ನು ಕನ್ನಡದಲ್ಲಿ ಬಳಸಬಹುದು?

Thursday, April 23, 2020

ಬಂಡವಾಳಶಾಹಿ ವಚನಗಳು!

ನಾವು ಕರ್ನಾಟಕದ ಹಳ್ಳಿಯ ಶಾಲೆಗಳಿಂದ ಬಂದವರು.  ನಾವೆಲ್ಲ ವಚನಕಾರರ ಹೆಸರುಗಳು ಗೊತ್ತಿಲ್ಲದೇ ಅದೆಷ್ಟೋ ವಚನಗಳನ್ನು ಜಾನಪದ ಗೀತೆಗಳಂತೆ ಕಲಿಯುತ್ತಿದ್ದೆವು, ಅವುಗಳನ್ನು ಪ್ರಾರ್ಥನೆಯಾಗಿ ಹಾಡುತ್ತಿದ್ದೆವು...ಕರ್ನಾಟಕದ ಇತಿಹಾಸದಲ್ಲಿ ಹನ್ನೊಂದು-ಹನ್ನೆರಡನೇ ಶತಮಾನದಲ್ಲಿ ಜನಿಸಿದ ವಚನಕಾರರು, ಅವರ ಸಾಹಿತ್ಯ, ಅವರ ಜೀವನ ಶೈಲಿ, ಅವರ ಪರಂಪರೆ ಇವೆಲ್ಲವೂ ನಮ್ಮನ್ನು ಭಾರತದ ಸಾಮಾಜಿಕ ಪ್ರಗತಿಯ ಪಥದಲ್ಲಿ ಮುಂಚೂಣಿಯಲ್ಲಿ ನಿಲ್ಲಿಸುತ್ತವೆ.  ಈ ಹಿನ್ನೆಲೆಯಲ್ಲಿ ಬೆಳೆದು ಬಂದ ನಾವು ನಮ್ಮ "ವಚನ" ಶೈಲಿಯನ್ನು ಇಂದಿನ ಕ್ಯಾಪಿಟಲಿಸ್ಟಿಕ್ (ಬಂಡವಾಳಶಾಹಿ) ವ್ಯವಸ್ಥೆಯಲ್ಲಿ ಹೇಗೆ ಬದಲಾಯಿಸಿಕೊಳ್ಳುತ್ತೇವೆ ಎಂಬುದನ್ನು ಕುರಿತು ಒಂದು ವಿಡಂಬನಾತ್ಮಕ ಬರಹ - ವಚನಕಾರರ ಕ್ಷಮೆಯನ್ನು ಕೋರಿ!

***

Twice a year, during performance review time...
ಕಳಬೇಕು
ಕೊಲಬೇಕು
ಹುಸಿಯ ನುಡಿಯಲು ಬೇಕು
ಮುನಿಯಬೇಕು
ತನ್ನ ಬಣ್ಣಿಸ ಬೇಕು
ಇದಿರ ಹಳಿಯಲು ಬೇಕು
ಇದೇ ಅಂತರಂಗ ಶುದ್ಧಿ
ಇದೇ ಬಹಿರಂಗ ಶುದ್ಧಿ
ಇದೇ ನಮ್ಮ (ಬಾಸ್ ಎಂಬ) ಕ್ಯಾಪಿಟಲಿಸ್ಟಿಕ್
ದೇವನ ಒಲಿಸುವ ಪರಿ.

End of year, around Ratings & Rankings
ಸ್ಕಿಲ್ ಇದ್ದವರು ಕೋಡ್ ಅನ್ನು ಬರೆಯುವರು
ನಾನೇನು ಮಾಡಲಯ್ಯ ಬಡವನಯ್ಯಾ
ನಾನು ಆಫೀಸಿಗೆ ಬರುವುದೇ ಹೆಚ್ಚು,
ಬಂದು ಕಾಲ ಕಳೆಯುವುದೇ ದೊಡ್ಡದು,
ನನ್ನ ಇರುವಿಕೆಯೇ ಹೊನ್ನ ಕಳಸವಯ್ಯಾ,
ಎಲಾ ಬಾಸ್ ಕೇಳಾ,
ನಿಂತೋರಿಗೆ ಸುಖವಿಲ್ಲ, ಹಾರಾಡಿದವರಿಗೆ ಹಸಿವಿಲ್ಲ.

When promotions are few and far between
ಕೆಲ್ಸವಿದ್ದು ಫಲವೇನು? ಗ್ರೋತ್ ಇಲ್ಲದನ್ನಕ?
ಗ್ರೋತ್ ಇದ್ದು ಫಲವೇನು? ದುಡ್ಡಿಲ್ಲದನ್ನಕ?
ದುಡ್ಡಿದ್ದು ಫಲವೇನು? ಟೈಟಲ್ ಇಲ್ಲದನ್ನಕ?

When all else fail...
ಮೋಕ್ಷಕ್ಕೆ ಹೋರಾಡುವಣ್ಣಗಳಿರಾ, ಒಂದು ಹೆಜ್ಜೆ ಮುಂದೆ ಹೋದರೆ
ಮೋಕ್ಷಕ್ಕೆ ನೀವೇ ನಿಚ್ಚಣಿಗೆ
ಮೋಕ್ಷಕ್ಕೋಸ್ಕರ ಹೋರಾಡಿ ಮುಂದೆ ಹೋಗದಿರ್ದೆಡೆ
ಆ ಹರನಿಲ್ಲನೆಂದನಂಬಿಗ ಚೌಡಯ್ಯ.

During training time
ಮೂರ್ಖಂಗೆ ಯಾರು ಬುದ್ದಿ ಹೇಳಿದರೂ
ಗೋರ್ಕಲ್ಲ ಮೇಲೆ ನೂರ್ಕಾಲ ಮಳೆಕರೆದಂತೆ ಸರ್ವಜ್ಞ.


When deliverables are not delivered on time...
ರಿಸೋರ್ಸುಗಳನು ಕೊಂಬಾಗ ಹಾಲೋಗರ ಉಂಡಂತೆ
ಕ್ಲೈಂಟುಗಳು ಬಂದು ಎಳೆವಾಗ, ಕಿಬ್ಬದಿಯ
ಕೀಲು ಮುರಿದಂತೆ ಸರ್ವಜ್ಞ.

When deliverables fail to function as per requirements...
ಹೊಸ ಹೊಸ ಟೆಕ್ನಾಲಜಿಯನು ಬಳಸಿಕೊಂಡು
ವೆಬ್ ಸೈಟು ವರ್ಕ್ ಆಗದಿರೆ ಎಂತಯ್ಯ?
ಹೊಸ ಹೊಸ ಕೆಲಸದವರನ್ನು ಸೇರ್ಸಿಕೊಂಡು
ಕೆಲಸ ಪೂರ್ತಿ ಮಾಡದೇ ಇದ್ದರೆ ಎಂತಯ್ಯ?
ಓಪನ್ ವರ್ಕ್ ಸ್ಪೇಸ್ ಎಂದು ಕೊಂಡು
ಗದ್ದಲಕೆ ನಾಚಿದೊಡೆ ಎಂತಯ್ಯ?
ಟೆಕ್ನಾಲಜಿ ಕೆಲಸಗಾರನಾದ ಮೇಲೆ
ಸ್ತುತಿ-ನಿಂದೆಗಳು ಬಂದರೆ ಸಮಾಧಾನಿಯಾಗಿರಬೇಕು.

Wednesday, April 22, 2020

ನನ್ನ ದೇಶ ನನ್ನ ಜನ

ನನ್ನ ದೇಶ ನನ್ನ ಜನ
ನನ್ನ ಮಾನ ಪ್ರಾಣ ಧನ
ತೀರಿಸುವೆನೆ ಅದರ ಋಣ
ಈ ಒಂದೇ ಜನ್ಮದಿ|
ನೂರು ಭಾವ ಭಾಷೆ ನೆಲೆ
ನೂರು ಬಣ್ಣ ವೇಷ ಕಲೆ
ಸ್ವಚ್ಛಂದದ ಹಕ್ಕಿಗಳೆ
ನಮ್ಮ ಹಾಡು ಬದುಕಲು|

ನಮ್ಮ ದೇಶದಲ್ಲಿ ಒಂದು ಕೋಮಿನವರು ವೈರಸ್ ಸೋಂಕನ್ನು ಉದ್ದೇಶ ಪೂರ್ವಕವಾಗಿ ಹರಡುತ್ತಿದ್ದಾರೆ... ಇಡೀ ಪ್ರಪಂಚವೇ ವೈರಸ್‌ ದೆಸೆಯಿಂದ ನಲುಗುತ್ತಿದ್ದರೆ ಅದನ್ನು ಕೆಲವರು ತಮ್ಮ ಅನುಕೂಲಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ... ನಮ್ಮ ಯುವಕ-ಯುವತಿಯರು ಪಾಕಿಸ್ತಾನಕ್ಕೆ ಜೈಕಾರ ಹಾಕುವುದನ್ನು ತಮ್ಮ ಹಕ್ಕು ಎಂದುಕೊಂಡಿದ್ದಾರೆ... ಎಂದೆಲ್ಲ ಮಾಧ್ಯಮಗಳಲ್ಲಿ ಓದಿದಾಗ ಚೆನ್ನವೀರ ಕಣವಿಯವರ ಈ ಹಾಡು ನೆನಪಿಗೆ ಬಂತು.  ಇನ್ನೂ ಕೇವಲ ಎಪ್ಪತ್ತಮೂರು ವರ್ಷಗಳನ್ನು ಕಳೆದ ನಮ್ಮ "ಸ್ವಾತಂತ್ರ್ಯ" ನಮ್ಮನ್ನು ಈ ಸ್ಥಿತಿಗೆ ತಂದಿದೆ.  ಇನ್ನೊಂದಿನ್ನೂರು ವರ್ಷಗಳಲ್ಲಿ ನಮ್ಮ ಯುವ ಜನರ "ದೇಶಭಕ್ತಿ" ಇದೇ ರೀತಿಯಲ್ಲಿ ಮುಂದುವರೆದು, ನಮ್ಮೆಲ್ಲರ ದೇಶ ಪ್ರೇಮ, ವಿಶ್ವಾಸ, ಒಗ್ಗಟ್ಟು, ಭಾವೈಕ್ಯತೆ, ಘನತೆ ಇವೆಲ್ಲವೂ ಏನಾಗಬಹುದು ಎಂದು ಯೋಚಿಸಿದಾಗ ನಿಜವಾಗಿಯೂ ಬೆನ್ನ ಹುರಿಯಲ್ಲಿ ಕಂಪನವಾಯಿತು.  ಇಂದಿನ ಯುವಕರೇ ಮುಂದಿನ ಪ್ರಜೆಗಳು, ನಾಳಿನ ಭಾರತದ ಭವಿತವ್ಯರು - ಎಂದೆಲ್ಲ ಯೋಚಿಸಿಕೊಂಡಾಗ ಹೆದರಿಕೆಯ ಜೊತೆಗೆ, ಖೇದವೂ ಒಡಮೂಡಿತು.

***
1947ರ ಸ್ವಾತ್ರಂತ್ರ್ಯ ನಿಜವಾಗಿಯೂ ನಮ್ಮನ್ನು ಒಂದುಗೂಡಿಸಿತೇ? ಬ್ರಿಟೀಷ್ ಮತ್ತು ಇತರ ವಸಾಹತುಶಾಹಿಗಳ ಅಧಿಕಾರ ಅವಧಿ ಇರದೇ ಇರುತ್ತಿದ್ದರೆ ಇಂದಿನ ನಮ್ಮ ಅಖಂಡ ಭಾರತ ಹೇಗಿರುತ್ತಿತ್ತು? ಬ್ರಿಟೀಷರ ಭಾಷೆ ನಮ್ಮನ್ನು ಒಂದುಗೂಡಿಸಿತೇ? ಅವರ ಆಚಾರ-ವಿಚಾರ ಹಾಗೂ ನಡೆವಳಿಕೆಗಳು ನಮ್ಮನ್ನು ಮುಂದುವರೆದವರನ್ನಾಗಿ ಮಾಡಿದವೇ? ಎಪ್ಪತ್ಮೂರು ವರ್ಷಗಳ ಹಿಂದೆ ಸ್ವಾತಂತ್ರ್ಯ ಸಂಗ್ರಾ?ಮದ ಸಮಯದಲ್ಲಿ ಮಾಹಿತಿ ಇರದಿದ್ದರೂ ಕೋಟ್ಯಾಂತರ ಮಂದಿ ಬ್ರಿಟೀಷರ ವಿರುದ್ಧ ಹೋರಾಡಿ ತಂದು ಕೊಟ್ಟ ಈ ಸ್ವಾಂತಂತ್ರ್ಯಕ್ಕೆ ಇಂದು ಅಂಗೈಯಲ್ಲಿ ಮಾಹಿತಿ ಸಿಗುವ ಅನುಕೂಲದ ಸಮಯದಲ್ಲಿ ಯುವ ಜನತೆಯಿಂದ ಅದಕ್ಕೇಕೆ ಕಡಿವಾಣ ಬೀಳುತ್ತಿದೆ? ದೇಶದ ಸಹನೆಯನ್ನೇಕೆ ಕೆಲವರು ಪರೀಕ್ಷಿಸುವಂತಾಗಿದೆ?  ನಿಜವಾಗಿಯೂ ನಮ್ಮ ದೇಶದಲ್ಲಿ ಸ್ವಾತಂತ್ರ್ಯವಿದೆಯೇ? ಹಾಗಿದ್ದರೆ ಅದರ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆಯೇ?

***

ಧರ್ಮದ ಹೆಸರಿನಲ್ಲಿ ಸ್ಥಾಪಿತವಾದ, ಇಸ್ಲಾಂ ಮೂಲದ ಜೊತೆಗೆ ಮಧ್ಯ ಪ್ರಾಚ್ಯ ನೆರೆಹೊರೆಯ ಸಂಪ್ರದಾಯವನ್ನು ಮೈವೆತ್ತ ನೆರೆಯ ಪಾಕಿಸ್ತಾನ 1947ರಿಂದಲೂ ಬಡರಾಷ್ಟ್ರವಾಗೇ ಮುಂದುವರೆದಿದೆ.  ಒಂದು ಕಾಲದಲ್ಲಿ ತನ್ನಲ್ಲಿ ಬೆಳೆಯುವ ಹತ್ತಿಯನ್ನು ಸಂಸ್ಕರಿಸುವ ಕೈಗಾರಿಕೆಯೂ ಇಲ್ಲದೆ ಒಂದು ಸಣ್ಣ ಸೂಜಿಯಿಂದ ಹಿಡಿದು ಕಾರಿನವರೆಗೂ ಹೊರ ರಾಷ್ಟ್ರಗಳಿಗೆ ತನ್ನ ಮಾರುಕಟ್ಟೆಯನ್ನು ತೆರೆದುಕೊಂಡು ತನ್ನ ಆಂತರಿಕ ಸಂಘರ್ಷಗಳನ್ನು ಒಂದು ಕಡೆ ಹತ್ತಿಕ್ಕಲೂ ಆಗದೆ ಬಚ್ಚಿಡಲೂ ಆಗದೆ ಬಳಲುತ್ತಿರುವ ರಾಷ್ಟ್ರ ಪಾಕಿಸ್ತಾನ.  ಅನೇಕ ಮುತ್ಸದ್ದಿಗಳು ಹುಟ್ಟಿಬಂದ ನೆಲದಲ್ಲೇ ಇಸ್ಲಾಂ ಪ್ರವಾದಿಗಳು ಜನರ ಮನದಲ್ಲಿ ಸೇಡು, ಕಿಚ್ಚಿನ ಕ್ರಾಂತಿಯನ್ನು ಬಿತ್ತುತ್ತಾ ಬಂದರು.  ಭಾರತವನ್ನು ದ್ವೇಷಿಸುವುದೇ ಪ್ರಣಾಳಿಕೆಯೆಂಬಂತೆ ನಾಯಿಕೊಡೆಗಳಂತೆ ಅಲ್ಲಲ್ಲಿ ಪಕ್ಷಗಳು ಹುಟ್ಟಿದವು.  ಅವೇ ಮುಂದೆ ಭಯೋತ್ಪಾದಕ ಸಂಘಟನೆಗಳಾದವು.  ಅನೇಕ ಮಿಲಿಟರಿ ಕ್ಯೂ (ರಕ್ತಪಾತ) ಹಾಗೂ ಅನೇಕ ಭ್ರಷ್ಟಾಚಾರದ ಅಧೋಗತಿಯಲ್ಲಿ ದೇಶ ಹಾಳಾಗಿ ಹೋಯಿತು.  ಒಂದು ಕಾಲದಲ್ಲಿ ವಿದೇಶೀ ಸಹಾಯವಿಲ್ಲದಿದ್ದರೆ ಯಾವತ್ತೋ ಭೂಪಟದಲ್ಲಿ ನಾಪತ್ತೆಯಾಗಿ ಹೋಗುವಂತಿದ್ದ ಪಾಕಿಸ್ತಾನಕ್ಕೆ ಬಲವಾಗಿ ಸಿಕ್ಕಿದ್ದು ನ್ಯೂಕ್ಲಿಯರ್ ಶಕ್ತಿ.  ನವದೆಹಲಿಯಿಂದ ಕೇವಲ ಐನೂರು ಕಿಲೋಮೀಟರ್ ದೂರದಲ್ಲಿರುವ ಪಾಕಿಸ್ತಾನದ ಅಸ್ಥಿರತೆಯನ್ನು ನಾವು ಬಹಳ ಸೂಕ್ಷವಾಗಿ ನೋಡಿಕೊಂಡು ಬರುವಂತ ಸ್ಥಿತಿ ಇಂದಿಗೂ ಇದೆ.  ಯಾವುದೋ ಧಾರ್ಮಿಕ ಮೂಲಭೂತವಾದಿಗೆ ಈ ಅಣ್ವಸ್ತ್ರವೇನಾದರೂ ದೊರೆತರೆ ಅದು ಪ್ರಪಂಚದ ವಿನಾಶಕ್ಕೆ ಕಾರಣವಾಗಬಹುದು!

ಇಂತಹ ಪಾಕಿಸ್ತಾನವನ್ನು ನಮ್ಮಲ್ಲಿನ ಕೆಲವು ಯುವಕ-ಯುವತಿಯರು ಬೆಂಬಲಿಸುತ್ತಾರೆ.  ಇಂತಹ ಪಾಕಿಸ್ತಾನಕ್ಕೆ ಜಯಕಾರ ಹಾಕುತ್ತಾರೆ ಎಂದು ಕೇಳುತ್ತಲೇ ಹೊಟ್ಟೆ ತೊಳಸಿದಂತಾಗುತ್ತದೆ.  ಈ ಯುವಕ-ಯುವತಿಯರಿಗೆ ನಿಜವಾದ ಪಾಕಿಸ್ತಾನದ ಅರಿವೇ ಇಲ್ಲ.  ಯಾವ ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಅವ್ಯಾಹತವಾಗಿ ದೌರ್ಜನ್ಯ ನಡೆಯುತ್ತಿದೆಯೋ, ಯಾವ ದೇಶದಲ್ಲಿ ಮೈನಾರಿಟಿ ಜನರ ಸ್ವಾತಂತ್ರ್ಯಕ್ಕೆ ಬೆಲೆಯೇ ಇಲ್ಲವೋ, ಯಾವ ದೇಶದಲ್ಲಿ ಧರ್ಮದ ಹೊರೆಯನ್ನು ಬಲವಂತವಾಗಿ ಹೇರಲಾಗುತ್ತದೆಯೋ - ಅಂತಹ ದೇಶದ ಮೇಲೆ ನಮ್ಮ ದೇಶದಲ್ಲಿ ನಿಜವಾದ ಸ್ವಾತಂತ್ರ್ಯದ ಉಸಿರಿನ ಬೆಲೆ ಗೊತ್ತಿರದ ಯುವಕ-ಯುವತಿಯರ ಮಮಕಾರ ಹೆಚ್ಚಾಗಲು ಏನು ಕಾರಣ, ಅದರ ಮೂಲ ನೆಲೆಯೇನು ಎಂದು ಗಂಭೀರವಾಗಿ ಯೋಚನೆ ಮಾಡಬೇಕಾಗುತ್ತದೆ.

ಪಾಕಿಸ್ತಾನದ ಪರವಾಗಿ ಕೂಗಿದ ಜೆ.ಎನ್.ಯು. ವಿದ್ಯಾರ್ಥಿಗಳು ಎಲ್ಲರೂ ಮುಸಲ್ಮಾನರಲ್ಲ.  ಕಾಶ್ಮೀರದಿಂದ ಕೇರಳದವರೆಗೆ ಒಂದು ರೀತಿಯಲ್ಲಿ ಯುವಜನತೆಯ ಬ್ರೈನ್‌ವಾಶ್ ಮಾಡಲಾಗುತ್ತಿದೆ.   ಚೀನಾದಲ್ಲಿ ಹುಟ್ಟಿ ಅಲ್ಲಿ ಪ್ರಬಲವಾಗಿ ಬೆಳೆದ ಮಾವೋಯಿಸಂ ನಮ್ಮ ವಿದ್ಯಾರ್ಥಿಗಳಿಗೆ ಪ್ರಿಯವಾಗುತ್ತದೆ.  ಸರ್ಕಾರದ ವಿರುದ್ಧ, ಪ್ರಜಾಸತ್ತತೆಯ ವಿರುದ್ಧ ಧ್ವನಿ ಎತ್ತುವುದು ಎಂದರೆ ಪಕ್ಕದ ಪಾಕಿಸ್ತಾನವನ್ನು ಹೊಗಳುವುದು ಎಂದಾಗಿ ಹೋಗಿಬಿಟ್ಟಿದೆ. ನಮಗೆ  ಸ್ವಾತಂತ್ರ್ಯ ಸಿಕ್ಕ ಮೊದಲ ಐವತ್ತು ವರ್ಷಗಳಲ್ಲಿ ಈ ಸ್ಥಿತಿ ಇರಲಿಲ್ಲ... ನಾವೆಲ್ಲ ಕಂಡ ಎಂಭತ್ತರ, ತೊಂಭತ್ತರ ದಶಕದ ಭಾರತದಲ್ಲಿ, ನಮ್ಮ ಶಾಲಾದಿನಗಳಲ್ಲಿ ಒಂದು ದಿನವೂ ಯಾರೂ ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಿಲ್ಲ... ನಾವೆಲ್ಲ  ಅನೇಕ ಜನವಿರೋಧಿ ನೀತಿಗಳ ವಿರುದ್ಧವೋ, ಕಾನೂನಿನ ಪರವಾಗಿಯೋ, ಅಥವಾ ರಾಜ್ಯ-ದೇಶ-ಭಾಷೆಗಳ ಪರವಾಗಿಯೋ ಸತ್ಯಾಗ್ರಹ, ಸಂಗ್ರಾಮಗಳನ್ನು ಮಾಡಿದ್ದೇವೆ.  ಆದರೆ, ಇಂದಿನ ಯುವಜನತೆಯ ದೇಶದ್ರೋಹದ ಹಾದಿಯನ್ನು ಎಂದೂ ಹಿಡಿದಿದ್ದಿಲ್ಲ.  ನಾವು ಶಾಲೆಗೆ ಹೋಗುತ್ತಿದ್ದಾಗ ಪ್ರತಿದಿನವೂ ರಾಷ್ಟ್ರಗೀತೆಯನ್ನು ಹೇಳುತ್ತಿದ್ದೆವು, ಧ್ವಜವಂದನೆಯನ್ನು ಮಾಡುತ್ತಿದ್ದೆವು.  ನಮ್ಮೆಲ್ಲರಿಗಿಂತ ದೇಶ ಯಾವತ್ತೂ ದೊಡ್ಡದಾಗಿತ್ತು.  ಆದರೆ ಇಂದಿನ ಯುವಜನತೆಯ ಮನಃಸ್ಥಿತಿಯನ್ನು ನೋಡಿದಾಗ ಅದೇ ಭಾವನೆ ಖಂಡಿತ ಒಡಮೂಡುವುದಿಲ್ಲ.
ನನ್ನ ದೇಶ ಉನ್ನತವಾದುದು.  ಜನರಿಗೆ ನಿಜವಾಗಿಯೂ ಪ್ರಜಾಸತ್ತಾತ್ಮಕ ನೆಲೆಯಲ್ಲಿ ಬದುಕನ್ನು ಕಲ್ಪಿಸಿಕೊಟ್ಟಿದೆ.  ಹಾಡು ಹಗಲೇ ದರೋಡೆ, ಅತ್ಯಾಚಾರ, ಕೊಲೆ-ಸುಲಿಗೆ ಮಾಡಿದವರೂ ಸಂವಿಧಾನದ ವಿಧಿಯ ಪ್ರಕಾರ ಶಿಕ್ಷೆಗೆ ಗುರಿಪಡುತ್ತಾರೆ.  ಪ್ರತಿಯೊಬ್ಬರಿಗೂ ಅವರದೇ ಆದ ಹಕ್ಕುಗಳಿವೆ.  ಆದರೆ ಜನರು ತಮ್ಮ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುತ್ತಾರೆ, ಅವೇ ಹಕ್ಕುಗಳ ಮಗ್ಗುಲಲ್ಲಿರುವ ಕರ್ತವ್ಯಗಳನ್ನು ಮರೆಯುತ್ತಾರೆ.  ತಮ್ಮ ಮೈಕ್ರೋ ಫ್ಯಾಮಿಲಿಗಳ ಸಂತೋಷಕ್ಕಾಗಿ ದೊಡ್ಡ ದೇಶದ ಘನತೆ ಗೌರವವನ್ನು ಮರೆಯುತ್ತಾರೆ.  ರಾಷ್ಟ್ರ ಯಾವತ್ತೂ ಸೆಕೆಂಡರಿಯಾಗುತ್ತದೆ, ತಮ್ಮ ಸ್ವಾರ್ಥ ದೊಡ್ಡದಾಗುತ್ತಾ ಹೋಗುತ್ತದೆ.

ಎಪ್ಪತ್ತು ವರ್ಷಗಳ ನಂತರ ನಮ್ಮ ಮೂಲಭೂತ ಸಮಸ್ಯೆಗಳು ಇನ್ನೂ ಹಾಗೇ ಇರುವಾಗ, ಈ ಎದೆಕರಗದ ದೇಶಭಕ್ತಿಯ ಜನ ಯಾವ ರೀತಿಯಲ್ಲಿ ದೇಶವನ್ನು ಮುಂದೆ ತಂದಾರು? ಇನ್ನು ನೂರಿನ್ನೂರು ವರ್ಷಗಳಲ್ಲಿ ನಮ್ಮ ದೇಶ ನಮ್ಮ ದೇಶವಾಗೇ ಇರುವುದೋ ಅಥವಾ ಮೊದಲಿನ ಹಾಗೆ ಹಂಚಿಕೊಂಡು ತುಂಡು ತುಂಡಾಗುವುದೋ ಎಂದು ಸಂಕಟವಾಗುತ್ತದೆ.


 




















ಭಾರತ ದೇಶವನ್ನು ಹಳಿಯುವವರು ತಮ್ಮ ದೇಶದ ಬಗ್ಗೆ ಒಂದಿಷ್ಟು ಕನಿಷ್ಠ ಮಾಹಿತಿಯನ್ನಾದರೂ ತಿಳಿದುಕೊಂಡು ತಮ್ಮ ವಾದವನ್ನು ಮಂಡಿಸಿದ್ದರೆ ಚೆನ್ನಾಗಿತ್ತು.  ಒಂದು ದೇಶದ ನಿಜವಾದ ಸ್ವಾತಂತ್ರ್ಯದ ಅರಿವಾಗುವುದು ಆ ಸ್ವಾತ್ಯಂತ್ರ್ಯ ಇಲ್ಲವಾದಾಗಲೇ!
(ಮಾಹಿತಿ ಕೃಪೆ: ವಿಕಿಪೀಡಿಯ)